![](https://blogger.googleusercontent.com/img/b/R29vZ2xl/AVvXsEgEMRIDTUpp0YPqDcs36Yv5v-J1Xm9eOLHtKY6Mdm6Yi6R12Xl7rH8J5K8VUCejt2OTbNVFNfjZSDFXRxmyKKm68J3F4ygNafd3BxmSotHthB5wP_xCAXfHix5uXpXYsyqspthgmymM59bA/w400-h190-rw/D19-BDVT-762463.jpg)
ಭದ್ರಾವತಿ ನಗರಸಭೆ ವ್ಯಾಪ್ತಿ ವಾರ್ಡ್ ನಂ.೨೯ರ ಸಿದ್ದಾಪುರ ಎನ್ಟಿಬಿ ಲೇ ಔಟ್ ಉದ್ಯಾನವನದಲ್ಲಿ ಹಮ್ಮಿಕೊಳ್ಳಲಾಗಿದ್ದ 'ಜೀವ ವೈವಿಧ್ಯ ಜಾಗೃತಿ ಅಭಿಯಾನ'ದಡಿ ವೃಕ್ಷಾರೋಪಣ ಕಾರ್ಯಕ್ರಮಕ್ಕೆ ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಆಶೀಸರ ಚಾಲನೆ ನೀಡಿದರು.
ಭದ್ರಾವತಿ, ಜು. ೧೯: ಹೆಚ್ಚುತ್ತಿರುವ ಅರಣ್ಯನಾಶಕ್ಕೆ ಕಡಿವಾಣ ಹಾಕುವ ಜೊತೆಗೆ ಪರಿಸರ ಮಾಲಿನ್ಯ ತಡೆಗಟ್ಟಲು ಮುಂದಾಗುವಂತೆ ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಆಶೀಸರ ಮನವಿ ಮಾಡಿದರು.
ಅವರು ಸೋಮವಾರ ನಗರಸಭೆ ವ್ಯಾಪ್ತಿ ವಾರ್ಡ್ ನಂ.೨೯ರ ಸಿದ್ದಾಪುರ ಎನ್ಟಿಬಿ ಲೇ ಔಟ್ ಉದ್ಯಾನವನದಲ್ಲಿ ಹಮ್ಮಿಕೊಳ್ಳಲಾಗಿದ್ದ 'ಜೀವ ವೈವಿಧ್ಯ ಜಾಗೃತಿ ಅಭಿಯಾನ'ದಡಿ ವೃಕ್ಷಾರೋಪಣ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಅರಣ್ಯ ನಾಶ ತಡೆಗಟ್ಟುವ ನಿಟ್ಟಿನಲ್ಲಿ ಹಲವಾರು ಕಾಯ್ದೆಗಳನ್ನು ಕೇಂದ್ರ ಹಾಗು ರಾಜ್ಯ ಸರ್ಕಾರಗಳು ಜಾರಿಗೊಳಿಸಿವೆ. ಆದರೂ ಸಹ ಅರಣ್ಯ ನಾಶಕ್ಕೆ ಕಡಿವಾಣ ಹಾಕಲು ಸಾಧ್ಯವಾಗುತ್ತಿಲ್ಲ. ಅದರಲ್ಲೂ ಭದ್ರಾವತಿ ತಾಲೂಕಿನಲ್ಲಿ ಅರಣ್ಯನಾಶ ಹೆಚ್ಚಿನ ಪ್ರಮಾಣದಲ್ಲಿದ್ದು, ಪ್ರಸ್ತುತ ಅಸ್ತಿತ್ವದಲ್ಲಿರುವ ಅರಣ್ಯವನ್ನಾದರೂ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಪ್ರಯತ್ನಿಸಬೇಕಾಗಿದೆ. ಈ ಹಿನ್ನಲೆಯಲ್ಲಿ ಅರಣ್ಯ ಇಲಾಖೆ ಹಾಗು ಸ್ಥಳೀಯ ಸಂಸ್ಥೆಗಳು ಜನರ ಸಹಕಾರ ಪಡೆದುಕೊಳ್ಳುವುದು ಅಗತ್ಯವಾಗಿದೆ ಎಂದರು.
ಭದ್ರಾವತಿ ನಗರದಲ್ಲಿ ಪರಿಸರ ಮಾಲಿನ್ಯ ಸಹ ಹೆಚ್ಚಿನ ಪ್ರಮಾಣದಲ್ಲಿದ್ದು, ತ್ಯಾಜ್ಯ ನಿರ್ವಹಣೆಯನ್ನು ಸಮರ್ಪಕವಾಗಿ ಕೈಗೊಳ್ಳಬೇಕು. ಎಲ್ಲೆಂದರಲ್ಲಿ ತ್ಯಾಜ್ಯ ಎಸೆಯುವುದನ್ನು ನಿಯಂತ್ರಿಸಬೇಕು. ಜೊತೆಗೆ ಭದ್ರಾ ನದಿ ಕಲ್ಮಶಗೊಳ್ಳದಂತೆ ಎಚ್ಚರ ವಹಿಸಬೇಕು. ಈ ನಿಟ್ಟಿನಲ್ಲಿ ಸ್ಥಳೀಯ ನಗರಸಭೆ ಆಡಳಿತ ಹೆಚ್ಚಿನ ಜಾಗೃತಿ ವಹಿಸಬೇಕೆಂದು ಸೂಚಿಸಿದರು.
ನಗರಸಭೆ ವ್ಯಾಪ್ತಿಯ ಎಲ್ಲಾ ಉದ್ಯಾನವನಗಳಲ್ಲೂ ಸಸಿಗಳನ್ನು ನೆಡುವ ಮೂಲಕ ಅವುಗಳನ್ನು ಪೋಷಿಸಬೇಕು. ಜೊತೆಗೆ ಖಾಲಿ ಇರುವ ಜಾಗಗಳನ್ನು ಗುರುತಿಸಿ ಅಲ್ಲಿಯೂ ಸಸಿಗಳನ್ನು ನೆಡುವ ಕಾರ್ಯಯೋಜನೆ ರೂಪಿಸಿಕೊಳ್ಳಬೇಕು. ಕೆರೆ-ಕಟ್ಟೆಗಳನ್ನು ಗುರುತಿಸಿ ಅವುಗಳ ಸ್ವಚ್ಛತೆ ಕೈಗೊಳ್ಳುವ ಜೊತೆಗೆ ಅಭಿವೃದ್ಧಿಗೊಳಿಸಬೇಕೆಂದು ಸಲಹೆ ನೀಡಿದರು.
ನಗರಸಭೆ ಆಡಳಿತಾಧಿಕಾರಿಯಾಗಿರುವ ಉಪವಿಭಾಗಾಧಿಕಾರಿ ಟಿ.ವಿ ಪ್ರಕಾಶ್ ಮಾತನಾಡಿ, ನಗರಸಭೆ ವ್ಯಾಪ್ತಿಯಲ್ಲಿ ಪರಿಸರ ಸಂರಕ್ಷಣೆಗೆ ಹೆಚ್ಚಿನ ಗಮನ ಹರಿಸುವುದಾಗಿ ಭರವಸೆ ನೀಡಿದರು.
ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ(ಎಸಿಎಫ್) ಸುಬ್ರಮಣ್ಯ ಮಾತನಾಡಿ, ಜೀವ ವೈವಿಧ್ಯ ಮಂಡಳಿ ಕೈಗೊಳ್ಳುತ್ತಿರುವ ಕಾರ್ಯಕ್ಕೆ ಅರಣ್ಯ ಇಲಾಖೆ ಹೆಚ್ಚಿನ ಸಹಕಾರ ನೀಡಲಿದೆ ಎಂದರು.
ನಗರದ ಸ್ತ್ರೀರೋಗ ತಜ್ಞೆ ಡಾ. ವೀಣಾ ಎಸ್ ಭಟ್ ಮಾತನಾಡಿದರು. ನಗರಸಭೆ ಪೌರಾಯುಕ್ತ ಮನೋಹರ್, ಮಾಜಿ ಸೈನಿಕರ ಸಂಘದ ಕಾರ್ಯದರ್ಶಿ ವೆಂಕಟಗಿರಿ, ವಲಯ ಅರಣ್ಯಾಧಿಕಾರಿ ಮಂಜುನಾಥ್, ಉಪ ವಲಯ ಅರಣ್ಯಾಧಿಕಾರಿ ಬಿ.ಆರ್ ದಿನೇಶ್ಕುಮಾರ್,ನಗರಸಭೆ ಕಂದಾಯಾಧಿಕಾರಿ ರಾಜ್ಕುಮಾರ್, ಪರಿಸರ ಅಭಿಯಂತರ ಪ್ರಭಾಕರ್, ಹಿರಿಯ ಆರೋಗ್ಯ ನಿರೀಕ್ಷಕಿ ಆಶಾಲತಾ, ಕಿರಿಯ ಆರೋಗ್ಯ ನಿರೀಕ್ಷಕಿ ಶೃತಿ, ಗೋವಿಂದ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.