ಕರ್ತವ್ಯ ಲೋಪ, ಅಕ್ರಮವಾಗಿ ಎನ್ಓಸಿ ನೀಡಿದ ಆರೋಪ
ಭದ್ರಾವತಿ ಹಿರಿಯೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸರಿಯಾಗಿ ಕರ್ತವ್ಯ ನಿರ್ವಹಿಸದೆ, ಅಕ್ರಮಗಳಲ್ಲಿ ಭಾಗಿಯಾಗಿದ್ದಾರೆಂದು ಆರೋಪಿಸಿ ಬುಧವಾರ ಪಂಚಾಯಿತಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
ಭದ್ರಾವತಿ, ಜೂ. ೨೯ : ಹಿರಿಯೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸರಿಯಾಗಿ ಕರ್ತವ್ಯ ನಿರ್ವಹಿಸದೆ, ಅಕ್ರಮಗಳಲ್ಲಿ ಭಾಗಿಯಾಗಿದ್ದಾರೆಂದು ಆರೋಪಿಸಿ ಬುಧವಾರ ಪಂಚಾಯಿತಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾಗಿ ಕಳೆದ ಸುಮಾರು ೧೦ ತಿಂಗಳಿನಿಂದ ಕರ್ತವ್ಯ ನಿರ್ವಹಿಸುತ್ತಿರುವ ಪರಮೇಶ್ವರಪ್ಪ, ಸರಿಯಾಗಿ ಕರ್ತವ್ಯಕ್ಕೆ ಹಾಜರಾಗುತ್ತಿಲ್ಲ. ಜೊತೆಗೆ ಸಾರ್ವಜನಿಕರೊಂದಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ. ಪಂಚಾಯಿತಿ ಕೆಲಸ ಮಾಡಿಕೊಡಲು ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ. ಅಲ್ಲದೆ ಹಳೇ ಹಿರಿಯೂರು ಭಾಗದ ಗ್ರಾಮ ಠಾಣಾ ಜಾಗದ ಒಂದೇ ನಿವೇಶನಕ್ಕೆ ಅಕ್ರಮವಾಗಿ ಪುನಃ ವಿದ್ಯುತ್ ಸಂಪರ್ಕ ಪಡೆಯಲು ಆಕ್ಷೇಪಣ ರಹಿತ ಪತ್ರ (ಎನ್ಓಸಿ) ನೀಡುವ ಮೂಲಕ ಅಕ್ರಮವೆಸಗಿದ್ದಾರೆಂದು ಆರೋಪಿಸಲಾಯಿತು.
ತಕ್ಷಣ ಅಭಿವೃದ್ಧಿ ಅಧಿಕಾರಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಲಾಯಿತು. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಮೇಶ್ರವರು ಈ ಸಂಬಂಧ ಸೂಕ್ತ ತನಿಖೆ ಕೈಗೊಂಡು ನ್ಯಾಯ ಒದಗಿಸಿಕೊಡುವುದಾಗಿ ಭರವಸೆ ನೀಡಿದರು.
ಪ್ರಮುಖರಾದ ಕೆ.ಟಿ ಪ್ರಸನ್ನ, ರವಿ, ಸತ್ಯನಾರಾಯಣರಾವ್, ಎಚ್.ವೈ ಕುಮಾರ್, ಸಂತೋಷ್ ಹಾಗು ಅಂಬೇಡ್ಕರ್ ಕಾಲೋನಿ ನಿವಾಸಿಗಳು ಪಾಲ್ಗೊಂಡಿದ್ದರು.
No comments:
Post a Comment