Friday, December 17, 2021

ಬಜರಂಗದಳ ಕಾರ್ಯಕರ್ತರಿಂದ ಯಶಸ್ವಿಯಾಗಿ ಜರುಗಿದ ಸಂಕೀರ್ತನೆ ಶೋಭಾ ಯಾತ್ರೆ

ದತ್ತ ಮಾಲೆ ಅಭಿಯಾನದ ಅಂಗವಾಗಿ ಭದ್ರಾವತಿ ನಗರದಲ್ಲಿ ಬಜರಂಗದಳ ಕಾರ್ಯಕರ್ತರು ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಸಂಕೀರ್ತನೆ ಶೋಭಾ ಯಾತ್ರೆ ಯಶಸ್ವಿಯಾಗಿ ಮುಕ್ತಾಯಗೊಂಡಿತು.
    ಭದ್ರಾವತಿ, ಡಿ. ೧೭: ಈ ಬಾರಿ ದತ್ತ ಮಾಲೆ ಅಭಿಯಾನದ ಅಂಗವಾಗಿ ನಗರದಲ್ಲಿ ಬಜರಂಗದಳ ಕಾರ್ಯಕರ್ತರು ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಸಂಕೀರ್ತನೆ ಶೋಭಾ ಯಾತ್ರೆ ಯಶಸ್ವಿಯಾಗಿ ಮುಕ್ತಾಯಗೊಂಡಿತು.
    ಸಂಜೆ ಹೊಸಮನೆ ಶಿವಾಜಿ ವೃತ್ತದಿಂದ ಆರಂಭಗೊಂಡ ಶೋಭಾ ಯಾತ್ರೆ ಹೊಸಮನೆ ಮುಖ್ಯ ರಸ್ತೆ ಮೂಲಕ ಹಾಲಪ್ಪ ವೃತ್ತ, ಸಿ.ಎನ್ ರಸ್ತೆ, ಮಾಧವಚಾರ್ ವೃತ್ತ, ನಂತರ ಬಿ.ಎಚ್ ರಸ್ತೆ ಹಾಲಪ್ಪ ವೃತ್ತ ಮೂಲಕ ಅಂಬೇಡ್ಕರ್ ವೃತ್ತ, ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದವರೆಗೂ ಸಾಗಿ ರಾತ್ರಿ ಸುಮಾರು ೯.೩೦ಕ್ಕೆ ಅಂತ್ಯಗೊಂಡಿತು.
    ಈ ಬಾರಿ ಸುಮಾರು ೧೫೦ಕ್ಕೂ ಹೆಚ್ಚು ಕಾರ್ಯಕರ್ತರು ಮಾಲಾಧಾರಣೆ ಮಾಡಿದ್ದು, ಶೋಭಾ ಯಾತ್ರೆಯಲ್ಲಿ ನೂತನ ವಿಧಾನಪರಿಷತ್ ಸದಸ್ಯ ಡಿ.ಎಸ್ ಅರುಣ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಇ ಕಾಂತೇಶ್, ವಿಶ್ವ ಹಿಂದೂ ಪರಿಷತ್ ಜಿಲಾಧ್ಯಕ್ಷ ವಾಸುದೇವನ್, ದಕ್ಷಿಣ ಪ್ರಾಂತ್ಯ ಉಪಾಧ್ಯಕ್ಷ ಹಾ. ರಾಮಪ್ಪ, ಬಿಜೆಪಿ ಮಂಡಲ ಅಧ್ಯಕ್ಷ ಎಂ. ಪ್ರಭಾಕರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ. ಧರ್ಮಪ್ರಸಾದ್, ಮುಖಂಡರಾದ ಮಂಗೋಟೆ ರುದ್ರೇಶ್, ಎಂ. ಮಂಜುನಾಥ್, ನಗರಸಭಾ ಸದಸ್ಯರಾದ ಅನುಪಮ ಚನ್ನೇಶ್, ಅನಿತಾ ಮಲ್ಲೇಶ್ ಹಾಗು ವಿಶ್ವ ಹಿಂದೂ ಪರಿಷತ್ ಸೇರಿದಂತೆ ಹಿಂದೂಪರ ಸಂಘಟನೆಗಳ ಪ್ರಮುಖರು, ಕಾರ್ಯಕರ್ತರು ಇನ್ನಿತರರು ಪಾಲ್ಗೊಂಡಿದ್ದರು.  

ಇಬ್ಬರು ಮೊಬೈಲ್ ಕಳ್ಳರ ಬಂಧನ : ಒಟ್ಟು ೧೧ ಲಕ್ಷ ರು. ಮೌಲ್ಯದ ೧೨೦ ಮೊಬೈಲ್ ವಶ

ಹಳೇನಗರ ಠಾಣೆ ಪೊಲೀಸರ ಕಾರ್ಯಾಚರಣೆ


ಇಬ್ಬರು ಮೊಬೈಲ್ ಕಳ್ಳರನ್ನು ಬಂಧಿಸಿ ಸುಮಾರು ಒಟ್ಟು ೧೧ ಲಕ್ಷ ರು. ಮೌಲ್ಯದ ಮೊಬೈಲ್‌ಗಳನ್ನು ವಶಪಡಿಸಿಕೊಳ್ಳುವಲ್ಲಿ ಭದ್ರಾವತಿ ಹಳೇನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
    ಭದ್ರಾವತಿ, ಡಿ. ೧೭: ಇಬ್ಬರು ಮೊಬೈಲ್ ಕಳ್ಳರನ್ನು ಬಂಧಿಸಿ ಸುಮಾರು ಒಟ್ಟು ೧೧ ಲಕ್ಷ ರು. ಮೌಲ್ಯದ ಮೊಬೈಲ್‌ಗಳನ್ನು ವಶಪಡಿಸಿಕೊಳ್ಳುವಲ್ಲಿ ಹಳೇನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
    ಭೋವಿ ಕಾಲೋನಿ ನಿವಾಸಿ ಶ್ರೀನಿವಾಸ್(೨೬) ಮತ್ತು ದುರ್ಗಿನಗರದ ನಿವಾಸಿ ಅಜಾಮ್ ಅಲಿಯಾಸ್ ಬಾಬು(೩೮) ಬಂಧಿತ ಮೊಬೈಲ್ ಕಳ್ಳರಾಗಿದ್ದು, ಈ ಇಬ್ಬರು ಕದ್ದ ಮೊಬೈಲ್‌ಗಳನ್ನು ನಗರದಲ್ಲಿ ಮಾರಾಟ ಮಾಡಲು ಬರುತ್ತಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಹಳೇನಗರ ಠಾಣೆ ಪೊಲೀಸರು ಗುರುವಾರ ಬೆಳಿಗ್ಗೆ ಕಾರ್ಯಾಚರಣೆ ನಡೆಸಿ ಸೀಗೆಬಾಗಿ ಸಮೀಪ ಬಂಧಿಸಿದ್ದಾರೆ.
    ಬಂಧಿತರಿಂದ ಒಟ್ಟು ೧೧ ಲಕ್ಷ ರು. ಮೌಲ್ಯದ ವಿವಿಧ ಕಂಪನಿಗಳ ೧೨೦ ಮೊಬೈಲ್‌ಗಳನ್ನು ಹಾಗು ಡೆಲ್ ಕಂಪನಿಯ ಒಂದು ಲ್ಯಾಪ್‌ಟಾಪ್ ಹಾಗು ಕೃತ್ಯಕ್ಕೆ ಬಳಸಿದ ದ್ವಿಚಕ್ರವಾಹನವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.


ಕ್ರೀಡೆಗೆ ಯಾವುದೇ ಧರ್ಮ, ಜಾತಿ ಇಲ್ಲ, ಎಲ್ಲರನ್ನು ಒಗ್ಗೂಡಿಸುವ ಶಕ್ತಿ ಇದೆ : ಬಿ.ಕೆ ಸಂಗಮೇಶ್ವರ್

ರಾಜ್ಯಮಟ್ಟದ ಓಂ ಕಪ್ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ


ಭದ್ರಾವತಿ ಹಳೇನಗರದ ಕನಕಮಂಟಪ ಮೈದಾನದಲ್ಲಿ ೩ ದಿನಗಳ ಕಾಲ ನಗರದ ಓಂ ಕ್ರಿಕೇಟರ್‍ಸ್ ವತಿಯಿಂದ ಯುವ ಮುಖಂಡ ಕೆ.ಪಿ ಗಿರೀಶ್ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ರಾಜ್ಯಮಟ್ಟದ ಓಂ ಕಪ್ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಗೆ ಶುಕ್ರವಾಗಿ ಶಾಸಕ ಬಿ.ಕೆ ಸಂಗಮೇಶ್ವರ್ ಟಾಸ್ ತೂರಿ ಚಾಲನೆ ನೀಡಿದರು.
    ಭದ್ರಾವತಿ, ಡಿ. ೧೭: ಪ್ರತಿಯೊಬ್ಬರಲ್ಲೂ ಉತ್ಸಾಹ, ಆರೋಗ್ಯ ತಂದುಕೊಡುವ ಕ್ರೀಡೆ ಯಾವುದೇ ಧರ್ಮ, ಜಾತಿಗೆ ಸೀಮಿತವಾಗಿಲ್ಲ ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ಹೇಳಿದರು.
    ಅವರು ಶುಕ್ರವಾರ ಹಳೇನಗರದ ಕನಕಮಂಟಪ ಮೈದಾನದಲ್ಲಿ ೩ ದಿನಗಳ ಕಾಲ ನಗರದ ಓಂ ಕ್ರಿಕೇಟರ್‍ಸ್ ವತಿಯಿಂದ ಯುವ ಮುಖಂಡ ಕೆ.ಪಿ ಗಿರೀಶ್ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ರಾಜ್ಯಮಟ್ಟದ ಓಂ ಕಪ್ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದರು.
    ಪ್ರಸ್ತುತ ಕ್ರೀಡೆಗಳು ಹೆಚ್ಚು ಹೆಚ್ಚಾಗಿ ನಡೆಯುವಂತಾಗಬೇಕು. ಕ್ರೀಡಾಪಟುಗಳು ಇರುವ ಕಡೆ ಉತ್ತಮ ಪರಿಸರ ರೂಪುಗೊಳ್ಳುತ್ತದೆ. ಜೊತೆಗೆ ಯುವ ಸಮೂಹ ದುಶ್ಚಟಗಳಿಂದ ದೂರು ಉಳಿಯುತ್ತಾರೆ ಎಂದರು.
ಪ್ರಸ್ತುತ ಕ್ರೀಡಾ ಮನೋಭಾವ ಅಗತ್ಯವಿದ್ದು, ಕ್ರೀಡೆಯಲ್ಲಿ ಸೋಲು ಗೆಲುವು ಸಹಜ. ಎರಡನ್ನು ಸಮಾನವಾಗಿ ಸ್ವೀಕರಿಸಿ ಗೆದ್ದವರು, ಸೋತವರು ಸಂಭ್ರಮಿಸಬೇಕು. ಕ್ರೀಡೆಯಲ್ಲಿ ಯಾವುದೇ ಧರ್ಮ, ಜಾತಿ ಇಲ್ಲ. ಕ್ರೀಡೆ ಎಲ್ಲರನ್ನು ಒಗ್ಗೂಡಿಸುವ ಶಕ್ತಿ  ಹೊಂದಿದೆ ಎಂದರು.
    ನಗರಸಭಾ ಸದಸ್ಯ, ಸಮಾಜ ಸೇವಕ ಮಣಿ ಎಎನ್‌ಎಸ್, ತಾಲೂಕು ಬಗರ್‌ಹುಕುಂ ಸಮಿತಿ ಅಧ್ಯಕ್ಷ ನಾಗೇಶ್, ಯುವ ಮುಖಂಡರಾದ ಗಣೇಶ್, ಮಹೇಶ್, ಓಂ ಕ್ರಿಕೇಟರ್‍ಸ್‌ನ ಪ್ರಮುಖರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಕೇಸರಿಪಡೆಯ ಕೆ.ಪಿ ಗಿರೀಶ್ ಅಧ್ಯಕ್ಷತೆ ವಹಿಸಿದ್ದರು.


ಭದ್ರಾವತಿ ಹಳೇನಗರದ ಕನಕಮಂಟಪ ಮೈದಾನದಲ್ಲಿ ೩ ದಿನಗಳ ಕಾಲ ನಗರದ ಓಂ ಕ್ರಿಕೇಟರ್‍ಸ್ ವತಿಯಿಂದ ಯುವ ಮುಖಂಡ ಕೆ.ಪಿ ಗಿರೀಶ್ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ರಾಜ್ಯಮಟ್ಟದ ಓಂ ಕಪ್ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಆಟ ಆಡುವ ಮೂಲಕ ಕ್ರೀಡಾಪಟುಗಳಲ್ಲಿ ಹುಮ್ಮಸ್ಸು ಮೂಡಿಸಿದರು.

ಕೂಡ್ಲಿಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಉಮಾದೇವಿ ತಿಪ್ಪೇಶ್ ಅವಿರೋಧ ಆಯ್ಕೆ

ಭದ್ರಾವತಿ ಕೂಡ್ಲಿಗೆರೆ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷೆ ಉಮಾದೇವಿ ತಿಪ್ಪೇಶ್
    ಭದ್ರಾವತಿ, ಡಿ. ೧೭:  ತಾಲೂಕಿನ ಕೂಡ್ಲಿಗೆರೆ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಉಮಾದೇವಿ ತಿಪ್ಪೇಶ್ ಶುಕ್ರವಾರ ನಡೆದ ಚುನಾವಣೆಯಲ್ಲಿ  ಅವಿರೋಧವಾಗಿ ಆಯ್ಕೆಯಾದರು.
    ಸಾಮಾನ್ಯ ಮಹಿಳೆಗೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಈ ಹಿಂದೆ ಆಯ್ಕೆಯಾಗಿದ್ದ ಮಲಕ್ ಬಿ ವೀರಪ್ಪನ್ ಒಪ್ಪಂದದಂತೆ ೧೦ ತಿಂಗಳು ಆಡಳಿತ ನಡೆಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಈ ಹಿನ್ನಲೆಯಲ್ಲಿ ನಡೆದ ಚುನಾವಣೆಯಲ್ಲಿ ಉಮಾದೇವಿ ತಿಪ್ಪೇಶ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.


    ತಾಲೂಕು ಪಂಚಾಯಿತಿ ಕಾರ್ಯನಿರ್ವಣಾಧಿಕಾರಿ ರಮೇಶ್ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಅಶೋಕ್ ಮತ್ತು ಕಾರ್ಯದರ್ಶಿ ಸತೀಶ್ ಗೌಡ ಉಪಸ್ಥಿತರಿದ್ದರು.  ಪಂಚಾಯಿತಿ ಉಪಾಧ್ಯಕ್ಷ ಕುಬೇರನಾಯ್ಕ್, ಸದಸ್ಯರಾದ ಜಯಣ್ಣ, ರುದ್ರೇಶ್, ಸ್ವಾಮೀನಾಥ್, ವಿಶ್ವನಾಥ್, ನಾಗರಾಜ್, ಭಾಗ್ಯ, ಸಿದ್ದಮ್ಮ, ನೀಲಾಬಾಯಿ, ಪಾರ್ವತಿ ಬಾಯಿ ಮತ್ತು ಗೌರಮ್ಮ ಚುನಾವಣೆಯಲ್ಲಿ ಭಾಗವಹಿಸಿದ್ದರು.