Tuesday, August 23, 2022

ಶಿಕ್ಷಣ ಮುಂದುವರೆಸಲು ಸಾಧ್ಯವಾಗದೆ ಸಂಕಷ್ಟಕ್ಕೆ ಒಳಗಾಗಿದ್ದ ಬಾಲಕಿಗೆ ಜನಪರ ವೇದಿಕೆ ಆಸರೆ

ಪ್ರವೇಶ ಮುಕ್ತಾಯಗೊಂಡರೂ ವಿಶೇಷ ದಾಖಲಾತಿಗೆ ಮನವಿ ಮಾಡಿದ ಜಿಲ್ಲಾಧಿಕಾರಿ

ಭದ್ರಾವತಿಯಲ್ಲಿ ವೈಯಕ್ತಿಕ ಕೌಟುಂಬಿಕ ಕಾರಣದಿಂದ ಓದು ಮುಂದುವರೆಸಲು ಸಾಧ್ಯವಾಗದೆ ಸಂಕಷ್ಟಕ್ಕೆ ಒಳಗಾಗಿದ್ದ ಬಾಲಕಿಗೆ ಜಯಕರ್ನಾಟಕ ಜನಪರ ವೇದಿಕೆ ಸಂಘಟನೆ ನೆರವಾಗುವ ಮೂಲಕ ಆಕೆಯ ಮುಂದಿನ ಶಿಕ್ಷಣಕ್ಕೆ ನೆರವಾಯಿತು.
    ಭದ್ರಾವತಿ, ಆ. ೨೩: ವೈಯಕ್ತಿಕ ಕೌಟುಂಬಿಕ ಕಾರಣದಿಂದ ಓದು ಮುಂದುವರೆಸಲು ಸಾಧ್ಯವಾಗದೆ ಸಂಕಷ್ಟಕ್ಕೆ ಒಳಗಾಗಿದ್ದ ಬಾಲಕಿಗೆ ಜಯಕರ್ನಾಟಕ ಜನಪರ ವೇದಿಕೆ ಸಂಘಟನೆ ನೆರವಾಗುವ ಮೂಲಕ ಆಕೆಯ ಮುಂದಿನ ಶಿಕ್ಷಣಕ್ಕೆ ನಾಂದಿ ಹಾಡಿದೆ.
    ತಾಲೂಕಿನ ಹುಣಸೇಕಟ್ಟೆ ಗ್ರಾಮದ ಬಡಕುಟುಂಬದ ಕೀರ್ತನಾ ಎಂಬ ಬಾಲಕಿಯೋರ್ವಳು ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳೊಂದಿಗೆ ಉತ್ತೀರ್ಣಳಾಗಿದ್ದು, ಆದರೂ ಸಹ ಓದು ಮುಂದುವರೆಸಲು ಸಾಧ್ಯವಾಗದೆ ಸಂಕಷ್ಟಕ್ಕೆ ಒಳಗಾಗಿದ್ದಾಳೆ.
    ಈಕೆಯ ತಾಯಿ ಒಬ್ಬಳೇ ಕೂಲಿ ಕೆಲಸ ಮಾಡಿಕೊಂಡು ಕುಟುಂಬದ ನಿರ್ವಹಣೆ ಮಾಡುತ್ತಿದ್ದು, ಇದರಿಂದಾಗಿ ಜೀವನ ಸಾಗಿಸುವುದೇ ಕಷ್ಟಕರವಾಗಿದೆ. ಈ ನಡುವೆ ಮುಂದಿನ ವಿದ್ಯಾಭ್ಯಾಸಕ್ಕೆ ಕುಟುಂಬದಿಂದಲೂ ಅಸಹಾಯಕತೆ ವ್ಯಕ್ತವಾಗಿದೆ.


    ಕಾಲೇಜುಗಳ ಪ್ರವೇಶ ಪ್ರಕ್ರಿಯೆ ಮುಕ್ತಾಯಗೊಂಡರೂ ಸಹ ಈಕೆಯ ಮುಂದಿನ ಓದಿನ ಕನಸು ನನಸಾಗಿರಲಿಲ್ಲ. ಈ ನಡುವೆ ಈಕೆಯ ನೆರವಿಗೆ ಹುಣಸೆಕಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ, ಸಮಾಜ ಸೇವಕಿ ಅನಿತಾ ಮೇರಿ ಅವರು ಧಾವಿಸಿದ್ದು, ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಅವರ ಬಳಿ ಈಕೆಗೆ ಮುಂದಿನ ವಿದ್ಯಾಭ್ಯಾಸಕ್ಕೆ ಪ್ರವೇಶ ಕಲ್ಪಿಸಿಕೊಡುವಂತೆ ಮನವಿ ಮಾಡಿಕೊಂಡಿದ್ದಾರೆ. ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು ಪದವಿ ಪೂರ್ವ ಶಿಕ್ಷಣ ಇಲಾಖೆಗೆ ಪತ್ರ ಬರೆದು ವಿಶೇಷ ದಾಖಲಾತಿಯಡಿ ಪ್ರಥಮ ವರ್ಷದ ಪ್ರವೇಶಕ್ಕೆ ಅನುಕೂಲ ಕಲ್ಪಿಸಿಕೊಡುವಂತೆ ಕೋರಿ ಪತ್ರ ಬರೆದಿದ್ದರು. ಇದಕ್ಕೆ ಇಲಾಖೆ ಉಪನಿರ್ದೇಶಕರು ಪೂರಕವಾಗಿ ಸ್ಪಂದಿಸಿದ್ದಾರೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕಪಡೆದಿರುವ ಪ್ರತಿಭಾವಂತ ವಿದ್ಯಾರ್ಥಿನಿಯ ಮುಂದಿನ ಶಿಕ್ಷಣಕ್ಕೆ ನೆರವಾಗಬೇಕೆಂಬ ಉದ್ದೇಶದಿಂದ ವೇದಿಕೆಯ  ಕಾರ್ಯಕರ್ತರೆಲ್ಲರೂ ಸೇರಿ ನಮ್ಮ ಬಳಿ ಇರುವ ಹಣ ಸಂಗ್ರಹಿಸಿ ಪಾವತಿಸಲಾಗಿದೆ. ವೇದಿಕೆ ಸಾಮಾಜಿಕ ಕಾಳಜಿಯಿಂದ ತನ್ನ ಜವಾಬ್ದಾರಿಯನ್ನು ನಿರ್ವಹಿಸಿದೆ.
- ಪ್ರಾನ್ಸಿಸ್, ಮಾಜಿ ಸದಸ್ಯರು, ನಗರಸಭೆ ಹಾಗು ವೇದಿಕೆ ಮುಖಂಡರು, ಭದ್ರಾವತಿ.

    ಈಕೆಗೆ ನ್ಯೂಟೌನ್ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿ(ಗರ್ಲ್ಸ್ ಕಾಲೇಜು)ನಲ್ಲಿ ಪ್ರವೇಶ ಪಡೆಯಲು ಅವಕಾಶ ಲಭಿಸಿದರೂ ಸಹ ಪ್ರವೇಶ ಶುಲ್ಕ ಹಾಗು ಸಮವಸ್ತ್ರ, ನೋಟ್ ಬುಕ್ ಮತ್ತು  ಪಠ್ಯ ಪುಸ್ತಕಗಳಿಗಾಗಿ ಎದುರು ನೋಡುವಂತಾಯಿತು. ಈ ನಡುವೆ ಈಕೆಯ ಸಂಕಷ್ಟ ಅರಿತ ಜಯಕರ್ನಾಟಕ ಜನಪರ ವೇದಿಕೆ ಸಂಘಟನೆ ಕಾಲೇಜಿಗೆ ತೆರಳಿ ಈಕೆಯ ಪ್ರವೇಶ ಶುಲ್ಕ ಹಾಗು ಸಮವಸ್ತ್ರ, ನೋಟ್ ಬುಕ್ ಮತ್ತು  ಪಠ್ಯ ಪುಸ್ತಕಗಳಿಗಾಗಿ ಒಟ್ಟು ೫,೭೦೦ ರು. ಪಾವತಿಸುವ ಮೂಲಕ ಮುಂದಿನ ಶಿಕ್ಷಣಕ್ಕೆ ನೆರವಾಯಿತು.

ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದ ಕುಟುಂಬಸ್ಥರು ಈಕೆಯ ಶಿಕ್ಷಣವನ್ನು ಮೊಟಕುಗೊಳಿಸಲು ಮುಂದಾಗಿದ್ದರು. ಇದನ್ನು ಅರಿತು ಆಕೆ ಶಿಕ್ಷಣ ಮುಂದುವರೆಸಲು ನೆರವಿಗೆ ಧಾವಿಸಿ ಜಿಲ್ಲಾಧಿಕಾರಿಗಳ ಮೂಲಕ ಪ್ರವೇಶ ಪಡೆಯಲು ಅವಕಾಶ ಕಲ್ಪಿಸಿಕೊಡಲಾಯಿತು. ಈಕೆಗೆ ಹೆಚ್ಚಿನ ನೆರವಿನ ಅಗತ್ಯವಿದ್ದು, ಸಂಘ-ಸಂಸ್ಥೆಗಳು, ದಾನಿಗಳನ್ನು ಕೋರಲಾಗಿತ್ತು. ಇದೀಗ ಆಕೆಯ ಕನಸು ನನಸಾಗಿರುವುದು ತುಂಬಾ ಸಂತೋಷದ ವಿಚಾರವಾಗಿದೆ.
                                                                                   - ಅನಿತಾ ಮೇರಿ, ಶಿಕ್ಷಕಿ ಹಾಗು ಸಮಾಜ ಸೇವಕಿ, ಭದ್ರಾವತಿ.

    ಈ ಸಂದರ್ಭದಲ್ಲಿ ವೇದಿಕೆ ತಾಲೂಕು ಅಧ್ಯಕ್ಷ ಜಗದೀಶ್, ವೇದಿಕೆ ಜಿಲ್ಲಾ ಕಾರ್ಯಾಧ್ಯಕ್ಷ ಕೆ. ಸುದೀಪ್‌ಕುಮಾರ್, ನಗರಸಭೆ ಮಾಜಿ ಸದಸ್ಯ ಪ್ರಾನ್ಸಿಸ್, ಮುಖಂಡರಾದ ಶರವಣ, ಪ್ರಮೋದ್, ಲಾರೆನ್ಸ್, ಪುರುಷೋತ್ತಮ್, ಮದನ್‌ಕುಮಾರ್, ವಿನಯ್ ಮತ್ತು ಅಂತೋಣಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.



No comments:

Post a Comment