Tuesday, October 5, 2021

ಆಕಸ್ಮಿಕವಾಗಿ ಮುರಿದು ಬಿದ್ದ ಪ್ರಾಥಮಿಕ ಶಾಲೆಯ ಕಾಂಪೌಂಡ್ ಗೇಟ್

ಕೆಲವರಿಂದ ಹಣ ದುರುಪಯೋಗದ ಸುಳ್ಳು ದೂರು : ಎನ್. ಉಮೇಶ್

ಎನ್. ಉಮೇಶ್
    ಭದ್ರಾವತಿ, ಅ. ೫: ತಾಲೂಕಿನ ಯರೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆ.ಎಚ್ ನಗರದ ಪ್ರಾಥಮಿಕ ಶಾಲೆಯ ಕಾಂಪೌಂಡ್ ಮುಖ್ಯದ್ವಾರದಲ್ಲಿ ಒಟ್ಟು ಸುಮಾರು ೩೦ ಸಾವಿರ ರು. ವೆಚ್ಚದಲ್ಲಿ ಅಳವಡಿಸಲಾಗಿದ್ದ ಕಬ್ಬಿಣದ ಗೇಟ್ ಗ್ರಾಮ ಪಂಚಾಯಿತಿ ಚುನಾವಣೆ ಸಂದರ್ಭದಲ್ಲಿ ಮುರಿದು ಬಿದ್ದಿದ್ದು, ಈ ಗೇಟನ್ನು ಗ್ರಾಮ ಪಂಚಾಯಿತಿ ವಶಕ್ಕೆ ಒಪ್ಪಿಸಲಾಗಿದೆ ಎಂದು ಈ ಭಾಗದ ಪಂಚಾಯಿತಿ ಸದಸ್ಯ ಎನ್. ಉಮೇಶ್ ಸ್ಪಷ್ಟಪಡಿಸಿದ್ದಾರೆ.
    ಈ ಕುರಿತು ಮಾಹಿತಿ ನೀಡಿರುವ ಉಮೇಶ್, ಯರೇಹಳ್ಳಿ ಗ್ರಾಮ ಪಂಚಾಯಿತಿ ೧೪ನೇ ಹಣಕಾಸಿನ ಯೋಜನೆಯಡಿ ಒಟ್ಟು ೩೦,೦೦೦ ರು. ಅನುದಾನದಲ್ಲಿ ಶಾಲೆಯ ಕಾಂಪೌಂಡ್‌ಗೆ ಪಿಲ್ಲರ್ ಹಾಕಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಅವರಿಂದ ಮೆಜರ್‌ಮೆಂಟ್ ಬುಕ್ ಬರೆಸಿ ಗುತ್ತಿಗೆದಾರರಿಂದ ಗೇಟ್ ಅಳವಡಿಸಲಾಗಿದೆ. ಗುತ್ತಿಗೆದಾರರಿಗೂ ಹಣ ಪಾವತಿಸಲಾಗಿದ್ದು, ಇತ್ತೀಚೆಗೆ ನಡೆದ ಗ್ರಾಮ ಪಂಚಾಯಿತಿ ಚುನಾವಣೆ ಸಂದರ್ಭದಲ್ಲಿ ಬಸ್‌ ಚಾಲಕನ ನಿರ್ಲಕ್ಷ್ಯತನದಿಂದ ಗೇಟ್ ಮುರಿದು ಬಿದ್ದಿದೆ.  ಈ ಹಿನ್ನಲೆಯಲ್ಲಿ ಈ ಗೇಟನ್ನು ಗ್ರಾಮ ಪಂಚಾಯಿತಿ ವಶಕ್ಕೆ ಒಪ್ಪಿಸಲಾಗಿದೆ.
    ಈ ವಿಚಾರವನ್ನು ಕೆಲವರು ಮುಚ್ಚಿ ಹಾಕಿ ಹಣ ದುರುಪಯೋಗ ಮಾಡಲಾಗಿದೆ ಎಂದು ದೂರು ನೀಡಿದ್ದು, ಅಲ್ಲದೆ ಸಾಮಾಜಿಕ ಜಾಲತಾಣಗಳಲ್ಲೂ ಹಂಚಿಕೊಂಡಿದ್ದಾರೆ. ಇದು ಸತ್ಯಕ್ಕೆ ದೂರವಾಗಿದ್ದು, ಇದಕ್ಕೆ ಯಾರು ಸಹ ಕಿವಿಕೊಡಬಾರದೆಂದು ಮನವಿ ಮಾಡಿದ್ದಾರೆ.


ಭದ್ರಾವತಿ ತಾಲೂಕಿನ ಯರೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆ.ಎಚ್ ನಗರದ ಪ್ರಾಥಮಿಕ ಶಾಲೆಯ ಕಾಂಪೌಂಡ್ ಮುಖ್ಯದ್ವಾರದಲ್ಲಿ ಒಟ್ಟು ಸುಮಾರು ೩೦ ಸಾವಿರ ರು. ವೆಚ್ಚದಲ್ಲಿ ಅಳವಡಿಸಲಾಗಿದ್ದ ಕಬ್ಬಿಣದ ಗೇಟ್

ನಾಡಹಬ್ಬ ದಸರಾ ಯಶಸ್ವಿಗೊಳಿಸಿ : ದೇವಸ್ಥಾನ ಸಮಿತಿಗಳಿಗೆ ತಹಸೀಲ್ದಾರ್ ಮನವಿ

ಭದ್ರಾವತಿ ನಗರಸಭೆ ಸಭಾಂಗಣದಲ್ಲಿ ಮಂಗಳವಾರ ವಿವಿಧ ದೇವಸ್ಥಾನಗಳ ಸೇವಾ ಸಮಿತಿಗಳೊಂದಿಗೆ ನಾಡಹಬ್ಬ ದಸರಾ ಹಿನ್ನಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ತಹಸೀಲ್ದಾರ್ ಆರ್. ಪ್ರದೀಪ್ ಪಾಲ್ಗೊಂಡು ಮಾತನಾಡಿದರು.
    ಭದ್ರಾವತಿ, ಅ. ೫: ನಾಡಹಬ್ಬ ದಸರಾ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ದೇವಸ್ಥಾನಗಳ ಸೇವಾ ಸಮಿತಿಗಳು ಹೆಚ್ಚಿನ ರೀತಿಯಲ್ಲಿ ಸಹಕರಿಸುವಂತೆ ತಹಸೀಲ್ದಾರ್ ಆರ್. ಪ್ರದೀಪ್ ಮನವಿ ಮಾಡಿದರು.
    ಅವರು ಮಂಗಳವಾರ ನಗರಸಭೆ ಸಭಾಂಗಣದಲ್ಲಿ ವಿವಿಧ ದೇವಸ್ಥಾನಗಳ ಸೇವಾ ಸಮಿತಿಗಳೊಂದಿಗೆ ನಾಡಹಬ್ಬ ದಸರಾ ಹಿನ್ನಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.
    ಕೋವಿಡ್-೧೯ ಆರ್ಥಿಕ ಸಂಕಷ್ಟದ ನಡುವೆಯೂ ಹಬ್ಬವನ್ನು ಸೀಮಿತ ವ್ಯಾಪ್ತಿಯಲ್ಲಿ ಆಚರಿಸಲು ಈಗಾಗಲೇ ನಗರಸಭೆ ಆಡಳಿತ ಸಿದ್ದತೆಗಳನ್ನು ಕೈಗೊಂಡಿದೆ. ಇದಕ್ಕೆ ಪೂರಕವಾಗಿ ದೇವಸ್ಥಾನಗಳ ಸೇವಾ ಸಮಿತಿಗಳು ಸಹ ಸ್ಪಂದಿಸಬೇಕು. ಸರ್ಕಾರದ ಮಾರ್ಗಸೂಚಿಗಳಂತೆ ಕಡ್ಡಾಯವಾಗಿ ಕೋವಿಡ್ ನಿಯಮಗಳನ್ನು ಪಾಲಸಬೇಕು. ಎಲ್ಲಾ ದೇವಸ್ಥಾನಗಳ ದೇವಾನು ದೇವತೆಗಳು ಪಾಲ್ಗೊಳ್ಳುವ ಮೂಲಕ ಮೆರವಣಿಗೆಗೆ ಮತ್ತಷ್ಟು ಮೆರಗು ನೀಡಬೇಕೆಂದರು.
    ಪೊಲೀಸ್ ನಗರ ವೃತ್ತ ನಿರೀಕ್ಷಕ ರಾಘವೇಂದ್ರ ಕಾಂಡಿಕೆ ಮಾತನಾಡಿ, ದೇವಸ್ಥಾನ ಸೇವಾ ಸಮಿತಿಗಳು ಜನಸಂದಣಿ ಹೆಚ್ಚಾಗದಂತೆ ಎಚ್ಚರವಹಿಸಬೇಕು. ವಾಹನಗಳ ಸುಗಮ ಸಂಚಾರಕ್ಕೆ ಸಹಕರಿಸಬೇಕು. ಬನ್ನಿ ಮುಡಿಯುವ ಕನಕಮಂಟಪ ಮೈದಾನದಲ್ಲಿ ಹೆಚ್ಚಿನ ಜಾಗೃತಿ ವಹಿಸಬೇಕು. ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ಕಲ್ಪಿಸಿಕೊಡಬಾರದು. ನಿಗದಿಪಡಿಸಿರುವ ಆಯಾ ಸ್ಥಳಗಳಲ್ಲೇ ಸಮಿತಿಗಳು ಇರತಕ್ಕದ್ದು. ಪೊಲೀಸ್ ಇಲಾಖೆ ಎಲ್ಲಾ ರೀತಿಯ ಸಹಕಾರ ನೀಡಲಿದೆ ಎಂದರು.
    ವಿವಿಧ ದೇವಸ್ಥಾನಗಳ ಪ್ರಮುಖರು ಮಾತನಾಡಿ, ಕಳೆದ ೨ ಎರಡು ವರ್ಷಗಳಿಂದ ಕೊರೋನಾ ಹಿನ್ನಲೆಯಲ್ಲಿ ದೇವಸ್ಥಾನಗಳಲ್ಲಿ ಭಕ್ತರ ಸಂಖ್ಯೆ ಕಡಿಮೆಯಾಗಿದೆ. ಈ ಹಿನ್ನಲೆಯಲ್ಲಿ ದೇವಸ್ಥಾನಗಳಿಗೆ ಬರುವ ಆದಾಯ ಸಹ ಕುಂಠಿತಗೊಂಡಿದೆ. ಈ ನಡುವೆಯೂ ದಸರಾ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲು ಮುಂದಾಗಿವೆ. ನಗರಸಭೆ ಆಡಳಿತ ಗೌರವಧನ ಹೆಚ್ಚು ಮಾಡಿದ್ದಲ್ಲಿ ಇನ್ನೂ ಹೆಚ್ಚಿನ ಅಲಂಕಾರದೊಂದಿಗೆ ದೇವಾನುದೇವಾತೆಗಳು ಪಾಲ್ಗೊಳ್ಳಲು ಅನುಕೂಲವಾಗಲಿದೆ ಎಂದರು.
ನಗರಸಭೆ ಪೌರಾಯುಕ್ತ ಕೆ. ಪರಮೇಶ್ ಮಾತನಾಡಿ, ಕಳೆದ ವರ್ಷ ದಸರಾ ಹಬ್ಬ ಯಶಸ್ವಿಯಾಗಿ ನಡೆದಿದೆ. ಆದರೆ ಖರ್ಚು ಮಾಡಿರುವ ಹಣ ಇದುವರೆಗೂ ಬಿಡುಗಡೆಗೊಂಡಿಲ್ಲ. ಇದೀಗ ನಗರಸಭೆ ವತಿಯಿಂದ ಅದ್ದೂರಿಯಾಗಿ ಆಚರಿಸಲು ಆರ್ಥಿಕ ಮುಗ್ಗಟ್ಟಿನ ಸಮಸ್ಯೆ ಎದುರಾಗಿದೆ. ಆದರೂ ಸಹ ಸೀಮಿತ ಅನುದಾನದಲ್ಲಿಯೇ ಸಾಧ್ಯವಾದಷ್ಟು ಎಲ್ಲರಿಗೂ ಸಮಾಧಾನಕರವಾಗುವ ನಿಟ್ಟಿನಲ್ಲಿ ಆಚರಿಸಬೇಕೆಂಬ ಆಶಯ ನಮ್ಮದಾಗಿದೆ. ಈ ನಿಟ್ಟಿನಲ್ಲಿ ಸಾಧ್ಯವಾದಷ್ಟು ಹೆಚ್ಚಿನ ಗೌರವಧನ ನೀಡುವುದಾಗಿ ತಿಳಿಸಿದರು.
    ನಗರಸಭೆ ಕಂದಾಯಾಧಿಕಾರಿ ಎಂ.ಎಸ್ ರಾಜ್‌ಕುಮಾರ್, ಪರಿಸರ ಅಭಿಯಂತರ ಪ್ರಭಾಕರ್, ಸಮುದಾಯ ಸಂಘಟನಾಧಿಕಾರಿ ಸುಹಾಸಿನಿ ಉಪಸ್ಥಿತರಿದ್ದರು. ನಗರದ ವಿವಿದ ದೇವಸ್ಥಾನಗಳ ಸೇವಾ ಸಮಿತಿಗಳ ಪ್ರಮುಖರು ಪಾಲ್ಗೊಂಡಿದ್ದರು.

ಹಿರಿಯೂರು ಗ್ರಾಮ ಪಂಚಾಯಿತಿ ಹಾಲಿ ಸದಸ್ಯರ ಮೇಲಿನ ಆರೋಪ ಸತ್ಯಕ್ಕೆ ದೂರ

ಅಧ್ಯಕ್ಷೆ ಗಂಗಮ್ಮ, ಉಪಾಧ್ಯಕ್ಷೆ ಪವಿತ್ರ ಜಿ. ಮಂಜುನಾಥ್ ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟನೆ


ಭದ್ರಾವತಿ ಹಿರಿಯೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರು, ಸದಸ್ಯರು ಹಾಗು ಗ್ರಾಮದ ಕೆಲವು ಮುಖಂಡರು ಹಾಲಿ ಸದಸ್ಯರ ಮೇಲೆ ಮಾಡಿರುವ ಆರೋಪಗಳು ಸತ್ಯಕ್ಕೆ ದೂರವಾಗಿವೆ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗಂಗಮ್ಮ, ಉಪಾಧ್ಯಕ್ಷೆ ಪವಿತ್ರ ಜಿ ಮಂಜುನಾಥ್ ಹಾಗು ಸದಸ್ಯರು ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟಪಡಿಸಿದರು.
    ಭದ್ರಾವತಿ, ಅ. ೫: ಹಿರಿಯೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರು, ಸದಸ್ಯರು ಹಾಗು ಗ್ರಾಮದ ಕೆಲವು ಮುಖಂಡರು ಹಾಲಿ ಸದಸ್ಯರ ಮೇಲೆ ಮಾಡಿರುವ ಆರೋಪಗಳು ಸತ್ಯಕ್ಕೆ ದೂರವಾಗಿವೆ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗಂಗಮ್ಮ, ಉಪಾಧ್ಯಕ್ಷೆ ಪವಿತ್ರ ಜಿ ಮಂಜುನಾಥ್ ಹಾಗು ಸದಸ್ಯರು ಸ್ಪಷ್ಟಪಡಿಸಿದರು.
    ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಹಿಂದೆ ಗ್ರಾಮ ಪಂಚಾಯಿತಿಯಲ್ಲಿ ಅಭಿವೃದ್ಧಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿರುವ ಮಧುಸೂದನ್‌ರವರು ನಮ್ಮ ಅವಧಿಯಲ್ಲಿ ಕೇವಲ ೫ ರಿಂದ ೬ ತಿಂಗಳು  ಮಾತ್ರ ಕರ್ತವ್ಯ  ನಿರ್ವಸಿದ್ದು, ಹಿಂದಿನ ಸದಸ್ಯರ ಅವಧಿಯಲ್ಲಿಯೇ ಸುಮಾರು ೩ ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿರುತ್ತಾರೆ. ಅಂದು ಮಧುಸೂದನ್ ಅವರ ಬಗ್ಗೆ ಭ್ರಷ್ಟಾಚಾರ ಆರೋಪ ಮಾಡದೆ ಇದೀಗ ಆರೋಪ ಮಾಡುತ್ತಿರುವುದು ಹಾಸ್ಯಾಸ್ಪದ ಸಂಗತಿಯಾಗಿದೆ ಎಂದರು.
    ನಾವು ಗ್ರಾಮ ಪಂಚಾಯಿತಿ ಆಡಳಿತ ಯಾವ ರೀತಿ ನಡೆಸಬೇಕು. ನಡವಳಿ ಹೇಗೆ ಸಿದ್ದಪಡಿಸಬೇಕು. ಇತ್ಯಾದಿ ವಿಚಾರಗಳ ಬಗ್ಗೆ ತರಬೇತಿ ಪಡೆದಿದ್ದೇವೆ. ನಾವು ನಮ್ಮ ಗಂಡಂದಿರು ಅಥವಾ ಬೇರೆಯವರ ನೆರವಿಲ್ಲದೆ ಸಮರ್ಥವಾಗಿ ಆಡಳಿತ ನಿರ್ವಹಿಸುವ ಸಾಮರ್ಥ್ಯ ಹೊಂದಿದ್ದೇವೆ. ಈ ಹಿಂದಿನ ಸದಸ್ಯರು ಮಾಡಿರುವ ಆರೋಪದಂತೆ ನಮ್ಮ ಗಂಡಂದಿರು ಪಂಚಾಯಿತಿ ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಿಲ್ಲ ಎಂದರು.
    ೧೪ನೇ ಹಣಕಾಸು ಯೋಜನೆ ಮತ್ತು ವರ್ಗ-೧ರಲ್ಲಿ ಅವರ ಅವಧಿಯಲ್ಲಿಯೇ ಅನುದಾನ ಬಿಡುಗಡೆಗೊಂಡಿದ್ದು, ಈ ಅವಧಿಯಲ್ಲಿ ನಡೆದಿರುವ ಭ್ರಷ್ಟಾಚಾರವನ್ನು ಹಾಲಿ ಸದಸ್ಯರ ಮೇಲೆ ಮಾಡುತ್ತಿರುವುದು ಹಾಸ್ಯಾಸ್ಪದ ಸಂಗತಿಯಾಗಿದೆ. ಅಲ್ಲದೆ ಅಕ್ರಮ ಖಾತೆ ಸಂಬಂಧ ಮಾಡಿರುವ ಆರೋಪ ಸಹ ಇವರ ಅವಧಿಯಲ್ಲಿಯೇ ನಡೆದಿದ್ದು, ಅವರ ಅವಧಿಯಲ್ಲಿ ಪ್ರಶ್ನಿಸದೆ ಇದೀಗ ಆರೋಪ ಮಾಡುತ್ತಿರುವುದು ವಿಪರ್ಯಾಸದ ಸಂಗತಿಯಾಗಿದೆ ಎಂದರು.
    ಸದಸ್ಯರಾದ ಅನಿತ ಚಂದ್ರ, ರಾಮಮೂರ್ತಿ, ನಾಗವೇಣಿ, ಎಲ್. ಕೃಷ್ಣೇಗೌಡ, ಪಲ್ಲವಿ ಎಚ್.ಎಸ್ ಮಲ್ಲಿಕಾರ್ಜುನ , ಕಿರಣ್ ರಾಜ್ ಮತ್ತು ಸಂತೋಷ್ ಉಪಸ್ಥಿತರಿದ್ದರು.