Monday, July 19, 2021

ಯಶಸ್ವಿವಾಗಿ ನಡೆದ ಮೊದಲ ದಿನದ ಎಸ್‌ಎಸ್‌ಎಲ್‌ಸಿ ಪರೀಕ್ಷೆ : ೪,೫೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಜರು

ಭದ್ರಾವತಿ ನ್ಯೂಟೌನ್ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಸೋಮವಾರ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾಗಿ ಹಿಂದಿಗುತ್ತಿರುವ ವಿದ್ಯಾರ್ಥಿಗಳು.
    ಭದ್ರಾವತಿ, ಜು. ೧೯: ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸೋಮವಾರ ನಡೆಸಿದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ತಾಲೂಕಿನಾದ್ಯಂತ ಯಶಸ್ವಿಯಾಗಿದ್ದು, ಸುಮಾರು ೪೫೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುವ ಮೂಲಕ ಗಮನ ಸೆಳೆದರು.
   ಮೊದಲ ಬಾರಿಗೆ ಪರೀಕ್ಷಾ ಮಂಡಳಿ ನಡೆಸಿದ ಓ.ಎಂ.ಆರ್ ಗುರುತು ಮಾಡುವ ಹೊಸ ಮಾದರಿ ಪರೀಕ್ಷೆಗೆ ಪೂರಕ ಸ್ಪಂದನೆ ವ್ಯಕ್ತವಾಗಿದ್ದು, ವಿಷಯ-೧ಕ್ಕೆ ೪,೫೧೮, ವಿಷಯ-೨ಕ್ಕೆ ೪,೩೯೧ ಮತ್ತು ವಿಷಯ-೩ಕ್ಕೆ ೪,೨೬೧ ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದು, ಈ ಪೈಕಿ ವಿಷಯ-೧ಕ್ಕೆ ೧೮, ವಿಷಯ-೨ಕ್ಕೆ ೧೪ ಹಾಗು ವಿಷಯ-೩ಕ್ಕೆ ೧೨ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.
    ಅನಾರೋಗ್ಯದಿಂದ ಓರ್ವ ವಿದ್ಯಾರ್ಥಿ ವಿಶೇಷ ಕೊಠಡಿಯಲ್ಲಿ ಹಾಗು ಕೊರೋನಾ ಸೋಂಕಿಗೆ ಒಳಗಾದ ಓರ್ವ ವಿದ್ಯಾರ್ಥಿ ಕೋವಿಡ್ ಆರೈಕೆ ಕೇಂದ್ರದಲ್ಲಿ ಪರೀಕ್ಷೆ ಪರೀಕ್ಷೆ ಬರೆದಿದ್ದು, ವಸತಿ ನಿಲಯಗಳ ೨೦ ವಿದ್ಯಾರ್ಥಿಗಳು ಹಾಗು ೬೧ ವಲಸೆ ವಿದ್ಯಾರ್ಥಿಗಳು ಪರೀಕ್ಷೆಯನ್ನು ಎದುರಿಸಿದ್ದಾರೆ.
   ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲೂ ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವ ಮೂಲಕ ಮುಂಜಾಗ್ರತೆ ವಹಿಸಲಾಯಿತು.

ಭದ್ರಾವತಿಯಲ್ಲಿ ೧೨ ಸೋಂಕು ಪತ್ತೆ

ಭದ್ರಾವತಿ, ಜು. ೧೯: ತಾಲೂಕಿನಲ್ಲಿ ಕೊರೋನಾ ಸೋಂಕಿನ ಪ್ರಮಾಣ ಇಳಿಕೆಯಾಗಿದ್ದು, ಆದರೂ ಸಹ ಆತಂಕ ಎದುರಾಗಿದೆ. ಸೋಮವಾರ ೧೨ ಸೋಂಕು ದೃಢಪಟ್ಟಿದ್ದು, ಒಬ್ಬರು ಬಲಿಯಾಗಿದ್ದಾರೆ.
      ಒಟ್ಟು ೭೮೨ ಮಾದರಿ ಸಂಗ್ರಹಿಸಲಾಗಿದ್ದು, ಗ್ರಾಮಾಂತರ ಭಾಗದಲ್ಲಿ ೩ ಹಾಗು ನಗರ ಭಾಗದಲ್ಲಿ ೯ ಸೇರಿದಂತೆ ಒಟ್ಟು ೧೨ ಜನರಲ್ಲಿ ಸೋಂಕು ಪತ್ತೆಯಾಗಿದೆ. ೪ ಜನ ಆಸ್ಪತ್ರೆಗಳಿಂದ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ತಾಲೂಕಿನಲ್ಲಿ ಇದುವರೆಗೂ ಒಟ್ಟು ೭೫೦೧ ಜನರಿಗೆ ಸೋಂಕು ತಗುಲಿದ್ದು, ಈ ಪೈಕಿ ೭೪೫೩ ಜನರು ಗುಣಮುಖರಾಗಿದ್ದಾರೆ. ಒಟ್ಟು ೪೮ ಸಕ್ರಿಯ ಪ್ರಕರಣಗಳಿದ್ದು, ನಗರ ಭಾಗದಲ್ಲಿ ಒಬ್ಬರು ಸೋಂಕಿಗೆ ಬಲಿಯಾಗಿದ್ದಾರೆ.
    ಇದುವರೆಗೂ ಸೋಂಕಿಗೆ ೧೫೫ ಜನರು ಬಲಿಯಾಗಿದ್ದಾರೆ. ನಗರ ಭಾಗದಲ್ಲಿ ೨ ಕಂಟೈನ್‌ಮೆಂಟ್ ಜೋನ್‌ಗಳು ಸಕ್ರಿಯವಾಗಿದ್ದು, ಇದುವರೆಗೂ ೧೨೦ ಜೋನ್‌ಗಳನ್ನು ತೆರವುಗೊಳಿಸಲಾಗಿದೆ.

ಅರಣ್ಯನಾಶಕ್ಕೆ ಕಡಿವಾಣ ಹಾಕಿ, ಪರಿಸರ ಮಾಲಿನ್ಯ ತಡೆಗಟ್ಟಿ : ಅನಂತ ಹೆಗಡೆ ಆಶೀಸರ

ಭದ್ರಾವತಿ ನಗರಸಭೆ ವ್ಯಾಪ್ತಿ ವಾರ್ಡ್ ನಂ.೨೯ರ ಸಿದ್ದಾಪುರ ಎನ್‌ಟಿಬಿ ಲೇ ಔಟ್ ಉದ್ಯಾನವನದಲ್ಲಿ ಹಮ್ಮಿಕೊಳ್ಳಲಾಗಿದ್ದ 'ಜೀವ ವೈವಿಧ್ಯ ಜಾಗೃತಿ ಅಭಿಯಾನ'ದಡಿ ವೃಕ್ಷಾರೋಪಣ ಕಾರ್ಯಕ್ರಮಕ್ಕೆ ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಆಶೀಸರ ಚಾಲನೆ ನೀಡಿದರು.  
    ಭದ್ರಾವತಿ, ಜು. ೧೯: ಹೆಚ್ಚುತ್ತಿರುವ ಅರಣ್ಯನಾಶಕ್ಕೆ ಕಡಿವಾಣ ಹಾಕುವ ಜೊತೆಗೆ ಪರಿಸರ ಮಾಲಿನ್ಯ ತಡೆಗಟ್ಟಲು ಮುಂದಾಗುವಂತೆ ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಆಶೀಸರ ಮನವಿ ಮಾಡಿದರು.
    ಅವರು ಸೋಮವಾರ ನಗರಸಭೆ ವ್ಯಾಪ್ತಿ ವಾರ್ಡ್ ನಂ.೨೯ರ ಸಿದ್ದಾಪುರ ಎನ್‌ಟಿಬಿ ಲೇ ಔಟ್ ಉದ್ಯಾನವನದಲ್ಲಿ ಹಮ್ಮಿಕೊಳ್ಳಲಾಗಿದ್ದ 'ಜೀವ ವೈವಿಧ್ಯ ಜಾಗೃತಿ ಅಭಿಯಾನ'ದಡಿ ವೃಕ್ಷಾರೋಪಣ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
    ಅರಣ್ಯ ನಾಶ ತಡೆಗಟ್ಟುವ ನಿಟ್ಟಿನಲ್ಲಿ ಹಲವಾರು ಕಾಯ್ದೆಗಳನ್ನು ಕೇಂದ್ರ ಹಾಗು ರಾಜ್ಯ ಸರ್ಕಾರಗಳು ಜಾರಿಗೊಳಿಸಿವೆ. ಆದರೂ ಸಹ ಅರಣ್ಯ ನಾಶಕ್ಕೆ ಕಡಿವಾಣ ಹಾಕಲು ಸಾಧ್ಯವಾಗುತ್ತಿಲ್ಲ. ಅದರಲ್ಲೂ ಭದ್ರಾವತಿ ತಾಲೂಕಿನಲ್ಲಿ ಅರಣ್ಯನಾಶ ಹೆಚ್ಚಿನ ಪ್ರಮಾಣದಲ್ಲಿದ್ದು, ಪ್ರಸ್ತುತ ಅಸ್ತಿತ್ವದಲ್ಲಿರುವ ಅರಣ್ಯವನ್ನಾದರೂ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಪ್ರಯತ್ನಿಸಬೇಕಾಗಿದೆ. ಈ ಹಿನ್ನಲೆಯಲ್ಲಿ ಅರಣ್ಯ ಇಲಾಖೆ ಹಾಗು ಸ್ಥಳೀಯ ಸಂಸ್ಥೆಗಳು ಜನರ ಸಹಕಾರ ಪಡೆದುಕೊಳ್ಳುವುದು ಅಗತ್ಯವಾಗಿದೆ ಎಂದರು.
    ಭದ್ರಾವತಿ ನಗರದಲ್ಲಿ ಪರಿಸರ ಮಾಲಿನ್ಯ ಸಹ ಹೆಚ್ಚಿನ ಪ್ರಮಾಣದಲ್ಲಿದ್ದು, ತ್ಯಾಜ್ಯ ನಿರ್ವಹಣೆಯನ್ನು ಸಮರ್ಪಕವಾಗಿ ಕೈಗೊಳ್ಳಬೇಕು. ಎಲ್ಲೆಂದರಲ್ಲಿ ತ್ಯಾಜ್ಯ ಎಸೆಯುವುದನ್ನು ನಿಯಂತ್ರಿಸಬೇಕು. ಜೊತೆಗೆ ಭದ್ರಾ ನದಿ ಕಲ್ಮಶಗೊಳ್ಳದಂತೆ ಎಚ್ಚರ ವಹಿಸಬೇಕು.  ಈ ನಿಟ್ಟಿನಲ್ಲಿ ಸ್ಥಳೀಯ ನಗರಸಭೆ ಆಡಳಿತ ಹೆಚ್ಚಿನ ಜಾಗೃತಿ ವಹಿಸಬೇಕೆಂದು ಸೂಚಿಸಿದರು.
    ನಗರಸಭೆ ವ್ಯಾಪ್ತಿಯ ಎಲ್ಲಾ ಉದ್ಯಾನವನಗಳಲ್ಲೂ ಸಸಿಗಳನ್ನು ನೆಡುವ ಮೂಲಕ ಅವುಗಳನ್ನು ಪೋಷಿಸಬೇಕು. ಜೊತೆಗೆ ಖಾಲಿ ಇರುವ ಜಾಗಗಳನ್ನು ಗುರುತಿಸಿ ಅಲ್ಲಿಯೂ ಸಸಿಗಳನ್ನು ನೆಡುವ ಕಾರ್ಯಯೋಜನೆ ರೂಪಿಸಿಕೊಳ್ಳಬೇಕು. ಕೆರೆ-ಕಟ್ಟೆಗಳನ್ನು ಗುರುತಿಸಿ ಅವುಗಳ ಸ್ವಚ್ಛತೆ ಕೈಗೊಳ್ಳುವ ಜೊತೆಗೆ ಅಭಿವೃದ್ಧಿಗೊಳಿಸಬೇಕೆಂದು ಸಲಹೆ ನೀಡಿದರು.
     ನಗರಸಭೆ ಆಡಳಿತಾಧಿಕಾರಿಯಾಗಿರುವ ಉಪವಿಭಾಗಾಧಿಕಾರಿ ಟಿ.ವಿ ಪ್ರಕಾಶ್ ಮಾತನಾಡಿ, ನಗರಸಭೆ ವ್ಯಾಪ್ತಿಯಲ್ಲಿ ಪರಿಸರ ಸಂರಕ್ಷಣೆಗೆ ಹೆಚ್ಚಿನ ಗಮನ ಹರಿಸುವುದಾಗಿ ಭರವಸೆ ನೀಡಿದರು.  
    ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ(ಎಸಿಎಫ್) ಸುಬ್ರಮಣ್ಯ ಮಾತನಾಡಿ, ಜೀವ ವೈವಿಧ್ಯ ಮಂಡಳಿ ಕೈಗೊಳ್ಳುತ್ತಿರುವ ಕಾರ್ಯಕ್ಕೆ ಅರಣ್ಯ ಇಲಾಖೆ ಹೆಚ್ಚಿನ ಸಹಕಾರ ನೀಡಲಿದೆ ಎಂದರು.
   ನಗರದ ಸ್ತ್ರೀರೋಗ ತಜ್ಞೆ ಡಾ. ವೀಣಾ ಎಸ್ ಭಟ್ ಮಾತನಾಡಿದರು. ನಗರಸಭೆ ಪೌರಾಯುಕ್ತ ಮನೋಹರ್, ಮಾಜಿ ಸೈನಿಕರ ಸಂಘದ ಕಾರ್ಯದರ್ಶಿ ವೆಂಕಟಗಿರಿ, ವಲಯ ಅರಣ್ಯಾಧಿಕಾರಿ ಮಂಜುನಾಥ್, ಉಪ ವಲಯ ಅರಣ್ಯಾಧಿಕಾರಿ ಬಿ.ಆರ್ ದಿನೇಶ್‌ಕುಮಾರ್,ನಗರಸಭೆ ಕಂದಾಯಾಧಿಕಾರಿ ರಾಜ್‌ಕುಮಾರ್, ಪರಿಸರ ಅಭಿಯಂತರ ಪ್ರಭಾಕರ್, ಹಿರಿಯ ಆರೋಗ್ಯ ನಿರೀಕ್ಷಕಿ ಆಶಾಲತಾ, ಕಿರಿಯ ಆರೋಗ್ಯ ನಿರೀಕ್ಷಕಿ ಶೃತಿ, ಗೋವಿಂದ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.