Tuesday, June 29, 2021

ಕೊರೋನಾ ಲಸಿಕಾ ಕೇಂದ್ರದಲ್ಲಿನ ಗೊಂದಲ ಬಗೆಹರಿಸಿ : ಮನವಿ

    ಭದ್ರಾವತಿ, ಜೂ. ೨೯: ಸಾರ್ವಜನಿಕರಿಗೆ ಸೂಕ್ತ ಮಾಹಿತಿ ನೀಡುವ ಮೂಲಕ ಕೊರೋನಾ ಲಸಿಕೆ ಸಂಬಂಧ ಉಂಟಾಗಿರುವ ಗೊಂದಲ ಬಗೆಹರಿಸುವಂತೆ ಜನತಾದಳ (ಸಂಯುಕ್ತ) ಕರ್ನಾಟಕ ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್. ಗೌಡ ತಾಲೂಕು ಆರೋಗ್ಯಾಧಿಕಾರಿ ಡಾ.ಎಂ.ವಿ ಅಶೋಕ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
    ಕೊರೋನಾ ಲಸಿಕೆ ನೀಡುವ ಸಂಬಂಧ ಉಂಟಾಗಿರುವ ಮಾಹಿತಿ ಕೊರತೆಯಿಂದಾಗಿ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ. ಲಸಿಕಾ ಕೇಂದ್ರದಲ್ಲಿ ಪ್ರತಿದಿನ ಲಭ್ಯವಿರುವ ಲಸಿಕೆ ಪ್ರಮಾಣ, ಲಸಿಕೆ ನೀಡುವ ದಿನ, ೨ನೇ ಡೋಸ್ ನೀಡುವ ದಿನ, ನಿಗದಿಪಡಿಸಲಾಗಿರುವ ವಯಸ್ಸಿನ ಮಾನದಂಡ ಇತ್ಯಾದಿ ಮಾಹಿತಿ ಸಾರ್ವಜನಿಕರಿಗೆ ತಿಳಿಯುವಂತೆ ಪ್ರಚಾರಪಡಿಸುವ ಮೂಲಕ ಗೊಂದಲ ಬಗೆಹರಿಸುವಂತೆ ಕೋರಿದ್ದಾರೆ.
      ಕೊರೋನಾ ಸೋಂಕು ಇಳಿಮುಖ:
   ತಾಲೂಕಿನ ಸೋಂಕಿನ ಪ್ರಮಾಣ ಬಹುತೇಕ ಇಳಿಮುಖವಾಗಿದ್ದು, ಮಂಗಳವಾರ ಕೇವಲ ೧೮ ಸೋಂಕು ಪತ್ತೆಯಾಗಿದೆ. ಗ್ರಾಮಾಂತರ ಭಾಗದಲ್ಲಿ ೭ ಹಾಗು ನಗರ ಭಾಗದಲ್ಲಿ ೧೧ ಸೋಂಕು ಸೇರಿದಂತೆ ಒಟ್ಟು ೧೮ ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಸೋಂಕಿನಿಂದ ಯಾರು ಸಹ ಮೃತಪಟ್ಟಿಲ್ಲ ಎಂಬುದು ಸಮಾಧಾನಕರವಾದ ಸಂಗತಿಯಾಗಿದೆ.

ಜು.೧ರಂದು ವಿದ್ಯುತ್ ವ್ಯತ್ಯಯ

ಭದ್ರಾವತಿ, ಜೂ. ೨೯: ಮೆಸ್ಕಾಂ ಲಕ್ಕವಳ್ಳಿ ೬೬/೧೧ ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ಜು.೧ ರಂದು ಬೆಳಿಗ್ಗೆ ೯ ಗಂಟೆಯಿಂದ ಸಂಜೆ ೬ ಗಂಟೆವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
    ಗೋಣಿಬೀಡು, ಸಿಂಗನಮನೆ, ಗ್ಯಾರೇಜ್ ಕ್ಯಾಂಪ್, ಶಾಂತಿನಗರ, ಶಂಕರಘಟ್ಟ, ತಾವರಘಟ್ಟ, ಎಚ್.ಕೆ ಜಂಕ್ಷನ್, ಕುವೆಂಪು ವಿಶ್ವ ವಿದ್ಯಾನಿಲಯ, ರಂಗನಾಥಪುರ, ತಮ್ಮಡಿಹಳ್ಳಿ, ಮಾಳೇನಹಳ್ಳಿ, ನಲ್ಲಿಸರ, ಮಲ್ಲಿಗೇನಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಗ್ರಾಹಕರು ಸಹಕರಿಸುವಂತೆ ಗ್ರಾಮಾಂತರ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ.

ಛಲವಾದಿ ಸಮಾಜದ ಅಭಿವೃದ್ಧಿಗೆ ಬದ್ಧ : ಬಿ.ಕೆ ಸಂಗಮೇಶ್ವರ್

ಭದ್ರಾವತಿ ನ್ಯೂಟೌನ್ ಜಯಶ್ರೀ ವೃತ್ತದಲ್ಲಿರುವ ತಾಲೂಕು ಛಲವಾದಿಗಳ(ಪ.ಜಾ) ಸಮಾಜದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ನೂತನ ನಗರಸಭಾ ಸದಸ್ಯರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
    ಭದ್ರಾವತಿ, ಜೂ. ೨೯: ಛಲವಾದಿ ಸಮಾಜದ ಅಭಿವೃದ್ಧಿಗೆ  ಬದ್ಧವಾಗಿದ್ದು, ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಶಾಸಕ ಬಿ.ಕೆ ಸಂಗಮೇಶ್ವರ್ ಭರವಸೆ ನೀಡಿದರು.
    ಅವರು ನ್ಯೂಟೌನ್ ಜಯಶ್ರೀ ವೃತ್ತದಲ್ಲಿರುವ ತಾಲೂಕು ಛಲವಾದಿಗಳ(ಪ.ಜಾ) ಸಮಾಜದಲ್ಲಿ ಹಮ್ಮಿಕೊಳ್ಳಲಾಗಿದ್ದ ನೂತನ ನಗರಸಭಾ ಸದಸ್ಯರುಗಳಿಗೆ ಹಾಗು ವಿವಿಧ ಗ್ರಾಮ ಪಂಚಾಯಿತಿಗಳಿಗೆ ಆಯ್ಕೆಯಾಗಿರುವ ಅಧ್ಯಕ್ಷರು, ಉಪಾಧ್ಯಕ್ಷರುಗಳಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
    ಸಮಾಜದ ಹಿರಿಯ ಮುಖಂಡ ಡಿ. ನರಸಿಂಹಮೂರ್ತಿ ಪ್ರಾಸ್ತಾವಿಕವಾಗಿ ಮಾತನಾಡಿ, ಸಮಾಜ ಬೆಳೆದು ಬಂದ ದಾರಿ ಹಾಗು ಸಮಾಜದ ಬೇಡಿಕೆಗಳನ್ನು ವಿವರಿಸಿದರು.
    ನಗರಸಭೆ ನೂತನ ಸದಸ್ಯರಾದ ಚನ್ನಪ್ಪ, ಕೆ. ಉದಯ್‌ಕುಮಾರ್, ಸರ್ವಮಂಗಳ ಮತ್ತು ಪ್ರೇಮಾ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ಸಮಾಜದ ಅಧ್ಯಕ್ಷ ಚನ್ನಪ್ಪ ಅಧ್ಯಕ್ಷತೆ ವಹಿಸಿದ್ದರು.
ಸಮಾಜದ ಗೌರವಾಧ್ಯಕ್ಷ ನಾಗರಾಜ್, ಪ್ರಧಾನ ಕಾರ್ಯದರ್ಶಿ ಎಚ್.ಎಂ ಮಹಾದೇವಯ್ಯ, ಕಾರ್ಯದರ್ಶಿ ಲೋಕೇಶ್ ಮಾಳೇನಹಳ್ಳಿ, ಖಜಾಂಚಿ ಮಂಜುನಾಥ್, ನಗರಸಭಾ ಸದಸ್ಯ ಸುದೀಪ್‌ಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ಹಿರಿಯ ಮುಖಂಡ ಎಸ್.ಎಸ್ ಭೈರಪ್ಪ ಸ್ವಾಗತಿಸಿದರು. ಶಿಕ್ಷಕ ಎ. ತಿಪ್ಪೇಸ್ವಾಮಿ ನಿರೂಪಿಸಿದರು. ನಾಗೇಶ್ ವಂದಿಸಿದರು.

ಜು.೧ರಿಂದ ಶೈಕ್ಷಣಿಕ ಚಟುವಟಿಕೆ ಆರಂಭ : ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಸಮಸ್ಯೆ

ಭದ್ರಾವತಿ ಅರಕೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ.
    ಭದ್ರಾವತಿ, ಜೂ. ೨೯: ಪ್ರಸಕ್ತ ಸಾಲಿನ ಶೈಕ್ಷಣಿಕ ಚಟುವಟಿಕೆಗಳನ್ನು ಜು.೧ರಿಂದ ಆರಂಭಿಸಲು ಶಿಕ್ಷಣ ಇಲಾಖೆ ಸಕಲ ಸಿದ್ದತೆಗಳನ್ನು ಕೈಗೊಂಡಿದೆ. ಆದರೆ ಶಾಲಾ ಆರಂಭದ ಬಗ್ಗೆ ಬಹುತೇಕ ಪೋಷಕರಿಗೆ ಇನ್ನೂ ಸರಿಯಾದ ಮಾಹಿತಿ ಲಭ್ಯವಾಗಿಲ್ಲ. ಇದರಿಂದಾಗಿ ಶೈಕ್ಷಣಿಕ ಚಟುವಟಿಕೆಗಳು ಆರಂಭವಾದರೂ ಸಹ ಮಕ್ಕಳು ಅತಂತ್ರ ಸ್ಥಿತಿ ಎದುರಿಸುವಂತಾಗಿದೆ.
   ಕೋವಿಡ್-೧೯ರ ಹಿನ್ನಲೆಯಲ್ಲಿ ಬಹುತೇಕ ಮಕ್ಕಳು ಕಳೆದ ಸುಮಾರು ೨ ವರ್ಷಗಳಿಂದ ಶಿಕ್ಷಣದಿಂದ ವಂಚಿತರಾಗಿದ್ದಾರೆ. ಕೆಲವು ಮಕ್ಕಳು ತಮ್ಮ ಪೋಷಕರನ್ನು ಕಳೆದುಕೊಂಡು ಅನಾಥರಾಗಿದ್ದಾರೆ. ಅದರಲ್ಲೂ ಸರ್ಕಾರಿ ಶಾಲೆಗಳ ಮಕ್ಕಳ ಸ್ಥಿತಿ ಅಯೋಮಯವಾಗಿದೆ. ಈ ನಡುವೆ ಸರ್ಕಾರ ಇದೀಗ ಶಾಲೆಗಳನ್ನು ಭೌತಿಕವಾಗಿ ಪ್ರಾರಂಭಿಸದೆ ಏಕಾಏಕಿ ಪ್ರಸಕ್ತ ಸಾಲಿನ ಶೈಕ್ಷಣಿಕ ಚಟುವಟಿಕೆಗಳನ್ನು ಆರಂಭಿಸಲು ಮುಂದಾಗಿದೆ. ಇದಕ್ಕೆ ಅಗತ್ಯವಿರುವ ಸಿದ್ದತೆಗಳನ್ನು ಕೈಗೊಂಡಿದೆಯಾದರೂ ಇದರ ಬಗ್ಗೆ ಪೋಷಕರಿಗೆ ಖಾತರಿಯಾಗುತ್ತಿಲ್ಲ.
    ತಾಲೂಕಿನಲ್ಲಿ ಸರ್ಕಾರಿ ಹಾಗು ಅನುದಾನಿತ ಒಟ್ಟು ೪೩೪ ಶಾಲೆಗಳಿದ್ದು, ಎಲ್ಲಾ ಶಾಲೆಗಳಲ್ಲೂ ಜು.೧ರಿಂದ ಚಟುವಟಿಕೆಗಳು ಆರಂಭಗೊಳ್ಳಲಿವೆ. ಮಕ್ಕಳು ಶಾಲೆಗಳಿಗೆ ಹಾಜರಾಗದಿದ್ದರೂ ಮೊದಲು ದಾಖಲಾತಿಯಾಗುವುದು ಅನಿವಾರ್ಯವಾಗಿದೆ. ಕೋವಿಡ್-೧೯ರ ಹಿನ್ನಲೆಯಲ್ಲಿ ಬಹುತೇಕ ಪೋಷಕರು ಆತಂಕದಲ್ಲಿದ್ದು, ಮಕ್ಕಳನ್ನು ಶಾಲೆಗಳಿಗೆ ಕಳುಹಿಸುವ ಮನಸ್ಥಿತಿಯಿಂದ ದೂರ ಉಳಿದಿದ್ದಾರೆ. ಇಂತಹ ಸಂದರ್ಭದಲ್ಲಿ ಅದರಲ್ಲೂ ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ದಾಖಲಾತಿ ಮಾಡಿಕೊಳ್ಳುವುದು ಬಹುತೇಕ ಕಷ್ಟಕರ ಕೆಲಸವಾಗಿದೆ. ಇದು ಶಿಕ್ಷಣ ಇಲಾಖೆಗೆ ಸವಾಲಾಗಿ ಪರಿಣಾಮಿಸಿದೆ.  
   ಖಾಸಗಿ ಶಾಲೆಗಳು ಕಳೆದ ೨ ವರ್ಷಗಳಿಂದ ನಿರಂತರವಾಗಿ ಶೈಕ್ಷಣಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿವೆ. ಸಂಪೂರ್ಣವಾಗಿ ಆನ್‌ಲೈನ್ ಮೂಲಕ ಮಕ್ಕಳಿಗೆ ಶಿಕ್ಷಣ ನೀಡುತ್ತಿವೆ. ಅಲ್ಲದೆ ಮಕ್ಕಳ ಕಲಿಕಾ ಸಾಮರ್ಥ್ಯಗಳನ್ನು ಅರಿತುಕೊಳ್ಳಲು ಹಲವು ವಿನೂತನ ಪ್ರಯೋಗಗಳಿಗೆ ಮುಂದಾಗಿವೆ. ಜೊತೆಗೆ ಪೋಷಕರೊಂದಿಗೆ ನಿರಂತರವಾಗಿ ಸಂಪರ್ಕ ಹೊಂದಿವೆ. ಈ ಹಿನ್ನಲೆಯಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿ ಸಮಸ್ಯೆ ಕಂಡು ಬರುತ್ತಿಲ್ಲ.