Sunday, September 26, 2021

ಸಾಮಾಜಿಕ ಹೋರಾಟಗಾರರನ್ನು ಗುರುತಿಸಿ ಗೌರವಿಸುವುದು ಎಲ್ಲರ ಕರ್ತವ್ಯ : ಟಿ. ಚಂದ್ರೇಗೌಡ

ಭದ್ರಾವತಿ ಪದ್ಮನಿಲಯ ಹೋಟೆಲ್ ಸುನಂದ ಸಭಾಂಗಣದಲ್ಲಿ ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ಭಾನುವಾರ ಹಮ್ಮಿಕೊಳ್ಳಲಾಗಿದ್ದ ನಗರಸಭಾ ಮಾಜಿ ಸದಸ್ಯ ಹಾಗು ಜನಪರ ವೇದಿಕೆ ಅಧ್ಯಕ್ಷ ದಿವಂಗತ ರಾಮಕೃಷ್ಣೇಗೌಡರು(ಕ್ಯಾಂಟೀನ್ ಗೌಡರು) ಸವಿ ನೆನಪು ಕಾರ್ಯಕ್ರಮವನ್ನು ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಿದರು.
    ಭದ್ರಾವತಿ, ಸೆ. ೨೯: ಸಾಮಾಜಿಕ ಹೋರಾಟಗಾರರನ್ನು ಗುರುತಿಸಿ ಗೌರವಿಸುವುದು ಎಲ್ಲರ ಕರ್ತವ್ಯವಾಗಿದೆ ಎಂದು ನ್ಯಾಯವಾದಿ ಟಿ. ಚಂದ್ರೇಗೌಡ ಹೇಳಿದರು.
    ಅವರು ಭಾನುವಾರ ನಗರದ ಪದ್ಮನಿಲಯ ಹೋಟೆಲ್ ಸುನಂದ ಸಭಾಂಗಣದಲ್ಲಿ ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ನಗರಸಭಾ ಮಾಜಿ ಸದಸ್ಯ ಹಾಗು ಜನಪರ ವೇದಿಕೆ ಅಧ್ಯಕ್ಷ ದಿವಂಗತ ರಾಮಕೃಷ್ಣೇಗೌಡರು(ಕ್ಯಾಂಟೀನ್ ಗೌಡರು) ಸವಿ ನೆನಪು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
    ಸಾಮಾಜಿಕ ಹೋರಾಟದ ಗುಣಗಳನ್ನು ರೂಢಿಸಿಕೊಂಡವರು ಯಾವುದೇ ಪಕ್ಷದಲ್ಲಿರಲಿ ಅವರನ್ನು ಗೌರವಿಸಬೇಕು. ರಾಮಕೃಷ್ಣೇಗೌಡರು ಒಬ್ಬ ಧೀಮಂತ ಹೋರಾಟಗಾರರಾಗಿದ್ದರು. ಜೊತೆಗೆ ಅವರಲ್ಲಿನ ಸಾಮಾಜಿಕ ಕಾಳಜಿ, ಬದ್ದತೆ ಅಪರೂಪವಾಗಿದೆ. ಅಸಹಾಯಕರು, ದೀನದಲಿತರು, ಶೋಷಿತರು, ಬಡವರ್ಗದವರಿಗಾಗಿ ಅವರು ಸಲ್ಲಿಸುತ್ತಿದ್ದ ಸೇವೆ ಶ್ಲಾಘನೀಯವಾಗಿದೆ. ಇಂತಹ ಅಪರೂಪದ ವ್ಯಕ್ತಿಯ ನೆನಪು ಮಾಡಿಕೊಳ್ಳುತ್ತಿರುವುದು ಹೆಮ್ಮೆಯ ವಿಚಾರವಾಗಿದೆ ಎಂದರು.
    ಪ್ರಮುಖರಾದ ಶಾಸಕ ಬಿ.ಕೆ ಸಂಗಮೇಶ್ವರ್, ನಗರಸಭೆ ಮಾಜಿ ಅಧ್ಯಕ್ಷ ಅಧ್ಯಕ್ಷ ಆರ್. ಕರುಣಾಮೂರ್ತಿ, ಹಿರಿಯ ನಗರಸಭಾ ಸದಸ್ಯ ವಿ. ಕದಿರೇಶ್, ಬಿಸಿಯೂಟ ಕಾರ್ಯಕರ್ತೆಯರ ಸಂಘದ ಅಧ್ಯಕ್ಷೆ ಹನುಮಮ್ಮ, ನಗರಸಭೆ ಮಾಜಿ ಉಪಾಧ್ಯಕ್ಷ ವೆಂಕಟೇಶ್, ನಗರಸಭೆ ಮಾಜಿ ಸದಸ್ಯ ಗೋವಿಂದಸ್ವಾಮಿ ಸೇರಿದಂತೆ ಇನ್ನಿತರರು ಮಾತನಾಡಿ, ರಾಮಕೃಷ್ಣೇಗೌಡರ ಹೋರಾಟಗಳು ಹಾಗು ಸಾಮಾಜಿಕ ಬದ್ದತೆಗಳನ್ನು ಪ್ರಶಂಸಿಸುವ ಜೊತೆಗೆ ಅವರ ಅವರ ದಾರಿಯಲ್ಲಿ ನಾವೆಲ್ಲರೂ ಸಾಗಬೇಕೆಂದರು.
    ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕು ಅಧ್ಯಕ್ಷ ಸಿದ್ದಲಿಂಗಯ್ಯ, ತಾಲೂಕು ಬ್ರಾಹ್ಮಣ ಸಮಾಜದ ಅಧ್ಯಕ್ಷ ಎಂ.ಎಸ್ ಜನಾರ್ಧನ ಅಯ್ಯಂಗಾರ್, ಸಾಮಾಜಿಕ ಹೋರಾಟಗಾರ ಶಶಿಕುಮಾರ್ ಎಸ್ ಗೌಡ, ನ್ಯಾಯವಾದಿ ಎಂ. ಶಿವಕುಮಾರ್, ಬಿ. ಗಂಗಾಧರ್, ಪ್ರಕಾಶ್‌ರಾವ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ನಗರಸಭಾ ಸದಸ್ಯ ಆರ್. ಶ್ರೇಯಸ್(ಚಿಟ್ಟೆ) ಅಧ್ಯಕ್ಷತೆ ವಹಿಸಿದ್ದರು. ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು ಪ್ರಾಸ್ತಾವಿಕ ನುಡಿಗಳನ್ನಾಡಿದರು. ರಾಮಕೃಷ್ಣೇಗೌಡರ ಪತ್ನಿ ಜಯಮ್ಮ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.  ಸಮಿತಿಯ ಪ್ರಮುಖರಾದ ಎಂ.ವಿ ಚಂದ್ರಶೇಖರ್, ಬ್ರಹ್ಮಲಿಂಗಯ್ಯ, ಮುಳ್ಕೆರೆ ಲೋಕೇಶ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.  



ಸೇವೆ, ಸಮರ್ಪಣಾ ಅಭಿಯಾನ : ಉಚಿತ ಆರೋಗ್ಯ ತಪಾಸಣೆ

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಜನ್ಮದಿನದ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ಸೇವೆ ಮತ್ತು ಸಮರ್ಪಣಾ ಅಭಿಯಾನ ಭಾಗವಾಗಿ ಭಾನುವಾರ ಬಿಜೆಪಿ ಪಕ್ಷದ ತಾಲೂಕು ಮಂಡಲ ವತಿಯಿಂದ ಭಾನುವಾರ ಭದ್ರಾವತಿ ಗಾಂಧಿನಗರದ ಶ್ರೀ ಬಲಮುರಿ ಗಣಪತಿ ದೇವಸ್ಥಾನದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು.
    ಭದ್ರಾವತಿ, ಸೆ. ೨೬: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಜನ್ಮದಿನದ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ಸೇವೆ ಮತ್ತು ಸಮರ್ಪಣಾ ಅಭಿಯಾನ ಭಾಗವಾಗಿ ಭಾನುವಾರ ಬಿಜೆಪಿ ಪಕ್ಷದ ತಾಲೂಕು ಮಂಡಲ ವತಿಯಿಂದ ಭಾನುವಾರ ಗಾಂಧಿನಗರದ ಶ್ರೀ ಬಲಮುರಿ ಗಣಪತಿ ದೇವಸ್ಥಾನದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು.
    ಶಿವಮೊಗ್ಗ ಮೆಟ್ರೋ ಆಸ್ಪತ್ರೆಯ ನುರಿತ ವೈದ್ಯರು ಮತ್ತು ಸ್ತ್ರೀ ರೋಗ ತಜ್ಞರಿಂದ ತಪಾಸಣೆ ನಡೆಯಿತು. ನೂರಾರು ಮಂದಿ ಶಿಬಿರದಲ್ಲಿ ಪಾಲ್ಗೊಂಡು ಸದುಪಯೋಗಪಡೆದುಕೊಂಡರು. ಶಿಬಿರ ಬೆಳಿಗ್ಗೆ ೯ ಗಂಟೆಯಿಂದ ಮಧ್ಯಾಹ್ನ ೧ ಗಂಟೆವರೆಗೆ ನಡೆಯಿತು.
    ಪಕ್ಷದ ಮಂಡಲ ಅಧ್ಯಕ್ಷ ಎಂ. ಪ್ರಭಾಕರ್, ಪ್ರಮುಖರಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಕೆ ಶ್ರೀನಾಥ್, ಸೂಡಾ ಸದಸ್ಯ ವಿ. ಕದಿರೇಶ್, ಹಟ್ಟಿ ಚಿನ್ನದ ಕಂಪನಿ ಆಡಳಿತ ಮಂಡಳಿ ನಿರ್ದೇಶಕ ಕೂಡ್ಲಿಗೆರೆ ಹಾಲೇಶ್, ನಗರಸಭಾ ಸದಸ್ಯರಾದ ಶಶಿಕಲಾ, ಅನುಪಮಾ, ಪಕ್ಷದ ಪ್ರಧಾನ ಕಾರ್ಯದರ್ಶಿಗಳಾದ ಚನ್ನೇಶ್, ಹನುಮಂತನಾಯ್ಕ, ರೈತ ಮೋರ್ಚಾದ ಚಂದ್ರಪ್ಪ, ಎಸ್.ಸಿ ಮೋರ್ಚಾ ಅಧ್ಯಕ್ಷ ಪಿ. ಗಣೇಶ್‌ರಾವ್, ಬಿ.ಎಸ್. ನಾರಾಯಣಪ್ಪ, ರಾಮನಾಥ್ ಬರ್ಗೆ, ಮಹಿಳಾ ಪ್ರಮುಖರಾದ ಮಹಿಳಾ ಘಟಕದ ಅಧ್ಯಕ್ಷೆ ಶೋಭಾ ಪಾಟೀಲ್, ಹೇಮಾವತಿ ವಿಶ್ವನಾಥ್, ಆರ್.ಎಸ್ ಶೋಭಾ, ನಾಗಮಣಿ, ಅನ್ನಪೂರ್ಣ ಸಾವಂತ್, ಕವಿತಾ ಸುರೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಕಟ್ಟಡ ಕಾರ್ಮಿಕರು ಇನ್ನೂ ಹೆಚ್ಚು ಸಂಘಟನೆಯಾಗಲಿ : ಬಿ.ಕೆ ಸಂಗಮೇಶ್ವರ್



ಭದ್ರಾವತಿ ಕಂಚಿನಬಾಗಿಲು ವೃತ್ತದ ಸಮೀಪದ ಅಂಬೇಡ್ಕರ್ ನಗರದ ದುರ್ಗಾಂಬ ದೇವಸ್ಥಾನ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಕರ್ನಾಟಕ ಸ್ಟೇಟ್ ಕನ್‌ಸ್ಟ್ರಕ್ಷನ್ ವರ್ಕರ್‍ಸ್ ಸೆಂಟ್ರಲ್ ಯೂನಿಯನ್ ನೂತನ ಶಾಖೆಯನ್ನು ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಿದರು.
    ಭದ್ರಾವತಿ, ಸೆ. ೨೬: ಕಟ್ಟಡ ಕಾರ್ಮಿಕರ ಸಂಘಟನೆ ಇನ್ನೂ ಹೆಚ್ಚಿನ ರೀತಿಯಲ್ಲಿ ಸಂಘಟನೆಯಾಗುವ ಅಗತ್ಯವಿದ್ದು, ಸಂಘಟನೆಗೆ ಅಗತ್ಯವಿರುವ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಶಾಸಕ ಬಿ.ಕೆ ಸಂಗಮೇಶ್ವರ್ ಭರವಸೆ ನೀಡಿದರು.
     ಅವರು ಭಾನುವಾರ ನಗರದ ಕಂಚಿನಬಾಗಿಲು ವೃತ್ತದ ಸಮೀಪದ ಅಂಬೇಡ್ಕರ್ ನಗರದ ದುರ್ಗಾಂಬ ದೇವಸ್ಥಾನ ಆವರಣದಲ್ಲಿ ಕರ್ನಾಟಕ ಸ್ಟೇಟ್ ಕನ್‌ಸ್ಟ್ರಕ್ಷನ್ ವರ್ಕರ್‍ಸ್ ಸೆಂಟ್ರಲ್ ಯೂನಿಯನ್ ನೂತನ ಶಾಖೆ ಉದ್ಘಾಟಿಸಿ ಮಾತನಾಡಿದರು.      ಕ್ಷೇತ್ರದಲ್ಲಿ ಯೂನಿಯನ್ ಹೆಚ್ಚು ಕ್ರಿಯಾಶೀಲವಾಗಿದ್ದು, ಪ್ರಸ್ತುತ ಯೂನಿಯನ್ ಮುನ್ನಡೆಸಿಕೊಂಡು ಹೋಗುತ್ತಿರುವವರು ಕಟ್ಟಡ ಕಾರ್ಮಿಕರ ಪರವಾಗಿ ಹೆಚ್ಚಿನ ಕಾಳಜಿಯನ್ನು ಹೊಂದಿದ್ದಾರೆ. ಸರ್ಕಾರದಿಂದ ಲಭ್ಯವಾಗುವ ಎಲ್ಲಾ ಯೋಜನೆಗಳನ್ನು ಸದ್ಬಳಕೆ ಮಾಡಿಕೊಂಡು ಕಟ್ಟಡ ಕಾರ್ಮಿಕರಿಗೆ ತಲುಪಿಸುವಲ್ಲಿ ಪ್ರಾಮಾಣಿಕ ಕೈಗೊಂಡಿದ್ದಾರೆಂದು ಪ್ರಶಂಸೆ ವ್ಯಕ್ತಪಡಿಸಿದರು. 
     ಯೂನಿಯನ್ ಇನ್ನೂ ಹೆಚ್ಚು ಸಂಘಟನೆಯಾಗಬೇಕು. ಇದರಿಂದ ನಮ್ಮ ಬೇಡಿಕೆಗಳನ್ನು ತ್ವರಿತಗತಿಯಲ್ಲಿ ಈಡೇರಿಸಿಕೊಳ್ಳಲು ಸಾಧ್ಯ. ಯೂನಿಯನ್ ಕಾರ್ಯನಿರ್ವಹಿಸಲು ಸ್ವಂತ ಕಟ್ಟಡ ಅವಶ್ಯಕತೆ ಇದ್ದು, ಅಲ್ಲದೆ ಕಟ್ಟಡ ಕಾರ್ಮಿಕರ ಹಲವಾರು ಬೇಡಿಕೆಗಳಿದ್ದು, ಮುಂದಿನ ದಿನಗಳಲ್ಲಿ ಈ ಸಂಬಂಧ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. 
     ಪ್ರಾಸ್ತಾವಿಕವಾಗಿ ಮಾತನಾಡಿದ ಯೂನಿಯನ್ ಜಿಲ್ಲಾ ಕಾರ್ಯಾಧ್ಯಕ್ಷ ಸುಂದರ್ ಬಾಬು, ಯೂನಿಯನ್ ಯಾವುದೇ ಪಕ್ಷಕ್ಕೆ ಸೀಮಿತವಾಗಿಲ್ಲ. ಶಾಸಕ ಬಿ.ಕೆ ಸಂಗಮೇಶ್ವರ್ ಅವರು ಆರಂಭಿಕ ಹಂತದಿಂದ ಇಲ್ಲಿಯವರೆಗೂ ಯೂನಿಯನ್ ಬೆಳೆದುಬರಲು ಪ್ರಮುಖ ಕಾರಣಕರ್ತರಾಗಿದ್ದಾರೆ. ನೂತನ ಶಾಖೆ ಆರಂಭಿಸಿದರೆ ಸಾಲದು ಅದನ್ನು ಮುಂದಿನ ದಿನಗಳಲ್ಲಿ ಯಶಸ್ವಿಯಾಗಿ ಮುನ್ನಡೆಸಿಕೊಂಡು ಹೋಗುವಂತಾಗಬೇಕು. ಈ ನಿಟ್ಟಿನಲ್ಲಿ ನೂತನ ಪದಾಧಿಕಾರಿಗಳು ಹೆಚ್ಚು ಗಮನ ಹರಿಸಬೇಕೆಂದರು. 
    ಯೂನಿಯನ್ ತಾಲೂಕು ಅಧ್ಯಕ್ಷ ಚಂದ್ರಶೇಖರ್ ಅಧ್ಯಕ್ಷತೆವಹಿಸಿದ್ದರು. ನಗರಸಭಾ ಸದಸ್ಯರಾದ ಮಣಿ ಎಎನ್‌ಎಸ್, ಜಾರ್ಜ್, ಬಿ.ಎಂ ಮಂಜುನಾಥ್, ಆರ್. ಶ್ರೇಯಸ್(ಚಿಟ್ಟೆ), ಸುದೀಪ್‌ಕುಮಾರ್, ಯೂನಿಯನ್ ತಾಲೂಕು ತಾಂತ್ರಿಕ ಸಲಹೆಗಾರ ಮನೋಹರ್, ಗೌರವ ಸಲಹೆಗಾರ ಶಿವಣ್ಣಗೌಡ, ನೂತನ ಶಾಖೆಯ ಅಧ್ಯಕ್ಷ ಹನುಮಂತಪ್ಪ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಾಧ್ಯಕ್ಷ ಅಭಿಲಾಷ್ ಸ್ವಾಗತಿಸಿದರು. ನ್ಯಾಯವಾದಿ ಎಂ. ಶಿವಕುಮಾರ್ ನಿರೂಪಿಸಿದರು. ನೂತನ ಶಾಖೆಯ ಪದಾಧಿಕಾರಿಗಳು, ಅಂಬೇಡ್ಕರ್ ನಗರದ ಮುಖಂಡರು, ನಿವಾಸಿಗಳು ಪಾಲ್ಗೊಂಡಿದ್ದರು.