Monday, July 26, 2021

ಮಾಜಿ ಸೈನಿಕರಿಗೆ ಸೌಲಭ್ಯಗಳು ಸಮರ್ಪಕವಾಗಿ ದೊರೆಯಲಿ : ಟಿ.ವಿ ಪ್ರಕಾಶ್


ಭದ್ರಾವತಿಯಲ್ಲಿ ಸೋಮವಾರ ತಾಲೂಕು ಮಾಜಿ ಸೈನಿಕರ ಸಂಘದ ವತಿಯಿಂದ ನ್ಯೂಟೌನ್ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಗಿಲ್ ವಿಜಯೋತ್ಸವ ಕಾರ್ಯಕ್ರಮದಲ್ಲಿ ಹಿರಿಯ ಮಾಜಿ ಸೈನಿಕರನ್ನು ಸನ್ಮಾನಿಸಿ ಗೌರವಿಸಲಾಯಿತು.
    ಭದ್ರಾವತಿ, ಜು. ೨೬: ದೇಶ ಸೇವೆಯಲ್ಲಿ ತೊಡಗಿಸಿಕೊಂಡ ಸೈನಿಕರಿಗೆ ಸರ್ಕಾರದ ಸೌಲಭ್ಯಗಳು ಸರಿಯಾಗಿ ಲಭಿಸಬೇಕು. ಈ ನಿಟ್ಟಿನಲ್ಲಿ ಎಲ್ಲರೂ ಗಮನ ಹರಿಸಬೇಕೆಂದು ಉಪವಿಭಾಗಾಧಿಕಾರಿ ಟಿ.ವಿ ಪ್ರಕಾಶ್ ಹೇಳಿದರು.
    ಅವರು ಸೋಮವಾರ ತಾಲೂಕು ಮಾಜಿ ಸೈನಿಕರ ಸಂಘದ ವತಿಯಿಂದ ನ್ಯೂಟೌನ್ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಗಿಲ್ ವಿಜಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
    ಹಲವಾರು ಕಾರಣಗಳಿಂದಾಗಿ ಮಾಜಿ ಸೈನಿಕರಿಗೆ ಸರ್ಕಾರದ ಸೌಲಭ್ಯಗಳು ತಲುಪುವಲ್ಲಿ ವಿಳಂಬವಾಗುತ್ತಿವೆ. ಸರ್ಕಾರದ ಮಟ್ಟದಲ್ಲಿ ಹಲವಾರು ಬದಲಾವಣೆಗಳಾಗಬೇಕಾಗಿದೆ.  ಈ ನಿಟ್ಟಿನಲ್ಲಿ ಸಂಘಟನೆ ಮೂಲಕ ಹೋರಾಟ ನಡೆಸುವುದು ಅನಿವಾರ್ಯ ಎಂದರು.
    ಕಾರ್ಯಕ್ರಮದಲ್ಲಿ ಹಿರಿಯ ಮಾಜಿ ಸೈನಿಕರನ್ನು ಹಾಗು ಕೊರೋನಾ ಸಂದರ್ಭದಲ್ಲಿ ವಿವಿಧ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸಿರುವ ಮಾಜಿ ಸೈನಿಕರನ್ನು ಸನ್ಮಾನಿಸಿ ಗೌರವಿಸಲಾಯಿತು.
    ಮಾಜಿ ಸೈನಿಕರ ಸಂಘದ ಅಧ್ಯಕ್ಷ ಎಲ್.ಡಿ ಅಶೋಕ್ ಅಧ್ಯಕ್ಷತೆ ವಹಿಸಿದ್ದರು. ತಹಸೀಲ್ದಾರ್ ಆರ್. ಪ್ರದೀಪ್, ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್  ಸೋಮಶೇಖರಯ್ಯ, ನಗರಸಭಾ ಸದಸ್ಯರಾದ ಬಿ.ಕೆ ಮೋಹನ್, ಚನ್ನಪ್ಪ, ಕಾಂತರಾಜ್, ಮಾಜಿ ಸೈನಿಕರ ಸಂಘದ ಕಾರ್ಯದರ್ಶಿ ವೆಂಕಟಗಿರಿ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.  
   ಇದಕ್ಕೂ ಮೊದಲು ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ವೀರ ಯೋಧರಿಗೆ ಗೌರವ ಸಲ್ಲಿಸಲಾಯಿತು. ಮಕ್ಕಳಿಂದ ದೇಶ ಭಕ್ತಿ ಗೀತೆ ಗಾಯನ ನಡೆಯಿತು.

ಭದ್ರಾವತಿಯಲ್ಲಿ ಕೊರೋನಾ ಸೋಂಕಿಗೆ ೨೫೦ ಬಲಿ

ಭದ್ರಾವತಿ, ಜು. ೨೬: ತಾಲೂಕಿನಲ್ಲಿ ಸೋಮವಾರ ೧೨ ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇಬ್ಬರು ಬಲಿಯಾಗಿದ್ದಾರೆ. ತಾಲೂಕಿನಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ೨೫೦ಕ್ಕೆ ತಲುಪಿದೆ.
     ಒಟ್ಟು ೭೫೮ ಮಂದಿಯ ಮಾದರಿ ಸಂಗ್ರಹಿಸಲಾಗಿದ್ದು, ನಗರ ವ್ಯಾಪ್ತಿಯಲ್ಲಿ ೬ ಹಾಗು ಗ್ರಾಮಾಂತರ ವ್ಯಾಪ್ತಿಯಲ್ಲಿ ೬ ಸೇರಿದಂತೆ ಒಟ್ಟು ೧೨ ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ೧೫ ಮಂದಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಇದುವರೆಗೂ ಒಟ್ಟು ೭೫೮೬ ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಈ ಪೈಕಿ ೭೬೩೩ ಮಂದಿ ಗುಣಮುಖರಾಗಿದ್ದಾರೆ.
    ತಾಲೂಕಿನಲ್ಲಿ ೪೭ ಸಕ್ರಿಯ ಪ್ರಕರಣಗಳು ಬಾಕಿ ಇದ್ದು, ಇದುವರೆಗೂ ಒಟ್ಟು ೨೫೦ ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

ಎಂಪಿಎಂ ಪುನಃ ಆರಂಭಗೊಳ್ಳುವ ನಿರೀಕ್ಷೆ ಹುಸಿ : ಬಿಎಸ್‌ವೈ ರಾಜೀನಾಮೆಯಿಂದ ದಿಗ್ಭ್ರಮೆ


ಭದ್ರಾವತಿ ಮೈಸೂರು ಕಾಗದ ಕಾರ್ಖಾನೆ
    ಭದ್ರಾವತಿ, ಜು. ೨೬: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ೪ ಬಾರಿ ಮುಖ್ಯಮಂತ್ರಿಯಾದರೂ ಸಹ ರಾಜ್ಯ ಸರ್ಕಾರಿ ಸ್ವಾಮ್ಯದ ನಗರದ ಮೈಸೂರು ಕಾಗದ ಕಾರ್ಖಾನೆ ಮಾತ್ರ ಅಭಿವೃದ್ಧಿ ಕಾಣಲಿಲ್ಲ. ಕೊನೆಗೂ ಕಾರ್ಮಿಕರ ಬೇಡಿಕೆ ಈಡೇರಲಿಲ್ಲ.
     ಮೈಸೂರು ಮಹಾರಾಜ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗು ಸರ್ ಮಿರ್ಜಾ ಇಸ್ಮಾಯಿಲ್‌ರವರ ಪರಿಶ್ರಮದ ಫಲವಾಗಿ ೧೯೩೬ರಲ್ಲಿ ಆರಂಭಗೊಂಡ ಕಾರ್ಖಾನೆ ೮ ದಶಕಗಳನ್ನು ಪೂರೈಸಿದೆ. ಕಳೆದ ೬ ವರ್ಷಗಳಿಂದ ಕಾರ್ಖಾನೆ ಯಂತ್ರಗಳು ಸ್ಥಗಿತಗೊಂಡಿದ್ದು, ಪ್ರತ್ಯಕ್ಷ ಹಾಗು ಪರೋಕ್ಷವಾಗಿ ಕಾರ್ಖಾನೆಯನ್ನು ನಂಬಿಕೊಂಡಿದ್ದ ಸಾವಿರಾರು ಕುಟುಂಬಗಳು ಬೀದಿಪಾಲಾಗಿವೆ. ಕಾರ್ಖಾನೆಯನ್ನು ಪುನಃ ಆರಂಭಿಸುವಂತೆ ಒತ್ತಾಯಿಸಿ ಹಲವು ರೀತಿಯ ಹೋರಾಟಗಳು ನಡೆದಿವೆ. ಆದರೆ ಹೋರಾಟಗಳಿಗೆ ಇದುವರೆಗೂ ಯಾವುದೇ ಪ್ರತಿಫಲ ಲಭಿಸಿಲ್ಲ.
    ಬಿ.ಎಸ್ ಯಡಿಯೂರಪ್ಪ ಅವರು ತಮ್ಮ ಅವಧಿಯಲ್ಲಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸಿದ್ದಾರೆ.  ಸಾವಿರಾರು ಕೋ. ರು. ವೆಚ್ಚದ ಹಲವಾರು ಹೊಸ ಹೊಸ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದೆ ರೀತಿ ಸರ್ಕಾರಿ ಸ್ವಾಮ್ಯದಲ್ಲಿ ಅಥವಾ ಖಾಸಗಿ ಸಹಭಾಗಿತ್ವದ ಮೂಲಕ ಎಂಪಿಎಂ ಕಾರ್ಖಾನೆಯನ್ನೂ ಸಹ ಹಂತ ಹಂತವಾಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಮುಂದಾಗಿದ್ದರು. ಆದರೆ ಅವರ ಪ್ರಯತ್ನಕ್ಕೆ ಇದೀಗ ಹಿನ್ನಡೆ ಎದುರಾಗಿದೆ.
    ಒಂದು ಕಾಲದಲ್ಲಿ ಸುಮಾರು ೫,೦೦೦ಕ್ಕೂ ಅಧಿಕ ಕಾಯಂ ಕಾರ್ಮಿಕರು, ೪,೦೦೦ಕ್ಕೂ ಅಧಿಕ ಗುತ್ತಿಗೆ ಕಾರ್ಮಿಕರನ್ನು ಹೊಂದಿದ್ದ ಕಾರ್ಖಾನೆಯಲ್ಲಿ ಇದೀಗ ಮಾನವ ಸಂಪನ್ಮೂಲ ಶೂನ್ಯಕ್ಕೆ ಬಂದು ತಲುಪಿದೆ. ಕಾರ್ಖಾನೆ ಯಂತ್ರಗಳು ತುಕ್ಕು ಹಿಡಿದಿವೆ. ಸಾವಿರಾರು ವಸತಿ ಗೃಹಗಳು ಪಾಳು ಬಿದ್ದಿವೆ. ನೆಡುತೋಪುಗಳು ಲೂಟಿಯಾಗಿವೆ. ಕಾರ್ಮಿಕ ಕುಟುಂಬಗಳು ಅತಂತ್ರವಾಗಿವೆ. ಕಾರ್ಖಾನೆಯನ್ನು ನಂಬಿಕೊಂಡಿದ್ದ ಕೃಷಿಕರು ಕೃಷಿ ಚಟುವಟಿಕೆಗಳಿಂದ ವಿಮುಖರಾಗಿದ್ದಾರೆ. ನಗರದ ಆರ್ಥಿಕ ಬೆಳವಣಿಗೆ ಕುಸಿತಗೊಂಡಿದೆ. ಇಂತಹ ಸಂದರ್ಭದಲ್ಲಿ ಪುನಃ ಕಾರ್ಖಾನೆ ಆರಂಭಗೊಳ್ಳುವ ನಿರೀಕ್ಷೆಯಲ್ಲಿದ್ದ ಕ್ಷೇತ್ರದ ಜನತೆಗೆ ಯಡಿಯೂರಪ್ಪನವರ ರಾಜೀನಾಮೆ ದಿಗ್ಭ್ರಮೆಯನ್ನುಂಟು ಮಾಡಿದೆ ಎಂದರೆ ತಪ್ಪಾಗಲಾರದು.