Saturday, April 30, 2022

ಸ್ವಾಭಿಮಾನದ ಬದುಕಿನ ಪರಿಕಲ್ಪನೆ ಹೊಂದಿದ್ದ ಪ್ರೊ. ಬಿ. ಕೃಷ್ಣಪ್ಪ : ಸತ್ಯ

ಭದ್ರಾವತಿ ರಂಗಪ್ಪ ವೃತ್ತದ ಜೈ ಭೀಮ್ ನಗರದಲ್ಲಿರುವ ದಲಿತ ಸಂಘರ್ಷ ಸಮಿತಿ ಕಛೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರೊ. ಬಿ. ಕೃಷ್ಣಪ್ಪನವರ ೨೫ನೇ ವರ್ಷದ ಪುಣ್ಯ ಸ್ಮರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಸಮಿತಿ ರಾಜ್ಯ ಖಜಾಂಚಿ ಸತ್ಯ ಮಾತನಾಡಿದರು.
    ಭದ್ರಾವತಿ, ಏ. ೩೦: ರಾಜಕೀಯ ಪರಿಕಲ್ಪನೆ ಮೂಲಕ ರಾಜ್ಯದಲ್ಲಿ ಶೋಷಿತರು, ದಲಿತರಿಗೆ ಸ್ವಾಭಿಮಾನದ ಬದುಕು ರೂಪಿಸಿಕೊಡುವ ಚಿಂತನೆಯನ್ನು ಪ್ರೊ. ಬಿ. ಕೃಷ್ಣಪ್ಪ ಹೊಂದಿದ್ದರು ಎಂದು ದಲಿತ ಸಂಘರ್ಷ ಸಮಿತಿ ರಾಜ್ಯ ಖಜಾಂಚಿ ಸತ್ಯ ಹೇಳಿದರು.
    ಅವರು ಶನಿವಾರ ನಗರದ ರಂಗಪ್ಪ ವೃತ್ತದ ಜೈ ಭೀಮ್ ನಗರದಲ್ಲಿರುವ ಕಛೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರೊ. ಬಿ. ಕೃಷ್ಣಪ್ಪನವರ ೨೫ನೇ ವರ್ಷದ ಪುಣ್ಯ ಸ್ಮರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
    ಯಾರೊಂದಿಗೂ ರಾಜಿ ಮಾಡಿಕೊಳ್ಳದೆ ಸ್ವಾಭಿಮಾನದ ಬದುಕು ಕಟ್ಟಿಕೊಳ್ಳುವ ಜೊತೆಗೆ ರಾಜ್ಯದಲ್ಲಿ ದಲಿತ ಚಳುವಳಿ ಹುಟ್ಟು ಹಾಕಿದ ಪ್ರೊ. ಬಿ. ಕೃಷ್ಣಪ್ಪನವರು ವಿಶಿಷ್ಟವಾದ ವ್ಯಕ್ತಿತ್ವ ಹೊಂದಿದ್ದರು. ದಲಿತರು, ಶೋಷಿತರ ಪರವಾಗಿ ರಾಜ್ಯದೆಲ್ಲೆಡೆ ಹೋರಾಟ ನಡೆಸುವ ಜೊತೆಗೆ ಅವರಿಗೆ ಉತ್ತಮ ಭವಿಷ್ಯ ರೂಪಿಸಿಕೊಡುವ ಪರಿಕಲ್ಪನೆ ಹೊಂದಿದ್ದರು. ದಲಿತರು, ಶೋಷಿತರು ಸಹ ರಾಜಕೀಯ ಸ್ಥಾನಮಾನ ಹೊಂದಲು ರಾಜಕೀಯ ಪಕ್ಷದ ಅವಶ್ಯಕತೆ ಇದೆ ಎಂಬುದನ್ನು ಮನಗಂಡಿದ್ದರು ಎಂದರು.
    ಬಿ. ಕೃಷ್ಣಪ್ಪನವರು ಇಂದಿಗೂ ನಮ್ಮೆಲ್ಲರಿಗೂ ಹೋರಾಟದ ದಾರಿದೀಪವಾಗಿದ್ದಾರೆ. ಇವರ ಹೋರಾಟದ ಸ್ಪೂರ್ತಿಯಿಂದಾಗಿ ಹಲವು ಹೋರಾಟಗಳಲ್ಲಿ ನ್ಯಾಯ ಲಭಿಸಿದೆ. ಮುಂದಿನ ದಿನಗಳಲ್ಲೂ ಇವರ ಆಶಯದಂತೆ ನಾವೆಲ್ಲರೂ ನಡೆಯಬೇಕಾಗಿದೆ ಎಂದರು.
    ಡಿಎಸ್‌ಎಸ್ ಜಿಲ್ಲಾ ಸಂಚಾಲಕ ಚಿನ್ನಯ್ಯ, ಈಶ್ವರಪ್ಪ ಇನ್ನಿತರರು ಪಾಲ್ಗೊಂಡು ಮಾತನಾಡಿದರು. ಪ್ರಮುಖರಾದ ಸಿ. ಜಯಪ್ಪ, ಶಾಂತಿ, ಎನ್. ಗೋವಿಂದ, ವೆಂಕಟೇಶ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ನಗರ, ಗ್ರಾಮಾಂತರ ಭಾಗದ ಹಲವು ಮಂದಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಭದ್ರಾವತಿ ತಾಲೂಕಿನ ಗ್ರಾಮಾಂತರ ಹಾಗು ನಗರ ಪ್ರದೇಶದ ಹಲವು ಮಂದಿ ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
    ಭದ್ರಾವತಿ, ಏ. ೩೦: ತಾಲೂಕಿನ ಗ್ರಾಮಾಂತರ ಹಾಗು ನಗರ ಪ್ರದೇಶದ ಹಲವು ಮಂದಿ ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
    ಬಿಳಿಕಿ, ಬಿಳಿಕಿ ತಾಂಡ, ಹೆಬ್ಬಂಡಿ, ಲಕ್ಷ್ಮೀಪುರ, ಜೇಡಿಕಟ್ಟೆ, ಬಾಳೆಮಾರನಹಳ್ಳಿ, ಗೊಂದಿ ಸೇರಿದಂತೆ ಇನ್ನಿತರ ಗ್ರಾಮಾಂತರ ಪ್ರದೇಶಗಳ ಹಾಗು ಹನುಮಂತನಗರ, ಹುತ್ತಾಕಾಲೋನಿ, ಲೋಯರ್ ಹುತ್ತಾ, ಅಪ್ಪರ್ ಹುತ್ತಾ ಮತ್ತು ಹೊಸಮನೆ ಸುಭಾಷ್ ನಗರ ಸೇರಿದಂತೆ ಇನ್ನಿತರ ನಗರ ಪ್ರದೇಶದ ಹಲವು ಮಂದಿ ಪಕ್ಷಕ್ಕೆ ಸೇರ್ಪಡೆಗೊಂಡರು.
    ಪ್ರಮುಖರಾದ ಪದ್ದು, ಚಂದ್ರಿಕಾ, ಆಂಜನಪ್ಪ, ವೆಂಕಟೇಶ್, ಮುರಳಿ, ಕಲ್ಲೇಶಪ್ಪ, ರಂಗಪ್ಪ, ಮೈಲಾರಪ್ಪ, ರಾಮಾನಾಯ್ಕ, ಸುಶೀಲಮ್ಮ, ಮೂರ್ತಿ, ಶ್ರೀನಿವಾಸ್, ದಿನೇಶ್, ಸುರೇಶ್, ಕವಿತಾ, ವಿನಾಯಕ ಸೇರಿದಂತೆ ಹಲವು ಮಂದಿ ಸೇರ್ಪಡೆಗೊಂಡರು.
ಬ್ಲಾಕ್ ಕಾಂಗ್ರೆಸ್ ಸಮಿತಿ ನಗರ ಘಟಕದ ಅಧ್ಯಕ್ಷ ಟಿ. ಚಂದ್ರೇಗೌಡ, ಮುಖಂಡರಾದ ಬಿ.ಕೆ ಜಗನ್ನಾಥ್, ಬಿ.ಕೆ ಮೋಹನ್, ಬಿ.ಎಸ್ ಗಣೇಶ್, ಜಿಲ್ಲಾ ಎಸ್.ಸಿ ಘಟಕದ ಉಪಾಧ್ಯಕ್ಷ ಎಸ್.ಎನ್ ಶಿವಪ್ಪ, ತಾಲೂಕು ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಹಾಲಮ್ಮ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು.

ವ್ಯವಸ್ಥೆಯಲ್ಲಿನ ಲೋಪದೋಷ ಸರಿಪಡಿಸಿಕೊಂಡು ಕರ್ತವ್ಯ ನಿರ್ವಹಿಸಿ : ಡಾ. ಡಿ.ಎಸ್ ಶಿವಪ್ರಕಾಶ್

ಡಾ. ಎಂ.ವಿ ಅಶೋಕ್ ಮತ್ತು ಡಾ. ಡಿ.ಎಸ್ ಶಿವಪ್ರಕಾಶ್‌ರವರಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸರ್ವೋತ್ತಮ ಸೇವಾ ಪ್ರಶಸ್ತಿ ಲಭಿಸಿದ ಹಿನ್ನಲೆಯಲ್ಲಿ ಈ ಇಬ್ಬರು ವೈದ್ಯರನ್ನು ಭದ್ರಾವತಿಯಲ್ಲಿ ಆರೋಗ್ಯ ರಕ್ಷಾ ಸಮಿತಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
    ಭದ್ರಾವತಿ, ಏ. ೩೦: ಸರ್ಕಾರಿ ಹುದ್ದೆಯಲ್ಲಿರುವವರು ವ್ಯವಸ್ಥೆಯಲ್ಲಿನ ಕೆಲವೊಂದು ಲೋಪದೋಷಗಳನ್ನು ಸರಿಪಡಿಸಿಕೊಂಡು ಕರ್ತವ್ಯ ನಿರ್ವಹಿಸಬೇಕಾದ ಅನಿವಾರ್ಯತೆ ಇದೆ ಎಂದು ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯ ಶಸ್ತ್ರ ಚಿಕಿತ್ಸೆ ಹಾಗು ಉದರ ದರ್ಶಕ ಹಿರಿಯ ತಜ್ಞ ವೈದ್ಯ ಡಾ. ಡಿ.ಎಸ್ ಶಿವಪ್ರಕಾಶ್ ಹೇಳಿದರು.
    ಅವರು ತಾಲೂಕು ಆರೋಗ್ಯ ರಕ್ಷಾ ಸಮಿತಿ ವತಿಯಿಂದ ಆಸ್ಪತ್ರೆ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.
    ಕರ್ತವ್ಯ ಸ್ಥಳದಲ್ಲಿನ ಕೆಲವೊಂದು ವ್ಯವಸ್ಥೆಗಳನ್ನು ಬದಲಾಯಿಸಿಕೊಳ್ಳಬೇಕು. ಇಲ್ಲವಾದಲ್ಲಿ ನಮ್ಮ ಕರ್ತವ್ಯವನ್ನು ಯಶಸ್ವಿಯಾಗಿ ನಿಭಾಯಿಸಲು ಸಾಧ್ಯವಿಲ್ಲ. ಪ್ರತಿಯೊಬ್ಬರು ಸಾಮಾಜಿಕ ಬದ್ಧತೆಯನ್ನು ಬೆಳೆಸಿಕೊಳ್ಳಬೇಕು. ಇಲ್ಲವಾದಲ್ಲಿ ಲೋಪದೋಷಗಳನ್ನು ಸರಿಪಡಿಸಲು ಸಾಧ್ಯವಿಲ್ಲ ಎಂದರು.
    ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ನಮ್ಮ ಕರ್ತವ್ಯವನ್ನು ಗುರುತಿಸಿ ಪ್ರಶಸ್ತಿ ನೀಡಿ ಗೌರವಿಸಿರುವುದು ಹೆಮ್ಮೆಯ ವಿಚಾರವಾಗಿದೆ ಎಂದರು.  
    ತಾಲೂಕು ಆರೋಗ್ಯಾಧಿಕಾರಿ ಡಾ.ಎಂ.ವಿ ಅಶೋಕ್ ಮಾತನಾಡಿ,  ಆಯಾ ಸಂದರ್ಭಗಳಿಗೆ ತಕ್ಕಂತೆ ನಾವು ನಮ್ಮ ಜವಾಬ್ದಾರಿಗಳನ್ನು ಅರಿತುಕೊಂಡು ಕರ್ತವ್ಯ ನಿರ್ವಹಿಸಿದಾಗ ಮಾತ್ರ ಯಶಸ್ವಿಯಾಗಿ ಮುನ್ನಡೆಯಲು ಸಾಧ್ಯ. ನಾನು ನನ್ನ ಕರ್ತವ್ಯವನ್ನು ಸಮರ್ಥವಾಗಿ ನಿಭಾಯಿಸಿದ್ದೇನೆ ಹೊರತು ಯಾವುದೇ ಪ್ರಶಸ್ತಿಯನ್ನು ನಿರೀಕ್ಷಿಸಿರಲಿಲ್ಲ. ಆದರೂ ನನ್ನ ಕರ್ತವ್ಯವನ್ನು ಗುರುತಿಸಿ ಪ್ರಶಸ್ತಿ ನೀಡಿರುವುದು ಸಂತಸವನ್ನುಂಟು ಮಾಡಿದೆ ಎಂದರು.  
    ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾಧ್ಯಕ್ಷೆ ರಾಜೇಶ್ವರಿ ಮಾತನಾಡಿ, ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಆಶಾ ಕಾರ್ಯಕರ್ತೆಯರಿಗೆ ಹೆಚ್ಚಿನ ಸಹಕಾರ ಲಭ್ಯವಾಗುತ್ತಿದೆ. ಉತ್ತಮವಾಗಿ ಕರ್ತವ್ಯ ನಿರ್ವಹಿಸುವಂತಹ ವಾತಾವರಣವನ್ನು ಇಲ್ಲಿನ ವೈದ್ಯರು, ಸಿಬ್ಬಂದಿಗಳು ಕಲ್ಪಿಸಿಕೊಟ್ಟಿದ್ದಾರೆ. ಈ ಹಿನ್ನಲೆಯಲ್ಲಿ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.
    ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಶಂಕರಪ್ಪ ಅಧ್ಯಕ್ಷತೆ ವಹಿಸಿದ್ದರು. ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಅನುಷಾ, ಎಚ್. ರಘುರಾವ್, ಪಿ. ಕೃಷ್ಣಮೂರ್ತಿ ಸೇರಿದಂತೆ ವೈದ್ಯರು, ಆಶಾ ಕಾರ್ಯಕರ್ತೆಯರು, ಸಿಬ್ಬಂದಿಗಳು ಉಪಸ್ಥಿತರಿದ್ದರು. ಆರೋಗ್ಯ ರಕ್ಷಾ ಸಮಿತಿ ಸದಸ್ಯ ಗಣೇಶ್‌ರಾವ್ ನಿರೂಪಿಸಿದರು. ರಾಮ್‌ನಾಥ್ ಬರ್ಗೆ ವಂದಿಸಿದರು.
    ಡಾ. ಎಂ.ವಿ ಅಶೋಕ್ ಮತ್ತು ಡಾ. ಡಿ.ಎಸ್ ಶಿವಪ್ರಕಾಶ್‌ರವರಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸರ್ವೋತ್ತಮ ಸೇವಾ ಪ್ರಶಸ್ತಿ ಲಭಿಸಿದ ಹಿನ್ನಲೆಯಲ್ಲಿ ಈ ಇಬ್ಬರು ವೈದ್ಯರನ್ನು ಆರೋಗ್ಯ ರಕ್ಷಾ ಸಮಿತಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.



Friday, April 29, 2022

ವಿಐಎಸ್‌ಎಲ್ ಅಧಿಕಾರಿ ನಿತಿನ್ ಜೋಸ್‌ಗೆ ಸೈಲ್ ರೋಲ್ ಮಾಡೆಲ್ ಅವಾರ್ಡ್

ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯ ಕಂಪ್ಯೂಟರ್ ಮತ್ತು ಮಾಹಿತಿ ತಂತ್ರಜ್ಞಾನ ವಿಭಾಗದ ಹಿರಿಯ ವ್ಯವಸ್ಥಾಪಕ ನಿತಿನ್ ಜೋಸ್ ಕುಟುಂಬ ಸದಸ್ಯರೊಂದಿಗೆ ೨೦೨೦-೨೧ನೇ ಸಾಲಿನ ಪ್ರತಿಷ್ಠಿತ ಸೈಲ್ ಕಾರ್ಪೊರೇಟ್ ಅವಾರ್ಡ್ ಫಾರ್ ಎಕ್ಸಲೆನ್ಸ್-ರೋಲ್ ಮಾಡೆಲ್ ಅವಾರ್ಡ್ ಪ್ರಶಸ್ತಿ ಸ್ವೀಕರಿಸಿದರು.    
    ಭದ್ರಾವತಿ, ಏ. ೩೦: ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯ ಕಂಪ್ಯೂಟರ್ ಮತ್ತು ಮಾಹಿತಿ ತಂತ್ರಜ್ಞಾನ ವಿಭಾಗದ ಹಿರಿಯ ವ್ಯವಸ್ಥಾಪಕ ನಿತಿನ್ ಜೋಸ್ ಅವರಿಗೆ ೨೦೨೦-೨೧ನೇ ಸಾಲಿನ ಪ್ರತಿಷ್ಠಿತ ಸೈಲ್ ಕಾರ್ಪೊರೇಟ್ ಅವಾರ್ಡ್ ಫಾರ್ ಎಕ್ಸಲೆನ್ಸ್-ರೋಲ್ ಮಾಡೆಲ್ ಅವಾರ್ಡ್ ವಿಭಾಗದಲ್ಲಿ ಪ್ರಶಸ್ತಿ ಲಭಿಸಿದೆ.
     ನವದೆಹಲಿಯಲ್ಲಿ ಏ.೨೮ರಂದು ಆಯೋಜಿಸಲಾಗಿದ್ದ ಸಮಾರಂಭದಲ್ಲಿ . ಭಾರತೀಯ ಉಕ್ಕು ಪ್ರಾಧಿಕಾರದ ಅಧ್ಯಕ್ಷೆ ಸೋಮ ಮಂಡಲ್ ಪ್ರಶಸ್ತಿ ವಿತರಿಸಿದರು. ಪ್ರಶಸ್ತಿ ರು. ೫೦,೦೦೦ ನಗದು ಮತ್ತು ಪ್ರಮಾಣ ಪತ್ರ ಒಳಗೊಂಡಿದೆ.
    ಕಾರ್ಖಾನೆಯಲ್ಲಿ ನಿತಿನ್ ಜೋಸ್‌ರವರು ೨೦೦೮ರಲ್ಲಿ ಕರ್ತವ್ಯಕ್ಕೆ ಸೇರ್ಪಡೆಗೊಂಡಿದ್ದು, ಕಂಪ್ಯೂಟರ್ ಮತ್ತು ಮಾಹಿತಿ ತಂತ್ರಜ್ಞಾನ ವಿಭಾಗದ ಮುಖ್ಯಸ್ಥರಾಗಿದ್ದಾರೆ. ಇವರು ಬ್ಯಾಡ್ಮಿಂಟನ್ ಆಟಗಾರರು ಸಹ ಆಗಿದ್ದು, ಕಾರ್ಖಾನೆ ಆಡಳಿತ ಮಂಡಳಿ, ಅಧಿಕಾರಿಗಳು, ಕಾರ್ಮಿಕರು ಇವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.




ಕಾರ್ಮಿಕ ಸಂತ ಜೋಸೆಫರ ದೇವಾಲಯದ ಸುವರ್ಣ ಮಹೋತ್ಸವಕ್ಕೆ ಚಾಲನೆ

ವಿವಿಧ ಕ್ಷೇತ್ರಗಳ ಗಣ್ಯರಿಗೆ, ದಾನಿಗಳಿಗೆ ಸನ್ಮಾನ, ಸಾಂಸ್ಕೃತಿಕ ಕಾರ್ಯಕ್ರಮಗಳು

ಭದ್ರಾವತಿ ಕಾಗದನಗರದ ಕಾರ್ಮಿಕ ಸಂತ ಜೋಸೆಫರ ದೇವಾಲಯದ ಸುವರ್ಣ ಮಹೋತ್ಸವಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು.
    ಭದ್ರಾವತಿ, ಏ. ೨೯: ರಾಜ್ಯ ಸರ್ಕಾರಿ ಸ್ವಾಮ್ಯದ ಮೈಸೂರು ಕಾಗದ ಕಾರ್ಖಾನೆ ಆರಂಭಗೊಂಡ ನಂತರ ಕಾಗದನಗರ ವ್ಯಾಪ್ತಿಯ ನಗರಾಡಳಿತ ಪ್ರದೇಶದಲ್ಲಿ ಕ್ಯಾಥೋಲಿಕ್ ಕ್ರೈಸ್ತ ಸಮುದಾಯದವರು ನಿರ್ಮಿಸಿಕೊಂಡಿದ್ದ ಕಾರ್ಮಿಕ ಸಂತ ಜೋಸೆಫರ ದೇವಾಲಯ ಇದೀಗ ೫೦ ವರ್ಷಗಳನ್ನು ಪೂರೈಸಿದ್ದು, ಸುವರ್ಣ ಮಹೋತ್ಸವ ಆಚರಿಸಿಕೊಳ್ಳುತ್ತಿದೆ.
    ಕಾಗದನಗರ ವ್ಯಾಪ್ತಿಯ ಸುತ್ತಮುತ್ತಲಿನ ಹಾಗು ಕಾರ್ಖಾನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕ್ಯಾಥೋಲಿಕ್ ಕ್ರೈಸ್ತ ಸಮುದಾಯದವರು ಈ ದೇವಾಲಯದಲ್ಲಿ ತಮ್ಮ ಧಾರ್ಮಿಕ ಆಚರಣೆಗಳನ್ನು ನೆರವೇರಿಸಿಕೊಂಡು ಬರುತ್ತಿದ್ದರು. ಕಳೆದ ಸುಮಾರು ೭ ವರ್ಷಗಳಿಂದ ಕಾರ್ಖಾನೆ ಸ್ಥಗಿತಗೊಂಡಿದ್ದು, ಕಾರ್ಮಿಕ ಕುಟುಂಬಗಳು ಬೇರೆಡೆಗೆ ಸ್ಥಳಾಂತರಗೊಂಡಿವೆ. ಈ ಹಿನ್ನಲೆಯಲ್ಲಿ ಈ ವ್ಯಾಪ್ತಿಯಲ್ಲಿ ಇದೀಗ ಕ್ಯಾಥೋಲಿಕ್ ಕ್ರೈಸ್ತ ಸಮುದಾಯದವರು ಅಲ್ಪ ಪ್ರಮಾಣದಲ್ಲಿದ್ದು, ಆದರೂ ಸಹ ದೇವಾಲಯದ ಸುವರ್ಣ ಮಹೋತ್ಸವ ಅದ್ದೂರಿಯಾಗಿ ಆಚರಿಸುವ ಮೂಲಕ ಗಮನ ಸೆಳೆದಿದ್ದಾರೆ.
    ಶುಕ್ರವಾರ ಮಹೋತ್ಸವಕ್ಕೆ ಚಾಲನೆ ನೀಡಲಾಗಿದ್ದು, ವಿವಿಧ ಕ್ಷೇತ್ರಗಳ ಗಣ್ಯರಿಗೆ, ದಾನಿಗಳಿಗೆ ಸನ್ಮಾನ ಹಾಗು ನೃತ್ಯ ಸೇರಿದಂತೆ ಇನ್ನಿತರ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಮಹೋತ್ಸವ ೩ ದಿನಗಳ ಕಾಲ ಜರುಗಲಿದೆ. ಮೇ.೧ರಂದು ಕಾರ್ಮಿಕ ಸಂತ ಜೋಸೆಫರ ಉತ್ಸವ ಮೆರವಣಿಗೆಯೊಂದಿಗೆ ಮಹೋತ್ಸವ ಅಂತ್ಯಗೊಳ್ಳಲಿದೆ.
    ದೇವಾಲಯದ ಧರ್ಮ ಗುರು ಫಾದರ್ ಡಾಮಿನಿಕ್ ಕ್ರಿಸ್ತುರಾಜ್ ಅಧ್ಯಕ್ಷತೆ ವಹಿಸಿದ್ದರು. ಕಾರೇಹಳ್ಳಿ ಸಂತ ಅಂತೋಣಿಯವರ ದೇವಾಲಯದ ಧರ್ಮ ಗುರು ಫಾದರ್ ರಿಚರ್ಡ್ ಅನಿಲ್ ಡಿಸೋಜಾ, ಉಜ್ಜನಿಪುರ ಡಾನ್ ಬೋಸ್ಕೋ ಸಂಸ್ಥೆ ನಿರ್ದೇಶಕ ಫಾದರ್ ಆರೋಗ್ಯ ರಾಜ್ ಹಾಗು ಪ್ರಾಂಶುಪಾಲ ಫಾದರ್ ಜೋಮಿ, ಕ್ರೈಸ್ತ ಸಮುದಾಯದ ಮುಖಂಡ ಸೆಲ್ವರಾಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಚಿತ್ರ: ಡಿ೨೯-ಬಿಡಿವಿಟಿ೨


ಭದ್ರಾವತಿ ಕಾಗದನಗರದ ಕಾರ್ಮಿಕ ಸಂತ ಜೋಸೆಫರ ದೇವಾಲಯದ ಸುವರ್ಣ ಮಹೋತ್ಸವದ ಹಿನ್ನಲೆಯಲ್ಲಿ ಶುಕ್ರವಾರ ನೃತ್ಯ ಸೇರಿದಂತೆ ಇನ್ನಿತರ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಟಿ.ವಿ ಕೇಬಲ್‌ನಲ್ಲಿ ವಿದ್ಯುತ್ ಹರಿದು ೪ ವರ್ಷದ ಬಾಲಕಿ ಸಾವು


    ಭದ್ರಾವತಿ, ಏ. ೨೯: ಟಿ.ವಿ ಕೇಬಲ್‌ನಲ್ಲಿ ವಿದ್ಯುತ್ ಹರಿದ ಪರಿಣಾಮ ೪ ವರ್ಷದ ಹೆಣ್ಣು ಮಗು ಮೃತಪಟ್ಟಿರುವ ಘಟನೆ ತಾಲೂಕಿನ ಹಿರಿಯೂರು ಗ್ರಾಮದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ.
    ಇಂಚರ(೪) ಮೃತಪಟ್ಟ ಬಾಲಕಿ ಎಂದು ಗುರುತಿಸಲಾಗಿದೆ. ಈಕೆ ಗ್ರಾಮದ ನಿವಾಸಿ ಸಂತೋಷ್ ಮತ್ತು ಪೂಜಾ ದಂಪತಿ ಪುತ್ರಿಯಾಗಿದ್ದು, ವಿದ್ಯುತ್ ತಂತಿಗೆ ಸಂಪರ್ಕಗೊಂಡಿದ್ದ ಟಿವಿ ಕೇಬಲ್ ಕತ್ತರಿಸಿಕೊಂಡು ಕೆಳಗೆ ತಂತಿ ಬೇಲಿ ಮೇಲೆ ಬಿದ್ದಿದೆ. ಈ ಕೇಬಲನ್ನು ಆಟವಾಡುವಾಗ ಬಾಲಕಿ ಮುಟ್ಟಿದ್ದು, ಇದರಿಂದಾಗಿ ವಿದ್ಯುತ್ ತಗುಲಿ ಮೃತಪಟ್ಟಿದೆ ಎನ್ನಲಾಗಿದೆ.
    ಘಟನೆ ಬೆಳಿಗ್ಗೆ ಸುಮಾರು ೯.೩೦ರ ಸಮಯದಲ್ಲಿ ನಡೆದಿದ್ದು, ವಿದ್ಯುತ್ ತಗುಲಿ ತೀವ್ರ ಅಸ್ವಸ್ಥಗೊಂಡಿದ್ದ ಬಾಲಕಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಬಾಲಕಿ ಮೃತಪಟ್ಟಿದ್ದು, ಈ ಸಂಬಂಧ ಪೇಪರ್‌ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಕೋವಿಡ್ ೪ನೇ ಅಲೆ : ಉದ್ಯೋಗ ಖಾತ್ರಿ ಕೂಲಿ ಕಾರ್ಮಿಕರು ಆರೋಗ್ಯದ ಬಗ್ಗೆ ಮುನ್ನಚ್ಚರಿಕೆ ವಹಿಸಿ

ಭದ್ರಾವತಿ ತಾಲೂಕಿನ ಅರಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಾನವಾಡಿ ಗ್ರಾಮದಲ್ಲಿ ಉದ್ಯೋಗ ಖಾತ್ರಿ ಸ್ಥಳಕ್ಕೆ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಮೇಶ್ ಭೇಟಿ ನೀಡಿ ಕೂಲಿ ಕಾರ್ಮಿಕರೊಂದಿಗೆ  ದುಡಿಯೋಣ ಬಾ...! ಅಭಿಯಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
    ಭದ್ರಾವತಿ, ಏ. ೨೯: ಕೋವಿಡ್ ೪ನೇ ಅಲೆ ಹಿನ್ನಲೆಯಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ ಕೂಲಿ ಕಾರ್ಮಿಕರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಜಾಗೃತಿವಹಿಸುವಂತೆ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಮೇಶ್ ಸಲಹೆ ನೀಡಿದರು.
    ಅವರು ತಾಲೂಕಿನ ಅರಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಾನವಾಡಿ ಗ್ರಾಮದಲ್ಲಿ ಉದ್ಯೋಗ ಖಾತ್ರಿ ಸ್ಥಳಕ್ಕೆ ಭೇಟಿ ನೀಡಿ ಕೂಲಿ ಕಾರ್ಮಿಕರೊಂದಿಗೆ  ದುಡಿಯೋಣ ಬಾ...! ಅಭಿಯಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಕೂಲಿ ಕಾರ್ಮಿಕರು ಕೋವಿಡ್ ೪ನೇ ಅಲೆ ಹಿನ್ನಲೆಯಲ್ಲಿ ಮಾಸ್ಕ್ ಬಳಕೆಯೊಂದಿಗೆ ಸಾಮಾಜಿಕ ಅಂತರ ಸೇರಿದಂತೆ ಇನ್ನಿತರ ಮುನ್ನಚ್ಚರಿಕೆ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದರು.
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಮತ್ತು ಪಿ.ಎಂ ಕಿಸಾನ್ ಯೋಜನಾ ಕ್ರೆಡಿಟ್ ಕಾರ್ಡ್ ಕುರಿತು ಮಾಹಿತಿ ನೀಡಿ ಸ್ಥಳದಲ್ಲಿಯೇ ಪರಿಶಿಷ್ಟ ಜಾತಿ/ಪಂಗಡದ ಫಲಾನುಭವಿಗಳಿಗೆ ಉದ್ಯೋಗ ಖಾತ್ರಿ ಚೀಟಿಯನ್ನು ವಿತರಿಸಿದರು.
    ದನದ ಕೊಟ್ಟಿಗೆ,  ಕುರಿ ಶೆಡ್, ಅಡಕೆ ಸಸಿ ನೆಡುವುದು, ಬಚ್ಚಲು ಗುಂಡಿ ನಿರ್ಮಾಣ ಸೇರಿದಂತೆ ಇತರೆ ವೈಯಕ್ತಿಕ ಕಾಮಗಾರಿ ಪಡೆದುಕೊಂಡು ಆರ್ಥಿಕವಾಗಿ ಅಭಿವೃದ್ಧಿ ಹೊಂದುವಂತೆ ಸಲಹೆ ವ್ಯಕ್ತಪಡಿಸಿದರು.
  ತಾಲೂಕು ಪಂಚಾಯಿತಿ ತಾಂತ್ರಿಕ ಸಹಾಯಕಿ ಆಶಾ, ಗ್ರಾಮ ಪಂಚಾಯಿತಿ ಗಣಕಯಂತ್ರ ನಿರ್ವಾಹಕ  ಆಲಿ, ಎಸ್‌ಡಿಎ ಬಾಸ್ಕರ್, ಡಿಇಓ ಬೈರೇಶ್ ಕುಮಾರ್ ಉದ್ಯೋಗ ಖಾತ್ರಿ ಕೂಲಿ ಕಾರ್ಮಿಕರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Thursday, April 28, 2022

ಇಫ್ತಾರ್ ಕೂಟದಲ್ಲಿ ಭಾಗಿಯಾದ ಜೆಡಿಎಸ್ ಮುಖಡರು

ಭದ್ರಾವತಿಯಲ್ಲಿ ಜೆಡಿಎಸ್ ಮುಖಂಡ, ನಗರಸಭೆ ಮಾಜಿ ಸದಸ್ಯ ಮುತುರ್ಜಾಖಾನ್‌ರವರು ಗುರುವಾರ ಏರ್ಪಡಿಸಿದ್ದ ಇಫ್ತಾರ್ ಕೂಟದಲ್ಲಿ ಜೆಡಿಎಸ್ ಮುಖಂಡರು ಪಾಲ್ಗೊಂಡು ಮುಸ್ಲಿಂ ಸಮುದಾಯದವರಿಗೆ ಹಬ್ಬದ ಶುಭಾಶಯ ಕೋರಿದರು.
    ಭದ್ರಾವತಿ: ಜೆಡಿಎಸ್ ಮುಖಂಡ, ನಗರಸಭೆ ಮಾಜಿ ಸದಸ್ಯ ಮುತುರ್ಜಾಖಾನ್‌ರವರು ಗುರುವಾರ ಏರ್ಪಡಿಸಿದ್ದ ಇಫ್ತಾರ್ ಕೂಟದಲ್ಲಿ ಜೆಡಿಎಸ್ ಮುಖಂಡರು ಪಾಲ್ಗೊಂಡು ಮುಸ್ಲಿಂ ಸಮುದಾಯದವರಿಗೆ ಹಬ್ಬದ ಶುಭಾಶಯ ಕೋರಿದರು.
    ಪವಿತ್ರ ರಂಜಾನ್ ಹಬ್ಬದ ಹಿನ್ನಲೆಯಲ್ಲಿ ಸುಮಾರು ೩೦ ದಿನಗಳವರೆಗೆ ಉಪವಾಸ ಆಚರಣೆಯಲ್ಲಿ ತೊಡಗುವ ಮುಸ್ಲಿಂ ಸಮುದಾಯದವರು ಕೊನೆಯಲ್ಲಿ ಇಫ್ತಾರ್ ಕೂಟ ಆಯೋಜಿಸುವುದು ವಾಡಿಕೆಯಾಗಿದೆ.
    ಅಂಜುಮಾನ್ ಇಸ್ಲಾವುಲ್ ಮುಸ್ಲಿಮೀನ್ ಅಧ್ಯಕ್ಷರೂ ಸಹ ಆಗಿರುವ ಮುತುರ್ಜಾಖಾನ್‌ರವರು ಇಫ್ತಾರ್ ಕೂಟ ಆಯೋಜಿಸುವ ಮೂಲಕ ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರನ್ನು ಆಹ್ವಾನಿಸಿದ್ದರು.
    ಪಕ್ಷದ ಮುಖಂಡರಾದ ಶಾರದ ಅಪ್ಪಾಜಿ, ತಾಲೂಕು ಅಧ್ಯಕ್ಷ ಆರ್. ಕರುಣಾಮೂರ್ತಿ, ಜಿಲ್ಲಾ ಯುವ ಘಟಕದ ಅಧ್ಯಕ್ಷ ಮಧುಕುಮಾರ್, ನಗರಸಭಾ ಸದಸ್ಯ ಬಸವರಾಜ ಬಿ. ಆನೇಕೊಪ್ಪ, ಮಾಜಿ ಸದಸ್ಯರಾದ ವಿಶಾಲಾಕ್ಷಿ, ಆನಂದ್, ಮೈಲಾರಪ್ಪ, ಲೋಕೇಶ್ವರ್ ರಾವ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.


ಒಂದೆಡೆ ಆಕರ್ಷಕ ಸರ್ಕಾರಿ ಕಟ್ಟಡಗಳು, ಮತ್ತೊಂದೆಡೆ ಉಚಿತ ಪ್ರಚಾರದ ಕಟ್ಟಡಗಳು

ಎಲ್ಲಿಬೇಕೆಂದರಲ್ಲಿ ಕರಪತ್ರ, ಪೋಸ್ಟ್‌ಗಳಿಂದ ಆಕರ್ಷಣೆ ಕಳೆದು ಕೊಳ್ಳುತ್ತಿವೆ ಸರ್ಕಾರಿ ಕಟ್ಟಡಗಳು

ಭದ್ರಾವತಿ ತಾಲೂಕು ಕಛೇರಿ ಮಿನಿವಿಧಾನಸೌಧ ಕಟ್ಟಡದಲ್ಲಿ ಎಲ್ಲಿಬೇಕೆಂದರಲ್ಲಿ ಕರಪತ್ರ, ಪೋಸ್ಟರ್‌ಗಳನ್ನು ಅಂಟಿಸಿರುವುದು.
    * ಅನಂತಕುಮಾರ್
    ಭದ್ರಾವತಿ, ಏ. ೨೮: ಸರ್ಕಾರಿ ಕಟ್ಟಡಗಳಲ್ಲಿ ಸ್ವಚ್ಛತೆಯೊಂದಿಗೆ ಸೌಂದರ್ಯ ಕಾಪಾಡುವ ನಿಟ್ಟಿನಲ್ಲೂ ಹೆಚ್ಚಿನ ಗಮನ ಹರಿಸಬೇಕಾಗಿದೆ. ಸ್ವಚ್ಛ ಭಾರತ್ ಅಭಿಯಾನದ ಪರಿಕಲ್ಪನೆ ಯಶಸ್ವಿಗೊಳಿಸಬೇಕಾಗಿರುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ.  
ತಾಲೂಕಿನ ಶಕ್ತಿ ಕೇಂದ್ರ ಮಿನಿವಿಧಾನಸೌಧ ಇದೀಗ ಉಚಿತ ಪ್ರಚಾರ ಕೇಂದ್ರವಾಗಿ ಕಂಡು ಬರುತ್ತಿದೆ. ಸಭೆ, ಸಮಾರಂಭ, ಹೋರಾಟದ ಕರಪತ್ರಗಳು, ಜಾತ್ರೆ, ಹಬ್ಬ, ಹರಿದಿನಗಳ ಪೋಸ್ಟರ್‌ಗಳು ಕಟ್ಟಡದಲ್ಲಿ ರಾರಾಜಿಸುತ್ತಿವೆ. ಇದರಿಂದಾಗಿ ಕಟ್ಟಡದ ಸೌಂದರ್ಯ ಹಾಳಾಗಿದ್ದು, ಕಟ್ಟಡದ ಮೇಲೆ ಕರಪತ್ರ, ಪೋಸ್ಟರ್‌ಗಳನ್ನು ಅಂಟಿಸುತ್ತಿರುವುದರಿಂದ ಬಣ್ಣ ಸಹ ಮಾಸುವ ಸ್ಥಿತಿಗೆ ಬಂದು ತಲುಪಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಗಮನ ಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ.

ಸಾರ್ವಜನಿಕರು ಸರ್ಕಾರಿ ಕಛೇರಿಗಳನ್ನು ತಮ್ಮ ಮನೆಗಳಂತೆ, ಸ್ವತ್ತುಗಳಂತೆ ಭಾವಿಸಬೇಕು. ಸ್ವಯಂ ಜಾಗೃತರಾಗಿ ಸರ್ಕಾರಿ ಕಟ್ಟಡಗಳ ಸೌಂದರ್ಯ ಹೆಚ್ಚಿಸಲು ಸಹಕರಿಸಬೇಕು. ಮಿನಿವಿಧಾನಸೌಧದ ಕಟ್ಟಡದ ಮುಂಭಾಗದಲ್ಲಿ ಎಲ್ಲಿಬೇಕೆಂದರಲ್ಲಿ  ಕರಪತ್ರ, ಪೋಸ್ಟರ್‌ಗಳನ್ನು ಅಂಟಿಸುತ್ತಿರುವುದನ್ನು ಬಹಳ ದಿನಗಳಿಂದ ಗಮನಿಸುತ್ತಿದ್ದೇನೆ. ಸಾರ್ವಜನಿಕರು ಎಚ್ಚತ್ತುಕೊಳ್ಳಬೇಕು. ಇಲ್ಲವಾದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು.
                                                                                       - ಆರ್. ಪ್ರದೀಪ್, ತಹಸೀಲ್ದಾರ್, ಭದ್ರಾವತಿ.


ಆಕರ್ಷಕವಾಗಿ ಕಂಗೊಳಿಸುತ್ತಿರುವ ಭದ್ರಾವತಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ.
    ಆಕರ್ಷಿಸುತ್ತಿವೆ ಕ್ಷೇತ್ರ ಶಿಕ್ಷಣಾಧಿಕಾರಿ-ಸಂಪನ್ಮೂಲ ಸಮನ್ವಯಾಧಿಕಾರಿಗಳ ಕಛೇರಿ:
    ತಾಲೂಕು ಕಛೇರಿ ರಸ್ತೆಯಲ್ಲಿರುವ ಕ್ಷೇತ್ರ ಶಿಕ್ಷಣಾಧಿಕಾರಿ-ಸಂಪನ್ಮೂಲ ಸಮನ್ವಯಾಧಿಕಾರಿಗಳ ಕಛೇರಿಗಳು ಸಹ ಕೆಲವು ವರ್ಷಗಳ ಹಿಂದೆ ಉಚಿತ ಪ್ರಚಾರ ಕೇಂದ್ರಗಳಂತೆ ಕಂಡು ಬರುತ್ತಿದ್ದವು. ಕಟ್ಟಡದಲ್ಲಿ ಎಲ್ಲಿಬೇಕೆಂದರಲ್ಲಿ ಕರಪತ್ರಗಳು, ಪೋಸ್ಟರ್‌ಗಳು ರಾರಾಜುಸುತ್ತಿದ್ದವು. ನಂತರ ಇಲಾಖೆ ಎಚ್ಚೆತ್ತುಕೊಂಡು ಕಟ್ಟಡದ ಸೌಂದರ್ಯಕ್ಕೆ ಹೆಚ್ಚಿನ ಗಮನ ಹರಿಸಿದೆ. ಈ ನಡುವೆ ಕಳೆದ ಸುಮಾರು ೧ ವರ್ಷದ ಹಿಂದೆ ಹೊಸ ಶಿಕ್ಷಣ ನೀತಿ ಪಠ್ಯಕ್ರಮ ಹಿನ್ನಲೆಯಲ್ಲಿ ಕಟ್ಟಡಕ್ಕೆ ಮತ್ತುಷ್ಟು ಸೌಂದರ್ಯ ಹೆಚ್ಚಿಸುವ ನಿಟ್ಟಿನಲ್ಲಿ ಕುಂಚ ಕಲಾವಿದರ ಸಹಕಾರದೊಂದಿಗೆ ಆಕರ್ಷಕ ಕೇಂದ್ರವನ್ನಾಗಿಸಿದೆ. ಹೊಸ ಶಿಕ್ಷಣ ನೀತಿಯ ಧ್ಯೇಯ, ಬದಲಾದ ಪಠ್ಯಕ್ರಮ ಹಾಗು ಸ್ವರೂಪಗಳೊಂದಿಗೆ, ಆದರ್ಶ ಮಹಾನ್ ವ್ಯಕ್ತಿಗಳು, ಸ್ಥಳೀಯ ಐತಿಹಾಸಿಕ ಪಾರಂಪರಿಕ ಕಟ್ಟಡಗಳು, ಸ್ಥಳಗಳು ಕುಂಚ ಕಲೆಯಲ್ಲಿ ಅರಳುವ ಮೂಲಕ ಕಟ್ಟಡದಲ್ಲಿ ರಾರಾಜುಸುತ್ತಿವೆ.  
    ಪರಿಸರ, ಸ್ವಚ್ಛತೆ ಕುರಿತು ಜಾಗೃತಿ:
    ಹಳೇನಗರದ ಸಂಚಿಯ ಹೊನ್ನಮ್ಮ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಕಾಂಪೌಂಡ್ ಕಟ್ಟಡ ಇದೀಗ ಪರಿಸರ ರಕ್ಷಣೆ, ಸ್ವಚ್ಛತೆ ಕುರಿತು ಜಾಗೃತಿ ಮೂಡಿಸುವ ಮೂಲಕ ಆಕರ್ಷಕವಾಗಿ ಕಂಡು ಬರುತ್ತಿದೆ.
    ಎಲ್ಲೆಬೇಕೆಂದರಲ್ಲಿ ಕಸ ಎಸೆಯದಿರುವುದು, ತ್ಯಾಜ್ಯ ಬೇರ್ಪಡಿಸುವಿಕೆ, ವಿಲೇವಾರಿಗೆ ಅನುಸರಿಸಬೇಕಾದ ಕ್ರಮ, ಪ್ಲಾಸಿಕ್ ನಿಷೇಧ, ಗಿಡ, ಮರಗಳ ಸಂರಕ್ಷಣೆ, ಜಲ ಸಂರಕ್ಷಣೆ ಸೇರಿದಂತೆ ಒಟ್ಟಾರೆ ಪರಿಸರ, ಸ್ವಚ್ಛತೆ ಕುರಿತು ನಗರಸಭೆ ವತಿಯಿಂದ ಆಕರ್ಷಕ ಚಿತ್ತಾರಗಳ ಮೂಲಕ ಜಾಗೃತಿ ಮೂಡಿಸಲಾಗಿದೆ.
ನಗರಸಭೆ ವತಿಯಿಂದ ಸರ್ಕಾರಿ ಕಟ್ಟಡಗಳ ಸೌಂದರ್ಯ ಹೆಚ್ಚಿಸುವ ಜೊತೆಗೆ ಪರಿಸರ, ಸ್ವಚ್ಛತೆ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ನಗರಸಭೆ ಅನುದಾನ ಲಭ್ಯತೆಯನ್ನು ಗಮನಿಸಿ ಹಂತ ಹಂತವಾಗಿ ಎಲ್ಲಾ ಸರ್ಕಾರಿ ಕಟ್ಟಡಗಳ ಸೌಂದರ್ಯ ಹೆಚ್ಚಿಸಲಾಗುವುದು. ಸರ್ಕಾರಿ ಕಟ್ಟಡಗಳ ಸೌಂದರ್ಯಕ್ಕೆ ಧಕ್ಕೆ ಉಂಟು ಮಾಡುವವರ ವಿರುದ್ಧ ದಂಡ ವಿಧಿಸಲಾಗುವುದು.
 - ಕೆ. ಪರಮೇಶ್, ಪೌರಾಯುಕ್ತರು, ನಗರಸಭೆ, ಭದ್ರಾವತಿ.
    ಎಲ್ಲಾ ಸರ್ಕಾರಿ ಕಟ್ಟಡಗಳು ಸಹ ಸ್ವಚ್ಛತೆಯೊಂದಿಗೆ ಆಕರ್ಷಕವಾಗಿ ಕಾಣುವಂತಾಗಬೇಕು. ಈ ನಿಟ್ಟಿನಲ್ಲಿ ಸಾರ್ವಜನಿಕರ ಸಹಕಾರ ಹೆಚ್ಚಿನದ್ದಾಗಿದೆ.  ಜೊತೆಗೆ ಸಂಬಂಧಪಟ್ಟ ಸರ್ಕಾರಿ ಇಲಾಖೆಗಳು ಸಹ ಈ ಬಗ್ಗೆ ಹೆಚ್ಚಿನ ಗಮನ ಹರಿಸಬೇಕಾಗಿದೆ. ಇಲಾಖೆಗಳು ಸಹ ಸಾರ್ವಜನಿಕ ಪ್ರಕಟಣೆ, ಸುತ್ತೋಲೆ, ಸೂಚನೆಗಳಿಗೆ ನಿಗದಿಪಡಿಸಲಾದ ಫಲಕಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಎಲ್ಲಿಬೇಕೆಂದರಲ್ಲಿ ಅಂಟಿಸುವ ಪರಿಪಾಠ ಕೈಬಿಡಬೇಕು. ಸಾರ್ವಜನಿಕರಿಗೆ ತಿಳುವಳಿಕೆ ಮೂಡಿಸುವ ಜೊತೆಗೆ ಸ್ವಚ್ಛತೆ ಕುರಿತು ನಿರ್ಲಕ್ಷ್ಯ ವಹಿಸುವವರ ಹಾಗು ಕರಪತ್ರ, ಪೋಸ್ಟರ್‌ಗಳನ್ನು ಎಲ್ಲಿಬೇಕೆಂದರಲ್ಲಿ ಅಂಟಿಸುವವರ ವಿರುದ್ಧ ಕ್ರಮ ಕೈಗೊಳ್ಳಬೇಕಾಗಿದೆ.


ಭದ್ರಾವತಿ ಹಳೇನಗರದ ಸಂಚಿಯ ಹೊನ್ನಮ್ಮ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಕಾಂಪೌಂಡ್ ಕಟ್ಟಡ ಇದೀಗ ಪರಿಸರ ರಕ್ಷಣೆ, ಸ್ವಚ್ಛತೆ ಕುರಿತು ಜಾಗೃತಿ ಮೂಡಿಸುವ ಮೂಲಕ ಆಕರ್ಷಕವಾಗಿ ಕಂಡು ಬರುತ್ತಿದೆ.
     ಆಕರ್ಷಣೆಯೊಂದಿಗೆ, ಸ್ವಚ್ಛತೆ, ಸುಂದರ ಪರಿಸರ ಹೊಂದಿರುವ ಸರ್ಕಾರಿ ಕಛೇರಿ, ಕಟ್ಟಡಗಳನ್ನು ಸಹ ಸರ್ಕಾರ ಗುರುತಿಸಿ ಪ್ರಶಸ್ತಿ ನೀಡಿ ಗೌರವಿಸುತ್ತಿದೆ. ಸರ್ಕಾರ ಹೊಂದಿರುವ ಕಾಳಜಿಯನ್ನು ನಾವುಗಳು ಅರಿತುಕೊಳ್ಳಬೇಕು. ತಕ್ಷಣಕ್ಕೆ ಸರ್ಕಾರದ ಕಾಳಜಿಯನ್ನು ಕಾರ್ಯರೂಪಕ್ಕೆ ತರುವ ನಿಟ್ಟಿನಲ್ಲಿ ಮುಂದಾಗಬೇಕಾಗಿದೆ.

Wednesday, April 27, 2022

ಡಾ. ಶ್ವೇತಾ ಅಮಿತ್‌ಗೆ ರಕ್ಷಣಾ ಇಲಾಖೆಯ ಡಿಫೆನ್ಸ್ ಅವಾರ್ಡ್

ಭದ್ರಾವತಿ ತರೀಕೆರೆ ರಸ್ತೆಯ ಎನ್‌ಟಿಸಿ ರೈಸ್ ಮಿಲ್ ಮಾಲೀಕ, ಉದ್ಯಮಿ ಡಾ. ಎನ್‌ಟಿಸಿ ನಾಗೇಶ್‌ರವರ ಪುತ್ರಿ, ಬೆಂಗಳೂರಿನ ಮೀಂಡರ್ ಸ್ಪೆಕ್ಟ್ರಾ ಪ್ರೈವೇಟ್ ಲಿಮಿಟೆಡ್ ಕಂಪನಿಯ ಸಹ ಸಂಸ್ಥಾಪಕಿ ಮತ್ತು ಸಿಇಓ ಡಾ. ಶ್ವೇತಾ ಅಮಿತ್ ರಕ್ಷಣಾ ಇಲಾಖೆಯ ಡಿಫೆನ್ಸ್ ಅವಾರ್ಡ್ ಪಡೆದುಕೊಂಡಿದ್ದಾರೆ.
    ಭದ್ರಾವತಿ, ಏ.೨೭: ನಗರದ ತರೀಕೆರೆ ರಸ್ತೆಯ ಎನ್‌ಟಿಸಿ ರೈಸ್ ಮಿಲ್ ಮಾಲೀಕ, ಉದ್ಯಮಿ ಡಾ. ಎನ್‌ಟಿಸಿ ನಾಗೇಶ್‌ರವರ ಪುತ್ರಿ, ಬೆಂಗಳೂರಿನ ಮೀಂಡರ್ ಸ್ಪೆಕ್ಟ್ರಾ ಪ್ರೈವೇಟ್ ಲಿಮಿಟೆಡ್ ಕಂಪನಿಯ ಸಹ ಸಂಸ್ಥಾಪಕಿ ಮತ್ತು ಸಿಇಓ ಡಾ. ಶ್ವೇತಾ ಅಮಿತ್ ರಕ್ಷಣಾ ಇಲಾಖೆಯ ಡಿಫೆನ್ಸ್ ಅವಾರ್ಡ್ ಪಡೆದುಕೊಂಡಿದ್ದಾರೆ.
    ನವದೆಹಲಿಯ ಉದ್ಯೋಗ್ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಮಾರಂಭದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಡಾ. ಶ್ವೇತಾ ಅಮಿತ್‌ರವರಿಗೆ ಪ್ರಶಸ್ತಿಯನ್ನು ವಿತರಿಸಿದರು.  ಡಿಫೆನ್ಸ್ ಇಂಡಿಯಾ ಸ್ಟಾರ್ಟ್ ಆಫ್ ಚಾಲೆಂಜ್-೫ರಲ್ಲಿ ಹೆಲ್ಮೆಟ್ ಮೌಂಟ್ ಕನ್‌ಫರ್ಮಬಲ್ ಆಂಟೈನಾ ಎಂಬ ವಿಷಯದಲ್ಲಿ ಸಾಧಿಸಿದ ಸಾಧನೆಯ ಫಲವಾಗಿ ಬೆಂಗಳೂರಿನ ಮೀಂಡರ್ ಸ್ಪೆಕ್ಟ್ರಾ ಪ್ರೈವೇಟ್ ಲಿಮಿಟೆಡ್ ಕಂಪನಿಯನ್ನು ಆಯ್ಕೆ ಮಾಡಿಕೊಂಡು ಡಾ.ಶ್ವೇತಾ ಅವರನ್ನು ಗೌರವಿಸಲಾಗಿದೆ.
    ಇನ್ನೋವೇಷನ್ಸ್ ಫಾರ್ ಡಿಫೆನ್ಸ್ ಎಕ್ಷಲೆನ್ಸಿ ಆಯ್ಕೆಯ ಜವಾಬ್ದಾರಿಯನ್ನು ನಿರ್ವಹಿಸಿ ಮೀಂಡರ್ ಸ್ಪೆಕ್ಟ್ರಾ ಪ್ರೈವೇಟ್ ಲಿಮಿಟೆಡ್ ಕಂಪನಿಯ ಹೆಸರನ್ನು ಶಿಫಾರಸ್ಸು ಮಾಡಿತ್ತು.  ಡಾ.ಶ್ವೇತಾ ಅಮಿತ್‌ರವರಿಗೆ ನಗರದ ವಿವಿಧ ಸಂಘ-ಸಂಸ್ಥೆಗಳು, ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ.  

ಉಚಿತ ಸಾಮೂಹಿಕ ವಿವಾಹ : ಸದುಪಯೋಗಕ್ಕೆ ಕರೆ

    ಭದ್ರಾವತಿ, ಏ. ೨೭: ವಿಶ್ವ ಹಿಂದು ಪರಿಷದ್, ವಿಶ್ವ ಭಾರತಿ ವಿಶ್ವಸ್ಥ ಮಂಡಳಿ ವತಿಯಿಂದ ೩೮ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಮೇ.೨೯ರ ಭಾನುವಾರ ಮಧ್ಯಾಹ್ನ ೧೨ ಗಂಟೆಗೆ ಸಿದ್ದಾರೂಢನಗರ ಕಾಳಿದಾಸ ಬಡಾವಣೆಯಲ್ಲಿರುವ ಧರ್ಮಶ್ರೀ ಸಭಾಭವನದಲ್ಲಿ ನಡೆಯಲಿದೆ.
    ಕಡ್ಡಾಯವಾಗಿ ವರನಿಗೆ ೨೧ ವರ್ಷ, ವಧುವಿಗೆ ೧೮ ವರ್ಷ ತುಂಬಿರಬೇಕು. ಎರಡನೇ ಮದುವೆಗೆ ಅವಕಾಶವಿರುವುದಿಲ್ಲ. ವಿವಾಹಕ್ಕೆ ಅಪೇಕ್ಷೆಯುಳ್ಳವರು ಮೇ.೧೦ರೊಳಗೆ ಕೋರಿಕೆ ಪತ್ರ ನೀಡುವುದು. ವಿಧವಾ ವಿವಾಹಕ್ಕೆ ಅವಕಾಶವಿದ್ದು, ಸಾಮೂಹಿಕ ವಿವಾಹ ಸಮಾರಂಭದಲ್ಲಿ ಶತಾಯುಷಿಗಳನ್ನು ಸನ್ಮಾನಿಸಿ ಗೌರವಿಸಲಾಗುವುದು.
    ಸಾರ್ವಜನಿಕರು, ದಾನಿಗಳು, ಗಣ್ಯರು, ಸಂಘ-ಸಂಸ್ಥೆಗಳು ಸಾಮೂಹಿಕ ವಿವಾಹಕ್ಕೆ ಎಲ್ಲಾ ರೀತಿಯ ಸಹಕಾರ ನೀಡುವ ಮೂಲಕ ಯಶಸ್ವಿಗೊಳಿಸಲು ಸಹಕರಿಸುವಂತೆ ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ ಮೊ: ೮೭೬೨೨೮೭೦೧೮ ಅಥವಾ ೯೮೮೦೭೭೯೨೯೩ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ.

ದೊಡ್ಡೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಸಿ. ಮಧು ಲೇಪಾಕ್ಷಿ

ಭದ್ರಾವತಿ ತಾಲೂಕಿನ ದೊಡ್ಡೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಸಿ. ಮಧು ಲೇಪಾಕ್ಷಿ ಬುಧವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನೂತನ ಅಧ್ಯಕ್ಷರನ್ನು ಶಾಸಕ ಬಿ.ಕೆ ಸಂಗಮೇಶ್ವರ್‌ರವರ ಪುತ್ರ, ಯುವ ಮುಖಂಡ ಬಿ.ಎಸ್ ಬಸವೇಶ್ ಸೇರಿದಂತೆ ಇನ್ನಿತರರು ಅಭಿನಂದಿಸಿದರು.
    ಭದ್ರಾವತಿ, ಏ. ೨೭: ತಾಲೂಕಿನ ದೊಡ್ಡೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಸಿ. ಮಧು ಲೇಪಾಕ್ಷಿ ಬುಧವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
    ಸಾಮಾನ್ಯ ಮೀಸಲಾತಿ ಹೊಂದಿರುವ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿ ಸಿ. ಮಧು ಲೇಪಾಕ್ಷಿ ಆಯ್ಕೆಯಾಗಿದ್ದಾರೆ. ಒಟ್ಟು ೧೦ ಸ್ಥಾನಗಳನ್ನು ಹೊಂದಿರುವ ಪಂಚಾಯಿತಿಯಲ್ಲಿ ಕಾಂಗ್ರೆಸ್ ಬೆಂಬಲಿತರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಅಧಿಕಾರ ಹಂಚಿಕೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ.  ಮೊದಲ ಅವಧಿಗೆ ಬೆಳ್ಳಿಗೆರೆ ಕ್ಷೇತ್ರದ ಆಗಷರೀಫ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.
    ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಕಾಂತರಾಜ್ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಂಕರ್ ಉಪಸ್ಥಿತರಿದ್ದರು.
    ನೂತನ ಅಧ್ಯಕ್ಷರನ್ನು ಶಾಸಕ ಬಿ.ಕೆ ಸಂಗಮೇಶ್ವರ್‌ರವರ ಪುತ್ರ, ಯುವ ಮುಖಂಡ ಬಿ.ಎಸ್ ಬಸವೇಶ್, ಪಂಚಾಯಿತಿ ಕಾಂಗ್ರೆಸ್ ಬೆಂಬಲಿತ ಸದಸ್ಯರು, ಪಕ್ಷದ ಮುಖಂಡರು ಸೇರಿದಂತೆ ಇನ್ನಿತರರು ಅಭಿನಂದಿಸಿದರು.

Tuesday, April 26, 2022

ದಲಿತ ಮುಖಂಡ ಪಿ. ಮೂರ್ತಿ ಬಿಎಸ್‌ಪಿ ಪಕ್ಷಕ್ಕೆ ಸೇರ್ಪಡೆ

ಭದ್ರಾವತಿ ನಗರಸಭೆ ವ್ಯಾಪ್ತಿಯ ಬುಳ್ಳಾಪುರ ನಿವಾಸಿ, ದಲಿತ ಮುಖಂಡ ಪಿ. ಮೂರ್ತಿ ಮಂಗಳವಾರ ಬಹುಜನ ಸಮಾಜ ಪಾರ್ಟಿಗೆ ಸೇರ್ಪಡೆಗೊಂಡರು.
    ಭದ್ರಾವತಿ, ಏ. ೨೬: ನಗರಸಭೆ ವ್ಯಾಪ್ತಿಯ ಬುಳ್ಳಾಪುರ ನಿವಾಸಿ, ದಲಿತ ಮುಖಂಡ ಪಿ. ಮೂರ್ತಿ ಮಂಗಳವಾರ ಬಹುಜನ ಸಮಾಜ ಪಾರ್ಟಿಗೆ ಸೇರ್ಪಡೆಗೊಂಡರು.
    ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯವತಿಯವರ ಸಾಧನೆ ಹಾಗು ಪಕ್ಷದ ತತ್ವ ಸಿದ್ಧಾಂತಗಳನ್ನು ಮೆಚ್ಚಿ ಪಿ. ಮೂರ್ತಿ ಬಿಎಸ್‌ಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಪಕ್ಷದ ಕಛೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ತಾಲೂಕು ಅಧ್ಯಕ್ಷ ರಹಮತ್ ಉಲ್ಲಾ ಖಾನ್ ಪಕ್ಷದ ಬಾವುಟ ನೀಡುವುದರ ಮೂಲಕ ಸ್ವಾಗತಿಸಿದರು.
    ತಾಲೂಕು ಸಂಯೋಜಕ ಎಂ. ರಾಜೇಂದ್ರ, ಪ್ರಚಾರ ಸಮಿತಿ ಅಧ್ಯಕ್ಷ ಗುಲಾಮ್ ಹುಸೇನ್, ಉಪಾಧ್ಯಕ್ಷ ಮಾಹಿನ್ ಹಾಗೂ ಪಕ್ಷದ ಸಂಘಟನಾ ಕಾರ್ಯದರ್ಶಿ ಶೌಕತ್ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಕೂಡ್ಲಿಗೆರೆ ಗ್ರಾಮದಲ್ಲಿ ನೂತನ ನಾಡಕಛೇರಿಗೆ ಶಾಸಕ ಬಿ.ಕೆ ಸಂಗಮೇಶ್ವರ್ ಭೂಮಿ ಪೂಜೆ

ಭದ್ರಾವತಿ ತಾಲೂಕಿನ ಕೂಡ್ಲಿಗೆರೆ ಗ್ರಾಮದಲ್ಲಿ ಸುಮಾರು ೧೮.೫ ಲಕ್ಷ ರು. ವೆಚ್ಚದಲ್ಲಿ ನೂತನ ನಾಡಕಛೇರಿ ನಿರ್ಮಾಣಕ್ಕೆ ಮಂಗಳವಾರ ಶಾಸಕ ಬಿ.ಕೆ ಸಂಗಮೇಶ್ವರ್ ಭೂಮಿ ಪೂಜೆ ನೆರವೇರಿಸಿದರು.
    ಭದ್ರಾವತಿ, ಏ. ೨೬: ತಾಲೂಕಿನ ಕೂಡ್ಲಿಗೆರೆ ಗ್ರಾಮದಲ್ಲಿ ಸುಮಾರು ೧೮.೫ ಲಕ್ಷ ರು. ವೆಚ್ಚದಲ್ಲಿ ನೂತನ ನಾಡಕಛೇರಿ ನಿರ್ಮಾಣಕ್ಕೆ ಮಂಗಳವಾರ ಶಾಸಕ ಬಿ.ಕೆ ಸಂಗಮೇಶ್ವರ್ ಭೂಮಿ ಪೂಜೆ ನೆರವೇರಿಸಿದರು.
    ಕೂಡ್ಲಿಗೆರೆಯಲ್ಲಿ ಬಹಳ ವರ್ಷಗಳಿಂದ ನಾಡಕಛೇರಿ ಕರ್ತವ್ಯ ನಿರ್ವಹಿಸುತ್ತಿದ್ದರೂ ಸಹ ಸ್ವಂತ ಕಟ್ಟಡ ಹೊಂದಿರಲಿಲ್ಲ. ಈ ಹಿನ್ನಲೆಯಲ್ಲಿ ಹೊಸ ಕಟ್ಟಡಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು.
    ಉಪತಹಸೀಲ್ದಾರ್ ನಾರಾಯಣಗೌಡ, ಕೂಡ್ಲಿಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಉಮಾದೇವಿ ತಿಪ್ಪೇಶ್, ಉಪಾಧ್ಯಕ್ಷ ಕುಬೇರ್‌ನಾಯ್ಕ್, ಸುಗ್ರಾಮ ಅಧ್ಯಕ್ಷೆ ಗೌರಮ್ಮ, ಹಾಗು ಗ್ರಾ.ಪಂ. ಸದಸ್ಯರು, ರೈತರ ವ್ಯವಸಾಯೋತ್ಪನ್ನ ಸಹಕಾರ ಸಂಘದ ಅಧ್ಯಕ್ಷ ಎನ್.ಎಚ್ ಮಹೇಶ್, ಪ್ರಮುಖರಾದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಚ್.ಎಲ್ ಷಡಾಕ್ಷರಿ, ದಶರಥಗಿರಿ, ಎಸ್ ಮಹಾದೇವ, ಜಯಣ್ಣ, ಪ್ರವೀಣ್‌ನಾಯ್ಕ್ ಹಾಗು ಗ್ರಾಮದ ಪ್ರಮುಖರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ವಿಐಎಸ್.ಎಲ್ ಅಧಿಕಾರಿ ಉನ್ನಿಕೃಷ್ಣನ್‌ಗೆ ಸಿಎಂಎ ಯುವ ಸಾಧಕ ಪ್ರಶಸ್ತಿ

ಏ.೨೦ರಂದು ನವದೆಹಲಿಯ ಕಾನ್ಸ್ಟಿಟ್ಯೂಷನ್ ಕ್ಲಬ್ ಆಫ್ ಇಂಡಿಯಾದಲ್ಲಿ ನಡೆದ ಸಮಾರಂಭದಲ್ಲಿ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ, ಜವಳಿ, ಗ್ರಾಹಕ ವ್ಯವಹಾರಗಳು ಮತ್ತು ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಪಿಯೂಷ್ ಗೋಯಲ್ ೨೦೧೭ನೇ ಸಾಲಿನ ಸಿಎಂಎ ಯುವ ಸಾಧಕ ಪ್ರಶಸ್ತಿಯನ್ನು ಭದ್ರಾವತಿ ವಿಐಎಸ್‌ಎಲ್ ಕಾರ್ಖಾನೆಯ ಹಣಕಾಸು ವಿಭಾಗದ ಹಿರಿಯ ವ್ಯವಸ್ಥಾಪಕ ವಿ.ಎಂ ಉನ್ನಿಕೃಷ್ಣನ್‌ರವರಿಗೆ ವಿತರಿಸಿದರು.
    ಭದ್ರಾವತಿ, ಏ. ೨೬: ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯ ಹಣಕಾಸು ವಿಭಾಗದ ಹಿರಿಯ ವ್ಯವಸ್ಥಾಪಕ ವಿ.ಎಂ ಉನ್ನಿಕೃಷ್ಣನ್‌ರವರು ಇನ್ಸ್‌ಟಿಟ್ಯೂಟ್ ಆಫ್ ಕಾಸ್ಟ್ ಅಕೌಂಟ್ಸ್ ಆಫ್ ಇಂಡಿಯಾ ವತಿಯಿಂದ ನೀಡಲಾಗುವ ೨೦೧೭ನೇ ಸಾಲಿನ ಸಿಎಂಎ ಯುವ ಸಾಧಕ ಪ್ರಶಸ್ತಿ ಪಡೆದುಕೊಂಡಿದ್ದಾರೆ.
    ಬೃಹತ್ ಸಾರ್ವಜನಿಕ ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಯುವ ಸಾಧಕರನ್ನು ಗುರುತಿಸಿ ನೀಡಲಾಗುವ ಈ ಪ್ರಶಸ್ತಿ ಸರ್ಟಿಫಿಕೇಟ್ಸ್ ಆಫ್ ಮೆರಿಟ್ ಒಳಗೊಂಡಿದೆ. ಏ.೨೦ರಂದು ನವದೆಹಲಿಯ ಕಾನ್ಸ್ಟಿಟ್ಯೂಷನ್ ಕ್ಲಬ್ ಆಫ್ ಇಂಡಿಯಾದಲ್ಲಿ ನಡೆದ ಸಮಾರಂಭದಲ್ಲಿ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ, ಜವಳಿ, ಗ್ರಾಹಕ ವ್ಯವಹಾರಗಳು ಮತ್ತು ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಪಿಯೂಷ್ ಗೋಯಲ್ ಪ್ರಶಸ್ತಿಯನ್ನು ಉನ್ನಿಕೃಷ್ಣನ್‌ರವರಿಗೆ ವಿತರಿಸಿದರು.
    ಉನ್ನಿಕೃಷ್ಣನ್‌ರವರು ಎಂ.ಕಾಂ., ಐಸಿಡಬ್ಲ್ಯೂಎ ಮತ್ತು ಸಿಎಸ್ ಪದವಿಯನ್ನು ಪಡೆದುಕೊಂಡಿದ್ದಾರೆ. ಹಣಕಾಸು ಅಧಿಕಾರಿಯಾಗಿ ಕಳೆದ ೧೧ ವರ್ಷಗಳಿಂದ ಕಾರ್ಖಾನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇವರು ಬಹುಮುಖ ಪ್ರತಿಮೆಯಾಗಿದ್ದು, ಗಾಯಕರಾಗಿದ್ದಾರೆ. ಇವರ ಸಾಧನೆಗೆ ಕಾರ್ಖಾನೆ ಆಡಳಿತ ಮಂಡಳಿ ಅಭಿನಂದಿಸಿದೆ.

ಶ್ರೀ ಮಾರಿಯಮ್ಮ ದೇವಸ್ಥಾನದ ೬೦ನೇ ವರ್ಷದ ಕರಗ ಮಹೋತ್ಸವ

ಭದ್ರಾವತಿ ಹಳೇ ಸಂತೆಮೈದಾನ ರಸ್ತೆಯಲ್ಲಿರುವ ಶ್ರೀ ಮಾರಿಯಮ್ಮ ದೇವಸ್ಥಾನದ ೬೦ನೇ ವರ್ಷದ 'ಕರಗ ಮಹೋತ್ಸವ' ಕಳೆದ ೩ ದಿನಗಳಿಂದ ವಿಜೃಂಭಣೆಯಿಂದ ಜರುಗುತ್ತಿದ್ದು, ಮಂಗಳವಾರ ಅಮ್ಮನವರಿಗೆ ವಿಶೇಷ ಅಲಂಕಾರ ಕೈಗೊಳ್ಳಲಾಗಿತ್ತು.
    ಭದ್ರಾವತಿ, ಏ. ೨೬: ಹಳೇ ಸಂತೆಮೈದಾನ ರಸ್ತೆಯಲ್ಲಿರುವ ಶ್ರೀ ಮಾರಿಯಮ್ಮ ದೇವಸ್ಥಾನದ ೬೦ನೇ ವರ್ಷದ 'ಕರಗ ಮಹೋತ್ಸವ' ಕಳೆದ ೩ ದಿನಗಳಿಂದ ವಿಜೃಂಭಣೆಯಿಂದ ಜರುಗುತ್ತಿದ್ದು, ಮಂಗಳವಾರ ಕರಗ ಪ್ರತಿಷ್ಠಾಪನೆಯೊಂದಿಗೆ ಅಂಬಲಿ ಉಯ್ಯುವ ಧಾರ್ಮಿಕ ಆಚರಣೆ ನಡೆಯಿತು.
    ಬೆಳಿಗ್ಗೆ ೬ ಗಂಟೆಗೆ ಅಮ್ಮನವರಿಗೆ ವಿಶೇಷ ಅಭಿಷೇಕ, ಅಲಂಕಾರ ನೆರವೇರಿತು. ೧೧ ಗಂಟೆಗೆ ಹೊಸಸೇತುವೆ ಬಳಿ ಭದ್ರಾನದಿ ದಡದಲ್ಲಿ ಕರಗ ಜೋಡಣೆಯೊಂದಿಗೆ ರಾಜಬೀದಿಗಳಲ್ಲಿ ತಾರೈತಮ್ಮಟೆ, ಪಂಬೆ ವಾದ್ಯಗಳೊಂದಿಗೆ ದೇವಸ್ಥಾನಕ್ಕೆ ತರಲಾಯಿತು. ನಂತರ ಮಧ್ಯಾಹ್ನ ೧ ಗಂಟೆಗೆ ಅಂಬಲಿ ಉಯ್ಯುವ ಆಚರಣೆ, ಸಂಜೆ ದೀಪಾರಾಧನೆ, ನಂತರ ವಾದ್ಯಮೇಳದೊಂದಿಗೆ ರಾಜಬೀದಿ ಉತ್ಸವ ನಡೆಯಿತು.
    ಬುಧವಾರ ಬೆಳಿಗ್ಗೆ ಅಮ್ಮನವರಿಗೆ ಅರಿಶಿನದ ಅಭಿಷೇಕ, ಸಂಜೆ ಅನ್ನದಾನ, ನೃತ್ಯ ಕಾರ್ಯಕ್ರಮಗಳು ಜರುಗಲಿವೆ. ಕೇಶವಪುರ, ಗಾಂಧಿನಗರ, ಮಾಧವನಗರ, ಎನ್‌ಎಂಸಿ ಬಡಾವಣೆ, ಭೂತನಗುಡಿ, ಹಳೇನಗರ ಸೇರಿದಂತೆ ವಿವಿಧೆಡೆಗಳಿಂದ ಭಕ್ತಾಧಿಗಳು ಆಗಮಿಸಿ ಅಮ್ಮನವರ ದರ್ಶನ ಪಡೆದು ಕೃಪೆಗೆ ಪಾತ್ರರಾದರು.

ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಆಚರಣೆಗಳು

ಭದ್ರಾವತಿ ಹಳೇಸಂತೆಮೈದಾನ ಚಾನಲ್ ಏರಿಯಾ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ ಮಂಗಳವಾರ ವಿವಿಧ ಧಾರ್ಮಿಕ ಆಚರಣೆಗಳು ಜರುಗಿದವು.
    ಭದ್ರಾವತಿ, ಏ. ೨೬: ನಗರದ ಹಳೇಸಂತೆಮೈದಾನ ಚಾನಲ್ ಏರಿಯಾ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ ಮಂಗಳವಾರ ವಿವಿಧ ಧಾರ್ಮಿಕ ಆಚರಣೆಗಳು ಜರುಗಿದವು.
    ಶ್ರೀ ಮಹಾಗಣಪತಿಗೆ ಪಂಚಾಮೃತ ಅಭಿಷೇಕ, ಕಲಾವೃದ್ದಿ ಹೋಮ, ಅಷ್ಟದ್ರವ್ಯ ಸಹಿತ ಮಹಾಗಣಪತಿ ಹೋಮ, ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು.
    ಈ ದೇವಸ್ಥಾನವನ್ನು ಮಹಿಳೆಯರು ಮುನ್ನಡೆಸಿಕೊಂಡು ಹೋಗುತ್ತಿರುವುದು ವಿಶೇಷವಾಗಿದೆ. ದೇವಸ್ಥಾನ ಕಮಿಟಿ ಪ್ರಮುಖರಾದ ಗೌರವಾಧ್ಯಕ್ಷೆ ಪ್ರಿಯಾಂಕ ಗಣೇಶ್, ಅಧ್ಯಕ್ಷೆ ಜಯಲಕ್ಷ್ಮೀ ಎಸ್. ನಾಗರಾಜ್‌ರಾವ್, ಉಪಾಧ್ಯಕ್ಷೆ ಶ್ವೇತ ಟಿ.ಎಸ್ ಯತೀಶ್ ರಾಜ್ .ಬಿ, ಕಾರ್ಯದರ್ಶಿ ವರಲಕ್ಷ್ಮೀ ಎಂ. ನಾಗರಾಜ್ .ಡಿ, ಸಹಕಾರ್ಯದರ್ಶಿ ಲತಾ ಎಂ.ಎಚ್ ತಿಪ್ಪೇಸ್ವಾಮಿ, ಖಜಾಂಚಿ ವಾಣಿ ವಿ.ಎಂ ಕುಮಾರಸ್ವಾಮಿ, ಕಾರ್ಯಕಾರಿಣಿ ಸದಸ್ಯೆಯರಾದ ಶಿವಕುಮಾರಿ ಡಿ.ಎನ್ ರಂಗಪ್ಪ, ವಿಜಯಲಕ್ಷ್ಮಿ ಆರ್. ಸುಬ್ರಮಣಿ, ಕೌಶಲ್ಯ ಡಿ. ಮೂರ್ತಿ, ರೂಪ ರಾಘವೇಂದ್ರ, ಆಶಾ ರವಿರಾಯ್ಕರ್ ಇನ್ನಿತರರು ಉಪಸ್ಥಿತರಿದ್ದರು.
    ನಗರಸಭೆ ಮಾಜಿ ಅಧ್ಯಕ್ಷೆ ವಿಶಾಲಾಕ್ಷ್ಮಿ, ಮುಖಂಡರಾದ ಚೌಡಪ್ಪ, ಎಚ್.ಆರ್ ರಂಗನಾಥ್, ಜಂಬೂಸ್ವಾಮಿ, ಕಮಲಕುಮಾರಿ ಸೇರಿದಂತೆ ಹೊಸಮನೆ, ಕೇಶವಪುರ, ಗಾಂಧಿನಗರ, ಭೂತನಗುಡಿ ಸೇರಿದಂತೆ ವಿವಿಧೆಡೆಗಳಿಂದ ಭಕ್ತಾಧಿಗಳು ಪಾಲ್ಗೊಂಡಿದ್ದರು.

Monday, April 25, 2022

ಸರ್ವೋತ್ತಮ ಸೇವಾ ಪ್ರಶಸ್ತಿ ಪುರಸ್ಕೃತ ವೈದ್ಯ ಡಾ. ಡಿ.ಎಸ್ ಶಿವಪ್ರಕಾಶ್ ಕರ್ತವ್ಯಕ್ಕೆ ಶಾಸಕರ ಮೆಚ್ಚುಗೆ

ತಾಲೂಕು ಮಟ್ಟದ ಆರೋಗ್ಯ ಮೇಳದಲ್ಲಿ ಅಭಿನಂದನೆ

ಭದ್ರಾವತಿ, ಏ. ೨೫:  ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸಾ ಹಾಗು ಉದರ ದರ್ಶಕ ಹಿರಿಯ ತಜ್ಞ ವೈದ್ಯರಾಗಿರುವ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸರ್ವೋತ್ತಮ ಸೇವಾ ಪ್ರಶಸ್ತಿ ಪುರಸ್ಕೃತರಾದ ಡಾ. ಡಿ.ಎಸ್ ಶಿವಪ್ರಕಾಶ್‌ರವರನ್ನು ಶಾಸಕ ಬಿ.ಕೆ ಸಂಗಮೇಶ್ವರ್ ಅಭಿನಂದಿಸಿದರು.
    ಭದ್ರಾವತಿ, ಏ. ೨೫:  ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸಾ ಹಾಗು ಉದರ ದರ್ಶಕ ಹಿರಿಯ ತಜ್ಞ ವೈದ್ಯರಾಗಿರುವ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸರ್ವೋತ್ತಮ ಸೇವಾ ಪ್ರಶಸ್ತಿ ಪುರಸ್ಕೃತರಾದ ಡಾ. ಡಿ.ಎಸ್ ಶಿವಪ್ರಕಾಶ್‌ರವರನ್ನು ಶಾಸಕ ಬಿ.ಕೆ ಸಂಗಮೇಶ್ವರ್ ಅಭಿನಂದಿಸಿದರು.
    ಮೂಲತಃ ಸೊರಬ ತಾಲೂಕಿನವರಾದ ಶಿವಪ್ರಕಾಶ್‌ರವರು ೧೯೯೭ರಲ್ಲಿ ವೈದ್ಯ ವೃತ್ತಿ ಆರಂಭಿಸಿದ್ದು, ಶಿಕಾರಿಪುರದ ಕಪ್ಪನಹಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸುಮಾರು ೮ ವರ್ಷ,  ತೀರ್ಥಹಳ್ಳಿ ಜೆ.ಸಿ ಆಸ್ಪತ್ರೆಯ ವೈದ್ಯಾಧಿಕಾರಿಯಾಗಿ ಸುಮಾರು ೧೦ ವರ್ಷ ಹಾಗು ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಯಲ್ಲಿ ಸುಮಾರು ೨ ವರ್ಷ ಕರ್ತವ್ಯ ನಿರ್ವಹಿಸಿದ್ದಾರೆ. ಪ್ರಸ್ತುತ ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಅಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
    ಇದುವರೆಗೂ ಸುಮಾರು ೧೦ ಸಾವಿರಕ್ಕೂ ಅಧಿಕ ಶಸ್ತ್ರ ಚಿಕಿತ್ಸೆ, ೫೦೦೦ಕ್ಕೂ ಹೆಚ್ಚು ಉದರ ದರ್ಶಕ ಶಸ್ತ್ರ ಚಿಕಿತ್ಸೆ ಹಾಗು ೨೦೦ಕ್ಕೂ ಹೆಚ್ಚು ಎನ್‌ವಿಎಸ್ ಶಸ್ತ್ರ ಚಿಕಿತ್ಸೆ ನೆರವೇರಿಸಿರುವುದು ಇವರ ವೈದ್ಯ ವೃತ್ತಿಯ ಸಾಧನೆಯಾಗಿದ್ದು, ವೈದ್ಯ ವೃತ್ತಿಯ ಜೊತೆಗೆ ಹಲವಾರು ಸಾಮಾಜಿಕ ಕಾರ್ಯಗಳಲ್ಲೂ ತೊಡಗಿಸಿಕೊಂಡು ಗಮನ ಸೆಳೆದಿದ್ದಾರೆ. ಇವರಿಗೆ ೨೦೧೭-೧೮ನೇ ಸಾಲಿನಲ್ಲಿ ರಾಜ್ಯ ಸರ್ಕಾರದ ಕಾಯಕಲ್ಪ ಪ್ರಶಸ್ತಿ ಸಹ ಲಭಿಸಿದೆ. ಅಲ್ಲದೆ ವಿವಿಧ ಸಂಘ-ಸಂಸ್ಥೆಗಳಿಂದ ಹಲವಾರು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.
    ತಾಲೂಕು ಮಟ್ಟದ ಆರೋಗ್ಯ ಮೇಳದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್‌ರವರು ಶಿವಪ್ರಕಾಶ್‌ರವರ ವೃತ್ತಿ ಕರ್ತವ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದಿಸಿದರು. ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಉಪಾಧ್ಯಕ್ಷ ಚನ್ನಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಸುದೀಪ್‌ಕುಮಾರ್, ತಹಸೀಲ್ದಾರ್ ಆರ್. ಪ್ರದೀಪ್, ತಾ.ಪಂ. ಇ.ಓ ರಮೇಶ್, ನಗರಸಭೆ ಹಾಗು ಆರೋಗ್ಯ ರಕ್ಷಾ ಸಮಿತಿ ಸದಸ್ಯರು, ತಾಲೂಕು ಆರೋಗ್ಯಾಧಿಕಾರಿ ಡಾ.ಎಂ.ವಿ ಅಶೋಕ್, ಹಿರಿಯ ವೈದ್ಯರಾದ ಡಾ. ಗುಡದಪ್ಪ ಕಸಬಿ, ಡಾ. ಶಂಕರಪ್ಪ, ಡಾ. ಓ. ಮಲ್ಲಪ್ಪ ಹಾಗು ಆಸ್ಪತ್ರೆಯ ವೈದ್ಯರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

ವಿಶ್ವ ಪುಸ್ತಕ ದಿನ : ಓದುವ ಉನ್ನತ ಸಂಸ್ಕೃತಿ ಉಳಿಯಲಿ

ವಿಶ್ವ ಪುಸ್ತಕ ದಿನದ ಅಂಗವಾಗಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಭದ್ರಾವತಿ ನ್ಯೂಟೌನ್ ಜಯಶ್ರೀ ವೃತ್ತದ ಸಮೀಪದಲ್ಲಿರುವ ಡಾ.ಬಿ.ಆರ್ ಅಂಬೇಡ್ಕರ್ ಸಾರ್ವಜನಿಕ ವಾಚನಾಲಯ ಮತ್ತು ಗ್ರಂಥಾಲಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಗ್ರಂಥಾಲಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸ ಸಲ್ಲಸುತ್ತಿರುವ ರಾಜ್‌ಕುಮಾರ್ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
    ಭದ್ರಾವತಿ, ಏ. ೨೫: ಪುಸ್ತಕ ಓದುವ, ಓದಿದ್ದನ್ನು ಅರ್ಥೈಸಿಕೊಳ್ಳುವ, ನಾಲ್ಕಾರು ಜನರಿಗೆ ತಿಳುವಳಿಕೆ ನೀಡುವ ಉನ್ನತ ಸಂಸ್ಕೃತಿ ಉಳಿಸಿ ಬೆಳೆಸುವ ಅಗತ್ಯವಿದೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೋಗಲೂರು ತಿಪ್ಪೇಸ್ವಾಮಿ ಹೇಳಿದರು.
    ಅವರು ವಿಶ್ವ ಪುಸ್ತಕ ದಿನದ ಅಂಗವಾಗಿ ಪರಿಷತ್ ವತಿಯಿಂದ ನಗರದ ನ್ಯೂಟೌನ್ ಜಯಶ್ರೀ ವೃತ್ತದ ಸಮೀಪದಲ್ಲಿರುವ ಡಾ.ಬಿ.ಆರ್ ಅಂಬೇಡ್ಕರ್ ಸಾರ್ವಜನಿಕ ವಾಚನಾಲಯ ಮತ್ತು ಗ್ರಂಥಾಲಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದ ನೇತೃತ್ವ ವಹಿಸಿ ಮಾತನಾಡಿದರು.
    ಎಲ್ಲರೂ ಪುಸ್ತಕ ಓದುವ ಹವ್ಯಾಸ ರೂಢಿಸಿಕೊಳ್ಳುವ ಜೊತೆಗೆ ಪುಸ್ತಕ ಉಡುಗೊರೆ ನೀಡುವ ಸಂಸ್ಕೃತಿ ಮೈಗೂಡಿಸಿಕೊಳ್ಳಬೇಕೆಂದರು.
    ಗ್ರಂಥಾಲಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವ ಜೊತೆಗೆ ಸಾಹಿತ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಪುಸ್ತಕ ಪ್ರಕಾಶಕರಾಗಿ, ಕಲೆ ಮತ್ತು ಸಾಹಿತ್ಯವನ್ನು ಪ್ರೋತ್ಸಾಹಿಸಿಕೊಂಡು ಬರುತ್ತಿರುವ ರಾಜ್‌ಕುಮಾರ್ ಅವರನ್ನು ಪರಿಷತ್ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು.
    ಪರಿಷತ್ ಪದಾಧಿಕಾರಿಗಳಾದ ತಿಮ್ಮಪ್ಪ, ಜಗದೀಶ್, ಅನಿಲ್‌ಕುಮಾರ್, ನಗರಸಭಾ ಸದಸ್ಯ ಬಸವರಾಜ ಬಿ ಆನೇಕೊಪ್ಪ, ಸಾಹಿತ್ಯ ಪ್ರೇಮಿಗಳಾದ ಭಾಸ್ಕರ್, ಚಂದ್ರಶೇಖರಪ್ಪ, ರಂಗನಾಥ್, ರಾಜು, ರಾಮೇಗೌಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ರಂಗನಾಥ್  ಸ್ವಾಗತಿಸಿ,  ಗುರು ವಂದಿಸಿದರು.

ಪುರಂದರದಾಸರ, ತ್ಯಾಗರಾಜರ, ಕನಕದಾಸರ ಆರಾಧನೆ : ಪ್ರಶಸ್ತಿ ಪ್ರದಾನ

ಭದ್ರಾವತಿ ಹಳೆನಗರದ ಮಹಿಳಾ ಸೇವಾ ಸಮಾಜದ ವತಿಯಿಂದ ಪ್ರತಿವರ್ಷದಂತೆ ಈ ಬಾರಿ ಸಹ  ಪುರಂದರದಾಸರ, ತ್ಯಾಗರಾಜರ ಮತ್ತು ಕನಕದಾಸರ ಆರಾಧನೆ ಹಮ್ಮಿಕೊಳ್ಳಲಾಗಿತ್ತು. ಸಂಗೀತ ಹಾಗು ಭರತನಾಟ್ಯದಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದವರಿಗೆ ಹನುಮಂತಮ್ಮ ಸ್ಮಾರಕ ಪ್ರಶಸ್ತಿ ನೀಡಿ ಸನ್ಮಾನಿಸಿ ಅಭಿನಂದಿಸಲಾಯಿತು.
    ಭದ್ರಾವತಿ, ಏ. ೨೫: ಹಳೆನಗರದ ಮಹಿಳಾ ಸೇವಾ ಸಮಾಜದ ವತಿಯಿಂದ ಪ್ರತಿವರ್ಷದಂತೆ ಈ ಬಾರಿ ಸಹ  ಪುರಂದರದಾಸರ, ತ್ಯಾಗರಾಜರ ಮತ್ತು ಕನಕದಾಸರ ಆರಾಧನಾ ಮಹೋತ್ಸವ ಹಮ್ಮಿಕೊಳ್ಳಲಾಗಿತ್ತು.
     ತಾಲೂಕಿನಲ್ಲಿ ಪ್ರಥಮ ಸ್ಥಾನ ಪಡೆದ ಸಂಗೀತ ಜ್ಯೂನಿಯರ್ ವಿಭಾಗದಲ್ಲಿ ಉಲ್ಲಾಸ್, ವೀಣೆ ಜ್ಯೂನಿಯರ್ ವಿಭಾಗದಲ್ಲಿ ಆರ್. ಆದರ್ಶ್ ಮತ್ತು ಭರತನಾಟ್ಯ ಜ್ಯೂನಿಯರ್ ವಿಭಾಗದಲ್ಲಿ ಅಶ್ವಿನಿ ಹಾಗು ಸೀನಿಯರ್ ವಿಭಾಗದಲ್ಲಿ ವೈಷ್ಣವಿ ಸಿ ವಿದ್ವತ್ಪೂರ್ವ ಸ್ನೇಹಾ ಎಸ್  ಅವರಿಗೆ ಹನುಮಂತಮ್ಮ ಸ್ಮಾರಕ ಪ್ರಶಸ್ತಿ ನೀಡಿ ಸನ್ಮಾನಿಸಿ ಅಭಿನಂದಿಸಲಾಯಿತು.
    ಸಮಾಜದ ಅಧ್ಯಕ್ಷೆ ಹೇಮಾವತಿ ವಿಶ್ವನಾಥ್ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ವಿದೂಷಿ ಪುಷ್ಪ ಕೃಷ್ಣಮೂರ್ತಿ, ಸೋಮು, ಗಾಯತ್ರಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಕಾರ್ಯದರ್ಶಿ ಶೋಭಾ ಗಂಗರಾಜ್ ಸ್ವಾಗಸಿದರು. ಶಾರದ ಶ್ರೀನಿವಾಸ್ ನಿರೂಪಿಸಿದರು. ಖಜಾಂಚಿ ಶಾಂತಿ ಶೇಟ್ ವಂದಿಸಿದರು.


Sunday, April 24, 2022

ವಿಶೇಷ ಗ್ರಾಮ ಸಭೆ ಮೂಲಕ ಪಂಚಾಯತ್ ರಾಜ್ ದಿವಸ್ ಆಚರಣೆ

ಭದ್ರಾವತಿ ತಾಲೂಕಿನ ಅರಕೆರೆ ಗ್ರಾಮ ಪಂಚಾಯಿತಿಯಲ್ಲಿ ಹಿರಿಯ ನಾಗರೀಕರಿಗೆ ಸಿಹಿ ತಿನ್ನಿಸುವ ಮೂಲಕ ವಿಶೇಷ ಗ್ರಾಮ ಸಭೆ ನಡೆಸಿ ಪಂಚಾಯತ್ ರಾಜ್ ದಿವಸ್ ಆಚರಿಸಲಾಯಿತು.
    ಭದ್ರಾವತಿ, ಏ. ೨೪: ತಾಲೂಕಿನ ಅರಕೆರೆ ಗ್ರಾಮ ಪಂಚಾಯಿತಿಯಲ್ಲಿ ಹಿರಿಯ ನಾಗರೀಕರಿಗೆ ಸಿಹಿ ತಿನ್ನಿಸುವ ಮೂಲಕ ವಿಶೇಷ ಗ್ರಾಮ ಸಭೆ ನಡೆಸಿ ಪಂಚಾಯತ್ ರಾಜ್ ದಿವಸ್ ಆಚರಿಸಲಾಯಿತು.
    ಗ್ರಾಮ ಪಂಚಾಯತಿ ಅಧ್ಯಕ್ಷ ಆರ್.ಡಿ ಶೇಖರಪ್ಪ ವಿಶೇಷ ಗ್ರಾಮ ಸಭೆ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಹಾಗು ಪಿ.ಎಂ ಕಿಸಾನ್ ಯೋಜನಾ ಕ್ರಿಡಿಟ್ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸುವ ಬಗ್ಗೆ ರೈತರಿಗೆ ಮಾಹಿತಿ ನೀಡಲಾಯಿತು.
    ಸಭೆಯಲ್ಲಿ ಪಂಚಾಯಿತಿ ಉಪಾಧ್ಯಕ್ಷೆ ಗಾಯತ್ರಿ ಶಂಕರಪ್ಪ, ಅಭಿವೃದ್ಧಿ ಅಧಿಕಾರಿ ಸುರೇಶ್ ಹಾಗು ಸದಸ್ಯರು, ರೈತರು, ಗ್ರಾಮಸ್ಥರು ಪಾಲ್ಗೊಂಡಿದ್ದರು. ಕಾರ್ಯದರ್ಶಿ ಭಾಸ್ಕರ್ ಸ್ವಾಗತಿಸಿದರು. ಅರಕೆರೆ ಭೈರೇಶ್‌ಕುಮಾರ್ ವಂದಿಸಿದರು.  

ಸಾತ್ವಿಕ ಬ್ರಾಹ್ಮಣ ಸಮುದಾಯ ಗುರುಗಳ ಕೃಪೆಪಡೆದು ದೇಶದ ನಾಯಕನಿಗೆ ಶಕ್ತಿ ತುಂಬಲಿ : ಶ್ರೀ ವಿಶ್ವಪ್ರಿಯತೀರ್ಥರು

ಭದ್ರಾವತಿ ಸಿದ್ಧಾರೂಢನಗರದ ನಂಜನಗೂಡು ಶ್ರೀರಾಘವೇಂದ್ರಸ್ವಾಮಿಗಳ ಮಠದಲ್ಲಿ ಕಳೆದ ಸುಮಾರು ವಾರದಿಂದ ನಡೆಯುತ್ತಿರುವ ಮಠದ ರಜತಮಹೋತ್ಸವದ ಕೊನೆಯ ದಿನವಾದ ಭಾನುವಾರ ಉಡುಪಿ ಅದಮಾರು ಮಠದ ಹಿರಿಯ ಶ್ರೀಗಳಾದ ಶ್ರೀ ವಿಶ್ವಪ್ರಿಯತೀರ್ಥರ ನೇತೃತ್ವದಲ್ಲಿ ರಾಯರ ವೃಂದಾವನಕ್ಕೆ ಪಂಚಾಮೃತಭಿಷೇಕ ಹಾಗೂ ವಿಶೇಷ ಅಲಂಕಾರ ಕೈಗೊಳ್ಳಲಾಯಿತು.
    ಭದ್ರಾವತಿ, ಏ. ೨೪: ಸಾತ್ವಿಕ ಬ್ರಾಹ್ಮಣ ಸಮುದಾಯ ಮಂತ್ರ, ಜಪ, ತಪಗಳ ಮೂಲಕ ಹರಿವಾಯು ಗುರುಗಳ ಕೃಪೆಪಡೆದು ಅದನ್ನು ಹಿಂದೂ ಸಮಾಜವನ್ನೊಳಗೊಂಡ ಈ ದೇಶದ ಒಳಿತಿಗಾಗಿ ಶ್ರಮಿಸುತ್ತಿರುವ ದೇಶದ ನಾಯಕನಿಗೆ ಶಕ್ತಿ ತುಂಬಲು ಬಳಸಬೇಕು ಎಂದು ಉಡುಪಿ ಅದಮಾರು ಮಠದ ಹಿರಿಯ ಶ್ರೀಗಳಾದ ಶ್ರೀ ವಿಶ್ವಪ್ರಿಯತೀರ್ಥರು ಹೇಳಿದರು.
    ಅವರು ಸಿದ್ಧಾರೂಢನಗರದ ನಂಜನಗೂಡು ಶ್ರೀರಾಘವೇಂದ್ರಸ್ವಾಮಿಗಳ ಮಠದಲ್ಲಿ ಕಳೆದ ಸುಮಾರು ವಾರದಿಂದ ನಡೆಯುತ್ತಿರುವ ಮಠದ ರಜತಮಹೋತ್ಸವದ ಕೊನೆಯ ದಿನವಾದ ಭಾನುವಾರ ಅನುಗ್ರಹ ಸಂದೇಶನೀಡಿ ಮಾತನಾಡಿದರು.
ಸಮಾಜದ ಒಳಿತಿಗಾಗಿ ಅಗತ್ಯಬಿದ್ದರೆ ಕುಟುಂಬ ಸದಸ್ಯರ ಬಾಂಧವ್ಯ ತೊರೆದು ಸಮಾಜಮುಖಿಯಾಗಿ ಕೆಲಸಮಾಡಲು ಮುಂದಾಗಬೇಕು ಎಂಬುದನ್ನು ಸ್ವತಃ ಗುರು ಶ್ರೀರಾಘವೇಂದ್ರಸ್ವಾಮಿಗಳ ಜೀವನವೇ ನಮಗೆ ಮಾರ್ಗದರ್ಶಕವಾಗಿದೆ ಎಂದರು.
    ಸಮಾಜದ ಒಳಿತಿಗಾಗಿ ಅವರು ಸನ್ಯಾಸ ಸ್ವೀಕಾರಕ್ಕೆ ಮುಂದಾದಾಗ ಅವರ ಪತ್ನಿ ಅದಕ್ಕೆ ಅಡ್ಡಿಪಡಿಸಿದರೂ ಸಹ ಅವರು ತಮ್ಮ ನಿರ್ಧಾರದಿಂದ ಹಿಂದೆ ಸರಿಯದೆ ಸನ್ಯಾಸ ಸ್ವೀಕರಿಸಿ ತಪಃ ಪ್ರಭಾವದಿಂದ ಧರ್ಮ, ಜಾತಿ, ಪಂಗಡ ತಾರತಮ್ಯವಿಲ್ಲದೆ ಹಿಂದೂ, ಮುಸ್ಲಿಂ ಎಲ್ಲಾ ಜನರ ಕಷ್ಟಗಳನ್ನು ನಿವಾರಣೆ ಮಾಡಿ ಅವರ ಕೈಹಿಡಿದು ದಾರಿತೋರಿದ್ದಾರೆ ಎಂಬುದು ಎಷ್ಟು ಸತ್ಯವೋ ಅದೇ ರೀತಿ ಹಿಂದೂ ಸಮಾಜದ ಧಾರ್ಮಿಕ ಆಚಾರ-ವಿಚಾರಧಾರೆಗಳಿಗೆ ಅಡ್ಡಿಪಡಿಸುವ ಕಾರ್ಯಕ್ಕೆ ಯಾರೇ ಕೈಹಾಕಿದರೂ ಅಂತಹ ಜನರ ಕೈಗಳನ್ನು ಆ ರೀತಿ ಮಾಡದ ರೀತಿ ತಡೆಯುವ ಶಕ್ತಿ ಸಹ ಆ ಗುರು ಶ್ರೀ ರಾಘವೇಂದ್ರಸ್ವಾಮಿಗಳು ಕರುಣಿಸುತ್ತಾರೆ ಎಂಬುದೂ ಸಹ ಅಷ್ಠೇ ಸತ್ಯ ಎಂದರು.
    ಸಾತ್ವಿಕತೆಗೆ ಹೆಸರಾದ ಬ್ರಾಹಣ ಸಮುದಾಯ ದೈಹಿಕವಾಗಿ ದೇಶದ ರಕ್ಷಣೆ ಮಾಡಲು ಸಶಕ್ತ ವಾಗಿರದಿದ್ದರೂ ಸಹ, ಹೆಚ್ಚು ಹೆಚ್ಚು ಮಠ ಮಂದಿರಗಳಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಸುವ ಜೊತೆಗೆ ವೇದ, ಶಾಸ್ತ್ರ, ಪುರಾಣ, ಮಂತ್ರಗಳ ಅಧ್ಯಯನದ ಮೂಲಕ ಶಕ್ತಿ ಸಂಪಾದಿಸಿ  ಅದನ್ನು ದೇಶ ರಕ್ಷಣೆಗೆ ಕಟಿಬದ್ಧರಾಗಿ ಕಾರ್ಯನಿರ್ವಹಿಸುತ್ತಿರುವ ನಾಯಕನಿಗೆ ಶಕ್ತಿ ತುಂಬಲು ಬಳಸುವ ಸಂಕಲ್ಪ ಮಾಡಬೇಕು ಎಂದರು.
    ಡಾ. ದಯಾವತಿ, ನಾಗರಾಜ್, ರಮಾಕಾಂತ್, ವೆಂಕಟೇಶ್ ಮುಂತಾದವರು ಶ್ರೀಮಠ ಬೆಳೆದುಬಂದ ಹಾದಿಯ ಕುರಿತಂತೆ ಹಾಗೂ ಅದಕ್ಕೆ ಶ್ರಮಸಿದ ವ್ಯಕ್ತಿಗಳ ಕಾರ್ಯವನ್ನು ಸ್ಮರಿಸಿ ಮಾತನಾಡಿದರು. ಶ್ರೀಮಠದ ಮುಖ್ಯಸ್ಥರಾದ ಶೇಷಗಿರಿಆಚಾರ್ ಕಾರ್ಯಕ್ರಮದ ಯಶಸ್ಸಿಗೆ ಕಾರಣರಾ ದವರಿಗೆ ಕೃತಜ್ಞತೆ ಸಲ್ಲಿಸಿದರು.
    ಬೆಳಿಗ್ಗೆ ರಾಯರ ವೃಂದಾವನಕ್ಕೆ ಪಂಚಾಮೃತಭಿಷೇಕ ಹಾಗೂ ವಿಶೇಷ ಅಲಂಕಾರ ಮಾಡಲಾಯಿತು. ಶ್ರೀಗಳು ಅದಮಾರು ಮಠದ ಸಂಸ್ಥಾನದ ಶ್ರೀಕಾಳಿಂಗಮರ್ಧನ ಕೃಷ್ಣನ ಪೂಜೆಯನ್ನು ನೆರೆವೇರಿಸಿದರು.
    ಜಗನ್ನಾಥದಾಸರ ಹರಿಕಥಾಮೃತಸಾರದ ಕುರಿತಂತೆ ರಸಪ್ರಶ್ನೆ ಕಾರ್ಯಕ್ರಮ ನಡೆದು ವಿಜೇತರಿಗೆ ಬಹುಮಾನ ವಿತರಿಸಲಾಯಿತು. ತೀರ್ಥಪ್ರಸಾದ ವಿನಿಯೋಗ, ಅನ್ನಸಂತರ್ಪಣೆ ನೆರವೇರಿತು.
    ಮಠದ ವ್ಯವಸ್ಥಾಪಕರಾದ ಪಂಡಿತ್ ಗೋಪಾಲಾಚಾರ್, ಶ್ರೀನಿವಾಸಾಚಾರ್, ಶೇಷಗಿರಿ ಆಚಾರ್, ಜಗನ್ನಾಥ್, ವಾಸು, ರಾಘವೇಂದ್ರ, ಜಯತೀರ್ಥ, ವೆಂಕಟೇಶ್, ಮಧುಸೂದನ್, ಮಾಧವ ಮೂರ್ತಿ, ಸುಮಾ ಶೇಷಗಿರಿ, ಗುರುರಾಜಚಾರ್ ಸೇರಿದಂತೆ  ಅನೇಕರು ಉಪಸ್ಥಿತರಿದ್ದರು. ಶಾಸಕ ಬಿ.ಕೆ ಸಂಗಮೇಶ್ವರ್ ಸೇರಿದಂತೆ ಇನ್ನಿತರ ಗಣ್ಯರು ಪಾಲ್ಗೊಂಡು ಶ್ರೀಗಳ ಆಶೀರ್ವಾದ ಪಡೆದು ಕೃಪೆಗೆ ಪಾತ್ರರಾದರು.
 

ಉಡುಪಿ ಅದಮಾರು ಮಠದ ಹಿರಿಯ ಶ್ರೀಗಳಾದ ಶ್ರೀ ವಿಶ್ವಪ್ರಿಯತೀರ್ಥರಿಂದ ಗುರು ರಕ್ಷೆ ಪಡೆದರು.


ವಿಜೃಂಭಣೆಯಿಂದ ಜರುಗಿದ ಶ್ರೀ ದೊಡ್ಡಮ್ಮದೇವಿ ದೇವಸ್ಥಾನದ ಕಲಶ ಪ್ರತಿಷ್ಠಾಪನೆ

ಭದ್ರಾವತಿ ರಂಗಪ್ಪ ವೃತ್ತದ ಜೈಭೀಮ್ ನಗರದಲ್ಲಿರುವ ಶ್ರೀ ದೊಡ್ಡಮ್ಮದೇವಿ ದೇವಸ್ಥಾನದ ಕಲಶ ಪ್ರತಿಷ್ಠಾಪನೆ ಅಂಗವಾಗಿ ಶ್ರೀ ದೇವಿಗೆ ಕಲಾ ತತ್ತ್ವಾಧಿವಾಸ ಹೋಮ, ನವ ಕಲಾಭಿಷೇಕ, ಮಹಾಪೂಜೆ, ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು.
    ಭದ್ರಾವತಿ, ಏ. ೨೪: ರಂಗಪ್ಪ ವೃತ್ತದ ಜೈಭೀಮ್ ನಗರದಲ್ಲಿರುವ ಶ್ರೀ ದೊಡ್ಡಮ್ಮದೇವಿ ದೇವಸ್ಥಾನದ ಕಲಶ ಪ್ರತಿಷ್ಠಾಪನೆ ಭಾನುವಾರ ವಿಜೃಂಭಣೆಯಿಂದ ಜರುಗಿತು.
    ಬೆಳಿಗ್ಗೆ ಶ್ರೀ ದೇವಿಗೆ ಕಲಾ ತತ್ತ್ವಾಧಿವಾಸ ಹೋಮ, ನವ ಕಲಾಭಿಷೇಕ, ಮಹಾಪೂಜೆ, ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ  ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು. ಪೊಲೀಸ್ ಉಮೇಶ್ ನೇತೃತ್ವದ ಸ್ನೇಹ ಜೀವಿ ಬಳಗದಿಂದ ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು.
    ಶಾಸಕ ಬಿ.ಕೆ ಸಂಗಮೇಶ್ವರ್, ದಾನಿಗಳಾದ ಸುನಿಲ್, ವಿ.ಎನ್ ವೆಂಕಟೇಶ್, ಎನ್. ರಾಜು, ಆನಂದ್(ಮೆಡಿಕಲ್), ಜಿ. ಧರ್ಮಪ್ರಸಾದ್, ಜಿ. ಆನಂದಕುಮಾರ್, ಗೋಕುಲ್, ರಮೇಶ್, ಸುಹಾಸ್‌ಗೌಡ ಮತ್ತು ಮುಳ್ಕೆರೆ ಲೋಕೇಶ್, ಸೇವಾಕರ್ತರಾದ ನಗರಸಭೆ ಪೌರಾಯುಕ್ತ ಕೆ. ಪರಮೇಶ್, ಸದಸ್ಯರಾದ ಮಣಿ, ಬಿ.ಎಂ ಮಂಜುನಾಥ್, ಅನುಪಮ ಚನ್ನೇಶ್, ಜಿ.ಪಂ. ಮಾಜಿ ಸದಸ್ಯ ಎಸ್. ಮಣಿಶೇಖರ್, ಸುರೇಶ್, ಬಿ.ಕೆ ಆನಂದ್, ಎನ್. ಕೃಷ್ಣಪ್ಪ, ಗಣೇಶ್‌ರಾವ್, ನರಸಿಂಹಪ್ಪ, ಸತ್ಯ, ಚಿನ್ನಯ್ಯ ಸೇರಿದಂತೆ ಜೈಭೀಮ್ ನಗರ ಸೇರಿದಂತೆ ಸುತ್ತಮುತ್ತಲಿನ ಭಕ್ತಾಧಿಗಳು ಪಾಲ್ಗೊಂಡಿದ್ದರು.
    ದೇವಸ್ಥಾನ ಸಮಿತಿ ಗೌರವಾಧ್ಯಕ್ಷ ಎನ್. ಶಿವ, ವಿ.ಎನ್ ವೆಂಕಟೇಶ್, ಅಧ್ಯಕ್ಷ ಕೆ. ಮಂಜುನಾಥ್, ಕಾರ್ಯಾಧ್ಯಕ್ಷ ಎಂ. ನಾಗರಾಜ್, ಉಪಾಧ್ಯಕ್ಷರಾದ ಎನ್. ಕುಮಾರ್, ಎನ್. ವಸಂತ, ಕರಿಗೌಡ, ಪ್ರಧಾನ ಕಾರ್ಯದರ್ಶಿ ಓ. ನರಸಿಂಹ, ಸಹ ಕಾರ್ಯದರ್ಶಿಗಳಾದ ಏಳುಮಲೈ, ಎಸ್. ರಾಜ, ಖಜಾಂಚಿ ಎನ್. ಹರೀಶ್, ಟಿ.ಎನ್ ಗುರುರಾಜ್ ಮತ್ತು ಸದಸ್ಯರು ಉಪಸ್ಥಿತರಿದ್ದರು.


ಭದ್ರಾವತಿ ರಂಗಪ್ಪ ವೃತ್ತದ ಜೈಭೀಮ್ ನಗರದಲ್ಲಿರುವ ಶ್ರೀ ದೊಡ್ಡಮ್ಮದೇವಿ ದೇವಸ್ಥಾನದ ಕಲಶ ಪ್ರತಿಷ್ಠಾಪನೆ ಭಾನುವಾರ ವಿಜೃಂಭಣೆಯಿಂದ ಜರುಗಿತು.

ಅಂಬೇಡ್ಕರ್‌ರವರ ಪುಸ್ತಕ ಜ್ಞಾನದಿಂದ ಜಗತ್ತಿನ ಶ್ರೇಷ್ಠ ಸಂವಿಧಾನ ರಚನೆ

ಶಿವಮೊಗ್ಗ ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಕನ್ನಡ ವಿಭಾಗದ ಸಹ ಪ್ರಾಧ್ಯಾಪಕ ಡಾ.ಹ.ಮ ನಾಗಾರ್ಜುನ

ಛಲವಾದಿಗಳ ಸಮಾಜದ ವತಿಯಿಂದ ಡಾ. ಬಿ. ಅಂಬೇಡ್ಕರ್‌ರವರ ಜನ್ಮದಿನಾಚರಣೆ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಸಮಾಜದ ನೂತನ ಭವನ ನಿರ್ಮಾಣದ ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ದೈಹಿಕ ಶಿಕ್ಷಕ, ಕಲಾವಿದ ಅಪೇಕ್ಷ ಮಂಜುನಾಥ್, ಹಿಂದಿ ಶಿಕ್ಷಕಿ ತ್ರಿವೇಣಿ, ಡಿಎಸ್‌ಎಸ್ ಸಂಸ್ಥಾಪಕ ಕಾರ್ಯದರ್ಶಿ ರಾಜು, ಕ್ರೀಡಾಪಟು ಎಂ. ನಾಗರಾಜ್ ಹಾಗು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
    ಭದ್ರಾವತಿ, ಏ. ೨೪: ಡಾ. ಬಿ.ಆರ್ ಅಂಬೇಡ್ಕರ್‌ರವರು ಸಂಪಾದಿಸಿದ ಪುಸ್ತಕ ಜ್ಞಾನ ಜಗತ್ತಿನ ಶ್ರೇಷ್ಠ ಸಂವಿಧಾನ ರಚನೆಗೆ ನೆರವಾಯಿತು ಎಂದು ಶಿವಮೊಗ್ಗ ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಕನ್ನಡ ವಿಭಾಗದ ಸಹ ಪ್ರಾಧ್ಯಾಪಕ ಡಾ.ಹ.ಮ ನಾಗಾರ್ಜುನ ಹೇಳಿದರು.
    ಅವರು ನ್ಯೂಟೌನ್ ಜಯಶ್ರೀ ವೃತ್ತದ ಸಮೀಪ ತಾಲೂಕು ಛಲವಾದಿಗಳ ಸಮಾಜದ ವತಿಯಿಂದ ಡಾ. ಬಿ. ಅಂಬೇಡ್ಕರ್‌ರವರ ಜನ್ಮದಿನಾಚರಣೆ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಸಮಾಜದ ನೂತನ ಭವನ ನಿರ್ಮಾಣದ ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
    ಬಿ.ಆರ್ ಅಂಬೇಡ್ಕರ್‌ರವರು ವಿದೇಶದಲ್ಲಿ ಸುಮಾರು ೫೦ ಸಾವಿರ ಪುಸ್ತಕಗಳನ್ನು ಸಂಗ್ರಹಿಸಿ ಗ್ರಂಥಾಲಯ ನಿರ್ಮಾಣ ಮಾಡುವ ಜೊತೆಗೆ ಅವುಗಳ ಅಧ್ಯಯನ ನಡೆಸಿದರು. ಜೊತೆಗೆ ಸುಮಾರು ೧೫ ಸಾವಿರ ಪುಸ್ತಕಗಳನ್ನು ರಚಿಸಿದರು. ಅವರ ಪುಸ್ತಕ ಜ್ಞಾನ ದೇಶದ ಸಂವಿಧಾನ ರಚನೆಗೆ ನೆರವಾಯಿತು. ಅಂಬೇಡ್ಕರ್‌ರವರು ಹೊಂದಿದ್ದ ಅಪಾರ ಜ್ಞಾನದಿಂದಾಗಿ ಅವರು ಜಗತ್ತಿನ ಶ್ರೇಷ್ಠ ವ್ಯಕ್ತಿಗಳ ಸಾಲಿನಲ್ಲಿ ಒಬ್ಬರಾಗಿ ಗುರುತಿಸಿಕೊಳ್ಳಲು ಸಾಧ್ಯವಾಯಿತು. ಅಂಬೇಡ್ಕರ್‌ರವರ ಆಶಯದಂತೆ ದೇಶದಲ್ಲಿ ಪ್ರತಿಯೊಬ್ಬರಿಗೂ ಇಂದು ಶಿಕ್ಷಣ, ಸಂಘಟನೆ ಮತ್ತು ಹೋರಾಟ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ನಾವುಗಳು ಮುನ್ನಡೆಯಬೇಕೆಂದರು.
    ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್ ಮಾತನಾಡಿ, ಕ್ಷೇತ್ರದಲ್ಲಿ ಛಲವಾದಿ ಸಮಾಜದವರು ಇನ್ನೂ ಹೆಚ್ಚಿನ ರೀತಿಯಲ್ಲಿ ಸಂಘಟಿತರಾಗಬೇಕು. ಎಲ್ಲಿಯವರೆಗೆ ಸಂಘಟಿತರಾಗುವುದಿಲ್ಲವೋ ಅಲ್ಲಿಯವರೆಗೂ ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಳ್ಳಲು ಸಾಧ್ಯವಿಲ್ಲ. ಅಲ್ಲದೆ ಸಮಾಜ ಬಲಗೊಳ್ಳುವುದಿಲ್ಲ. ಈ ಹಿನ್ನಲೆಯಲ್ಲಿ ಸಂಘಟನೆಗೆ ಹೆಚ್ಚಿನ ಒತ್ತು ನೀಡಬೇಕು. ಕ್ಷೇತ್ರದಲ್ಲಿ ಛಲವಾದಿ ಸಮಾಜದವರು ಪ್ರಾಮಾಣಿಕತೆಯನ್ನು ಕಾಯ್ದುಕೊಂಡಿದ್ದಾರೆ. ಈ ಹಿನ್ನಲೆಯಲ್ಲಿ ಪ್ರಸ್ತುತ ಹಲವಾರು ಹುದ್ದೆಗಳನ್ನು ಅಲಂಕರಿಸಲು ಸಾಧ್ಯವಾಗಿದೆ. ಈ ಸಮಾಜಕ್ಕೆ ಎಲ್ಲಾ ರೀತಿಯ ಸಹಕಾರ ನೀಡಲು ಬದ್ಧ ಎಂದರು.
    ಸರ್‌ಎಂವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ಪ್ರಾಂಶುಪಾಲ ಡಾ. ಟಿ. ಮಂಜುನಾಥ್ ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿ, ಗೌತಮ ಬುದ್ಧ ಹಾಗು ಡಾ. ಬಿ.ಆರ್ ಅಂಬೇಡ್ಕರ್‌ರವರು ತಮ್ಮ ಬದುಕನ್ನು ಸಮಾ ಸಮಾಜ ನಿರ್ಮಾಣಕ್ಕಾಗಿ ಮೀಸಲಿಡುವ ಮೂಲಕ ಶಾಶ್ವತವಾಗಿ ಉಳಿದುಕೊಂಡಿದ್ದಾರೆ. ಅವರು ಜಗತ್ತಿಗೆ ನೀಡಿರುವ ಕೊಡುಗೆಗಳನ್ನು ನಾವುಗಳು ಸ್ಮರಿಸಿಕೊಳ್ಳುವ ಜೊತೆಗೆ ಅವರ ಆಶಯದಂತೆ ಮುನ್ನಡೆಯಬೇಕಾಗಿದೆ ಎಂದರು.
    ಶಾಸಕ ಬಿ.ಕೆ ಸಂಗಮೇಶ್ವರ್ ಸಮಾಜದ ನೂತನ ಭವನ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದರು. ಸಮಾಜದ ಅಧ್ಯಕ್ಷ, ನಗರಸಭೆ ಉಪಾಧ್ಯಕ್ಷ ಚನ್ನಪ್ಪ ಅಧ್ಯಕ್ಷತೆ ವಹಿಸಿದ್ದರು. ನಗರಸಭೆ ಇಂಜಿನಿಯರ್ ರಂಗರಾಜಪುರ ಬೌದ್ಧಧರ್ಮದ ಸಂದೇಶಗಳನ್ನು ವಾಚಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಪ್ರತಿಭಾ ಪುರಸ್ಕಾರ ನೆರವೇರಿಸಿಕೊಟ್ಟರು.
     ನಗರಸಭಾ ಸದಸ್ಯರಾದ ಉದಯಕುಮಾರ್, ಪ್ರೇಮ, ಅನ್ನಪೂರ್ಣ, ಸರ್ವಮಂಗಳ, ಕಾಂತರಾಜ್, ದೊಡ್ಡೇರಿ ಗ್ರಾ.ಪಂ. ಉಪಾಧ್ಯಕ್ಷೆ ಹೇಮಾವತಿ, ಸಿಂಗನಮನೆ ಗ್ರಾ.ಪಂ. ಸದಸ್ಯೆ ಚಂದನಮಧು, ಹಿರಿಯೂರು ಗ್ರಾ.ಪಂ. ಸದಸ್ಯ ಕಿರಣ್, ಡಿಎಸ್‌ಎಸ್ ಜಿಲ್ಲಾ ಸಂಚಾಲಕ ಚಿನ್ನಯ್ಯ, ಕೆ. ರಂಗನಾಥ್, ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಹೇಮಾವತಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ಬದರಿ ನಾರಾಯಣ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಎಸ್ ಎಸ್ ಬೈರಪ್ಪ ಸ್ವಾಗತಿಸಿದರು. ಎ. ತಿಪ್ಪೇಸ್ವಾಮಿ ನಿರೂಪಿಸಿದರು. ಡಿ. ನರಸಿಂಹಮೂರ್ತಿ ವಂದಿಸಿದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ದೈಹಿಕ ಶಿಕ್ಷಕ, ಕಲಾವಿದ ಅಪೇಕ್ಷ ಮಂಜುನಾಥ್, ಹಿಂದಿ ಶಿಕ್ಷಕಿ ತ್ರಿವೇಣಿ, ಡಿಎಸ್‌ಎಸ್ ಸಂಸ್ಥಾಪಕ ಕಾರ್ಯದರ್ಶಿ ರಾಜು, ಕ್ರೀಡಾಪಟು ಎಂ. ನಾಗರಾಜ್ ಹಾಗು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅಭಿನಂದಿಸಲಾಯಿತು.

Saturday, April 23, 2022

ಛಲವಾದಿಗಳ ಸಮಾಜದ ನೂತನ ಭವನ ನಿರ್ಮಾಣಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ್ ಗುದ್ದಲಿ ಪೂಜೆ


    
ಭದ್ರಾವತಿ: ತಾಲೂಕು ಛಲವಾದಿಗಳ ಸಮಾಜದ ನೂತನ ಭವನ ನಿರ್ಮಾಣಕ್ಕೆ ಶನಿವಾರ ಶಾಸಕ ಬಿ.ಕೆ ಸಂಗಮೇಶ್ವರ್ ಗುದ್ದಲಿ ಪೂಜೆ ನೆರವೇರಿಸಿದರು. 
       ಸಮಾಜದ ಅಧ್ಯಕ್ಷ, ನಗರಸಭೆ ಉಪಾಧ್ಯಕ್ಷ ಚನ್ನಪ್ಪ ಅಧ್ಯಕ್ಷತೆ ವಹಿಸಿದ್ದರು. ನಗರಸಭೆ ಇಂಜಿನಿಯರ್ ರಂಗರಾಜಪುರ ಬೌದ್ಧಧರ್ಮದ ಸಂದೇಶಗಳನ್ನು ವಾಚಿಸಿದರು.
ಸರ್‌ಎಂವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ಪ್ರಾಂಶುಪಾಲ ಡಾ. ಟಿ. ಮಂಜುನಾಥ್ ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು.
      ಶಿವಮೊಗ್ಗ ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಕನ್ನಡ ವಿಭಾಗದ ಸಹ ಪ್ರಾಧ್ಯಾಪಕ ಡಾ.ಹ.ಮ ನಾಗಾರ್ಜುನ ಉಪನ್ಯಾಸ ನಡೆಸಿಕೊಟ್ಟರು.
         ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಪ್ರತಿಭಾ ಪುರಸ್ಕಾರ ನೆರವೇರಿಸಿಕೊಟ್ಟರು.
     ನಗರಸಭಾ ಸದಸ್ಯರಾದ ಬಿ.ಕೆ ಮೋಹನ್, ಉದಯಕುಮಾರ್, ಪ್ರೇಮ, ಅನ್ನಪೂರ್ಣ, ಸರ್ವಮಂಗಳ, ಕಾಂತರಾಜ್, ದೊಡ್ಡೇರಿ ಗ್ರಾ.ಪಂ. ಉಪಾಧ್ಯಕ್ಷೆ ಹೇಮಾವತಿ, ಸಿಂಗನಮನೆ ಗ್ರಾ.ಪಂ. ಸದಸ್ಯೆ ಚಂದನಮಧು, ಹಿರಿಯೂರು ಗ್ರಾ.ಪಂ. ಸದಸ್ಯ ಕಿರಣ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ಬದರಿ ನಾರಾಯಣ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಎಸ್ ಎಸ್ ಬೈರಪ್ಪ ಸ್ವಾಗತಿಸಿದರು. ಕೆ ತಿಪ್ಪೇಸ್ವಾಮಿ ನಿರೂಪಿಸಿದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರನ್ನು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅಭಿನಂದಿಸಲಾಯಿತು.

ದೇಶದಲ್ಲಿ, ರಾಜ್ಯದಲ್ಲಿ ನೀರಾವರಿ ಯೋಜನೆಗಳಿಗೆ ಜೆಡಿಎಸ್ ಕೊಡುಗೆ ಅಪಾರ

ರಾಜ್ಯದ ಮುಂದಿನ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ : ಎಚ್.ಡಿ ರೇವಣ್ಣ

ಭದ್ರಾವತಿ ತಾಲೂಕಿನ ಭದ್ರಾ ಜಲಾಶಯ ಸಮೀಪದ ಬಿ.ಆರ್ ಪ್ರಾಜೆಕ್ಟ್‌ನಲ್ಲಿ ಶನಿವಾರ 'ಜನತಾ ಜಲಧಾರೆ ಯಾತ್ರೆ' ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಬಹಿರಂಗ ಸಭೆಯನ್ನು ಮಾಜಿ ಸಚಿವ ಎಚ್.ಡಿ ರೇವಣ್ಣ ಉದ್ಘಾಟಿಸಿದರು.  
    ಭದ್ರಾವತಿ, ಏ. ೨೩: ದೇಶದಲ್ಲಿ ಹಾಗು ರಾಜ್ಯದಲ್ಲಿ ನೀರಾವರಿ ಯೋಜನೆಗಳಿಗೆ ಜೆಡಿಎಸ್ ಸರ್ಕಾರ ನೀಡಿರುವ ಕೊಡುಗೆ ಅಪಾರವಾಗಿದ್ದು, ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಹಾಗು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿಯವರು ನೀಡಿರುವಷ್ಟು ಅನುದಾನ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ನೀಡಿಲ್ಲ ಎಂದು ಮಾಜಿ ಸಚಿವ ರೇವಣ ಹೇಳಿದರು.
    ಅವರು ಶನಿವಾರ ತಾಲೂಕಿನ ಭದ್ರಾ ಜಲಾಶಯ ಸಮೀಪದ ಬಿ.ಆರ್ ಪ್ರಾಜೆಕ್ಟ್‌ನಲ್ಲಿ 'ಜನತಾ ಜಲಧಾರೆ ಯಾತ್ರೆ' ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಬಹಿರಂಗ ಸಭೆ ಉದ್ಘಾಟಿಸಿ ಮಾತನಾಡಿದರು.
    ರಾಜ್ಯದಲ್ಲಿ ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರುವುದು ೧೦೦ಕ್ಕೆ ೧೦೦ರಷ್ಟು ಸತ್ಯ. ದೇಶಕ್ಕೆ ಸ್ವಾತಂತ್ರ್ಯ ಬಂದು ೭೫ ವರ್ಷಗಳು ಕಳೆದರೂ ಸಹ ಇಂದಿಗೂ ನೀರಾವರಿ ಯೋಜನೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗಿಲ್ಲ. ೫೦ ವರ್ಷಗಳ ಕಾಲ ಆಡಳಿತ ನಡೆಸಿರುವ ಕಾಂಗ್ರೆಸ್ ಹಾಗು ಆ ನಂತರ ಅಧಿಕಾರಕ್ಕೆ ಬಂದಿರುವ ಬಿಜೆಪಿ ಸರ್ಕಾರಗಳು ನೀರಾವರಿ ಯೋಜನೆಗಳಿಗೆ ಹೆಚ್ಚಿನ ಮಹತ್ವ ನೀಡಿಲ್ಲ. ಇವುಗಳ ಕೊಡುಗೆ ಅತ್ಯಲ್ಪವಾಗಿದ್ದು, ಜೆಡಿಎಸ್ ಪಕ್ಷ ತನ್ನ ಅಧಿಕಾರದ ಅವಧಿಯಲ್ಲಿ ಹೆಚ್ಚಿನ ಅನುದಾನಗಳನ್ನು ಬಿಡುಗಡೆಗೊಳಿಸುವ ಮೂಲಕ ಹಲವು ನೀರಾವರಿ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ ಎಂದರು.
    ಜೆಡಿಎಸ್ ಅಭಿವೃದ್ಧಿ ವಿಚಾರದಲ್ಲಿ ಎಂದಿಗೂ ಯಾರೊಂದಿಗೂ ರಾಜಿ ಮಾಡಿಕೊಂಡಿಲ್ಲ. ತನ್ನದೇ ಆದ ದೃಢ ನಿರ್ಧಾರಗಳನ್ನು ಹೊಂದಿದೆ. ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಎ ಮತ್ತು ಬಿ ಟೀಮ್‌ಗಳಾಗಿ ಹೊಂದಾಣಿಕೆ ರಾಜಕಾರಣ ಮಾಡುತ್ತಿವೆ. ಕೋಲಾರದಲ್ಲಿ ಹಿರಿಯ ರಾಜಕೀಯ ಮುತ್ಸದ್ದಿ ಕೆ.ಎಚ್ ಮುನಿಯಪ್ಪನವರನ್ನು ಹಾಗು ತುಮಕೂರಿನಲ್ಲಿ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರನ್ನು ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಹೊಂದಾಣಿಕೆ ಮಾಡಿಕೊಂಡು ಲೋಕಸಭಾ ಚುನಾವಣೆಯಲ್ಲಿ ಸೋಲಿಸಿವೆ ಎಂದರು ಆರೋಪಿಸಿದರು.
    ವಿಧಾನಸಭಾ ಕ್ಷೇತ್ರದ ನಿಯೋಜಿತ ಅಭ್ಯರ್ಥಿ ಶಾರದ ಅಪ್ಪಾಜಿ ಮಾತನಾಡಿ, ಕ್ಷೇತ್ರದಲ್ಲಿ ಮಾಜಿ ಶಾಸಕರಾದ ದಿವಂಗತ ಎಂ.ಜೆ ಅಪ್ಪಾಜಿಯವರ ಕೊಡುಗೆ ಅನನ್ಯವಾಗಿದೆ. ಅವರ ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿರುವುದು ಇದಕ್ಕೆ ಸಾಕ್ಷಿಯಾಗಿದೆ. ಕ್ಷೇತ್ರದಲ್ಲಿ ಅಪ್ಪಾಜಿಯವರ ಕನಸಿನ ಹಲವಾರು ನೀರಾವರಿ ಯೋಜನೆಗಳು ಇಂದಿಗೂ ಅನುಷ್ಠಾನಗೊಳ್ಳದೆ ನೆನೆಗುದಿಗೆ ಬಿದ್ದಿವೆ. ನೀರಾವರಿ ಯೋಜನೆಗಳು ಅನುಷ್ಠಾನಗೊಳ್ಳುವ ಜೊತೆಗೆ ವಿಐಎಸ್‌ಎಲ್ ಮತ್ತು ಎಂಪಿಎಂ ಕಾರ್ಖಾನೆಗಳು ಪುನಶ್ಚೇತನಗೊಳ್ಳಬೇಕಾಗಿದೆ. ಕ್ಷೇತ್ರದಲ್ಲಿ ಹಲವಾರು ಸಮಸ್ಯೆಗಳು ಉಳಿದುಕೊಂಡಿವೆ. ಇವುಗಳಿಗೆ ಪರಿಹಾರ ಕಂಡುಕೊಳ್ಳಬೇಕಾದರೆ ಜೆಡಿಎಸ್ ಪಕ್ಷ ಬೆಂಬಲಿಸುವ ಮೂಲಕ ಕ್ಷೇತ್ರದಿಂದ ನನ್ನನ್ನು ಗೆಲ್ಲಿಸಿ ವಿಧಾನಸಭೆಗೆ ಕಳುಹಿಸಬೇಕು. ಅಪ್ಪಾಜಿ ಅವರಿಗೆ ನೀಡುತ್ತಿದ್ದ ಎಲ್ಲಾ ರೀತಿಯ ಸಹಕಾರ ನನಗೂ ನೀಡಬೇಕೆಂದು ಮನವಿ ಮಾಡಿದರು.

ಕುಮಾರಸ್ವಾಮಿ ವಿಧಿ ಲಿಖಿತ..!
ಕೋಡಿಮಠದ ಶ್ರೀಗಳು ಭವಿಷ್ಯ ವಾಣಿ ನುಡಿದಿರುವ ಮೆಸೇಜ್ ಇತ್ತೀಚೆಗೆ ವಾಟ್ಸಪ್‌ನಲ್ಲಿ ಗಮನಿಸಿದ್ದೇನೆ. ಶ್ರೀಗಳು ರಾಜ್ಯದ ಮುಂದಿನ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಎಂದು ಖಚಿತವಾಗಿ ತಿಳಿಸಿದ್ದಾರೆ. ಇದು ವಿಧಿ ಲಿಖಿತವಾಗಿದ್ದು, ಇದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ.
                                                                                                        - ಎಚ್.ಡಿ ರೇವಣ್ಣ, ಮಾಜಿ ಸಚಿವ

    ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಜೆ.ಪಿ ಯೋಗೇಶ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಮಾಜಿ ಶಾಸಕಿ ಶಾರದ ಪೂರ್‍ಯಾನಾಯ್ಕ, ಜೆಡಿಎಸ್ ಜಿಲ್ಲಾಧ್ಯಕ್ಷ ಎಂ. ಶ್ರೀಕಾಂತ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಗೀತಾ ಸತೀಶ್, ಪಕ್ಷದ ಯುವ ಘಟಕದ ನೂತನ ಜಿಲ್ಲಾಧ್ಯಕ್ಷ ಮಧುಕುಮಾರ್, ಯುವ ಘಟಕದ ತಾಲೂಕು ಅಧ್ಯಕ್ಷ ಎಂ.ಎ ಅಜಿತ್, ಜೆಡಿಎಸ್ ತಾಲೂಕು ಅಧ್ಯಕ್ಷ ಆರ್. ಕರುಣಾಮೂರ್ತಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಎಸ್. ಮಣಿಶೇಖರ್, ಜೆ.ಪಿ ಯೋಗೇಶ್, ಶಿಮೂಲ್ ಮಾಜಿ ಅಧ್ಯಕ್ಷ ಡಿ. ಆನಂದ್, ನಗರಸಭೆ ವಿರೋಧ ಪಕ್ಷದ ನಾಯಕ ಬಸವರಾಜ ಬಿ. ಆನೇಕೊಪ್ಪ, ಸದಸ್ಯರಾದ ಉದಯಕುಮಾರ್, ಕೋಟೇಶ್ವರರಾವ್, ವಿಜಯ, ಸವಿತಾ, ಜಯಶೀಲ, ರೇಖಾ, ಮಂಜುಳ, ಪಲ್ಲವಿ, ನಾಗರತ್ನ, ರೂಪಾವತಿ, ಮುಖಂಡರಾದ ಡಿ.ಟಿ ಶ್ರೀಧರ್, ಮುರ್ತುಜಾಖಾನ್, ನಂಜುಂಡೇಗೌಡ, ಲೋಕೇಶ್ವರರಾವ್, ಮೈಲಾರಪ್ಪ, ಉಮೇಶ್, ಗೊಂದಿ ಜಯರಾಂ, ದಿಲೀಪ್, ಗಿರಿನಾಯ್ಡು, ಗುಣಶೇಖರ್, ಕೆಬಲ್ ಸುರೇಶ್, ಅಶೋಕ್‌ಕುಮಾರ್, ಭಾಗ್ಯಮ್ಮ, ವಿಶಾಲಾಕ್ಷಿ  ಸೇರಿದಂತೆ ಇನ್ನಿತರರು ಕೈಜೋಡಿಸಿ ಬಹಿರಂಗಸಭೆ ಯಶಸ್ವಿಗೆ ಮುಂದಾಗಿದ್ದಾರೆ.
    ನಗರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷರಾದ ಎಂ. ರಾಜು ಸ್ವಾಗತಿಸಿದರು. ಎಚ್.ಬಿ ರವಿಕುಮಾರ್ ವಂದಿಸಿದರು. ಮಾಜಿ ಉಪಾಧ್ಯಕ್ಷೆ ಮಹಾದೇವಿ ಸಂಗಡಿಗರು ಪ್ರಾರ್ಥಿಸಿದರು.
    ಇದಕ್ಕೂ ಮೊದಲು ತಾಲೂಕಿನ ಶ್ರೀರಾಮನಗರದ ಶ್ರೀ ರಾಮೇಶ್ವರ ದೇವಸ್ಥಾನದಿಂದ ಬೆಳಿಗ್ಗೆ 'ಜನತಾ ಜಲಧಾರೆ ಯಾತ್ರೆ'ಗೆ ಚಾಲನೆ ನೀಡಲಾಯಿತು. ಮಧ್ಯಾಹ್ನ ಸುಮಾರು ೧ ಗಂಟೆಗೆ ಯಾತ್ರೆ ಬಿ.ಆರ್ ಪ್ರಾಜೆಕ್ಟ್ ತಲುಪಿತು. ನಂತರ ಭದ್ರಾ ಜಲಾಶಯದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ 'ಜನತಾ ಜಲಧಾರೆ ಯಾತ್ರೆ' ರಥಕ್ಕೆ ಅಭಿಷೇಕ ಸಲ್ಲಿಸಲಾಯಿತು.


ಭದ್ರಾವತಿ ತಾಲೂಕಿನ ಭದ್ರಾ ಜಲಾಶಯ ಸಮೀಪದ ಬಿ.ಆರ್ ಪ್ರಾಜೆಕ್ಟ್‌ನಲ್ಲಿ ಶನಿವಾರ 'ಜನತಾ ಜಲಧಾರೆ ಯಾತ್ರೆ' ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಬಹಿರಂಗ ಸಭೆಯಲ್ಲಿ ಮಾಜಿ ಸಚಿವ ಎಚ್.ಡಿ ರೇವಣ್ಣ, ಮಾಜಿ ಶಾಸಕಿ ಶಾರದ ಪೂರ್‍ಯನಾಯ್ಕ, ಶಾರದ ಅಪ್ಪಾಜಿ ಅವರನ್ನು ಅಭಿನಂದಿಸಲಾಯಿತು.  

Friday, April 22, 2022

‘ಜನತಾ ಜಲಧಾರೆ ಯಾತ್ರೆ’ ಬಹಿರಂಗ ಸಭೆಗೆ ಭರದ ಸಿದ್ದತೆ : ಮುಖಂಡರಲ್ಲಿ ಉತ್ಸಾಹ

ಸಭೆಯಲ್ಲಿ ಪಾಲ್ಗೊಳ್ಳಲಿರುವ ಮಾಜಿ ಪ್ರಧಾನಿ ದೇವೇಗೌಡ

    ಭದ್ರಾವತಿ, ಏ. ೨೨: ರಾಜ್ಯದ ಸಮಗ್ರ ನೀರಾವರಿ ಮತ್ತು ಕುಡಿಯುವ ನೀರಿನ ಯೋಜನೆಗಳಿಗೆ ಆದ್ಯಾರ್ಪಣೆಗಾಗಿ ಜಾತ್ಯಾತೀತ ಜನತಾದಳ ವತಿಯಿಂದ ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗಿರುವ 'ಜನತಾ ಜಲಧಾರೆ ಯಾತ್ರೆ' ಶುಕ್ರವಾರ ಸಂಜೆ ತಾಲೂಕಿನ ಶ್ರೀರಾಮನಗರಕ್ಕೆ ಆಗಮಿಸಿತು.  
    ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ತುಂಗಾಭದ್ರಾ ಸಂಗಮ ಸ್ಥಳದ ಸಮೀಪದ ಚಿಕ್ಕಕೂಡ್ಲಿಯಿಂದ ಯಾತ್ರೆ ಹೊಳೆಹೊನ್ನೂರು, ಕೈಮರ, ಅರಹತೊಳಲು, ಕಲ್ಲಿಹಾಳ್, ಅರಬಿಳಿಚಿ, ಕೂಡ್ಲಿಗೆರೆ ಮಾರ್ಗವಾಗಿ ಶ್ರೀರಾಮನಗರ ಪ್ರವೇಶಿಸಿತು.
ಮಾಜಿ ಪ್ರಧಾನಿ ಆಗಮನಕ್ಕೆ ಭರದ ಸಿದ್ದತೆ :
    'ಜನತಾ ಜಲಧಾರೆ ಯಾತ್ರೆ' ಅಂಗವಾಗಿ ಶನಿವಾರ ಭದ್ರಾ ಜಲಾಶಯದ ಸಮೀಪದ ಬಿ.ಆರ್ ಪ್ರಾಜೆಕ್ಟ್‌ನಲ್ಲಿ ನಡೆಯಲಿರುವ ಬಹಿರಂಗ ಸಭೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಆಗಮಿಸಲಿದ್ದಾರೆ ಈ ಹಿನ್ನಲೆಯಲ್ಲಿ ನಗರದಲ್ಲಿ ಭರದ ಸಿದ್ದತೆ ನಡೆಸಲಾಗಿದೆ.
    ಮಾಜಿ ಶಾಸಕ ದಿವಂಗತ ಎಂ.ಜೆ ಅಪ್ಪಾಜಿಯವರ ಪ್ರಥಮ ವರ್ಷದ ಪುಣ್ಯ ಸ್ಮರಣೆ ನಂತರ ಶಾರದ ಅಪ್ಪಾಜಿ ನೇತೃತ್ವದಲ್ಲಿ ನಡೆಸುತ್ತಿರುವ ಬೃಹತ್ ಬಹಿರಂಗ ಸಭೆ ಇದಾಗಿದ್ದು, ನಗರದೆಲ್ಲೆಡೆ ಜೆಡಿಎಸ್ ಪಕ್ಷದ ಧ್ವಜ, ಬಂಟಿಂಗ್ಸ್‌ಗಳು ರಾರಾಜಿಸುತ್ತಿವೆ. 'ಜನತಾ ಜಲಧಾರೆ ಯಾತ್ರೆ'ಗೆ ಸ್ವಾಗತಕೋರಲು ಪ್ರಮುಖ ವೃತ್ತಗಳಲ್ಲಿ, ರಸ್ತೆಗಳಲ್ಲಿ ಫ್ಲೆಕ್ಸ್‌ಗಳು ರಾರಾಜಿಸುತ್ತಿವೆ.



     ಮುಖಂಡರಲ್ಲಿ ಉತ್ಸಾಹ :
    ಕಳೆದ ಕೆಲವು ತಿಂಗಳಿನಿಂದ ಪಕ್ಷದಲ್ಲಿ ಸಾಕಷ್ಟು ಬದಲಾವಣೆಗಳಾಗಿದ್ದು, ಅಪ್ಪಾಜಿ ಅವರೊಂದಿಗೆ ಗುರುತಿಸಿಕೊಂಡಿದ್ದ ಪ್ರಮುಖರು ಪಕ್ಷ ತೊರೆದು ಬೇರೆ ಬೇರೆ ಪಕ್ಷಗಳಿಗೆ ಸೇರ್ಪಡೆಗೊಂಡರೂ ಸಹ ಶಾರದ ಅಪ್ಪಾಜಿ  ಯಾವುದಕ್ಕೂ ಎದೆಗುಂದದೆ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಇದರಿಂದಾಗಿ ಪ್ರಸ್ತುತ ಪಕ್ಷದ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಮುಖಂಡರು, ಕಾರ್ಯಕರ್ತರಲ್ಲಿ ಉತ್ಸಾಹ ಹೆಚ್ಚಾಗಿದೆ.
    ಪಕ್ಷದ ಯುವ ಘಟಕದ ನೂತನ ಜಿಲ್ಲಾಧ್ಯಕ್ಷ ಮಧುಕುಮಾರ್ ಹೆಚ್ಚು ಉತ್ಸಾಹದಿಂದ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು, ಇವರೊಂದಿಗೆ ತಾಲೂಕು ಅಧ್ಯಕ್ಷ ಆರ್. ಕರುಣಾಮೂರ್ತಿ, ಯುವ ಘಟಕದ ತಾಲೂಕು ಅಧ್ಯಕ್ಷ ಎಂ.ಎ ಅಜಿತ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಎಸ್. ಮಣಿಶೇಖರ್, ಜೆ.ಪಿ ಯೋಗೇಶ್, ಶಿಮೂಲ್ ಮಾಜಿ ಅಧ್ಯಕ್ಷ ಡಿ. ಆನಂದ್, ನಗರಸಭೆ ವಿರೋಧ ಪಕ್ಷದ ನಾಯಕ ಬಸವರಾಜ ಬಿ. ಆನೇಕೊಪ್ಪ, ಸದಸ್ಯರಾದ ಉದಯಕುಮಾರ್, ಕೋಟೇಶ್ವರರಾವ್, ವಿಜಯ, ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷರಾದ ಎಚ್.ಬಿ ರವಿಕುಮಾರ್, ಎಂ. ರಾಜು, ಮುಖಂಡರಾದ ಕರಿಯಪ್ಪ, ಮುರ್ತುಜಾಖಾನ್, ನಂಜುಂಡೇಗೌಡ, ಲೋಕೇಶ್ವರರಾವ್, ಮೈಲಾರಪ್ಪ, ಉಮೇಶ್, ಗೊಂದಿ ಜಯರಾಂ, ದಿಲೀಪ್, ಗಿರಿನಾಯ್ಡು, ಗುಣಶೇಖರ್ ಸೇರಿದಂತೆ ಇನ್ನಿತರರು ಕೈಜೋಡಿಸಿ ಬಹಿರಂಗಸಭೆ ಯಶಸ್ವಿಗೆ ಮುಂದಾಗಿದ್ದಾರೆ.

ವಿಐಎಸ್‌ಎಲ್, ಎಂಪಿಎಂ ಪುನಶ್ಚೇತನ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಮನವಿ


ಭದ್ರಾವತಿ ವಿಐಎಸ್‌ಎಲ್ ಮತ್ತು ಎಂಪಿಎಂ ಕಾರ್ಖಾನೆಗಳ ಪುನಶ್ಚೇತನಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಭಾರತರತ್ನ ಸರ್.ಎಂ ವಿಶ್ವೇಶ್ವರಾಯ ಚಾರಿಟಬಲ್ ಟ್ರಸ್ಟ್ ವತಿಯಿಂದ ಶ್ರೀ ಡಿ. ದೇವರಾಜ ಅರಸು ಜನಸ್ಪಂದನ ವೇದಿಕೆ, ಸುವರ್ಣ ಮಹಿಳಾ ವೇದಿಕೆ ವತಿಯಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಲಾಯಿತು.
    ಭದ್ರಾವತಿ, ಏ. ೨೨: ನಗರದ ವಿಐಎಸ್‌ಎಲ್ ಮತ್ತು ಎಂಪಿಎಂ ಕಾರ್ಖಾನೆಗಳ ಪುನಶ್ಚೇತನಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಭಾರತರತ್ನ ಸರ್.ಎಂ ವಿಶ್ವೇಶ್ವರಾಯ ಚಾರಿಟಬಲ್ ಟ್ರಸ್ಟ್ ವತಿಯಿಂದ ಶ್ರೀ ಡಿ. ದೇವರಾಜ ಅರಸು ಜನಸ್ಪಂದನ ವೇದಿಕೆ, ಸುವರ್ಣ ಮಹಿಳಾ ವೇದಿಕೆ ವತಿಯಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಲಾಯಿತು.
    ಎರಡು ಕಾರ್ಖಾನೆಗಳನ್ನು ಪುನಶ್ಚೇತನಗೊಳಿಸುವ ಜೊತೆಗೆ ಆಧುನಿಕ ನಗರವನ್ನಾಗಿ ರೂಪಿಸಲು ನಗರಸಭೆ ೩೫ ವಾರ್ಡ್‌ಗಳಲ್ಲೂ ಪರಿಶುದ್ಧವಾದ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಬಾಕಿ ಉಳಿದಿರುವ ಒಳಚರಂಡಿ ಕಾಮಗಾರಿ ಕೈಗೆತ್ತಿಕೈಗೊಳ್ಳಲು, ಉದ್ಯಾನವನಗಳ ಅಭಿವೃದ್ಧಿ, ಕೆರೆಗಳ ಸಂರಕ್ಷಣೆ ಕೈಗೊಳ್ಳಲು ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಅಮೃತ್ ೨.೦ ನಗರಸಭೆಗೆ ಮಂಜೂರಾತಿ ಮಾಡುವುದು. ಜನ್ನಾಪುರ ಸರ್ವೆ ನಂ.೭೦ರ ಸುಮಾರು ೪೫.೨೦ ಎಕರೆ ವಿಸ್ತ್ರೀರ್ಣವುಳ್ಳ ಕೆರೆಗೆ ನಗರದ ವಿವಿಧ ಭಾಗಗಳಿಂದ ಕಲ್ಮಶಗೊಂಡ ನೀರು ಸೇರ್ಪಡೆಗೊಳ್ಳುತ್ತಿದ್ದು, ಈ ಹಿನ್ನಲೆಯಲ್ಲಿ ಕಲ್ಮಶಗೊಂಡ ನೀರು ಕೆರೆಗೆ ಸೇರ್ಪಡೆಗೊಳ್ಳದಂತೆ ತಡೆಯಲು ಕೆರೆ ಬದಿಯಲ್ಲಿ ರಾಜಕಾಲುವೆ ನಿರ್ಮಾಣ ಮಾಡಲು ನಗರಸಭೆಗೆ ಅಗತ್ಯವಿರುವ ಆರ್ಥಿಕ ನೆರವು ನೀಡುವಂತೆ ಮನವಿ ಮಾಡಲಾಗಿದೆ.
    ನಗರಸಭೆ ವ್ಯಾಪ್ತಿಯಲ್ಲಿ ಸುಮಾರು ೭೦ ಕೆರೆಗಳಲ್ಲಿ ಬೌಂಡರಿ ನಿಗದಿಪಡಿಸಲು, ಬಸಿಕಾಲುವೆ ನಿರ್ಮಾಣ ಮಾಡಲು, ಕೆರೆಗಳನ್ನು ಅಭಿವೃದ್ಧಿಪಡಿಸಲು ನಗರಸಭೆಯಲ್ಲಿ ಆರ್ಥಿಕ ಕೊರತೆ ಹಿನ್ನಲೆಯಲ್ಲಿ ತುರ್ತಾಗಿ ೫ ಕೋ. ರು. ಅನುದಾನ ನಗರಸಭೆಗೆ ಬಿಡುಗಡೆಗೊಳಿಸುವುದು. ಇದೆ ರೀತಿ ಕ್ಷೇತ್ರದ ೨೩ ಗ್ರಾಮ ಪಂಚಾಯಿತಿಗಳಲ್ಲಿರುವ ಕೆರೆಗಳನ್ನು ಅಭಿವೃದ್ಧಿಪಡಿಸಲು  ಎಲ್ಲಾ ಪಂಚಾಯಿತಿಗಳಿಗೆ ತಲಾ ೧ ಕೋ. ರು. ನಂತೆ ಒಟ್ಟು ೨೩ ಕೋ. ರು. ಬಿಡುಗಡೆಗೊಳಿಸುವಂತೆ ಒತ್ತಾಯಿಸಲಾಗಿದೆ.
    ರಾಜ್ಯದ  ಎಲ್ಲಾ ೨೨೪ ವಿಧಾನಸಭಾ ಕ್ಷೇತ್ರಗಳಲ್ಲೂ ಕೆರೆಕಟ್ಟೆಗಳ ಉತ್ಸವ ಹಾಗು ಕೊಳಚ ಪ್ರದೇಶಗಳಲ್ಲಿ ಸ್ಲಂ ನಿವಾಸಿಗಳ ದಿನಾಚರಣೆ ಆಚರಿಸಲು ಸೂಕ್ತ ಕ್ರಮ ಕೈಗೊಂಡು ಆದೇಶ ಹೊರಡಿಸುವಂತೆ ಕೋರಲಾಗಿದೆ.
    ಟ್ರಸ್ಟ್ ಛೇರ್‍ಮನ್, ನಗರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಆರ್. ವೇಣುಗೋಪಾಲ್, ಮುರುಗೇಶ್ ಸೇರಿದಂತೆ ಇನ್ನಿತರರು ಮನವಿ ಸಲ್ಲಿಸುವ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಮೆಕ್ಕೆಜೋಳ ಬೆಳೆಗೆ ‘ಲದ್ದಿ ಹುಳು’ ಬಾಧೆ : ಶೇ.೭೦ರಷ್ಟು ಬೆಳೆ ಹಾನಿ

ಭತ್ತದ ಬೆಳೆಗೂ ವ್ಯಾಪಿಸುವ ಆತಂಕ : ಮುನ್ನಚ್ಚರಿಕೆ ಕ್ರಮ ಕೈಗೊಳ್ಳಲು ಸೂಚನೆ

    ಭದ್ರಾವತಿ, ಏ. ೨೨:  ತಾಲೂಕಿನ ಕೆಲವು ಭಾಗಗಳಲ್ಲಿ ಇದೀಗ ಮೆಕ್ಕೆಜೋಳ ಬೆಳೆಗೆ 'ಲದ್ದಿ ಹುಳು' ಬಾಧೆ ವ್ಯಾಪಕವಾಗಿ ಕಾಣಿಸಿಕೊಂಡಿದ್ದು, ರೈತರು ಸಂಕಷ್ಟಕ್ಕೆ ಒಳಗಾಗುವಂತಾಗಿದೆ. ಈ ನಡುವೆ 'ಲದ್ದಿ ಹುಳು' ಬಾಧೆ ಭತ್ತದ ಬೆಳೆಗೂ ವ್ಯಾಪಿಸಿಕೊಳ್ಳುವ ಆತಂಕ ಎದುರಾಗಿದ್ದು, ಕೃಷಿ ಇಲಾಖೆ ರೈತರಿಗೆ ಮುನ್ನಚ್ಚರಿಕೆ ಕ್ರಮಗಳನ್ನು ಅನುಸರಿಸುವಂತೆ ಸಲಹೆ ನೀಡಿದೆ.
    ತಾಲೂಕಿನ ಕೂಡ್ಲಿಗೆರೆ ಹೋಬಳಿ ದೊಡ್ಡೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಮ್ಮೆದೊಡ್ಡಿ, ಬಸಲಿಕಟ್ಟೆ, ಬಂಡಿಗುಡ್ಡ, ದೊಡ್ಡೇರಿ ಮತ್ತು ಸುತ್ತಮುತ್ತ ಗ್ರಾಮಗಳಲ್ಲಿ ಅಡಕೆ ತೋಟಗಳಲ್ಲಿ ಮೇವಿಗಾಗಿ ಬೆಳೆದಿರುವ ಮೆಕ್ಕೆಜೋಳ ಬೆಳೆಯಲ್ಲಿ 'ಲದ್ದಿ ಹುಳು' ಬಾಧೆ ಕಾಣಿಸಿಕೊಂಡಿದ್ದು, ಶೇ.೭೦ರಷ್ಟು ಬೆಳೆ ಹಾನಿಗೊಳಗಾಗಿರುತ್ತದೆ.
    ಲದ್ದಿ ಹುಳು ಮುಂದಿನ ೪-೫ ದಿವಸಗಳಲ್ಲಿ ಭತ್ತದ ಬೆಳೆಗು ಹಾನಿ ಉಂಟುಮಾಡವ ಸಂಭವವಿದ್ದು,  ಈ ವ್ಯಾಪ್ತಿಯ ರೈತರು ಸಾಮೂಹಿಕವಾಗಿ ಹತೋಟಿ ಕ್ರಮವನ್ನು ಕೈಗೊಳ್ಳಬೇಕಾಗಿದೆ.
    ಹತೋಟಿ ಕ್ರಮಗಳು:
    ಕೀಟನಾಶಕ ಸಿಂಪಡಣೆ: ಎಮ್ಮಮ್ಕಟಿನ್ ಬೆಂಜೋಯೇಟ್ (Emmamectin Benzoate) ಕೀಟನಾಶಕವನ್ನು ಪ್ರತಿ ಔಷಧಿ ಕ್ಯಾನ್‌ಗೆ ೧೦ ಗ್ರಾಂ ಕೀಟನಾಶಕವನ್ನು ಬೇರೆಸಿ ಪ್ರತಿ ಎಕರೆಗೆ ೧೫೦ ರಿಂದ ೨೦೦ ಲೀಟರ್ ದ್ರಾವಣ ಸಿಂಪಡಿಸಬೇಕು.
    ವಿಷಪ್ರಾಶನ:  ೧೦ ಕೆಜಿ ಅಕ್ಕಿ  ತೌಡು, ೨ ಕೆಜಿ ಬೆಲ್ಲ , ೨೫೦ ಎಂ.ಎಲ್  ಕ್ಲೋರೋಪೈರಿಫಾಸ್ ಕ್ರಿಮಿನಾಶಕ ಹಾಗೂ ನೀರು.
    ಮಾಡುವ ವಿಧಾನ: ೨ ಕೆಜಿ ಬೆಲ್ಲವನ್ನು ೫ ಲೀಟರ್ ನೀರಿನಲ್ಲಿ ಕರಗಿಸಿ ೧೦ ಕೆಜಿ ಅಕ್ಕಿ ತೌಡಿಗೆ ಸೇರಿಸಿ ಚನ್ನಾಗಿ ಬೇರಿಸಿ, ೨೫೦ ಎಂ.ಎಲ್ ಕ್ಲೋರೋಪೈರಿಫಾಸ್ ಕ್ರಿಮಿನಾಶಕ ಮಿಶ್ರಣಮಾಡಿ ೨೪ ಗಂಟೆಗಳ ಕಾಲ ಗಾಳಿ ಆಡದಂತೆ ಚೀಲದಲ್ಲಿ ಕಟ್ಟಿ ಇಡುವುದು. ಮಾರನೇ ದಿನ ಸಂಜೆ ೪ ಗಂಟೆ ನಂತರ ಈ ವಿಷಪ್ರಾಶನವನ್ನು ಉಂಡೆ ಮಾಡಿ ಒಂದು ಎಕರೆ ಜಮೀನಿನಲ್ಲಿ ಇಡುವುದು.
    ಹೆಚ್ಚಿನ ಮಾಹಿತಿಗೆ ಕೂಡ್ಲಿಗೆರೆ ಭಾಗದ ಕೃಷಿ ಆಧಿಕಾರಿ ಮೊ: ೮೨೭೭೯೩೨೬೫೦ ಅಥವಾ ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಮೊ: ೭೮೯೨೪೨೫೪೫೫ ಸಂಪರ್ಕಿಸಬಹುದಾಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.


ಭದ್ರಾವತಿ ತಾಲೂಕಿನ ಕೂಡ್ಲಿಗೆರೆ ಹೋಬಳಿ ದೊಡ್ಡೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಮ್ಮೆದೊಡ್ಡಿ, ಬಸಲಿಕಟ್ಟೆ, ಬಂಡಿಗುಡ್ಡ, ದೊಡ್ಡೇರಿ ಮತ್ತು ಸುತ್ತಮುತ್ತ ಗ್ರಾಮಗಳಲ್ಲಿ ಅಡಕೆ ತೋಟಗಳಲ್ಲಿ ಮೇವಿಗಾಗಿ ಬೆಳೆದಿರುವ ಮೆಕ್ಕೆಜೋಳ ಬೆಳೆಯಲ್ಲಿ 'ಲದ್ದಿ ಹುಳು' ಬಾಧೆ ಕಾಣಿಸಿಕೊಂಡಿದ್ದು, ಶೇ.೭೦ರಷ್ಟು ಬೆಳೆ ಹಾನಿಗೊಳಗಾಗಿರುತ್ತದೆ.