Tuesday, September 7, 2021

ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ತುರ್ತು ಕಾಳಜಿ ವಹಿಸಿದ ಜಿಲ್ಲಾಧಿಕಾರಿಗಳಿಗೆ ಮೆಚ್ಚುಗೆ ಪತ್ರ

ಭದ್ರಾವತಿ ಹುಣಸೇಕಟ್ಟೆ ಗ್ರಾಮದಲ್ಲಿರುವ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ತುರ್ತು ಕಾಳಜಿ ವಹಿಸಿರುವ ಹಿನ್ನಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಅಪರ ಕಾರ್ಯದರ್ಶಿಗಳು ಬರೆದಿರುವ ಮೆಚ್ಚುಗೆ ಪತ್ರ.
    ಭದ್ರಾವತಿ, ಸೆ. ೭: ತಾಲೂಕಿನ ಹುಣಸೇಕಟ್ಟೆ ಗ್ರಾಮದಲ್ಲಿರುವ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ತುರ್ತು ಕಾಳಜಿ ವಹಿಸಿರುವುದು ತಿಳಿದು ಬಂದಿದ್ದು, ಅಲ್ಲದೆ ಜಿಲ್ಲಾಧಿಕಾರಿಗಳ ಕಾರ್ಯಕ್ಕೆ ಸಮಾಜ ಕಲ್ಯಾಣ ಇಲಾಖೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಡಾ.ಎನ್. ನಾಗಾಂಬಿಕಾ ದೇವಿಯವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
    ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿಗಳಲ್ಲಿ ಸೆ.೪ರಂದು ಮಂದಗತಿಯ ಶೀತ ಕಾಣಿಸಿಕೊಂಡಿದ್ದು,  ಸ್ಥಳೀಯರು ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ಅವರಿಗೆ ಮಾಹಿತಿ ನೀಡಿದ್ದಾರೆ. ಅಲ್ಲದೆ ಸುರಕ್ಷತಾ ಕ್ರಮ ಕೈಗೊಳ್ಳುವಂತೆ ಡಾ.ಎನ್. ನಾಗಾಂಬಿಕಾ ದೇವಿಯವರು ಕೋರಿದ ಹಿನ್ನಲೆಯಲ್ಲಿ ತಕ್ಷಣ ಖುದ್ದಾಗಿ ವಸತಿ ಶಾಲೆಗೆ ಭೇಟಿ ನೀಡಿದ ಕೆ.ಬಿ ಶಿವಕುಮಾರ್ ಅವರು ಎಲ್ಲಾ ವಿದ್ಯಾರ್ಥಿಗಳಿಗೆ ಕೋವಿಡ್-೧೯ ಪರೀಕ್ಷೆ ಕ್ಷಿಪ್ರಗತಿಯಲ್ಲಿ ನಡೆಸಿದ್ದು, ವಿದ್ಯಾರ್ಥಿಗಳಲ್ಲಿ ನೆಗಟಿವ್ ವರದಿ ಬಂದಿದೆ. ಈ ನಡುವೆಯೂ ವಿದ್ಯಾರ್ಥಿಗಳೊಂದಿಗೆ ವೈಯಕ್ತಿಕ ಸಮಾಲೋಚನೆ ನಡೆಸುವ ಜೊತೆಗೆ ಆತ್ಮಸ್ಥೈರ್ಯ ತುಂಬುವಲ್ಲಿ ಯಶಸ್ವಿಯಾಗಿದ್ದರು. ಈ ಹಿನ್ನಲೆಯಲ್ಲಿ ಡಾ. ಎನ್. ನಾಗಾಂಬಿಕಾ ಅವರು ಸೆ.೬ರಂದು ಮೆಚ್ಚುಗೆ ಪತ್ರವನ್ನು ಜಿಲ್ಲಾಧಿಕಾರಿಗಳಿಗೆ ಕಳುಹಿಸಿದ್ದಾರೆ. ಈ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಪ್ರಚಾರಕ್ಕೆ ಒಳಪಟ್ಟಿದೆ.
    ಜಿಲ್ಲಾಧಿಕಾರಿಗಳ ಮೆಚ್ಚುಗೆ ಪತ್ರಕ್ಕೆ ಕೆಲವರು ಆಕ್ಷೇಪ ವ್ಯಕ್ತಪಡಿಸಿದ್ದು, ರಾಜ್ಯ ಸರ್ಕಾರಿ ಸ್ವಾಮ್ಯದ ನಗರದ ಮೈಸೂರು ಕಾಗದ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕರಾಗಿರುವ ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ಅವರು ಕಾರ್ಮಿಕರನ್ನು ಕಡೆ ಗಣಿಸಿದ್ದಾರೆ. ಕಾರ್ಖಾನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಾರ್ಮಿಕರಿಗೆ ಕಳೆದ ಸುಮಾರು ೬ ತಿಂಗಳಿನಿಂದ ವೇತನ ಇಲ್ಲವಾಗಿದೆ. ಈ ಬಗ್ಗೆ ಹಲವಾರು ಮನವಿ ಮಾಡಲಾಗಿದ್ದರೂ ಸಹ ಯಾವುದೇ ಪ್ರಯೋಜನವಾಗಿಲ್ಲ. ಇಂತಹ ಜಿಲ್ಲಾಧಿಕಾರಿಗಳಿಗೆ ಮೆಚ್ಚುಗೆ ವ್ಯಕ್ತಪಡಿಸುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿರುವುದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ನೂರಾರು ನಾಯಿಗಳನ್ನು ಜೀವಂತವಾಗಿ ಹೂತಿಟ್ಟು ಮಾರಾಣ ಹೋಮ

ಗ್ರಾಮಾಂತರ ಪೊಲೀಸ್ ಠಾಣೆ ಮೆಟ್ಟಿಲೇರಿದ ಪ್ರಕರಣ


ಭದ್ರಾವತಿ ಎಂಪಿಎಂ ಅರಣ್ಯ ವ್ಯಾಪ್ತಿಯ ತಮ್ಮಡಿ ಹಳ್ಳಿಯ ಎಸ್‌ಎಲ್ ನಂ.೮೬೩, ೮೬೪, ೮೬೫ ಮತ್ತು ೮೬೬ರ ಭೂಮಿಯಲ್ಲಿ ಸುಮಾರು ೧೫೦ಕ್ಕೂ ಹೆಚ್ಚಿನ ನಾಯಿಗಳನ್ನು ಜೀವಂತವಾಗಿ ಹೂತಿಟ್ಟಿದ್ದು, ಪ್ರಕರಣ ಬೆಳಕಿಗೆ ಬಂದ ಹಿನ್ನಲೆಯಲ್ಲಿ ಹೂತಿಟ್ಟ ನಾಯಿಗಳನ್ನು ಹೊರ ತೆಗೆಯುತ್ತಿರುವುದು.
    ಭದ್ರಾವತಿ, ಸೆ. ೭: ನಾಯಿಗಳನ್ನು ಜೀವಂತವಾಗಿ ಹೂತಿಟ್ಟು ಮಾರಾಣ ಹೋಮಕ್ಕೆ ಕಾರಣವಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
    ತಾಲೂಕಿನ ಸಿಂಗನಮನೆ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಕಂಬದಾಳಲು-ಹೊಸೂರು ಗ್ರಾಮ ಪಂಚಾಯಿತಿಗೆ ಒಳಪಡುವ ರಂಗನಾಥಪುರದಲ್ಲಿ ಕಳೆದ ಸುಮಾರು ೪ ದಿನಗಳ ಹಿಂದೆ ಘಟನೆ ನಡೆದಿರುವ ಬಗ್ಗೆ ಮಾಹಿತಿ ತಿಳಿದು ಬಂದಿದೆ.
    ಎಂಪಿಎಂ ಅರಣ್ಯ ವ್ಯಾಪ್ತಿಯ ತಮ್ಮಡಿ ಹಳ್ಳಿಯ ಎಸ್‌ಎಲ್ ನಂ.೮೬೩, ೮೬೪, ೮೬೫ ಮತ್ತು ೮೬೬ರ ಭೂಮಿಯಲ್ಲಿ ಸುಮಾರು ೧೫೦ಕ್ಕೂ ಹೆಚ್ಚಿನ ನಾಯಿಗಳನ್ನು ಜೀವಂತವಾಗಿ ಹೂತಿಟ್ಟಿದ್ದು, ನಾಯಿಗಳನ್ನು ಹೂತಿಡುವಾಗ ಈ ಭಾಗದಲ್ಲಿ ನಾಯಿಗಳು ಬೊಗಳುವ ಶಬ್ದ ಸ್ಥಳೀಯರಿಗೆ ಕೇಳಿಸಿದೆ. ನಂತರ ಈ ಭಾಗದಲ್ಲಿ ನಿಶಬ್ದ ಕಂಡು ಬಂದಿದ್ದು, ಇದರಿಂದ ಅನುಮಾನಗೊಂಡ ಸ್ಥಳೀಯರು ಮಾಹಿತಿಯನ್ನು ಶಿವಮೊಗ್ಗ ಪ್ರಾಣಿ ದಯಾ ಸಂಘದವರಿಗೆ ತಿಳಿಸಿದ್ದಾರೆ ಎನ್ನಲಾಗಿದೆ.
    ಪ್ರಾಣಿ ದಯಾ ಸಂಘದವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ನಾಯಿಗಳನ್ನು ಜೀವಂತವಾಗಿ ಹೂತಿಟ್ಟಿರುವುದು ಬೆಳಕಿಗೆ ಬಂದಿದೆ. ಇದೀಗ ಪ್ರಕರಣ ಗ್ರಾಮಾಂತರ ಪೊಲೀಸ್ ಠಾಣೆ ಮೆಟ್ಟಿಲೇರಿದೆ.
    ನಾಯಿಗಳನ್ನು ಜೀವಂತವಾಗಿ ಹೂತಿಡಲು ಕಾರಣವೇನೆಂಬುದು ಇನ್ನೂ ಸ್ಪಷ್ಟವಾಗಿ ತಿಳಿದಿಲ್ಲ. ಇದಕ್ಕೆ ಕಂಬದಾಳಲು-ಹೊಸೂರು ಗ್ರಾಮಚಾಯಿತಿ ಆಡಳಿತ ಸ್ಪಷ್ಟನೆ ನೀಡಬೇಕಾಗಿದೆ.
    ಈ ಕುರಿತು ಪತ್ರಿಕೆಯೊಂದಿಗೆ ಮಾತನಾಡಿದ ಈ ಭಾಗದ ಜಿಲ್ಲಾ ಪಂಚಾಯಿತಿ ಸದಸ್ಯ ಜೆ.ಪಿ ಯೋಗೇಶ್ ನಾಯಿಗಳನ್ನು ಹೂತಿಟ್ಟಿರುವ ವಿಚಾರ ನಮ್ಮ ಗಮನಕ್ಕೆ ಬಂದಿಲ್ಲ. ಗ್ರಾಮ ಪಂಚಾಯಿತಿ ಮಾಹಿತಿ ಪ್ರಕಾರ ನಾಯಿಗಳನ್ನು ಜನವಸತಿ ಪ್ರದೇಶಗಳಿಂದ ಹಿಡಿದು ಅರಣ್ಯ ಪ್ರದೇಶಕ್ಕೆ ಬಿಡುವುದು ವಾಡಿಕೆಯಾಗಿದೆ. ಆದರೆ ನಾಯಿಗಳನ್ನು ಕೊಲ್ಲುವ ಬಗ್ಗೆ ಎಲ್ಲೂ ಸೂಚಿಸಲಾಗಿಲ್ಲ ಎಂದರು.
    ಮತ್ತೊಂದೆಡೆ ನಾಯಿಗಳಿಗೆ ಸಂತಾನ ಹರಣ ಶಸ್ತ್ರಚಿಕಿತ್ಸೆ ನಡೆಸಿ ಪುನಃ ಅವುಗಳನ್ನು ವಾಸಿಸುತ್ತಿದ್ದ ಸ್ಥಳದಲ್ಲಿಯೇ ಬಿಡಲಾಗುತ್ತದೆ. ಈ ಸಂಬಂಧ ಗ್ರಾಮ ಪಂಚಾಯಿತಿ ವತಿಯಿಂದ ಟೆಂಡರ್ ಸಹ ನೀಡಲಾಗಿತ್ತು ಎನ್ನಲಾಗುತ್ತಿದೆ. ಟೆಂಡರ್‌ದಾರರು ಶಸ್ತ್ರಚಿಕಿತ್ಸೆ ಹಣ ಉಳಿಸುವ ಉದ್ದೇಶದಿಂದ ಈ ರೀತಿಯ ಕೃತ್ಯ ನಡೆಸಿರಬಹುದೆಂಬ ಆರೋಪ ಸಹ ಸ್ಥಳೀಯರಿಂದ ಕೇಳಿ ಬರುತ್ತಿವೆ. ಯಾವುದಕ್ಕೂ ತನಿಖೆಯಿಂದ ಸತ್ಯಾಂಶ ಹೊರಬರಬೇಕಾಗಿದೆ.

ಸಾಲಗಾರರ ಕಾಟ ಮನನೊಂದು ತಾಯಿ, ಮಗಳು ಆತ್ಮಹತ್ಯೆ

ಸಂಗೀತಾ, ಮಧುಶ್ರೀ
    ಭದ್ರಾವತಿ, ಸೆ. ೭: ಸಾಲಬಾಧೆಯಿಂದ ಬೇಸತ್ತು ತಾಯಿ, ಮಗಳು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಹೊಸಮನೆ  ವ್ಯಾಪ್ತಿಯ ಸುಭಾಷ್ ನಗರದಲ್ಲಿ ನಡೆದಿದೆ.
    ತಾಯಿ ಸಂಗೀತಾ(೩೫), ಮಗಳು ಮಧುಶ್ರೀ(೧೧) ಒಂದೇ ಸೀರೆಯಲ್ಲಿ ಇಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಸಂಬಂಧ ಶಿವಾಜಿ ಸರ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಂಗೀತಾ ಅವರ ಪತಿ ಧನಶೇಖರ್ ಹೋಲ್‌ಸೇಲ್ ವ್ಯಾಪಾರಿಯಾಗಿದ್ದು, ಕೋವಿಡ್-೧೯ ಪರಿಣಾಮ ಸುಮಾರು ೨ ವರ್ಷಗಳಿಂದ ವ್ಯಾಪಾರ ವಹಿವಾಟು ಇಲ್ಲದೆ ಆರ್ಥಿಕವಾಗಿ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಈ ನಡುವೆ ಧನಶೇಖರ್ ಸುಮಾರು ೧೬ ಲಕ್ಷ ರು. ಗಳಿಗೂ ಅಧಿಕ ಬ್ಯಾಂಕ್ ಹಾಗು ಕೈ ಸಾಲ ಮಾಡಿಕೊಂಡಿದ್ದು, ಇದರಿಂದಾಗಿ ಸಾಲಗಾರರ ಕಾಟ ಹೆಚ್ಚಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಕೆಎಸ್‌ಆರ್‌ಟಿಸಿ ಚಾಲಕ ಗಂಗಾಧರ್ ಆತ್ಮಹತ್ಯೆ

ಗಂಗಾಧರ್
    ಭದ್ರಾವತಿ, ಸೆ. ೬:  ತಾಲೂಕಿನ ಹೊಸ ಸಿದ್ದಾಪುರ ಗ್ರಾಮದ ನಿವಾಸಿ, ಶಿವಮೊಗ್ಗ ಕೆಎಸ್‌ಆರ್‌ಟಿಸಿ  ಘಟಕದಲ್ಲಿ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಗಂಗಾಧರ್(೪೫) ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯಲ್ಲಿ ಫ್ಯಾನಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
    ಗಂಗಾಧರ್ ಮನೆಯ ಮೇಲಿನ ಮಹಡಿಯ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನೆ ಮಂಗಳವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಹಳೇನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಮೃತದೇಹದ ಶವ ಪರೀಕ್ಷೆ ನಡೆಸಲಾಗಿದೆ. ಕಳೆದ ಕೆಲವು ವರ್ಷಗಳಿಂದ ಎದೆ ನೋವಿನಿಂದ ಬಳಲುತ್ತಿದ್ದರು ಎನ್ನಲಾಗಿದ್ದು, ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
    ಗಂಗಾಧರ ಸುಮಾರು ೨೦ ವರ್ಷಗಳ ಹಿಂದೆ ಬಿಎಂಟಿಸಿ ಚಾಲಕರಾಗಿ ಕರ್ತವ್ಯಕ್ಕೆ ಸೇರ್ಪಡೆಗೊಂಡಿದ್ದರು. ನಂತರ ಧರ್ಮಸ್ಥಳ ಘಟಕದ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸಿ ನಂತರ ಕಳೆದ ಸುಮಾರು ಒಂದೂವರೆ ವರ್ಷದಿಂದ ಶಿವಮೊಗ್ಗ ಘಟಕದಲ್ಲಿ  ಬೆಂಗಳೂರು ಮತ್ತು ಶಿವಮೊಗ್ಗ ನಡುವೆ ಸಂಚರಿಸುವ ಬಸ್ಸಿನ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.