Sunday, January 16, 2022

ಗ್ರಾಮೀಣ ಕ್ರೀಡೆಗಳ ಉಳಿವಿಗೆ ಶ್ರಮಿಸಿ : ಕೆ.ಟಿ.ಕೆ ಉಲ್ಲಾಸ್

ಅರಳಿಕೊಪ್ಪ ಗ್ರಾಮದಲ್ಲಿ ೨ ದಿನಗಳ ತಾಲೂಕು ಮಟ್ಟದ ಕ್ರೀಡಾಕೂಟ

ಶಿವಮೊಗ್ಗ ನೆಹರು ಯುವ ಕೇಂದ್ರ ಹಾಗೂ ಅರಳಿಕೊಪ್ಪ ಡಾ. ಬಿ.ಆರ್ ಅಂಬೇಡ್ಕರ್ ಗ್ರಾಮಾಭಿವೃದ್ಧಿ ಯುವಕರ ಸಂಘ ಮತ್ತು ಛಾಯಾ ಯುವಕರ ಸಂಘ ಹಾಗೂ ಅರಳಿಕೊಪ್ಪ ಗ್ರಾಮ ಪಂಚಾಯತಿ ವತಿಯಿಂದ ಇತ್ತೀಚೆಗೆ ಗ್ರಾಮದ ಶ್ರೀ ಕೆಂಚಮಾರಿಯಮ್ಮ ಜಾತ್ರಾ ಮಹೋತ್ಸವದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಎರಡು ದಿನಗಳ ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಉತ್ತರೇಶ್ ಚಾಲನೆ ನೀಡಿದರು.
    ಭದ್ರಾವತಿ, ಜ. ೧೬: ಗ್ರಾಮೀಣ ಕ್ರೀಡೆಗಳನ್ನು ಪ್ರೋತ್ಸಾಯಿಸಿ ಮುಂದಿನ ಪೀಳಿಗೆಗೆ ಕೊಂಡೊಯ್ಯುವ ನಿಟ್ಟಿನಲ್ಲಿ ಗ್ರಾಮೀಣ ಕ್ರೀಡಾಕೂಟಗಳು ಹೆಚ್ಚು ಸಹಕಾರಿಯಾಗಿವೆ ಎಂದು ನೆಹರು ಯುವ ಕೇಂದ್ರದ ಯುವ ಅಧಿಕಾರಿ ಕೆ.ಟಿ.ಕೆ ಉಲ್ಲಾಸ್ ಹೇಳಿದರು.
ಶಿವಮೊಗ್ಗ ನೆಹರು ಯುವ ಕೇಂದ್ರ ಹಾಗೂ ಅರಳಿಕೊಪ್ಪ ಡಾ. ಬಿ.ಆರ್ ಅಂಬೇಡ್ಕರ್ ಗ್ರಾಮಾಭಿವೃದ್ಧಿ ಯುವಕರ ಸಂಘ ಮತ್ತು ಛಾಯಾ ಯುವಕರ ಸಂಘ ಹಾಗೂ ಅರಳಿಕೊಪ್ಪ ಗ್ರಾಮ ಪಂಚಾಯತಿ ವತಿಯಿಂದ ಇತ್ತೀಚೆಗೆ ಗ್ರಾಮದ ಶ್ರೀ ಕೆಂಚಮಾರಿಯಮ್ಮ ಜಾತ್ರಾ ಮಹೋತ್ಸವದ
    ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಎರಡು ದಿನಗಳ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಅವರು ಪಾಲ್ಗೊಂಡು ಮಾತನಾಡಿದರು.
    ಗ್ರಾಮದಲ್ಲಿನ ಪ್ರತಿಭಾವಂತರು ಕ್ರೀಡಾಕೂಟದ ಸದುಪಯೋಗ ಪಡೆದುಕೊಳ್ಳುವ ಮೂಲಕ ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಳ್ಳಬೇಕೆಂದರು.
    ಗ್ರಾಮ ಪಂಚಾಯಿತಿ ಅಧ್ಯಕ್ಷ ಉತ್ತರೇಶ್ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಉಪಾಧ್ಯಕ್ಷೆ ಲಕ್ಷ್ಮೀಬಾಯಿ ಅಧ್ಯಕ್ಷತೆ ವಹಿಸಿದ್ದರು.  ಗ್ರಾ.ಪಂ. ಸದಸ್ಯರು, ಗ್ರಾಮದ ಮುಖಂಡರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ಗ್ರಾಮೀಣ ಕ್ರೀಡೆಗಳಾದ ಕೆಸರು ಗದ್ದೆ ಓಟ, ಹಗ್ಗ-ಜಗ್ಗಾಟ, ಕಬಡ್ಡಿ, ಮ್ಯೂಸಿಕಲ್ ಛೇರ್, ಲೆಮನ್ & ಸ್ಪೂನ್ ಸೇರಿದಂತೆ ವಿವಿಧ ಸ್ಪರ್ಧೆಗಳು ಜರುಗಿದವು. ಕ್ರೀಡೆಗಳಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು.

No comments:

Post a Comment