Tuesday, April 5, 2022

ಸಮಾನತೆ ಪರಿಕಲ್ಪನೆಯೊಂದಿಗೆ ಹೊಸ ಸಮಾಜ ನಿರ್ಮಾಣ ಆಶಯ ಹೊಂದಿದ್ದ ಬಾಬು ಜಗಜೀವನ್‌ರಾಮ್

೧೧೫ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕ  ಡಾ. ಚನ್ನೇಶ್ ಎಚ್. ಹೊನ್ನಾಳಿ


ಭದ್ರಾವತಿಯಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ನಗರಸಭೆ ಮತ್ತು ವಿವಿಧ ಸಂಘಟನೆಗಳ ನೇತೃತ್ವದಲ್ಲಿ ತಾಲೂಕು ಕಛೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಡಾ. ಬಾಬು ಜಗಜೀವನ್‌ರಾಮ್‌ರವರ ೧೧೫ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಉಪನ್ಯಾಸ ನಡೆಸಿಕೊಟ್ಟ ಶಿವಮೊಗ್ಗ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಪ್ರಾಧ್ಯಾಪಕ ಡಾ. ಚನ್ನೇಶ್ ಎಚ್. ಹೊನ್ನಾಳಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
    ಭದ್ರಾವತಿ, ಏ. ೫: ದೇಶದಲ್ಲಿ ಸಮಾನತೆ ಪರಿಕಲ್ಪನೆಯೊಂದಿಗೆ ಹೊಸ ಸಮಾಜ ನಿರ್ಮಾಣದ ಆಶಯ ಹೊಂದಿದ್ದ ಜಗಜ್ಯೋತಿ ಬಸವಣ್ಣ, ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್‌ರವರ ಸಾಲಿನಲ್ಲಿ ಬಾಬು ಜಗಜೀವನ್ ರಾಮ್ ಸಹ ಒಬ್ಬರಾಗಿದ್ದರು ಎಂದು ಶಿವಮೊಗ್ಗ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಪ್ರಾಧ್ಯಾಪಕ ಡಾ. ಚನ್ನೇಶ್ ಎಚ್. ಹೊನ್ನಾಳಿ ಹೇಳಿದರು.
    ಅವರು ಮಂಗಳವಾರ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ನಗರಸಭೆ ಮತ್ತು ವಿವಿಧ ಸಂಘಟನೆಗಳ ನೇತೃತ್ವದಲ್ಲಿ ತಾಲೂಕು ಕಛೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಡಾ. ಬಾಬು ಜಗಜೀವನ್‌ರಾಮ್‌ರವರ ೧೧೫ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
    ಸಮಾಜದಲ್ಲಿನ ಅಸಮಾನತೆಗಳ ವಿರುದ್ಧ ಹೋರಾಟ ಮಾಡುವ ಜೊತೆಗೆ ಶೋಷಣೆಗೆ ಒಳಗಾದ ಎಲ್ಲಾ ತಳಸಮುದಾಯಗಳಿಗೆ ನ್ಯಾಯ ಒದಗಿಸಿಕೊಡುವಲ್ಲಿ ಜಗಜೀವನ ರಾಮ್‌ರವರ ಕೊಡುಗೆ ಅಪಾರವಾಗಿದ್ದು, ಅಲ್ಲದೆ ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಾಗು ರಾಜಕೀಯವಾಗಿ ಅಭಿವೃದ್ಧಿಗೊಳ್ಳಲು ಶ್ರಮಿಸಿದ್ದರು. ಅಲ್ಲದೆ ದೇಶದ ಸರ್ವತೋಮುಖ ಅಭಿವೃದ್ಧಿಯಲ್ಲಿ ಇವರ ಪಾತ್ರ ಪ್ರಮುಖವಾಗಿದ್ದು, ದೇಶದಲ್ಲಿ ಕೃಷಿ ಹಾಗು ಕೈಗಾರಿಕೆಗಳ ಬೆಳವಣಿಗೆಗೆ ಹೆಚ್ಚಿನ ಒತ್ತು ನೀಡಿದ್ದರು. ಇಂದಿನ ಸಮಾಜಕ್ಕೆ ಮಾದರಿಯಾಗಿ ಉಳಿದುಕೊಂಡಿದ್ದಾರೆ. ಇವರ ಆದರ್ಶತನಗಳನ್ನು ಮೈಗೂಡಿಸಿಕೊಂಡು ನಾವೆಲ್ಲರು ಮುನ್ನಡೆಯಬೇಕಾಗಿದೆ ಎಂದರು.
    ತಹಸೀಲ್ದಾರ್ ಆರ್. ಪ್ರದೀಪ್ ಮಾತನಾಡಿ, ಬಾಬು ಜಗಜೀವನ್‌ರಾಮ್‌ರವರು ಮೇಲ್ವರ್ಗದವರ ಎಚ್ಚರಿಕೆಗಳನ್ನು ಲೆಕ್ಕಿಸದೆ ತಳಸಮುದಾಯಗಳ ಪರವಾಗಿ ತಮ್ಮ ಹೋರಾಟ ಮುಂದುವರೆಸಿದರು. ಅನೇಕ ಸವಾಲುಗಳನ್ನು ಸಮರ್ಥವಾಗಿ ಎದುರಿಸಿದರು. ಈ ಮೂಲಕ ದೇಶದ ಆಡಳಿತ ವ್ಯವಸ್ಥೆಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದು ಶೋಷಣೆಗೆ ಒಳಗಾದ ಎಲ್ಲಾ ಸಮುದಾಯಗಳ ಧ್ವನಿಯಾದರು. ಇವರು ಸಮಾಜಕ್ಕೆ ನೀಡಿರುವ ಅಪಾರವಾಗಿದೆ ಎಂದರು.
    ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಉಪಾಧ್ಯಕ್ಷ ಚನ್ನಪ್ಪ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ. ಸಿದ್ದಬಸಪ್ಪ,  ಸೇರಿದಂತೆ ಇನ್ನಿತರರು ಬಾಬು ಜಗಜೀವನ್‌ರಾಮ್‌ರವರ ಕುರಿತು ಮಾತನಾಡಿದರು.
    ನಿರ್ಲಕ್ಷ್ಯತನ ಆರೋಪ:
    ಡಿಎಸ್‌ಎಸ್ ರಾಜ್ಯ ಖಜಾಂಚಿ ಸತ್ಯ ಭದ್ರಾವತಿ ಮಾತನಾಡಿ, ಆದರ್ಶ ವ್ಯಕ್ತಿಗಳ ಜನ್ಮದಿನಾಚರಣೆ ಕೇವಲ ಕಾಟಚಾರಕ್ಕೆ ಮಾಡಿ ಅವರಿಗೆ ಅವಮಾನ ಮಾಡುವ ಕೆಲಸ ಮಾಡಬಾರದು. ಎಲ್ಲಾ ಸರ್ಕಾರಿ ಇಲಾಖೆಗಳು ತಮ್ಮ ಜವಾಬ್ದಾರಿಗಳನ್ನು ಅರಿತುಕೊಳ್ಳಬೇಕು. ಜನ್ಮದಿನಾಚರಣೆ ಕಾರ್ಯಕ್ರಮಕ್ಕೆ ಇಲಾಖೆಗಳ ಪ್ರಮುಖ ಅಧಿಕಾರಿಗಳೇ ಗೈರು ಹಾಜರಾಗಿರುವುದು ಸರಿಯಲ್ಲ. ಏ.೧೪ರಂದು ನಡೆಯಲಿರುವ ಅಂಬೇಡ್ಕರ್‌ರವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಎಲ್ಲಾ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು ಕಡ್ಡಾಯ ಪಾಲ್ಗೊಳ್ಳಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.
    ಬಾಂಡ್ ವಿತರಣೆ :
    ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಅಸ್ಪೃಶ್ಯತೆ ನಿರ್ಮೂಲನೆ ಯೋಜನೆಯಡಿ ಪ್ರೋತ್ಸಾಹ ಧನ ವಿತರಣೆಗೆ ಈ ಬಾರಿ ಅಂತರ್ಜಾತಿ ವಿವಾಹವಾದ ಒಟ್ಟು ೩೫ ದಂಪತಿಗಳನ್ನು ಆಯ್ಕೆ ಮಾಡಲಾಗಿದ್ದು, ೩ ದಂಪತಿಗಳಿಗೆ ಪ್ರೋತ್ಸಾಹ ಧನದ ಬಾಂಡ್‌ಗಳನ್ನು ಸಾಂಕೇತಿಕವಾಗಿ ವಿತರಿಸಲಾಯಿತು.
    ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಮೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ತಾಲೂಕು ಆರೋಗ್ಯಾಧಿಕಾರಿ ಡಾ.ಎಂ.ವಿ ಅಶೋಕ್, ಉಪವಲಯ ಅರಣ್ಯಾಧಿಕಾರಿ ಬಿ.ಆರ್ ದಿನೇಶ್‌ಕುಮಾರ್, ನಗರಸಭಾ ಸದಸ್ಯರಾದ ಉದಯಕುಮಾರ್, ಕಾಂತರಾಜ್, ಬಸವರಾಜ ಬಿ. ಆನೇಕೊಪ್ಪ, ಪ್ರೇಮ ಬದರಿನಾರಾಯಣ, ಮಂಜುನಾಥ್, ಮುಖಂಡರಾದ ಡಿ.ಸಿ ಮಾಯಣ್ಣ, ಬಿ.ಎನ್ ರಾಜು, ಎಸ್. ಮಂಜುನಾಥ್, ಮೈಲಾರಪ್ಪ, ಕೆ. ರಂಗನಾಥ್, ಜಿ. ರಾಜು, ವಿ. ವಿನೋದ್, ಜೀವ, ಜಿಂಕ್‌ಲೈನ್‌ಮಣಿ, ಕಾಣಿಕ್‌ರಾಜ್, ರವಿನಾಯ್ಕ, ಕೃಷ್ಣನಾಯ್ಕ, ಈಶ್ವರಪ್ಪ, ಕುಪೇಂದ್ರಪ್ಪ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
    ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಎಸ್. ಗೋಪಿನಾಥ್ ಸ್ವಾಗತಿಸಿದರು. ಶಶಿಕುಮಾರ್ ನಿರೂಪಿಸಿದರು. ತಾಲೂಕು ಕಛೇರಿ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.


ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಅಸ್ಪೃಶ್ಯತೆ ನಿರ್ಮೂಲನೆ ಯೋಜನೆಯಡಿ ಪ್ರೋತ್ಸಾಹ ಧನ ವಿತರಣೆಗೆ ಈ ಬಾರಿ ಅಂತರ್ಜಾತಿ ವಿವಾಹವಾದ ಒಟ್ಟು ೩೫ ದಂಪತಿಗಳನ್ನು ಆಯ್ಕೆ ಮಾಡಲಾಗಿದ್ದು, ೩ ದಂಪತಿಗಳಿಗೆ ಭದ್ರಾವತಿ ತಾಲೂಕು ಕಛೇರಿ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಡಾ. ಬಾಬು ಜಗಜೀವನ್‌ರಾಮ್‌ರವರ ೧೧೫ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ  ಪ್ರೋತ್ಸಾಹ ಧನದ ಬಾಂಡ್‌ಗಳನ್ನು ಸಾಂಕೇತಿಕವಾಗಿ ವಿತರಿಸಲಾಯಿತು.

No comments:

Post a Comment