Tuesday, August 24, 2021

ಮದ್ಯದಂಗಡಿ ತೆರವಿಗೆ ಆಗ್ರಹಿಸಿ ಕರಾವೇ ಮಹಿಳಾ ಘಟಕ ಪ್ರತಿಭಟನೆ : ಗೃಹ ಸಚಿವರಿಗೆ ಮನವಿ

ಭದ್ರಾವತಿ ಡೈರಿ ಸರ್ಕಲ್‌ನಲ್ಲಿ ಹೆದ್ದಾರಿ ಪಕ್ಕದಲ್ಲಿರುವ ೨ ಮದ್ಯದಂಗಡಿಗಳನ್ನು ತೆರವುಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಮಹಿಳಾ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
    ಭದ್ರಾವತಿ, ಆ. ೨೪: ಡೈರಿ ಸರ್ಕಲ್‌ನಲ್ಲಿ ಹೆದ್ದಾರಿ ಪಕ್ಕದಲ್ಲಿರುವ ೨ ಮದ್ಯದಂಗಡಿಗಳನ್ನು ತೆರವುಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಮಹಿಳಾ ಘಟಕದ ವತಿಯಿಂದ ಪ್ರತಿಭಟನೆ ನಡೆಸಿ ಗೃಹ ಸಚಿವ ಅರಗಜ್ಞಾನೇಂದ್ರ ಅವರಿಗೆ ಮನವಿ ಸಲ್ಲಿಸಲಾಯಿತು.
    ಗೃಹ ಸಚಿವ ಅರಗಜ್ಞಾನೇಂದ್ರ ಅವರು ಮಂಗಳವಾರ ಕೆಎಸ್‌ಆರ್‌ಪಿ ೮ನೇ ಪಡೆಗೆ ಆಗಮಿಸಿದ ಸಂದರ್ಭದಲ್ಲಿ ಕರಾವೇ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಜ್ಯೋತಿ ಸೋಮಶೇಖರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಎರಡು ಮದ್ಯದಂಗಡಿಗಳನ್ನು ತಕ್ಷಣ ಬೇರೆಡೆಗೆ ಸ್ಥಳಾಂತರಿಸುವ ಜೊತೆಗೆ ವಿದ್ಯಾರ್ಥಿಗಳು, ಮಹಿಳೆಯರು, ಪ್ರಯಾಣಿಕರು ಹಾಗು ಸಾರ್ವಜನಿಕರಿಗೆ ಉಂಟಾಗುತ್ತಿರುವ ಸಮಸ್ಯೆಗಳನ್ನು ತಪ್ಪಿಸಬೇಕೆಂದು ಆಗ್ರಹಿಸಲಾಯಿತು. ಮನವಿ ಸ್ವೀಕರಿಸಿದ ಸಚಿವರು ತಕ್ಷಣ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರು.  
    ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಾರದ, ತಾಲೂಕು ಅಧ್ಯಕ್ಷೆ ಮಹೇಶ್ವರಿ, ಯಾಸ್ಮಿನ್ ಸೇರಿದಂತೆ ಇನ್ನಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಸಾರ್ವಜನಿಕವಾಗಿ ವಿನಾಯಕ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ನೀಡಿ

ರಾಮ್ ಸೇನಾ ಕರ್ನಾಟಕ ತಾಲೂಕು ಶಾಖೆ ವತಿಯಿಂದ ಭದ್ರಾವತಿಯಲ್ಲಿ ಈ ಬಾರಿ ಸಾರ್ವಜನಿಕವಾಗಿ ವಿನಾಯಕ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ಕಲ್ಪಿಸಿಕೊಡುವಂತೆ ಒತ್ತಾಯಿಸಿ ಮಂಗಳವಾರ ತಹಸೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು.
    ಭದ್ರಾವತಿ, ಆ. ೨೪: ಕೋವಿಡ್-೧೯ ಪರಿಮಿತಿಯಲ್ಲಿ ಈ ಬಾರಿ ವಿನಾಯಕ ಚತುರ್ಥಿಯಂದು ಸಾರ್ವಜನಿಕವಾಗಿ ವಿನಾಯಕ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ಕಲ್ಪಿಸಿಕೊಡುವಂತೆ ಒತ್ತಾಯಿಸಿ ಮಂಗಳವಾರ ರಾಮ್ ಸೇನಾ ಕರ್ನಾಟಕ ತಾಲೂಕು ಶಾಖೆವತಿಯಿಂದ ತಹಸೀಲ್ದಾರ್ ಆರ್. ಪ್ರದೀಪ್‌ಗೆ ಮನವಿ ಸಲ್ಲಿಸಲಾಯಿತು.
    ರಾಮ್ ಸೇನಾ ಕರ್ನಾಟಕ ಜಿಲ್ಲಾಧ್ಯಕ್ಷ ಉಮೇಶ್‌ಗೌಡ, ತಾಲೂಕು ಅಧ್ಯಕ್ಷ ಸಚಿನ್ ಎಂ. ವರ್ಣೇಕರ್, ಪ್ರವೀಣ್‌ಶೆಟ್ಟಿ, ಪವನ್, ಮಹೇಶ್ ಶೇಟ್, ಪ್ರತೀಕ್ ಜಿ ಶೇಟ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಔರದ್ಕರ್ ವರದಿ ಜಾರಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಗೃಹ ಸಚಿವರಿಗೆ ಮನವಿ

ರಾಜ್ಯದಲ್ಲಿ ಔರದ್ಕರ್ ವರದಿಯನ್ನು ಸಮರ್ಪಕವಾಗಿ ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಭದ್ರಾವತಿ ನಿವಾಸಿ ಜನತಾದಳ (ಸಂಯುಕ್ತ) ಕರ್ನಾಟಕ ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್. ಗೌಡ ಮಂಗಳವಾರ ಏಕಾಂಗಿಯಾಗಿ ಹೋರಾಟ ನಡೆಸುವ ಮೂಲಕ ಗೃಹ ಸಚಿವ ಅರಗಜ್ಞಾನೇಂದ್ರ ಅವರಿಗೆ ಮನವಿ ಸಲ್ಲಿಸಿದ್ದಾರೆ.
    ಭದ್ರಾವತಿ, ಆ. ೨೪: ರಾಜ್ಯದಲ್ಲಿ ಔರದ್ಕರ್ ವರದಿಯನ್ನು ಸಮರ್ಪಕವಾಗಿ ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜನತಾದಳ (ಸಂಯುಕ್ತ) ಕರ್ನಾಟಕ ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್. ಗೌಡ ಮಂಗಳವಾರ ಏಕಾಂಗಿಯಾಗಿ ಹೋರಾಟ ನಡೆಸುವ ಮೂಲಕ ಗೃಹ ಸಚಿವ ಅರಗಜ್ಞಾನೇಂದ್ರ ಅವರಿಗೆ ಮನವಿ ಸಲ್ಲಿಸಿದ್ದಾರೆ.
    ಅಕ್ಕಪಕ್ಕದ ರಾಜ್ಯಗಳಲ್ಲಿ ಪೊಲೀಸರಿಗೆ ಹೆಚ್ಚಿನ ವೇತನ, ಭತ್ಯೆ ಜೊತೆಗೆ ಹಲವಾರು ಸೌಲಭ್ಯಗಳನ್ನು ಕಲ್ಪಿಸಿಕೊಡಲಾಗಿದೆ. ರಾಜ್ಯದಲ್ಲೂ ಇದೆ ಮಾದರಿಯನ್ನು ಅನುಸರಿಸಬೇಕು. ರಾಜ್ಯದಲ್ಲಿ ಹಲವಾರು ವರ್ಷಗಳಿಂದ ಔರದ್ಕರ್ ವರದಿ ನೆನೆಗುದಿಗೆ ಬಿದ್ದಿದ್ದು, ತಕ್ಷಣ ವರದಿಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕೆಂದು ಒತ್ತಾಯಿಸಿದ್ದಾರೆ.
    ಇತ್ತೀಚಿನ ವರ್ಷಗಳಲ್ಲಿ ರಸ್ತೆ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ಕುರಿತು ಸರ್ವೋಚ್ಛ ನ್ಯಾಯಾಲಯ ಸಹ ಕಳವಳ ವ್ಯಕ್ತಪಡಿಸುವ ಜೊತೆಗೆ ೨೦೧೬ರಲ್ಲಿ ನೀಡಿರುವ ಆದೇಶದಂತೆ ಹೆದ್ದಾರಿ ಪಕ್ಕದಲ್ಲಿ ೫೦೦ ಮೀಟರ್ ವ್ಯಾಪ್ತಿಯೊಳಗಿರುವ ಮದ್ಯದಂಗಡಿಗಳನ್ನು ತೆರವುಗೊಳಿಸಬೇಕು.  ಬಹುತೇಕ ಮೈಕ್ರೋ ಫೈನಾನ್ಸ್ ಕಂಪನಿಗಳು ಬಡ ಮಹಿಳೆಯರಿಗೆ ಸಾಲ ನೀಡಿದ್ದು, ಕೊರೋನಾ ಸಂದರ್ಭದಲ್ಲೂ ಮರುಪಾವತಿಗೆ ಕಾಲಾವಕಾಶ ನೀಡದೆ ಕಿರುಕುಳ ನೀಡುತ್ತಿವೆ. ಈ ಸಂಬಂಧ ಮೈಕ್ರೋ ಫೈನಾನ್ಸ್ ಕಂಪನಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.  

ನ್ಯಾ. ಎ.ಜೆ ಸದಾಶಿವ ಆಯೋಗ ವರದಿ ಜಾರಿ ಹೇಳಿಕೆಗೆ ಖಂಡನೆ

ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ವಿರುದ್ಧ ಬಂಜಾರ ಸಮುದಾಯ ಆಕ್ರೋಶ


ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿ ಅನುಷ್ಠಾನಗೊಳಿಸುವ ಸಂಬಂಧ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ನೀಡಿರುವ ಹೇಳಿಕೆಯನ್ನು ಖಂಡಿಸಿ ಹಾಗು ಆಯೋಗದ ವರದಿಯನ್ನು ಸಾರ್ವಜನಿಕವಾಗಿ ಪ್ರಕಟಿಸುವಂತೆ ಒತ್ತಾಯಿಸಿ ಭದ್ರಾವತಿಯಲ್ಲಿ ತಾಲ್ಲೂಕು ಬಂಜಾರ ( ಲಂಬಾಣಿ) ಯುವಕರ ಸಂಘ ಹಕ್ಕು ಹೋರಾಟ ಸಮಿತಿ ವತಿಯಿಂದ ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
    ಭದ್ರಾವತಿ: ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿ ಅನುಷ್ಠಾನಗೊಳಿಸುವ ಸಂಬಂಧ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ನೀಡಿರುವ ಹೇಳಿಕೆಯನ್ನು ತಾಲ್ಲೂಕು ಬಂಜಾರ ( ಲಂಬಾಣಿ) ಯುವಕರ ಸಂಘ ಹಕ್ಕು ಹೋರಾಟ ಸಮಿತಿ ಖಂಡಿಸಿದೆ.
    ಅವರು ಮಂಗಳವಾರ ತಾಲೂಕು ಕಛೇರಿ ಮಿನಿ ವಿಧಾನಸೌಧದ ಮುಂಭಾಗ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆ ನೇತೃತ್ವ ವಹಿಸಿ ಮಾತನಾಡಿದರು.  ನ್ಯಾಯಮೂರ್ತಿ ಎ.ಜೆ ಸದಾಶಿವ ಆಯೋಗದ ವರದಿ ಕುರಿತು ಪರಿಶಿಷ್ಟ ಜಾತಿಯಲ್ಲಿರುವ ೧೦೧ ಜಾತಿಗಳಲ್ಲೂ ಗೊಂದಲವಿದೆ. ಶೋಷಿತ ವರ್ಗಗಳ ಜನರ ಹಿತಾಸಕ್ತಿ ಕಾಪಾಡ ಬೇಕಾಗಿರುವ ಕೇಂದ್ರ ಸಚಿವರು ಪದೆ ಪದೇ ಕೇವಲ ಒಂದು ಸಮುದಾಯವನ್ನು ಪ್ರತಿನಿಧಿಸಿರುವಂತೆ ಹೇಳಿಕೆ ನೀಡುತ್ತಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.  
    ನ್ಯಾಯಮೂರ್ತಿ ಎ.ಜೆ ಸದಾಶಿವ ಆಯೋಗದ ವರದಿ ಜಾರಿಗೊಳಿಸುವುದಾಗಿ ಹೇಳಿಕೆ ನೀಡುವ ಪರಿಣಾಮ ಪರಿಶಿಷ್ಟ ಜಾತಿಯಲ್ಲಿರುವ ೧೦೧ ಜಾತಿಗಳ ಪೈಕಿ ಒಂದು ಜಾತಿ ಹೊರತು ಉಳಿದ ೧೦೦ ಜಾತಿಗಳಲ್ಲಿ ಆತಂಕ ಹೆಚ್ಚಿಸಿದೆ. ಈ ಹಿನ್ನಲೆಯಲ್ಲಿ ಪದೆ ಪದೇ ಹೇಳಿಕೆ ನೀಡುತ್ತಿರುವ ಸಚಿವ ನಾರಾಯಣಸ್ವಾಮಿ ಅವರನ್ನು ಸಂಪುಟದಿಂದ ಕೈಬಿಡಬೇಕೆಂದರು ಆಗ್ರಹಿಸಿದರು.
    ತಕ್ಷಣ ಸದಾಶಿವ ಆಯೋಗದ ವರದಿಯನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಿ ಅದರ ಸಾಧಕಭಾದಕಗಳನ್ನು ಸಮಗ್ರವಾಗಿ ಚರ್ಚಿಸಿ ಅಭಿಪ್ರಾಯ ಮಂಡಿಸುವಂತೆ ಒತ್ತಾಯಿಸಿ ತಹಸೀಲ್ದಾರ್ ಮೂಲಕ ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
    ಸಂಘದ ಯುವಘಟಕದ ಅಧ್ಯಕ್ಷ ಕೃಷ್ಣನಾಯ್ಕ ನೇತೃತ್ವವಹಿಸಿದ್ದರು. ಮುಖಂಡರಾದ ಮಂಜನಾಯ್ಕ,  ಹನುಮನಾಯ್ಕ, ಪ್ರವೀಣ್‌ಕುಮಾರ್, ನಾಗಾನಾಯ್ಕ, ಹೇಮಂತ್, ಭಂಜನಿನಾಯ್ಕ, ಶಂಕ್ರನಾಯ್ಕ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.