Friday, July 9, 2021

ಕೋವಿಡ್-೧೯ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ೧ ಲಕ್ಷ ರು. ದೇಣಿಗೆ

ಕೋವಿಡ್-೧೯ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಭದ್ರಾವತಿ ರೈತರ ಅಡಕೆ ಮಾರಾಟ ಮತ್ತು ಪರಿಷ್ಕರಣ ಸಹಕಾರ ಸಂಘ (ರಾಮ್ಕೋಸ್) ರು.೧ ಲಕ್ಷ ದೇಣಿಗೆ ನೀಡಿದೆ.
     ಭದ್ರಾವತಿ, ಜು. ೯: ಕೋವಿಡ್-೧೯ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನಗರದ ರೈತರ ಅಡಕೆ ಮಾರಾಟ ಮತ್ತು ಪರಿಷ್ಕರಣ ಸಹಕಾರ ಸಂಘ (ರಾಮ್ಕೋಸ್) ರು.೧ ಲಕ್ಷ ದೇಣಿಗೆ ನೀಡಿದೆ.
.    ಶಿವಮೊಗ್ಗ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕ ನಾಗೇಶ್ ಎಸ್ ಡೋಂಗ್ರೆ ಅವರ ಮೂಲಕ ಪರಿಹಾರದ ಚೆಕ್ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಲಾಯಿತು.
    ಸಂಘದ ಅಧ್ಯಕ್ಷ ಸಿ. ಮಲ್ಲೇಶಪ್ಪ. ಉಪಾಧ್ಯಕ್ಷ ಎಂ. ಪರಮೇಶ್ವರಪ್ಪ. ನಿರ್ದೇಶಕರಾದ ಹೆಚ್.ಆರ್ ತಿಮ್ಮಪ್ಪ, ಎಚ್.ಎಸ್.ಸಂಜೀವಕುಮಾರ್. ಎಚ್.ಟಿ ಉಮೇಶ್ ಮತ್ತು ಉಮಾ ಹಾಗು ಆಡಳಿತಾಧಿಕಾರಿ ಎಂ.ವಿರುಪಾಕ್ಷಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ತಂಬಾಕು ಉತ್ಪನ್ನಗಳ ಮಾರಾಟ : ೪೦೫೦ ರು. ದಂಡ ವಸೂಲಾತಿ

ಶಿವಮೊಗ್ಗ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ವತಿಯಿಂದ ಶುಕ್ರವಾರ ಭದ್ರಾವತಿ ಹಳೇನಗರ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟದಲ್ಲಿ ತೊಡಗಿದ್ದ ಅಂಗಡಿ ಮುಂಗಟ್ಟುಗಳ ಮೇಲೆ ದಾಳಿ ನಡೆಸಲಾಯಿತು.  
     ಭದ್ರಾವತಿ, ಜು. ೯: ಶಿವಮೊಗ್ಗ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ವತಿಯಿಂದ ಶುಕ್ರವಾರ ಹಳೇನಗರ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟದಲ್ಲಿ ತೊಡಗಿದ್ದ ಅಂಗಡಿ ಮುಂಗಟ್ಟುಗಳ ಮೇಲೆ ದಾಳಿ ನಡೆಸಿ ೪೦೫೦ ರು. ದಂಡ ವಸೂಲಾತಿ ಮಾಡಲಾಗಿದೆ.
     ತಂಬಾಕು ನಿಯಂತ್ರಣ ಕಾಯ್ದೆ ಕೋಟ್ಪಾ ೨೦೦೩ರ ಅಡಿಯಲ್ಲಿ ದಾಳಿ ನಡೆಸಿ ದಂಡ ವಸೂಲಾತಿ ಮಾಡುವ ಜೊತೆಗೆ ತಂಬಾಕು ಉತ್ಪನ್ನಗಳ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲಾಯಿತು.
    ಕಾರ್ಯಾಚರಣೆಯಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್, ತಾಲೂಕು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎನ್.ಟಿ ರಾಜೇಗೌಡ, ಹಿರಿಯ ಆರೋಗ್ಯ ಸಹಾಯಕ ಆನಂದಮೂರ್ತಿ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ರವಿರಾಜ್, ಪ್ರಾಥಮಿಕ ಆರೋಗ್ಯ ಕೇಂದ್ರದ ಹರೀಶ್, ಆಕಾಶ್ ಹಾಗು ಹಳೇನಗರ ಪೊಲೀಸ್ ಠಾಣೆ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

ಜು.೧೧ರಂದು ಕೂಡ್ಲಿಗೆರೆ ಭಾಗದಲ್ಲಿ ವಿದ್ಯುತ್ ವ್ಯತ್ಯಯ

ಭದ್ರಾವತಿ, ಜು. ೯: ತಾಲೂಕಿನ ಮೆಸ್ಕಾಂ ಕೂಡ್ಲಿಗೆರೆ ೬೬/೧೧ ಕೆ.ವಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಅಡಕೆ ತೋಟದಲ್ಲಿ ಹಾದು ಹೋಗಿರುವ ೧೧ ಕೆವಿ ಮಾರ್ಗ ಮತ್ತು ಕಂಬವನ್ನು ಸ್ಥಳಾಂತರಿಸುವ ಕಾರ್ಯ ಹಮ್ಮಿಕೊಂಡಿರುವುದರಿಂದ ಜು.೧೧ ರಂದು ಬೆಳಿಗ್ಗೆ ೧೦ ಗಂಟೆಯಿಂದ ಸಂಜೆ ೬ ಗಂಟೆ ವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
     ಕೂಡ್ಲಿಗೆರೆ ಗ್ರಾಮದ ಧನಂಜಯ ಎಂಬುವರ ಅಡಕೆ ತೋಟದಲ್ಲಿ ಹಾದು ಹೋಗಿರುವ ಮಾರ್ಗ ಮತ್ತು ಕಂಬವನ್ನು ರಸ್ತೆ ಬದಿಯಲ್ಲಿ ಹಾದು ಹೋಗಿರುವ ಎನ್‌ಜೆವೈ ಮಾರ್ಗದ ಕೆಳಗಡೆ ಸ್ವಯಂ ಆರ್ಥಿಕ ಯೋಜನೆಯಡಿ ಸ್ಥಳಾಂತರ ಮಾಡುವ ಕಾಮಗಾರಿ ಹಮ್ಮಿಕೊಳ್ಳಲಾಗಿದೆ.  ಈ ಹಿನ್ನಲೆಯಲ್ಲಿ ಕೂಡ್ಲಿಗೆರೆ, ಆಟಗೇರಿ ಕ್ಯಾಂಪ್, ಕಲ್ಪನಹಳ್ಳಿ, ಹೊಸಹಳ್ಳಿ, ಕುಮರಿನಾರಾಯಣಪುರ, ಸೀತಾರಾಂಪುರ, ಅತ್ತಿಗುಂದ, ಬಸಲೀಕಟ್ಟೆ, ರೆಡ್ಡಿಕ್ಯಾಂಪ್, ಅರಳಿಹಳ್ಳಿ, ತಿಪ್ಲಾಪುರ, ಜಯನಗರ, ಕಾಗೇಹಳ್ಳ, ಸಂಜೀವನಗರ, ದೇವರಹಳ್ಳಿ, ಗುಡ್ಡದನೇರಲಕೆರೆ, ಕೊಮಾರನಹಳ್ಳಿ, ಬಂಡಿಗುಡ್ಡ, ಬದನೆಹಾಳ್, ಉದಯನಗರ, ಬೆಳ್ಳಿಗೆರೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಗ್ರಾಹಕರು ಸಹಕರಿಸುವಂತೆ ಗ್ರಾಮೀಣ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ.

ಮಣ್ಣೆತ್ತಿನ ಅಮಾವಾಸ್ಯೆ : ಮಾರಿಯಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ, ಅಲಂಕಾರ

ಮಣ್ಣೆತ್ತಿನ ಅಮಾವಾಸ್ಯೆ ಅಂಗವಾಗಿ ಭದ್ರಾವತಿ ಬಿ.ಎಚ್ ರಸ್ತೆ, ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದ ಸಮೀಪದಲ್ಲಿರುವ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಪ್ರತಿವರ್ಷದಂತೆ ಈ ಬಾರಿ ಸಹ ವಿಶೇಷ ಪೂಜೆ, ಅಲಂಕಾರ ಕೈಗೊಳ್ಳಲಾಗಿತ್ತು.
   ಭದ್ರಾವತಿ, ಜು. ೯: ಮಣ್ಣೆತ್ತಿನ ಅಮಾವಾಸ್ಯೆ ಅಂಗವಾಗಿ ನಗರದ ಬಿ.ಎಚ್ ರಸ್ತೆ, ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದ ಸಮೀಪದಲ್ಲಿರುವ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಪ್ರತಿವರ್ಷದಂತೆ ಈ ಬಾರಿ ಸಹ ವಿಶೇಷ ಪೂಜೆ, ಅಲಂಕಾರ ಕೈಗೊಳ್ಳಲಾಗಿತ್ತು.
    ಬೆಳಿಗ್ಗೆಯಿಂದಲೇ ನೂರಾರು ಭಕ್ತಾಧಿಗಳು ದೇವಸ್ಥಾನಕ್ಕೆ ಆಗಮಿಸಿ ಅಮ್ಮನವರ ದರ್ಶನ ಪಡೆದು ಕೃಪೆಗೆ ಪಾತ್ರರಾದರು. ಅಮ್ಮನವರಿಗೆ ವಿಶೇಷ ಅಲಂಕಾರ ಕೈಗೊಳ್ಳುವ ಮೂಲಕ ವಿಶೇಷ ಪೂಜೆ, ಮಹಾಮಂಗಳಾರತಿ ಜರುಗಿತು. ಭಕ್ತಾಧಿಗಳಿಗೆ ತೀರ್ಥಪ್ರಸಾದ ವಿನಿಯೋಗ ನಡೆಯಿತು.
     ಉದ್ಯಮಿ ಎ. ಮಾಧು, ದೇವಸ್ಥಾನ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಈ ದೇವಸ್ಥಾನದಲ್ಲಿ ಪ್ರತಿ ವರ್ಷ ಮಣ್ಣೆತ್ತಿನ ಅಮಾವಾಸ್ಯೆಯನ್ನು ವಿಶೇಷವಾಗಿ ಆಚರಿಸಿಕೊಂಡು ಬರಲಾಗುತ್ತಿದ್ದು, ಸಾವಿರಾರು ಭಕ್ತಾಧಿಗಳು ಪಾಲ್ಗೊಳ್ಳುತ್ತಿದ್ದಾರೆ. ಆದರೆ ಈ ಬಾರಿ ಕೊರೋನಾ ಹಿನ್ನಲೆಯಲ್ಲಿ ಭಕ್ತಾಧಿಗಳ ಸಂಖ್ಯೆ ಕಡಿಮೆಯಾಗಿರುವುದು ಕಂಡು ಬಂದಿತು.