ಭಾನುವಾರ, ಜುಲೈ 31, 2022

ಪಾಲಿಶ್ ಮಾಡುವ ನೆಪದಲ್ಲಿ ಚಿನ್ನದ ಮಾಂಗಲ್ಯ ಸರ ಅಪಹರಣ

    ಭದ್ರಾವತಿ, ಜು. ೩೧: ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು ಪಾಲಿಶ್ ಮಾಡುವ ನೆಪದಲ್ಲಿ ಚಿನ್ನದ ಮಾಂಗಲ್ಯ ಸರ ಪಡೆದು ಪರಾರಿಯಾಗಿರುವ ಘಟನೆ ತಾಲೂಕಿನ ತಾರೀಕಟ್ಟೆ ಗ್ರಾಮದಲ್ಲಿ ನಡೆದಿದೆ.
    ದ್ವಿಚಕ್ರ ವಾಹನದಲ್ಲಿ ಗ್ರಾಮದ ಕೆಂಪಮ್ಮ ಎಂಬುವರ ಮನೆ ಬಳಿ ಬಂದ ಇಬ್ಬರು ಅಪರಿಚತ ವ್ಯಕ್ತಿಗಳು ಮೊದಲು ಬೆಳ್ಳಿ ಸಾಮಾನು ಮತ್ತು ಹಿತ್ತಾಳೆ ವಸ್ತುಗಳನ್ನ ತೆಗೆದುಕೊಂಡು ಬನ್ನಿ ಪಾಲಿಶ್ ಹಾಕಿಕೊಡುತ್ತೇವೆ ಎಂದು ಕೇಳಿದ್ದಾರೆ. ಕೆಂಪಮ್ಮ ಬೆಳ್ಳಿ ಆಭರಣ ಕಾಲ್ಚೈನ್ ಮತ್ತು ದೇವರ ಮನೆಯ ಹಿತ್ತಾಳೆ ಸಾಮಾಗ್ರಿಗಳನ್ನ ತಂದು ಕೊಟ್ಟಿದ್ದಾರೆ. ಇವುಗಳನ್ನು ಪಾಲಿಶ್ ಮಾಡಿದ ನಂತರ ಕೆಂಪಮ್ಮ ಅವರ ಕತ್ತಿನಲ್ಲಿದ್ದ ಚಿನ್ನದ ಮಾಂಗಲ್ಯ ಸರ ಪಡೆದು ಕೊಂಡಿದ್ದಾರೆ. ನಂತರ ಕೆಂಪಮ್ಮಳಿಗೆ ಒಂದು ಲೋಟ ನೀರು ತೆಗೆದುಕೊಂಡು ಬರಲು ಹೇಳಿದ್ದು, ನೀರು ತರುವಷ್ಟರಲ್ಲಿ ಇಬ್ಬರು ದ್ವಿಚಕ್ರ ವಾಹನದಲ್ಲಿ ಪರಾರಿಯಾಗಿದ್ದಾರೆ
    ಕೆಂಪಮ್ಮ ೪೭ ಗ್ರಾಂ ತೂಕ ಮಾಂಗಲ್ಯ ಸರ ಕಳೆದುಕೊಂಡಿದ್ದು, ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಸಮಾಜಕ್ಕೆ ನಮ್ಮೆಲ್ಲರ ಕೊಡುಗೆ ಅರ್ಥ ಮಾಡಿಕೊಂಡಾಗ ಮಾತ್ರ ಬದುಕು ಸಾರ್ಥಕ

ಭದ್ರಾವತಿ ಒಕ್ಕಲಿಗರ ಸಮುದಾಯ ಭವನದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಸಮಾರಂಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಿ. ಮಂಜುನಾಥ್ ಅಪ್ಪರ್ ಹುತ್ತಾ ಗೆಳೆಯರ ಬಳಗ ಟ್ರಸ್ಟ್ ಉದ್ಘಾಟಿಸಿದರು.
    ಭದ್ರಾವತಿ, ಜು. ೩೧: ಸಮಾಜಕ್ಕೆ ನಮ್ಮೆಲ್ಲರ ಕೊಡುಗೆ ಏನೆಂಬುದನ್ನು ಅರಿತುಕೊಂಡಾಗ ಮಾತ್ರ ನಮ್ಮ ಬದುಕು ಸಾರ್ಥಕಗೊಳ್ಳುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಿ. ಮಂಜುನಾಥ್ ಹೇಳಿದರು.
    ಅವರು ಭಾನುವಾರ ನಗರದ ಒಕ್ಕಲಿಗರ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಮಾರಂಭದಲ್ಲಿ ಅಪ್ಪರ್ ಹುತ್ತಾ ಗೆಳೆಯರ ಬಳಗ ಟ್ರಸ್ಟ್ ಉದ್ಘಾಟಿಸಿ ಮಾತನಾಡಿದರು.
    ಸಮಾಜದಲ್ಲಿ ಒಳ್ಳೆಯ ಕಾರ್ಯಗಳನ್ನು ಮಾಡುವವರಿಗೆ ಪ್ರೋತ್ಸಾಹಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಹೆಚ್ಚು ಹೆಚ್ಚು ಸಮಾಜ ಮುಖಿ ಕಾರ್ಯಗಳು ನಡೆಯುವಂತಾಗಬೇಕು. ಯುವ ಸಮುದಾಯ ಸ್ವಯಂ ಪ್ರೇರಣೆಯಿಂದ ಟ್ರಸ್ಟ್ ರಚಿಸಿಕೊಂಡು ಸೇವಾ ಕಾರ್ಯಕ್ಕೆ ಮುಂದಾಗಿರುವುದು ಸಮಾಜಕ್ಕೆ ಮಾದರಿಯಾಗಿದೆ ಎಂದರು.
    ಟ್ರಸ್ಟ್ ಕಾರ್ಯದರ್ಶಿ ಚರಣ್ ಮಾತನಾಡಿ, ಯಾವುದೇ ಧರ್ಮ, ಜಾತಿ, ಭಾಷೆ, ಭೇದಭಾವವಿಲ್ಲದೆ ಎಲ್ಲರನ್ನು ಒಂದೆಡೆ ಸಂಘಟಿಸುವುದು ಆ ಮೂಲಕ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವುದು. ಅಲ್ಲದೆ ಕಲೆ, ಸಾಹಿತ್ಯ, ಸಂಸ್ಕೃತಿಯನ್ನು ಅನಾವರಣಗೊಳಿಸಿ ಅವುಗಳನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯುವಂತೆ ಜಾಗೃತಿ ಮೂಡಿಸುವುದು ಟ್ರಸ್ಟ್ ಧ್ಯೇಯೋದ್ದೇಶಗಳಾಗಿವೆ. ಈಗಾಗಲೇ ಟ್ರಸ್ಟ್ ಆರಂಭಿಕ ಹಂತದಲ್ಲಿಯೇ ಯಶಸ್ಸನ್ನು ಸಾಧಿಸಿದ್ದು, ಎಲ್ಲರಲ್ಲೂ ಮತ್ತಷ್ಟು ಹುಮ್ಮಸ್ಸು ಹೆಚ್ಚಾಗಿದೆ ಎಂದರು.
    ಹಾಸ್ಯ ಕಲಾವಿದರಾದ ಇಂದುಮತಿ ಸಾಲಿಮಠ್, ಮಿಮಿಕ್ರಿ ಗೋಪಿ ಮತ್ತು ಉಮೇಶ್ ಗೌಡ ಅವರಿಂದ ಹಾಸ್ಯೋತ್ಸವ ನಡೆಯಿತು. ಅನನ್ಯ ಪ್ರಾರ್ಥಿಸಿ ರೇಣುಕಾಸ್ವಾಮಿ ಸ್ವಾಗತಿಸಿದರು. ಲತಾ ಪಿ. ಮೋರೆ ವಂದಿಸಿದರು. ಟ್ರಸ್ಟ್ ಪದಾಧಿಕಾರಿಗಳು, ಸೇವಾಕರ್ತರು, ವಿವಿಧ ಸಂಘ-ಸಂಸ್ಥೆಗಳ, ರಾಜಕೀಯ ಪಕ್ಷಗಳ ಪ್ರಮುಖರು, ಜನಪ್ರತಿನಿಧಿಗಳು, ಸ್ಥಳೀಯ ಮುಖಂಡರು, ಮಹಿಳೆಯರು, ಮಕ್ಕಳು ಪಾಲ್ಗೊಂಡಿದ್ದರು.

ಪ್ರಸಿದ್ದ ವೈದ್ಯ ಡಾ. ಸೆಲ್ವರಾಜ್ ನಿಧನ

ಡಾ. ಸೆಲ್ವರಾಜ್
    ಭದ್ರಾವತಿ, ಜು. ೩೧: ನಗರದ ಜನ್ನಾಪುರದ ಪ್ರಸಿದ್ದ ವೈದ್ಯ ಡಾ. ಸೆಲ್ವರಾಜ್(೬೬) ಹೃದಯಾಘಾತದಿಂದ ಭಾನುವಾರ ಬೆಳಿಗ್ಗೆ ಬೆಂಗಳೂರಿನಲ್ಲಿ ನಿಧನ ಹೊಂದಿದರು.
    ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿಯನ್ನು ಹೊಂದಿದ್ದರು. ಸುಮಾರು ೪ ದಶಕಗಳ ಹಿಂದೆ ಜನ್ನಾಪುರ ಕುರುಬರ ಬೀದಿಯಲ್ಲಿ ಶಿವ ಕ್ಲಿನಿಕ್ ಆರಂಭಿಸುವ ಮೂಲಕ ಪ್ರಸಿದ್ದ ವೈದ್ಯರಾಗಿ ಗುರುತಿಸಿಕೊಂಡಿದ್ದರು. ಮೂಲತಃ ತಮಿಳುನಾಡಿನವರಾದ ಡಾ. ಸೆಲ್ವರಾಜ್ ಅವರು ತಮ್ಮ ವೃತ್ತಿ ಜೀವನವನ್ನು ಇಲ್ಲಿಯೇ ಆರಂಭಿಸುವ ಮೂಲಕ ಬಡ ವರ್ಗದವರಿಗೂ ಅತ್ಯಂತ ಕಡಿಮೆ ದರದಲ್ಲಿ ಗುಣಮಟ್ಟದ ಚಿಕಿತ್ಸೆ ನೀಡುತ್ತಿದ್ದರು. ಅಲ್ಲದೆ ಬಹಳಷ್ಟು ಮಂದಿ ದುರ್ಬಲ ವರ್ಗದವರಿಗೆ ಉಚಿತವಾಗಿ ಚಿಕಿತ್ಸೆ ನೀಡಿ ಮಾನವೀಯತೆ ಮೆರೆದಿದ್ದರು.
    ನ್ಯೂಟೌನ್ ಕಿರಿಯ ತಾಂತ್ರಿಕ ಶಾಲೆ(ಜೆಟಿಎಸ್) ಸಮೀಪ ಶುಗರ್ ಟೌನ್ ಲಯನ್ಸ್ ಕ್ಲಬ್ ಆರಂಭಕ್ಕೆ ಕಾರಣಕರ್ತರಾಗಿದ್ದರು. ಹಲವಾರು ಉಚಿತ ಶಿಬಿರಗಳಲ್ಲಿ ಪಾಲ್ಗೊಂಡು ಸೇವೆ ಸಲ್ಲಿಸಿದ್ದರು. ಇವರ ಅಂತ್ಯಕ್ರಿಯೆ ಸೋಮವಾರ ಹುತ್ತಾ ಕಾಲೋನಿಯಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬ ಮೂಲಗಳಿಂದ ತಿಳಿದು ಬಂದಿದೆ.
    ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ರಾಜಕೀಯ ಪಕ್ಷಗಳ, ಸಂಘ-ಸಂಸ್ಥೆಗಳ, ಸ್ವಯಂ ಸೇವಾಸಂಸ್ಥೆಗಳ ಪ್ರಮುಖರು, ವೈದ್ಯರು, ಗಣ್ಯರು ಸಂತಾಪ ಸೂಚಿಸಿದ್ದಾರೆ.

ವಿಐಎಸ್‌ಎಲ್ ಗುತ್ತಿಗೆ ಕಾರ್ಮಿಕ ಶಂಕರ್ ನಿಧನ

ಶಂಕರ್
    ಭದ್ರಾವತಿ, ಜು. ೩೧ : ಹಳೇಬುಳ್ಳಾಪುರ ಬೈಪಾಸ್ ರಸ್ತೆ ಪೆಟ್ರೋಲ್ ಬಂಕ್ ಬಳಿ ನಿವಾಸಿ, ವಿಐಎಸ್‌ಎಲ್ ಗುತ್ತಿಗೆ ಕಾರ್ಮಿಕ ಶಂಕರ್(೫೦) ಶನಿವಾರ ರಾತ್ರಿ ಹೃದಯಾಘಾತದಿಂದ ನಿಧನ ಹೊಂದಿದರು.
    ಪತ್ನಿಯನ್ನು ಹೊಂದಿದ್ದರು. ವಿಐಎಸ್‌ಎಲ್ ಕಾರ್ಖಾನೆಯ ಸಂಚಾರಿ ವಿಭಾಗದಲ್ಲಿ ಇಂಜಿನ್ ಚಾಲಕರಾಗಿ ಸುಮಾರು ೧೫ ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದರು. ಇವರ ಅಂತ್ಯಕ್ರಿಯೆ ತಿಮ್ಲಾಪುರ, ಬಾಳೆಮಾರನಹಳ್ಳಿ ರಸ್ತೆಯಲ್ಲಿರುವ ಶ್ರೀ ಸತ್ಯಹರಿಶ್ಚಂದ್ರ ಹಿಂದೂ ರುದ್ರಭೂಮಿಯಲ್ಲಿ ನೆರವೇರಿತು.
    ವಿಶ್ವೇಶ್ವರಾಯ ಐರನ್ ಅಂಡ್ ಸ್ಟೀಲ್ ಪ್ಲಾಂಟ್ ಎಂಪ್ಲಾಯಿಸ್ ಅಸೋಸಿಯೇಷನ್(ಎಐಟಿಯುಸಿ) ಪ್ರಮುಖರಾದ ಎಂ. ನಾರಾಯಣ ಹಾಗು ಅಧ್ಯಕ್ಷರು, ಪದಾಧಿಕಾರಿಗಳು, ಪ್ರಗತಿಪರ ಸಂಘಟನೆಗಳ ಒಕ್ಕೂಟದ ಸುರೇಶ್, ಗುತ್ತಿಗೆ ಕಾರ್ಮಿಕರು ಶಂಕರ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಶನಿವಾರ, ಜುಲೈ 30, 2022

ಕೆಲಸದ ಮಹತ್ವ ಅರಿತು ಕರ್ತವ್ಯ ನಿರ್ವಹಿಸಿ : ಡಾ.ಬಿ.ಟಿ ಮಂಜುನಾಥ್

ಭದ್ರಾವತಿ ಸಿದ್ದಾರೂಢ ನಗರದ ಧರ್ಮಶ್ರೀ ಸಭಾಭವನದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘ ತಾಲೂಕು ಶಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಅಭಿನಂದನಾ ಸಮಾರಂಭದಲ್ಲಿ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಶಿವಮೊಗ್ಗ ಜಂಟಿ ನಿರ್ದೇಶಕ ಡಾ. ಬಿ.ಟಿ ಮಂಜುನಾಥ್, ಸಹಾಯಕ ನಿರ್ದೇಶಕ ದೇವದಾಸ್ ಮತ್ತು ಆಹಾರ ನಿಗಮ ವ್ಯವಸ್ಥಾಪಕ ಎನ್. ಶ್ರೀಕಂಠ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
    ಭದ್ರಾವತಿ, ಜು. ೩೦: ಸರ್ಕಾರಿ ನೌಕರರು ತಮ್ಮ ಕೆಲಸದ ಮಹತ್ವ ಅರಿತುಕೊಂಡು ಕರ್ತವ್ಯ ನಿರ್ವಹಿಸಬೇಕೆಂದು ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಶಿವಮೊಗ್ಗ ಜಂಟಿ ನಿರ್ದೇಶಕ ಡಾ. ಬಿ.ಟಿ ಮಂಜುನಾಥ್ ಹೇಳಿದರು.
    ಅವರು ಸಿದ್ದಾರೂಢ ನಗರದ ಧರ್ಮಶ್ರೀ ಸಭಾಭವನದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘ ತಾಲೂಕು ಶಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಸರ್ಕಾರಿ ಕೆಲಸ ಎಲ್ಲರಿಗೂ ಸಿಗುವುದಿಲ್ಲ. ಸರ್ಕಾರಿ ನೌಕರರು ತಮ್ಮ ವೃತ್ತಿಯನ್ನು ಸದ್ಬಳಕೆ ಮಾಡಿಕೊಳ್ಳಬೇಕು ಹೊರತು ದುರುಪಯೋಗಪಡಿಸಿಕೊಳ್ಳಬಾರದು. ಸಾರ್ವಜನಿಕರಿಗೆ ಯಾವುದೇ ರೀತಿ ತೊಂದರೆಯಾಗದಂತೆ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಬೇಕೆಂದರು.
    ಸಮಾರಂಭದ ದಿವ್ಯ ಸಾನಿಧ್ಯವಹಿಸಿದ್ದ ಬಿಳಿಕಿ ಹಿರೇಮಠದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಸರ್ಕಾರಿ ಕೆಲಸದಲ್ಲಿರುವವರು ತಮ್ಮ ವೃತ್ತಿಯನ್ನು ಸಮರ್ಥವಾಗಿ ನಿರ್ವಹಿಸುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಬೇಕು. ನಾವು ಮಾಡುವ ಕೆಲಸ ಮಾತಾಡಬೇಕು. ನಮಗೆ ಆತ್ಮತೃಪ್ತಿ ನೀಡುವಂತಿರಬೇಕೆಂದರು.    
    ತಹಸೀಲ್ದಾರ್ ಆರ್. ಪ್ರದೀಪ್, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಶಿವಮೊಗ್ಗ ಸಹಾಯಕ ನಿರ್ದೇಶಕ ದೇವದಾಸ್, ಆಹಾರ ನಿಗಮ ವ್ಯವಸ್ಥಾಪಕ(ಭದ್ರಾವತಿ ಶಾಖೆ) ಎನ್. ಶ್ರೀಕಂಠ, ಪಡಿತರ ವಿತರಕರ ಸಂಘದ ಶಿವಮೊಗ್ಗ ಗ್ರಾಮಾಂತರ ಅಧ್ಯಕ್ಷ ಕೆ. ಲೋಕೇಶಪ್ಪ, ಮಂಜಪ್ಪ, ಸಾಗರ ನಗರಸಭೆ ಮಾಜಿ ಅಧ್ಯಕ್ಷೆ ಲಲಿತಮ್ಮ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
    ರಾಜ್ಯ ಸಂಘದ ಸಂಘಟನಾ ಕಾರ್ಯದರ್ಶಿ ಸಿದ್ದಲಿಂಗಯ್ಯ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಸಂಘದ ತಾಲೂಕು ಅಧ್ಯಕ್ಷ ಎಸ್. ಆರ್ ನಾಗರಾಜ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಎಂ.ಆರ ಸೌಮ್ಯ ಪ್ರಾರ್ಥಿಸಿ, ಜವರಾಯ ನಿರೂಪಿಸಿದರು.

ಭದ್ರಾ ಜಲಾಶಯದಿಂದ ರೈತರಿಗೆ ಸಕಾಲದಲ್ಲಿ ನೀರು ಪೂರೈಕೆ : ಡಾ. ಕೆ.ಸಿ ನಾರಾಯಣಗೌಡ

ಭದ್ರಾವತಿ ತಾಲೂಕಿನ ಬಿಆರ್‌ಪಿ ಭದ್ರಾ ಜಲಾಶಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸಿ ನಾರಾಯಣಗೌಡ, ಸಂಸದ ಬಿ.ವೈ ರಾಘವೇಂದ್ರ ಸೇರಿದಂತೆ ಇನ್ನಿತರರು ಶನಿವಾರ ಭದ್ರೆಗೆ ಬಾಗಿನ ಸಮರ್ಪಿಸಿದರು.
    ಭದ್ರಾವತಿ, ಜು. ೩೦: ಭದ್ರಾ ಅಚ್ಚುಕಟ್ಟು ವ್ಯಾಪ್ತಿಯಲ್ಲಿನ ರೈತರಿಗೆ ಸಕಾಲದಲ್ಲಿ ನೀರೊದಗಿಸಲು ಅಗತ್ಯ ಕ್ರಮ ಕೈಗೊಳ್ಳುವ ಜೊತೆಗೆ ಜಲಾಶಯ ವ್ಯಾಪ್ತಿಯಲ್ಲಿನ ಅಭಿವೃದ್ಧಿ ಕಾರ್ಯಗಳಿಗೆ ಸರ್ಕಾರ ಅನುದಾನ ಬಿಡುಗಡೆಗೊಳಿಸಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಕೆ.ಸಿ ನಾರಾಯಣಗೌಡ ಭರವಸೆ ನೀಡಿದರು.
    ಅವರು ಶನಿವಾರ ತಾಲೂಕಿನ ಬಿಆರ್‌ಪಿ ಭದ್ರಾ ಜಲಾಶಯದಲ್ಲಿ ಭದ್ರೆಗೆ ಬಾಗಿನ ಸಮರ್ಪಿಸಿ ಮಾತನಾಡಿದರು. ಕಳೆದ ಕೆಲವು ವರ್ಷಗಳಿಂದ ಭದ್ರಾ ಜಲಾಶಯ ಭರ್ತಿಯಾಗುತ್ತಿರುವುದು ಈ ಭಾಗದ ರೈತರಲ್ಲಿ ಸಂತಸವನ್ನುಂಟು ಮಾಡುತ್ತಿದೆ. ಅಲ್ಲದೆ ಭದ್ರಾ ಜಲಾಶಯ ಭರ್ತಿಯಾಗುತ್ತಿರುವುದು ಇಡೀ ರಾಜ್ಯದ ಸಮೃದ್ಧಿಯ ಸಂಕೇತವಾಗಿದೆ. ಈ ಭಾಗದ ರೈತರು ಹೆಚ್ಚಿನ ಬೆಳೆಗಳನ್ನು ಬೆಳೆಯಲು ಅನುಕೂಲವಾಗುವಂತೆ ಸಕಾಲದಲ್ಲಿ ಜಲಾಶಯದಿಂದ ನೀರೊದಗಿಸಲಾಗುವುದು. ಜಲಾಶಯ ವ್ಯಾಪ್ತಿಯಲ್ಲಿನ ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯವಿರುವ ಅನುದಾನ ಸರ್ಕಾರ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಮಂಡಳಿಗೆ ಬಿಡುಗಡೆಗೊಳಿಸಲಿದೆ ಎಂದರು.
    ಸಂಸದ ಬಿ.ವೈ ರಾಘವೇಂದ್ರ ಮಾತನಾಡಿ, ಭದ್ರಾ ಅಚ್ಚುಕಟ್ಟು ವ್ಯಾಪ್ತಿಯಲ್ಲಿನ ಎಲ್ಲಾ ರೈತರಿಗೂ ಜಲಾಶಯದಿಂದ ನೀರೊದಗಿಸಲಾಗುವುದು. ಜಲಾಶಯ ವ್ಯಾಪ್ತಿಯಲ್ಲಿನ ಅಭಿವೃದ್ಧಿ ಕಾರ್ಯಗಳು ಪ್ರಗತಿಯಲ್ಲಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಆರ್ಥಿಕ ನೆರವನ್ನು ನೀಡಲಿವೆ. ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಮಂಡಳಿ ಸಹ ರೈತರ ಸಂಕಷ್ಟಗಳಿಗೆ ಪೂರಕವಾಗಿ ಸ್ಪಂದಿಸುವ ಮೂಲಕ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
    ವಿಧಾನ ಪರಿಷತ್ ಸದಸ್ಯರಾದ ಎಸ್. ರುದ್ರೇಗೌಡ, ಡಿ.ಎಸ್ ಅರುಣ್, ಗ್ರಾಮಾಂತರ ಶಾಸಕ ಕೆ.ಬಿ ಅಶೋಕ್ ನಾಯ್ಕ್ , ಭದ್ರಾ ಅಚ್ಚು ಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ಪವಿತ್ರ ರಾಮಯ್ಯ, ಜಿಲ್ಲಾಧಿಕಾರಿ ಆರ್. ಸೆಲ್ವಮಣಿ, ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮಿ ಪ್ರಸಾದ್, ಕುವೆಂಪು ವಿಶ್ವವಿದ್ಯಾಲಯ ಕುಲಪತಿ ಪ್ರೊ. ಬಿ.ಪಿ ವೀರಭದ್ರಪ್ಪ, ಕುಲಸಚಿವೆ ಜಿ. ಅನುರಾಧ,  ಜಿಲ್ಲಾ ಪಂಚಾಯಿತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಂ.ಎಲ್ ವೈಶಾಲಿ, ಶಿವಮೊಗ್ಗ ಮಹಾನಗರ ಪಾಲಿಕೆ ಮೇಯರ್ ಸುನಿತಾ ಅಣ್ಣಪ್ಪ, ನೀರಾವರಿ ಇಲಾಖೆ ಹಾಗೂ ಭದ್ರಾ ಅಚ್ಚುಕಟ್ಟು ಪ್ರಾಧಿಕಾರದ ಅಧಿಕಾರಿಗಳು, ಸಿಂಗನಮನೆ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಸದಸ್ಯರು ಮತ್ತು  ರೈತರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಸರಣಿ ಹತ್ಯೆಗೆ ಯುವ ಕಾಂಗ್ರೆಸ್ ಖಂಡನೆ : ಸಂತಾಪ

ರಾಜ್ಯದಲ್ಲಿ ನಡೆಯುತ್ತಿರುವ ಸರಣಿ ಹತ್ಯೆಗಳನ್ನು ಖಂಡಿಸಿ ಭದ್ರಾವತಿ ರಂಗಪ್ಪ ವೃತ್ತದಲ್ಲಿ ಗ್ರಾಮಾಂತರ ಯುವ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಿ ಹತ್ಯೆಯಾದವರಿಗೆ  ಶ್ರದ್ಧಾಂಜಲಿ ಸಲ್ಲಿಸಲಾಯಿತು
    ಭದ್ರಾವತಿ, ಜು. ೩೦: ರಾಜ್ಯದಲ್ಲಿ ನಡೆಯುತ್ತಿರುವ ಸರಣಿ ಹತ್ಯೆಗಳನ್ನು ಖಂಡಿಸಿ ನಗರದ ರಂಗಪ್ಪ ವೃತ್ತದಲ್ಲಿ ಗ್ರಾಮಾಂತರ ಯುವ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಿ ಹತ್ಯೆಯಾದವರಿಗೆ  ಶ್ರದ್ಧಾಂಜಲಿ ಸಲ್ಲಿಸಲಾಯಿತು
    ರಾಜ್ಯದಲ್ಲಿ ಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ವಿನಾಕಾರಣ ಅಮಾಯಕರು ಬಲಿಯಾಗುತ್ತಿದ್ದಾರೆ. ತಪ್ಪಿತಸ್ಥರನ್ನು ತಕ್ಷಣ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ರಾಜ್ಯ ಸರ್ಕಾರ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿದೆ. ತಕ್ಷಣ ಗೃಹ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಲಾಯಿತು. ಅಲ್ಲದೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರ ಹೇಳಿಕೆ ಖಂಡಿಸಿ ಅವರ ಭಾವಚಿತ್ರ ಸುಡುವ ಮೂಲಕ ಆಕ್ರೋಶ ವ್ಯಕ್ತಪಡಿಸಲಾಯಿತು.


    ಗ್ರಾಮಾಂತರ ಯುವ ಕಾಂಗ್ರೆಸ್ ಅಧ್ಯಕ್ಷ ಅಫ್ತಾಬ್ ಅಹಮದ್ ಪ್ರತಿಭಟನೆ ನೇತೃತ್ವ ವಹಿಸಿದ್ದರು. ಶಾಸಕ ಬಿ.ಕೆ ಸಂಗಮೇಶ್ವರ್, ನಗರಸಭೆ ಉಪಾಧ್ಯಕ್ಷ ಚನ್ನಪ್ಪ, ಹಿರಿಯ ಸದಸ್ಯ ಬಿ.ಟಿ ನಾಗರಾಜ್, ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಟಿ. ಚಂದ್ರೇಗೌಡ, ಮಹಿಳಾ ಘಟಕದ ಅಧ್ಯಕ್ಷೆ ಹೇಮಾವತಿ, ರಾಜ್ಯ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷ ಸಿ.ಎಂ ಖಾದರ್, ಕಾರ್ಮಿಕ ವಿಭಾಗದ ಅಧ್ಯಕ್ಷ ಅಭಿಷೇಕ್, ಎನ್‌ಎಸ್‌ಯುಐ ಅಧ್ಯಕ್ಷ ಮುಸ್ವೀರ್ ಬಾಷಾ,  ಅಸಂಘಟಿತ ಕಾರ್ಮಿಕರ ನಗರ ಅಧ್ಯಕ್ಷ ಐಸಾಕ್ ಲಿಂಕನ್, ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ತಬ್ರೇಜ್ ಖಾನ್, ಅಭಿಷೇಕ್, ರಾಜ್ಯ ವಕ್ತಾರ ಆಮೋಸ್,  ಸಾಮಾಜಿಕ ಜಾಲತಾಣದ ಗ್ರಾಮಾಂತರ ಅಧ್ಯಕ್ಷ ಪ್ರವೀಣ್ ನಾಯ್ಕ್, ಯುವ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷೆ ರೂಪ,  ಗ್ರಾಮಾಂತರ ಪ್ರಧಾನ ಕಾರ್ಯದರ್ಶಿ ಸಜ್ಜದ್, ಹರೀಶ್, ಸೈಯದ್, ನ್ಯಾಯವಾದಿ ಶಿವಕುಮಾರ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ಕುರುಬರ ಸಂಘದ ಅಧ್ಯಕ್ಷರಾಗಿ ಬಿ.ಎಂ ಸಂತೋಷ್ ೨ನೇ ಬಾರಿಗೆ ಪುನರ್ ಆಯ್ಕೆ

ಭದ್ರಾವತಿ ತಾಲೂಕು ಕುರುಬರ ಸಂಘದ ಅಧ್ಯಕ್ಷರಾಗಿ ಶನಿವಾರ ನಡೆದ ಚುನಾವಣೆಯಲ್ಲಿ ೨ನೇ ಬಾರಿಗೆ ಬಿ.ಎಂ ಸಂತೋಷ್ ಪುನರ್ ಆಯ್ಕೆಯಾಗಿದ್ದಾರೆ.
    ಭದ್ರಾವತಿ, ಜು. ೩೦: ತಾಲೂಕು ಕುರುಬರ ಸಂಘದ ಅಧ್ಯಕ್ಷರಾಗಿ ೨ನೇ ಬಾರಿಗೆ ಬಿ.ಎಂ ಸಂತೋಷ್ ಪುನರ್ ಆಯ್ಕೆಯಾಗಿದ್ದಾರೆ.
ಶನಿವಾರ ನಡೆದ ಚುನಾವಣೆಯಲ್ಲಿ ಬಿ.ಎಂ ಸಂತೋಷ್ ಅಧ್ಯಕ್ಷರಾಗಿ, ಉಪಾಧ್ಯಕ್ಷರಾಗಿ ಸತೀಶ್ ಹೊಳೆಹೊನ್ನೂರು ಮತ್ತು ಬಿ.ಎಸ್ ಮಂಜುನಾಥ್, ಕಾರ್ಯದರ್ಶಿಯಾಗಿ ಬಿ.ಎ ರಾಜೇಶ್, ಸಹಕಾರ್ಯದರ್ಶಿಯಾಗಿ ಜೆ. ಕುಮಾರ್, ಖಜಾಂಚಿಯಾಗಿ ಬಿ.ಎಚ್ ವಸಂತ, ಲೆಕ್ಕಪರಿಶೋಧಕರಾಗಿ ಕೆ. ಕೇಶವ, ಕಾನೂನು ಸಲಹೆಗಾರರಾಗಿ ಎಲ್. ಪ್ರವೀಣ್ ಹಾಗು ನಿರ್ದೇಶಕರಾಗಿ ಸಣ್ಣಯ್ಯ, ನಾಗರಾಜ್, ಲೋಕೇಶ್, ವಿನೋದ್‌ಕುಮಾರ್, ಹೇಮಾವತಿ, ಬಿ.ಎಸ್ ನಾರಾಯಣಪ್ಪ ಮತ್ತು ಮಂಜುನಾಥ್(ಕೊಯ್ಲಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
    ತಾಲೂಕು ಕುರುಬರ ಸಂಘದ ಆಡಳಿತ ಮಂಡಳಿ ಒಟ್ಟು ೧೫ ನಿರ್ದೇಶಕ ಸ್ಥಾನಗಳನ್ನು ಒಳಗೊಂಡಿದ್ದು, ಚುನಾವಣಾಧಿಕಾರಿಯಾಗಿ ನವೀನ್ ಕರ್ತವ್ಯ ನಿರ್ವಹಿಸಿದರು.

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕುವೆಂಪು ಕೇಂದ್ರ ಕಛೇರಿ ಮುಂಭಾಗ ಅನಿರ್ಧಿಷ್ಟಾವಧಿ ಮುಷ್ಕರ

ಕುವೆಂಪು ವಿಶ್ವ ವಿದ್ಯಾಲಯ ಅಧ್ಯಾಪಕೇತರ ನೌಕರರ ಸಂಘದ ವತಿಯಿಂದ ಹಲವು ತಿಂಗಳುಗಳಿಂದ ಬಾಕಿ ಇರುವ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಶನಿವಾರದಿಂದ ಭದ್ರಾವತಿ ತಾಲೂಕಿನ ಶಂಕರಘಟ್ಟದಲ್ಲಿರುವ ವಿಶ್ವ ವಿದ್ಯಾಲಯದ ಕೇಂದ್ರ ಕಛೇರಿ ಮುಂಭಾಗ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲಾಯಿತು.
    ಭದ್ರಾವತಿ, ಜು. ೩೦: ಕುವೆಂಪು ವಿಶ್ವ ವಿದ್ಯಾಲಯ ಅಧ್ಯಾಪಕೇತರ ನೌಕರರ ಸಂಘದ ವತಿಯಿಂದ ಹಲವು ತಿಂಗಳುಗಳಿಂದ ಬಾಕಿ ಇರುವ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಶನಿವಾರದಿಂದ ತಾಲೂಕಿನ ಶಂಕರಘಟ್ಟದಲ್ಲಿರುವ ವಿಶ್ವ ವಿದ್ಯಾಲಯದ ಕೇಂದ್ರ ಕಛೇರಿ ಮುಂಭಾಗ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲಾಯಿತು.
    ಸರ್ವೋಚ್ಛ ನ್ಯಾಯಾಲಯದ ತೀರ್ಪು ಮತ್ತು ರಾಜ್ಯ ಸರ್ಕಾರದ ಆದೇಶದ ಮೇಲೆ ಜು.೯, ೨೦೨೦ರಂದು ಸಿಂಡಿಕೇಟ್ ಸಭೆ ನಡೆದಿದ್ದು, ಈ ಸಭೆಯಲ್ಲಿ ಕೈಗೊಂಡ ನಿರ್ಣಯಗಳನ್ನು ಇದುವರೆಗೂ ಸಂಪೂರ್ಣವಾಗಿ ಅನುಷ್ಠಾನಗೊಳಿಸಿಲ್ಲ. ಬಡ್ತಿ ಹೊಂದಿರುವ ನೌಕರರಿಗೆ ವೇತನ ನಿಗದಿಕರಣ, ಉಪ ಕುಲಸಚಿವ ಹುದ್ದೆಗಳಿಗೆ ಮತ್ತು ಇತರೆ ಖಾಲಿ ಹುದ್ದೆಗಳಿಗೆ ಬಡ್ತಿ ಕೈಗೊಂಡಿರುವುದಿಲ್ಲ. ಅಲ್ಲದೆ ಉಳಿದ ವಿಲೀಕರಣ ನೌವಕರರಿಗೆ ಸೌಲಭ್ಯ ವಿಸ್ತರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಿಲ್ಲ ಎಂದು ಆರೋಪಿಸಲಾಯಿತು.
    ತಕ್ಷಣ ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲವಾದಲ್ಲಿ ಬೇಡಿಕೆ ಈಡೇರುವವರೆಗೂ ಹೋರಾಟ ಮುಂದುವರೆಯಲಿದೆ ಎಂದು ಎಚ್ಚರಿಸಲಾಯಿತು.
    ಸಂಘದ ಅಧ್ಯಕ್ಷ ಶ್ರೀನಿವಾಸ್ ಮುಷ್ಕರದ ನೇತೃತ್ವ ವಹಿಸಿದ್ದರು. ಸಂಘದ ಪದಾಧಿಕಾರಿಗಳು, ಅಧ್ಯಾಪಕೇತರ ನೌಕರರು ಪಾಲ್ಗೊಂಡಿದ್ದರು.

ಪತ್ರಕರ್ತರ ಮೇಲೆ ಹಲ್ಲೆ : ಮನವಿ

ಕರ್ನಾಟಕ ರಾಜ್ಯ ವಿಧಾನಸಭೆ ಮಾಜಿ ಅಧ್ಯಕ್ಷ ಕೆ.ಆರ್ ರಮೇಶ್‌ಕುಮಾರ್ ಅವರು ಮಾಧ್ಯಮದವರ ಮೇಲೆ ನಡೆಸಿರುವ ಹಲ್ಲೆಯನ್ನು ಖಂಡಿಸಿ ಭದ್ರಾವತಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಶನಿವಾರ ತಹಸೀಲ್ದಾರ್ ಗ್ರೇಡ್-೨ ರಂಗಮ್ಮ ಅವರಿಗೆ ಮನವಿ ಸಲ್ಲಿಸಲಾಯಿತು.
    ಭದ್ರಾವತಿ, ಜು. ೩೦ : ಕರ್ನಾಟಕ ರಾಜ್ಯ ವಿಧಾನಸಭೆ ಮಾಜಿ ಅಧ್ಯಕ್ಷ ಕೆ.ಆರ್ ರಮೇಶ್‌ಕುಮಾರ್ ಅವರು ಮಾಧ್ಯಮದವರ ಮೇಲೆ ನಡೆಸಿರುವ ಹಲ್ಲೆಯನ್ನು ಖಂಡಿಸಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಶನಿವಾರ ತಹಸೀಲ್ದಾರ್ ಗ್ರೇಡ್-೨ ರಂಗಮ್ಮ ಅವರಿಗೆ ಮನವಿ ಸಲ್ಲಿಸಲಾಯಿತು.
    ತಹಸೀಲ್ದಾರ್ ಕಛೇರಿ ಮಿನಿವಿಧಾನಸೌಧದ ಮುಂಭಾಗ ಪ್ರತಿಭಟನೆ ನಡೆಸಿ ಕೆ.ಆರ್ ರಮೇಶ್‌ಕುಮಾರ್ ಅವರು ಕೋಲಾರದಲ್ಲಿ ಆಯೋಜಿಸಲಾಗಿದ್ದ ಸಭೆಯಲ್ಲಿ ಪತ್ರಕರ್ತರ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯವಾಗಿದ್ದು, ತಕ್ಷಣ ಪತ್ರಕರ್ತರ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದರು.
    ಸಂಘದ ಅಧ್ಯಕ್ಷ ಕೆ.ಆರ್ ಶ್ರೀಹರ್ಷ ಅವರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಹಿರಿಯ ಪತ್ರಕರ್ತರಾದ ಕಟ್ಟಡ ಭವನ ಟ್ರಸ್ಟ್ ಅಧ್ಯಕ್ಷ ಕಣ್ಣಪ್ಪ, ಸಂಘದ ಮಾಜಿ ಅಧ್ಯಕ್ಷ ಎನ್. ಬಾಬು ಸೇರಿದಂತೆ ಸಂಘದ ಪದಾಧಿಕಾರಿಗಳು, ಸದಸ್ಯರು ಪಾಲ್ಗೊಂಡಿದ್ದರು.

ಶುಕ್ರವಾರ, ಜುಲೈ 29, 2022

ಎಸ್. ಗೋವಿಂದರಾಜ ಶ್ರೇಷ್ಠಿ ನಿಧನ

ಎಸ್. ಗೋವಿಂದರಾಜ ಶ್ರೇಷ್ಠಿ
ಭದ್ರಾವತಿ, ಜು. ೨೯: ನಗರದ ಕೇಶವಪುರ ನಿವಾಸಿ, ಆರ್ಯವೈಶ್ಯ ಸಮಾಜದ ಪ್ರಮುಖರಾದ ಎಸ್. ಗೋವಿಂದರಾಜ ಶ್ರೇಷ್ಠಿ (೯೦) ಶುಕ್ರವಾರ ನಿಧನ ಹೊಂದಿದರು.
ಮೂರು ಪುತ್ರರು, ಇಬ್ಬರು ಪುತ್ರಿಯರನ್ನು ಹೊಂದಿದ್ದರು. ಇವರ ಅಂತ್ಯಕ್ರಿಯೆ ಜು.೩೦ರ ಶನಿವಾರ ಬೆಳಿಗ್ಗೆ ೧೧ ಘಂಟೆಗೆ  ಹೊಳೆಹೊನ್ನೂರು ರಸ್ತೆಯಲ್ಲಿರುವ ಹಿಂದು ರುದ್ರಭೂಮಿಯಲ್ಲಿ ನೆರವೇರಲಿದೆ.
ಆರ್ಯವೈಶ್ಯ ಸಮಾಜ ಸಂತಾಪ ವ್ಯಕ್ತಪಡಿಸುತ್ತದೆ.

ಪ್ರೌಢಶಾಲಾ ಶಿಕ್ಷಕರಿಗೆ ಸಮಾಜ ವಿಜ್ಞಾನ ವಿಷಯ ಕಾರ್ಯಾಗಾರ

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮತ್ತು ಸಮಾಜ ವಿಜ್ಞಾನ ವಿಷಯ ವೇದಿಕೆ ಸಹಯೋಗದೊಂದಿಗೆ ಭದ್ರಾವತಿ ಹುತ್ತಾ ಕಾಲೋನಿ ಸರ್ಕಾರಿ ಪ್ರೌಢಶಾಲೆಯಲ್ಲಿ ಏರ್ಪಡಿಸಲಾಗಿದ್ದ ಸಮಾಜ ವಿಜ್ಞಾನ ವಿಷಯದ ಕಾರ್ಯಾಗಾರ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಉದ್ಘಾಟಿಸಿದರು.
    ಭದ್ರಾವತಿ, ಜು. ೨೯: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮತ್ತು ಸಮಾಜ ವಿಜ್ಞಾನ ಶಿಕ್ಷಕರ ವೇದಿಕೆ ಸಹಯೋಗದೊಂದಿಗೆ ನಗರದ ಹುತ್ತಾ ಕಾಲೋನಿ ಸರ್ಕಾರಿ ಪ್ರೌಢಶಾಲೆಯಲ್ಲಿ ಸಮಾಜ ವಿಜ್ಞಾನ ವಿಷಯ ಕುರಿತ ಕಾರ್ಯಾಗಾರ ಏರ್ಪಡಿಸಲಾಗಿತ್ತು.
    ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಕಾರ್ಯಾಗಾರ ಉದ್ಘಾಟಿಸಿದರು. ಶಾಲೆಯ ಮುಖ್ಯ ಶಿಕ್ಷಕಿ ಗೀತಾಂಜಲಿ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ. ಬಸವರಾಜಪ್ಪ, ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಪಂಚಾಕ್ಷರಿ,  ಸಮಾಜ ವಿಜ್ಞಾನ ಶಿಕ್ಷಕರ ವೇದಿಕೆ ಅಧ್ಯಕ್ಷ ಸಿ.ಡಿ ಮಂಜುನಾಥ್, ಶಿಕ್ಷಣ ಸಂಯೋಜಕ ರವಿಕುಮಾರ್, ಸಂಪನ್ಮೂಲ ವ್ಯಕ್ತಿ ಪ್ರಭಾಕರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
         ಕಾರ್ಯಾಗಾರದಲ್ಲಿ ಕಲಿಕಾ ಚೇತರಿಕೆ ಕುರಿತು ಸಂಪನ್ಮೂಲ ವ್ಯಕ್ತಿಗಳಾದ ನವೀನ್ ಕುಮಾರ್, ಶ್ರೀಧರ್, ಮೌಲ್ಯಮಾಪನ ಕುರಿತು ಮಂಜಪ್ಪ, ೧೦ನೇ ತರಗತಿ ಸಮಾಜ ವಿಜ್ಞಾನ ಪಠ್ಯದಲ್ಲಿ ಹೊಸ ವಿಷಯಗಳ ಸೇರ್ಪಡೆ ಕುರಿತು ಸತೀಶ್, ಸಿ.ಡಿ ಮಂಜುನಾಥ್ ವಿಷಯ ಮಂಡಿಸಿದರು.
ತಾಲೂಕಿನ ಪ್ರೌಢಶಾಲಾ ಸಮಾಜ ವಿಜ್ಞಾನ ಶಿಕ್ಷಕರು, ಸಮಾಜ ವಿಜ್ಞಾನ ವೇದಿಕೆಯ ಸದಸ್ಯರು ಭಾಗವಹಿಸಿದ್ದರು. ಹೇಮಾ ಮಾಲಿನಿ  ಸ್ವಾಗತಿಸಿ,  ಸಹ ಶಿಕ್ಷಕ ತಿಮ್ಮಣ್ಣ ಗೌಡ ವಂದಿಸಿದರು. ನವೀನ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

ಗುರುವಾರ, ಜುಲೈ 28, 2022

ವಿಕಲಚೇತನರಿಗೆ ದ್ವಿಚಕ್ರ ವಾಹನ ವಿತರಣೆ

 ಭದ್ರಾವತಿ, ಜು. 28: ವಿಕಲಚೇತನ ಐದು ಮಂದಿ ಫಲಾನುಭವಿಗಳಿಗೆ ದ್ವಿಚಕ್ರ  ವಾಹನಗಳನ್ನು ಶಾಸಕರ ಗೃಹ ಕಚೇರಿಯಲ್ಲಿ ವಿತರಿಸಲಾಯಿತು. 
       ವಾಹನಗಳನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಶಾಸಕ ಬಿ.ಕೆ ಸಂಗಮೇಶ್ವರ ಕರೆ ನೀಡಿದರು. ನಗರಸಭೆ ಉಪಾಧ್ಯಕ್ಷ ಚನ್ನಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್ ಕುಮಾರ್, ಸದಸ್ಯ ರಿಯಾಜ್ ಅಹ್ಮದ್, ವೈ. ನಟರಾಜ, ಮೋಹನ್, ಎಸ್.ಎನ್ ಶಿವಪ್ಪ, ಬಿ.ಎಂ ರವಿ ಕುಮಾರ್, ರತ್ನಪ್ಪ ನಾಯ್ಕ,  ಉಮೇಶ್, ರಾಮಣ್ಣ, ಮಂಜು, ಶೇಖರ್, ಅಯ್ಯಪ್ಪ, ಸೆಲ್ವಂ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಜನಸಂಖ್ಯೆ ನಿಯಂತ್ರಣ ಕುರಿತು ಜ್ಞಾನ ಹೊಂದಿ : ಡಾ. ಬಿ.ಜಿ ಧನಂಜಯ

ಭದ್ರಾವತಿ ನ್ಯೂಟೌನ್ ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯಾಧಿಕಾರಿಗಳ ಕಛೇರಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮವನ್ನು ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್ ಉದ್ಘಾಟಿಸಿದರು.
    ಭದ್ರಾವತಿ, ಜು. ೨೮: ಜನಸಂಖ್ಯೆ ನಿಯಂತ್ರಣದಲ್ಲಿ ದೇಶದ ಹಾಗು ಕುಟುಂಬದ ಬೆಳವಣಿಗೆ ಕುರಿತು ಜ್ಞಾನ ಹೊಂದಿರಬೇಕು ಎಂದು ಹೊಸಮನೆ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಜಿ ಧನಂಜಯ ಹೇಳಿದರು.
    ಅವರು ಗುರುವಾರ ನಗರದ ನ್ಯೂಟೌನ್ ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯಾಧಿಕಾರಿಗಳ ಕಛೇರಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
    ಜನಸಂಖ್ಯೆ ಹೆಚ್ಚಳ ಎಲ್ಲಾ ಕ್ಷೇತ್ರಗಳು ಕುಂಠಿತಗೊಳ್ಳಲು ಕಾರಣವಾಗಲಿದ್ದು, ಅಭಿವೃದ್ಧಿ ಯೋಜನೆಗಳಿಗೆ ಹಿನ್ನಡೆಯಾಗಲಿದೆ. ದೇಶದ ಹಾಗು ಕುಟುಂಬದ ವಾಸ್ತಾವಿಕ ಸ್ಥಿತಿಗತಿಗಳನ್ನು ಅರಿಯುವ ಮೂಲಕ ಜನಸಂಖ್ಯೆ ನಿಯಂತ್ರಣದಲ್ಲಿ ನಮ್ಮ ಪಾತ್ರ ಅರ್ಥ ಮಾಡಿಕೊಳ್ಳಬೇಕು. ಭವಿಷ್ಯದಲ್ಲಿ ಪ್ರಪಂಚದಾದ್ಯಂತ ಜನಸಂಖ್ಯೆ ಮತ್ತಷ್ಟು ಹೆಚ್ಚಳವಾಗುವ ಆತಂಕ ಕಂಡು ಬಂದ ಹಿನ್ನಲೆಯಲ್ಲಿ ಜನಸಂಖ್ಯೆ ನಿಯಂತ್ರಣ ಕುರಿತು ಜಾಗೃತಿ ಮೂಡಿಸುವ ಅನಿವಾರ್ಯತೆ ಎದುರಾಯಿತು. ಈ ಹಿನ್ನಲೆಯಲ್ಲಿ ಜನಸಂಖ್ಯಾ ದಿನಾಚರಣೆ ಆಚರಿಸಲಾಗುತ್ತಿದೆ ಎಂದರು.
    ಜನಸಂಖ್ಯೆ ನಿಯಂತ್ರಣದಲ್ಲಿ ಶಿಕ್ಷಣವಂತರ ಪಾತ್ರ ಅತಿ ಮುಖ್ಯವಾಗಿದ್ದು, ದೇಶ ಹಾಗು ಕುಟುಂಬದ ಕಾಳಜಿ ಹಿನ್ನಲೆಯಲ್ಲಿ  ಪ್ರತಿಯೊಬ್ಬರು ಸಹ ತಮ್ಮ ಸುತ್ತಮುತ್ತಲಿನ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಾಗ ಮಾತ್ರ ಜನಸಂಖ್ಯಾ ದಿನಾಚರಣೆ ಸಾರ್ಥಕಗೊಳ್ಳುತ್ತದೆ ಎಂದರು.
    ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್ ಪ್ರಾಸ್ತಾವಿಕ ನುಡಿಗಳನ್ನಾಡಿ, ಜನಸಂಖ್ಯಾ ನಿಯಂತ್ರಣದ ಅಗತ್ಯತೆ ಹಾಗು ಪ್ರಸ್ತುತ ಅಂಕಿ-ಅಂಶಗಳನ್ನು ವಿವರಿಸಿದರು.
    ನಗರಸಭೆ ಅಧ್ಯಕ್ಷೆ ಗೀತಾರಾಜ್‌ಕುಮಾರ್ ಕಾರ್ಯಕ್ರಮ ಉದ್ಘಾಟಿಸಿದರು. ಸದಸ್ಯೆ ಸರ್ವಮಂಗಳ ಭೈರಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ಸಹಾಯಕ ಪ್ರಾಧ್ಯಾಪಕ ಮಹಮದ್ ನಜೀಬ್ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
    ಕಾಲೇಜಿನ ಪ್ರಾಂಶುಪಾಲ ಡಾ. ಧನಂಜಯ ಅಧ್ಯಕ್ಷತೆ ವಹಿಸಿದ್ದರು. ಸಹಾಯಕ ಪ್ರಾಧ್ಯಾಪಕ ಡಾ. ವರದರಾಜ ಸ್ವಾಗತಿಸಿ, ಆರೋಗ್ಯ ಶಿಕ್ಷಣಾಧಿಕಾರಿ ಕೆ. ಸುಶೀಲಾ ಬಾಯಿ ನಿರೂಪಿಸಿ, ಸಹಾಯಕ ಪ್ರಾಧ್ಯಾಪಕ ಗುರುಪ್ರಸಾದ್ ವಂದಿಸಿದರು.
    ಇದಕ್ಕೂ ಮೊದಲು ಜನಸಂಖ್ಯಾ ನಿಯಂತ್ರ ಸಂಬಂಧ ಏರ್ಪಡಿಸಲಾಗಿದ್ದ ವಸ್ತು ಪ್ರದರ್ಶನಕ್ಕೆ ಚಾಲನೆ ನೀಡಲಾಯಿತು. ಕೊರೋನಾ ಮುಂಜಾಗ್ರತೆ ಹಿನ್ನಲೆಯಲ್ಲಿ ಕಾಲೇಜಿನ ವಿದ್ಯಾರ್ಥಿಗಳಿಗೆ ಬೂಸ್ಟರ್ ಡೋಸ್ ಚುಚ್ಚುಮದ್ದು ನೀಡಲಾಯಿತು.   ಕಾಲೇಜಿನ ವಿದ್ಯಾರ್ಥಿಗಳು, ಅಧ್ಯಾಪಕ, ಅಧ್ಯಾಪಕೇತರ ವರ್ಗದವರು, ಆರೋಗ್ಯ ಇಲಾಖೆ ಸಿಬ್ಬಂದಿಗಳು ಪಾಲ್ಗೊಂಡಿದ್ದರು.


ಎಚ್.ಎಸ್ ಕೃಷ್ಣಮೂರ್ತಿ ನಿಧನ

ಎಚ್.ಎಸ್ ಕೃಷ್ಣಮೂರ್ತಿ
    ಭದ್ರಾವತಿ, ಜು. ೨೮: ಉಂಬ್ಳೆಬೈಲು ರೈತ ಸೇವಾ ಸಹಕಾರ ಸಂಘದ ಸಂಸ್ಥಾಪಕ, ಮಡಿವಾಳ ಸಮಾಜದ ಮುಖಂಡ ಜಮೀನ್ದಾರ್ ಎಚ್.ಎಸ್ ಕೃಷ್ಣಮೂರ್ತಿ(೮೮) ಗುರುವಾರ ನಿಧನ ಹೊಂದಿದರು.
    ಉಂಬ್ಳೆಬೈಲು ಸಮೀಪದ ಆಲ್ದಾರ ಗ್ರಾಮದ ಕೃಷ್ಣಮೂರ್ತಿಯವರಿಗೆ ೩ ಜನ ಗಂಡು, ೫ ಜನ ಹೆಣ್ಣು ಮಕ್ಕಳಿದ್ದರು. ಇವರ ಅಂತ್ಯಕ್ರಿಯೆ ಜು.೨೯ರ ಬೆಳಿಗ್ಗೆ ೧೨ ಗಂಟೆಗೆ ಗ್ರಾಮದಲ್ಲಿರುವ ಇವರ ಜಮೀನಿನಲ್ಲಿ ನಡೆಯಲಿದೆ.
    ಇವರ ನಿಧನಕ್ಕೆ ಮಡಿವಾಳ ಸಮಾಜದ ಮುಖಂಡರು,  ರೈತ ಪ್ರಮುಖರು, ಗಣ್ಯರು ಸೇರಿದಂತೆ ಇನ್ನಿತರರು ಸಂತಾಪ ಸೂಚಿಸಿದ್ದಾರೆ.

ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷರಾಗಿ ಎಸ್. ವಿರುಪಾಕ್ಷಪ್ಪ, ಉಪಾಧ್ಯಕ್ಷರಾಗಿ ರಾಜಶೇಖರನಾಯ್ಕ ಅವಿರೋಧ ಆಯ್ಕೆ

ಭದ್ರಾವತಿ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷರಾಗಿ ಎಸ್. ವಿರುಪಾಕ್ಷಪ್ಪ, ಉಪಾಧ್ಯಕ್ಷರಾಗಿ ರಾಜಶೇಖರನಾಯ್ಕ ಅವಿರೋಧವಾಗಿ ಆಯ್ಕೆಯಾಗಿದ್ದು, ಇವರನ್ನು ಬ್ಯಾಂಕ್ ವತಿಯಿಂದ ಅಭಿನಂದಿಸಲಾಯಿತು.
    ಭದ್ರಾವತಿ, ಜು. ೨೮: ನಗರದ ಚನ್ನಗಿರಿ ರಸ್ತೆಯಲ್ಲಿರುವ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್(ಪಿಎಲ್‌ಡಿ) ಅಧ್ಯಕ್ಷರಾಗಿ ಹುಣಸೇಕಟ್ಟೆ ಗ್ರಾಮದ ಎಸ್. ವಿರುಪಾಕ್ಷಪ್ಪ ಆಯ್ಕೆಯಾಗಿದ್ದಾರೆ.
    ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಹುಣಸೇಕಟ್ಟೆ ಗ್ರಾಮದ ಎಸ್. ವಿರುಪಾಕ್ಷಪ್ಪ ಅಧ್ಯಕ್ಷರಾಗಿ ಮತ್ತು ಅರಸನಗಟ್ಟ ತಾಂಡ್ಯದ ರಾಜಶೇಖರನಾಯ್ಕ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
    ಬ್ಯಾಂಕಿನಲ್ಲಿ ಒಟ್ಟು ೧೩ ನಿರ್ದೇಶಕರಿದ್ದು, ಕಳೆದ ಕೆಲವು ವರ್ಷಗಳಿಂದ ಬ್ಯಾಂಕ್ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ನೂತನ ಅಧ್ಯಕ್ಷರು, ಉಪಾಧ್ಯಕ್ಷರಿಗೆ ಶಾಸಕ ಬಿ.ಕೆ ಸಂಗಮೇಶ್ವರ್ ಸೇರಿದಂತೆ ಇನ್ನಿತರ ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ.

ಕಾರ್ಗಿಲ್ ವಿಜಯೋತ್ಸವ ದಿನ : ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ

ಭದ್ರಾವತಿ ತಾಲೂಕು ಮಾಜಿ ಸೈನಿಕರ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕಾರ್ಗಿಲ್ ವಿಜಯೋತ್ಸವ ದಿನಾಚರಣೆ ಹಾಗೂ ಸಂಘದ ನೂತನ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ ಮಾಜಿ ಸೈನಿಕರ ಕುಟುಂಬ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
    ಭದ್ರಾವತಿ, ಜು. ೨೮:  ತಾಲೂಕು ಮಾಜಿ ಸೈನಿಕರ ಸಂಘದ ವತಿಯಿಂದ ಕಾರ್ಗಿಲ್ ವಿಜಯೋತ್ಸವ ದಿನಾಚರಣೆ ಹಾಗೂ ಸಂಘದ ನೂತನ ಕಚೇರಿ ಉದ್ಘಾಟನಾ ಸಮಾರಂಭವನ್ನು ಶಾಸಕ ಬಿ.ಕೆ ಸಂಗಮೇಶ್ವರ್ ನೆರವೇರಿಸಿದರು.
    ಲಯನ್ಸ್ ಕ್ಲಬ್‌ನಲ್ಲಿ ನಡೆದ ಸಮಾರಂಭದಲ್ಲಿ ಕಾರ್ಗಿಲ್ ಯುದ್ಧದಲ್ಲಿ ಮಡಿದ ವೀರ ಯೋಧರಿಗೆ ಗೌರವ ನಮನ ಸಲ್ಲಿಸಲಾಯಿತು. ಹಿರಿಯ ಮಾಜಿ ಸೈನಿಕರು, ಕ್ರೀಡಾ ಸಾಧಕರು, ನಗರಸಭಾ ಸದಸ್ಯರು ಹಾಗು ಮಾಜಿ ಸೈನಿಕರ ಕುಟುಂಬದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
    ತಹಸೀಲ್ದಾರ್ ಆರ್. ಪ್ರದೀಪ್,  ಬಿಜೆಪಿ ತಾಲೂಕು ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್, ನಗರಸಭಾ ಅಧ್ಯಕ್ಷೆ ಗೀತಾ ರಾಜಕುಮಾರ್, ಉಪಾಧ್ಯಕ್ಷ ಚನ್ನಪ್ಪ,  ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್ ಕುಮಾರ್, ತಾಲೂಕು ಮಾಜಿ ಸೈನಿಕರ ಪತ್ನಿಯರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷೆ ಶಶಿಕಲಾ ಉಪಸ್ಥಿತರಿದ್ದರು.
    ತಾಲೂಕು ಮಾಜಿ ಸೈನಿಕರ ಸಂಘದ ಗೌರವಾಧ್ಯಕ್ಷ ಮೇಜರ್ ವಿಕ್ರಂ ಎಸ್ ಕೆದಲಾಯ ಅಧ್ಯಕ್ಷತೆ ವಹಿಸಿದ್ದರು. ಸಂಘದ ಪದಾಧಿಕಾರಿಗಳು, ನಿರ್ದೇಶಕರು, ಮಾಜಿ ಸೈನಿಕರ ಕುಟುಂಬಸ್ಥರು, ನ್ಯೂಟೌನ್ ಸರ್.ಎಂ.ವಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ಎನ್‌ಸಿಸಿ ಹಾಗೂ ಸ್ಕೌಟ್ ವಿದ್ಯಾರ್ಥಿಗಳು, ಸಿದ್ಧಾರ್ಥ ಅಂಧರ ಕೇಂದ್ರದ ವಿಕಲಚೇತನರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು. ಕಾರ್ಯದರ್ಶಿ ವೆಂಕಟಗಿರಿ ವಂದಿಸಿದರು.

ಬುಧವಾರ, ಜುಲೈ 27, 2022

ಕೇಂದ್ರ ಸರ್ಕಾರದಿಂದ ಪೊಲೀಸ್, ಇ.ಡಿ ದುರ್ಬಳಕೆ : ವಿನಾಕಾರಣ ಕಾಂಗ್ರೆಸ್ ನಾಯಕರಿಗೆ ಕಿರುಕುಳ

ಜಾರಿ ನಿರ್ದೇಶನಾಲಯ(ಇ.ಡಿ) ಮತ್ತು ಪೊಲೀಸ್ ಇಲಾಖೆಯನ್ನು ಕೇಂದ್ರ ಸರ್ಕಾರ ದುರುಪಯೋಗಪಡಿಸಿಕೊಳ್ಳುವ ಮೂಲಕ ವಿನಾಕಾರಣ ಕಾಂಗ್ರೆಸ್ ಪಕ್ಷದ ನಾಯಕರಿಗೆ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿ ಭದ್ರಾವತಿಯಲ್ಲಿ ಯುವ ಕಾಂಗ್ರೆಸ್ ಗ್ರಾಮಾಂತರ ಘಟಕದಿಂದ ನಗರದ ರಂಗಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
    ಭದ್ರಾವತಿ. ಜು, ೨೭: ಜಾರಿ ನಿರ್ದೇಶನಾಲಯ(ಇ.ಡಿ) ಮತ್ತು ಪೊಲೀಸ್ ಇಲಾಖೆಯನ್ನು ಕೇಂದ್ರ ಸರ್ಕಾರ ದುರುಪಯೋಗಪಡಿಸಿಕೊಳ್ಳುವ ಮೂಲಕ ವಿನಾಕಾರಣ ಕಾಂಗ್ರೆಸ್ ಪಕ್ಷದ ನಾಯಕರಿಗೆ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿ ಯುವ ಕಾಂಗ್ರೆಸ್ ಗ್ರಾಮಾಂತರ ಘಟಕದಿಂದ ನಗರದ ರಂಗಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
    ಪ್ರಮುಖರು ಮಾತನಾಡಿ, ಪಕ್ಷದ ಅಧಿನಾಯಕಿ ಸೋನಿಯಾಗಾಂಧಿ ಅವರನ್ನು ಇಡಿ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿ ವಿನಾಕಾರಣ ತೊಂದರೆ ನೀಡುತ್ತಿದ್ದಾರೆ. ಇದನ್ನು ವಿರೋಧಿಸಿ ರಾಷ್ಟ್ರೀಯ ನಾಯಕರಾದ ರಾಹುಲ್ ಗಾಂಧಿಯವರು ಮೌನ ಪ್ರತಿಭಟನೆಗೆ ಮುಂದಾದಾಗ ಅವರನ್ನು ಬಂಧಿಸಲು ಪೊಲೀಸರು ಯತ್ನಿಸಿದ್ದು, ಈ ಸಂದರ್ಭದಲ್ಲಿ ಯುವ ಘಟಕದ ರಾಷ್ಟ್ರೀಯ ಅಧ್ಯಕ್ಷ ಬಿ. ವಿ. ಶ್ರೀನಿವಾಸ್ ಅವರ ಹಲ್ಲೆ ನಡೆಸಿ ಬಂಧಿಸಲಾಗಿದೆ ಇದನ್ನು ಪಕ್ಷ ತೀವ್ರವಾಗಿ ಖಂಡಿಸುತ್ತದೆ ಎಂದರು.
    ಇ.ಡಿ ಮತ್ತು ಪೊಲೀಸ್ ಇಲಾಖೆಯನ್ನು ಕೇಂದ್ರ ಸರ್ಕಾರ ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ನಾಯಕರಿಗೆ ಕಿರುಕುಳ ನೀಡುವುದನ್ನು ತಕ್ಷಣ ನಿಲ್ಲಿಸಬೇಕು. ಇಲ್ಲವಾದಲ್ಲಿ ದೇಶಾದ್ಯಂತ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದರು ಎಚ್ಚರಿಸಿದರು.
ಗ್ರಾಮಾಂತರ ಯುವ ಕಾಂಗ್ರೆಸ್ ಅಧ್ಯಕ್ಷ ಅಫ್ತಾಬ್ ಅಹ್ಮದ್ ಪ್ರತಿಭಟನೆ ನೇತೃತ್ವ ವಹಿಸಿದ್ದರು. ಯುವ ಮುಖಂಡ ಬಿ.ಎಸ್ ಗಣೇಶ್, ನಗರಸಭೆ ಸದಸ್ಯರಾದ ಬಿ.ಎಂ ಮಂಜುನಾಥ್(ಟೀಕು), ಬಷೀರ್ ಅಹ್ಮದ್, ಸೈಯದ್ ರಿಯಾಜ್ ಅಹ್ಮದ್, ಯುವ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಸಚಿನ್ ಸಿಂಧ್ಯಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೃಷ್ಣರಾಜು, ಕಾರ್ಯದರ್ಶಿಗಳಾದ ಕೇಶವ,  ನ್ಯಾಯವಾದಿ ಎಂ. ಶಿವಕುಮಾರ್. ಐಸಾಕ್ ಲಿಂಕನ್,  ಅಭಿಲಾಶ್, ತಬ್ರೆಜ್ ಖಾನ್, ರಜಿನಿ, ವಿನಯ್, ಹರೀಶ್, ಎಂ.ಡಿ ಸಜ್ಜಾದ್, ಸೈಯದ್ ಸರ್ಫರಾಜ್, ಶ್ರೀನಿವಾಸ್, ಮುನಾವರ್, ಲೋಕೇಶ್, ಉಮರ್, ನಾಗೇಶ್, ಮಂಜು, ಡೊನಾಲ್ಡ್, ಪೃಥ್ವಿರಾಜ್, ರವಿ, ಫೈಸಲ್, ಆಫೀಫ್, ಅಜ್ಗರ್, ಸಾಧಿಕ್, ಮೋನೋ ಮತ್ತು ದಿಲೀಪ್ ಕುಮಾರ್ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.

ನವೀಕರಣಗೊಂಡ ದೇವಾಲಯದ ಪ್ರಾಂಗಣ ಲೋಕಾರ್ಪಣೆ : ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ

ಭದ್ರಾವತಿ ನ್ಯೂಟೌನ್ ಅಮಲೋದ್ಭವಿ ಮಾತೆ ದೇವಾಲಯದ ನವೀಕರಣಗೊಂಡ ಪ್ರಾಂಗಣವನ್ನು ಶಿವಮೊಗ್ಗ ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಡಾ. ಫ್ರಾನ್ಸಿಸ್ ಸೆರಾವೋ ಲೋಕಾರ್ಪಣೆಗೊಳಿಸಿದರು.
    ಭದ್ರಾವತಿ, ಜು. ೨೭ : ನಗರದ ಪ್ರಮುಖ ಕ್ರೈಸ್ತ ದೇವಾಲಯಗಳಲ್ಲಿ ಒಂದಾಗಿರುವ ನ್ಯೂಟೌನ್ ಅಮಲೋದ್ಭವಿ ಮಾತೆ ದೇವಾಲಯದ ನವೀಕರಣಗೊಂಡ ಪ್ರಾಂಗಣವನ್ನು ಶಿವಮೊಗ್ಗ ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಡಾ. ಫ್ರಾನ್ಸಿಸ್ ಸೆರಾವೋ ಲೋಕಾರ್ಪಣೆಗೊಳಿಸಿದರು.
    ತನ್ನದೇ ಆದ ವಿಶಿಷ್ಟತೆಯನ್ನು ಕಾಯ್ದುಕೊಂಡು ಬಂದಿರುವ ಅಮಲೋದ್ಭವಿ ಮಾತೆ ದೇವಾಲಯದಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳು ಪ್ರಗತಿಯಲ್ಲಿದ್ದು, ಇಂಟರ್‌ಲಾಕ್ ಅಳವಡಿಕೆಯೊಂದಿಗೆ ನವೀಕರಣಗೊಳಿಸುವ ಮೂಲಕ ಪ್ರಾಂಗಣ ಮತ್ತಷ್ಟು ಆಕರ್ಷಕವಾಗಿ ಕಂಗೊಳಿಸುವಂತೆ ಮಾಡಲಾಗಿದೆ. ಲೋಕಾರ್ಪಣೆಗೊಳಿಸಿದ ಡಾ. ಫ್ರಾನ್ಸಿಸ್ ಸೆರಾವೋ ಅವರು ನವೀಕರಣ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.


      ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ :
    ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ೬೦೦ಕ್ಕೂ ಹೆಚ್ಚು ಅಂಕ ಪಡೆದ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಕ್ರೈಸ್ತ ಸಮುದಾಯದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
    ವೈಸಿಎಸ್/ಐಸಿವೈಎಂ, ಪೀಠ ಸೇವಕರು ಮತ್ತು ಮಹಿಳಾ ಸಂಘಟನೆಯ ನೂತನ ಪದಾಧಿಕಾರಿಗಳ ಪ್ರಮಾಣ ವಚನ ಸ್ವೀಕಾರ ನಡೆಯಿತು.
    ದೇವಾಲಯದ ಧರ್ಮಗುರು ಫಾದರ್ ಲಾನ್ಸಿ ಡಿಸೋಜ,  ಪಾಲನ ಪರಿಷತ್ ಕಾರ್ಯದರ್ಶಿ ಅಂತೋಣಿ ವಿಲ್ಸನ್, ಡಾನ್ ಬಾಸ್ಕೋ ಕೈಗಾರಿಕಾ ತರಬೇತಿ ಸಂಸ್ಥೆ ನಿರ್ದೇಶಕ ಫಾದರ್ ಆರೋಗ್ಯ ರಾಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಮಂಗಳವಾರ, ಜುಲೈ 26, 2022

ನೀರು ಮಿತವಾಗಿ ಸದ್ಬಳಕೆ ಮಾಡಿಕೊಂಡಲ್ಲಿ ೨ ಬೆಳೆ ಬೆಳೆಯಲು ಸಾಧ್ಯ

ಭದ್ರೆಗೆ ಬಾಗಿನ ಸಮರ್ಪಣೆ ಕಾರ್ಯಕ್ರಮದಲ್ಲಿ ಎಚ್.ಆರ್ ಬಸವರಾಜಪ್ಪ

ಭದ್ರಾವತಿ ತಾಲೂಕಿನ ಬಿಆರ್‌ಪಿ ಭದ್ರಾ ಜಲಾಶಯದಲ್ಲಿ ಮಂಗಳವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ ರಾಜ್ಯಾಧ್ಯಕ್ಷ ಎಚ್.ಆರ್ ಬಸವರಾಜಪ್ಪ ಸೇರಿದಂತೆ ರೈತರು ಭದ್ರೆಗೆ ಬಾಗಿನ ಸಮರ್ಪಿಸಿದರು. 
    ಭದ್ರಾವತಿ, ಜು. ೨೬: ಭದ್ರಾ ಜಲಾಶಯದ ನೀರು ಮಿತವಾಗಿ ಸಮರ್ಪಕವಾಗಿ ಬಳಕೆ ಮಾಡಿಕೊಂಡಲ್ಲಿ ರೈತರು ವಾರ್ಷಿಕ ೨ ಬೆಳೆಗಳನ್ನು ಬೆಳೆಯಲು ಸಾಧ್ಯ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ ರಾಜ್ಯಾಧ್ಯಕ್ಷ ಎಚ್.ಆರ್ ಬಸವರಾಜಪ್ಪ ಹೇಳಿದರು.
    ಅವರು ಮಂಗಳವಾರ ತಾಲೂಕಿನ ಬಿಆರ್‌ಪಿ ಭದ್ರಾ ಜಲಾಶಯದಲ್ಲಿ ಭದ್ರೆಗೆ ಬಾಗಿನ ಸಮರ್ಪಿಸಿ ಮಾತನಾಡಿದರು. ಕೆಲವು ವರ್ಷಗಳಿಂದ ಜಲಾಶಯ ಪೂರ್ಣಪ್ರಮಾಣದಲ್ಲಿ ಭರ್ತಿಯಾಗುತ್ತಿದ್ದು, ಈ ಬಾರಿ ಇನ್ನೂ ಬೇಗನೆ ಪೂರ್ಣಗೊಂಡಿದೆ. ರೈತರು ಕಳೆದ ಬಾರಿ ೨ ಬೆಳೆಗಳನ್ನು ಬೆಳೆದಿದ್ದರು. ಈ ಬಾರಿ ಸಹ ನೀರನ್ನು ಮಿತವಾಗಿ ಬಳಸಿಕೊಂಡಲ್ಲಿ ೨ ಬೆಳೆಗಳನ್ನು ಬೆಳೆಯಲು ಸಾಧ್ಯ ಎಂದರು.
    ಸರ್ಕಾರ ಭದ್ರಾ ಮೇಲ್ದಂಡೆ ಯೋಜನೆ ಅನುಷ್ಠಾನಗೊಳಿಸುತ್ತಿರುವುದು ಒಳ್ಳೆಯ ಬೆಳವಣಿಗೆಯಾಗಿದ್ದು, ಇದಕ್ಕೆ ಯಾವುದೇ ವಿರೋಧವಿಲ್ಲ. ಆದರೆ ಇನ್ನೂ ಮುಖ್ಯ ಕಾಲುವೆಗಳ ಆಧುನೀಕರಣ ಪೂರ್ಣಗೊಂಡಿಲ್ಲ.  ಉಪಕಾಲುವೆಗಳನ್ನು ನಿರ್ಮಾಣ ಮಾಡಿಲ್ಲ. ಇದರಿಂದಾಗಿ ನೀರು ವ್ಯರ್ಥವಾಗುತ್ತಿದೆ. ಈ ಹಿನ್ನಲೆಯಲ್ಲಿ ಸರ್ಕಾರ ತಕ್ಷಣ ಗಮನ ಹರಿಸಿ ಹೊಸದಾಗಿ ಕ್ರಿಯಾಯೋಜನೆ ರೂಪುರೇಷೆ ಸಿದ್ದಗೊಳಿಸಬೇಕೆಂದು ಆಗ್ರಹಿಸಿದರು.
    ಪ್ರಸ್ತುತ ನೀರು ವ್ಯರ್ಥವಾಗುತ್ತಿರುವ ಹಿನ್ನಲೆಯಲ್ಲಿ ಜಲಾಶಯದ ಅಚ್ಚುಕಟ್ಟು ವ್ಯಾಪ್ತಿಯಲ್ಲಿನ ರೈತರು ಸಂಕಷ್ಟ ಎದುರಿಸುವಂತಾಗುತ್ತಿದೆ. ಈ ಹಿನ್ನಲೆಯಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ೧೨.೫ ಟಿ.ಎಂ.ಸಿ ನೀರನ್ನು ತುಂಗಾ ನದಿ ಜಲಾಶಯದಿಂದಿ ಬಳಸಿಕೊಳ್ಳಲು ಹೊಸದಾಗಿ ಕ್ರಿಯಾಯೋಜನೆ ಸಿದ್ದಪಡಿಸಬೇಕೆಂದು ಒತ್ತಾಯಿಸಿದರು.
    ಚಂದ್ರಪ್ಪ, ಈಶಣ್ಣ, ಇ.ಬಿ ಜಗದೀಶ್, ಎಸ್. ಶಿವಮೂರ್ತಿ, ರಾಘವೇಂದ್ರ, ಎಂ. ಮಹೇಶ್ವರಪ್ಪ, ನಾಗರಾಜ್, ಸಿ. ಚಂದ್ರಪ್ಪ ಮತ್ತು ಪಂಚಾಕ್ಷರಿ ಸೇರಿದಂತೆ ಇನ್ನಿತರ ರೈತ ಮುಖಂಡರು, ರೈತರು ಸೇರಿದಂತೆ ವಿವಿದ ಸಂಘ-ಸಂಸ್ಥೆಗಳ ಪ್ರಮುಖರು, ಮಹಿಳೆಯರು, ಮಕ್ಕಳು ಪಾಲ್ಗೊಂಡಿದ್ದರು.


ನಗರಸಭೆ ಮಾಜಿ ಉಪಾಧ್ಯಕ್ಷೆ ಕೆ.ಬಿ ಶ್ರೀಲಕ್ಷ್ಮಿಗೆ ಪುತ್ರ ವಿಯೋಗ

ಬಿ.ಕೆ ಅನಿಲ್‌ಕುಮಾರ್  
ಭದ್ರಾವತಿ, ಜು. ೨೬ : ನಗರಸಭೆ ಮಾಜಿ ಉಪಾಧ್ಯಕ್ಷೆ ಕೆ.ಬಿ ಶ್ರೀಲಕ್ಷ್ಮಿ ಅವರ ಪುತ್ರ ಬೊಮ್ಮನಕಟ್ಟೆ ನಿವಾಸಿ ಬಿ.ಕೆ ಅನಿಲ್‌ಕುಮಾರ್(೫೧) ಮಂಗಳವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನ ಹೊಂದಿದರು.
ಎಂಪಿಎಂ ಕಾರ್ಮಿಕ ಮುಖಂಡ, ತಂದೆ ಬಿ.ಎನ್ ಕೃಷ್ಣಮೂರ್ತಿ, ತಾಯಿ ಕೆ.ಬಿ ಶ್ರೀಲಕ್ಷ್ಮಿ, ಪತ್ನಿ, ಇಬ್ಬರು ಪುತ್ರಿಯರು ಇದ್ದರು. ಮೃತರ ನಿಧನಕ್ಕೆ ನಗರಸಭೆ ಅಧ್ಯಕ್ಷೆ ಗೀತಾರಾಜ್‌ಕುಮಾರ್, ಉಪಾಧ್ಯಕ್ಷ ಚನ್ನಪ್ಪ, ಸದಸ್ಯ ಬಿ.ಕೆ ಮೋಹನ್, ಮಾಜಿ ಸದಸ್ಯರಾದ ವೆಂಕಟಯ್ಯ, ರಾಜು, ಪುಟ್ಟೇಗೌಡ, ಕುರುಹಿನಶೆಟ್ಟಿ ಸಮಾಜ, ದೇವಾಂಗ ಸಮಾಜ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳು, ಗಣ್ಯರು ಸಂತಾಪ ಸೂಚಿಸಿದ್ದಾರೆ.


ಅಂಗಡಿ ಮುಂಗಟ್ಟುಗಳ ಮೇಲೆ ದಾಳಿ : ನಿಷೇಧಿತ ಪ್ಲಾಸ್ಟಿಕ್ ವಶ

ಭದ್ರಾವತಿ ನಗರಸಭೆ ವ್ಯಾಪ್ತಿಯಲ್ಲಿ ಅಂಗಡಿ ಮುಂಗಟ್ಟುಗಳ ಮೇಲೆ ದಾಳಿ ನಡೆಸಿ ನಿಷೇಧಿತ ಪ್ಲಾಸ್ಟಿಕ್ ವಶಪಡಿಸಿಕೊಂಡು ದಂಡ ವಿಧಿಸಿರುವ ಘಟನೆ ನಡೆದಿದೆ.
    ಭದ್ರಾವತಿ, ಜು. ೨೬: ನಗರಸಭೆ ವ್ಯಾಪ್ತಿಯಲ್ಲಿ ಅಂಗಡಿ ಮುಂಗಟ್ಟುಗಳ ಮೇಲೆ ದಾಳಿ ನಡೆಸಿ ನಿಷೇಧಿತ ಪ್ಲಾಸ್ಟಿಕ್ ವಶಪಡಿಸಿಕೊಂಡು ದಂಡ ವಿಧಿಸಿರುವ ಘಟನೆ ನಡೆದಿದೆ.
    ಶಿವಮೊಗ್ಗ ಪರಿಸರ ಇಲಾಖೆ ಅಧಿಕಾರಿಗಳೊಂದಿಗೆ ಮಂಗಳವಾರ ನಗರದ ಸಿ.ಎನ್ ರಸ್ತೆ, ಭೂತನಗುಡಿ ವ್ಯಾಪ್ತಿಯಲ್ಲಿ ಅಂಗಡಿ ಮುಂಗಟ್ಟುಗಳ ಮೇಲೆ ದಾಳಿ ನಡೆಸಲಾಯಿತು.
    ನಗರಸಭೆ ಪರಿಸರ ಅಭಿಯಂತರ ಪ್ರಭಾಕರ್, ಹಿರಿಯ ಆರೋಗ್ಯ ನಿರೀಕ್ಷಕರಾದ ಆರ್.ಬಿ ಸತೀಶ್, ಆಶಾಲತಾ ಸೇರಿದಂತೆ ಇನ್ನಿತರರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಸರ್ಕಾರ ಜು.೧ರಿಂದ ರಾಜ್ಯಾದ್ಯಂತ ಪ್ಲಾಸ್ಟಿಕ್ ಸಂಪೂರ್ಣವಾಗಿ ನಿಷೇಧಿಸಿ ಆದೇಶ ಹೊರಡಿಸಿದ್ದು, ನಗರಸಭೆ ಅಧಿಕಾರಿಗಳು ಪ್ರತಿದಿನ ದಾಳಿ ಕಾರ್ಯಾಚರಣೆ ಕೈಗೊಳ್ಳುತ್ತಿದ್ದಾರೆ. ಆದರೂ ಸಹ ಪ್ಲಾಸ್ಟಿಕ್ ಬಳಕೆ ಮುಂದುವರೆದಿದೆ.

ಸೋಮವಾರ, ಜುಲೈ 25, 2022

ಜು.೨೬ರಂದು ವಿದ್ಯುತ್ ವ್ಯತ್ಯಯ

    ಭದ್ರಾವತಿ, ಜು. ೨೫: ಮೆಸ್ಕಾಂ ನಗರ ಉಪವಿಭಾಗ ಘಟಕ-೨ರ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ಜು.೨೬ರಂದು ಬೆಳಿಗ್ಗೆ ೯ ಗಂಟೆಯಿಂದ ಸಂಜೆ ೬.೩೦ರ ವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
    ಹಳೇನಗರ, ಬಸವೇಶ್ವರ ವೃತ್ತ, ಖಾಜಿ ಮೊಹಲ್ಲಾ, ಭೂತನಗುಡಿ, ನಗರಸಭೆ ಕಛೇರಿ ಸುತ್ತಮುತ್ತಲ ಪ್ರದೇಶ, ಸಿ.ಎನ್ ರಸ್ತೆ, ಗಾಂಧಿನಗರ, ಕೋಡಿಹಳ್ಳಿ, ಮಾಧವಚಾರ್ ವೃತ್ತ, ಸರ್ಕಾರಿ ಅಸ್ಪತ್ರೆ, ಮಾಧವ ನಗರ, ಗೌರಾಪುರ, ಎನ್.ಎಸ್.ಟಿ ರಸ್ತೆ ಸೇರಿದಂತೆ ಇತ್ಯಾದಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ನಗರ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಕೋರಿದ್ದಾರೆ.

ಸಮಾಜದ ಅಭಿವೃದ್ಧಿಯಲ್ಲಿ ಪತ್ರಕರ್ತರ ಪಾತ್ರ ಪ್ರಮುಖ : ಬಿ.ಕೆ ಸಂಗಮೇಶ್ವರ್

ಭದ್ರಾವತಿ ನ್ಯೂಟೌನ್ ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಐ.ಕ್ಯೂ.ಎ.ಸಿ ಅಡಿಯಲ್ಲಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ತಾಲೂಕು ಶಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾ ದಿನಾಚರಣೆಯಲ್ಲಿ ಹಿರಿಯ ಪತ್ರಕರ್ತ ಶೈಲೇಶ್ ಕೋಠಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
    ಭದ್ರಾವತಿ, ಜು. ೨೫: ಸಮಾಜವನ್ನು ಎಚ್ಚರಿಸುವ ಕೆಲಸ ಪತ್ರಕರ್ತರು ಮಾಡುತ್ತಿದ್ದು, ಅಲ್ಲದೆ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆಂದು ಶಾಸಕ ಬಿ.ಕೆ ಸಂಗಮೇಶ್ವರ್ ಹೇಳಿದರು.
    ಅವರು ಸೋಮವಾರ ನಗರದ ನ್ಯೂಟೌನ್ ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಐ.ಕ್ಯೂ.ಎ.ಸಿ ಅಡಿಯಲ್ಲಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ತಾಲೂಕು ಶಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
    ೪ನೇ ಅಂಗವಾಗಿ ಗುರುತಿಸಿಕೊಂಡಿರುವ ಪತ್ರಿಕಾರಂಗ ತನ್ನದೇ ಆದ ಮೌಲ್ಯಗಳನ್ನು ಹೊಂದುವ ಜೊತೆಗೆ ಸಮಾಜದಲ್ಲಿನ ಅಂಕು ಡೊಂಕುಗಳನ್ನು ತಿದ್ದುವಲ್ಲಿ ಇಂದಿಗೂ ಬದ್ದತೆ ಕಾಯ್ದುಕೊಂಡು ಬಂದಿದೆ ಎಂದರು.
    ಸಂಘದ ಜಿಲ್ಲಾಧ್ಯಕ್ಷ ಕೆ.ವಿ ಶಿವಕುಮಾರ್ ಮಾತನಾಡಿ, ದೇಶದಲ್ಲಿ ಮುದ್ರಣ ಮಾದ್ಯಮದ ಕೊಡುಗೆ ಅಪಾರವಾಗಿದೆ. ಪ್ರಸ್ತುತ ದೃಶ್ಯ ಮಾಧ್ಯಮ ಹಾಗು ಸಾಮಾಜಿಕ ಜಾಲತಾಣಗಳ ಪೈಪೋಟಿ ನಡುವೆಯೂ ಮುದ್ರಣ ಮಾದ್ಯಮ ತನ್ನ ತನವನ್ನು ಉಳಿಸಿಕೊಂಡು ಮುನ್ನಡೆಯುತ್ತಿದೆ. ಇಂದಿನ ಯುವ ಪೀಳಿಗೆ ಸಾಮಾಜಿಕ ಜಾಲತಾಣಗಳಲ್ಲಿ ಅನಗತ್ಯವಾಗಿ ಕಾಲ ಕಳೆಯುವ ಬದಲು ಪತ್ರಿಕೆಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕೆಂದು ಕರೆ ನೀಡಿದರು.
    ಕಾಲೇಜಿನ ಪ್ರಾಂಶುಪಾಲ ಡಾ. ಧನಂಜಯ ಅಧ್ಯಕ್ಷತೆ ವಹಿಸಿದ್ದರು. ಸಂಘದ ತಾಲೂಕು ಅಧ್ಯಕ್ಷ ಕೆ.ಎನ್ ಶ್ರೀಹರ್ಷ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಹಿರಿಯ ಪತ್ರಕರ್ತ ಶೈಲೇಶ್ ಕೋಠಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
    ಜಿಲ್ಲಾ ಉಪಾಧ್ಯಕ್ಷ ಆರ್.ಎಸ್ ಹಾಲಸ್ವಾಮಿ, ಪತ್ರಿಕಾಭವನ ಟ್ರಸ್ಟ್ ಅಧ್ಯಕ್ಷ ಕಣ್ಣಪ್ಪ, ಉಪನ್ಯಾಸಕ ಮಹಮದ್ ನಜೀಬ್, ಉದ್ಯಮಿ ಬಿ.ಕೆ ಜಗನ್ನಾಥ್, ಎಸ್.ಎಸ್ ಭೈರಪ್ಪ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
    ಪತ್ರಿಕಾ ದಿನಾಚರಣೆ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು. ಸ್ಪರ್ಧೆಯಲ್ಲಿ ಸುಮಾರು ೪೦ ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿದ್ಯಾರ್ಥಿಗಳಾದ ತೋಹಿದ್ ಅಹಮದ್ ಭಾಷಣ, ಐಶ್ವಯ್ಯ ವೀಣಾವಾದನ ಮತ್ತು ಮಂಜುನಾಥ ಕಮಲಕರ್ ನಾಯ್ಕ ಗೀತಾ ಗಾಯನ ನಡೆಸಿಕೊಟ್ಟರು.
    ಸಂಘದ ಪ್ರಧಾನ ಕಾರ್ಯದರ್ಶಿ ಬಸವರಾಜ ಸ್ವಾಗತಿಸಿದರು. ಸಹಾಯಕ ಪ್ರಾಧ್ಯಾಪಕರಾದ ಡಾ. ವರದರಾಜ ಮತ್ತು ಗುರುಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು. ಖಜಾಂಚಿ ಅನಂತಕುಮಾರ್ ವಂದಿಸಿದರು. ಪತ್ರಕರ್ತರು, ಕಾಲೇಜಿನ ಅಧ್ಯಾಪಕ, ಅಧ್ಯಾಪಕೇತರ ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಗ್ರಾಮಠಾಣಾ ಜಾಗ ನಿಯಮಬಾಹಿರವಾಗಿ ಖಾಸಗಿ ವ್ಯಕ್ತಿಗಳಿಗೆ ಹಂಚಿಕೆ : ಅಭಿವೃದ್ಧಿ ಅಧಿಕಾರಿ ಕೆ. ಮಧುಸೂಧನ್ ಅಮಾನತ್ತು

ಕೆ. ಮಧುಸೂಧನ್
    ಭದ್ರಾವತಿ, ಜು. ೨೫ : ತಾಲೂಕಿನ ಹಿರಿಯೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳೇ ಹಿರಿಯೂರು ಗ್ರಾಮದ ಗ್ರಾಮಠಾಣಾ ಜಾಗವನ್ನು ನಿಯಮಬಾಹಿರವಾಗಿ ಖಾಸಗಿ ವ್ಯಕ್ತಿಗಳಿಗೆ ಹಂಚಿಕೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅಭಿವೃದ್ಧಿ ಅಧಿಕಾರಿ ಕೆ. ಮಧುಸೂಧನ್ ಅವರನ್ನು ಸೇವೆಯಿಂದ ಅಮಾನತ್ತುಗೊಳಿಸಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್ ವೈಶಾಲಿ ಆದೇಶ ಹೊರಡಿಸಿದ್ದಾರೆ.
    ಪ್ರಸ್ತುತ ತಾಲೂಕಿನ ಸೈದರಕಲ್ಲಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾಗಿ ನಿಯೋಜನೆ ಮೇರೆಗೆ ಕರ್ತವ್ಯ ನಿರ್ವಹಿಸುತ್ತಿರುವ ಕೆ. ಮಧುಸೂಧನ್ ಹಿರಿಯೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾಗಿದ್ದ ಸಂದರ್ಭದಲ್ಲಿ ಹಳೇ ಹಿರಿಯೂರು ಗ್ರಾಮದ ಗ್ರಾಮ ಠಾಣಾ ಜಾಗವನ್ನು ನಿಯಮಬಾಹಿರವಾಗಿ ಒಟ್ಟು ೧೪ ಜನ ಖಾಸಗಿ ವ್ಯಕ್ತಿಗಳಿಗೆ ಸ್ವತ್ತಿನ ಸೃಜನೆ ಮಾಡಿ ಕೈ ಬರಹದಲ್ಲಿ ನಮೂನೆ ೯ ಮತ್ತು ೧೧ ಎಗಳನ್ನು ವಿತರಿಸಿ, ಖಾತೆಗಳಿಗೆ ಕಂದಾಯ ರಶೀದಿಗಳನ್ನು ನೀಡಿದ್ದರು. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ ೧೯೯೩ರ ಪ್ರಕರಣ ೨೦೦೯ ಮತ್ತು ೨೧೦ಗಳನ್ನು ಉಲ್ಲಂಘಿಸಿರುವ ಕುರಿತು ದೂರುಗಳು ಸಲ್ಲಿಕೆಯಾಗಿದ್ದವು. ಅಲ್ಲದೆ ಈ ಸಂಬಂಧ ಕರ್ನಾಟಕ ದಲಿತ ಸಂಘರ್ಷ ಸಮಿತಿ ನಿರಂತರವಾಗಿ ಹೋರಾಟ ನಡೆಸಿಕೊಂಡು ಬಂದಿತ್ತು.
    ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಮೇಶ್‌ರವರು ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್ ವೈಶಾಲಿ ಅವರಿಗೆ ಪರಿಶೀಲನಾ ವರದಿ ಸಲ್ಲಿಸಿದ್ದರು.

ಭಾನುವಾರ, ಜುಲೈ 24, 2022

ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷರಾಗಿ ಬಿ. ಸಿದ್ದಬಸಪ್ಪ

ಭದ್ರಾವತಿ, ಜು. 25:  ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷರಾಗಿ ಹಳೇನಗರದ ಸಂಚಿಹೊನ್ನಮ್ಮಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನ ಸಹ ಶಿಕ್ಷಕ ಬಿ. ಸಿದ್ದಬಸಪ್ಪ ಆಯ್ಕೆಯಾಗಿದ್ದಾರೆ.
        ಸಿದ್ದಬಸಪ್ಪ ಅವರು ಪ್ರಸ್ತುತ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷರಾಗಿದ್ದು, ಅಲ್ಲದೆ 2 ಬಾರಿ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
      ಸಂಘಟನಾ ಚತುರರಾಗಿರುವ ಸಿದ್ದಬಸಪ್ಪ ಇದೀಗ ಕಡಿಮೆ ಅವಧಿಯಲ್ಲಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗುವ ಮೂಲಕ ಸಾಧನೆ ಮೆರೆದಿದ್ದಾರೆ. 
       ಇವರಿಗೆ  ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ವಿಶ್ವೇಶ್ವರಾಯ ವಿದ್ಯಾಸಂಸ್ಥೆ, ತಾಲೂಕಿನ ಸಮಸ್ತ ಸರ್ಕಾರಿ ನೌಕರರು, ಶಿಕ್ಷಕ ವೃಂದದವರು, ಗಣ್ಯರು ಅಭಿನಂದಿಸಿದ್ದಾರೆ.

ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಎಟಿಎಲ್ ಲ್ಯಾಬ್ ಉದ್ಘಾಟನೆ


ಭದ್ರಾವತಿ ತಾಲೂಕಿನ ದೇವರನರಸೀಪುರ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನೂತನವಾಗಿ ಅಟಲ್ ಟಿಂಕರಿಂಗ್ ಲ್ಯಾಬ್ ಉದ್ಘಾಟಿಸಲಾಯಿತು.
    ಭದ್ರಾವತಿ, ಜು. ೨೪: ತಾಲೂಕಿನ ದೇವರನರಸೀಪುರ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನೂತನವಾಗಿ ಅಟಲ್ ಟಿಂಕರಿಂಗ್ ಲ್ಯಾಬ್ ಉದ್ಘಾಟಿಸಲಾಯಿತು.
    ಆಟ-ಪಾಠದ ಜೊತೆಯಲ್ಲಿ ನವೀನ ಕೌಶಲ್ಯ, ವೈಜ್ಞಾಜಿಕ ತಂತ್ರಜ್ಞಾನ, ಉದ್ಯೋಗ ಸೃಷ್ಟಿ, ನೂತನ ಅವಿಷ್ಕಾರದ ಜೊತೆ ವೈಜ್ಞಾನಿಕ ಮನೋಭಾವ ಬೆಳವಣಿಗೆಯ ಮೂಲಕ ನವೀನ ಭಾರತ ನಿರ್ಮಾಣಕ್ಕಾಗಿ ಎಟಿಎಲ್ ಲ್ಯಾಬ್ ಸಹಕಾರಿ ಆಗಿವೆ.
    ಎರೇಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ವೇತಾ ಮತ್ತು ಅಂತರಗಂಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕವಿತಾ ಲ್ಯಾಬ್ ಉದ್ಘಾಟಿಸಿದರು. ವಸತಿ ಶಾಲೆಯ ಪ್ರಾಂಶುಪಾಲ ಬಿ. ಬಸವರಾಜಪ್ಪ ಅಧ್ಯಕ್ಷತೆ ವಹಿಸಿದ್ದರು.
    ಅಂತರಗಂಗೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಶೋಭಾ, ಸದಸ್ಯರಾದ ನಾಗೇಶ್, ರವಿ, ಆನಂದ್, ಕರ್ನಾಟಕ ಪಬ್ಲಿಕ್ ಶಾಲೆಯ ಮುಖ್ಯೋಪಾಧ್ಯಾಯರು, ದೇವರನರಸೀಪುರ ಗ್ರಾಮ ಪಂಚಾಯಿತಿ ಸದಸ್ಯರು, ವಸತಿ ಶಾಲೆಯ ಶಿಕ್ಷಕ, ಸಿಬ್ಬಂದಿ ವರ್ಗದವರು, ಪೋಷಕರು ಉಪಸ್ಥಿತರಿದ್ದರು. ಸಹ ಶಿಕ್ಷಕರಾದ ಬಿಂದು ನಿರೂಪಿಸಿದರು. ಕೆ. ರಂಗನಾಥ್ ಸ್ವಾಗತಿಸಿ ಕೃಷ್ಣಪ್ರಸಾದ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ನಿಲಯಪಾಲಕ ಶಿವಕುಮಾರ್ ವಂದಿಸಿದರು.

ಅಸಂಘಟಿತ ಕಾರ್ಮಿಕರು ಸರ್ಕಾರದ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಿ : ಕೆ.ಎನ್ ಶ್ರೀಹರ್ಷ

ಭಾರತೀಯ ಮಜ್ದೂರ್ ಸಂಘ, ಶಿವಮೊಗ್ಗ ಮತ್ತು ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರು ಸಂಘದ ವತಿಯಿಂದ ಭದ್ರಾವತಿಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಹಾಗು ಗುರುತಿನ ಚೀಟಿ ವಿತರಣೆ ಕಾರ್ಯಕ್ರಮದಲ್ಲಿ ಹಮ್ಮಿಕೊಳ್ಳಲಾಗಿತ್ತು.
    ಭದ್ರಾವತಿ, ಜು. ೨೪: ಅಸಂಘಟಿತ ಕಾರ್ಮಿಕರು ಸರ್ಕಾರದ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ಎನ್ ಶ್ರೀಹರ್ಷ ಹೇಳಿದರು.
    ಅವರು ಭಾನುವಾರ ಭಾರತೀಯ ಮಜ್ದೂರ್ ಸಂಘ, ಶಿವಮೊಗ್ಗ ಮತ್ತು ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರು ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ನೂತನ ಪದಾಧಿಕಾರಿಗಳ ಆಯ್ಕೆ ಹಾಗು ಗುರುತಿನ ಚೀಟಿ ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
    ದೇಶದಲ್ಲಿ ಶ್ರಮ ಜೀವಿಗಳಾದ ಅಸಂಘಟಿತ ಕಾರ್ಮಿಕರು ಕೊನೆಯವರೆಗೂ ಬಡತನದಲ್ಲಿಯೇ ಬದುಕು ಸಾಗಿಸುವಂತಾಗಿದೆ. ಪ್ರಸ್ತುತ ಸರ್ಕಾರ ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಕೋಟ್ಯಾಂತರ ರು. ಹಣ ಮೀಸಲಿಡುತ್ತಿದೆ. ಈ ಹಿನ್ನಲೆಯಲ್ಲಿ ಕಾರ್ಮಿಕರು ಸರ್ಕಾರದಿಂದ ಕಡ್ಡಾಯವಾಗಿ ಗುರುತಿನ ಪಡೆದುಕೊಳ್ಳಬೇಕು. ಆ ಮೂಲಕ ಸರ್ಕಾರದ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದರು.
    ಭಾರತೀಯ ಮಜ್ದೂರು ಸಂಘದ ಎಚ್.ಎಲ್ ವಿಶ್ವನಾಥ್ ಮಾತನಾಡಿ,  ಅಸಂಘಟಿತ ಕಾರ್ಮಿಕರು ಕೇವಲ ಸರ್ಕಾರದ ಸೌಲಭ್ಯಗಳನ್ನು ಪಡೆಯುವ ಉದ್ದೇಶದಿಂದ ಸಂಘಟಿತರಾಗಬಾರದು. ನಾವು ಮಾಡುವ ಕೆಲಸ ದೇಶಕ್ಕಾಗಿ ಎಂಬ ಅಭಿಮಾನದ ಮೇಲೆ ಸಂಘಟಿತರಾಗುವ ಮೂಲಕ ದೇಶ ಸೇವೆಗೂ ಸಿದ್ದ ಎಂಬುದನ್ನು ಎತ್ತಿ ಹಿಡಿಯಬೇಕೆಂದರು.
    ನೂತನ ಪದಾಧಿಕಾರಿಗಳು :
    ಭಾರತೀಯ ಮಜ್ದೂರು ಸಂಘ ತಾಲೂಕು ಶಾಖೆಯ ನೂತನ ಅಧ್ಯಕ್ಷರಾಗಿ ಮಂಜುನಾಥ್, ಉಪಾಧ್ಯಕ್ಷರಾಗಿ ರಘು, ಪ್ರಧಾನ ಕಾರ್ಯದರ್ಶಿಯಾಗಿ ಪಚ್ಚಪ್ಪ, ಖಜಾಂಚಿಯಾಗಿ ಫ್ಯಾಟ್ರಿಕ್, ಕಾರ್ಯದರ್ಶಿಯಾಗಿ ಪ್ರವೀಣ್‌ಕುಮಾರ್, ಸಂಘಟನಾ ಕಾರ್ಯದರ್ಶಿಗಳಾಗಿ ರಂಗಸ್ವಾಮಿ ಮತ್ತು ಡಿ. ಜೈರಾಮು ಆಯ್ಕೆಯಾದರು.
    ಕಾರ್ಯಕ್ರಮದಲ್ಲಿ ಅಸಂಘಟಿತ ಕಾರ್ಮಿಕರಿಗೆ ಗುರುತಿನ ಚೀಟಿಗಳನ್ನು ವಿತರಿಸಲಾಯಿತು. ವೇದಿಕೆಯಲ್ಲಿ ಮಂಜುನಾಥ್, ಪಚ್ಚಪ್ಪ, ಫ್ಯಾಟ್ರಿಕ್, ರಘು ಮತ್ತು ರಾಜು ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಜಗದೀಶ್ ನಿರೂಪಿಸಿದರು.

ಜೆಡಿಎಸ್ ಯುವಘಟಕದ ಜಿಲ್ಲಾಧ್ಯಕ್ಷರ ಹುಟ್ಟುಹಬ್ಬ : ರೋಗಿಗಳಿಗೆ ಬ್ರೆಡ್, ಹಣ್ಣು ವಿತರಣೆ

ಜಾತ್ಯತೀತ ಜನತಾದಳ ಯುವ ಘಟಕದ ಜಿಲ್ಲಾಧ್ಯಕ್ಷ ಮಧುಕುಮಾರ್ ಅವರ ಹುಟ್ಟುಹಬ್ಬದ ಅಂಗವಾಗಿ ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಬ್ರೆಡ್ ಮತ್ತು ಹಣ್ಣು ವಿತರಿಸಲಾಯಿತು.
    ಭದ್ರಾವತಿ, ಜು. ೨೪ : ಜಾತ್ಯತೀತ ಜನತಾದಳ ಯುವ ಘಟಕದ ಜಿಲ್ಲಾಧ್ಯಕ್ಷ ಮಧುಕುಮಾರ್ ಅವರ ಹುಟ್ಟುಹಬ್ಬದ ಅಂಗವಾಗಿ ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಬ್ರೆಡ್ ಮತ್ತು ಹಣ್ಣು ವಿತರಿಸಲಾಯಿತು.
    ಹಿರಿಯ ನಾಗರೀಕರ ಆರೈಕೆ ಕೇಂದ್ರದ ವೃದ್ಧರಿಗೆ ಹಾಗು ನ್ಯೂಟೌನ್ ಸಿದ್ದಾರ್ಥ ಅಂಧರ ಕೇಂದ್ರದ ವಿಕಲಚೇತನರಿಗೆ ಬಟ್ಟೆ ವಿತರಿಸಲಾಯಿತು. ರೋಟರಿ ಕ್ಲಬ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವನ್ನು ಜೆಡಿಎಸ್ ಮುಖಂಡರಾದ ಶಾರದ ಅಪ್ಪಾಜಿ ಉದ್ಘಾಟಿಸಿದರು.
    ಮಧುಕುಮಾರ್ ಅವರ ತಾಯಿ, ನಗರಸಭಾ ಸದಸ್ಯೆ ವಿಜಯ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಮಣಿಶೇಖರ್, ಜೆಡಿಎಸ್ ತಾಲೂಕು ಅಧ್ಯಕ್ಷ ಆರ್. ಕರುಣಾಮೂರ್ತಿ, ಮುಖಂಡರಾದ ಡಿ.ಟಿ ಶ್ರೀಧರ್. ಎನ್. ರಾಮಕೃಷ್ಣ, ಉಮೇಶ್ ಸುರಗಿತೋಪು ಸೇರಿದಂತೆ ಜೆಡಿಎಸ್ ಪಕ್ಷದ ಪ್ರಮುಖರು, ಕಾರ್ಯಕರ್ತರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ನಿವೃತ್ತ ಎಎಸ್‌ಐ ಟಿ. ದೇವದಾಸ್ ನಿಧನ

ಟಿ. ದೇವದಾಸ್
    ಭದ್ರಾವತಿ, ಜು. ೨೪: ನಗರಸಭೆ ವ್ಯಾಪ್ತಿಯ ಉಜ್ಜನಿಪುರ ನಿವಾಸಿ, ನಿವೃತ್ತ ಎಎಸ್‌ಐ ಟಿ. ದೇವದಾಸ್(೬೭) ಭಾನುವಾರ ಬೆಳಿಗ್ಗೆ ನಿಧನ ಹೊಂದಿದರು.
    ಪತ್ನಿ, ಓರ್ವ ಪುತ್ರ ಹಾಗು ನಾಲ್ವರು ಪುತ್ರಿಯರು ಇದ್ದರು. ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ್ದರು. ತೆಲುಗು ಕ್ರಿಶ್ಚಿಯನ್ ಅಸೋಸಿಯೇಷನ್ ಗೌರವಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು.
    ಮೃತರ ಅಂತ್ಯಕ್ರಿಯೆ ಸಂಜೆ ನಗರದ ಬೈಪಾಸ್ ರಸ್ತೆ ಮಿಲ್ಟ್ರಿಕ್ಯಾಂಪ್ ಸಮೀಪದ ಪ್ರೊಟೆಸ್ಟೆಂಟ್ ಕ್ರೈಸ್ತ ಸಮಾಧಿಯಲ್ಲಿ ನೆರವೇರಿತು. ನಗರದ ವಿವಿಧ ಕ್ರೈಸ್ತ ಸಂಘಟನೆಗಳ ಪ್ರಮುಖರು, ಗಣ್ಯರು ಸಂತಾಪ ಸೂಚಿಸಿದ್ದಾರೆ.

ಶನಿವಾರ, ಜುಲೈ 23, 2022

ಕುರುಬರ ಸಂಘಕ್ಕೆ ನೂತನ ನಿರ್ದೇಶಕರು ಆಯ್ಕೆ

ಭದ್ರಾವತಿ ತಾಲೂಕು ಕುರುಬರ ಸಂಘಕ್ಕೆ ನಡೆದ ಚುನಾವಣೆಯಲ್ಲಿ ನೂತನ ನಿರ್ದೇಶಕರು ಆಯ್ಕೆಯಾಗಿದ್ದು, ನಗರದ ವಿವಿಧ ಗಣ್ಯರು ನಿರ್ದೇಶಕರನ್ನು ಅಭಿನಂದಿಸಿದರು.
    ಭದ್ರಾವತಿ, ಜು. ೨೩: ತಾಲೂಕು ಕುರುಬರ ಸಂಘಕ್ಕೆ ನಡೆದ ಚುನಾವಣೆಯಲ್ಲಿ ನೂತನ ನಿರ್ದೇಶಕರು ಆಯ್ಕೆಯಾಗಿದ್ದು, ನಗರದ ವಿವಿಧ ಗಣ್ಯರು ನಿರ್ದೇಶಕರನ್ನು ಅಭಿನಂದಿಸಿದರು.
    ಜೆ. ಕುಮಾರ್, ಕೆ. ಕೇಶವ, ಕೆ.ಎನ್ ನಾಗರಾಜು, ಎಲ್. ಪ್ರವೀಣ್, ಬಿ.ಎಸ್ ಮಂಜುನಾಥ್, ಬಿ.ಎ ರಾಜೇಶ್, ಕೆ. ಲೋಕೇಶ್, ಬಿ.ಎಚ್ ವಸಂತ, ಜಿ. ವಿನೋದ್‌ಕುಮಾರ್, ಸಣ್ಣಯ್ಯ, ಎನ್. ಸತೀಶ್, ಬಿ.ಎಂ ಸಂತೋಷ್, ಬಿ.ಎಸ್ ನಾರಾಯಣಪ್ಪ, ಹೇಮಾವತಿ ಶಿವಾನಂದ್ ಮತ್ತು ಜೆ. ಮಂಜುನಾಥ್ ಒಟ್ಟು ೧೫ ನಿರ್ದೇಶಕರು ಆಯ್ಕೆಯಾಗಿದ್ದಾರೆ.
    ನೂತನ ನಿರ್ದೇಶಕರನ್ನು ಬಿಜೆಪಿ ಪಕ್ಷದ ಮುಖಂಡರಾದ ಮಂಗೋಟೆ ರುದ್ರೇಶ್, ಜಿ. ಆನಂದಕುಮಾರ್ ಸೇರಿದಂತೆ ಇನ್ನಿತರರು ಅಭಿನಂದಿಸಿದರು.

ವಿಜೃಂಭಣೆಯಿಂದ ಜರುಗಿದ ಆಡಿ ಕೃತಿಕ ಕಾವಡಿ ಜಾತ್ರಾ ಮಹೋತ್ಸವ

ಗಮನ ಸೆಳೆದ ಕಾವಡಿ ಹರಕೆ ಹೊತ್ತ ಭಕ್ತರು

ಭದ್ರಾವತಿ ಸಮೀಪದ ಶ್ರೀ ಕ್ಷೇತ್ರ ಭದ್ರಗಿರಿ ಶ್ರೀ ಶಿವ ಸುಬ್ರಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ಆಡಿ ಕೃತಿಕ ಕಾವಡಿ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು. ಕಾವಡಿ ಹರಕೆ ಹೊತ್ತ ಭಕ್ತರು ಕಾಲ್ನಡಿಗೆಯಲ್ಲಿ ಆಗಮಿಸಿ ಹರಕೆ ಸಮರ್ಪಿಸಿದರು. 
    ಭದ್ರಾವತಿ, ಜು. ೨೫: ಇಲ್ಲಿಗೆ ಸಮೀಪದ ಶ್ರೀ ಕ್ಷೇತ್ರ ಭದ್ರಗಿರಿ ಶ್ರೀ ಶಿವ ಸುಬ್ರಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ಆಡಿ ಕೃತಿಕ ಕಾವಡಿ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು. 
ಜು.೧೭ರಂದು ಧ್ವಜಾರೋಹಣದೊಂದಿಗೆ ಆರಂಭಗೊಂಡ ಜಾತ್ರಾ ಮಹೋತ್ಸವ ಶನಿವಾರ ಅಂತ್ಯಗೊಂಡಿತು. ಬೆಳಿಗ್ಗೆ ವಿಶ್ವರೂಪ ದರ್ಶನ, ಅಭಿಷೇಕ, ಉತ್ಸವ ಪೂಜೆ ಹಾಗು ಮಧ್ಯಾಹ್ನ ಕಾವಡಿ ಹರಕೆ ಸಮರ್ಪಣೆ, ಮಹಾಪೂಜೆ, ಅನ್ನಸಂತರ್ಪಣೆ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು. 
ಮೂಲ ವಿಗ್ರಹ ಶ್ರೀ ಶಿವ ಸುಬ್ರಮಣ್ಯ ಸ್ವಾಮಿ ಸೇರಿದಂತೆ ದೇವಸ್ಥಾನದಲ್ಲಿರುವ ಎಲ್ಲಾ ವಿಗ್ರಹಗಳಿಗೆ ವಿಶೇಷ ಅಲಂಕಾರ ಕೈಗೊಳ್ಳಲಾಗಿತ್ತು. ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಿಂದ ಕಾವಡಿ ಹರಕೆ ಹೊತ್ತ ಭಕ್ತರು ಕಾಲ್ನಡಿಗೆಯಲ್ಲಿ ಹರೋ ಹರ ಘೋಷಣೆಗಳೊಂದಿಗೆ ಆಗಮಿಸಿ ಹರಕೆ ತೀರಿಸುವ ಮೂಲಕ ಭಕ್ತಿ ಮೆರದರು. 
ರಾಜ್ಯದ ವಿವಿಧೆಡೆಗಳಿಂದ ಮಾತ್ರವಲ್ಲದೆ ಹೊರ ರಾಜ್ಯಗಳಿಂದಲೂ ಭಕ್ತರು ಆಗಮಿಸಿದ್ದರು. ದೇವಸ್ಥಾನದ ಶ್ರೀ ಮುರುಗೇಶ್ ಸ್ವಾಮೀಜಿ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳು ಜರುಗಿದವು. ದೇವಸ್ಥಾನ ಸಮಿತಿಯ ಪ್ರಮುಖರು,  ಶ್ರೀ ಶಿವಸುಬ್ರಮಣ್ಯ ಸ್ವಾಮಿ ಆಶ್ರಮದ ಸೇವಾಕರ್ತರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 
ಶಿವಮೊಗ್ಗ ಗುಡ್ಡೇಕಲ್ ಶ್ರೀ ಬಾಲಸುಬ್ರಮಣ್ಯ ಸ್ವಾಮಿ ದೇವಸ್ಥಾನಕ್ಕೆ ಕಾಲ್ನಡಿಗೆ : 
ನಗರದ ನ್ಯೂಟೌನ್ ಆಂಜನೇಯ ಅಗ್ರಹಾರದಲ್ಲಿರುವ ಶ್ರೀ ಸುಬ್ರಮಣ್ಯ ಸ್ವಾಮಿ ದೇವಸ್ಥಾನದಿಂದ ಶಿವಮೊಗ್ಗ ಗುಡ್ಡೇಕಲ್ ಶ್ರೀ ಬಾಲಸುಬ್ರಮಣ್ಯ ಸ್ವಾಮಿ ದೇವಸ್ಥಾನಕ್ಕೆ ಹರಕೆ ಹೊತ್ತ ಭಕ್ತರು ಶುಕ್ರವಾರ ಸಂಜೆ ಕಾಲ್ನಡಿಗೆ ಸಾಗಿದರು. ಶನಿವಾರ ಬೆಳಿಗ್ಗೆ ಹರಕೆ ಸಮರ್ಪಿಸಿದರು. ಪ್ರತಿವರ್ಷ ಕಾಲ್ನಡಿಗೆ ಮೂಲಕ ದೇವಸ್ಥಾನಕ್ಕೆ ಸಾಗುವುದು ವಾಡಿಕೆಯಾಗಿದೆ. 


ಭದ್ರಾವತಿ ನ್ಯೂಟೌನ್ ಆಂಜನೇಯ ಅಗ್ರಹಾರದಲ್ಲಿರುವ ಶ್ರೀ ಸುಬ್ರಮಣ್ಯ ಸ್ವಾಮಿ ದೇವಸ್ಥಾನದಿಂದ ಶಿವಮೊಗ್ಗ ಗುಡ್ಡೇಕಲ್ ಶ್ರೀ ಬಾಲಸುಬ್ರಮಣ್ಯ ಸ್ವಾಮಿ ದೇವಸ್ಥಾನಕ್ಕೆ ಹರಕೆ ಹೊತ್ತ ಭಕ್ತರು ಶುಕ್ರವಾರ ಸಂಜೆ ಕಾಲ್ನಡಿಗೆ ಸಾಗಿದರು

ಶಿಕ್ಷಕ, ಜಾನಪದ ಕಲಾವಿದ ರೇವಣಪ್ಪರಿಗೆ ಗೌರವ ಡಾಕ್ಟರೇಟ್

ಜು.೨೪ರಂದು ಊಟಿಯಲ್ಲಿ ನಡೆಯಲಿರುವ ಘಟಿಕೋತ್ಸವದಲ್ಲಿ ಪದವಿ ಪ್ರದಾನ

ಎಂ.ಆರ್ ರೇವಣಪ್ಪ 
    ಭದ್ರಾವತಿ, ಜು. ೨೩:  ತಾಲೂಕಿನ ಸುಲ್ತಾನ್‌ಮಟ್ಟಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ರಾಜ್ಯ ಪ್ರಶಸ್ತಿ ಶಿಕ್ಷಕ, ಜಾನಪದ ಕಲಾವಿದ ಎಂ.ಆರ್ ರೇವಣಪ್ಪ ಅವರಿಗೆ ಇಂಟರ್‌ನ್ಯಾಷನಲ್ ಪೀಸ್ ಯೂನಿವರ್ಸಿಟಿ(ಐಪಿಯು) ವಿಶ್ವ ವಿದ್ಯಾನಿಲಯ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಲಿದೆ.
    ರೇವಣಪ್ಪ ಅವರು ಶಿಕ್ಷಕ ವೃತ್ತಿಯೊಂದಿಗೆ ಜಾನಪದ ಸಾಹಿತ್ಯ, ರಂಗಭೂಮಿ ಕಲೆಯನ್ನು ಸಹ ಮೈಗೂಡಿಸಿಕೊಂಡಿದ್ದು, ರಾಷ್ಟ್ರ ಹಾಗು ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ಇವರ ಜೀವಮಾನ ಸಾಧನೆಯನ್ನು ಗುರುತಿಸಿ ಗೌರವ ಡಾಕ್ಟರೇಟ್ ಪದವಿ ನೀಡಲಾಗುತ್ತಿದೆ.


    ಜು.೨೪ರಂದು ಊಟಿಯಲ್ಲಿ ನಡೆಯುತ್ತಿರುವ ವಿಶ್ವವಿದ್ಯಾಲಯದ ಘಟಿಕೋತ್ಸವ ಸಮಾರಂಭದಲ್ಲಿ ರೇವಣಪ್ಪ ಅವರು ಪದವಿ ಸ್ವೀಕರಿಸಲಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ತಾಲೂಕು ಶಾಖೆ ಹಾಗು ಶಿವಮೊಗ್ಗ ಜಿಲ್ಲಾ ಜಾನಪದ ಕಲೆ ಹಾಗು ಸಾಹಿತ್ಯ ವೇದಿಕೆ, ಶಿಕ್ಷಕ ವೃಂದ ಮತ್ತು ಅಭಿಮಾನಿಗಳು ರೇವಣಪ್ಪ ಅವರ ಸಾಧನೆಗೆ ಅಭಿನಂದನೆ ಸಲ್ಲಿಸಿದ್ದಾರೆ.

ಜು.26ರಂದು ಮುಂಗಾರು ಜಾನಪದ ಸಂಭ್ರಮ


ಭದ್ರಾವತಿ, ಜು. 23:  ಕರ್ನಾಟಕ ಜಾನಪದ ಪರಿಷತ್ ವತಿಯಿಂದ  ಜು.26ರಂದು, ಮಧ್ಯಾಹ್ನ 3-30 ಕ್ಕೆ, ಹಳೇನಗರದ ಬಸವೇಶ್ವರ ವೃತ್ತದಲ್ಲಿರುವ ಮಹಿಳಾ ಸೇವಾ ಸಮಾಜದಲ್ಲಿ  ಜಾನಪದ ಗೀತೆಗಳ ವೃಂದಗಾನ ( ಕನಿಷ್ಠ 5ಜನರ ತಂಡ) ಸ್ಪರ್ಧೆಯನ್ನು ಆಯೋಜಿಸಲಾಗಿದೆ. 
     ಆಷಾಢ ಮಾಸ, ಮುಂಗಾರು ಹಾಗೂ ಕೃಷಿ ಚಟವಟಿಕೆಗಳಿಗೆ ಸಂಬಂಧಿತ ಜಾನಪದ ಗೀತೆಗಳನ್ನು ಆಯ್ದು ಕೊಳ್ಳ ಬೇಕಾಗಿರುತ್ತದೆ. 
    ಭಾಗವಹಿಸುವಂತಹ ಆಸಕ್ತರು ಜು.25 ರೊಳಗಾಗಿ ಮೋಹನ್. ಬಿ.ಎಲ್ ಮೊ: 9986241232, ಲತಾ ಎಲ್.ಕೆ, ಮೊ: 9449401402 ಮತ್ತು  ಹೇಮಾವತಿ ವಿಶ್ವನಾಥ್ ಮೊ: 9886859993 ಕರೆ ಮಾಡಿ ಹೆಸರು ನೊಂದಾಯಿಸಬಹುದಾಗಿದೆ ಎಂದು ಕರ್ನಾಟಕ ಜಾನಪದ ಪರಿಷತ್ ಅಧ್ಯಕ್ಷ ಕೋಡ್ಲು ಯಜ್ಞಯ್ಯ ತಿಳಿಸಿದ್ದಾರೆ. 

‎ ವಿಐಎಸ್ಎಲ್ ಕಾರ್ಖಾನೆಗೆ ಬಂಡವಾಳ : ಮುಖ್ಯಮಂತ್ರಿ ಭರವಸೆ

ಭದ್ರಾವತಿ, ಜು. 23: ಕೇಂದ್ರ ಉಕ್ಕುಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಗೆ ಅಗತ್ಯವಿರುವ ಬಂಡವಾಳ ಪ್ರಾಧಿಕಾರದ ಮೂಲಕ ತೊಡಗಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭರವಸೆ ನೀಡಿದ್ದಾರೆ.
 ಕಾರ್ಖಾನೆಯ ಕಾರ್ಮಿಕ ಸಂಘದ ನಿಯೋಗ ದೆಹಲಿಯಲ್ಲಿ ಸಂಸದ ಬಿ.ವೈ ರಾಘವೇಂದ್ರ ರವರ ನೇತೃತ್ವದಲ್ಲಿ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಲಾಯಿತು.
 ಮುಖ್ಯಮಂತ್ರಿಗಳು ಮನವಿಗೆ ಪೂರಕವಾಗಿ ಸ್ಪಂದಿಸಿ  ಭರವಸೆ ನೀಡಿದರು.  ಸಂಘದ ಅಧ್ಯಕ್ಷ ಜೆ. ಜಗದೀಶ್, ಪ್ರಧಾನ ಕಾರ್ಯದರ್ಶಿ ಬಸಂತ್ ಕುಮಾರ್, ಕಾರ್ಯದರ್ಶಿ ಮನು, ಖಜಾಂಚಿ ಮೋಹನ್ ಉಪಸ್ಥಿತರಿದ್ದರು. 

ಶುಕ್ರವಾರ, ಜುಲೈ 22, 2022

ಕೆರೆ ಕೋಡಿ ದುರಸ್ತಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಲು ಡಿ.ಎಸ್ ಅರುಣ್ ಗೆ ಮನವಿ

ಭದ್ರಾವತಿ: ನಗರಸಭೆ ವ್ಯಾಪ್ತಿಯ ತಮ್ಮಣ್ಣ ಕಾಲೋನಿ ಸಮೀಪದಲ್ಲಿರುವ ಸರ್ಕಾರಿ ಹಿರೇಕೆರೆ ಕೋಡಿ ಬಿದ್ದು ರಸ್ತೆ ಹಾಳಾಗಿದ್ದು ಸೂಕ್ತ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಇಲಾಖೆಗೆ ಒತ್ತಾಯಿಸಬೇಕೆಂದು ನಗರದ ಭಾರತ ರತ್ನ ಸರ್.ಎಂ ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್, ಶ್ರೀ ಡಿ. ದೇವರಾಜ ಅರಸು ಜನಸ್ಪಂದನ ವೇದಿಕೆ, ಸುವರ್ಣ ಮಹಿಳಾ ವೇದಿಕೆ ವತಿಯಿಂದ ವಿಧಾನ ಪರಿಷತ್ ಸದಸ್ಯ ಡಿಎಸ್ ಅರುಣ್ ಅವರಿಗೆ ಮನವಿ ಸಲ್ಲಿಸಲಾಗಿದೆ.
      ತಾಲೂಕಿನ ದೊಣಬಘಟ್ಟ ಗ್ರಾಮದಲ್ಲಿ ಕೆನರಾ ಬ್ಯಾಂಕ್ ಮತ್ತು ಎಟಿಎಂ ಕೌಂಟರ್ ಪ್ರಾರಂಭ ಮಾಡಲು ಹಾಗೂ ಅಡುಗೆ ಅನಿಲ ವಿತರಣಾ ಕೇಂದ್ರ ಪ್ರಾರಂಭಿಸಲು ಮತ್ತು ಪ್ರಸ್ತುತ ಗ್ರಾಮದಲ್ಲಿರುವ ಪದವಿ ಪೂರ್ವ  ಕಾಲೇಜನ್ನು ಮೇಲ್ದರ್ಜೆಗೇರಿಸಿ ಪದವಿ ಕಾಲೇಜು ಆರಂಭಿಸಲು ಸಂಬಂಧ ಪಟ್ಟ ಇಲಾಖೆಗಳಿಗೆ ಒತ್ತಾಯಿಸುವುದು ಮತ್ತು ಸಿಂಗನಮನೆ, ಹಿರಿಯೂರು, ದೊಣಬಘಟ್ಟ, ಬಿಳಿಕಿ ಹಾಗು ತಡಸ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪರಿಶುದ್ಧವಾದ ಮತ್ತು ಸಮರ್ಪಕವಾದ ಕುಡಿಯುವ ನೀರು ಸರಬರಾಜು ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ.
          ಮನವಿಯನ್ನು ಟ್ರಸ್ಟ್ ಚೇರ್ಮನ್  ಆರ್. ವೇಣುಗೋಪಾಲ್ ಡಿ.ಎಸ್ ಅರುಣ್ ಅವರಿಗೆ ಸಲ್ಲಿಸಿದ್ದು, ಈಗಾಗಲೇ ಪ್ರತ್ಯೇಕವಾಗಿ ಸಲ್ಲಿಸಿರುವ 6 ಮನವಿಗಳಿಗೆ ಪೂರಕವಾಗಿ ಸ್ಪಂದಿಸಿರುವ ಹಿನ್ನೆಲೆಯಲ್ಲಿ ಅಭಿನಂದನೆ ಸಲ್ಲಿಸಿದ್ದಾರೆ.

ಜಿಎಸ್‌ಟಿ ವಿರೋಧಿಸಿ ಜಯಕರ್ನಾಟಕ ಜನಪರ ವೇದಿಕೆ ಪ್ರತಿಭಟನೆ : ಮನವಿ

ಕೇಂದ್ರ ಸರ್ಕಾರ ಅಗತ್ಯ ಆಹಾರ ವಸ್ತುಗಳ ಮೇಲೆ ಜಿಎಸ್‌ಟಿ ವಿಧಿಸಿರುವುದನ್ನು ವಿರೋಧಿಸಿ ಭದ್ರಾವತಿಯಲ್ಲಿ ಜಯ ಕರ್ನಾಟಕ ಜನಪರ ವೇದಿಕೆ ವತಿಯಿಂದ ಶುಕ್ರವಾರ ತಾಲೂಕು ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಗ್ರೇಡ್-೨ ರಂಗಮ್ಮ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
    ಭದ್ರಾವತಿ, ಜು. ೨೨: ಕೇಂದ್ರ ಸರ್ಕಾರ ಅಗತ್ಯ ಆಹಾರ ವಸ್ತುಗಳ ಮೇಲೆ ಜಿಎಸ್‌ಟಿ ವಿಧಿಸಿರುವುದನ್ನು ವಿರೋಧಿಸಿ ಜಯ ಕರ್ನಾಟಕ ಜನಪರ ವೇದಿಕೆ ವತಿಯಿಂದ ಶುಕ್ರವಾರ ತಾಲೂಕು ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಗ್ರೇಡ್-೨ ರಂಗಮ್ಮ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
    ವೇದಿಕೆ ಪ್ರಮುಖರು ಮಾತನಾಡಿ, ಕೇಂದ್ರ ಸರ್ಕಾರ ಅಸ್ವಾಭಾವಿಕ ಜಿಎಸ್‌ಟಿ ದರ ಜಾರಿಗೆ ತರಲು ಹೊರಟಿದೆ. ಆಹಾರ ಪದಾರ್ಥಗಳ ಮೇಲೂ ತೆರಿಗೆ ವಿಧಿಸಿದೆ. ಬಡವರು ಉಪಯೋಗಿಸುವ ಪ್ಯಾಕ್ ಮಾಡಿದ ಅಕ್ಕಿ, ಹಾಲು, ಮೊಸರು, ಮಜ್ಜಿಗೆ, ಹಪ್ಪಳ, ಉಪ್ಪಿನಕಾಯಿ, ಒಣಕಾಳು, ತರಕಾರಿ, ಮಾಂಸ, ಮೀನು ಸೇರಿದಂತೆ ಇನ್ನಿತರ ವಸ್ತುಗಳ ಮೇಲೆ ದೇಶದ ಬಡವರ್ಗದ ಪ್ರಜೆಗಳ ಮೆಲೆ ಚಿಂತನೆ ಇಲ್ಲದೆ ಅಸಂಬದ್ಧವಾದ ತೆರಿಗೆ ವಿಧಿಸಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.
    ಅಕ್ಕಿ ಮೇಲೆ ಜಿಎಸ್‌ಟಿ ಹೇರಿರುವುದು ಬಡವರ ಅನ್ನವನ್ನು ಕಸಿಕೊಂಡಂತಾಗಿದೆ. ಈಗಾಗಲೇ ಕೊರೋನಾದ ಹಿನ್ನಲೆಯಲ್ಲಿ ಯಾವುದೇ ಉದ್ಯೋಗವಿಲ್ಲದೆ ಆರ್ಥಿಕತೆಯಿಂದ ಹಾಗು ನಿರುದ್ಯೋಗದಿಂದ ಹಿಂದುಳಿದಿರುವ ದೇಶದ ಬಡ ವರ್ಗದವರ ಸ್ಥಿತಿ ಹೇಳತೀರದಾಗಿದೆ. ಅತಿವೃಷ್ಟಿ, ಅನಾವೃಷ್ಟಿಗಳಿಂದ ಜನಸಾಮಾನ್ಯರು ತೊಂದರೆಗೆ ಒಳಗಾಗಿದ್ದಾರೆ. ಇಂತಹ ಸ್ಥಿತಿಯಲ್ಲಿ ಗಾಯದ ಮೇಲೆ ಬರೆ ಎಳೆದಂತೆ ತೆರಿಗೆಯನ್ನು ವಿಧಿಸಲಾಗಿದೆ. ತಕ್ಷಣ ಜಿಎಸ್‌ಟಿ ರದ್ದು ಮಾಡಬೇಕೆಂದು ವೇದಿಕೆ ಆಗ್ರಹಿಸುತ್ತದೆ ಎಂದರು.
    ವೇದಿಕೆ ತಾಲೂಕು ಅಧ್ಯಕ್ಷ ಜಗದೀಶ್ ಪ್ರತಿಭಟನೆ ನೇತೃತ್ವ ವಹಿಸಿದ್ದರು. ಮುಖಂಡರಾದ ಫ್ರಾನ್ಸಿಸ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ಸಿಬಿಎಸ್‌ಇ ಪರೀಕ್ಷೆಯಲ್ಲಿ ಶೇ.೧೦೦ರಷ್ಟು ಫಲಿತಾಂಶ




ಎನ್. ವೈಷ್ಣವಿ ಕಾಮತ್(೪೮೫)


ಎಂ. ಪ್ರಜ್ವಲ್ (೪೬೩)


ಪಿ.ವಿ ಲಹರಿ (೪೬೧)


ತೇಜಸ್ವಿನಿ ಗೌಡ(೪೫೫)


ಮೇಘನಾ ಎಂ. ರೆಡ್ಡಿ (೪೫೨)


ಆರ್. ಹೇಮಾಲತಾ(೪೫೨)
    ಭದ್ರಾವತಿ, ಜು. ೨೨: ನಗರದ ನ್ಯೂಟೌನ್ ಶ್ರೀ ಸತ್ಯ ಸಾಯಿ ಜ್ಞಾನಪೀಠ ಶಾಲೆ ಈ ಬಾರಿ ಸಿಬಿಎಸ್‌ಇ ಪರೀಕ್ಷೆಯಲ್ಲಿ ಶೇ.೧೦೦ರಷ್ಟು ಫಲಿತಾಂಶ ಪಡೆದುಕೊಂಡಿದೆ.
    ಶಾಲೆಯ ವಿದ್ಯಾರ್ಥಿನಿ ಎನ್. ವೈಷ್ಣವಿ ಕಾಮತ್ ೫೦೦ಕ್ಕೆ ೪೮೫ ಅತಿ ಹೆಚ್ಚು ಶೇ.೯೭ ಅಂಕ ಪಡೆದುಕೊಂಡಿದ್ದು,  ಉಳಿದಂತೆ ಎಂ. ಪ್ರಜ್ವಲ್ ೫೦೦ಕ್ಕೆ ೪೬೩ ಶೇ.೯೨.೬, ಪಿ.ವಿ ಲಹರಿ ೫೦೦ಕ್ಕೆ ೪೬೧ ಶೇ.೯೨.೨, ತೇಜಸ್ವಿನಿ ಗೌಡ ೫೦೦ಕ್ಕೆ ೪೫೫ ಶೇ.೯೧, ಮೇಘನಾ ಎಂ. ರೆಡ್ಡಿ ೫೦೦ಕ್ಕೆ ೪೫೨ ಶೇ.೯೦.೪ ಹಾಗು ಆರ್. ಹೇಮಾಲತಾ ೫೦೦ಕ್ಕೆ ೫೫೨ಕ್ಕೆ ಶೇ.೯೦.೪ರಷ್ಟು ಅಂಕಗಳನ್ನು ಪಡೆದುಕೊಂಡಿದ್ದಾರೆ.
    ಒಟ್ಟು ೨೫ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಎಲ್ಲರೂ ವಿದ್ಯಾರ್ಥಿಯಾಗಿದ್ದಾರೆ. ಶ್ರೀ ಸತ್ಯ ಸಾಯಿ ಸಮಗ್ರ ಶಿಕ್ಷಣ ಸಂಸ್ಥೆಯ ಪ್ರಭಾಕರ ಬೀರಯ್ಯ, ಪರಮೇಶ್ವರಪ್ಪ, ಪ್ರಾಂಶುಪಾಲರಾದ ಮೃತ್ಯುಂಜಯ ಕಾನಿಟ್ಕರ್, ಶಾಮರಾಯ ಆಚಾರ್, ಉಪಪ್ರಾಂಶುಪಾಲ ಪ್ರಸನ್ನ ಹಾಗು ಶಿಕ್ಷಕ ಮತ್ತು ಸಿಬ್ಬಂದಿ ವರ್ಗದವರು ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

೨ನೇ ಮಹಿಳಾ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಆಯ್ಕೆ : ಬಿಜೆಪಿ ಸಂಭ್ರಮಾಚರಣೆ

ಒಡಿಶಾ ರಾಜ್ಯದ ಬುಡಕಟ್ಟು ಜನಾಂಗದ ದ್ರೌಪತಿ ಮುರ್ಮು ಅವರು ದೇಶದ ೨ನೇ ಮಹಿಳಾ ರಾಷ್ಟ್ರಪತಿಯಾಗಿ ಆಯ್ಕೆಯಾಗಿರುವ ಹಿನ್ನಲೆಯಲ್ಲಿ ಶುಕ್ರವಾರ ಭದ್ರಾವತಿ ತಾಲೂಕು ಬಿಜೆಪಿ ಮಂಡಲ ವತಿಯಿಂದ ನಗರದ ರಂಗಪ್ಪ ವೃತ್ತದಲ್ಲಿ ಸಂಭ್ರಮಾಚರಣೆ ನಡೆಸಲಾಯಿತು.  
    ಭದ್ರಾವತಿ, ಜು. ೨೨: ಒಡಿಶಾ ರಾಜ್ಯದ ಬುಡಕಟ್ಟು ಜನಾಂಗದ ದ್ರೌಪತಿ ಮುರ್ಮು ಅವರು ದೇಶದ ೨ನೇ ಮಹಿಳಾ ರಾಷ್ಟ್ರಪತಿಯಾಗಿ ಆಯ್ಕೆಯಾಗಿರುವ ಹಿನ್ನಲೆಯಲ್ಲಿ ಶುಕ್ರವಾರ ತಾಲೂಕು ಬಿಜೆಪಿ ಮಂಡಲ ವತಿಯಿಂದ ನಗರದ ರಂಗಪ್ಪ ವೃತ್ತದಲ್ಲಿ ಸಂಭ್ರಮಾಚರಣೆ ನಡೆಸಲಾಯಿತು.
    ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್, ಬುಡಕಟ್ಟು ಜನಾಂಗದ ಮಹಿಳೆಯೊಬ್ಬರು ದೇಶದ ೧೫ನೇ ರಾಷ್ಟ್ರಪತಿಯಾಗಿರುವುದು ಹೆಮ್ಮೆಯ ವಿಚಾರವಾಗಿದೆ. ದ್ರೌಪದಿ ಮುರ್ಮು ಅವರ ಆಯ್ಕೆ ಭಾರತ ದೇಶದ ಜನರು ಮಾತ್ರವಲ್ಲ ಇಡೀ ಜಗತ್ತು ಕುತೂಹಲದಿಂದ ನೋಡುವಂತಾಗಿದೆ. ಇವರ ಆಯ್ಕೆ ಐತಿಹಾಸಿಕವಾಗಿದೆ ಎಂದು ಬಣ್ಣಿಸಿದ್ದರು.
    ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಕೆ ಶ್ರೀನಾಥ್, ಮುಖಂಡರಾದ ಮಂಗೋಟೆ ರುದ್ರೇಶ್, ಎನ್. ವಿಶ್ವನಾಥರಾವ್, ಎಂ. ಪ್ರಭಾಕರ್, ನರಸಿಂಹಚಾರ್, ಎಂ. ಮಂಜುನಾಥ್, ಚನ್ನೇಶ್, ರಾಜಶೇಖರ ಉಪ್ಪಾರ, ರಾಮಚಂದ್ರಪ್ಪ, ಗಣೇಶ್‌ರಾವ್, ರಾಮನಾಥ್ ಬರ್ಗೆ, ಬಿ.ಎಸ್ ಶ್ರೀನಾಥ್, ಸತೀಶ್ ಕುಮಾರ್, ಧನುಷ್ ಬೋಸ್ಲೆ, ಮಂಜುನಾಥ್, ಬಿ.ಎಸ್ ನಾರಾಯಣಪ್ಪ, ಸತ್ಯಣ್ಣ, ವಿಜಯ್, ಶೋಭಾ ಪಾಟೀಲ್, ಹೇಮಾವತಿ, ಅನ್ನಪೂರ್ಣ, ಮಂಜುಳ, ಕವಿತಾ ರಾವ್, ಸುಲೋಚನಾ, ಶ್ಯಾಮಲ ಸೇರಿದಂತೆ ಪಕ್ಷದ ವಿವಿಧ ಘಟಕಗಳ ಪ್ರಮುಖರು, ಕಾರ್ಯಕರ್ತರು ಪಾಲ್ಗೊಂಡಿದ್ದರು. ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಲಾಯಿತು.

೨ನೇ ಇಂಡೋ-ನೇಪಾಳ್ ಚಾಂಪಿಯನ್‌ಶಿಪ್ ಪಂದ್ಯಾವಳಿ ವಿಜೇತ ತಂಡಕ್ಕೆ ಅದ್ದೂರಿ ಸ್ವಾಗತ

ಭದ್ರಾವತಿ ತಾಲೂಕಿನ ಕಾರೇಹಳ್ಳಿ ಬಾಲಗಂಗಾಧರನಾಥ ಸ್ವಾಮೀಜಿ ಕೇಂದ್ರೀಯ ವಿದ್ಯಾಲಯ(ಬಿಜಿಎಸ್ ಶಾಲೆ)ದ ವಿದ್ಯಾರ್ಥಿಗಳು ನೇಪಾಳದ ಪೊಖಾರದಲ್ಲಿ ಜರುಗಿದ ೨ನೇ ಇಂಡೋ-ನೇಪಾಳ್ ಚಾಂಪಿಯನ್‌ಶಿಪ್ ಪಂದ್ಯಾವಳಿ ಭಾಗವಹಿಸಿ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡು ರಾಷ್ಟ್ರಕ್ಕೆ ಕೀರ್ತಿ ತಂದಿದ್ದಾರೆ. ಶುಕ್ರವಾರ ನಗರಕ್ಕೆ ಆಗಮಿಸಿದ ವಿಜೇತ ತಂಡಕ್ಕೆ ಅದ್ದೂರಿ ಸ್ವಾಗತ ಕೋರಲಾಯಿತು.
    ಭದ್ರಾವತಿ, ಜು. ೨೨: ತಾಲೂಕಿನ ಕಾರೇಹಳ್ಳಿ ಬಾಲಗಂಗಾಧರನಾಥ ಸ್ವಾಮೀಜಿ ಕೇಂದ್ರೀಯ ವಿದ್ಯಾಲಯ(ಬಿಜಿಎಸ್ ಶಾಲೆ)ದ ವಿದ್ಯಾರ್ಥಿಗಳು ನೇಪಾಳದ ಪೊಖಾರದಲ್ಲಿ ಜರುಗಿದ ೨ನೇ ಇಂಡೋ-ನೇಪಾಳ್ ಚಾಂಪಿಯನ್‌ಶಿಪ್ ಪಂದ್ಯಾವಳಿಯಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡು ರಾಷ್ಟ್ರಕ್ಕೆ ಕೀರ್ತಿ ತಂದಿದ್ದಾರೆ. ಶುಕ್ರವಾರ ನಗರಕ್ಕೆ ಆಗಮಿಸಿದ ವಿಜೇತ ತಂಡಕ್ಕೆ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದ ಬಳಿ ಅದ್ದೂರಿಯಾಗಿ ಸ್ವಾಗತ ಕೋರಲಾಯಿತು.
    ನಗರದ ಪ್ರಮುಖರು, ಪೋಷಕರು, ಕ್ರೀಡಾಭಿಮಾನಿಗಳು ವಿಜೇತ ತಂಡ ಆಗಮಿಸುತ್ತಿದ್ದಂತೆ ಮಳೆ ನಡುವೆಯೂ ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿ ಸಿಹಿ ಹಂಚಿದರು. ಅಲ್ಲದೆ ವಿಜೇತ ತಂಡದ ಎಲ್ಲರನ್ನು ಸನ್ಮಾನಿಸಿ ಅಭಿನಂದಿಸಿದರು. ನಂತರ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದಲ್ಲಿರುವ ಸರ್ ಎಂ. ವಿಶ್ವೇಶ್ವರಾಯನವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.


    ಪಿಸಿಎ ಸ್ಪೋರ್ಟ್ಸ್ ಮ್ಯಾನೇಜ್‌ಮೆಂಟ್ ನೇಪಾಳ್ ಮತ್ತು ನ್ಯಾಷನಲ್ ಸ್ಪೋರ್ಟ್ಸ್ & ಎಜ್ಯುಕೇಷನ್ ಡೆವಲಪ್‌ಮೆಂಟ್ ಫೆಡರೇಷನ್ ಇಂಡಿಯಾ ವತಿಯಿಂದ ಆಯೋಜಿಸಲಾಗಿದ್ದ ಪಂದ್ಯಾವಳಿಯಲ್ಲಿ ೧೪ ವರ್ಷದೊಳಗಿನ ವಿಭಾಗದಲ್ಲಿ ಕೇಂದ್ರೀಯದ ವಿದ್ಯಾರ್ಥಿಗಳಾದ ಬಿ.ಎಂ ವೇದಾಂತ್ ಡಿಸ್ಕಸ್ ಥ್ರೋ, ಕೆ. ಸಮಥ ಗುಂಡು ಎಸೆತ, ಶರಥ್ವಿ ಬಾಗ್ಸಲೆ ೨೦೦ ಮೀ. ಓಟ, ಕೆ,ಎಸ್ ಮೊಹಮದ್ ರಯಾನ್ ೪೦೦ ಮೀ. ಓಟ, ಕೆ. ಸುಪ್ರಿತ ಯೋಗಾಸನ ಮತ್ತು ಡಿ. ಚಿನ್ಮಯ ಪ್ರಸಾದ್ ಚೆಸ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಹಾಗು ಕೆ.ಸಿ ಸಮರ್ಥ್ ಪುರಾಣಿಕ್ ಚೆಸ್ ಮತ್ತು ಪಿ. ಜಸ್ವಂತ್ ರೆಡ್ಡಿ ೨೦೦ ಮೀ. ಓಟದಲ್ಲಿ ಬೆಳ್ಳಿ ಪದಕ ಪಡೆದುಕೊಂಡಿದ್ದಾರೆ.
    ವಿಐಎಸ್‌ಎಲ್ ಕಾರ್ಮಿಕ ಸಂಘದ ಉಪಾಧ್ಯಕ್ಷ ಕುಮಾರ್ ಎಎಲ್‌ಡಬ್ಲ್ಯೂ, ತರಬೇತಿದಾರರು, ಎಲ್. ವೆಂಕಟೇಶ್ ನಾಯಕ್, ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಉಪಾಧ್ಯಕ್ಷ ಚನ್ನಪ್ಪ, ಬಿಜೆಪಿ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್, ಛಲವಾದಿ ಸಮಾಜದ ಪ್ರಮುಖರಾದ ಎಸ್.ಎಸ್ ಭೈರಪ್ಪ, ಡಿ. ನರಸಿಂಹಮೂರ್ತಿ, ಮಂಜುನಾಥ್, ಎ. ತಿಪ್ಪೇಸ್ವಾಮಿ, ತಾಲೂಕು ಒಕ್ಕಲಿಗ ಸಂಘದ ಅಧ್ಯಕ್ಷ ಎ.ಟಿ ರವಿ, ನಗರಸಭಾ ಸದಸ್ಯ ಕೋಟೇಶ್ವರರಾವ್, ದಿಲೀಪ್, ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಟಿ. ಚಂದ್ರೇಗೌಡ, ಬಿ.ಎಂ ರವಿಕುಮಾರ್, ಧನುಷ್ ಬೋಸ್ಲೆ, ನಕುಲ್, ಮಂಜುನಾಥ್ ಕೊಯ್ಲಿ, ಗಿರೀಶ್ ಸೇರಿದಂತೆ ಪೋಷಕರು, ಕ್ರೀಡಾಭಿಮಾನಿಗಳು ಉಪಸ್ಥಿತರಿದ್ದರು.