Saturday, August 14, 2021

ಅಡಕೆ ಮರ ಬಿದ್ದು ೪ ವರ್ಷದ ಮಗು ಸಾವು

ಭದ್ರಾವತಿ, ಆ. ೧೪: ಮನೆ ಮುಂದೆ ಆಟವಾಡುತ್ತಿದ್ದ ೪ ವರ್ಷದ ಮಗುವಿನ ಮೇಲೆ ಅಡಕೆ ಮರ ಬಿದ್ದ ಪರಿಣಾಮ ಮೃತಪಟ್ಟಿರುವ ಘಟನೆ ತಾಲೂಕಿನ ಸಿದ್ದರಮಟ್ಟಿಯ ದೇವರಹಟ್ಟಿ ಗ್ರಾಮದಲ್ಲಿ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
    ಗ್ರಾಮದ ಅಡಕೆ ತೋಟದವೊಂದರ ಮನೆಯಲ್ಲಿ ವಾಸವಾಗಿರುವ ಸಂತೋಷ್ ಎಂಬುವರ ೪ ವರ್ಷದ ಹೆಣ್ಣು ಮಗು ಆದ್ಯಾ ಮೇಲೆ ಏಕಾಏಕಿ ಅಡಕೆ ಮರ ಮುರಿದು ಬಿದ್ದಿದ್ದು, ತೀವ್ರವಾಗಿ ಗಾಯಗೊಂಡಿದ್ದ ಮಗುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿದಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ. ಈ ಸಂಬಂಧ ಸಂತೋಷ್ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಕಮಲಮ್ಮ ನಿಧನ

ಕಮಲಮ್ಮ
    ಭದ್ರಾವತಿ, ಆ. ೧೪: ಹಿರಿಯ ಕಾರ್ಮಿಕ ಹೋರಾಟಗಾರ, ಪ್ರಗತಿಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಡಿ.ಸಿ ಮಾಯಣ್ಣ ಅವರ ಪತ್ನಿ ಕಮಲಮ್ಮ(೭೭) ಶನಿವಾರ ನಿಧನ ಹೊಂದಿದರು.
    ಪತಿ ಡಿ.ಸಿ ಮಾಯಣ್ಣ, ೩ ಗಂಡು, ೩ ಹೆಣ್ಣು ಮಕ್ಕಳು ಹಾಗು ಅಳಿಯಂದಿರು, ಸೊಸೆಯಂದಿರು ಹಾಗು ಮೊಮ್ಮಕ್ಕಳನ್ನು ಹೊಂದಿದ್ದರು. ಕಮಲಮ್ಮ ಅವರು ಡಿ.ಸಿ ಮಾಯಣ್ಣ ಅವರ ಹೋರಾಟಕ್ಕೆ ಪ್ರೇರಕ ಶಕ್ತಿಯಾಗಿ, ಬೆನ್ನೆಲುಬಾಗಿ ನಿಂತಿದ್ದರು.
ಕಮ್ಮಲಮ್ಮ ಅವರ ಅಂತ್ಯಕ್ರಿಯೆ ಬೊಮ್ಮನಕಟ್ಟೆಯಲ್ಲಿರುವ ಅವರ ನಿವಾಸದ ಸಮೀಪದಲ್ಲಿರುವ ತೋಟದಲ್ಲಿ ಭಾನುವಾರ ನಡೆಯಲಿದೆ.
    ಇವರ ನಿಧನಕ್ಕೆ ಪ್ರಗತಿಪರ ಸಂಘಟನೆಗಳ ಒಕ್ಕೂಟ, ಜನಶಕ್ತಿ ಜಿ. ರಾಜು, ವಿವಿಧ ಸಂಘ ಸಂಸ್ಥೆಗಳ ಪ್ರಮುಖರು, ಕಾರ್ಮಿಕರ ಹೋರಾಟಗಾರರು, ಸ್ಥಳೀಯ ಜನಪ್ರತಿನಿಧಿಗಳು ಸೇರಿದಂತೆ ಇನ್ನಿತರರು ಸಂತಾಪ ಸೂಚಿಸಿದ್ದಾರೆ.

ಕುಸಿದು ಬೀಳುವ ಹಂತದಲ್ಲಿದೆ ಈ ಸೇತುವೆ : ದುರ್ಘಟನೆ ಸಂಭವಿಸುವ ಮೊದಲು ಎಚ್ಚೆತ್ತುಕೊಳ್ಳಿ

ಸಂಬಂಧಪಟ್ಟ ಇಲಾಖೆ ವಿರುದ್ಧ ಸ್ಥಳೀಯರ ಅಸಮಾಧಾನ


    * ಅನಂತಕುಮಾರ್
ಭದ್ರಾವತಿ, ಆ. ೧೪: ಇಲ್ಲಿನ ನಗರಸಭೆ ವಾರ್ಡ್ ನಂ.೩೧ರ ವ್ಯಾಪ್ತಿಯಲ್ಲಿ ಸೇತುವೆಯೊಂದು ಕುಸಿದು ಬೀಳುವ ಹಂತದಲ್ಲಿದ್ದರೂ ಸಹ ಸಂಬಂಧಪಟ್ಟ ಇಲಾಖೆಯವರು ಗಮನ ಹರಿಸದಿರುವುದು  ಸ್ಥಳೀಯರ ಅಸಮಾಧಾನಕ್ಕೆ ಕಾರಣವಾಗಿದೆ.
    ವಾರ್ಡ್ ನಂ.೩೧ ಜಿಂಕ್‌ಲೈನ್ ಕೊಳಚೆ ಪ್ರದೇಶಕ್ಕೆ ರಾಷ್ಟ್ರೀಯ ಹೆದ್ದಾರಿ ಬೈಪಾಸ್ ರಸ್ತೆಯಿಂದ ಸಂಪರ್ಕಗೊಂಡಿರುವ ರಸ್ತೆಯಲ್ಲಿರುವ ಸೇತುವೆ ಮಳೆಯಿಂದಾಗಿ ಕುಸಿದು ಬೀಳುವ ಹಂತಕ್ಕೆ ತಲುಪಿದೆ. ಆದರೂ ಸಹ ಸಂಬಂಧಪಟ್ಟ ಇಲಾಖೆಯವರು ಗಮನ ಹರಿಸಿಲ್ಲ.
    ಇಲ್ಲಿ ಜನ್ನಾಪುರ ಕೆರೆ ನೀರು ಹರಿಯುತ್ತಿದ್ದು, ಜೊತೆಗೆ ವೀರಾಪುರ ಗ್ರಾಮದ ಕಡೆಯಿಂದ ಹರಿದು ಬರುವ ನೀರು ಸಹ ಸಂಪರ್ಕಗೊಂಡಿದೆ. ಈ ನೀರು ಮುಂದೆ ಭಂಡಾರಹಳ್ಳಿ, ಕವಲಗುಂದಿ ಮೂಲಕ ಭದ್ರಾನದಿಗೆ ಸೇರ್ಪಡೆಗೊಳ್ಳುತ್ತದೆ. ಈಗಾಗಲೇ ಸೇತುವೆ ಬಿಟ್ಟು ಡಾಂಬರ್ ರಸ್ತೆ ನಿರ್ಮಿಸಲಾಗಿದೆ. ಸೇತುವೆ ಮೇಲಿನ ಮಣ್ಣಿನ ರಸ್ತೆ ಮಳೆಯಿಂದಾಗಿ ಬಹುತೇಕ ಕುಸಿದಿದ್ದು, ಎರಡು ಬದಿಯ ತಡೆಗೋಡೆ ಸಹ ಶಿಥಿಲಗೊಂಡು ಮುರಿದು ಬಿದ್ದಿದೆ. ಆದರೂ ಸಹ ಈ ರಸ್ತೆ ಮೇಲೆ ವಾಹನಗಳು ಸಂಚರಿಸುತ್ತಿವೆ. 

ಸುಮಾರು ೨ ವರ್ಷಗಳಿಂದ ಈ ಸೇತುವೆ ಶಿಥಿಲಗೊಂಡು ಕುಸಿದು ಬೀಳುವ ಸ್ಥಿತಿಯಲ್ಲಿದ್ದು, ಈ ಹಿಂದೆ ಸೇತುವೆ ನಿರ್ಮಾಣಕ್ಕೆ ಮಂಜೂರಾಗಿದ್ದ ಹಣ ಬೇರೆ ಕಾಮಗಾರಿಗೆ ಬಳಸಿಕೊಳ್ಳಲಾಗಿದೆ. ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಧರ್ಮಪ್ಪ ಅವರಿಗೆ ತಕ್ಷಣ ಸೇತುವೆ ನಿರ್ಮಿಸಿಕೊಡುವಂತೆ ಹಲವಾರು ಬಾರಿ ಮನವಿ ಸಲ್ಲಿಸಲಾಗಿದೆ. ಅಲ್ಲದೆ ಸ್ಥಳೀಯ ಶಾಸಕರ ಗಮನಕ್ಕೂ ಹಾಗು ಈ ಹಿಂದಿನ  ನಗರಸಭೆ ಪೌರಾಯುಕ್ತರಾಗಿದ್ದ ಮನೋಹರ್ ಅವರ ಗಮನಕ್ಕೂ ತರಲಾಗಿದೆ. ಆದರೂ ಸಹ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ.
                                              - ಪಲ್ಲವಿ ದಿಲೀಪ್, ೩೧ನೇ ವಾರ್ಡ್ ನಗರಸಭಾ ಸದಸ್ಯರು, ಭದ್ರಾವತಿ.

  ಈ ರಸ್ತೆಯಲ್ಲಿ ಪುರಾಣ ಪ್ರಸಿದ್ದ ಶ್ರೀ ಮಾದೇಶ್ವರ ಸ್ವಾಮಿ ದೇವಸ್ಥಾನ, ಚೌಡೇಶ್ವರಿ ದೇವಸ್ಥಾನಗಳಿದ್ದು, ಜಿಂಕ್‌ಲೈನ್ ಮೂಲಕ ವೀರಾಪುರ, ಸಿರಿಯೂರು ಗ್ರಾಮಗಳಿಗೆ ಹಾಗು ಹುಲಿಬಂಡೆ ಸಿದ್ದೇಶ್ವರ ಸ್ವಾಮಿ ದೇವಸ್ಥಾನಗಳಿಗೆ ತೆರಳುವವರು ಈ ರಸ್ತೆ ಮೂಲಕವೇ ಸಾಗಬೇಕಾಗಿದೆ. ಅಲ್ಲದೆ ಹಬ್ಬದ ಹರಿದಿನಗಳಂದು ಜನದಟ್ಟಣೆ ಅಧಿಕವಾಗಿರುತ್ತದೆ. ಈ ಭಾಗದಲ್ಲಿ ಕೃಷಿ ಜಮೀನುಗಳಿದ್ದು, ರೈತರು ಸಹ ಈ ರಸ್ತೆಯನ್ನೇ ಅವಲಂಬಿಸಿದ್ದಾರೆ. ಈ ರಸ್ತೆ ಬೈಪಾಸ್ ರಸ್ತೆಗೆ ಸಂಪರ್ಕಗೊಂಡಿರುವುದರಿಂದ ದೂರದ ಊರುಗಳಿಂದ ನಗರ ವ್ಯಾಪ್ತಿಯ ಜನ್ನಾಪುರ, ಹುತ್ತಾಕಾಲೋನಿ, ನ್ಯೂಟೌನ್ ಭಾಗದ ಪ್ರದೇಶಗಳಿಗೆ ಬರುವ ಪ್ರಯಾಣಿಕರು ಸಹ ಇದೆ ರಸ್ತೆಯಲ್ಲಿ ಸಂಚರಿಸುತ್ತಿದ್ದಾರೆ. ಈ ಹಿನ್ನೆಯಲ್ಲಿ ಸೇತುವೆ ಕುಸಿದು ಬೀಳುವ ಹಂತಕ್ಕೆ ತಲುಪಿದ್ದರೂ ಸಹ ಸಂಬಂಧಪಟ್ಟ ಇಲಾಖೆಯವರು ಗಮನ ಹರಿಸದಿರುವುದರಿಂದ ಸ್ಥಳೀಯರು ಅಸಮಾಧಾನಗೊಂಡಿದ್ದಾರೆ.
   ಒಂದೇ ವೇಳೆ ದುರ್ಘಟನೆಗಳು ಸಂಭವಿಸಿದ್ದಲ್ಲಿ ಸ್ಥಳೀಯರು ಸಿಡಿದೇಳುವುದು ಖಚಿತವಾಗಿದೆ. ಇದಕ್ಕೂ ಮೊದಲು ಸಂಬಂಧಪಟ್ಟ ಇಲಾಖೆಯವರು ದುರಸ್ತಿಗೊಳಿಸಲು ಕ್ರಮ ಕೈಗೊಳ್ಳಬೇಕಾಗಿದೆ.  
    ಗ್ರಾಮೀಣ ಭಾಗದಲ್ಲಿ ಬಹುತೇಕ ಕಡೆ ಸೇತುವೆಗಳು ಇದೆ ಸ್ಥಿತಿಯನ್ನು ತಲುಪಿವೆ. ಕೇಂದ್ರ ಹಾಗು ರಾಜ್ಯ ಸರ್ಕಾರಗಳಿಂದ ರಸ್ತೆ ಹಾಗು ಸೇತುವೆ ಕಾಮಗಾರಿಗಳಿಗಾಗಿ ಸಾಕಷ್ಟು ಅನುದಾನ ಬಿಡುಗಡೆಯಾಗುತ್ತಿದೆ. ಆದರೂ ಸಹ ಸಮರ್ಪಕವಾಗಿ ರಸ್ತೆ ಹಾಗು ಸೇತುವೆ ಕಾಮಗಾರಿಗಳು ನಡೆಯುತ್ತಿಲ್ಲ ಎಂಬ ದೂರುಗಳು ಕೇಳಿ ಬರುತ್ತಿವೆ.

ಭದ್ರಾ ಮೇಲ್ದಂಡೆ ಯೋಜನೆಗೆ ರಾಷ್ಟ್ರೀಯ ಯೋಜನೆ ಸ್ಥಾನಮಾನ : ಗೋವಿಂದ ಕಾರಜೋಳ


ನೂತನ ಜಲಸಂಪನ್ಮೂಲ ಖಾತೆ ಸಚಿವ ಗೋವಿಂದ ಕಾರಜೋಳ ಅವರು ಶನಿವಾರ ಭದ್ರಾವತಿ ತಾಲೂಕಿನ ಭದ್ರಾ ನದಿ ಜಲಾಶಯದಲ್ಲಿ ಬಾಗಿನ ಅರ್ಪಿಸಿ ಮಾತನಾಡಿದರು.
     ಭದ್ರಾವತಿ, ಆ. ೧೪: ಬಯಲು ಸೀಮೆ ಮಧ್ಯ ಕರ್ನಾಟಕ ಭಾಗಕ್ಕೆ ನೀರು ಒದಗಿಸುವ ಮಹಾತ್ವಕಾಂಕ್ಷೆ ಯೋಜನೆಯಾದ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಾಗಿ ಘೋಷಣೆ ಮಾಡಲು ತಾತ್ವಿಕ ಒಪ್ಪಿಗೆ ಸಿಕ್ಕಿದೆ. ಇನ್ನೊಂದು ಸಭೆ ನಡೆಯುವುದು ಬಾಕಿ ಇದ್ದು, ಈ ಸಂಬಂಧ ತಕ್ಷಣ ಅನುಮೋದನೆ ಸಿಗಲಿದೆ ಎಂದು ನೂತನ ಜಲಸಂಪನ್ನೂಲ ಖಾತೆ ಸಚಿವ ಗೋವಿಂದ ಕಾರಜೋಳ ಹೇಳಿದರು.
    ಅವರು ಶನಿವಾರ ಭದ್ರಾ ನದಿಗೆ ತಾಲೂಕಿನ ಭದ್ರಾ ಜಲಾಶಯದಲ್ಲಿ ಬಾಗಿನ ಅರ್ಪಿಸಿ ಮಾತನಾಡಿದರು. ಮಧ್ಯ ಕರ್ನಾಟಕದ ಬಹು ನಿರೀಕ್ಷಿತ ಯೋಜನೆಯಾಗಿರುವ ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಕೆಲವೇ ದಿನಗಳಲ್ಲಿ ಪೂರ್ಣಗೊಳ್ಳಲಿದೆ. ಈಗಾಗಲೇ ಕೇಂದ್ರ ಸರ್ಕಾರ ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ವೀಕ್ಷಣೆ ನಡೆಸಿ ತಾಂತ್ರಿಕ ವರದಿ ಸಿದ್ದಪಡಿಸಿ ಸಲ್ಲಿಸಲು ತಜ್ಞರ ತಂಡವನ್ನು ಕಳುಹಿಸಿಕೊಟ್ಟಿತ್ತು. ಈ ತಂಡ ವರದಿಯನ್ನು ಸಲ್ಲಿಸಿದೆ. ಈ ಯೋಜನೆಗೆ ಇದುವರೆಗೂ ಸುಮಾರು ೪,೭೦೦ ಕೋ. ರು. ಅಧಿಕ ಹಣ ವ್ಯಯಮಾಡಲಾಗಿದೆ.  ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿಸುವ ಕನಸು ಈಡೇರಲಿದೆ ಎಂದರು.
       ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ತುಮಕೂರು ಜಿಲ್ಲೆಗಳ ರೈತರಿಗೆ ಅನುಕೂಲವಾಗುವ ಈ ಯೋಜನೆಗೆ ಇನ್ನೂ ೨೧,೪೫೦ ಕೋ. ರು. ವ್ಯಯವಾಗುವ ನಿರೀಕ್ಷೆ ಇದೆ. ಈ  ಯೋಜನೆಯಿಂದ ೨.೨೫ ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಲಭಿಸಲಿದೆ ಎಂದರು.
     ಸಚಿವ ಭೈರತಿ ಬಸವರಾಜ್, ಸಂಸದರಾದ ಬಿ.ವೈ ರಾಘವೇಂದ್ರ, ಜಿ.ಎಂ ಸಿದ್ದೇಶ್ವರ, ಶಾಸಕರಾದ ಮಾಡಾಳ್ ವಿರೂಪಾಕ್ಷಪ್ಪ, ಎಸ್.ಎ ರವೀಂದ್ರನಾಥ್, ಎಸ್. ರುದ್ರೇಗೌಡ, ಕಾಡ ಅಧ್ಯಕ್ಷೆ ಪವಿತ್ರಾ ರಾಮಯ್ಯ, ಸೂಡಾ ಅಧ್ಯಕ್ಷ ಎಸ್.ಎಸ್ ಜ್ಯೋತಿ ಪ್ರಕಾಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಸ್ವಾತಂತ್ರ್ಯ ಒಂದು ದಿನದ ಸಂಭ್ರಮಾಚರಣೆಗೆ ಸೀಮಿತವಲ್ಲ : ಬಿ.ಎನ್ ರಾಜು

ಭದ್ರಾವತಿ ಹಳೇನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಿಂಭಾಗದಲ್ಲಿರುವ ಡಾ. ಬಿ.ಆರ್ ಅಂಬೇಡ್ಕರ್ ಸಮುದಾಯ ಭವನದ ಮುಂಭಾಗ ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಹಮ್ಮಿಕೊಳ್ಳಲಾಗಿರುವ ಪ್ರತಿಭಟನಾ ಸತ್ಯಾಗ್ರಹದಲ್ಲಿ ಸಮಿತಿ ಅಧ್ಯಕ್ಷ ಬಿ.ಎನ್ ರಾಜು ಮಾತನಾಡಿದರು.
     ಭದ್ರಾವತಿ, ಆ. ೧೪: ದೇಶಕ್ಕೆ ಸ್ವಾತಂತ್ರ್ಯ ಲಭಿಸಿರುವುದು ಒಂದು ದಿನದ ಸಂಭ್ರಮಾಚರಣೆಗೆ ಮಾತ್ರ ಸೀಮಿತವಾಗಬಾರದು.  ಬದಲಿಗೆ ಈ ದೇಶದ ಪ್ರತಿಯೊಬ್ಬ ನಾಗರೀಕ ಸಹ ಗೌರವಯುತವಾಗಿ, ನೆಮ್ಮದಿಯಿಂದ ಬದುಕುವ ವಾತಾವರಣ ನಿರ್ಮಾಣಗೊಳ್ಳುವವರೆಗೂ ಸಾಗಬೇಕಾಗಿದೆ ಎಂದು ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು ಹೇಳಿದರು.
     ಅವರು ಶನಿವಾರ ಹಳೇನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಿಂಭಾಗದಲ್ಲಿರುವ ಡಾ. ಬಿ.ಆರ್ ಅಂಬೇಡ್ಕರ್ ಸಮುದಾಯ ಭವನದ ಮುಂಭಾಗ ಸಮಿತಿ ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಹಮ್ಮಿಕೊಳ್ಳಲಾಗಿರುವ ಪ್ರತಿಭಟನಾ ಸತ್ಯಾಗ್ರಹ ನೇತೃತ್ವ ವಹಿಸಿ ಮಾತನಾಡಿದರು.
ದೇಶಕ್ಕೆ ಸ್ವಾತಂತ್ರ್ಯ ಲಭಿಸಿ ಸುಮಾರು ೭೫ ವರ್ಷ ಕಳೆದರೂ ಸಹ ಮಧ್ಯಮ ಹಾಗು ಬಡ ವರ್ಗದವರು ಗೌರವಯುತವಾಗಿ, ನೆಮ್ಮದಿಯಿಂದ ಬದುಕಲು ಸಾಧ್ಯವಾಗುತ್ತಿಲ್ಲ. ಕೇಂದ್ರ ಹಾಗು ರಾಜ್ಯ ಸರ್ಕಾರಗಳು ಪ್ರತಿಯೊಬ್ಬರಿಗೂ ಬದಕಲು ಅವಶ್ಯಕವಿರುವ ಮೂಲ ಸೌಲಭ್ಯಗಳನ್ನು ಕಲ್ಪಿಸಿಕೊಡಬೇಕಾಗಿದೆ. ಈ ನಿಟ್ಟಿನಲ್ಲಿ ನಿರಂತರವಾಗಿ ಹೋರಾಟ ನಡೆಸಿಕೊಂಡು ಬರುತ್ತಿದ್ದರೂ ಸಹ ಯಾವುದೇ ಪ್ರಯೋಜನವಾಗಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.
    ವಿಶ್ವದಾದ್ಯಂತ ಕೋವಿಡ್-೧೯ ಮಹಾಮಾರಿಯಿಂದ ಮಧ್ಯಮ ಹಾಗು ಬಡ ವರ್ಗದವರು ಪ್ರಾಣ ಉಳಿಸಿಕೊಳ್ಳಲು ಹೆಣಕಾಡುತ್ತಿದ್ದಾರೆ. ಅಲ್ಲದೆ ಲಾಕ್‌ಡೌನ್ ಪರಿಣಾಮ ಬದುಕು ತೀರ ಸಂಕಷ್ಟಕ್ಕೆ ಸಾಗಿದೆ. ಈ ನಡುವೆ ಸೋಂಕಿನಿಂದ ಮೃತಪಟ್ಟವರ ಕುಟುಂಬಕ್ಕೆ ದೇಶದ ಸರ್ವೋಚ್ಛ ನ್ಯಾಯಾಲಯ ಪರಿಹಾರ ನೀಡಲು ಸೂಚಿಸಿದೆ. ಆದರೂ ಸಹ ಇದುವರೆಗೂ ಪರಿಹಾರ ನೀಡದಿರುವುದು ಸರಿಯಲ್ಲ. ತಕ್ಷಣ ಪ್ರತಿ ಕುಟುಂಬಕ್ಕೆ ೧೦ ಲಕ್ಷ ರು. ಪರಿಹಾರ ನೀಡಬೇಕೆಂದು ಆಗ್ರಹಿಸಿದರು.
     ವಿಶ್ವದಾದ್ಯಂತ ಸಂವಿಧಾನ ಶಿಲ್ಪಿ, ವಿಶ್ವಮಾನವ ಡಾ. ಬಿ.ಆರ್ ಅಂಬೇಡ್ಕರ್ ಅವರನ್ನು ಗೌರವದಿಂದ ಕಾಣಲಾಗುತ್ತಿದೆ. ಆದರೆ ಭಾರತ ದೇಶದಲ್ಲಿ ಮಾತ್ರ ಅವರನ್ನು ಗೌರವಯುತವಾಗಿ ಕಾಣುತ್ತಿಲ್ಲ. ಇದಕ್ಕೆ ಉದಾಹರಣೆ ನಗರದಲ್ಲಿ ನಿರ್ಮಾಣಗೊಳ್ಳುತ್ತಿರುವ ಅಂಬೇಡ್ಕರ್ ಭವನ ಸಾಕ್ಷಿಯಾಗಿದೆ. ೨೦೧೭ರಲ್ಲಿ ಆರಂಭಗೊಂಡ ಕಾಮಗಾರಿ ಇಂದಿಗೂ ಮುಕ್ತಾಯಗೊಂಡಿಲ್ಲ. ಪ್ರಸ್ತುತ ಭವನ ಕಾಮಗಾರಿಗೆ ೨.೫ ಕೋ.ರು. ಬಿಡುಗಡೆಯಾಗಿದ್ದು, ಉಳಿದಂತೆ ೩ ರಿಂದ ೪ ಕೋ. ರು. ಅವಶ್ಯಕತೆ ಇದೆ. ತಕ್ಷಣ ಹಣ ಬಿಡುಗಡೆಗೊಳಿಸಿ ಉದ್ಘಾಟನೆ ನೆರವೇರಿಸುವಂತೆ ಆಗ್ರಹಿಸಿದರು.
    ಆಹಾರ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡದೆ ವಿನಾಕಾರಣ ಆದಾಯ ಮಿತಿ ನೆಪದಲ್ಲಿ ಏಕಾಏಕಿ ಬಡವರ ಪಡಿತರ ಚೀಟಿಗಳನ್ನು ರದ್ದುಪಡಿಸಿರುವುದು ಸರಿಯಲ್ಲ. ಇದೆ ರೀತಿ ಕ್ಷೇತ್ರದಲ್ಲಿ ಹಲವಾರು ತಿಂಗಳುಗಳಿಂದ ಅರ್ಹ ಫಲಾನುಭವಿಗಳಿಗೆ ವೃದ್ಧಾಪ್ಯ ವೇತನ, ವಿಧವಾ ವೇತನ ಮತ್ತು ಅಂಗವಿಕಲರ ವೇತನ ಬಿಡುಗಡೆಗೊಳಿಸದೆ ವಜಾಗೊಳಿಸಲಾಗಿದೆ. ಇದರಿಂದಾಗಿ ಫಲಾನುಭವಿಗಳು ತಾಲೂಕು ಕಛೇರಿ ಅಲೆದಾಡುವಂತಾಗಿದೆ. ತಕ್ಷಣ ತಪ್ಪಿತಸ್ಥ ಅಧಿಕಾರಿಗಳನ್ನು ಸೇವೆಯಿಂದ ಅಮಾನತ್ತುಗೊಳಿಸಿ ಸೂಕ್ತ ಕ್ರಮ ಕೈಗೊಳ್ಳುವುದು ಸೇರಿದಂತೆ ಇನ್ನೂ ಹಲವಾರು ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿದರು.
    ಸಮಿತಿ ಕಾರ್ಯಾಧ್ಯಕ್ಷ ಐ.ಎಲ್ ಅರುಣ್‌ಕುಮಾರ್, ಉಪಾಧ್ಯಕ್ಷರಾದ ಬ್ರಹ್ಮಲಿಂಗಯ್ಯ, ಎಂ.ವಿ ಚಂದ್ರಶೇಖರ್, ಪ್ರಧಾನ ಕಾರ್ಯದರ್ಶಿ ಅಕ್ರಮ್ ಖಾನ್, ಸಂಚಾಲಕ ಶೇಖರ್, ಸಾಮಾಜಿಕ ಹೋರಾಟಗಾರ ಶಿವಕುಮಾರ್, ಜಯರಾಮ್, ನವೀನ್, ರಂಗಮ್ಮ, ನಾಗರತ್ನಮ್ಮ, ಜಯಮ್ಮ, ಸಂತಮ್ಮ, ಸಾವಿತ್ರಿ, ಗೀತಾ, ಕಮಲಮ್ಮ, ನೀಲಮ್ಮ, ಬಿ.ಟಿ ತಿಮ್ಮಯ್ಯ, ಆರ್. ರುದ್ರೇಶ್, ಮೇಘರಾಜ್, ಬಾಲರಾಜ್, ಭಾಗ್ಯಮ್ಮ, ಆರ್. ರಾಕೇಶ್ ಮತ್ತು ವಿದ್ಯಾ ಸೇರಿದಂತೆ ಇನ್ನಿತರರು ಪ್ರತಿಭಟನಾ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.