Thursday, March 31, 2022

ಏ.೧ರಂದು ಹಾಲು, ಬ್ರೆಡ್, ಹಣ್ಣು ವಿತರಣೆ

    ಭದ್ರಾವತಿ, ಮಾ. ೩೧: ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಕರ್ನಾಟಕ ರತ್ನ ತ್ರಿವಿಧ ದಾಸೋಹಿ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ೧೧೫ನೇ ಜನ್ಮದಿನದ ಅಂಗವಾಗಿ ಏ.೧ರಂದು ಬೆಳಿಗ್ಗೆ ೧೦ ಗಂಟೆಗೆ ಹಾಲು, ಬ್ರೆಡ್ ಮತ್ತು ಹಣ್ಣು ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
    ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕು ಶಾಖೆ ವತಿಯಿಂದ ಹಮ್ಮಿಕೊಳ್ಳಲಾಗಿರುವ ಕಾರ್ಯಕ್ರಮದಲ್ಲಿ ಬಿಳಿಕಿ ಮಠದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ಉಪಸ್ಥಿತರಿರುವರು. ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಮಹಾಸಭಾ ಪ್ರಧಾನ ಕಾರ್ಯದರ್ಶಿ ಅರಳಿಹಳ್ಳಿ ರವಿ ಕೋರಿದ್ದಾರೆ.

ಹಲಾಲ್ ಅಭಿಯಾನ : ಬಜರಂಗದಳ ಕಾರ್ಯಕರ್ತರ ವಿರುದ್ಧ ಹಲ್ಲೆ, ಬೆದರಿಕೆ ಪ್ರಕರಣ ದಾಖಲು

ಸಿ.ಎಂ ಖಾದರ್ ಪ್ರಚೋದನಾಕಾರಿ ಹೇಳಿಕೆ ಹಿನ್ನಲೆಯಲ್ಲಿ ಅಭಿಯಾನ : ಬಜರಂಗದಳ ಆರೋಪ

ಭದ್ರಾವತಿ ಹೊಸಮನೆ ಶಿವಾಜಿ ವೃತ್ತದಲ್ಲಿ ಬಜರಂಗದಳ ಕಾರ್ಯಕರ್ತರು ಕೋಳಿ ಹಾಗು ಮಾಂಸದಂಗಡಿಗಳಲ್ಲಿ ಹಲಾಲ್ ಅಭಿಮಾನ ಕೈಗೊಂಡಿರುವುದು.
    ಭದ್ರಾವತಿ, ಮಾ. ೩೧: ಒಂದೆಡೆ ಹಲಾಲ್ ಅಭಿಯಾನದ ಹೆಸರಿನಲ್ಲಿ ಬಜರಂಗದಳ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆಂದು, ಮತ್ತೊಂದೆಡೆ ಮಾಂಸದಂಗಡಿ ತೆರವುಗೊಳಿಸುವಂತೆ ಬೆದರಿಕೆ ಹಾಕಿದ್ದಾರೆಂಬ ಎರಡು ಪ್ರತ್ಯೇಕ ಪ್ರಕರಣಗಳು ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಘಟನೆ ನಡೆದಿದೆ.
    ಬಜರಂಗದಳ ಕಾರ್ಯಕರ್ತರು ನಗರದಲ್ಲಿ ಹಲಾಲ್ ಸಂಬಂಧ ಅಭಿಯಾನ ಕೈಗೊಂಡು ಬಿ.ಎಚ್ ರಸ್ತೆ ಜನತಾ ಹೋಟೆಲ್‌ನಲ್ಲಿ ಹಿಂದುಗಳಿಗೆ ಹಲಾಲ್ ಅಲ್ಲದ ಊಟ ನೀಡುವಂತೆ ಮಾಲೀಕರಿಗೆ ಮನವಿ ಮಾಡಿದ್ದು, ಈ ಸಂದರ್ಭದಲ್ಲಿ ಊಟ ಮಾಡುತ್ತಿದ್ದ ಕೆಲವು ವ್ಯಕ್ತಿಗಳು ಈ ವಿಚಾರಕ್ಕೆ ವಿನಾಕಾರಣ ತಕರಾರು ತೆಗೆದಿದ್ದಾರೆ. ಈ ನಡುವೆ ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದೆ.
    ಈ ಸಂಬಂಧ ಬಜರಂಗದಳ ಪ್ರಮುಖರಾದ ವಡಿವೇಲು, ಶ್ರೀಕಾಂತ್, ಗುಂಡ, ಸವಾಯಿ ಸಿಂಗ್, ಮಂಜ, ಲೋಕಿ ಮತ್ತು ಸಂಜು ಸೇರಿದಂತೆ ಒಟ್ಟು ೭ ಜನರ ವಿರುದ್ಧ  ಹಲ್ಲೆ ನಡೆಸಿದ್ದಾರೆಂಬ ದೂರು ಹಳೇನಗರ ಪೊಲೀಸ್ ಠಾಣೆಯಲ್ಲಿ  ದಾಖಲಾಗಿದೆ.
    ಹೊಸಮನೆ ಶಿವಾಜಿ ವೃತ್ತದಲ್ಲಿ ಅಭಿಯಾನ ಕೈಗೊಂಡಿದ್ದ ಬಜರಂಗದಳ ಕಾರ್ಯಕರ್ತರು, ಕೋಳಿ ಹಾಗು ಮಾಂಸದಂಗಡಿಗಳಿಗೆ ಭೇಟಿ ನೀಡಿ ಈ ಭಾಗದಲ್ಲಿ ಶೇ.೯೦ರಷ್ಟು ಹಿಂದೂಗಳಿದ್ದು, ಈ ಹಿನ್ನಲೆಯಲ್ಲಿ ಹಲಾಲ್ ಅಲ್ಲದೆ ಮಾಂಸ ನೀಡುವಂತೆ ಮನವಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಒಂದು ಮಾಂಸದಂಗಡಿಯಲ್ಲಿ ಹಲಾಲ್ ಅಲ್ಲದ ಮಾಂಸ ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದ್ದು, ಈ ಹಿನ್ನಲೆಯಲ್ಲಿ ಕಾರ್ಯಕರ್ತರು ಅಂಗಡಿ ತೆರವುಗೊಳಿಸುವಂತೆ ಆಗ್ರಹಿಸಿದ್ದಾರೆ. ಇದರಿಂದಾಗಿ ಅಂಗಡಿ ಮಾಲೀಕ ಹೊಸಮನೆ ಶಿವಾಜಿ ಸರ್ಕಲ್ ಪೊಲೀಸ್ ಠಾಣೆಯಲ್ಲಿ ಬಜರಂಗದಳ ಕಾರ್ಯಕರ್ತರ ವಿರುದ್ಧ ಬೆದರಿಕೆ ದೂರು ದಾಖಲಿಸಿದ್ದಾರೆ ಎನ್ನಲಾಗಿದೆ.
       ವಿನಾಕಾರಣ ಪ್ರಕರಣ ದಾಖಲು:
    ಬಜರಂಗದಳ ಪ್ರಮುಖ್ ವಡಿವೇಲು ಮಾತನಾಡಿ, ನಮ್ಮ ಮೇಲೆ ವಿನಾಕಾರಣ ಪ್ರಕರಣ ದಾಖಲಿಸಲಾಗಿದೆ. ಜನತಾ ಹೋಟೆಲ್‌ನಲ್ಲಿ ಊಟ ಮಾಡುತ್ತಿದ್ದ ಎಸ್‌ಡಿಪಿಐ ಕಾರ್ಯಕರ್ತನೋರ್ವ ವಿನಾಕಾರಣ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಈ ಹಿನ್ನಲೆಯಲ್ಲಿ ಬಜರಂಗದಳ ಕಾರ್ಯಕರ್ತರು ಆಕ್ರೋಶಗೊಂಡು ಮಾತಿನ ಚಕಮಕಿ ನಡೆಸಿದ್ದಾರೆ. ಈ ವಿಚಾರವನ್ನು ದೊಡ್ಡದು ಮಾಡಿ ಕಾರ್ಯಕರ್ತರ ವಿರುದ್ಧ ಹಲ್ಲೆ ಮಾಡಿದ್ದಾರೆಂದು ಸುಳ್ಳು ದೂರು ದಾಖಲಿಸಲಾಗಿದೆ ಎಂದರು.
        ಸಿ.ಎಂ ಖಾದರ್ ವಿರುದ್ಧ ಆರೋಪ :
    ಕೇಂದ್ರ ಮಾಜಿ ಸಚಿವ, ವಿಧಾನಪರಿಷತ್ ಸದಸ್ಯ ಸಿ.ಎಂ ಇಬ್ರಾಹಿಂ ಸಹೋದರ ಸಿ.ಎಂ ಖಾದರ್ ವಿರುದ್ಧ ಪ್ರಕರಣ ದಾಖಲಿಸುವುದಾಗಿ ಬಜರಂಗದಳ ಪ್ರಮುಖ್ ವಡಿವೇಲು ತಿಳಿಸಿದ್ದಾರೆ.
 ಹಲಾಲ್ ಸಂಬಂಧ ಸಿ.ಎಂ ಖಾದರ್ ಪ್ರಚೋದನಾಕಾರಿ ಹೇಳಿಕೆ ನೀಡಿದ ಹಿನ್ನಲೆಯಲ್ಲಿ ಬಜರಂಗದಳ ಕಾರ್ಯಕರ್ತರು ನಗರದಲ್ಲಿ ಅಭಿಮಾನ ಕೈಗೊಳ್ಳುವಂತಾಯಿತು. ಪ್ರಸ್ತುತ ನಡೆದಿರುವ ಅಹಿತಕರ ಬೆಳವಣಿಗೆಗಳಿಗೆ ಸಿ.ಎಂ ಖಾದರ್ ಕಾರಣಕರ್ತರಾಗಿದ್ದು, ಈ ಹಿನ್ನಲೆಯಲ್ಲಿ ಇವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು. ಅಲ್ಲದೆ ವಿನಾಕಾರಣ ಸುಳ್ಳು ದೂರು ನೀಡಿರುವ ಎಸ್‌ಡಿಪಿಐ ಕಾರ್ಯಕರ್ತನ ವಿರುದ್ಧ ಸಹ ದೂರು ನೀಡಲಾಗುವುದು ಎಂದರು.
      ಮುಸ್ಲಿಂ ವ್ಯಾಪಾರಸ್ಥರ ಮೇಲೆ ಹಲ್ಲೆ :
    ನಗರದದಲ್ಲಿ ಬಜರಂಗದಳ ಕಾರ್ಯಕರ್ತರು ಕೋಳಿ ಹಾಗು ಮಾಂಸದಂಗಡಿಗಳಿಗೆ ಹಾಗು ಹೋಟೆಲ್‌ಗಳಿಗೆ ನುಗ್ಗಿ ಮುಸ್ಲಿಂ ವ್ಯಾಪಾರಸ್ಥರು ಹಾಗು ಗ್ರಾಹಕರ ಮೇಲೆ ಹಲ್ಲೆ ನಡೆಸಿದ್ದು, ಇವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪಾಪ್ಯೂಲರ್ ಫ್ರಂಟ್ ಆಫ್ ಇಂಡಿಯಾ ಆಗ್ರಹಿಸಿದೆ.
    ಹಿಜಾಬ್, ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ, ಇದೀಗ ಹಲಾಲ್ ವಿಚಾರಕ್ಕೆ ಸಂಬಂಧಿಸಿದಂತೆ  ಬಜರಂಗದಳ ಕಾರ್ಯಕರ್ತರ ವರ್ತನೆ ಮಿತಿಮೀರಿದ್ದು, ಸಮಾಜದಲ್ಲಿ ಆಶಾಂತಿ ವಾತಾವರಣ ನಿರ್ಮಾಣವಾಗುತ್ತಿದೆ. ಪೊಲೀಸ್ ಇಲಾಖೆ ತಕ್ಷಣ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಮುಸ್ಲಿಂ ವ್ಯಾಪಾರಸ್ಥರಿಗೆ ರಕ್ಷಣೆ ನೀಡಬೇಕೆಂದು ಪಾಪ್ಯೂಲರ್ ಫ್ರಂಟ್ ಆಫ್ ಇಂಡಿಯಾ ಜಿಲ್ಲಾಧ್ಯಕ್ಷ ಸಯ್ಯದ್ ರಿಜ್ವಾನ್ ಒತ್ತಾಯಿಸಿದ್ದಾರೆ.

Wednesday, March 30, 2022

ಯಶಸ್ವಿಯಾಗಿ ಜರುಗಿದ ಉಚಿತ ನೇತ್ರ ತಪಾಸಣೆ, ಶಸ್ತ್ರ ಚಿಕಿತ್ಸಾ ಶಿಬಿರ

ಭದ್ರಾವತಿ ಬಾರಂದೂರು ವಂದೇ ಮಾತರಂ ಟ್ರಸ್ಟ್ ವತಿಯಿಂದ ಬುಧವಾರ ಅಂತರಗಂಗೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದ್ದ ಉಚಿತ ನೇತ್ರ ಪರೀಕ್ಷೆ ಮತ್ತು ಶಸ್ತ್ರ ಚಿಕಿತ್ಸಾ ಹಾಗು ಸ್ವಯಂ ಪ್ರೇರಿತ ನೇತ್ರದಾನ ನೋಂದಣಿ ಶಿಬಿರವನ್ನು ಎರೇಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಎನ್ ಉಮೇಶ್, ವಂದೇ ಮಾತರಂ ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷ ಬಿ.ಎ ಪ್ರಸನ್ನಕುಮಾರ್ ಹಾಗು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ಉದ್ಘಾಟಿಸಿದರು.
    ಭದ್ರಾವತಿ, ಮಾ. ೩೦: ಬಾರಂದೂರು ವಂದೇ ಮಾತರಂ ಟ್ರಸ್ಟ್ ವತಿಯಿಂದ ತಾಲೂಕಿನ ಅಂತರಗಂಗೆ-ಕೆ.ಎಚ್ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ಶಿವಮೊಗ್ಗ ಶಂಕರ ಕಣ್ಣಿನ ಆಸ್ಪತ್ರೆ, ಜಿಲ್ಲಾ ಅಂಧತ್ವ ನಿವಾರಣ ಸಂಸ್ಥೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ತಾಲೂಕು ವೈದ್ಯಾಧಿಕಾರಿಗಳ ಕಛೇರಿ ಸಹಯೋಗದೊಂದಿಗೆ ಬುಧವಾರ ಅಂತರಗಂಗೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಉಚಿತ ನೇತ್ರ ಪರೀಕ್ಷೆ ಮತ್ತು ಶಸ್ತ್ರ ಚಿಕಿತ್ಸಾ ಹಾಗು ಸ್ವಯಂ ಪ್ರೇರಿತ ನೇತ್ರದಾನ ನೋಂದಣಿ ಶಿಬಿರ ಆಯೋಜಿಸಲಾಗಿತ್ತು.
    ಎರೇಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಎನ್ ಉಮೇಶ್, ವಂದೇ ಮಾತರಂ ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷ ಬಿ.ಎ ಪ್ರಸನ್ನಕುಮಾರ್ ಹಾಗು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ಶಿಬಿರ ಉದ್ಘಾಟಿಸಿದರು.
    ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್ ಶಿಬಿರ ಪರಿಶೀಲನೆ ನಡೆಸಿದರು. ಟ್ರಸ್ಟ್ ಉಪಾಧ್ಯಕ್ಷ ಬಿ. ರೇಣೋಜಿರಾವ್, ಕಾರ್ತಿಕ್, ಜಗದೀಶ್ ಹಾಗು ಆರೋಗ್ಯ ಇಲಾಖೆ ಸಿಬ್ಬಂದಿಗಳು, ಶಿವಮೊಗ್ಗ ಶಂಕರ ಕಣ್ಣಿನ ಆಸ್ಪತ್ರೆ, ತಜ್ಞ ವೈದ್ಯರ ತಂಡ, ಆಶಾ ಕಾರ್ಯಕರ್ತೆಯರು ಸೇರಿದಂತೆ ಇನ್ನಿತರರು ಶಿಬಿರದ ಯಶಸ್ವಿಗೆ ಶ್ರಮಿಸಿದರು. ನೂರಾರು ಮಂದಿ ಪಾಲ್ಗೊಂಡು ಶಿಬಿರದ ಸದುಪಯೋಗ ಪಡೆದುಕೊಂಡರು.

ಶಿಶುಪಾಲನ ಕೇಂದ್ರದಲ್ಲಿ ಮಕ್ಕಳಿಗೆ ಉಚಿತ ಆರೋಗ್ಯ ತಪಾಸಣೆ

ಭದ್ರಾವತಿ ನಗರಸಭೆ ವ್ಯಾಪ್ತಿಯ ಜನ್ನಾಪುರದಲ್ಲಿರುವ ಶಿಶು ಪಾಲನ ಕೇಂದ್ರದಲ್ಲಿ ಬುಧವಾರ ಮಕ್ಕಳಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಲಾಗಿತ್ತು. ಕಾರ್ಮಿಕ ನಿರೀಕ್ಷಕಿ ಮುಮ್ತಾಜ್ ಬೇಗಂ ಶಿಬಿರ ಉದ್ದೇಶಿಸಿ ಮಾತನಾಡಿದರು.
    ಭದ್ರಾವತಿ, ಮಾ. ೩೦: ನಗರಸಭೆ ವ್ಯಾಪ್ತಿಯ ಜನ್ನಾಪುರದಲ್ಲಿರುವ ಶಿಶು ಪಾಲನ ಕೇಂದ್ರದಲ್ಲಿ ಬುಧವಾರ ಮಕ್ಕಳಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಲಾಗಿತ್ತು.
    ಕಾರ್ಮಿಕ ಇಲಾಖೆ ವತಿಯಿಂದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗಾಗಿ ನಗರಸಭೆ ವ್ಯಾಪ್ತಿಯ ಜನ್ನಾಪುರ ಹಾಗು ಉಜ್ಜನಿಪುರದಲ್ಲಿ ಶಿಶು ಪಾಲನ ಕೇಂದ್ರಗಳನ್ನು ತೆರೆಯಲಾಗಿದ್ದು, ದಿನದ ಕೂಲಿ ನಂಬಿ ಬದುಕುತ್ತಿರುವ ದಂಪತಿಗಳಿಗೆ ಈ ಕೇಂದ್ರಗಳು ಹೆಚ್ಚಿನ ಸಹಕಾರಿಯಾಗಿವೆ.
    ಶಿವಮೊಗ್ಗ ಗುತ್ತಿ ಮಲ್ನಾಡ್ ಹಾಸ್ಪಿಟಲ್ ತಜ್ಞ ವೈದ್ಯರ ತಂಡ ತಪಾಸಣೆ ನಡೆಸಿತು. ಕಾರ್ಮಿಕ ಇಲಾಖೆ ನಿರೀಕ್ಷಕಿ ಮುಮ್ತಾಜ್ ಬೇಗಂ, ನಗರಸಭೆ ಸದಸ್ಯೆ ಸವಿತ, ಮುಖಂಡ ಉಮೇಶ್ ಸೇರಿದಂತೆ ಇನ್ನಿತರರು ಶಿಬಿರಕ್ಕೆ ಚಾಲನೆ ನೀಡಿದರು.

ಎಸ್‌ಎಸ್‌ಎಲ್‌ಸಿ ದ್ವಿತೀಯ ಭಾಷಾ ಪರೀಕ್ಷೆಗೆ ೧೨೨ ಮಂದಿ ಗೈರು

    ಭದ್ರಾವತಿ, ಮಾ. ೩೦: ಎಸ್‌ಎಸ್‌ಎಲ್‌ಸಿ ದ್ವಿತೀಯ ಭಾಷಾ ಪರೀಕ್ಷೆ ಬುಧವಾರ ನಡೆದಿದ್ದು, ತಾಲೂಕಿನಲ್ಲಿ ಒಟ್ಟು ೧೨೨ ಮಂದಿ ಗೈರು ಹಾಜರಾಗಿದ್ದಾರೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ತಿಳಿಸಿದ್ದಾರೆ.
    ದ್ವಿತೀಯ ಭಾಷಾ ಪರೀಕ್ಷೆಗೆ ಒಟ್ಟು ೪೪೮೫ ವಿದ್ಯಾರ್ಥಿಗಳ ಪೈಕಿ ೪೩೬೩ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ೧೨೨ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ೧೫ ಪರೀಕ್ಷಾ ಕೇಂದ್ರಗಳಲ್ಲಿ ೪೧೬೭ ಮತ್ತು ಮರು ಪರೀಕ್ಷೆ ತೆಗೆದುಕೊಂಡ ೨೭ ವಿದ್ಯಾರ್ಥಿಗಳು ಸೇರಿ ಒಟ್ಟು ೪೧೯೪ ವಿದ್ಯಾರ್ಥಿಗಳ ಪೈಕಿ ೪೧೨೧ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಉಳಿದಂತೆ ೧ ಖಾಸಗಿ ಪರೀಕ್ಷಾ ಕೇಂದ್ರದಲ್ಲಿ ೨೮೧ ಮತ್ತು ಮರು ಪರೀಕ್ಷೆ ತೆಗೆದುಕೊಂಡ ೧೦ ವಿದ್ಯಾರ್ಥಿಗಳು ಸೇರಿ ಒಟ್ಟು ೨೯೧ ವಿದ್ಯಾರ್ಥಿಗಳಪೈಕಿ ೨೪೨ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ದ್ವಿತೀಯ ಭಾಷಾ ಪರೀಕ್ಷೆ ಸಹ ಯಾವುದೇ ಗೊಂದಲವಿಲ್ಲದೆ ಯಶಸ್ವಿಯಾಗಿ ನಡೆದಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳು ತಿಳಿಸಿದ್ದಾರೆ.  

ಬದಕಿನ ಸಾರ್ಥಕತೆಗೆ ವಚನಗಳು ಸಹಕಾರಿ : ಬಾರಂದೂರು ಪ್ರಕಾಶ್

ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಮೈಸೂರು, ತಾಲೂಕು ಶರಣ ಸಾಹಿತ್ಯ ಪರಿಷತ್ ವತಿಯಿಂದ ಭದ್ರಾವತಿ ನ್ಯೂಟೌನ್ ಉಂಬ್ಳೆಬೈಲ್ ರಸ್ತೆಯಲ್ಲಿರುವ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ 626ನೇ ವಚನ ಮಂಟಪ ಮತ್ತು ದತ್ತಿ ಹಾಗು ಎಂ.ಎಸ್ ಈಶ್ವರಯ್ಯನವರ ಸ್ಮರಣೆ ಕಾರ್ಯಕ್ರಮದಲ್ಲಿ ಪರಿಷತ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಾರಂದೂರು ಪ್ರಕಾಶ್ ಮಾತನಾಡಿದರು.
    ಭದ್ರಾವತಿ, ಮಾ. ೩೦: ಪ್ರತಿಯೊಬ್ಬರ ಬದುಕು ಸಾರ್ಥಕಗೊಳ್ಳಬೇಕು. ನಾವುಗಳು ಕೈಗೊಳ್ಳುವ ಕಾರ್ಯಗಳು ಇದಕ್ಕೆ ಪೂರಕವಾಗಿರಬೇಕು. ವಚನಗಳು ಈ ನಿಟ್ಟಿನಲ್ಲಿ ಸಹಕಾರಿಯಾಗಿವೆ ಎಂದು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಾರಂದೂರು ಪ್ರಕಾಶ್ ಹೇಳಿದರು.
    ಅವರು ಬುಧವಾರ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಮೈಸೂರು, ತಾಲೂಕು ಶರಣ ಸಾಹಿತ್ಯ ಪರಿಷತ್ ವತಿಯಿಂದ ನ್ಯೂಟೌನ್ ಉಂಬ್ಳೆಬೈಲ್ ರಸ್ತೆಯಲ್ಲಿರುವ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ 626ನೇ ವಚನ ಮಂಟಪ ಮತ್ತು ದತ್ತಿ ಹಾಗು ಎಂ.ಎಸ್ ಈಶ್ವರಯ್ಯನವರ ಸ್ಮರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
    ನಾವು ಬದುಕಿರುವಾಗ ಮಾಡುವ ಕಾರ್ಯಗಳು ನಮ್ಮನ್ನು ಜೀವಂತವಾಗಿ ಉಳಿಸುತ್ತವೆ. ಈಶ್ವರಯ್ಯನವರು ಸಮಾಜಕ್ಕೆ ತಮ್ಮದೇ ಆದ ಕೊಡುಗೆಗಳನ್ನು ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಅವರು ನಮ್ಮೆಲ್ಲರ ಸ್ಮರಣೆಯಲ್ಲಿ ಉಳಿದುಕೊಂಡಿದ್ದಾರೆ. ಶರಣ ಸಾಹಿತ್ಯ ಪರಿಷತ್ ಬದುಕಿನ ಸಾರ್ಥಕತೆಯನ್ನು ಸಾರುವ ನಿಟ್ಟಿನಲ್ಲಿ ಹಾಗು ಶರಣರ ವಿಚಾರಧಾರೆಗಳನ್ನು ಸಮಾಜಕ್ಕೆ ತಿಳಿಸುವ ಕಾಯಕದಲ್ಲಿ ತೊಡಗಿಸಿಕೊಂಡಿದೆ. ಜಿಲ್ಲೆಯಲ್ಲಿ ಪರಿಷತ್ ಕಾರ್ಯ ಚಟುವಟಿಕೆಗಳು ನಿರಂತರವಾಗಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಕ್ರಿಯಾಶೀಲತೆಯೊಂದಿಗೆ ಪರಿಷತ್ ಮುನ್ನಡೆಯಲು ಎಲ್ಲರ ಸಹಕಾರ ಅಗತ್ಯವಿದೆ ಎಂದರು.
    ಪರಿಷತ್ ತಾಲೂಕು ಗೌರವಾಧ್ಯಕ್ಷ ಬಸವನಗೌಡ ಮಾಳಗಿ, ಬಸವಕೇಂದ್ರ ಅಧ್ಯಕ್ಷ ಜಗದೀಶ್ ಕವಿ, ಕದಳಿ ಮಹಿಳಾ ವೇದಿಕೆ ಸಂಚಾಲಕಿ ಹೇಮಾವತಿ ಚಿಗಟೇರಪ್ಪ ಮಾತನಾಡಿದರು.
    ಪರಿಷತ್ ಜಿಲ್ಲಾಧ್ಯಕ್ಷ ಎಚ್.ಎನ್ ಮಹಾರುದ್ರ, ಪರಿಷತ್ ಪ್ರಮುಖರು, ಕದಳಿ ಮಹಿಳಾ ವೇದಿಕೆ ಸದಸ್ಯರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ಜನ್ನಾಪುರ-ಸಿದ್ದಾಪುರ ಕೆರೆ ಅವೈಜ್ಞಾನಿಕ ಕಾಮಗಾರಿ ವಿರೋಧಿಸಿ ಏ.೪ರಂದು ಧರಣಿ ಸತ್ಯಾಗ್ರಹ

ಮೊದಲು ಕೆರೆ ಸರ್ವೇ ನಡೆಸಿ ಒತ್ತುವರಿ ತೆರವುಗೊಳಿಸಿ, ಮಲ-ಮೂತ್ರಗಳಿಂದ ತುಂಬಿರುವ ಹೂಳು ತೆಗೆಯಿರಿ

ಭದ್ರಾವತಿ ನಗರಸಭೆಗೆ ಒಳಪಡುವ ಜನ್ನಾಪುರ-ಸಿದ್ದಾಪುರ ವ್ಯಾಪ್ತಿಯಲ್ಲಿರುವ ಸರ್ವೆ ನಂ.೭೦ರ ಕೆರೆಯನ್ನು ಅಭಿವೃದ್ಧಿಗೊಳಿಸಿವ ನಿಟ್ಟಿನಲ್ಲಿ ಅವೈಜ್ಞಾನಿಕ ಕಾಮಗಾರಿ ಕೈಗೊಳ್ಳಲು ಮುಂದಾಗುತ್ತಿರುವುದನ್ನು ವಿರೋಧಿಸಿ ಜನ್ನಾಪುರ-ಸಿದ್ದಾಪುರ ಕೆರೆ ಸಂರಕ್ಷಣಾ ಸಮಿತಿ ವತಿಯಿಂದ ಬುಧವಾರ ಸಭೆ ನಡೆಸಲಾಯಿತು.
    ಭದ್ರಾವತಿ, ಮಾ. ೩೦: ನಗರಸಭೆಗೆ ಒಳಪಡುವ ಜನ್ನಾಪುರ-ಸಿದ್ದಾಪುರ ವ್ಯಾಪ್ತಿಯಲ್ಲಿರುವ ಸರ್ವೆ ನಂ.೭೦ರ ಕೆರೆಯನ್ನು ಅಭಿವೃದ್ಧಿಪಡಿಸುವ ಮೊದಲು ಒತ್ತುವರಿ ತೆರವು ಮಾಡಿ, ನೂರಾರು ವರ್ಷಗಳಿಂದ ಮಲ-ಮೂತ್ರಗಳಿಂದ ತುಂಬಿಕೊಂಡಿರುವ ಹೂಳನ್ನು ತೆಗೆದು ಅಭಿವೃದ್ಧಿಪಡಿಸಬೇಕೆಂದು ಒತ್ತಾಯಿಸಿ ಏ.೪ರಂದು ತಾಲೂಕು ಕಛೇರಿ ಮುಂಭಾಗ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಜನ್ನಾಪುರ-ಸಿದ್ದಾಪುರ ಕೆರೆ ಸಂರಕ್ಷಣಾ ಸಮಿತಿ ಪ್ರಧಾನ ಸಂಚಾಲಕ ಬಾಲಕೃಷ್ಣ ತಿಳಿಸಿದರು.
    ನಮ್ಮ ಪೂರ್ವಿಕರು ಜನಸಾಮಾನ್ಯರಿಗೆ, ಜಾನುವಾರುಗಳಿಗೆ ಮತ್ತು ರೈತರು ಬೆಳೆ ಬೆಳೆಯಲು ಅನುಕೂಲವಾಗುವಂತೆ ಕೆರೆಕಟ್ಟೆಗಳನ್ನು ನಿರ್ಮಾಣ ಮಾಡಿದ್ದು, ಜನ್ನಾಪುರ-ಸಿದ್ದಾಪುರ ಕೆರೆ ಒಟ್ಟು ೫೨ ಎಕರೆ ವಿಸ್ತೀರ್ಣ ಹೊಂದಿದೆ. ಆದರೆ ತಾಲೂಕು ಆಡಳಿತ ಸರ್ವೆ ಕಾರ್ಯ ನಡೆಸಿ ಕೆರೆ ಜಾಗವನ್ನು ೪೫ ಎಕರೆ ೨೦ ಗುಂಟೆ ಎಂದು ಗುರುತಿಸಿದೆ. ಉಳಿದ ಜಾಗ ಒತ್ತುವರಿಯಾಗಿದ್ದು, ಭೂ ಕಬಳಿಕೆದಾರರನ್ನು ರಕ್ಷಿಸುವ ಹುನ್ನಾರ ನಡೆಸಲಾಗುತ್ತಿದೆ ಎಂದು ಆರೋಪಿಸಿದರು.
    ಪ್ರಸ್ತುತ ಸರ್ವೆ ಕಾರ್ಯ ನಡೆಸಿ ಗುರುತಿಸಲಾಗಿರುವ ೪೫ ಎಕರೆ ೨೦ ಗುಂಟೆ ಜಾಗದಲ್ಲಿ ಅಭಿವೃದ್ಧಿ ಕಾರ್ಯ ಕೈಗೊಳ್ಳುವ ಬದಲು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರ ಕೇವಲ ೩೦ ಎಕರೆ ಜಾಗವನ್ನು ಮಾತ್ರ ಸೀಮಿತಗೊಳಿಸಿದೆ. ಈಗಾಗಲೇ ಟೆಂಡರ್ ಕರೆದು ಕಾಮಗಾರಿ ಆರಂಭಿಸಲು ಮೊದಲನೇ ಕಂತಿನ ಹಣ ಅಂದಾಜು ೪,೪೮,೦೦,೦೦೦ ರು.  ಬಿಡುಗಡೆಗೊಳಿಸಿದೆ. ಇದು ಅವೈಜ್ಞಾನಿಕ ಕಾಮಗಾರಿಯಾಗಿದ್ದು, ಮೊದಲು ೫೨ ಎಕರೆ ಜಾಗವನ್ನು ಗುರುತಿಸಿ ಸರ್ವೆ ಕಾರ್ಯ ನಡೆಸಿ ಒತ್ತುವರಿ ತೆರವುಗೊಳಿಸಬೇಕೆಂದು ಆಗ್ರಹಿಸಿದರು.
    ನೂರಾರು ವರ್ಷಗಳಿಂದ ಈ ಕೆರೆ ಮಲ-ಮೂತ್ರಗಳಿಂದ ತುಂಬಿಕೊಂಡಿದ್ದು, ಕಲುಷಿತಗೊಂಡಿರುವ ಕೆರೆಯಲ್ಲಿ ಹೂಳು ತೆಗೆದು ಸ್ವಚ್ಛಗೊಳಿಸುವ ಕಾರ್ಯ ಮೊದಲು ಕೈಗೊಳ್ಳಬೇಕಾಗಿದೆ. ಆ ನಂತರ ಕಾಮಗಾರಿ ಆರಂಭಿಸಿ ರೈತರಿಗೆ ಅನುಕೂಲ ಕಲ್ಪಿಸಿಕೊಡಬೇಕೆಂದು ಒತ್ತಾಯಿಸಿದರು.
    ಕೆರೆ ಅಭಿವೃದ್ಧಿ ಹೆಸರಿನಲ್ಲಿ ಅವೈಜ್ಞಾನಿಕವಾಗಿ ಕಾಮಗಾರಿ ನಡೆಸಲು ಮುಂದಾಗಿರುವ ತಾಲೂಕು ಆಡಳಿತ ಹಾಗು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ನಡೆಯನ್ನು ಖಂಡಿಸಿ ಹೋರಾಟ ನಡೆಸಲಾಗುತ್ತಿದ್ದು, ಕೆರೆಯನ್ನು ಪೂರ್ಣಪ್ರಮಾಣದಲ್ಲಿ ಸಂರಕ್ಷಿಸುವುದು ಮೊದಲ ಆದ್ಯತೆಯಾಗಿದೆ. ಈ ಹಿನ್ನಲೆಯಲ್ಲಿ  ಏ.೪ರಂದು ತಾಲೂಕು ಕಛೇರಿ ಮುಂಭಾಗ ಧರಣಿ ಸತ್ಯಾಗರಹ ನಡೆಸಲಾಗುತ್ತಿದೆ ಎಂದರು.
    ನಗರಸಭಾ ಸದಸ್ಯರಾದ ಆರ್. ಮೋಹನ್‌ಕುಮಾರ್, ರಿಯಾಜ್ ಅಹಮದ್, ಪ್ರಮುಖರಾದ ಚನ್ನಪ್ಪ, ಕೃಷ್ಣೇಗೌಡ, ವಿಶ್ವೇಶ್ವರ ಗಾಯಕ್ವಾಡ್, ಎನ್. ರಾಮಕೃಷ್ಣ, ಕೆ. ಮಂಜುನಾಥ್, ರಾಮಚಂದ್ರ, ಶ್ರೀನಿವಾಸ್, ಜಿ. ರಾಜು, ಗಿರಿನಾಯ್ಡು, ವಿಲ್ಸನ್ ಬಾಬು, ವಿನೋದ್, ವೆಂಕಟರಮಣಶೆಟ್ಟಿ, ಹನುಮಂತಪ್ಪ, ಮುದ್ದಪ್ಪ, ರಾಜೇಂದ್ರ, ಹಾವು ಮಂಜ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Tuesday, March 29, 2022

ಅನಧಿಕೃತವಾಗಿ ಒತ್ತುವರಿಯಾಗಿದ್ದ ಸರ್ಕಾರಿ ಜಮೀನು ತೆರವು ಕಾರ್ಯಾಚರಣೆ : ೨.೩೬ ಎಕರೆ ಜಮೀನು ವಶಕ್ಕೆ

ಭದ್ರಾವತಿ ತಾಲೂಕಿನ ತಾರೀಕಟ್ಟೆ ಗ್ರಾಮದಲ್ಲಿ ಒತ್ತುವರಿಯಾಗಿದ್ದ ಸರ್ಕಾರಿ ಜಮೀನು ತೆರವು ಕಾರ್ಯಾಚರಣೆ ನಡೆಸುವಲ್ಲಿ ತಹಸೀಲ್ದಾರ್ ಆರ್. ಪ್ರದೀಪ್ ನೇತೃತ್ವದ ತಂಡ ಯಶಸ್ವಿಯಾಯಿತು.
    ಭದ್ರಾವತಿ, ಮಾ. ೨೯: ತಾಲೂಕಿನ ತಾರೀಕಟ್ಟೆ ಗ್ರಾಮದಲ್ಲಿ ಒತ್ತುವರಿಯಾಗಿದ್ದ ಸರ್ಕಾರಿ ಜಮೀನು ತೆರವು ಕಾರ್ಯಾಚರಣೆ ನಡೆಸುವಲ್ಲಿ ತಹಸೀಲ್ದಾರ್ ಆರ್. ಪ್ರದೀಪ್ ನೇತೃತ್ವದ ತಂಡ ಯಶಸ್ವಿಯಾಗಿದೆ.
    ಗ್ರಾಮದ ಸರ್ವೆ ನಂ.೩೩ರಲ್ಲಿ ೨.೩೬ ಎಕರೆ ಸರ್ಕಾರಿ ಜಮೀನು ಅನಧಿಕೃತವಾಗಿ ಒತ್ತುವರಿಯಾಗಿದ್ದು, ಅಗತ್ಯ ದಾಖಲೆಗಳೊಂದಿಗೆ ಸರ್ವೆ ಕಾರ್ಯ ನಡೆಸಿ ಒತ್ತುವರಿ ತೆರವುಗೊಳಿಸುವ ಮೂಲಕ ಸರ್ಕಾರದ ವಶಕ್ಕೆ ಪಡೆದು ಸರ್ಕಾರದ ಸ್ವತ್ತು ಎಂಬ ನಾಮಫಲಕ ಅಳವಡಿಸಲಾಯಿತು.
    ಕಾರ್ಯಾಚರಣೆಯಲ್ಲಿ ಉಪತಹಸೀಲ್ದಾರ್ ಮಂಜಾನಾಯ್ಕ, ಗ್ರಾಮಾಂತರ ಪೊಲೀಸ್ ಇನ್ಸ್‌ಪೆಕ್ಟರ್ ಚೈತನ್ಯ, ಕಸಬಾ ಹೋಬಳಿ ರಾಜಸ್ವ ನಿರೀಕ್ಷಕರು, ಅರಳಿಕೊಪ್ಪ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಗ್ರಾಮ ಲೆಕ್ಕಿಗರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ಅಗತ್ಯ ವಸ್ತುಗಳ ಬೆಲೆ ಏರಿಕೆ, ಬಡವರ್ಗದವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿ

ಶಶಿಕುಮಾರ್ ಎಸ್. ಗೌಡ ಏಕಾಂಗಿ ಹೋರಾಟ ನಡೆಸಿ ಪ್ರಧಾನಿಗೆ ಮನವಿ

ದೇಶದಲ್ಲಿ ಅಗತ್ಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಈ ಹಿನ್ನಲೆಯಲ್ಲಿ ಬಡ ವರ್ಗದ ಜನರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿಕೊಡುವಂತೆ ಆಗ್ರಹಿಸಿ ಜನತಾದಳ(ಸಂಯುಕ್ತ) ಕರ್ನಾಟಕ ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್. ಗೌಡ ಮಂಗಳವಾರ ಭದ್ರಾವತಿ ತಾಲೂಕು ಕಛೇರಿ ಮಿನಿ ವಿಧಾನಸೌಧ ಮುಂಭಾಗ ಏಕಾಂಗಿ ಹೋರಾಟ ನಡೆಸಿದರು.
    ಭದ್ರಾವತಿ, ಮಾ. ೨೯: ದೇಶದಲ್ಲಿ ಅಗತ್ಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಈ ಹಿನ್ನಲೆಯಲ್ಲಿ ಬಡ ವರ್ಗದ ಜನರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿಕೊಡುವಂತೆ ಆಗ್ರಹಿಸಿ ಜನತಾದಳ(ಸಂಯುಕ್ತ) ಕರ್ನಾಟಕ ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್. ಗೌಡ ಮಂಗಳವಾರ ತಾಲೂಕು ಕಛೇರಿ ಮಿನಿ ವಿಧಾನಸೌಧ ಮುಂಭಾಗ ಏಕಾಂಗಿ ಹೋರಾಟ ನಡೆಸಿದರು.
ಅಡುಗೆ ಅನಿಲ, ಅಡುಗೆ ಎಣ್ಣೆ, ವಿದ್ಯುತ್ ದರ, ಮೊಬೈಲ್ ಕರೆನ್ಸಿ ಮತ್ತು ಪೆಟ್ರೋಲ್ ದರ ದಿನದಿಂದ ದಿನಕ್ಕೆ ಮಿತಿಮೀರಿ ಏರಿಕೆಯಾಗುತ್ತಿದ್ದು, ಇದರಿಂದಾಗಿ ದೇಶದಲ್ಲಿ ಬಿಪಿಎಲ್ ಪಡಿತರ ಚೀಟಿ ಹೊಂದಿರುವ ೩೩ ಕೋಟಿ ಕುಟುಂಬದ ೮೦ ಕೋಟಿ ಜನರು ಜೀವನ ನಡೆಸುವುದು ಕಷ್ಟಕರವಾಗಿದೆ. ಬಡವರ್ಗದವರು ದುಡಿಯುತ್ತಿರುವ ಹಣ ಅಗತ್ಯ ವಸ್ತುಗಳ ಖರೀದಿಗೆ ವ್ಯಯವಾಗುತ್ತಿದ್ದು, ಇದರಿಂದಾಗಿ ಭವಿಷ್ಯದ ಬಗ್ಗೆ ಯೋಚನೆ ಮಾಡದ ಸ್ಥಿತಿ ನಿರ್ಮಾಣವಾಗಿದೆ. ಪರಿಸ್ಥಿತಿ ಇದೆ ರೀತಿ ಮುಂದುವರೆದಲ್ಲಿ ಒಪ್ಪೊತ್ತಿನ ಊಟಕ್ಕೂ ಪರದಾಡುವ ಸ್ಥಿತಿ ನಿರ್ಮಾಣವಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.
    ಕಳೆದ ಸುಮಾರು ೨ ವರ್ಷಗಳಿಂದ ಮಹಾಮಾರಿ ಕೊರೋನಾ ಪರಿಣಾಮ ದೇಶದಲ್ಲಿ ಬಡವರ್ಗದವರು ಆರ್ಥಿಕವಾಗಿ ಸಾಕಷ್ಟು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಈ ಹಿನ್ನಲೆಯಲ್ಲಿ ಬಡವರ್ಗದವರಿಗೆ ಅಗತ್ಯ ವಸ್ತುಗಳನ್ನು ರಿಯಾಯಿತಿ ದರದಲ್ಲಿ ನೀಡುವ ಮೂಲಕ ಅವರ ಹಿತ ಕಾಪಾಡಬೇಕೆಂದು ಮನವಿ ಮಾಡಿದರು.
    ಹೋರಾಟದ ನಂತರ ತಹಸೀಲ್ದಾರ್ ಆರ್. ಪ್ರದೀಪ್ ಮೂಲಕ ಪ್ರಧಾನ ಮಂತ್ರಿಗಳಿಗೆ ಶಶಿಕುಮಾರ್ ಎಸ್. ಗೌಡ ಮನವಿ ಸಲ್ಲಿಸಿದರು.

ಕನ್ನಡ ಸರ್ಕಾರಿ ಶಾಲೆ ಉಳಿವಿಗೆ ಹೋರಾಟ ಅನಿವಾರ್ಯ : ಡಿ. ಮಂಜುನಾಥ್

ಭದ್ರಾವತಿ ನ್ಯೂಟೌನ್ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ತಾಲೂಕು ಘಟಕದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ವಿಶ್ವ ಮಹಿಳಾ ದಿನಾಚರಣೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸಂಚಾರಿ ಪೊಲೀಸ್ ಠಾಣಾಧಿಕಾರಿ ಕವಿತರನ್ನು ಸನ್ಮಾನಿಸಿ ಗೌರವಿಸಲಾಯಿತು.
    ಭದ್ರಾವತಿ, ಮಾ. ೨೯: ಕನ್ನಡ ಸರ್ಕಾರಿ ಶಾಲೆಗಳನ್ನು ಉಳಿಸಿಕೊಳ್ಳಲು ಇಂದು ಹೋರಾಟ ನಡೆಸುವ ಅನಿವಾರ್ಯತೆ ಉಂಟಾಗಿರುವುದು ವಿಷಾದನೀಯ ಸಂಗತಿಯಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಅಧ್ಯಕ್ಷ ಡಿ. ಮಂಜುನಾಥ್ ಹೇಳಿದರು.
    ಅವರು ನ್ಯೂಟೌನ್ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ತಾಲೂಕು ಘಟಕದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ವಿಶ್ವ ಮಹಿಳಾ ದಿನಾಚರಣೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ರಾಜ್ಯದಲ್ಲಿ ಕನ್ನಡಪರ ಸಂಘಟನೆಗಳು ಹೆಚ್ಚಿನ ಸಂಖ್ಯೆಯಲ್ಲಿದ್ದು, ಆದರೂ ಸಹ ನೆಲ-ಜಲ-ಭಾಷೆಗೆ ಸಂಬಂಧಿಸಿದಂತೆ ಬಹುತೇಕ ಸಮಸ್ಯೆಗಳು ಇಂದಿಗೂ ಜೀವಂತವಾಗಿ ಉಳಿದುಕೊಂಡಿವೆ. ಕನ್ನಡ ನಾಡಿನಲ್ಲಿ ಕನ್ನಡಿಗರು ಪ್ರತಿಯೊಂದಕ್ಕೂ ಹೋರಾಟ ನಡೆಸುತ್ತಿರುವುದು ವಿಪರ್ಯಾಸದ ಸಂಗತಿಯಾಗಿದೆ. ಮಲೆನಾಡಿನ ಭಾಗದಲ್ಲಿಯೇ ಹೆಚ್ಚಿನ ಪ್ರಮಾಣದಲ್ಲಿ ಕನ್ನಡ ಸರ್ಕಾರಿ ಶಾಲೆಗಳು ಮುಚ್ಚಿರುವುದು ನೋವಿನ ಸಂಗತಿಯಾಗಿದೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಹೋರಾಟ ನಡೆಸುವ ಅಗತ್ಯವಿದ್ದು, ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಜಾಗೃತರಾಗಬೇಕಾಗಿದೆ ಎಂದರು.
    ಸಂಚಾರಿ ಪೊಲೀಸ್ ಠಾಣಾಧಿಕಾರಿ ಕವಿತ ಮಾತನಾಡಿ, ಪ್ರಸ್ತುತ ಮಹಿಳೆಯರು ಯಾವುದಕ್ಕೂ ಭಯಪಡುವ ಅಗತ್ಯವಿಲ್ಲ. ಶೋಷಣೆಗೆ ಒಳಗಾದ ಮಹಿಳೆಯರು ತಮಗೆ ಆದ ಅನ್ಯಾಯದ ವಿರುದ್ಧ ಹೋರಾಟ ನಡೆಸಬೇಕು. ಇದಕ್ಕೆ ಪೂರಕವಾದ ರಕ್ಷಣೆ, ಕಾನೂನು ಭದ್ರತೆ ಸೇರಿದಂತೆ ಎಲ್ಲಾ ರೀತಿಯ ನೆರವು ಇಂದು ಲಭ್ಯವಿದ್ದು, ಇವುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಪೋಷಕರು ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ವಾಹನ ಚಾಲನೆ ಮಾಡಲು ಅವಕಾಶ ನೀಡಬಾರದು. ಪ್ರತಿಯೊಬ್ಬರು ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಬಳಸುವ ಮೂಲಕ ಅಪಘಾತಗಳ ನಿಯಂತ್ರಣಕ್ಕೆ ಸಹಕರಿಸಬೇಕೆಂದರು.
    ಶಿವಮೊಗ್ಗ ಕಸ್ತೂರ್ಬಾ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಡಾ.ಬಿ.ಎನ್ ತಂಬೂಳಿ ಉಪನ್ಯಾಸ ನಡೆಸಿಕೊಟ್ಟರು. ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ತಾಲೂಕು ಅಧ್ಯಕ್ಷೆ ಎಂ.ಎಸ್ ಸುಧಾಮಣಿ ಅಧ್ಯಕ್ಷತೆ ವಹಿಸಿದ್ದರು.
ನಗರಸಭೆ ಉಪಾಧ್ಯಕ್ಷ ಚನ್ನಪ್ಪ, ಕರ್ನಾಟಕ ಜಾನಪದ ಪರಿಷತ್ ತಾಲೂಕು ಅಧ್ಯಕ್ಷ ಕೋಡ್ಲು ಯಜ್ಞಯ್ಯ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೋಗಲೂರು ತಿಪ್ಪೇಸ್ವಾಮಿ, ಉದ್ಯಮಿ ಬಿ.ಕೆ ಜಗನ್ನಾಥ್, ಸಿದ್ದೋಜಿರಾವ್, ಮಂಜಪ್ಪ, ಸುಮತಿ ಕಾರಂತ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಮಾ.೩೦ರಂದು ಎಂ.ಎಸ್ ಈಶ್ವರಯ್ಯನವರ ಸ್ಮರಣೆ, ದತ್ತಿ ಕಾರ್ಯಕ್ರಮ


ಎಂ.ಎಸ್ ಈಶ್ವರಯ್ಯ
    ಭದ್ರಾವತಿ, ಮಾ. ೨೯: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್, ಮೈಸೂರು ಹಾಗು ತಾಲೂಕು ಶರಣ ಸಾಹಿತ್ಯ  ಪರಿಷತ್ ವತಿಯಿಂದ ಎಂ.ಎಸ್ ಈಶ್ವರಯ್ಯನವರ ಸ್ಮರಣೆ, ೬೨೬ನೇ ವಚನ ಮಂಟಪ ಮತ್ತು ದತ್ತಿ ಕಾರ್ಯಕ್ರಮ ಮಾ.೩೦ರಂದು ನ್ಯೂಟೌನ್ ಉಂಬ್ಳೆಬೈಲ್ ರಸ್ತೆಯಲ್ಲಿರುವ ಲಯನ್ಸ್ ಕ್ಲಬ್‌ನಲ್ಲಿ ಹಮ್ಮಿಕೊಳ್ಳಲಾಗಿದೆ.
    ಶರಣ ಸಾಹಿತ್ಯಪರಿಷತ್ ತಾಲೂಕು ಅಧ್ಯಕ್ಷ ಎಂ. ವಿರುಪಾಕ್ಷಪ್ಪ, ಅಧ್ಯಕ್ಷತೆ ವಹಿಸಲಿದ್ದು, ಶರಣ ಸಾಹಿತ್ಯ ಪರಿಷತ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಾರಂದೂರು ಪ್ರಕಾಶ್, ತಾಲೂಕು ಗೌರವಾಧ್ಯಕ್ಷ ಬಸವನಗೌಡ ಮಾಳಗಿ, ಕದಳಿ ಮಹಿಳಾ ವೇದಿಕೆ ಸಂಚಾಲಕಿ ಹೇಮಾವತಿ ಚಿಗಟೇರಪ್ಪ ಮತ್ತು ತರೀಕೆರೆ ರಸ್ತೆಯ ಬಸವಕೇಂದ್ರದ ಅಧ್ಯಕ್ಷ ಜಗದೀಶ್ ಕವಿ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು.

ಮಾ.೩೦ರಂದು ಉಚಿತ ನೇತ್ರ ಪರೀಕ್ಷೆ, ನೇತ್ರದಾನ ನೋಂದಣಿ ಶಿಬಿರ

    ಭದ್ರಾವತಿ, ಮಾ. ೨೯: ಬಾರಂದೂರು ವಂದೇ ಮಾತರಂ ಟ್ರಸ್ಟ್ ವತಿಯಿಂದ ತಾಲೂಕಿನ ಅಂತರಗಂಗೆ-ಕೆ.ಎಚ್ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ಶಿವಮೊಗ್ಗ ಶಂಕರ ಕಣ್ಣಿನ ಆಸ್ಪತ್ರೆ, ಜಿಲ್ಲಾ ಅಂಧತ್ವ ನಿವಾರಣ ಸಂಸ್ಥೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ತಾಲೂಕು ವೈದ್ಯಾಧಿಕಾರಿಗಳ ಕಛೇರಿ ಸಹಯೋಗದೊಂದಿಗೆ ಮಾ.೩೦ರಂದು ಬೆಳಿಗ್ಗೆ ೯ ಗಂಟೆಯಿಂದ ಮಧ್ಯಾಹ್ನ ೧ ಗಂಟೆವರೆಗೆ ಅಂತರಗಂಗೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಉಚಿತ ನೇತ್ರ ಪರೀಕ್ಷೆ ಮತ್ತು ಶಸ್ತ್ರ ಚಿಕಿತ್ಸಾ ಹಾಗು ಸ್ವಯಂ ಪ್ರೇರಿತ ನೇತ್ರದಾನ ನೋಂದಣಿ ಶಿಬಿರ ಆಯೋಜಿಸಲಾಗಿದೆ.
    ಅಂತರಗಂಗೆ, ಕೆ.ಎಚ್ ನಗರ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ ವಂದೇ ಮಾತರಂ ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷ ಬಿ.ಎ ಪ್ರಸನ್ನಕುಮಾರ್, ಮೊ: ೮೮೬೧೬೪೭೦೪೬ ಅಥವಾ ಟ್ರಸ್ಟ್ ಉಪಾಧ್ಯಕ್ಷ ಬಿ. ರೇಣೋಜಿರಾವ್, ಮೊ: ೯೬೨೦೪೦೩೨೯೯ ಸಂಖ್ಯೆಗೆ ಕರೆ ಮಾಡಬಹುದಾಗಿದೆ.

ಮಂಜುಷಾ ವಸ್ತು ಸಂಗ್ರಹಾಲಯ ಅಲಂಕರಿಸಿದ ಸಚಿನ್ ಎಂ. ವರ್ಣೇಕರ್ ಕಲಾಕೃತಿಗಳು

ಕಾರ್ಗಿಲ್ ಯೋಧರ ಸ್ಮರಣಿಕೆ, ವರ್ಡ್ ಕಪ್ ಕಲಾಕೃತಿ ಡಾ. ವಿರೇಂದ್ರ ಹೆಗ್ಡೆಯವರಿಗೆ ಹಸ್ತಾಂತರ

ಭದ್ರಾವತಿ ಹಳೇನಗರದ ನಿವಾಸಿ, ಸೂಕ್ಷ್ಮ ಕೆತ್ತನೆಗಳ ಕಲಾವಿದ ಸಚಿನ್ ಎಂ. ವರ್ಣೇಕರ್‌ರವರ ಎರಡು ಕಲಾಕೃತಿಗಳು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿರುವ ಮಂಜುಷಾ ವಸ್ತು ಸಂಗ್ರಹಾಲಯದಲ್ಲಿ ಸ್ಥಾನ ಪಡೆದುಕೊಂಡಿವೆ. ಕಲಾಕೃತಿಗಳನ್ನು ಧರ್ಮಾಧಿಕಾರಿ ಡಾ. ವಿರೇಂದ್ರ ಹೆಗ್ಡೆಯವರಿಗೆ ಹಸ್ತಾಂತರಿಸಲಾಯಿತು.   
 ಭದ್ರಾವತಿ, ಮಾ. ೨೯: ಹಳೇನಗರದ ನಿವಾಸಿ, ಸೂಕ್ಷ್ಮ ಕೆತ್ತನೆಗಳ ಕಲಾವಿದ ಸಚಿನ್ ಎಂ. ವರ್ಣೇಕರ್‌ರವರ ಎರಡು ಕಲಾಕೃತಿಗಳು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿರುವ ಮಂಜುಷಾ ವಸ್ತು ಸಂಗ್ರಹಾಲಯದಲ್ಲಿ ಸ್ಥಾನ ಪಡೆದುಕೊಂಡಿವೆ.
    ವರ್ಣೇಕರ್‌ರವರು ಈ ಹಿಂದೆ ಕಾರ್ಗಿಲ್ ಯೋಧರ ಸ್ಮರಣೆಗಾಗಿ ಅತಿ ಚಿಕ್ಕದಾದ ೦.೮ ಇಂಚು ಎತ್ತರ ಮತ್ತು ೦.೨೪೦ ಗ್ರಾಂ. ತೂಕದ ಬಂಗಾರದಿಂದ ಕಲಾಕೃತಿ ರಚಿಸಿದ್ದರು. ಇದೆ ರೀತಿ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಗಾಗಿ ೫.೨೦ ಎಂ.ಎಂ ಎತ್ತರ ಮತ್ತು ೦.೦೩೮ ಗ್ರಾಂ ತೂಕದ ಬಂಗಾರದ ವರ್ಡ್ ಕಪ್ ಕಲಾಕೃತಿ ರಚಿಸಿದ್ದರು. ಈ ಎರಡು ಕಲಾಕೃತಿಗಳು ಇದೀಗ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿರುವ ಮಂಜುಷಾ ವಸ್ತು ಸಂಗ್ರಹಾಲಯದಲ್ಲಿ ಅಲಂಕರಿಸಿವೆ.
    ಶ್ರೀ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವಿರೇಂದ್ರ ಹೆಗ್ಡೆಯವರಿಗೆ ಈ ಎರಡು ಕಲಾಕೃತಿಗಳನ್ನು ವರ್ಣೇಕರ್ ಹಸ್ತಾಂತರಿಸುವ ಮೂಲಕ ಪ್ರಶಂಸನಾ ಪತ್ರ ಪಡೆದುಕೊಂಡರು.
    ವರ್ಣೇಕರ್‌ರವರು ಅತಿ ಚಿಕ್ಕದಾದ ಶಿವಲಿಂಗ, ಅಯೋಧ್ಯೆ ರಾಮಮಂದಿರ, ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ, ಧರ್ಮಸ್ಥಳ ಶ್ರೀ ಮಂಜುನಾಥಸ್ವಾಮಿ ದೇವಸ್ಥಾನ ಸೇರಿದಂತೆ ಹಲವು ಕಲಾಕೃತಿಗಳನ್ನು ರಚಿಸಿದ್ದಾರೆ. ಅಲ್ಲದೆ ಇಂಟರ್‌ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಸ್ ಪ್ರಶಸ್ತಿ ಪುರಸ್ಕೃತರಾಗಿದ್ದಾರೆ.

Monday, March 28, 2022

ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಮುಷ್ಕರ : ಎಲ್‌ಐಸಿ ಖಾಸಗೀಕರಣಗೊಳಿಸದಿರಿ

ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ ಭದ್ರಾವತಿಯಲ್ಲಿ ಭಾರತೀಯ ಜೀವ ವಿಮಾ ನಿಗಮದ ಶಾಖಾ ಕಛೇರಿ ಮುಂಭಾಗ ಮುಷ್ಕರ ನಡೆಸಲಾಯಿತು.
    ಭದ್ರಾವತಿ, ಮಾ. ೨೮: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ ನಗರದ ಭಾರತೀಯ ಜೀವ ವಿಮಾ ನಿಗಮದ ಶಾಖಾ ಕಛೇರಿ ಮುಂಭಾಗ ಮುಷ್ಕರ ನಡೆಸಲಾಯಿತು.
    ಪ್ರಮುಖರು ಮಾತನಾಡಿ, ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸುವ ಜೊತೆಗೆ ಜೀವ ವಿಮಾ ನಿಗಮವನ್ನು ಸರ್ಕಾರಿ ಸ್ವಾಮ್ಯದಲ್ಲಿಯೇ ಉಳಿಸಬೇಕು. ಯಾವುದೇ ಕಾರಣಕ್ಕೂ ಖಾಸಗೀಕರಣಗೊಳಿಸಬಾರದು ಎಂದು ಆಕ್ರೋಶ ವ್ಯಕ್ತಪಡಿಸಿದರು.
ತಕ್ಷಣ ಕೇಂದ್ರ ಸರ್ಕಾರ ಕಾರ್ಮಿಕ ವಿರೋಧಿ ನೀತಿಗಳನ್ನು ಹಿಂಪಡೆಯುವ ಮೂಲಕ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು.
    ಮುಷ್ಕರದಲ್ಲಿ ಯೇಸುದಾಸ್, ಕೆ.ಜೆ ವಿಕ್ರಾಂತ್, ಬಿ.ಜಿ ಜಯಕುಮಾರ್, ಕೆ. ಮೋಹನ್, ಕೆ.ಟಿ ನಾಗರಾಜ್, ಉಷಾದೇವಿ, ಶಶಿಕಲಾ, ಎಸ್. ಸುಮಾ ಮತ್ತು ಭಾಗ್ಯಲತಾ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಮುಷ್ಕರ

ವಿವಿಧ ಬೇಡಿಕೆ ಈಡೇರಿಕೆಗೆ ಅಂಚೆ ನೌಕರರ ಆಗ್ರಹ

ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ ಭದ್ರಾವತಿ ಪ್ರಧಾನ ಅಂಚೆ ಕಛೇರಿ ಮುಂಭಾಗ ಅಖಿಲ ಭಾರತ ಅಂಚೆ ನೌಕರರ ಸಂಘಗಳು, ಗ್ರೂಪ್ 'ಸಿ' ಪೋಸ್ಟ್‌ಮ್ಯಾನ್/ಎಂಟಿಎಸ್ ಮತ್ತು ಅಖಿಲ ಭಾರತ ಗ್ರಾಮೀಣ ಅಂಚೆ ನೌಕರರ ಸಂಘದ ವತಿಯಿಂದ ಸೋಮವಾರ ಮುಷ್ಕರ ನಡೆಸಲಾಯಿತು.
    ಭದ್ರಾವತಿ, ಮಾ. ೨೮: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ ನಗರದ ಪ್ರಧಾನ ಅಂಚೆ ಕಛೇರಿ ಮುಂಭಾಗ ಅಖಿಲ ಭಾರತ ಅಂಚೆ ನೌಕರರ ಸಂಘಗಳು, ಗ್ರೂಪ್ 'ಸಿ' ಪೋಸ್ಟ್‌ಮ್ಯಾನ್/ಎಂಟಿಎಸ್ ಮತ್ತು ಅಖಿಲ ಭಾರತ ಗ್ರಾಮೀಣ ಅಂಚೆ ನೌಕರರ ಸಂಘದ ವತಿಯಿಂದ ಸೋಮವಾರ ಮುಷ್ಕರ ನಡೆಸಲಾಯಿತು.
    ಪ್ರಮುಖರು ಮಾತನಾಡಿ, ಕಾರ್ಮಿಕ ವರ್ಗಕ್ಕೆ ನೀಡುವ ಸೌಲಭ್ಯಗಳ ವಿತರಣೆಯಲ್ಲಿನ ಹೊಸ ನೀತಿಗಳು ನಿಜಕ್ಕೂ ಕಾರ್ಮಿಕ ವರ್ಗಕ್ಕೆ ಮಾರಕವಾಗಿವೆ. ಸರ್ಕಾರದ ಖಾಸಗೀಕರಣದ ನೀತಿಯಿಂದಾಗಿ ಅನೇಕ ಲಾಭದಾಯಕ ಬ್ಯಾಂಕ್‌ಗಳನ್ನು ವಿಲೀನಗೊಳಿಸಿ ಮಾರಾಟ ಮಾಡಲಾಗುತ್ತಿದೆ. ಈಗಾಗಲೇ ೩೨ ಸರ್ಕಾರಿ ಇಲಾಖೆಗಳ ಖಾಸಗೀಕರಣಕ್ಕೆ ಮುನ್ನುಡಿ ಬರೆಯಲಾಗಿದೆ ಎಂದು ಆರೋಪಿಸಿದರು.
    ಅಂಚೆ ಇಲಾಖೆಯಲ್ಲಿ ಸಾವಿರಾರು ಹುದ್ದೆಗಳು ಖಾಲಿ ಇದ್ದರೂ ಸಹ ಭರ್ತಿಮಾಡದೆ ವಿನಾಕಾರಣ ನಿರುದ್ಯೋಗ ಸಮಸ್ಯೆ ಸೃಷ್ಟಿಸಲಾಗುತ್ತಿದೆ. ಈಗಾಗಲೇ ದೆಹಲಿ ದಕ್ಷಿಣ ವಿಭಾಗದಲ್ಲಿ ಅಂಚೆ ಸೇವೆ ಬಟವಾಡೆಗಾಗಿ ಹೊರಗುತ್ತಿಗೆ ಆದೇಶ ಹೊರಡಿಸಲಾಗಿದೆ. ಇದರಿಂದ ಅಂಚೆ ಇಲಾಖೆ ಸಹ ಭವಿಷ್ಯದಲ್ಲಿ ಖಾಸಗೀಕರಣಗೊಳ್ಳುವ ಭೀತಿ ಎದುರಿಸುವಂತಾಗಿದೆ ಎಂದು ದೂರಿದರು.
    ಎನ್‌ಪಿಎಸ್ ರದ್ದು ಮಾಡಿ ಹಳೆಯ ಪಿಂಚಣಿ ನೀತಿ ಜಾರಿಗೊಳಿಸಬೇಕು. ಜನವರಿ ೨೦೨೦ರಿಂದ ಜೂನ್ ೨೦೨೧ರ ವರೆಗೆ ತಡೆಹಿಡಿಯಲಾದ ಡಿಎ/ಡಿಆರ್ ಬಾಕಿ ತಕ್ಷಣ ಪಾವತಿಸಬೇಕು. ಗ್ರಾಮೀಣ ಡಾಕ್ ಸೇವಕರಿಗೆ ನಾಗರೀಕ ಸೇವಕ ಸ್ಥಾನಮಾನ ನೀಡುವ ಜೊತೆಗೆ ಸೇವೆಯನ್ನು ಕ್ರಮ ಬದ್ದಗೊಳಿಸಬೇಕು. ಗ್ರಾಮೀಣ ಅಂಚೆ ನೌಕರರಿಗೆ ೧೮೦ ದಿನಗಳ ಗಳಿಕೆ ರಜೆಯನ್ನು ಉಳಿಸಿಕೊಳ್ಳಲು ಅವಕಾಶ ಕೊಡಬೇಕು. ಪೆನ್ಸನ್ ಸೌಲಭ್ಯ ನೀಡಬೇಕು. ಗುಂಪು ವಿಮೆಯನ್ನು ರು.೫ ಲಕ್ಷಕ್ಕೆ ಹೆಚ್ಚಿಸಬೇಕು. ಹಿರಿಯ ನೌಕರರಿಗೆ ಕಮಲೇಶ್ ಚಂದ್ರ ವರದಿಯಂತೆ ಎಂಎಸಿಪಿ ನೀಡಬೇಕು ಹಾಗು ವೈದ್ಯಕೀಯ ಸೌಲಭ್ಯ ಕಲ್ಪಿಸಬೇಕೆಂದು ಆಗ್ರಹಿಸಲಾಯಿತು.
    ಗ್ರೂಪ್ 'ಸಿ' ಎಐಪಿಇಯು ಸಹ ಕಾರ್ಯದರ್ಶಿ ಎಂ.ಎಚ್ ಕುಮಾರ್, ಎಐಜಿಡಿಎಸ್‌ಯು ಖಜಾಂಚಿ ಎಚ್.ವಿ ರಾಜ್‌ಕುಮಾರ್, ಎಐಪಿಇಯು ಪೋಸ್ಟ್ ಮ್ಯಾನ್ & ಎಂಟಿಎಸ್ ಉಪಾಧ್ಯಕ್ಷ ಡಿ. ಗೋವಿಂದರಾಜು, ಸಹ ಕಾರ್ಯದರ್ಶಿ ಉದಯಾಚಾರ್, ಗ್ರೂಪ್ 'ಸಿ' ಎಐಪಿಇಯು ನಾಗರಾಜ್ ಪೂಜಾರ್ ಮತ್ತು ಪ್ರಸನ್ನ ಕುಮಾರ್ ಸೇರಿದಂತೆ ಪ್ರಮುಖರು, ಅಂಚೆ ನೌಕರರು ಮುಷ್ಕರದಲ್ಲಿ ಪಾಲ್ಗೊಂಡಿದ್ದರು.


ಎಸ್‌ಎಸ್‌ಎಲ್‌ಸಿ ಪರೀಕ್ಷೆ : ಮೊದಲ ದಿನ ೪೩೭೭ ವಿದ್ಯಾರ್ಥಿಗಳು ಹಾಜರು, ೧೧೬ ವಿದ್ಯಾರ್ಥಿಗಳು ಗೈರು

    

ಭದ್ರಾವತಿ ನ್ಯೂಟೌನ್ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಮೊದಲ ದಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ಆಗಮಿಸಿದ್ದ ವಿದ್ಯಾರ್ಥಿಗಳು.
    ಭದ್ರಾವತಿ, ಮಾ. ೨೮: ತಾಲೂಕಿನಲ್ಲಿ ಮೊದಲ ದಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಯಶಸ್ವಿಯಾಗಿ ನಡೆದಿದ್ದು, ೪೩೭೭ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ತಿಳಿಸಿದರು.
    ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಮೊದಲ ದಿನ ಪ್ರಥಮ ಭಾಷೆ ಪರೀಕ್ಷೆ ನಡೆದಿದ್ದು, ಒಟ್ಟು ೪೪೯೩ ವಿದ್ಯಾರ್ಥಿಗಳ ಪೈಕಿ ೪೩೭೭ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ೧೧೬ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.
    ೪೩೬೨ ವಿದ್ಯಾರ್ಥಿಗಳು ಮೊದಲ ಬಾರಿಗೆ  ಹಾಗು ೧೫ ವಿದ್ಯಾರ್ಥಿಗಳು ಮರು ಪರೀಕ್ಷೆ ಬರೆದಿದ್ದು, ವಿಶೇಷ ಕೊಠಡಿಯಲ್ಲಿ ಓರ್ವ ವಿದ್ಯಾರ್ಥಿ ಪರೀಕ್ಷೆಗೆ ಹಾಜರಾಗುವ ಮೂಲಕ ಯಾವುದೇ ಗೊಂದಲಗಳು ಇಲ್ಲದೆ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಒಟ್ಟು ೧೬ ಪರೀಕ್ಷಾ ಕೇಂದ್ರಗಳ ಪೈಕಿ ಪೂರ್ಣಪ್ರಜಾ ವಿದ್ಯಾಸಂಸ್ಥೆಯಲ್ಲಿ ೧ ಖಾಸಗಿ ಖಾಸಗಿ ಪರೀಕ್ಷಾ ಕೇಂದ್ರ ತೆರೆಯಲಾಗಿದೆ.     ಪರೀಕ್ಷಾ ಕೇಂದ್ರಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರನ್ನೊಳಗೊಂಡ ತಂಡ ಸಹ ಭೇಟಿ ನೀಡಿ ಪರಿಶೀಲನೆ ನಡೆಸಿತು. ಹಿಜಾಬ್ ಸಂಬಂಧ ಸಹ ಯಾವುದೇ ಸಮಸ್ಯೆಗಳು ಕಂಡು ಬಂದಿಲ್ಲ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳು ತಿಳಿಸಿದ್ದಾರೆ.
    ನಿರ್ಭೀತಿಯಿಂದ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು:
    ಕಳೆದ ೨ ವರ್ಷಗಳಿಂದ ಕೋವಿಡ್-೧೯ರ ಪರಿಣಾಮ ಈ ಹಿಂದೆ ವಿದ್ಯಾರ್ಥಿಗಳು ಸೋಂಕು ಹರಡುವ ಭಯಭೀತಿಯಲ್ಲಿ ಪರೀಕ್ಷೆ ಎದುರಿಸಿದ್ದರು. ಆದರೆ ಈ ಬಾರಿ ಯಾವುದೇ ಭಯವಿಲ್ಲದೆ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗುವ ಮೂಲಕ ಗಮನ ಸೆಳೆದರು. ಆದರೂ ಮುನ್ನಚ್ಚರಿಕೆ ಕ್ರಮವಾಗಿ ಪರೀಕ್ಷಾ ಕೇಂದ್ರಗಳ ಬಳಿ ಆರೋಗ್ಯ ಇಲಾಖೆ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಹಾಜರಿದ್ದು, ಕೋವಿಡ್ ಕುರಿತು ಜಾಗೃತಿ ಮೂಡಿಸಿದರು. ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್‌ನೊಂದಿಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು.

ಸರ್.ಎಂ.ವಿ ಸರ್ಕಾರಿ ಕಾಲೇಜಿನಲ್ಲಿ ಉಚಿತ ರಕ್ತ ಗುಂಪು, ಆರೋಗ್ಯ ತಪಾಸಣೆ ಶಿಬಿರ

೪೧ ಯೂನಿಟ್ ರಕ್ತ ಸಂಗ್ರಹ, ೩೦೦ ವಿದ್ಯಾರ್ಥಿಗಳಿಗೆ ಆರೋಗ್ಯ ತಪಾಸಣೆ

ಭದ್ರಾವತಿ ನ್ಯೂಟೌನ್ ಸರ್‌ಎಂವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜು, ಯುವ ರೆಡ್ ಕ್ರಾಸ್ ಘಟಕ, ರಾಷ್ಟ್ರೀಯ ಸೇವಾ ಯೋಜನೆ ಘಟಕ-೧ ಮತ್ತು ೨, ಶಿವಮೊಗ್ಗ ಸುಬ್ಬಯ್ಯ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ರಕ್ತನಿಧಿ ವಿಭಾಗ ಸಹಯೋಗದೊಂದಿಗೆ ಸೋಮವಾರ ಹಮ್ಮಿಕೊಳ್ಳಲಾಗಿದ್ದ ರಕ್ತದಾನ, ಉಚಿತ ರಕ್ತ ಗುಂಪು ತಪಾಸಣೆ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಕಾಲೇಜಿನ ಪ್ರಾಂಶುಪಾಲ ಡಾ. ಎಂ.ಜಿ ಉಮಾಶಂಕರ್ ಉದ್ಘಾಟಿಸಿದರು.
    ಭದ್ರಾವತಿ, ಮಾ. ೨೮: ನ್ಯೂಟೌನ್ ಸರ್‌ಎಂವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜು, ಯುವ ರೆಡ್ ಕ್ರಾಸ್ ಘಟಕ, ರಾಷ್ಟ್ರೀಯ ಸೇವಾ ಯೋಜನೆ ಘಟಕ-೧ ಮತ್ತು ೨, ಶಿವಮೊಗ್ಗ ಸುಬ್ಬಯ್ಯ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ರಕ್ತನಿಧಿ ವಿಭಾಗ ಸಹಯೋಗದೊಂದಿಗೆ ಸೋಮವಾರ ರಕ್ತದಾನ, ಉಚಿತ ರಕ್ತ ಗುಂಪು ತಪಾಸಣೆ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು.
    ಕಾಲೇಜಿನ ಪ್ರಾಂಶುಪಾಲ ಡಾ. ಎಂ.ಜಿ ಉಮಾಶಂಕರ್ ಶಿಬಿರ ಉದ್ಘಾಟಿಸಿದರು. ಪ್ರಾಧ್ಯಾಪಕರಾದ ಡಾ. ಟಿ. ಮಂಜುನಾಥ್, ಡಾ. ಎಸ್. ಧನಂಜಯ, ಎನ್‌ಸಿಸಿ ಸಂಚಾಲಕ ಡಾ. ಸಕ್ರಿನಾಯ್ಕ್, ಯುವ ರೆಡ್ ಕ್ರಾಸ್ ಘಟಕದ ಸಂಚಾಲಕ ಪ್ರೊ. ಆರ್. ವೆಂಕಟೇಶ್, ರಾಷ್ಟ್ರೀಯ ಸೇವಾ ಯೋಜನೆ ಘಟಕ-೧ರ ಕಾರ್ಯಕ್ರಮಾಧಿಕಾರಿ ಡಾ. ಆರ್. ಸೀಮಾ, ಘಟಕ-೨ರ ಕಾರ್ಯಕ್ರಮಮಾಧಿಕಾರಿ ಪ್ರೊ. ಬಿ. ಗುರುಪ್ರಸಾದ್, ರೋವರ್‍ಸ್ ಲೀಡರ್ ಪ್ರೊ. ಎಸ್. ವರದರಾಜು, ಸುಬ್ಬಯ್ಯ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ವೈದ್ಯರಾದ ಡಾ. ವಿನೂತ, ಡಾ. ಸುಮಾ, ಡಾ. ನಳಿನಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಶಿಬಿರದಲ್ಲಿ ಸುಮಾರು ೪೧ ಯೂನಿಟ್ ರಕ್ತ ಸಂಗ್ರಹಿಸಲಾಗಿದ್ದು, ಸುಮಾರು ೩೦೦ ವಿದ್ಯಾರ್ಥಿಗಳು ಆರೋಗ್ಯ ತಪಾಸಣೆಯ ಸದುಪಯೋಗ ಪಡೆದುಕೊಂಡರು.

ನಗರಸಭೆ ನಿವೃತ್ತ ಆರೋಗ್ಯ ನಿರೀಕ್ಷಕ ರೇವಣ್ಣ ನಿಧನ

ಎಚ್. ರೇವಣ್ಣ
    ಭದ್ರಾವತಿ, ಮಾ. ೨೮: ನಗರಸಭೆ ನಿವೃತ್ತ ಆರೋಗ್ಯ ನಿರೀಕ್ಷಕ, ಕೇಶವಪುರ ಬಡಾವಣೆ ನಿವಾಸಿ ಎಚ್. ರೇವಣ್ಣ(೬೩) ಸೋಮವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನ ಹೊಂದಿದರು.
    ಪತ್ನಿ, ಇಬ್ಬರು ಗಂಡು, ಓರ್ವ ಹೆಣ್ಣು ಮಕ್ಕಳನ್ನು ಹೊಂದಿದ್ದರು. ರೇವಣ್ಣನವರು ನೇತ್ರದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದು ಮಾದರಿಯಾಗಿದ್ದಾರೆ. ಇವರ ನಿಧನಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ್, ಚಿಕ್ಕಮಗಳೂರು ಯೋಜನಾ ನಿರ್ದೇಶಕ ಮನೋಹರ್, ನಗರಸಭೆ ಪೌರಾಯುಕ್ತ ಕೆ. ಪರಮೇಶ್ ಹಾಗು ಸಿಬ್ಬಂದಿ ವರ್ಗದವರು ಮತ್ತು ಪೌರಕಾರ್ಮಿಕರು ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು, ಗಣ್ಯರು ಸಂತಾಪ ಸೂಚಿಸಿದ್ದಾರೆ.

Sunday, March 27, 2022

ಶ್ರೀ ಕೈವಾರ ಸದ್ಗುರು ಶ್ರೀ ಯೋಗಿನಾರೇಯಣ ತಾತಯ್ಯನವರ ೨೯೬ನೇ ಜಯಂತ್ಯೋತ್ಸವ

ಭದ್ರಾವತಿಯಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಭಾನುವಾರ ಮೊದಲ ಬಾರಿಗೆ ಶ್ರೀ ಕೈವಾರ ಸದ್ಗುರು ಶ್ರೀ ಯೋಗಿನಾರೇಯಣ ತಾತಯ್ಯನವರ ೨೯೬ನೇ ಜಯಂತ್ಯೋತ್ಸವ ಆಚರಿಸಲಾಯಿತು.

    ಭದ್ರಾವತಿ, ಮಾ. ೨೭: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಭಾನುವಾರ ಮೊದಲ ಬಾರಿಗೆ ಶ್ರೀ ಕೈವಾರ ಸದ್ಗುರು ಶ್ರೀ ಯೋಗಿನಾರೇಯಣ ತಾತಯ್ಯನವರ ೨೯೬ನೇ ಜಯಂತ್ಯೋತ್ಸವ ಆಚರಿಸಲಾಯಿತು.
    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಹಸೀಲ್ದಾರ್ ಆರ್. ಪ್ರದೀಪ್ ಮಾತನಾಡಿ, ಶ್ರೀ ಯೋಗಿನಾರೇಯಣ ತಾತಯ್ಯನವರ ಸಂದೇಶಗಳು ಇಂದಿನ ಸಮಾಜಕ್ಕೆ ಪ್ರಸ್ತುತವಾಗಿವೆ ಎಂದರು.
    ಬಲಿಜ ಸಮಾಜದ ಗೌರವಾಧ್ಯಕ್ಷ ಸುಬ್ರಮಣಿ, ಅಧ್ಯಕ್ಷ ಸಂಜೀವ ಮೂರ್ತಿ, ಮಹಿಳಾ ಘಟಕದ ಅಧ್ಯಕ್ಷೆ ಶಾಂತಮ್ಮ ಕುಮಾರಸ್ವಾಮಿ, ವೈ.ಎಸ್ ರಾಮಮೂರ್ತಿ,  ಹಿಂದುಳಿದ ವರ್ಗಗಳ ತಾಲೂಕು ಗ್ರಾಮಾಂತರ ಉಪಾಧ್ಯಕ್ಷ ಟಿ.ಡಿ ಶಶಿಕುಮಾರ್, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಗಂಗಾಧರ್, ಸತೀಶ್, ಶಿವಕುಮಾರ್ ಮತ್ತು ತಾಲೂಕು ಕಛೇರಿ ಸಿಬ್ಬಂದಿಗಳು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ಭೂಮಿಕಾ ವೇದಿಕೆಯಿಂದ ವಿನೂತನ ಕಾರ್ಯಕ್ರಮ : ಜಾದೂ ಮೂಲಕ ವಿಸ್ಮಯಗೊಳಿಸಿದ ಎಂ.ಡಿ ಕೌಶಿಕ್

ಭದ್ರಾವತಿಯಲ್ಲಿ ಭೂಮಿಕಾ ವೇದಿಕೆ ವತಿಯಿಂದ ತರೀಕೆರೆ ರಸ್ತೆಯಲ್ಲಿರುವ ನಯನ ಆಸ್ಪತ್ರೆ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ವಿನೂತನ ಕಾರ್ಯಕ್ರಮದಲ್ಲಿ ಚಲನಚಿತ್ರ ನಟ, ನಿರ್ದೇಶಕ, ಜಾದು ಮಾಂತ್ರಿಕ ಎಂ.ಡಿ ಕೌಶಿಕ್ ವಿಭಿನ್ನ ರೀತಿಯ ಜಾದು ಮೂಲಕ ಎಲ್ಲರನ್ನು ವಿಸ್ಮಯಗೊಳಿಸಿದರು.  
    ಭದ್ರಾವತಿ, ಮಾ. ೨೭: ನಾಡು-ನುಡಿ ಬಿಂಬಿಸುವ ನಗರದ ಭೂಮಿಕಾ ವೇದಿಕೆ ವತಿಯಿಂದ ಭಾನುವಾರ ಜೀವನವೆಂಬ ಮಾಂತ್ರಿಕತೆಯಲ್ಲಿ ಹಾಸ್ಯ/ಅಪಹಾಸ್ಯ ಎಂಬ ವಿನೂತನ ಕಾರ್ಯಕ್ರಮ ಆಯೋಜಿಸಲಾಗಿತ್ತು.
    ಭೂಮಿಕಾ ವೇದಿಕೆ ಅಧ್ಯಕ್ಷ ಡಾ. ಕೃಷ್ಣ ಎಸ್. ಭಟ್ ಮಾತನಾಡಿ, ಕಳೆದ ೨ ವರ್ಷಗಳಿಂದ ಕೋವಿಡ್-೧೯ರ ಪರಿಣಾಮ ಯಾವುದೇ ಕಾರ್ಯಕ್ರಮಗಳನ್ನು ಆಯೋಜಿಸಲು ಸಾಧ್ಯವಾಗಲಿಲ್ಲ. ಕಳೆದ ೩-೪ ತಿಂಗಳಿನಿಂದ ವೇದಿಕೆ ವತಿಯಿಂದ ಪುನಃ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರಲಾಗುತ್ತಿದೆ. ಇದೀಗ ವಿನೂತನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದರು.
    ಚಲನಚಿತ್ರ ನಟ, ನಿರ್ದೇಶಕ, ಜಾದು ಮಾಂತ್ರಿಕ ಎಂ.ಡಿ ಕೌಶಿಕ್ ವಿಭಿನ್ನ ರೀತಿಯ ಜಾದು ಮೂಲಕ ಎಲ್ಲರನ್ನು ವಿಸ್ಮಯಗೊಳಿಸಿದರು.  ವೇದಿಕೆ ಪ್ರಧಾನ ಕಾರ್ಯದರ್ಶಿ ಅಪರಂಜಿ ಶಿವರಾಜ್ ಉಪಸ್ಥಿತರಿದ್ದರು. ನಾಗರಾಜ್ ಸ್ವಾಗಸಿದರು. ಶಾರದ ಶ್ರೀನಿವಾಸ್ ನಿರೂಪಿಸಿದರು.

ಜನಮೆಚ್ಚಿದ ಅಧಿಕಾರಿ ಮನೋಹರ್ ಭವಿಷ್ಯದ ರತ್ನ : ಪ್ರೊ. ಡಾ.ವಿ ಸುದೇಶ್

ಭದ್ರಾವತಿ ಸಿದ್ಧರೂಢ ನಗರದ ಶ್ರೀ ಶಂಕರ ಮಠದ ಶ್ರೀ ಭಾರತೀತೀರ್ಥ ಸಮುದಾಯ ಭವನದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ರಂಗಕರ್ಮಿ-ಕಿರಿತೆರೆ ಕಲಾವಿದ ಅಪರಂಜಿ ಶಿವರಾಜ್‌ರವರ 'ನಾ ಕಂಡ ಪೌರಾಯುಕ್ತರು' ಅಭಿನಂದನ ಕೃತಿ ಬಿಡುಗಡೆ ಸಮಾರಂಭವನ್ನು ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್ ಉದ್ಘಾಟಿಸಿದರು.
     ಭದ್ರಾವತಿ, ಮಾ. ೨೭: ಸರ್ಕಾರಿ ಹುದ್ದೆಯಲ್ಲಿರುವವರು ಜನರ ಮನಸ್ಸಿನಲ್ಲಿ ಉಳಿದುಕೊಳ್ಳುವುದು ಬಹಳ ವಿರಳ. ಪೌರಾಯುಕ್ತರಾಗಿ ಜನರು ಮೆಚ್ಚುವ ರೀತಿಯಲ್ಲಿ ಉತ್ತಮವಾಗಿ ಕರ್ತವ್ಯ ನಿರ್ವಹಿಸಿರುವ ಮನೋಹರ್‌ರವರು ದೇಶದ ಭವಿಷ್ಯದ ರತ್ನವಾಗಿ ಉಳಿದುಕೊಳ್ಳುವ ವಿಶ್ವಾಸವಿದೆ ಎಂದು ಬೆಂಗಳೂರು ವಿಶ್ವ ವಿದ್ಯಾಲಯದ ಕಾನೂನು ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ. ಡಾ. ವಿ ಸುದೇಶ್ ಹೇಳಿದರು.
    ಅವರು ಭಾನುವಾರ ಸಿದ್ಧರೂಢ ನಗರದ ಶ್ರೀ ಶಂಕರ ಮಠದ ಶ್ರೀ ಭಾರತೀತೀರ್ಥ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ರಂಗಕರ್ಮಿ-ಕಿರಿತೆರೆ ಕಲಾವಿದ ಅಪರಂಜಿ ಶಿವರಾಜ್‌ರವರ 'ನಾ ಕಂಡ ಪೌರಾಯುಕ್ತರು' ಅಭಿನಂದನ ಕೃತಿ ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.
    ಮನೋಹರ್ ಅವರ ವಿದ್ಯಾರ್ಥಿ ಜೀವನವನ್ನು ಸೂಕ್ಷ್ಮವಾಗಿ ಗಮನಿಸಿದ್ದೇನೆ. ಭದ್ರಾವತಿಯಲ್ಲಿ ಪೌರಾಯುಕ್ತರಾಗಿ ಜನ ಮೆಚ್ಚುವ ರೀತಿಯಲ್ಲಿ ಕರ್ತವ್ಯ ನಿರ್ವಹಿಸಿ ಅವರ ಮನಸ್ಸಿನಲ್ಲಿ ಉಳಿದುಕೊಂಡಿರುವುದು ಹೆಮ್ಮೆಯ ವಿಚಾರವಾಗಿದೆ ಎಂದರು.
ಬಹುತೇಕ ಅಧಿಕಾರಿಗಳು ಸರ್ಕಾರಿ ಹುದ್ದೆಯಲ್ಲಿ ವೈಯಕ್ತಿಕ ಲಾಭದ ನಿರೀಕ್ಷೆಯನ್ನು ಹೊಂದಿರುತ್ತಾರೆ. ಆದರೆ ಮನೋಹರ್‌ರವರು ಹುದ್ದೆಯನ್ನು ವೈಯಕ್ತಿಕ ಹಿತಾಸಕ್ತಿಗೆ ಬಳಸಿಕೊಳ್ಳದೆ ಕರ್ತವ್ಯವನ್ನು ಸೇವಾ ಮನೋಭಾವದೊಂದಿಗೆ ನಿರ್ವಹಿಸುತ್ತಿರುವುದು ಅಭಿನಂದನಾರ್ಹವಾಗಿದೆ. ಇವರು ಕೇವಲ ಭದ್ರಾವತಿ ನಗರದ ಜನರಿಗೆ ಮಾತ್ರ ರತ್ನವಾಗಿ ಉಳಿದಿಲ್ಲ ದೇಶದ ರತ್ನವಾಗಿ ಉಳಿದುಕೊಂಡಿದ್ದಾರೆ ಎಂದರು.
    ಚಲನಚಿತ್ರ ನಟಿ, ಮಿಸ್ ಸುಪ್ರ ನ್ಯಾಷನಲ್ ೨೦೧೪ರ ವಿಜೇತೆ ಆಶಾ ಭಟ್ ಮಾತನಾಡಿ, ನಮ್ಮೆಲ್ಲರ ಸಾಧನೆಗೆ ನಮ್ಮೂರಿನ ಕೊಡುಗೆ ಅಪಾರವಾಗಿದೆ. ಇಲ್ಲಿನ ಜನರು ಕಲಾವಿದರು ಸೇರಿದಂತೆ ಎಲ್ಲಾ ಕ್ಷೇತ್ರದವರಿಗೂ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದ್ದಾರೆ. ಉತ್ತಮ ಅಧಿಕಾರಿಯಾಗಿರುವ ಮನೋಹರ್‌ರವರು ನಮ್ಮೂರಿನಲ್ಲಿ ಸೇವೆ ಸಲ್ಲಿಸಿರುವುದು ನಮ್ಮೆಲ್ಲರ ಹೆಮ್ಮೆಯ ವಿಚಾರವಾಗಿದೆ ಎಂದರು.
    ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಜಿ ಧನಂಜಯ ಮಾತನಾಡಿ, ಪ್ರತಿಯೊಬ್ಬರು ತಮ್ಮ ಬದುಕಿನಲ್ಲಿ ಉತ್ತಮ ಗುಣಗಳನ್ನು ಮೈಗೂಡಿಸಿಕೊಂಡು ಮುನ್ನಡೆದಾಗ ಮಾತ್ರ ಯಾವುದೇ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯ. ಆ ಮೂಲಕ ಜನರ ಮನಸ್ಸಿನಲ್ಲಿ ಉಳಿದುಕೊಳ್ಳಬಹುದಾಗಿದೆ. ಈ ನಿಟ್ಟಿನಲ್ಲಿ ಮನೋಹರ್ ಸಹ ಒಬ್ಬರಾಗಿದ್ದು, ಸರ್ಕಾರಿ ಅಧಿಕಾರಿಯಾಗಿ ಕರ್ತವ್ಯದಲ್ಲಿ ನಿಷ್ಠೆ ತೋರಿಸುವ ಮೂಲಕ ಎಲ್ಲರ ಮನಸ್ಸಿನಲ್ಲಿ ಉಳಿದುಕೊಂಡಿದ್ದಾರೆ ಎಂದರು.
ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ಎನ್ ಶ್ರೀಹರ್ಷ ಮಾತನಾಡಿ, ಮನೋಹರ್ ಕರ್ತವ್ಯಕ್ಕೆ ಹೆಚ್ಚಿನ ಮಾನ್ಯತೆ ನೀಡಿದವರು. ಕೆಳವರ್ಗದ ಜನರ ನೋವುಗಳನ್ನು ಅರಿತುಕೊಂಡವರು. ಅವರೊಂದಿಗೆ ನಾನು ಸಹ ಒಬ್ಬರು ಎಂಬಂತೆ ಕಾಯಕದಲ್ಲಿ ತೊಡಗಿಸಿಕೊಂಡವರು. ಎಲ್ಲರೊಂದಿಗೆ ಉತ್ತಮ ಬಾಂಧವ್ಯ ಹೊಂದಿದವರು. ಇಂತಹ ಅಧಿಕಾರಿಗಳು ಅಪರೂಪ ಎಂದರು.
    ರಂಗಕರ್ಮಿ-ಕಿರಿತೆರೆ ಕಲಾವಿದ ಅಪರಂಜಿ ಶಿವರಾಜ್ ಪ್ರಾಸ್ತಾವಿಕವಾಗಿ ಮಾತನಾಡಿ, 'ನಾ ಕಂಡ ಪೌರಾಯುಕ್ತರು' ಕೃತಿ ರಚಿಸಲು ಉಂಟಾದ ಪ್ರೇರಣೆಗಳು, ಆಶಯಗಳನ್ನು ವಿವರಿಸಿದರು.
    ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಮಾಜಿ ಅಧ್ಯಕ್ಷ ಬಿ.ಕೆ ಮೋಹನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಚಲನಚಿತ್ರ ನಟ, ನಿರ್ದೇಶಕ, ಜಾದೂ ಮಾಂತ್ರಿಕ ಎಂ.ಡಿ ಕೌಡಿಕ್ ವಿಶಿಷ್ಟವಾಗಿ ಜಾದೂ ಮೂಲಕ ಉದ್ಘಾಟನೆ ನೆರವೇರಿಸಿಕೊಟ್ಟರು.
    ಶಾಶ್ವತಿ ಮಹಿಳಾ ಸಮಾಜದ ಅಧ್ಯಕ್ಷೆ ರೂಪರಾವ್ ಸ್ವಾಗತಿಸಿದರು. ಮಮತಾ ಬಿ. ನವೀನ್ ನಿರೂಪಿಸಿದರು.

Saturday, March 26, 2022

ನೆನೆಗುದಿಗೆ ಬಿದ್ದಿರುವ ಅಂಬೇಡ್ಕರ್ ಕಾಮಗಾರಿ ತಕ್ಷಣ ಆರಂಭಿಸಿ : ಪೂರ್ವಭಾವಿ ಸಭೆಯಲ್ಲಿ ಒತ್ತಾಯ

ಭದ್ರಾವತಿಯಲ್ಲಿ ತಹಸೀಲ್ದಾರ್ ಕಛೇರಿ ಸಭಾಂಗಣದಲ್ಲಿ ಡಾ. ಬಾಬು ಜಗಜೀವನ್ ರಾಮ್, ಕೈವಾರ ತಾತಯ್ಯ ಹಾಗು ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್‌ರವರ ಜನ್ಮ ದಿನಾಚರಣೆ ಅಂಗವಾಗಿ ತಹಸೀಲ್ದಾರ್ ಆರ್. ಪ್ರದೀಪ್ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು.
    ಭದ್ರಾವತಿ, ಮಾ. ೨೬: ಹಳೇನಗರದ ಕ್ಷೇತ್ರ ಶಿಕ್ಷಣ ಸಂಪನ್ಮೂಲ ಸಮನ್ವಯಾಧಿಕಾರಿಗಳ ಕಛೇರಿ(ಬಿಆರ್‌ಸಿ) ಸಮೀಪ ನಿರ್ಮಾಣಗೊಳ್ಳುತ್ತಿರುವ ಅಂಬೇಡ್ಕರ್  ಭವನ ಕಾಮಗಾರಿ ತಕ್ಷಣ ಪೂರ್ಣಗೊಳಿಸುವಂತೆ ದಲಿತ ಸಂಘಟನೆಗಳು ತಾಲೂಕು ಆಡಳಿತಕ್ಕೆ ಒತ್ತಾಯಿಸಿವೆ.
    ತಹಸೀಲ್ದಾರ್ ಕಛೇರಿ ಸಭಾಂಗಣದಲ್ಲಿ ಡಾ. ಬಾಬು ಜಗಜೀವನ್ ರಾಮ್, ಕೈವಾರ ತಾತಯ್ಯ ಹಾಗು ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್‌ರವರ ಜನ್ಮ ದಿನಾಚರಣೆ ಅಂಗವಾಗಿ ತಹಸೀಲ್ದಾರ್ ಆರ್. ಪ್ರದೀಪ್ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಪಾಲ್ಗೊಂಡಿದ್ದ ದಲಿತ ಸಂಘಟನೆಗಳ ಪ್ರಮುಖರು ಮಾತನಾಡಿ, ನೆನೆಗುದಿಗೆ ಬಿದ್ದಿರುವ ಅಂಬೇಡ್ಕರ್ ಭವನ ಕಾಮಗಾರಿಗೆ ಅಗತ್ಯವಿರುವ ೧.೫ ಕೋಟಿ ರು. ಹೊಂದಿಸಿಕೊಂಡು ತಕ್ಷಣ ಮುಕ್ತಾಯಗೊಳಿಸುವುದು. ಜೊತೆಗೆ ಬಿ.ಎಚ್ ರಸ್ತೆ ಅಂಡರ್‌ಬ್ರಿಡ್ಜ್ ಬಳಿ ನೂತನ ಅಂಬೇಡ್ಕರ್ ಪ್ರತಿಮೆ ತಕ್ಷಣ ಪ್ರತಿಷ್ಠಾಪಿಸಬೇಕೆಂದು ಆಗ್ರಹಿಸಿದರು.
    ಸಭೆಯಲ್ಲಿ ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಉಪಾಧ್ಯಕ್ಷ ಚನ್ನಪ್ಪ, ಪೌರಾಯುಕ್ತ ಕೆ. ಪರಮೇಶ್, ಸದಸ್ಯ ಬಿ.ಕೆ ಮೋಹನ್, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ. ಸಿದ್ದಬಸಪ್ಪ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಗೋಪಿನಾಥ್, ಸಂಚಾರಿ ಪೊಲೀಸ್ ಠಾಣಾಧಿಕಾರಿ ಕವಿತಾ, ದಲಿತ ಸಂಘಟನೆಗಳ ಮುಖಂಡರಾದ ಶಿವಬಸಪ್ಪ, ಕೆ. ರಂಗನಾಥ್, ಈಶ್ವರಪ್ಪ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ವಿಐಎಸ್‌ಎಲ್ ಕಾರ್ಖಾನೆಗೆ ಬಂಡವಾಳ ಹೂಡಿ, ನಿವೃತ್ತ ಕಾರ್ಮಿಕರ ವಸತಿ ಗೃಹಗಳ ಸಮಸ್ಯೆ ಬಗೆಹರಿಸಿ

ಮಾಜಿ ಪ್ರಧಾನಿ ದೇವೇಗೌಡರಿಂದ ಉಕ್ಕು ಸಚಿವ ರಾಮ್ ಚಂದ್ರ ಪ್ರಸಾದ್ ಸಿಂಗ್‌ಗೆ ಮನವಿ


ಭಾರತೀಯ ಉಕ್ಕು ಪ್ರಾಧಿಕಾರದ ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಗೆ ಬಂಡವಾಳ ಹೂಡುವ ಜೊತೆಗೆ ನಿವೃತ್ತ ಕಾರ್ಮಿಕರ ವಸತಿ ಗೃಹಗಳ ಸಮಸ್ಯೆ ಬಗೆಹರಿಸುವಂತೆ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಉಕ್ಕು ಸಚಿವರಿಗೆ ಮನವಿ ಮಾಡಿದರು.
    ಭದ್ರಾವತಿ, ಮಾ. ೨೬ : ಭಾರತೀಯ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಗೆ ಬಂಡವಾಳ ಹೂಡುವ ಜೊತೆಗೆ ನಿವೃತ್ತ ಕಾರ್ಮಿಕರ ವಸತಿ ಗೃಹಗಳ ಸಮಸ್ಯೆ ಬಗೆಹರಿಸುವಂತೆ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಉಕ್ಕು ಸಚಿವರಿಗೆ ಮನವಿ ಮಾಡಿದ್ದು, ಇದಕ್ಕೆ ಸಚಿವರು ಪೂರಕವಾಗಿ ಸ್ಪಂದಿಸಿದ್ದಾರೆ.
    ಕೇಂದ್ರ ಉಕ್ಕು ಸಚಿವ ರಾಮ್ ಚಂದ್ರ ಪ್ರಸಾದ್ ಸಿಂಗ್‌ರವರನ್ನು ಮಾ.೨೩ರಂದು ಭೇಟಿ ಮಾಡಿರುವ ಎಚ್.ಡಿ ದೇವೇಗೌಡರು, ಪ್ರಸ್ತುತ ವಿಐಎಸ್‌ಎಲ್ ಕಾರ್ಖಾನೆಯಲ್ಲಿ ಇತ್ತೀಚಿನ ವರ್ಷಗಳಲ್ಲಿ ಅನಗತ್ಯ ವೆಚ್ಚಗಳಿಗೆ ಕಡಿವಾಣ ಹಾಕಲಾಗಿದ್ದು, ಜೊತೆಗೆ ಅಧಿಕಾರಿಗಳು ಮತ್ತು ಕಾಯಂ ಹಾಗು ಗುತ್ತಿಗೆ ಕಾರ್ಮಿಕರು ಹೆಚ್ಚಿನ ಶ್ರಮವಹಿಸಿ ಹಗಲಿರುಳು ದುಡಿಯುತ್ತಿದ್ದಾರೆ. ಇದರಿಂದಾಗಿ ಅತಿ ಕಡಿಮೆ ಬಂಡವಾಳದಲ್ಲಿ ಕಾರ್ಖಾನೆ ಲಾಭದತ್ತ ಸಾಗುತ್ತಿದೆ. ಈ ಹಿನ್ನಲೆಯಲ್ಲಿ ಹೆಚ್ಚಿನ ಬಂಡವಾಳ ತೊಡಗಿಸಿ ಅಭಿವೃದ್ಧಿಪಡಿಸುವಂತೆ ಒತ್ತಾಯಿಸಿದ್ದಾರೆ.
    ಶಿಥಿಲಗೊಂಡಿರುವ ಕಾರ್ಖಾನೆಯ ವಸತಿ ಗೃಹಗಳನ್ನು ಆಡಳಿತ ಮಂಡಳಿ ನಿವೃತ್ತ ಕಾರ್ಮಿಕರಿಗೆ ಲೈಸೆನ್ಸಿಂಗ್ ಸ್ಕೀಂ, ತಾತ್ಕಾಲಿಕ ರಿಟನ್ಷನ್ ಸ್ಕೀಂ ಮತ್ತು ಲಾಂಗ್ ಲೀಸ್ ಸೇರಿದಂತೆ ಇತರೆ ಸ್ಕೀಂಗಳ ಆಧಾರದಲ್ಲಿ ನೀಡಿದೆ. ಇದರಿಂದಾಗಿ ನಿವೃತ್ತ ಕಾರ್ಮಿಕರು ಬಾಡಿಗೆ ಪಾವತಿಸುವಾಗ ಮತ್ತು ಸ್ಕೀಂಗಳ ನವೀಕರಣ ಸಮಯದಲ್ಲಿ ಗೊಂದಲ ಉಂಟಾಗುತ್ತಿದೆ. ಈ ಹಿನ್ನಲೆಯಲ್ಲಿ ಈ ಗೊಂದಲಗಳ ನಿವಾರಣೆಗೆ ಲಾಂಗ್ ಲೀಸ್ ಜೊತೆಗೆ ಯೂನಿಫಾರಂ ಲೀಸ್ ನೀಡುವ ಮೂಲಕ ನಿವೃತ್ತ ಕಾರ್ಮಿಕರ ಹಿತ ಕಾಪಾಡುವಂತೆ ಮನವಿ ಮಾಡಿದ್ದು, ಇದಕ್ಕೆ ಸ್ಪಂದಿಸಿರುವ ಸಚಿವರು ನಿವೃತ್ತ ಕಾರ್ಮಿಕರ ವಸತಿ ಗೃಹಗಳ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದ್ದಾರೆ.  
    ಕೆಲವು ದಿನಗಳ ಹಿಂದೆ ವಿಐಎಸ್‌ಎಲ್ ನಿವೃತ್ತ ಕಾರ್ಮಿಕರ ಕಲ್ಯಾಣ ಕೇಂದ್ರದ ವತಿಯಿಂದ ಜೆಡಿಎಸ್ ಮುಖಂಡರಾದ ಶಾರದ ಅಪ್ಪಾಜಿ ನೇತೃತ್ವದಲ್ಲಿ ಪದಾಧಿಕಾರಿಗಳಾದ ಅಧ್ಯಕ್ಷ ಬಿ.ಜಿ ರಾಮಲಿಂಗಯ್ಯ, ಪ್ರಧಾನ ಕಾರ್ಯದರ್ಶಿ ಬಿ.ಆರ್ ನಾಗರಾಜ ಹಾಗು ಇನ್ನಿತರರು ದೇವೇಗೌಡರನ್ನು ಸಂಪರ್ಕಿಸಿ ಮನವಿ ಸಲ್ಲಿಸಿದ್ದರು. ಈ ಹಿನ್ನಲೆಯಲ್ಲಿ ದೇವೇಗೌಡರು ಉಕ್ಕು ಸಚಿವರನ್ನು ಭೇಟಿಯಾಗಿದ್ದಾರೆ.

ಆಂಜನಪ್ಪ ನಿಧನ

ಆಂಜನಪ್ಪ 
    ಭದ್ರಾವತಿ, ಮಾ. ೨೬: ತಾಲೂಕು ಸರ್ಕಾರಿ ‘ಡಿ’ ಗ್ರೂಪ್ ನೌಕರರ ಸಂಘದ ಉಪಾಧ್ಯಕ್ಷ ಆಂಜನಮೂರ್ತಿಯವರ ತಂದೆ, ಸಂಜಯ್ ಕಾಲೋನಿ ನಿವಾಸಿ ಆಂಜನಪ್ಪ(೮೩) ಶನಿವಾರ ಬೆಳಿಗ್ಗೆ ನಿಧನ ಹೊಂದಿದರು. 
ಆಂಜನಮೂರ್ತಿ ಸೇರಿದಂತೆ ೪ ಗಂಡು, ೧ ಹೆಣ್ಣು ಮಕ್ಕಳನ್ನು ಹೊಂದಿದ್ದರು. ಆಂಜನಪ್ಪ ಕೆಲವು ದಿನಗಳಿಂದ ಆನಾರೋಗ್ಯಕ್ಕೆ ಒಳಗಾಗಿ ಶಿವಮೊಗ್ಗ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. 
ಇವರ ಅಂತ್ಯಕ್ರಿಯೆ ಭಾನುವಾರ ಹುತ್ತಾಕಾಲೋನಿಯಲ್ಲಿರುವ ಹಿಂದು ರುದ್ರ ಭೂಮಿಯಲ್ಲಿ ನಡೆಯಲಿದೆ. ಮೃತರ ನಿಧನಕ್ಕೆ ‘ಡಿ’ ಗ್ರೂಪ್ ನೌಕರರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಸಂತಾಪ ಸೂಚಿಸಿದ್ದಾರೆ. 

ಶರಣರಿಂದ ನವ ಸಮಾಜ ನಿರ್ಮಾಣಕ್ಕೆ ಮುನ್ನುಡಿ : ಡಾ. ಬಿ.ಜಿ ಧನಂಜಯ

ಭದ್ರಾವತಿ ನ್ಯೂಟೌನ್ ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್, ಮೈಸೂರು ಹಾಗು ತಾಲೂಕು ಶರಣ ಸಾಹಿತ್ಯ ಪರಿಷತ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ೬೨೫ನೇ ವಚನ ಮಂಟಪ ಮತ್ತು ದತ್ತಿ ಕಾರ್ಯಕ್ರಮವನ್ನು ಪರಿಷತ್ ಜಿಲ್ಲಾಧ್ಯಕ್ಷ ಎಚ್.ಎನ್ ಮಹಾರುದ್ರ, ಪ್ರಾಂಶುಪಾಲ ಡಾ. ಎಂ.ಜಿ ಉಮಾಶಂಕರ್ ಸೇರಿದಂತೆ ಇನ್ನಿತರರು ಉದ್ಘಾಟಿಸಿದರು.
    ಭದ್ರಾವತಿ, ಮಾ. ೨೬: ಶರಣರು ೧೨ನೇ ಶತಮಾನದಲ್ಲಿ ಸಾಮಾಜಿಕ ಪ್ರಜ್ಞೆ ಮೂಲಕ ನವ ಸಮಾಜ ನಿರ್ಮಾಣಕ್ಕೆ ಮುನ್ನುಡಿ ಬರೆದರು. ಆದರೆ ಇಂದಿಗೂ ನಾವುಗಳು ಅವರ ಆಶಯಗಳನ್ನು ಅರಿತುಕೊಂಡಿಲ್ಲ ಎಂದು ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಜಿ ಧನಂಜಯ ಹೇಳಿದರು.
    ಅವರು ಶನಿವಾರ ನ್ಯೂಟೌನ್ ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್, ಮೈಸೂರು ಹಾಗು ತಾಲೂಕು ಶರಣ ಸಾಹಿತ್ಯ ಪರಿಷತ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ೬೨೫ನೇ ವಚನ ಮಂಟಪ ಮತ್ತು ದತ್ತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
    ಜಗತ್ತಿಗೆ ಶರಣರು ನೀಡಿರುವ ಕೊಡುಗೆ ಅಪಾರವಾಗಿದೆ. ಶರಣರು ತಮ್ಮ ಜೀವನ ಚರಿತ್ರೆಗಳನ್ನು ಬರೆದಿಟ್ಟುಕೊಳ್ಳಲಿಲ್ಲ ಬದಲಾಗಿ ಚಾರಿತ್ರ್ಯ ವಂತರಾಗಿ ಬದುಕಿ ಇಂದಿಗೂ ಶಾಶ್ವತವಾಗಿ ಉಳಿದುಕೊಂಡಿದ್ದಾರೆ. ಕಾಯಕದಿಂದ ವಚನ ಸಾಹಿತ್ಯ ರೂಪುಗೊಂಡಿದ್ದು, ಈ ಸಾಹಿತ್ಯ ಸಮಾಜ ಬದಲಿಸುವ ಶಕ್ತಿ ಹೊಂದಿದೆ. ಪ್ರತಿಯೊಂದು ವಚನ ಸಹ ಸಾಮಾಜಿಕ ಕಾಳಜಿಯನ್ನು ಹೊಂದಿದ್ದು, ವಚನಗಳು ಯಾವುದೇ ದುರುದ್ದೇಶದಿಂದ ಕೂಡಿಲ್ಲ ಎಂದರು.
    ಬಸವಣ್ಣನವರು ಕೆಳವರ್ಗದವರ ಏಳಿಗಾಗಿ ಹೋರಾಟ ನಡೆಸಿದರು. ಈ ಹಿನ್ನಲೆಯಲ್ಲಿ ಅವರು ಸಾಕಷ್ಟು ಟೀಕೆಗಳಿಗೆ ಒಳಗಾಗಬೇಕಾಯಿತು. ಆದರೆ ಅವರು ತಮ್ಮ ನೈಜತೆಯನ್ನು ಕಾಯ್ದುಕೊಂಡು ಸಾಮಾಜಿಕ ಶೋಷಣೆಗಳ ವಿರುದ್ಧ ಚಳುವಳಿ ನಡೆಸಿದರು. ವೈಶ್ಯೆಯನ್ನು ಸಮಾಜದ ಮುಖ್ಯವಾಹಿನಿಗೆ ಕರೆ ತರುವ ಮೂಲಕ ಸಮಾನತೆ ಕಲ್ಪಿಸಿಕೊಟ್ಟು ಆ ಮೂಲಕ ಆಕೆಯಿಂದ ವಚನಗಳನ್ನು ರೂಪಿಸಿದ ಕೀರ್ತಿ ವಚನಕ್ಕೆ ಸಾಹಿತ್ಯಕ್ಕೆ ಸಲ್ಲುತ್ತದೆ. ನಾವುಗಳ ಇದೀಗ ಸಮಾನತೆ ಕುರಿತು ಮಾತನಾಡುತ್ತಿದ್ದೇವೆ. ಇದನ್ನು ೧೨ನೇ ಶತಮಾನದಲ್ಲಿಯೇ ಜಾರಿಗೆ ತಂದಿದ್ದ ಶರಣರು ಅತ್ಯಂತ ಶ್ರೇಷ್ಠರಾಗಿದ್ದಾರೆ. ಆತ್ಮ ವಂಚನೆ ಮಾಡಿಕೊಳ್ಳುವ ಬದಲು ಆತ್ಮಾವಲೋಕನ ಮಾಡಿಕೊಂಡು ಬದುಕು, ಆತ್ಮ ವಿಶ್ವಾಸದಿಂದ ಬದುಕು ಎಂಬುದನ್ನು ತೋರಿಸಿ ಕೊಟ್ಟಿದ್ದಾರೆ ಎಂದರು.
    ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಎಚ್.ಎನ್ ಮಹಾರುದ್ರ, ಪ್ರಸ್ತುತ ನಾವುಗಳು ಇಂದು ಸಮಾಜದಲ್ಲಿ ಧರ್ಮ, ಧರ್ಮಗಳ ವೈಷಮ್ಯ ಬೆಳೆಸಿಕೊಳ್ಳುವ ದಾರಿಯಲ್ಲಿ ಸಾಗುತ್ತಿದ್ದೇವೆ. ಆದರೆ ೧೨ನೇ ಶತಮಾನದಲ್ಲಿಯೇ ಸಮಾಜದಲ್ಲಿ ಶರಣರು ಸಮಾನತೆ ಸಮಾಜ ರೂಪಿಸಿಕೊಂಡಿದ್ದರು. ಶರಣರ ಚಿಂತನೆಗಳು, ಆಶಯಗಳು ಇಂದಿಗೂ ಪ್ರಸ್ತುತವಾಗಿವೆ. ನಾವುಗಳು ಶರಣ ದಾರಿಯಲ್ಲಿ ಸಾಗುವಂತಾಗಬೇಕೆಂದರು.
    ಶರಣ ಸಾಹಿತ್ಯ ಪರಿಷತ್ ತಾಲೂಕು ಕೋಶಾಧ್ಯಕ್ಷ ಕತ್ತಲಗೆರೆ ತಿಮ್ಮಪ್ಪ ಪ್ರಾಸ್ತಾವಿಕವಾಗಿ ಮಾತನಾಡಿ, ಇಂದಿನ ಪೀಳಿಗೆಗೆ ಶರಣ ಸಾಹಿತ್ಯದ ಅಗತ್ಯತೆ ಕುರಿತು ಮನವರಿಕೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಎಲ್ಲರನ್ನು ಸ್ವಾಗತಿಸಿದರು.
    ಕಾಲೇಜಿನ ಪ್ರಾಂಶುಪಾಲ ಡಾ. ಎಂ.ಜಿ ಉಮಾಶಂಕರ್ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ ಜಿ. ಸವಿತಾ ಉಪಸ್ಥಿತರಿದ್ದರು.
    ವಿದ್ಯಾರ್ಥಿಗಳಿಂದ ವಚನ ಗಾಯನ ನಡೆಯಿತು. ಕಾಲೇಜಿನ ಅಧ್ಯಾಪಕ, ಅಧ್ಯಾಪಕೇತರ ಸಿಬ್ಬಂದಿ ವರ್ಗದವರು, ಕದಳಿ ಮಹಿಳಾ ವೇದಿಕೆ ಸದಸ್ಯರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Friday, March 25, 2022

ಮಾ.೨೬ರಂದು ವಿಶ್ವ ಮಹಿಳಾ ದಿನಾಚರಣೆ

    ಭದ್ರಾವತಿ, ಮಾ. ೨೫: ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ವತಿಯಿಂದ ಮಾ.೨೬ರಂದು ಸಂಜೆ ೫ ಗಂಟೆಗೆ ನ್ಯೂಟೌನ್ ಉಂಬ್ಳೆಬೈಲ್ ರಸ್ತೆಯಲ್ಲಿರುವ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ವಿಶ್ವ ಮಹಿಳಾ ದಿನಾಚರಣೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
    ವೇದಿಕೆ ಜಿಲ್ಲಾಧ್ಯಕ್ಷ ಡಿ. ಮಂಜುನಾಥ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ವೇದಿಕೆ ತಾಲೂಕು ಅಧ್ಯಕ್ಷೆ ಎಂ.ಎಸ್ ಸುಧಾಮಣಿ ಅಧ್ಯಕ್ಷತೆ ವಹಿಸಲಿದ್ದಾರೆ. ನಗರಸಭೆ ಉಪಾಧ್ಯಕ್ಷ ಚನ್ನಪ್ಪ, ಸಂಚಾರಿ ಪೊಲೀಸ್ ಠಾಣಾಧಿಕಾರಿ ಕವಿತಾ, ಕಸಾಪ ತಾಲೂಕು ಅಧ್ಯಕ್ಷ ಕೋಗಲೂರು ತಿಪ್ಪೇಸ್ವಾಮಿ, ಕರ್ನಾಟಕ ಜಾನಪದ ಪರಿಷತ್ ಅಧ್ಯಕ್ಷ ಕೋಡ್ಲು ಯಜ್ಞಯ್ಯ, ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು. ಶಿವಮೊಗ್ಗ ಕಸ್ತೂರ್ಬಾ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಡಾ. ಬಿ.ಎನ್ ತಂಬೂಳಿ ಉಪನ್ಯಾಸ ನೀಡಲಿದ್ದಾರೆ.

ಭದ್ರಾವತಿಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ೪೪೬೯ ವಿದ್ಯಾರ್ಥಿಗಳು

೧೬ ಕೇಂದ್ರಗಳು, ಜಾಗೃತದಳ, ಮೊಬೈಲ್ ಸ್ವಾಧೀನಾಧಿಕಾರಿ, ಮಾರ್ಗಾಧಿಕಾರಿ ನೇಮಕ


ಎ.ಕೆ ನಾಗೇಂದ್ರಪ್ಪ
    ಭದ್ರಾವತಿ, ಮಾ. ೨೫: ತಾಲೂಕಿನಲ್ಲಿ ಈ ಬಾರಿ ಒಟ್ಟು ೪೪೬೯ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಎದುರಿಸಲಿದ್ದು, ಒಟ್ಟು ೧೬ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ತಿಳಿಸಿದರು.
    ಅವರು ಈ ಕುರಿತು ಮಾಹಿತಿ ನೀಡಿ, ಒಟ್ಟು ೧೬ ಪರೀಕ್ಷಾ ಕೇಂದ್ರಗಳ ಪೈಕಿ ೧ ಪರೀಕ್ಷಾ ಕೇಂದ್ರ ಖಾಸಗಿ ವಿದ್ಯಾರ್ಥಿಗಳಿಗೆ ಮೀಸಲಿಡಲಾಗಿದೆ. ೨,೨೨೨ ಬಾಲಕರು ಹಾಗು ೨,೨೪೭ ಬಾಲಕಿಯರು ಪರೀಕ್ಷೆ ಬರೆಯಲಿದ್ದು, ಎಲ್ಲಾ ಪರೀಕ್ಷಾ ಕೇಂದ್ರಗಳಿಗೂ ತಲಾ ಓರ್ವ ಸ್ಥಾನಿಕ ಜಾಗೃತ ದಳ ಅಧಿಕಾರಿ ಹಾಗು ಮೊಬೈಲ್ ಸ್ವಾಧೀನಾಧಿಕಾರಿ ನೇಮಕಗೊಳಿಸಲಾಗಿದೆ. ಈ ಬಾರಿ ವಿದ್ಯಾರ್ಥಿಗಳು ಸೂಚಿಸಲಾಗಿರುವ ನಿಗದಿತ ಪರೀಕ್ಷಾ ಕೇಂದ್ರಗಳಲ್ಲಿಯೇ ಪರೀಕ್ಷೆ ಬರೆಯಬೇಕು. ಬೇರೆ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಅವಕಾಶವಿಲ್ಲ ಎಂದರು.
    ಕೋವಿಡ್-೧೯ ಮುನ್ನಚ್ಚರಿಕೆ ಹಿನ್ನಲೆಯಲ್ಲಿ ಪ್ರತಿ ಪರೀಕ್ಷಾ ಕೇಂದ್ರಕ್ಕೂ ಆರೋಗ್ಯ ಸಿಬ್ಬಂದಿಗಳನ್ನು ನೇಮಕಗೊಳಿಸಲಾಗಿದ್ದು, ಸೋಂಕು ನಿವಾರಕ ಹಾಗು ಮಾಸ್ಕ್ ಬಳಕೆ ಕುರಿತು ಜಾಗೃತಿ ಮೂಡಿಸಲಿದ್ದಾರೆ. ಜೊತೆಗೆ ಆರೋಗ್ಯ ತಪಾಸಣೆ ನಡೆಸಲಿದ್ದು, ಒಂದು ವೇಳೆ ಸೋಂಕು ತಗುಲಿರುವ ವಿದ್ಯಾರ್ಥಿಗಳು ಕಂಡು ಬಂದಲ್ಲಿ ಅವರಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ ಎಂದರು.
    ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆ ಪತ್ರಿಕೆಗಳನ್ನು ತಲುಪಿಸಲು ೫ ಮಾರ್ಗಾಧಿಕಾರಿಗಳನ್ನು ನೇಮಕಗೊಳಿಸಲಾಗಿದ್ದು, ಉಳಿದಂತೆ ತಾಲೂಕು ಮಟ್ಟದಲ್ಲಿ ತಹಸೀಲ್ದಾರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಅವರನ್ನೊಳಗೊಂಡ ಜಾಗೃತದಳ ಸಮಿತಿ ರಚಿಸಲಾಗಿದೆ. ಈಗಾಗಲೇ ಪರೀಕ್ಷಾ ಕೇಂದ್ರಗಳಿಗೆ ನೇಮಕಗೊಳಿಸಲಾಗಿರುವ ಅಧಿಕಾರಿಗಳು, ಸಿಬ್ಬಂದಿಗಳಿಗೆ ಮಾಹಿತಿ ನೀಡಲಾಗಿದೆ. ಎಲ್ಲರನ್ನು ಒಂದೆಡೆ ಸೇರಿಸಿ ಶನಿವಾರ ಪುನಃ ಮಾಹಿತಿ ನೀಡಲಾಗುವುದು. ಒಟ್ಟಾರೆ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲು ಅಗತ್ಯವಿರುವ ಎಲ್ಲಾ ಸಿದ್ದತೆಗಳನ್ನು ಕೈಗೊಳ್ಳಲಾಗಿದೆ ಎಂದರು.

ಕನ್ನಡ ಸಾಹಿತ್ಯ, ಭಾಷೆ ಬೆಳವಣಿಗೆಗೆ ಪ್ರೋತ್ಸಾಹ ನಿರಂತರವಾಗಿರಲಿ : ಎ.ಕೆ ನಾಗೇಂದ್ರಪ್ಪ

ಭದ್ರಾವತಿಯಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನಗರದ ಬಿ.ಎಚ್ ರಸ್ತೆ ಹಾಲಪ್ಪ ವೃತ್ತದಲ್ಲಿರುವ ಭದ್ರಾ ಪ್ರೌಢಶಾಲೆಯಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಯುಗಾದಿ ಕವಿಗೋಷ್ಠಿ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಉದ್ಘಾಟಿಸಿದರು.
    ಭದ್ರಾವತಿ, ಮಾ. ೨೫: ಕನ್ನಡ ಸಾಹಿತ್ಯ, ಭಾಷೆ ಬೆಳೆವಣಿಗೆಗೆ ಪ್ರೋತ್ಸಾಹ ನೀಡುವ ಕಾರ್ಯ ನಿರಂತರವಾಗಿ ನಡೆಯಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಹೇಳಿದರು.
    ಅವರು ಶುಕ್ರವಾರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನಗರದ ಬಿ.ಎಚ್ ರಸ್ತೆ ಹಾಲಪ್ಪ ವೃತ್ತದಲ್ಲಿರುವ ಭದ್ರಾ ಪ್ರೌಢಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಯುಗಾದಿ ಕವಿಗೋಷ್ಠಿ ಉದ್ಘಾಟಿಸಿ ಮಾತನಾಡಿದರು.
    ಕನ್ನಡ ಭಾಷೆ ತನ್ನದೇ ಆದ ಪರಂಪರೆಯನ್ನು ಹೊಂದಿದ್ದು, ಕನ್ನಡ ಸಾಹಿತ್ಯದ ಕೊಡುಗೆ ಅಪಾರವಾಗಿದೆ. ಇದನ್ನು ನಾವೆಲ್ಲರೂ ಅರ್ಥ ಮಾಡಿಕೊಂಡು ಸಾಹಿತ್ಯ, ಭಾಷೆ ಮತ್ತಷ್ಟು ಬೆಳವಣಿಗೆ ಹೊಂದುವ ನಿಟ್ಟಿನಲ್ಲಿ ಮುನ್ನಡೆಯಬೇಕಾಗಿದೆ ಎಂದರು.
    ಪ್ರಸ್ತುತ ನಾವು ಮಕ್ಕಳನ್ನು ಕೇವಲ ಪರೀಕ್ಷಾ ಸಿದ್ದತೆಗಾಗಿ ತಯಾರಿ ಮಾಡುತ್ತಿದ್ದೇವೆಯೇ ಹೊರತು ಅವರಲ್ಲಿನ ಜ್ಞಾನಾರ್ಜಾನೆ ವೃದ್ಧಿಸುವ ಕೆಲಸ ಮಾಡುತ್ತಿಲ್ಲ. ಶಾಲಾ ಹಂತದಲ್ಲಿ ಮಕ್ಕಳ ಪ್ರತಿಭೆಗಳನ್ನು ಗುರುತಿಸುವ ಕೆಲಸ ಶಿಕ್ಷಕರು ಮಾಡಬೇಕಾಗಿದೆ. ಇದಕ್ಕೆ ಪೂರಕವಾಗಿ ಮನೆಗಳಲ್ಲಿ ಪೋಷಕರು ಸಹ ಹೆಚ್ಚಿನ ಪ್ರೋತ್ಸಾಹ ನೀಡಬೇಕಾಗಿದೆ. ಅಲ್ಲದೆ ಸಾಹಿತ್ಯ ಪರಿಷತ್ ಸಹ ಮಕ್ಕಳ ಪ್ರತಿಭೆಗಳನ್ನು ಗುರುತಿಸುವ ನಿಟ್ಟಿನಲ್ಲಿ ಸಾಹಿತ್ಯಪರ ಕಾರ್ಯಕ್ರಮಗಳನ್ನು ಹೆಚ್ಚಾಗಿ ರೂಪಿಸಿಕೊಳ್ಳಬೇಕಾದ ಅನಿವಾರ್ಯತೆ ಇದೆ ಎಂದರು.
    ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಕೋಗಲೂರು ತಿಪ್ಪೇಸ್ವಾಮಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ  ತಾಲೂಕು ಅಧ್ಯಕ್ಷೆ ಎಂ.ಎಸ್ ಸುಧಾಮಣಿ, ತಾಲೂಕು ಬ್ರಾಹ್ಮಣ ಸಮಾಜದ ಅಧ್ಯಕ್ಷ ಎಂ.ಎಸ್ ಜನಾರ್ಧನ ಅಯ್ಯಂಗಾರ್, ಕನ್ನಡ ಸಾಹಿತ್ಯ ಪರಿಷತ್ ಕಾರ್ಯದರ್ಶಿ ಎಂ. ಜಗದೀಶ್, ಹಿರಿಯ ಸಾಹಿತಿಗಳಾದ ಜೆ.ಎನ್ ಬಸವರಾಜಪ್ಪ, ಬಿ. ಕಾಂತಪ್ಪ, ನರೇಂದ್ರ ಘೋರ್ಪಡೆ, ಭದ್ರಾ ಪ್ರೌಢ ಶಾಲೆ ಮುಖ್ಯೋಪಾಧ್ಯಾಯ ಬಿ.ಎಚ್ ವಿರುಪಾಕ್ಷಪ್ಪ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
    ಕಾರ್ಯದರ್ಶಿ ಎಚ್. ತಿಮ್ಮಪ್ಪ ಸ್ವಾಗತಿಸಿದರು. ಸುಮಾರು ೨೨ ಕವಿಗಳು ಸ್ವರಚಿತ ಕವನ ವಾಚಿಸಿದರು.


Thursday, March 24, 2022

ಶ್ರೀ ರಾಮರಾಜ್ಯ ಸಂಘದಿಂದ ‘ಅಪ್ಪು ನಮನ’

ಚಲನಚಿತ್ರ ನಟ, ಸಮಾಜ ಸೇವಕ ದಿವಂಗತ ಪವರ್ ಸ್ಟಾರ್ ಪುನೀತ್‌ರಾಜ್‌ಕುಮಾರ್‌ರವರ ಹುಟ್ಟುಹಬ್ಬ 'ಅಪ್ಪು ನಮನ' ಕಾರ್ಯಕ್ರಮ ಭದ್ರಾವತಿ ನಗರದ ಪ್ರತಿಷ್ಠಿತ ಸಂಘಟನೆಗಳಲ್ಲಿ ಒಂದಾದ ಜನ್ನಾಪುರ ಶ್ರೀ ರಾಮರಾಜ್ಯ ಸಂಘದ ವತಿಯಿಂದ ಆಚರಿಸಲಾಯಿತು.
    ಭದ್ರಾವತಿ, ಮಾ. ೨೪: ಚಲನಚಿತ್ರ ನಟ, ಸಮಾಜ ಸೇವಕ ದಿವಂಗತ ಪವರ್ ಸ್ಟಾರ್ ಪುನೀತ್‌ರಾಜ್‌ಕುಮಾರ್‌ರವರ ಹುಟ್ಟುಹಬ್ಬ 'ಅಪ್ಪು ನಮನ' ಕಾರ್ಯಕ್ರಮ ನಗರದ ಪ್ರತಿಷ್ಠಿತ ಸಂಘಟನೆಗಳಲ್ಲಿ ಒಂದಾದ ಜನ್ನಾಪುರ ಶ್ರೀ ರಾಮರಾಜ್ಯ ಸಂಘದ ವತಿಯಿಂದ ಆಚರಿಸಲಾಯಿತು.
    ಕಾರ್ಯಕ್ರಮವನ್ನು ಜೆಡಿಎಸ್ ಮುಖಂಡರಾದ ಶಾರದ ಅಪ್ಪಾಜಿ ಉದ್ಘಾಟಿಸಿದರು. ಪುನೀತ್‌ರಾಜ್‌ಕುಮಾರ್‌ರವರು ಚಿತ್ರರಂಗಕ್ಕೆ ನೀಡಿರುವ ಕೊಡುಗೆ ಹಾಗು ಅವರು ಕೈಗೊಂಡಿರುವ ಸಾಮಾಜಿಕ ಸೇವಾ ಕಾರ್ಯಗಳನ್ನು ಸ್ಮರಿಸಲಾಯಿತು.
    ನಗರಸಭಾ ಸದಸ್ಯರಾದ ಸವಿತಾ, ನಾಗರತ್ನ, ನಗರಸಭೆ ಮಾಜಿ ಸದಸ್ಯ ಎಂ. ರಾಜು, ಮುಖಂಡರಾದ ಉಮೇಶ್ ಸೇರಿದಂತೆ ಸ್ಥಳೀಯ ಮುಖಂಡರು ಮುಖಂಡರು. ಜನ್ನಾಪುರ, ಗಣೇಶ್ ಕಾಲೋನಿ, ಹುತ್ತಾಕಾಲೋನಿ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳ ನಿವಾಸಿಗಳು, ಪುನೀತ್‌ರಾಜ್‌ಕುಮಾರ್ ಅಭಿಮಾನಿಗಳು, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಪಾಲ್ಗೊಂಡಿದ್ದರು.

ನಾ ಕಂಡ ಪೌರಾಯುಕ್ತರು ಅಭಿನಂದನ ಕೃತಿ ಬಿಡುಗಡೆ


    ಭದ್ರಾವತಿ, ಮಾ. ೨೪: ರಂಗಕರ್ಮಿ-ಕಿರುತೆರೆ ಕಲಾವಿದ ಅಪರಂಜಿ ಶಿವರಾಜ್‌ರವರ ನಾ ಕಂಡ ಪೌರಾಯುಕ್ತರು ಅಭಿನಂದನ ಕೃತಿ ಬಿಡುಗಡೆ ಸಮಾರಂಭ ಮಾ.೨೭ರಂದು ಬೆಳಿಗ್ಗೆ ೧೧ ಗಂಟೆಗೆ ಸಿದ್ದರೂಢ ನಗರದ ಶಂಕರಮಠದಲ್ಲಿ ನಡೆಯಲಿದೆ.
    ಶಾಸಕ ಬಿ.ಕೆ ಸಂಗಮೇಶ್ವರ್ ಪುಸ್ತಕ ಬಿಡುಗಡೆಗೊಳಿಸಲಿದ್ದು, ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಜಿ ಧನಂಜಯ ಕೃತಿ ಕುರಿತು ಅಭಿಪ್ರಾಯ ವ್ಯಕ್ತಪಡಿಸಲಿದ್ದಾರೆ.
    ಮಿಸ್ ಸುಪ್ರ ನ್ಯಾಷನಲ್ ೨೦೧೪ ವಿಜೇತೆ, ಚಲನಚಿತ್ರ ನಟಿ ಆಶಾಭಟ್, ನಟ, ನಿರ್ದೇಶಕ ಎಂ.ಡಿ ಕೌಶಿಕ್, ಬೆಂಗಳೂರು ವಿಶ್ವವಿದ್ಯಾಲಯದ ಕಾನೂನು ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ. ಡಾ. ವಿ. ಸುದೇಶ್, ಚಿಕ್ಕಮಗಳೂರು ಯೋಜನಾ ನಿರ್ದೇಶಕ ಮನೋಹರ್, ಶೃಂಗೇರಿ ಶಂಕರಮಠ ಧರ್ಮದರ್ಶಿ ಕೆ.ಆರ್ ಸುಬ್ಬರಾವ್, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ಎನ್ ಶ್ರೀಹರ್ಷ ಮತ್ತು ಅಪರಂಜಿ ಶಿವರಾಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕೋರಲಾಗಿದೆ.

ಮಾ.೨೫ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ


    ಭದ್ರಾವತಿ, ಮಾ. ೨೪: ಹಳೇನಗರದ ಮಹಿಳಾ ಸೇವಾ ಸಮಾಜದ ವತಿಯಿಂದ ಮಾ.೨೫ರಂದು ಸಂಜೆ ೪ ಗಂಟೆಗೆ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಮ್ಮಿಕೊಳ್ಳಲಾಗಿದೆ.
    ನಗರಸಭೆ ಅಧ್ಯಕ್ಷೆ ಗೀತಾರಾಜ್‌ಕುಮಾರ್ ಉದ್ಘಾಟಿಸಲಿದ್ದು, ಮಹಿಳಾ ಸೇವಾ ಸಮಾಜದ ಅಧ್ಯಕ್ಷೆ ಹೇಮಾವತಿ ವಿಶ್ವನಾಥರಾವ್ ಅಧ್ಯಕ್ಷತೆ ವಹಿಸಲಿದ್ದಾರೆ. ಪ್ರಧಾನ ಕಾರ್ಯದರ್ಶಿ ಶೋಭ ಗಂಗರಾಜ್ ಮತ್ತು ಖಜಾಂಚಿ ಜಯಂತಿ ನಾಗರಾಜ್‌ಶೇಟ್, ಶಾಶ್ವತಿ ಮಹಿಳಾ ಸಮಾಜದ ಅಧ್ಯಕ್ಷೆ ರೂಪರಾವ್ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು. ಸಮಾಜದ ಹಿರಿಯ ಸದಸ್ಯರಾದ ಭಾಗ್ಯವತಿ ನಿಜಗುಣ, ರೇಣುಕ ಚಂದ್ರಶೇಖರಯ್ಯ ಮತ್ತು ಪುಷ್ಪ ಸುಬ್ರಮಣ್ಯರವರಿಗೆ ಗೌರವ ಸಮರ್ಪಣೆ ನಡೆಯಲಿದೆ.

Wednesday, March 23, 2022

ರೆಸ್ಟೋರೆಂಟ್, ಮದ್ಯದಂಗಡಿ ಬೇರೆಡೆಗೆ ಸ್ಥಳಾಂತರಿಸಿ ಶಾಂತಿ ಸುವ್ಯವಸ್ಥೆ ಕಾಪಾಡಿ

ಭದ್ರಾವತಿ ನಗರಸಭೆ ವ್ಯಾಪ್ತಿಯ ಜನ್ನಾಪುರ ವಾಣಿಜ್ಯ ರಸ್ತೆಯಲ್ಲಿ ರೆಸ್ಟೋರೆಂಟ್ ಮತ್ತು ಮದ್ಯದಂಗಡಿಗಳಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು, ಇವುಗಳನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ಆಗ್ರಹಿಸಿ ಬುಧವಾರ ಹುತ್ತಾ ಕಾಲೋನಿ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ ಸಮೀಪದಲ್ಲಿರುವ ಆಟೋ ನಿಲ್ದಾಣ ಬಳಿ ಪ್ರತಿಭಟನಾ ಧರಣಿ ಸತ್ಯಾಗ್ರಹ ನಡೆಸಲಾಯಿತು.
    ಭದ್ರಾವತಿ: ನಗರಸಭೆ ವ್ಯಾಪ್ತಿಯ ಜನ್ನಾಪುರ ವಾಣಿಜ್ಯ ರಸ್ತೆಯಲ್ಲಿ ರೆಸ್ಟೋರೆಂಟ್ ಮತ್ತು ಮದ್ಯದಂಗಡಿಗಳಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು, ಇವುಗಳನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ಆಗ್ರಹಿಸಿ ಬುಧವಾರ ಹುತ್ತಾ ಕಾಲೋನಿ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ ಸಮೀಪದಲ್ಲಿರುವ ಆಟೋ ನಿಲ್ದಾಣ ಬಳಿ ಪ್ರತಿಭಟನಾ ಧರಣಿ ಸತ್ಯಾಗ್ರಹ ನಡೆಸಲಾಯಿತು.
    ಸ್ಥಳೀಯ ಮುಖಂಡ ಶಶಿಕುಮಾರ್ ಎಸ್. ಗೌಡ ಮಾತನಾಡಿ, ಜನ್ನಾಪುರ ವಾಣಿಜ್ಯ ರಸ್ತೆ ನಗರಸಭೆ ಶಾಖಾ ಕಛೇರಿ, ನಗರ ಆರೋಗ್ಯ ಕೇಂದ್ರ, ಕ್ಲಿನಿಕ್‌ಗಳು, ಶಾಲೆಗಳು, ದೇವಸ್ಥಾನ, ನ್ಯಾಯಬೆಲೆ ಅಂಗಡಿ, ಬ್ಯಾಂಕ್‌ಗಳು, ಔಷಧಿ ಹಾಗು ದಿನಸಿ ಅಂಗಡಿಗಳು ಸೇರಿದಂತೆ ಇನ್ನಿತರ ಅಂಗಡಿ ಮುಂಗಟ್ಟುಗಳಿಂದ ಕೂಡಿದೆ. ಇದರಿಂದಾಗಿ ಫಿಲ್ಟರ್‌ಶೆಡ್, ವೇಲೂರ್‌ಶೆಡ್, ಕೂಲಿಬ್ಲಾಕ್, ಆಂಜನೇಯ ಆಗ್ರಹಾರ, ನ್ಯೂಕಾಲೋನಿ, ವಿದ್ಯಾಮಂದಿರ, ಹಾಲಪ್ಪಶೆಡ್, ಹಾಜಪ್ಪ ಲೇಔಟ್, ಕೆ.ಸಿ ಬ್ಲಾಕ್, ಗಣೇಶ್‌ಕಾಲೋನಿ, ಜಿಂಕ್‌ಲೈನ್, ಭಂಡಾರಹಳ್ಳಿ ಸೇರಿದಂತೆ ಸುತ್ತಮುತ್ತನ ನಿವಾಸಿಗಳು ಪ್ರತಿ ದಿನ ಸುಮಾರು ೧೦ ಸಾವಿರಕ್ಕೂ ಹೆಚ್ಚು ಮಂದಿ ಈ ರಸ್ತೆಯಲ್ಲಿ ಸಂಚರಿಸುತ್ತಾರೆ ಎಂದರು.
    ಈ ರಸ್ತೆಯಲ್ಲಿ ಕಾನೂನು ಬಾಹಿರವಾಗಿ ಸುಮಾರು ೫ ರೆಸ್ಟೋರೆಂಟ್‌ಗಳು ಮತ್ತು ಅಬಕಾರಿ ನಿಯಮಗಳನ್ನು ಪಾಲನೆ ಮಾಡದ ಸಿಎಲ್೨ ಎರಡು ಹಾಗು ಎಂಎಸ್‌ಐಎಲ್ ಒಂದು ಮದ್ಯದಂಗಡಿ ಇದ್ದು, ಈ ಭಾಗದಲ್ಲಿ ಮದ್ಯವ್ಯಸನಿಗಳ ಹಾವಳಿ ಹೆಚ್ಚಾಗಿದೆ. ಇದರಿಂದಾಗಿ ಆಶಾಂತಿ ವಾತಾವರಣ ನಿರ್ಮಾಣವಾಗುತ್ತಿದ್ದು,  ಮಹಿಳೆಯರು, ವಯೋವೃದ್ಧರು, ಶಾಲಾ ಮಕ್ಕಳು ಸೇರಿದಂತೆ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಕೆಲವು ದಿನಗಳ ಹಿಂದೆ ಈ ರಸ್ತೆಯಲ್ಲಿ ಅಹಿತಕರ ಘಟನೆಯೊಂದು ನಡೆದಿದ್ದು, ಆದರೂ ಸಹ ಸಂಬಂಧಪಟ್ಟ ಇಲಾಖೆಯವರು ಗಮನ ಹರಿಸುತ್ತಿಲ್ಲ ಎಂದು ಆರೋಪಿಸಿದರು.
    ರೆಸ್ಟೋರೆಂಟ್ ಮತ್ತು ಮದ್ಯದಂಗಡಿಗಳನ್ನು ಸಾರ್ವಜನಿಕರ ಹಿತದೃಷ್ಟಿಯಿಂದ ತಕ್ಷಣ ಬೇರೆಡೆಗೆ ಸ್ಥಳಾಂತರಿಸಿ ಕಾನೂನು ಸುವ್ಯವಸ್ಥೆ ಕಾಪಾಡಬೇಕು. ಇಲ್ಲವಾದಲ್ಲಿ ಶಿವಮೊಗ್ಗ ಜಿಲ್ಲೆಗೆ ಏ.೨೪ರಂದು ಆಗಮಿಸಲಿರುವ  ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಪಾದಯಾತ್ರೆ ಮೂಲಕ ಭೇಟಿ ಮಾಡಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ದೂರು ನೀಡುವುದಾಗಿ ಎಚ್ಚರಿಸಿದರು.
    ಕರುನಾಡು ಹಿತರಕ್ಷಣಾ ಸಮಿತಿ ರಾಜ್ಯಾಧ್ಯಕ್ಷ ವೈ. ಶಶಿಕುಮಾರ್, ಅಖಿಲ ಭಾರತ ವೀರಶೈವ ಮಹಾಸಭಾ ಯುವ ಘಟಕದ ಅಧ್ಯಕ್ಷ ಮಂಜುನಾಥ್ ಸೇರಿದಂತೆ ಇನ್ನಿತರರು ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.


ಗ್ರಾಮಾಂತರ ಕಾಂಗ್ರೆಸ್ ಯುವ ಘಟಕದಿಂದ ಭಗತ್ ಸಿಂಗ್ ಪುಣ್ಯ ಸ್ಮರಣೆ

ಭದ್ರಾವತಿಯಲ್ಲಿ ವೀರಯೋಧರನ್ನು ಸನ್ಮಾನಿಸಿ ಗೌರವಿಸುವ ಮೂಲಕ ಗ್ರಾಮಾಂತರ ಯುವ ಕಾಂಗ್ರೆಸ್ ವತಿಯಿಂದ ಬುಧವಾರ ಸ್ವಾತಂತ್ರ್ಯ ಸಂಗ್ರಾಮದ ಕ್ರಾಂತಿಕಾರಿ ಹೋರಾಟಗಾರ ಭಗತ್ ಸಿಂಗ್ ಪುಣ್ಯ ಸ್ಮರಣೆ ವಿಶೇಷವಾಗಿ ಆಚರಿಸಲಾಯಿತು.  
    ಭದ್ರಾವತಿ, ಮಾ. ೨೩: ಗ್ರಾಮಾಂತರ ಯುವ ಕಾಂಗ್ರೆಸ್ ವತಿಯಿಂದ ಬುಧವಾರ ಸ್ವಾತಂತ್ರ್ಯ ಸಂಗ್ರಾಮದ ಕ್ರಾಂತಿಕಾರಿ ಹೋರಾಟಗಾರ ಭಗತ್ ಸಿಂಗ್ ಪುಣ್ಯ ಸ್ಮರಣೆ ವಿಶೇಷವಾಗಿ ಆಚರಿಸಲಾಯಿತು.  
    ಶಾಸಕ ಬಿ.ಕೆ ಸಂಗಮೇಶ್ವರ್‌ರವರ ಗೃಹ ಕಛೇರಿಯಲ್ಲಿ ದೇಶ ರಕ್ಷಣೆಯಲ್ಲಿ ತೊಡಗಿಸಿಕೊಂಡಿರುವ ವೀರಯೋಧರನ್ನು ಸನ್ಮಾನಿಸಿ ಗೌರವಿಸುವ ಮೂಲಕ ಭಗತ್ ಸಿಂಗ್‌ರವರ ದೇಶ ಪ್ರೇಮ, ಆದರ್ಶತನ ಹಾಗು ಕ್ರಾಂತಿಕಾರಿ ಹೋರಾಟಗಳನ್ನು ಸ್ಮರಿಸಲಾಯಿತು. ಇದಕ್ಕೂ ಮೊದಲು ನಗರದ ಬಿ.ಎಚ್ ರಸ್ತೆ ಅಂಬೇಡ್ಕರ್ ವೃತ್ತದಿಂದ ಬೈಕ್ ರ್‍ಯಾಲಿ ನಡೆಸಲಾಯಿತು.
    ಗ್ರಾಮಾಂತರ ಯುವ ಕಾಂಗ್ರೆಸ್ ಅಧ್ಯಕ್ಷ ಆಫ್ತಬ್ ಅಹಮದ್ ನೇತೃತ್ವ ವಹಿಸಿದ್ದರು. ಉದ್ಯಮಿ ಬಿ.ಕೆ ಜಗನ್ನಾಥ್, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ರಾಜ್ಯ ವಕ್ತಾರ ಆಮೋಸ್, ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ಬಿ. ಗಂಗಾಧರ್, ಅಸಂಘಟಿತ ಕಾರ್ಮಿಕ ವಲಯ ನಗರ ಘಟಕದ ಅಧ್ಯಕ್ಷ ಐಸಾಕ್ ಲಿಂಕನ್, ಗ್ರಾಮಾಂತರ ಯುವ ಕಾಂಗ್ರೆಸ್ ಉಪಾಧ್ಯಕ್ಷ ತಬ್ರೆಜ್ ಖಾನ್, ನವೀನ್ ಹಾಗೂ ಪ್ರಧಾನ ಕಾರ್ಯದರ್ಶಿಗಳಾದ ಸಜ್ಜದ್, ಆನಂದ್, ವರುಣ್ ಹಾಗು ಕಾರ್ಯಕರ್ತರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.  

ಸಾರ್ವಜನಿಕರ ಕೆಲಸಗಳನ್ನು ನಿಗದಿತ ಅವಧಿಯಲ್ಲಿ ಮಾಡಿಕೊಡುವುದು ಸರ್ಕಾರಿ ಅಧಿಕಾರಿಗಳ ಜವಾಬ್ದಾರಿ

ವಿನಾಕಾರಣ ಅಲೆಯುವಂತೆ ಮಾಡದಿರಿ, ಕರ್ತವ್ಯದಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಿ 

ಭದ್ರಾವತಿ ಹಳೇ ತಾಲೂಕು ಕಛೇರಿ ಆವರಣದಲ್ಲಿ ಭ್ರಷ್ಟಾಚಾರ ನಿಗ್ರಹ ದಳ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಜನ ಸಂಪರ್ಕ, ಅಹವಾಲು ಸ್ವೀಕಾರ ಸಭೆಯ ನೇತೃತ್ವ ವಹಿಸಿ ಪೊಲೀಸ್ ಉಪಾಧೀಕ್ಷಕ ವಸಂತಕುಮಾರ್ ಮಾತನಾಡಿದರು. 
    ಭದ್ರಾವತಿ, ಮಾ. ೨೩: ಸಾರ್ವಜನಿಕರನ್ನು ಕಛೇರಿಯಿಂದ ಕಛೇರಿಗೆ ಅಲೆಯುವಂತೆ ಮಾಡದೆ ನಿಗದಿತ ಸಮಯದಲ್ಲಿ ಅವರ ಕೆಲಸ ಮಾಡಿಕೊಡುವುದು ಸರ್ಕಾರಿ ಅಧಿಕಾರಿಗಳ ಜವಾಬ್ದಾರಿಯಾಗಿದ್ದು, ಅಲ್ಲದೆ ಗ್ರಾಮೀಣ ಭಾಗದಿಂದ ಬರುವ ಜನರಿಗೆ ತಮ್ಮ ಕೆಲಸದ ಬಗ್ಗೆ ತಿಳುವಳಿಕೆ ಮೂಡಿಸಬೇಕು. ವಿನಾಕಾರಣ ಅವರೊಂದಿಗೆ ಸಂಘರ್ಷಕ್ಕೆ ಇಳಿಯಬಾರದು. ಕರ್ತವ್ಯ ನಿರ್ವಹಣೆಯಲ್ಲಿ ಯಾವುದೇ ರೀತಿ ಭ್ರಷ್ಟಾಚಾರವಿರಬಾರದು ಎಂದು ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಉಪಾಧೀಕ್ಷಕ ವಸಂತಕುಮಾರ್ ಹೇಳಿದರು. 
ಅವರು ಬುಧವಾರ ಹಳೇ ತಾಲೂಕು ಕಛೇರಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಜನ ಸಂಪರ್ಕ, ಅಹವಾಲು ಸ್ವೀಕಾರ ಸಭೆಯ ನೇತೃತ್ವ ವಹಿಸಿ ಮಾತನಾಡಿದರು. 
ಸರ್ಕಾರಿ ಅಧಿಕಾರಿಗಳ ವಿರುದ್ಧ ಸಾಕಷ್ಟು ದೂರುಗಳು ಬರುತ್ತಿದ್ದು, ಸರ್ಕಾರಿ ಇಲಾಖೆಗಳ ಆಡಳಿತ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ನಿರ್ಮೂಲನೆ ಮಾಡಬೇಕೆಂಬುದು ಇಲಾಖೆಯ ಆಶಯವಾಗಿದೆ. ಇದಕ್ಕೆ ಪೂರಕವಾಗಿ ಅಧಿಕಾರಿಗಳು ನಡೆದುಕೊಳ್ಳಬೇಕು. ತಮ್ಮ ಕರ್ತವ್ಯದಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಬೇಕೆಂದರು. 
ಜನರ ಸಮಸ್ಯೆಗಳಿಗೆ ಪೂರಕವಾಗಿ ಸ್ಪಂದಿಸದ ಹಾಗು ಅವರ ಕೆಲಸಗಳನ್ನು ಮಾಡಿಕೊಡಲು ವಿನಾಕಾರಣ ತೊಂದರೆ ಕೊಡುವ ಅಧಿಕಾರಿಗಳ ವಿರುದ್ಧ ಇಲಾಖೆಗೆ ದೂರು ನೀಡಬಹುದು. ಇಲಾಖೆ ದೂರುಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸಿ ನ್ಯಾಯ ಒದಗಿಸಿಕೊಡಲಿದೆ ಎಂದರು. 
ಪೊಲೀಸ್ ಇನ್ಸ್‌ಪೆಕ್ಟರ್ ಇಮ್ರಾನ್ ಬೇಗ್, ಇಲಾಖೆಯ ಸುಧೀಂದ್ರ, ಅರುಣ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ನಗರಸಭೆ ಪೌರಾಯುಕ್ತ ಕೆ. ಪರಮೇಶ್, ನಗರ ಆಹಾರ ನಿರೀಕ್ಷಕ ಎ.ಟಿ ಬಸವರಾಜ್, ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್, ಮೆಸ್ಕಾಂ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು. ಸ್ಥಳದಲ್ಲಿಯೇ ಹಲವಾರು ದೂರುಗಳು ಸಲ್ಲಿಕೆಯಾದವು. ಉಪ ತಹಸೀಲ್ದಾರ್ ಮಂಜನಾಯ್ಕ ನಿರೂಪಿಸಿದರು. 

Tuesday, March 22, 2022

ಕಾನೂನುಗಳ ಅರಿವಿನಿಂದ ಉತ್ತಮ ಸಮಾಜ ನಿರ್ಮಾಣ : ಕಾಳಿದಾಸ್ ನಾಯ್ಕ

ಭದ್ರಾವತಿ ತಾಲ್ಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘದ ನೇತೃತ್ವದಲ್ಲಿ ಮಂಗಳವಾರ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಗ್ರಾಹಕರ ಹಾಗೂ ಜಲ ದಿನಾಚರಣೆ ಕಾರ್ಯಕ್ರಮಕ್ಕೆ ಪ್ರಾಚಾರ್ಯ ಕಾಳಿದಾಸ್ ನಾಯ್ಕ ಚಾಲನೆ ನೀಡಿದರು.
    ಭದ್ರಾವತಿ, ಮಾ. ೨೨:  ಕಾನೂನುಗಳ ಅರಿವಿನಿಂದ ಉತ್ತಮ ಸಮಾಜ ನಿರ್ಮಾಣ ಮಾಡುವ ಜೊತೆಗೆ ನಮ್ಮ ಜವಾಬ್ದಾರಿ, ಹಕ್ಕುಗಳ ಅರಿವು ತಿಳಿಯುತ್ತದೆ ಎಂದು ಕೈಗಾರಿಕಾ ತರಬೇತಿ ಸಂಸ್ಥೆ ಪ್ರಾಂಶುಪಾಲ ಕಾಳಿದಾಸ್ ನಾಯ್ಕ ಹೇಳಿದರು.
    ಅವರು ತರಬೇತಿ ಸಂಸ್ಥೆಯಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘದ ನೇತೃತ್ವದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಗ್ರಾಹಕರ ಹಾಗೂ ಜಲ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
    ಗ್ರಾಹಕರ ಹಕ್ಕುಗಳ ರಕ್ಷಣೆ ಮಾಡಿಕೊಳ್ಳಲು ಇರುವ ಕಾನೂನು ಭಾಗದ ವಿಚಾರ ಹಾಗೂ ಜಲ ಸಂರಕ್ಷಣೆ ಮೂಲಕ ಭವಿಷ್ಯದಲ್ಲಿ ಅದನ್ನು ಹೇಗೆ ನಿಭಾಯಿಸಿಕೊಳ್ಳಲು ಸಾಧ್ಯ ಎಂಬ ವಿಚಾರಗಳ ಸಮಗ್ರ ಮಾಹಿತಿ ಭವಿಷ್ಯದ ಪೀಳಿಗೆಗೆ ಮನವರಿಕೆ ಮಾಡಿಕೊಡಲು ನೆರವಾಗಿದೆ ಎಂದರು.
    ಗ್ರಾಹಕರ ಹಕ್ಕು ಮತ್ತು ಅವರಿಗೆ ಸಿರುವ ನೆರವಿನ ಕುರಿತಾಗಿ ಮಾತನಾಡಿದ ವಕೀಲ ಮಹಮ್ಮದ್ ಇಲಿಯಾಸ್, ಪ್ರತಿಯೊಬ್ಬ ವ್ಯಕ್ತಿಯೂ ಒಂದಲ್ಲ ಒಂದು ರೀತಿಯಲ್ಲಿ ಗ್ರಾಹಕನಾಗಿ ತನ್ನ ಜವಾಬ್ದಾರಿ ನಿರ್ವಹಣೆ ಮಾಡುವ ಸಂದರ್ಭ ಒದಗಿ ಬರಲಿದೆ, ಇದರ ಜ್ಞಾನವಿದ್ದಲ್ಲಿ ಅವರಿಗೆ  ಸುಲಭವಾಗಿ ನೆರವು ಸಿಗುವ ಜೊತೆಗೆ ಅವರ ಹಕ್ಕುಗಳ ರಕ್ಷಣೆ ಆಗಲಿದೆ ಎಂದರು.
    ಜಲ ದಿನಾಚರಣೆ ಹಿನ್ನೆಲೆಯಲ್ಲಿ ಮಾತನಾಡಿದ ವಕೀಲ ಎಚ್.ವಿ ಆದರ್ಶ್, ಭೂಮಿಯ ಒಟ್ಟು ವಿಸ್ತೀರ್ಣದಲ್ಲಿ ಶೇ.೭೦ರಷ್ಟು ನೀರಿನಾಂಶವಿದ್ದು, ಉಳಿದ ಶೇ.೩೦ ಭೂಮಿ ಇದೆ, ಇಷ್ಟಾದರೂ ನೀರಿನ ಸಂರಕ್ಷಣೆ ಮಾಡಿಕೊಳ್ಳದಿದ್ದಲ್ಲಿ ಭವಿಷ್ಯದಲ್ಲಿ ಸಾಕಷ್ಟು ಸಮಸ್ಯೆ ಎದುರಿಸುವ ಪರಿಸ್ಥಿತಿ ಇದೆ ಎಂದರು.
    ಸಹಾಯಕ ಸರ್ಕಾರಿ ಅಭಿಯೋಜಕ ಎಂ.ಜಿ ತ್ಯಾಗರಾಜ್, ವಕೀಲರ ಸಂಘದ ಅಧ್ಯಕ್ಷ ಕೆ.ಎನ್ ಶ್ರೀಹರ್ಷ, ಪದಾಧಿಕಾರಿಗಳಾದ ಡಿ.ಎಂ.ವಿಶ್ವನಾಥ್,ವಿ.ಉದಯಕುಮಾರ್, ಎಸ್. ಮಂಜಪ್ಪ, ವಿಮಲ, ಶಿಕ್ಷಕರಾದ ಪುಟ್ಟಲಿಂಗಮೂರ್ತಿ, ಉದಯಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಮುಂಚೂಣಿಗೆ ಬರಲು ಎಲ್ಲರ ಸಹಕಾರ ಅಗತ್ಯ : ಶೃತಿ

ಭದ್ರಾವತಿ ಉಜ್ಜನಿಪುರದ ಡಾನ್ ಬಾಸ್ಕೋ ಕೈಗಾರಿಕಾ ತರಬೇತಿ ಕೇಂದ್ರದಲ್ಲಿ ಮಂಗಳವಾರ ಹೊಲಿಗೆ ತರಬೇತಿ ಸಮಾರೋಪ ಸಮಾರಂಭ ಹಾಗು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು.  
    ಭದ್ರಾವತಿ, ಮಾ. ೨೨: ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಮುಂಚೂಣಿಗೆ ಬರಬೇಕು. ಈ ನಿಟ್ಟಿನಲ್ಲಿ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಸಹಾಯವಾಣಿ ಕೇಂದ್ರದ ಶೃತಿ ಹೇಳಿದರು.
    ಅವರು ಮಂಗಳವಾರ ಉಜ್ಜನಿಪುರದ ಡಾನ್ ಬಾಸ್ಕೋ ಕೈಗಾರಿಕಾ ತರಬೇತಿ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ಹೊಲಿಗೆ ತರಬೇತಿ ಸಮಾರೋಪ ಸಮಾರಂಭ ಹಾಗು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
    ಮಹಿಳೆಯರು ಕೇವಲ ಮನೆಗೆ ಸೀಮಿತವಾಗದೆ ಸಮಾಜದ ಮುಖ್ಯ ವಾಹಿನಿನಲ್ಲಿ ಗುರುತಿಸಿಕೊಳ್ಳಬೇಕು. ಡಾನ್ ಬಾಸ್ಕೋ ಸಂಸ್ಥೆಯು ಮಹಿಳೆಯರಿಗೆ ವಿಶೇಷವಾಗಿ ಕೌಶಲ್ಯ ತರಬೇತಿ ಪ್ರಾರಂಭಿಸಿರುವುದು ಹೆಚ್ಚಿನ ಅನುಕೂಲವಾಗಿದ್ದು, ಎಲ್ಲರೂ ಇದರ ಸದುಪಯೋಗ ಪಡೆದುಕೊಳ್ಳಬೇಕೆಂದರು.
    ಡಾನ್ ಬಾಸ್ಕೋ ಸಂಸ್ಥೆಯ ನಿರ್ದೇಶಕ ಪಾದರ್ ಆರೋಗ್ಯ ರಾಜ್ ಮಾತನಾಡಿ, ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಮಹಿಳೆ ತನ್ನನ್ನು ತಾನು ಅರಿಯುವ ದಿನವಾಗಿದೆ. ಸಮಾಜದಲ್ಲಿ ಮಹಿಳೆಯರು ಸಹ ಘನತೆ, ಗೌರವದ ಬದುಕು ಕಟ್ಟಿಕೊಳ್ಳುವಂತಾಗಬೇಕು. ಎಲ್ಲಾ ಕ್ಷೇತ್ರಗಳಲ್ಲೂ ಮುಂಚೂಣಿಗೆ ಬರಬೇಕು. ಜೊತೆಗೆ ಕುಟುಂಬದಲ್ಲಿ ಮಹಿಳೆಯರ ಪಾತ್ರ ಪ್ರಮುಖವಾಗಿದ್ದು, ಮನೆಯೇ ಮೊದಲ ಪಾಠ ಶಾಲೆಯಾಗಿದೆ. ಮಕ್ಕಳಿಗೆ ಉತ್ತಮ ಸಂಸ್ಕಾರದ ಜೊತೆಗೆ ಅವರನ್ನು ಭವಿಷ್ಯದ ಪ್ರಜೆಗಳಾಗಿ ರೂಪಿಸಬೇಕು. ಈ ನಿಟ್ಟಿನಲ್ಲೂ ಸಹ ಹೆಚ್ಚಿನ ಗಮನ ಹರಿಸಬೇಕು. ಪುರುಷರನ್ನು ತಪ್ಪಾಗಿ ಅರ್ಥೈಸಿಕೊಳ್ಳದೆ ಇಬ್ಬರು ಸಹ ಸರಿಸಮಾನವಾಗಿ ಮುನ್ನಡೆಯಬೇಕು. ಇಬ್ಬರು ತಮ್ಮ ಜವಾಬ್ದಾರಿ ಅರಿತುಕೊಳ್ಳಬೇಕು. ಆಗ ಮಾತ್ರ ಉತ್ತಮ ಸಮಾಜ ನಿರ್ಮಾಣಗೊಳ್ಳಲು ಸಾಧ್ಯ ಎಂದರು.
    ಆಶಾ ಕಾರ್ಯಕರ್ತೆ ರಾಜೇಶ್ವರಿ ಮಾತನಾಡಿ, ಡಾನ್ ಬಾಸ್ಕೋ ಸಂಸ್ಥೆಯು ಬಡ ವರ್ಗದ ಜನರ ಏಳಿಗೆಗೆ ಶ್ರಮಿಸುತ್ತಿದ್ದು, ವಿಶೇಷವಾಗಿ ಮಹಿಳೆಯರ ಅಭಿವೃದ್ಧಿಗೆ ಹೆಚ್ಚಿನ ಗಮನ ಹರಿಸಿದೆ. ಕೋವಿಡ್-೧೯ರ ಸಂದರ್ಭದಲ್ಲಿ ಗ್ರಾಮೀಣ ಪ್ರದೇಶದ ಜನರು ಸೋಂಕಿನಿಂದ ರಕ್ಷಿಸಿಕೊಳ್ಳಲು ಅಗತ್ಯವಿರುವ ಸೌಲಭ್ಯಗಳನ್ನು ಕಲ್ಪಿಸಿಕೊಡುವಲ್ಲಿ ಯಶಸ್ವಿಯಾಗಿದೆ. ಅಲ್ಲದೆ ಆಶಾ ಕಾರ್ಯಕರ್ತೆಯರ ನೆರವಿಗೂ ಧಾವಿಸಿದೆ. ಈ ಹಿನ್ನಲೆಯಲ್ಲಿ ಸಂಸ್ಥೆಯ ಸೇವಾ ಕಾರ್ಯಕ್ಕೆ ಚಿರಋಣಿ ಎಂದರು.
    ಪ್ರಾಂಶುಪಾಲ ಪಾದರ್ ಜೋಮಿ, ಆಡಳಿತಾಧಿಕಾರಿ ಸೋನಿಜೆನ್ ಹಾಗು ತರಬೇತಿದಾರರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ೬ ಮಂದಿ ಆಶಾ ಕಾರ್ಯಕರ್ತೆಯರಿಗೆ ಗ್ರಾಮೀಣ ಪ್ರದೇಶದ ಜನರಿಗೆ ಉಚಿತವಾಗಿ ಸಕ್ಕರೆ ಖಾಯಿಲೆ ಪರೀಕ್ಷೆ ನಡೆಸಲು ಅನುಕೂಲವಾಗುವಂತೆ ಅಗತ್ಯವಿರುವ ಪರಿಕರ ವಿತರಿಸಲಾಯಿತು. ಡಾನ್ ಬಾಸ್ಕೋ ಸಂಸ್ಥೆ ಮೊದಲ ಬಾರಿಗೆ ಕಳೆದ ೩ ದಿನಗಳ ಹಿಂದೆ ಮಹಿಳೆಯರಿಗೆ ಉಚಿತ ಹೊಲಿಗೆ ತರಬೇತಿ ಆರಂಭಿಸಿದ್ದು, ತರಬೇತಿ ಪಡೆದವರು ತಮ್ಮ ಅನುಭವಗಳನ್ನು ಹಂಚಿಕೊಂಡರು.

ಮಾ.೨೩ರಂದು ಧರಣಿ ಸತ್ಯಾಗ್ರಹ


    ಭದ್ರಾವತಿ, ಮಾ. ೨೨: ನಗರದ ಜನ್ನಾಪುರ ವಾಣಿಜ್ಯ ರಸ್ತೆಯಲ್ಲಿರುವ ರೆಸ್ಟೋರೆಂಟ್‌ಗಳು ಮತ್ತು ಮದ್ಯದಂಗಡಿಗಳಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವ ಹಿನ್ನಲೆಯಲ್ಲಿ ಇವುಗಳನ್ನು ಸ್ಥಳಾಂತರಗೊಳಿಸುವಂತೆ ಆಗ್ರಹಿಸಿ ಮಾ.೨೩ರಂದು ಬೆಳಿಗ್ಗೆ ೧೧ ಗಂಟೆಗೆ ವಿಶ್ವೇಶ್ವರಯ್ಯ ಆಟೋ ನಿಲ್ದಾಣದ ಸಮೀಪ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ.
    ರೆಸ್ಟೋರೆಂಟ್‌ಗಳು ಮತ್ತು ಮದ್ಯದಂಗಡಿಗಳಿಂದ ಈ ಭಾಗದಲ್ಲಿ ಮದ್ಯವ್ಯಸನಿಗಳ ಹಾವಳಿ ಹೆಚ್ಚಾಗಿದ್ದು, ಇದರಿಂದಾಗಿ ಮಕ್ಕಳು, ಮಹಿಳೆಯರು ಮತ್ತು ವಯೋವೃದ್ಧರು ಓಡಾಡಲು ತೊಂದರೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಇವುಗಳನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ಆಗ್ರಹಿಸಿ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ. ಜನ್ನಾಪರ ಸುತ್ತಮುತ್ತಲ ವಾರ್ಡ್‌ಗಳ ಜನಪ್ರತಿನಿಧಿಗಳು, ವಿವಿಧ ಸಂಘ-ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಮುಖಂಡರು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಸ್ಥಳೀಯ ಮುಖಂಡರಾದ ಶಶಿಕುಮಾರ್ ಎಸ್ ಗೌಡ ಹಾಗು ಮಂಜುನಾಥ್ ಕೋರಿದ್ದಾರೆ.

ಮಾ.೨೩ ಜನಸಂಪರ್ಕ, ಅಹವಾಲು ಸ್ವೀಕಾರ ಸಭೆ

    ಭದ್ರಾವತಿ, ಮಾ. ೨೨: ತಾಲೂಕು ಕಛೇರಿ ಸಭಾಂಗಣದಲ್ಲಿ ಮಾ.೨೩ರಂದು ಮಧ್ಯಾಹ್ನ ೧೨ ಗಂಟೆಗೆ ಭ್ರಷ್ಟಾಚಾರ ನಿಗ್ರಹ ದಳ ವತಿಯಿಂದ ಜನಸಂಪರ್ಕ ಮತ್ತು ಅಹವಾಲು ಸ್ವೀಕಾರ ಸಭೆ ಹಮ್ಮಿಕೊಳ್ಳಲಾಗಿದೆ.
    ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಉಪಾಧೀಕ್ಷಕರು ಅಧ್ಯಕ್ಷತೆ ವಹಿಸಲಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ತಹಸೀಲ್ದಾರ್ ಆರ್. ಪ್ರದೀಪ್ ಕೋರಿದ್ದಾರೆ.

ಮಾ.೨೫ರಂದು ಯುಗಾದಿ ಕವಿಗೋಷ್ಠಿ

    ಭದ್ರಾವತಿ, ಮಾ. ೨೨: ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಮಾ.೨೫ರ ಮಧ್ಯಾಹ್ನ ೩ ಗಂಟೆಗೆ ನಗರದ ಬಿ.ಎಚ್ ರಸ್ತೆ ಹಾಲಪ್ಪ ವೃತ್ತದಲ್ಲಿರುವ ಭದ್ರಾ ಪ್ರೌಢಶಾಲೆಯಲ್ಲಿ ಯುಗಾದಿ ಕವಿಗೋಷ್ಠಿ ಹಮ್ಮಿಕೊಳ್ಳಲಾಗಿದೆ.
    ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಕವಿಗೋಷ್ಠಿ ಉದ್ಘಾಟಿಸಲಿದ್ದು, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಕೋಗಲೂರು ತಿಪ್ಪೇಸ್ವಾಮಿ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಕೆ.ಎಚ್ ತೀರ್ಥಯ್ಯ, ಮುಖ್ಯೋಪಾಧ್ಯಾಯ ಬಿ.ಎಚ್ ವಿರುಪಾಕ್ಷಪ್ಪ, ಕರ್ನಾಟಕ ಜಾನಪದ ಪರಿಷತ್ ತಾಲೂಕು ಶಾಖೆ ಅಧ್ಯಕ್ಷ ಕೋಡ್ಲುಯಜ್ಞಯ್ಯ, ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಅಧ್ಯಕ್ಷೆ ಎಂ.ಎಸ್ ಸುಧಾಮಣಿ, ಕಸಾಪ ಹಿರಿಯೂರು ಹೋಬಳಿ ಘಟಕದ ಅಧ್ಯಕ್ಷ ಸಿದ್ದೋಜಿರಾವ್, ಹೊಳೆಹೊನ್ನೂರು ಹೋಬಳಿ ಘಟಕದ ಅಧ್ಯಕ್ಷ ಎಸ್.ಬಿ ಸಿದ್ದಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು.

Monday, March 21, 2022

ಅಖಿಲ ಭಾರತ ವಿಶ್ವವಿದ್ಯಾಲಯ ಸೇಪಕ್ ಟಕ್ರಾ ಪಂದ್ಯಾವಳಿಗೆ ಸುಂದರೇಶ್, ಕುಂಬರೇಶ್ ಆಯ್ಕೆ

ಪಿ. ಸುಂದರೇಶ್
    ಭದ್ರಾವತಿ, ಮಾ. ೨೧: ಉತ್ತರ ಪ್ರದೇಶದ ಬರೇಲಿ ಎಂಜೆಪಿ ರೋಹಿಲ್‌ಖಾಂಡ್ ವಿಶ್ವ ವಿದ್ಯಾಲಯದಲ್ಲಿ ಮಾ.೨೬ರ ವರೆಗೆ ನಡೆಯಲಿರುವ ಅಖಿಲ ಭಾರತ ವಿಶ್ವ ವಿದ್ಯಾಲಯ ಮಟ್ಟದ ಸೇಪಕ್ ಟಕ್ರಾ ಪಂದ್ಯಾವಳಿಗೆ ನಗರದ ಹೊಸಮನೆ ಪ್ರಥಮ ದರ್ಜೆ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.
    ಕಾಲೇಜಿನ ದ್ವಿತೀಯ ಬಿ.ಎ ವಿದ್ಯಾರ್ಥಿಗಳಾದ ಪಿ. ಸುಂದರೇಶ್ ಮತ್ತು  ಪಿ. ಕುಂಬರೇಶ್ ಅಖಿಲ ಭಾರತ ವಿಶ್ವವಿದ್ಯಾಲಯ ಮಟ್ಟದ ಸೇಪಕ್ ಟಕ್ರಾ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ.
    ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್, ಕಾಲೇಜಿನ ಪ್ರಾಂಶುಪಾಲರು, ದೈಹಿಕ ಶಿಕ್ಷಣ ನಿರ್ದೇಶಕರು, ಅಧ್ಯಾಪಕ ಮತ್ತು ಅಧ್ಯಾಪಕೇತರ ಹಾಗು ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ. ಪಿ. ಸುಂದರೇಶ್ ಪರಮೇಶ್ ಮತ್ತು ಸೆಲ್ವಿ ಹಾಗು ಪಿ. ಕುಂಬರೇಶ್ ಪಾಂಡು ಮತ್ತು ಮಣಿ ದಂಪತಿ ಪುತ್ರರಾಗಿದ್ದಾರೆ.


 ಪಿ. ಕುಂಬರೇಶ್