ಭಾನುವಾರ, ಜೂನ್ 27, 2021

ನಾಡಪ್ರಭು ಕೆಂಪೇಗೌಡ, ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಹುಟ್ಟುಹಬ್ಬ

ನೂತನ ನಗರಸಭಾ ಸದಸ್ಯರಿಗೆ ಸನ್ಮಾನ, ಅಭಿನಂದನೆ

ಕೆಂಪೇಗೌಡ ಯುವ ಪಡೆ ವತಿಯಿಂದ ಭಾನುವಾರ ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ನಾಡಪ್ರಭು ಕೆಂಪೇಗೌಡ ಹಾಗು ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಅವರ ಜನ್ಮದಿನದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ನೂತನ ನಗರಸಭಾ ಸದಸ್ಯರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.  
       ಭದ್ರಾವತಿ, ಜೂ. ೨೭: ಕೆಂಪೇಗೌಡ ಯುವ ಪಡೆ ವತಿಯಿಂದ ಭಾನುವಾರ ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ನಾಡಪ್ರಭು ಕೆಂಪೇಗೌಡ ಹಾಗು ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಅವರ ಜನ್ಮದಿನದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ನೂತನ ನಗರಸಭಾ ಸದಸ್ಯರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
    ನೂತನ ನಗರಸಭಾ ಸದಸ್ಯರಾದ ಆರ್. ಮೋಹನ್‌ಕುಮಾರ್, ಪಲ್ಲವಿ ದಿಲೀಪ್, ವಿಜಯ, ಲತಾ ಚಂದ್ರಶೇಖರ್, ಜಯಶೀಲ ಸುರೇಶ್ ಮತ್ತು ಸವಿತಾ ಉಮೇಶ್ ಅವರನ್ನು ಸನ್ಮಾನಿಸಲಾಯಿತು. ಕೆಂಪೇಗೌಡ ಯುವ ಪಡೆ ಅಧ್ಯಕ್ಷ ಆರ್. ಮೋಹನ್‌ಕುಮಾರ್, ಪ್ರಧಾನ ಕಾರ್ಯದರ್ಶಿ ದುಷ್ಯಂತ(ದಿಲೀಪ), ಖಜಾಂಚಿ ಪ್ರಕಾಶ್ ಮತ್ತು ಶರತ್ ನೇತೃತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
    ಕಾರ್ಯಕ್ರಮದ ಆರಂಭದಲ್ಲಿ ನಾಡಪ್ರಭು ಕೆಂಪೇಗೌಡ ಹಾಗು ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಜೆಡಿಎಸ್ ಮುಖಂಡರಾದ ಶಾರದ ಅಪ್ಪಾಜಿ, ಜಿಲ್ಲಾ ಪಂಚಾಯಿತಿ ಸದಸ್ಯ ಎಸ್. ಮಣಿಶೇಖರ್, ಯುವ ಮುಖಂಡ ಎಂ.ಎ ಅಜಿತ್, ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಟಿ ರವಿ, ಶಿಮೂಲ್ ಅಧ್ಯಕ್ಷ ಆನಂದ್, ಟಿ. ಚಂದ್ರೇಗೌಡ, ಕಬಡ್ಡಿ ಕೃಷ್ಣೇಗೌಡ, ರಾಜ್ಯ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶಿವಲಿಂಗೇಗೌಡ, ಧರ್ಮೇಗೌಡ, ಅಶೋಕ್‌ಕುಮಾರ್, ಚುಂಜಾದ್ರಿ ಮಹಿಳಾ ವೇದಿಕೆ ಅಧ್ಯಕ್ಷೆ ಎಂ.ಎಸ್ ಸುಧಾಮಣಿ ಸೇರಿದಂತೆ ಉಪಸ್ಥಿತರಿದ್ದರು.

ಭದ್ರಾವತಿಯಲ್ಲಿ ೫ ಕೋ. ರು. ವೆಚ್ಚದಲ್ಲಿ ಕಾರ್ಮಿಕರ ಭವನ ನಿರ್ಮಾಣ : ಬಿ.ವೈ ರಾಘವೇಂದ್ರ


ಭದ್ರಾವತಿ ಹಳೇನಗರದ ಪತ್ರಿಕಾಭವನದಲ್ಲಿ ಭಾನುವಾರ ಆಯೋಜಿಸಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಸಂಸದ ಬಿ.ವೈ ರಾಘವೇಂದ್ರ ಮಾತನಾಡಿದರು.
   ಭದ್ರಾವತಿ, ಜೂ. ೨೭: ಶಿವಮೊಗ್ಗ ಜಿಲ್ಲೆಯಲ್ಲಿಯೇ ಅತಿ ಹೆಚ್ಚು ಕಾರ್ಮಿಕರನ್ನು ಹೊಂದಿರುವ ಭದ್ರಾವತಿ ತಾಲೂಕಿನಲ್ಲಿ ಸುಮಾರು ೫ ಕೋ. ರು. ವೆಚ್ಚದಲ್ಲಿ ಕಾರ್ಮಿಕರ ಭವನ ನಿರ್ಮಾಣ ಮಾಡಲಾಗುವುದು ಎಂದು ಸಂಸದ ಬಿ.ವೈ ರಾಘವೇಂದ್ರ ತಿಳಿಸಿದರು.
   ಅವರು ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಭದ್ರಾವತಿಯಲ್ಲಿ ಕೈಗಾರಿಕೆಗಳಲ್ಲಿ ದುಡಿಯುವ ಕಾರ್ಮಿಕರು ಮಾತ್ರವಲ್ಲದೆ ಕಟ್ಟಡ ಕಾರ್ಮಿಕರು, ಕೃಷಿ ಕಾರ್ಮಿಕರು ಹಾಗು ವಿವಿಧ ವೃತ್ತಿಗಳಲ್ಲಿ ತೊಡಗಿಸಿಕೊಂಡಿರುವ ಸುಮಾರು ೨೫ ರಿಂದ ೩೦ ಸಾವಿರದಷ್ಟು ಕಾರ್ಮಿಕರಿದ್ದಾರೆ. ಕೇಂದ್ರ ಸರ್ಕಾರ ಕಾರ್ಮಿಕರು ಹಾಗು ಅವರ ಕುಟುಂಬ ವರ್ಗದವರ ಹಲವು ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಕಾರ್ಮಿಕರ ಭವನ ಸ್ಥಾಪಿಸಲು ಮುಂದಾಗಿದೆ. ಈ ಹಿನ್ನಲೆಯಲ್ಲಿ ಶಿವಮೊಗ್ಗ ಜಿಲ್ಲೆಗೆ ಒಂದು ಭವನ ಮಂಜೂರಾತಿಯಾಗಿದ್ದು, ಭವನವನ್ನು ಭದ್ರಾವತಿಯಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದೆ ಎಂದರು.
    ದೇಶಾದ್ಯಂತ ವಲಸೆ ಕಾರ್ಮಿಕರು ಕೋವಿಡ್‌ನಂತಹ ಸಂದಿಗ್ದ ಪರಿಸ್ಥಿತಿಯಲ್ಲಿ ಸಾಕಷ್ಟು ತೊಂದರೆ ಅನುಭವಿಸುವಂತಾಗಿದೆ. ಇದೀಗ ವಲಸೆ ಕಾರ್ಮಿಕರ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಮಹತ್ವದ ಯೋಜನೆ ರೂಪಿಸಲಾಗಿದೆ. ವಲಸೆ ಕಾರ್ಮಿಕರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಒಟ್ಟಾಗಿ ಈ ಯೋಜನೆಯಡಿ ತಾತ್ಕಾಲಿಕ ವಸತಿ ಸೌಲಭ್ಯ ಕಲ್ಪಿಸಿಕೊಡಲು ಮುಂದಾಗಿವೆ. ರಾಜ್ಯದಲ್ಲಿ ಈ ಯೋಜನೆ ೨ ಜಿಲ್ಲೆಗಳಿಗೆ ಮಾತ್ರ ಮಂಜೂರಾಗಿದ್ದು, ಈ ಪೈಕಿ ೧ ಶಿವಮೊಗ್ಗ ಜಿಲ್ಲೆಯಾಗಿದೆ ಎಂದರು.
     ಈಗಾಗಲೇ ಈ ಯೋಜನೆಗೆ ಸರ್ವೇ ನಂ.೧೦೪, ೧೦೫ ಮತ್ತು ೧೦೩ರಲ್ಲಿ  ಸುಮಾರು ೧೦ ಎಕರೆ ಸ್ಥಳ ಗುರುತಿಸಿ ಪ್ರಸ್ತಾವನೆ ಸಹ ಸಲ್ಲಿಸಲಾಗಿದೆ. ಜಿಲ್ಲೆಯಲ್ಲಿ ಸುಮಾರು ೨೦೦೦ ವಲಸೆ ಕಾರ್ಮಿಕರಿದ್ದು, ಈ ಕಾರ್ಮಿಕರಿಗೆ ತಾತ್ಕಾಲಿಕ ವಸತಿ ಸೌಲಭ್ಯ ಕುರಿತು ಹೆಚ್ಚಿನ ಪ್ರಚಾರ ನಡೆಸಿ ಮಾಹಿತಿ ತಿಳಿಸಲಾಗುವುದು ಎಂದರು.
   ಉಳಿದಂತೆ ಕ್ಷಿಪ್ರ ಕಾರ್ಯಾಪಡೆ ಘಟಕ(ಆರ್‌ಎಎಫ್)ದ ಅಭಿವೃದ್ಧಿ ಕಾರ್ಯಗಳು ಶೀಘ್ರವಾಗಿ ನಡೆಯಲಿವೆ. ವಿಐಎಸ್‌ಎಲ್ ಕಾರ್ಖಾನೆ ಸಮಸ್ಯೆಗಳು ಸಹ ಒಂದು ಹಂತದಲ್ಲಿ ಬಗೆಹರಿಯುತ್ತಿದ್ದು, ಕಾರ್ಮಿಕರು ಆತಂಕ ಪಡುವ ಅಗತ್ಯವಿಲ್ಲ ಎಂದರು.
    ವಿಧಾನಪರಿಷತ್ ಸದಸ್ಯ ಎಸ್. ರುದ್ರೇಗೌಡ, ನಗರಸಭಾ ಸದಸ್ಯರಾದ ಅನುಪಮ, ಶಶಿಕಲಾ, ಅನಿತಾ, ಪ್ರಮುಖರಾದ ಎಂ. ಪ್ರಭಾಕರ್, ವಿ. ಕದಿರೇಶ್, ಮಂಗೋಟೆ ರುದ್ರೇಶ್, ಕೂಡ್ಲಿಗೆರೆ ಹಾಲೇಶ್, ಚನ್ನೇಶ್, ಬಿ.ಕೆ ಶ್ರೀನಾಥ್, ಜಿ. ಧರ್ಮಪ್ರಸಾದ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಕೆಂಪೇಗೌಡರ ಆಡಳಿತ ವ್ಯವಸ್ಥೆ ಇಂದಿಗೂ ಮಾದರಿ : ಬಿ.ಕೆ ಸಂಗಮೇಶ್ವರ್


ಭದ್ರಾವತಿಯಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಒಕ್ಕಲಿಗರ ಸಂಘದ ವತಿಯಿಂದ ಭಾನುವಾರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಶ್ರೀ ನಾಡಪ್ರಭು ಕೆಂಪೇಗೌಡರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಶಾಸಕ ಬಿ.ಕೆ ಸಂಗಮೇಶ್ವರ್ ಮಾತನಾಡಿದರು.
      ಭದ್ರಾವತಿ, ಜೂ. ೨೭: ನಾಡಪ್ರಭು ಕೆಂಪೇಗೌಡರು ಸರ್ವ ಜನಾಂಗದ ಅಭಿವೃದ್ಧಿಗಾಗಿ ಬೆಂಗಳೂರು ನಿರ್ಮಿಸಿದರು. ಅಂದಿನ ಕಾಲದಲ್ಲಿಯೇ ಜನಪರವಾದ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು. ಇವರ ಆಡಳಿತ ವ್ಯವಸ್ಥೆ ಇಂದಿಗೂ ಮಾದರಿಯಾಗಿ ಉಳಿದುಕೊಂಡಿದೆ ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ಹೇಳಿದರು.
      ಅವರು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಒಕ್ಕಲಿಗರ ಸಂಘದ ವತಿಯಿಂದ ಭಾನುವಾರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಶ್ರೀ ನಾಡಪ್ರಭು ಕೆಂಪೇಗೌಡರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
    ಕೆಂಪೇಗೌಡರು ಇಂದಿನ ಸಮಾಜಕ್ಕೆ ಮಹಾನ್ ಆದರ್ಶ ವ್ಯಕ್ತಿಯಾಗಿ ಉಳಿದುಕೊಂಡಿದ್ದಾರೆ. ನಾವುಗಳು ಇಂತಹ ಮಹಾನ್ ವ್ಯಕ್ತಿಯ ಜಯಂತಿಯನ್ನು ಆಚರಿಸುವ ಜೊತೆಗೆ ಮುಂದಿನ ಪೀಳಿಗೆಗೆ ಅವರ ಕುರಿತು ತಿಳಿಸಿಕೊಡಬೇಕಾದ ಅನಿವಾರ್ಯತೆ ಇದೆ. ಈ ಹಿನ್ನಲೆಯಲ್ಲಿ ಅವರ ಜಯಂತಿ ಸಾರ್ಥಕವಾಗಬೇಕೆಂದರು.
    ಬ್ಲಾಕ್ ಕಾಂಗ್ರೆಸ್ ಸಮಿತಿ ನಗರ ಘಟಕದ ಅಧ್ಯಕ್ಷ ಟಿ. ಚಂದ್ರೇಗೌಡ, ಶಿವಮೊಗ್ಗ ಹಾಲು ಒಕ್ಕೂಟದ ಅಧ್ಯಕ್ಷ ಆನಂದ್, ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಟಿ ರವಿ ಮತ್ತು  ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್ ನಾಡಪ್ರಭು ಕೆಂಪೇಗೌಡರ ಕುರಿತು ಮಾತನಾಡಿದರು.
    ನಗರಸಭೆ ಪೌರಾಯುಕ್ತ ಕೆ. ಪರಮೇಶ್, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ. ಸಿದ್ದಬಸಪ್ಪ, ಒಕ್ಕಲಿಗರ ಮಹಿಳಾ ವೇದಿಕೆ ಅಧ್ಯಕ್ಷೆ ಅನ್ನಪೂರ್ಣ ಸತೀಶ್, ಚುಂಚಾದ್ರಿ ಮಹಿಳಾ ವೇದಿಕೆ ಅಧ್ಯಕ್ಷೆ ಎಂ.ಎಸ್ ಸುಧಾಮಣಿ, ಕೆಂಪೇಗೌಡ ಯುವ ಪಡೆ ಅಧ್ಯಕ್ಷ ಆರ್. ಮೋಹನ್‌ಕುಮಾರ್, ಅಂತರಾಷ್ಟ್ರೀಯ ಕಬಡ್ಡಿ ಕ್ರೀಡಾಪಟು ಕೃಷ್ಣೇಗೌಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ನಗರಸಭಾ ಸದಸ್ಯರಾದ ರೇಖಾ ಟಿ. ಪ್ರಕಾಶ್, ಜಯಶೀಲ ಸುರೇಶ್, ವಿಜಯ, ಪಲ್ಲವಿ ದಿಲೀಪ್, ಸವಿತಾ ಉಮೇಶ್, ಲತಾ ಚಂದ್ರಶೇಖರ್, ಬಸವರಾಜ ಬಿ. ಆನೇಕೊಪ್ಪ, ಕೆ. ಉದಯ್‌ಕುಮಾರ್, ಕಾಂತರಾಜ್, ಸುದೀಪ್‌ಕುಮಾರ್, ಬಿ.ಎಂ ಮಂಜುನಾಥ್, ಸೈಯದ್ ರಿಯಾಜ್, ಚನ್ನಪ್ಪ ಎಂಪಿಎಂ ಒಕ್ಕಲಿಗರ ಕ್ಷೇಮಾಭಿವೃದ್ಧಿ ಸಂಘದ ದಿನೇಶ್ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಪಾಲ್ಗೊಂಡಿದ್ದರು.