Friday, September 30, 2022

ನಾಡಹಬ್ಬ ದಸರಾ : ಗಮನ ಸೆಳೆದ ಯೋಗ ನಡಿಗೆ

ಭದ್ರಾವತಿ ನಗರಸಭೆ ವತಿಯಿಂದ ನಾಡಹಬ್ಬ ದಸರಾ ಅಂಗವಾಗಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಯೋಗ ದಸರಾ ಯಶಸ್ವಿಯಾಗಿ ನಡೆಯಿತು.
    ಭದ್ರಾವತಿ, ಸೆ. ೩೦: ನಗರಸಭೆ ವತಿಯಿಂದ ನಾಡಹಬ್ಬ ದಸರಾ ಅಂಗವಾಗಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಯೋಗ ದಸರಾ ಯಶಸ್ವಿಯಾಗಿ ನಡೆಯಿತು.
    ವಿವಿಧ ಯೋಗ ಸಮಿತಿಗಳ ಸಹಕಾರದೊಂದಿಗೆ ಬೆಳಿಗ್ಗೆ ಮಾಧವಚಾರ್ ವೃತ್ತದಿಂದ ಕನಕ ಮಂಟಪ ಮೈದಾನದವರೆಗೆ ಆಯೋಜಿಸಲಾಗಿದ್ದ ಯೋಗ ನಡಿಗೆ ಕಾರ್ಯಕ್ರಮಕ್ಕೆ ಅಂತರಾಷ್ಟ್ರೀಯ ಯೋಗಪಟು ಡಿ. ನಾಗರಾಜ್ ಚಾಲನೆ ನೀಡಿದರು.
    ಕನಕಮಂಟಪ ಮೈದಾನದಲ್ಲಿ ಯೋಗಾಸನ ಪ್ರದರ್ಶನದ ಮೂಲಕ ಯೋಗ ಕುರಿತು ಜಾಗೃತಿ ಮೂಡಿಸಲಾಯಿತು. ನಗರಸಭೆ ಅಧ್ಯಕ್ಷೆ ಅನುಸುಧಾ  ಮೋಹನ್ ಪಳನಿ, ಉಪಾಧ್ಯಕ್ಷ ಚನ್ನಪ್ಪ, ಪೌರಾಯುಕ್ತ ಮನುಕುಮಾರ್ ಹಾಗು ದಸರಾ ಆಚರಣೆ ವಿವಿಧ ಸಮಿತಿಗಳ ಅಧ್ಯಕ್ಷರು, ಸದಸ್ಯರು ಹಾಗು ನಗರಸಭಾ ಸದಸ್ಯರು, ವಿವಿಧ ಯೋಗ ಸಮಿತಿಗಳ ಪ್ರಮುಖರು ಪಾಲ್ಗೊಂಡಿದ್ದರು.  

ಪ್ರತಿಭಾ ಕಾರಂಜಿ, ಕಲೋತ್ಸವ ಮಕ್ಕಳ ಪ್ರತಿಭೆಗೆ ಸಹಕಾರಿ : ಬಿ.ಕೆ ಸಂಗಮೇಶ್ವರ್

ಕ್ಷೇತ್ರ ಶಿಕ್ಷಣಾಧಿಕಾರಿಗಳು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗು ಕ್ಷೇತ್ರ ಶಿಕ್ಷಣ ಸಮನ್ವಯಾಧಿಕಾರಿಗಳ ಕಛೇರಿ ವತಿಯಿಂದ ಭದ್ರಾವತಿ ನ್ಯೂಟೌನ್ ಶ್ರೀ ಸತ್ಯಸಾಯಿ ಸಮಗ್ರ ಶಿಕ್ಷಣ ಸಂಸ್ಥೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮ ಶಾಸಕ ಬಿ.ಕೆ ಸಂಗಮೇಶ್ವರ್ ಸೇರಿದಂತೆ ಇನ್ನಿತರರು ಉದ್ಘಾಟಿಸಿದರು.  
    ಭದ್ರಾವತಿ, ಸೆ. ೩೦: ಮಕ್ಕಳು ತಮ್ಮ ಪ್ರತಿಭೆಗಳನ್ನು ಅನಾವರಣಗೊಳಿಸಲು ಸೂಕ್ತ ವೇದಿಕೆ ಅಗತ್ಯವಿದ್ದು, ಈ ನಿಟ್ಟಿನಲ್ಲಿ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಸಹಕಾರಿಯಾಗಿದೆ ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ಹೇಳಿದರು.
    ಅವರು ಶುಕ್ರವಾರ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗು ಕ್ಷೇತ್ರ ಶಿಕ್ಷಣ ಸಮನ್ವಯಾಧಿಕಾರಿಗಳ ಕಛೇರಿ ವತಿಯಿಂದ ನಗರದ ನ್ಯೂಟೌನ್ ಶ್ರೀ ಸತ್ಯಸಾಯಿ ಸಮಗ್ರ ಶಿಕ್ಷಣ ಸಂಸ್ಥೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
    ಮಕ್ಕಳ ಪ್ರತಿಭೆಗಳನ್ನು ಅನಾವರಣಗೊಳಿಸಲು ವೇದಿಕೆ ಕಲ್ಪಿಸಿಕೊಟ್ಟಿರುವ ಶಿಕ್ಷಣ ಇಲಾಖೆಗೆ ಕೃತಜ್ಞತೆ ಸಲ್ಲಿಸುತ್ತೇನೆ. ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ಸಹ ನೀಡಬೇಕು. ಪಠ್ಯೇತರ ಚಟುವಟಿಕೆಗಳಿಗೂ ಹೆಚ್ಚಿನ ಪ್ರೋತ್ಸಾಹ ನೀಡಬೇಕು. ಆಗ ಮಾತ್ರ ದೇಶದ ಭವಿಷ್ಯದ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳುತ್ತಾರೆ ಎಂದರು.
    ವೇದಿಕೆಯಲ್ಲಿ ಶ್ರೀ ಸತ್ಯಸಾಯಿ ಸಮಗ್ರ ಶಿಕ್ಷಣ ಸಂಸ್ಥೆಯ ಡಿ. ಪ್ರಭಾಕರ ಬೀರಯ್ಯ, ನಗರಸಭೆ ಅಧ್ಯಕ್ಷೆ ಅನುಸುಧಾ ಮೋಹನ್ ಪಳನಿ, ಸದಸ್ಯೆ ಸರ್ವಮಂಗಳ ಭೈರಪ್ಪ, ಪೌರಾಯುಕ್ತ ಮನುಕುಮಾರ್, ಕ್ಷೇತ್ರ ಶಿಕ್ಷಣ ಸಮನ್ವಯಾಧಿಕಾರಿ ವಿ.ಎಚ್ ಪಂಚಾಕ್ಷರಿ, ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಟಿ. ಪೃಥ್ವಿರಾಜ್, ಪ್ರಧಾನ ಕಾರ್ಯದರ್ಶಿ ಎಸ್.ಕೆ ಮೋಹನ್, ಸರ್ಕಾರಿ ನೌಕರರ ಸಂಘದ ಶ್ರೀಧರಗೌಡ, ಬಸವಂತರಾವ್ ದಾಳೆ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಕೆ.ಬಿ ಬಸವರಾಜಪ್ಪ, ಸಿದ್ದಾಪುರ ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಬಸವರಾಜ ಹಾಗು ವಿವಿಧ ಕ್ಲಸ್ಟರ್‌ಗಳ ಸಿಆರ್‌ಪಿಗಳು, ಶಿಕ್ಷಣ ಇಲಾಖೆ ಅಧಿಕಾರಿಗಳಾದ ಪ್ರಭು, ನವೀದ್ ಪರ್ವೀಜ್ ಅಹಮದ್, ರವಿಕುಮಾರ್ ಸೇರಿದಂತೆ ಉಪಸ್ಥಿತರಿದ್ದರು.
    ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಶಿಕ್ಷಕಿಯರಾದ ವಿಜಯಲಕ್ಷ್ಮಿ ಪ್ರಾರ್ಥಿಸಿದರು. ತುಳಸಿ ಬಾಯಿ ನಿರೂಪಿಸಿದರು.

ಶ್ರೀ ವಿನಯ್ ಗುರೂಜಿ ನೇತೃತ್ವದಲ್ಲಿ ವಿಜೃಂಭಣೆಯಿಂದ ಜರುಗಿದ ಸಪ್ತಪತಿ ಪಾರಾಯಣ

ಭದ್ರಾವತಿಯಲ್ಲಿ ನವರಾತ್ರಿ ಮಹೋತ್ಸವ ಅಂಗವಾಗಿ ಸಮಸ್ತ ನಾಗರೀಕರ ಕಲ್ಯಾಣಾಭಿವೃದ್ಧಿಗಾಗಿ ಶ್ರೀ ವಿನಯ್ ಗುರೂಜಿ ಭಕ್ತ ವೃಂದದಿಂದ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ದುರ್ಗಾ ಸಪ್ತಪತಿ ಪಾರಾಯಣ ಕಾರ್ಯಕ್ರಮದಲ್ಲಿ ಶ್ರೀ ವಿನಯ್ ಗುರೂಜಿ ಅವರು ದುರ್ಗಾ ದೇವಿಗೆ ಪುಷ್ಪ ನಮನ ಸಲ್ಲಿಸಿದರು.
    ಭದ್ರಾವತಿ, ಸೆ. ೩೦: ನವರಾತ್ರಿ ಮಹೋತ್ಸವ ಅಂಗವಾಗಿ ಸಮಸ್ತ ನಾಗರೀಕರ ಕಲ್ಯಾಣಾಭಿವೃದ್ಧಿಗಾಗಿ ಶ್ರೀ ವಿನಯ್ ಗುರೂಜಿ ಭಕ್ತ ವೃಂದದಿಂದ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ದುರ್ಗಾ ಸಪ್ತಪತಿ ಪಾರಾಯಣ ವಿಜೃಂಭಣೆಯಿಂದ ಜರುಗಿತು.
    ಚಿಕ್ಕಮಗಳೂರು ಗೌರಿಗದ್ದೆ ದತ್ತಾಶ್ರಮದ ಶ್ರೀ ವಿನಯ್ ಗುರೂಜಿ ನೇತೃತ್ವದಲ್ಲಿ ಭಕ್ತ ವೃಂದದಿಂದ ಸಿದ್ದಾರೂಢ ನಗರದ ಶ್ರೀ ಬಸವೇಶ್ವರ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್, ನಗರಸಭೆ ಅಧ್ಯಕ್ಷೆ ಅನುಸುಧಾ ಮೋಹನ್ ಪಳನಿ, ಉಪಾಧ್ಯಕ್ಷ ಚನ್ನಪ್ಪ ಸೇರಿದಂತೆ ನಗರದ ವಿವಿಧೆಡೆಗಳಿಂದ ಸಾವಿರಾರು ಮಂದಿ ಭಕ್ತಾಧಿಗಳು ಪಾಲ್ಗೊಂಡಿದ್ದರು.
    ಇದಕ್ಕೂ ಮೊದಲು ಬೈಕ್ ರ‍್ಯಾಲಿ ಮೂಲಕ ಗುರೂಜಿ ಅವರನ್ನು ಕರೆತರಲಾಯಿತು. ಗುರೂಜಿ ಅವರು ಶ್ರೀ ಚಾಮುಂಡೇಶ್ವರಿ ದೇವಿಗೆ ಪುಷ್ಪ ನಮನ ಸಲ್ಲಿಸಿ ವೇದಿಕೆಯ ಮುಂದಿನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನೂರಾರು ಮಹಿಳೆಯರು ದುರ್ಗಾ ಸಪ್ತಪತಿ ಪಾರಾಯಣ ನಡೆಸಿದರು.


ಭದ್ರಾವತಿಯಲ್ಲಿ ನವರಾತ್ರಿ ಮಹೋತ್ಸವ ಅಂಗವಾಗಿ ಸಮಸ್ತ ನಾಗರೀಕರ ಕಲ್ಯಾಣಾಭಿವೃದ್ಧಿಗಾಗಿ ಶ್ರೀ ವಿನಯ್ ಗುರೂಜಿ ಭಕ್ತ ವೃಂದದಿಂದ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ದುರ್ಗಾ ಸಪ್ತಪತಿ ಪಾರಾಯಣ ವಿಜೃಂಭಣೆಯಿಂದ ಜರುಗಿತು.

Thursday, September 29, 2022

ಸೆ.30ರಂದು ಪ್ರತಿಭಾ ಕಾರಂಜಿ-ಕಲೋತ್ಸವ




ಭದ್ರಾವತಿ: ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿ ವತಿಯಿಂದ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಸೆ.30ರಂದು ಹಮ್ಮಿಕೊಳ್ಳಲಾಗಿದೆ. ನ್ಯೂಟೌನ್ ಶ್ರೀ ಸತ್ಯಸಾಯಿ ಸಮಗ್ರ ಶಿಕ್ಷಣ ಸಂಸ್ಥೆ ಆವರಣದಲ್ಲಿ ಬೆಳಿಗ್ಗೆ 9 ಗಂಟೆಗೆ ಆರಂಭಗೊಳ್ಳಲಿದೆ. ಬಿ.ಕೆ ಸಂಗಮೇಶ್ವರ್, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು.

ಸೆ.೩೦ರಂದು ಶ್ರೀ ವಿನಯ್ ಗುರೂಜಿ ನೇತೃತ್ವದಲ್ಲಿ ಸಪ್ತಪತಿ ಪಾರಾಯಣ


    ಭದ್ರಾವತಿ, ಸೆ. ೨೯: ನವರಾತ್ರಿ ಮಹೋತ್ಸವ ಅಂಗವಾಗಿ ಸಮಸ್ತ ನಾಗರೀಕರ ಕಲ್ಯಾಣಾಭಿವೃದ್ಧಿಗಾಗಿ ಶ್ರೀ ವಿನಯ್ ಗುರೂಜಿ ಭಕ್ತ ವೃಂದದಿಂದ ಸೆ.೩೦ರಂದು ದುರ್ಗಾ ಸಪ್ತಪತಿ ಪಾರಾಯಣ ಹಮ್ಮಿಕೊಳ್ಳಲಾಗಿದೆ.
    ಶ್ರೀ ವಿನಯ್ ಗುರೂಜಿ ನೇತೃತ್ವದಲ್ಲಿ ಸಿದ್ದಾರೂಢ ನಗರದ ಶ್ರೀ ಬಸವೇಶ್ವರ ಸಭಾಭವನದಲ್ಲಿ ಬೆಳಿಗ್ಗೆ ೧೧ ಗಂಟೆಗೆ ದುರ್ಗಾ ಸಪ್ತಪತಿ ಪಾರಾಯಣ ನಡೆಯಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕೋರಲಾಗಿದೆ.

ಪರಿಸರ ದಸರಾ : ಗಮನ ಸೆಳೆದ ಬೀದಿ ನಾಟಕ

ಭದ್ರಾವತಿ ನಗರಸಭೆ ವತಿಯಿಂದ ಪರಿಸರ ದಸರಾ ಅಂಗವಾಗಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ಬೀದಿ ನಾಟಕ ಪ್ರದರ್ಶನ ಗಮನ ಸೆಳೆಯಿತು.
    ಭದ್ರಾವತಿ, ಸೆ. ೨೯; ನಗರಸಭೆ ವತಿಯಿಂದ ಪರಿಸರ ದಸರಾ ಅಂಗವಾಗಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ಬೀದಿ ನಾಟಕ ಪ್ರದರ್ಶನ ಗಮನ ಸೆಳೆಯಿತು.
    ನಗರದ ಸ್ವಚ್ಛತೆಯಲ್ಲಿ ಪೌರಕಾರ್ಮಿಕರ ಪಾತ್ರ ಹಾಗು ನಾಗರೀಕರ ಜವಾಬ್ದಾರಿ ಮತ್ತು ಪ್ಲಾಸ್ಟಿಕ್ ಬಳಕೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಬೀದಿ ನಾಟಕದ ಮೂಲಕ ಜಾಗೃತಿ ಮೂಡಿಸಲಾಯಿತು.
    ಅಂಬೇಡ್ಕರ್ ಜಾನಪದ ಕಲಾ ತಂಡದ ಕಲಾವಿದರಾದ ತಮಟೆ ಜಗದೀಶ್, ದಿವಾಕರ್, ಜಿ. ರವಿಕುಮಾರ್, ಷಣ್ಮುಖಪ್ಪ, ಆಂಜನಪ್ಪ ಮತ್ತು ರವಿನಾಯ್ಕ ಅವರ ಅಭಿನಯ ಎಲ್ಲರ ಗಮನ ಸೆಳೆಯಿತು.


    ಇದಕ್ಕೂ ಮೊದಲು ಬಿ.ಎಚ್ ರಸ್ತೆ ಅಂಬೇಡ್ಕರ್ ವೃತ್ತದಿಂದ ವಿದ್ಯಾರ್ಥಿಗಳು, ನಗರಸಭೆ ಸದಸ್ಯರು, ಅಧಿಕಾರಿಗಳು, ಸಿಬ್ಬಂದಿಗಳು, ಪೌರಕಾರ್ಮಿಕರು, ವಿವಿಧ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಜಾಗೃತಿ ಜಾಥಾ ನಡೆಸಲಾಯಿತು.

ಪರಿಸರ ದಸರಾ : ಭದ್ರಾ ನದಿ ತಟದಲ್ಲಿ ಸ್ವಚ್ಛತಾ ಕಾರ್ಯ

ಭದ್ರಾವತಿ ನಗರಸಭೆ ವತಿಯಿಂದ ಹಮ್ಮಿಕೊಳ್ಳಲಾಗಿರುವ ನಾಡಹಬ್ಬ ದಸರಾ ಅಂಗವಾಗಿ ಗುರುವಾರ ಪರಿಸರ ದಸರಾ ವಿಶೇಷ ಕಾರ್ಯಕ್ರಮ ನಡೆಯಿತು. ನದಿ ತಟದಲ್ಲಿ ನಡೆದ ಸ್ವಚ್ಛತಾ ಕಾರ್ಯ ಗಮನ ಸೆಳೆಯಿತು.


    ಭದ್ರಾವತಿ, ಸೆ. ೨೯ : ನಗರಸಭೆ ವತಿಯಿಂದ ಹಮ್ಮಿಕೊಳ್ಳಲಾಗಿರುವ ನಾಡಹಬ್ಬ ದಸರಾ ಅಂಗವಾಗಿ ಗುರುವಾರ ಪರಿಸರ ದಸರಾ ವಿಶೇಷ ಕಾರ್ಯಕ್ರಮ ನಡೆಯಿತು. ನದಿ ತಟದಲ್ಲಿ ನಡೆದ ಸ್ವಚ್ಛತಾ ಕಾರ್ಯ ಗಮನ ಸೆಳೆಯಿತು.
    ನಗರದ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದ ಸಮೀಪದಲ್ಲಿರುವ ಹೊಸಸೇತುವೆಯ ಎಡ ಮತ್ತು ಬಲ ಬದಿಯ ಭದ್ರಾ ನದಿ ತಟದಲ್ಲಿ ವಿವಿಧ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಸ್ವಚ್ಛತಾ ಕಾರ್ಯ ನಡೆಸುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.


    ನಗರಸಭೆ ಅಧ್ಯಕ್ಷೆ ಅನುಸುಧಾ ಮೋಹನ್ ಪಳನಿ ಸಹಿ ಮಾಡುವ ಮೂಲಕ ಚಾಲನೆ ನೀಡಿದರು. ನಂತರ ಆರಂಭಗೊಂಡ ಸ್ವಚ್ಛತಾ ಕಾರ್ಯ ಸುಮಾರು ೨ ಗಂಟೆ ಸಮಯ ನಡೆಯಿತು.
    ನಾಡಹಬ್ಬ ದಸರಾ ಆಚರಣೆ ವಿವಿಧ ಸಮಿತಿಗಳ ಅಧ್ಯಕ್ಷರು, ನಗರಸಭೆ ಸದಸ್ಯರು, ಅಧಿಕಾರಿಗಳು, ಸಿಬ್ಬಂದಿಗಳು, ಪೌರಕಾರ್ಮಿಕರು, ತಾಲೂಕು ಮಾಜಿ ಸೈನಿಕರ ಸಂಘ, ತಾಲೂಕು ರೈಫಲ್ ಅಸೋಸಿಯೇಷನ್, ಪತಂಜಲಿ ಯೋಗ ಸಮಿತಿ, ಹಳೇನಗರ ಮಹಿಳಾ ಸೇವಾ ಸಂಘ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳು ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡಿದ್ದವು.



Wednesday, September 28, 2022

ಪ್ರೇಕ್ಷಕರ ಮನಸೂರೆಗೊಂಡ ದಸರಾ ಜಾನಪದ ಉತ್ಸವ

ಭದ್ರಾವತಿ ನಗರಸಭೆ ವತಿಯಿಂದ ನಾಡಹಬ್ಬ ದಸರಾ ಅಂಗವಾಗಿ ಬುಧವಾರ ಹಳೇನಗರದ ಕನಕಮಂಟಪದಲ್ಲಿ ಆಯೋಜಿಸಲಾಗಿದ್ದ ದಸರಾ ಜಾನಪದ ಉತ್ಸವ ಪ್ರೇಕ್ಷಕರ ಮನಸೂರೆಗೊಂಡಿತು.
    ಭದ್ರಾವತಿ, ಸೆ. ೨೮: ನಗರಸಭೆ ವತಿಯಿಂದ ನಾಡಹಬ್ಬ ದಸರಾ ಅಂಗವಾಗಿ ಬುಧವಾರ ಹಳೇನಗರದ ಕನಕಮಂಟಪದಲ್ಲಿ ಆಯೋಜಿಸಲಾಗಿದ್ದ ದಸರಾ ಜಾನಪದ ಉತ್ಸವ ಪ್ರೇಕ್ಷಕರ ಮನಸೂರೆಗೊಂಡಿತು.
ಜನಪದ ಕಲಾ ಪ್ರಾಕಾರಗಳಿಗೆ ವೇದಿಕೆ ಕಲ್ಪಿಸಿಕೊಟ್ಟಿರುವುದು ಈ ಬಾರಿ ನಾಡಹಬ್ಬ ದಸರಾ ವಿಶೇಷತೆಗಳಲ್ಲಿ ಒಂದಾಗಿದೆ. ಜಾನಪದ ಕಲೆಗಳು ಎಂದರೆ ಮೂಗು ಮುರಿಯುವ ಇಂದಿನ ಯುವ ಜನತೆಯ ಮನಸ್ಥಿತಿಯನ್ನು ಬದಲಾಯಿಸುವ ಹೊಸ ಪ್ರಯತ್ನ ಸಹ ಇಂದಿನ ಜಾನಪದ ಕಲಾವಿದರು ಮೈಗೂಡಿಸಿಕೊಳ್ಳುವುದು ಅನಿವಾರ್ಯವಾಗಿದೆ. ಈ ನಿಟ್ಟಿನಲ್ಲಿ ಕಾಲಘಟ್ಟಕ್ಕೆ ತಕ್ಕಂತೆ ಹೊಸ ಪ್ರಯೋಗಗಳೊಂದಿಗೆ ಕಲಾವಿದರು ಪ್ರೇಕ್ಷಕರ ಮನಸೂರೆಗೊಳ್ಳುವಲ್ಲಿ ಯಶಸ್ವಿಯಾದರು.


    ಜಾನಪದ ಕಲಾವಿದ ತಮಟೆ ಜಗದೀಶ್ ನೇತೃತ್ವದಲ್ಲಿ ವಿವಿಧ ಜನಪದ ಕಲಾ ತಂಡಗಳು ತಮ್ಮ ಪ್ರತಿಭೆಗಳನ್ನು ವೇದಿಕೆಯಲ್ಲಿ ಅನಾವರಣಗೊಳಿಸಿದವು.
ಜಾನಪದ ಕಲಾಸಕ್ತರು, ವಿವಿಧ ಸಂಘಟನೆಗಳ ಪ್ರಮುಖರು, ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರು, ಸ್ಥಾಯಿ ಸಮಿತಿ ಅಧ್ಯಕ್ಷರು, ಸದಸ್ಯರು ಹಾಗು ಅಧಿಕಾರಿಗಳು, ಸಿಬ್ಬಂದಿಗಳು, ಪೌರಕಾರ್ಮಿಕರು ಮತ್ತು ಹಳೇನಗರ, ಹೊಸಮನೆ ಸೇರಿದಂತೆ ಸುತ್ತಮುತ್ತಲಿನ ಭಾಗದ ನಿವಾಸಿಗಳು ದಸರಾ ಜಾನಪದ ಉತ್ಸವ ಕಣ್ತುಂಬಿಕೊಂಡರು.



ನಾಡಹಬ್ಬ ದಸರಾ : ಸೆ.೨೯ರಂದು ಪರಿಸರ ದಸರಾ


    ಭದ್ರಾವತಿ, ಸೆ. ೨೮ : ನಗರಸಭೆ ವತಿಯಿಂದ ಹಮ್ಮಿಕೊಳ್ಳಲಾಗಿರುವ ನಾಡಹಬ್ಬ ದಸರಾ ಅಂಗವಾಗಿ ಸೆ.೨೯ರಂದು ಪರಿಸರ ದಸರಾ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
    ಬೆಳಿಗ್ಗೆ ೭ ಗಂಟೆಗೆ ಮಾಧವಚಾರ್ ವೃತ್ತದ ಎಡ ಮತ್ತು ಬಲ ಬದಿಯ ನದಿ ತಟದಲ್ಲಿ ವಿವಿಧ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಭದ್ರಾ ನದಿ ತಟದಲ್ಲಿ ಸ್ವಚ್ಛತೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ನಂತರ ೧೧ ಗಂಟೆಗೆ ಬಿ.ಎಚ್ ರಸ್ತೆ ಅಂಡರ್ ಬ್ರಿಡ್ಜ್ ಬಳಿ ಅಂಬೇಡ್ಕರ್ ವೃತ್ತದಿಂದ ಪರಿಸರ ಜನಜಾಗೃತಿ ಜಾಥಾ ಮತ್ತು ಕಲಾ ತಂಡಗಳಿಂದ ಪರಿಸರ ಜಾಗೃತಿ ಕುರಿತು ಬೀದಿ ನಾಟಕ ಪ್ರದರ್ಶನ ನಡೆಯಲಿದೆ.
    ಹಳೇನಗರದ ಕನಕಮಂಟಪ ಮೈದಾನದಲ್ಲಿ ಸಂಜೆ ೬.೩೦ಕ್ಕೆ ಗಾಂಧಿ ಕಂಡ ಕನಸು ಸ್ವಚ್ಛತೆ ಕುರಿತು ನಗರಸಭಾ ಪೌರ ಕಾರ್ಮಿಕರಿಂದ ರೂಪಕ ಹಾಗು ಕಾಲಾಯ ತಸ್ಮೈ ನಮಃ ವಿಡಂಬನಾತ್ಮಕ ರೂಪಕ ನಗರಸಭೆ ಸಿಬ್ಬಂದಿಗಳಿಂದ ನಡೆಯಲಿದ್ದು, ಕಿರುತೆರೆ ನಟ, ರಂಗಕರ್ಮಿ ಅಪರಂಜಿ ಶಿವರಾಜ್ ರೂಪಕ ರಚಿಸಿ ನಿರ್ದೇಶಿಸಿದ್ದಾರೆ.
    ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವಶರಣಯ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದು, ನಗರಸಭೆ ಅಧ್ಯಕ್ಷೆ ಅನುಸುಧಾ ಮೋಹನ್ ಅಧ್ಯಕ್ಷತೆ ವಹಿಸಲಿದ್ದಾರೆ. ಉಪಾಧ್ಯಕ್ಷ ಚನ್ನಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್‌ಕುಮಾರ್ ಮತ್ತು ಪೌರಾಯುಕ್ತ  ಎಚ್.ಎಂ ಮನುಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು.

ಪ್ರೊ. ಬಿ. ಕೃಷ್ಣಪ್ಪನವರ ಡಿಎಸ್‌ಎಸ್ ದುರ್ಬಳಕೆ : ಕಠಿಣ ಕ್ರಮಕ್ಕೆ ಆಗ್ರಹಿಸಿ ಪೊಲೀಸ್ ಠಾಣೆ ಮುಂಭಾಗ ಪ್ರತಿಭಟನೆ

ಕೆಲವು ಕಿಡಿಗೇಡಿಗಳು ಪ್ರೊ. ಬಿ. ಕೃಷ್ಣಪ್ಪನವರು ಸ್ಥಾಪಿಸಿರುವ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಸಂಘಟನೆಯ ಹೆಸರನ್ನು ದುರ್ಬಳಕೆ ಮಾಡಿಕೊಂಡು ವಂಚಿಸುತ್ತಿದ್ದು, ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಬುಧವಾರ ಭದ್ರಾವತಿಯಲ್ಲಿ ಪೇಪರ್‌ಟೌನ್ ಪೊಲೀಸ್ ಠಾಣೆ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
    ಭದ್ರಾವತಿ, ಸೆ. ೨೮ : ಕೆಲವು ಕಿಡಿಗೇಡಿಗಳು ಪ್ರೊ. ಬಿ. ಕೃಷ್ಣಪ್ಪನವರು ಸ್ಥಾಪಿಸಿರುವ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಸಂಘಟನೆಯ ಹೆಸರನ್ನು ದುರ್ಬಳಕೆ ಮಾಡಿಕೊಂಡು ವಂಚಿಸುತ್ತಿದ್ದು, ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಬುಧವಾರ ಪೇಪರ್‌ಟೌನ್ ಪೊಲೀಸ್ ಠಾಣೆ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
    ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯ ಖಜಾಂಚಿ ಸತ್ಯ ಹಾಗು ಜಿಲ್ಲಾ ಸಂಚಾಲಕ ಚಿನ್ನಯ್ಯ ನೇತೃತ್ವದಲ್ಲಿ ಠಾಣೆ ಮುಂಭಾಗ ಪ್ರತಿಭಟನೆ ನಡೆಸಲಾಗುತ್ತಿದ್ದು, ನ್ಯಾಯ ಲಭಿಸುವವರೆಗೂ ಹೋರಾಟ ನಡೆಸುವುದಾಗಿ ಎಚ್ಚರಿಸಲಾಯಿತು.
    ಜಿಲ್ಲಾ ಸಂಚಾಲಕ ಚಿನ್ನಯ್ಯ ಮಾತನಾಡಿ, ಕೆ.ಟಿ ಪ್ರಸನ್ನ, ರವಿನಾಯ್ಕ ಸೇರಿದಂತೆ ಇನ್ನೂ ಕೆಲವು ವ್ಯಕ್ತಿಗಳು ಪ್ರೊ. ಬಿ. ಕೃಷ್ಣಪ್ಪನವರು ಸ್ಥಾಪಿಸಿರುವ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಸಂಘಟನೆಯ ಹೆಸರನ್ನು ದುರ್ಬಳಕೆ ಮಾಡಿಕೊಂಡು ತಾಲೂಕಿನ ಹಿರಿಯೂರು ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ ಹಾಗು ಸದಸ್ಯರಿಗೆ ಬೆದರಿಕೆ ಹಾಕುತ್ತಿದ್ದಾರೆ. ಗ್ರಾಮ ಪಂಚಾಯಿತಿ ಕಾಮಗಾರಿಗಳಲ್ಲಿ ಕಮಿಷನ್ ನೀಡುವಂತೆ ಪೀಡಿಸುತ್ತಿದ್ದಾರೆ. ಗ್ರಾಮಠಾಣಾ ಜಾಗಕ್ಕೆ ಸಂಬಂಧಿಸಿದಂತೆ ವಿನಾಕಾರಣ ಗ್ರಾಮದಲ್ಲಿ ಗೊಂದಲದ ವಾತಾವರಣ ಮೂಡಿಸುತ್ತಿದ್ದಾರೆ. ಇಷ್ಟೆ ಅಲ್ಲದೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗು ಸದಸ್ಯರ ವಿರುದ್ಧ ಜಾತಿನಿಂದನೆ ಸುಳ್ಳು ದೂರು ದಾಖಲಿಸಿದ್ದಾರೆ ಎಂದು ಆರೋಪಿಸಿದರು.
    ಪ್ರೊ. ಬಿ ಕೃಷ್ಣಪ್ಪನವರು ಸ್ಥಾಪಿಸಿರುವ ಸಂಘಟನೆ ನಮ್ಮದ್ದಾಗಿದ್ದು, ನ್ಯಾಯಾಲಯದಲ್ಲಿ ಈ ಸಂಬಂಧ ಆದೇಶವಾಗಿದೆ ಎಂದು ಸುಳ್ಳು ಹೇಳಿಕೊಂಡು ಎಲ್ಲೆಡೆ ವಂಚಿಸಲಾಗುತ್ತಿದೆ. ಈಗಾಗಲೇ ಈ ವಿಚಾರಕ್ಕೆ ಸಂಬಂಧಿಸಿದಂತೆ ಎಂ. ಗುರುಮೂರ್ತಿ ಎಂಬುವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ಸಹ ದಾಖಲಾಗಿದೆ. ಈ ನಡುವೆಯೂ ಇದೀಗ ಹಿರಿಯೂರು ಗ್ರಾಮದಲ್ಲಿ ಸಂಘಟನೆ ಹೆಸರನ್ನು ದುರ್ಬಳಕೆ ಮಾಡಿಕೊಂಡು ಸಂಘಟನೆಯ ಹೆಸರಿಗೆ ಮಸಿ ಬಳಿಯುವ ಕೆಲಸ ಮಾಡಲಾಗುತಿದೆ. ಇಂತಹವರನ್ನು ತಕ್ಷಣ ಬಂಧಿಸಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಹೋರಾಟ ಮುಂದುವರೆಯಲಿದೆ ಎಂದು ಎಚ್ಚರಿಸಿದರು.
    ಪ್ರಮುಖರಾದ ವಿ. ವಿನೋದ್, ಕೆ. ರಂಗನಾಥ್, ಕುಪೇಂದ್ರಪ್ಪ, ಜಿಂಕ್‌ಲೈನ್ ಮಣಿ, ಕಾಣಿಕ್‌ರಾಜ್, ಎನ್. ಗೋವಿಂದ ಹಾಗು ಹಿರಿಯೂರು ಗ್ರಾಮ ಮುಖಂಡರು ಹಾಗು ಡಿಎಸ್‌ಎಸ್ ಕಾರ್ಯಕರ್ತರು ಪಾಲ್ಗೊಂಡಿದ್ದರು.

ಕೆಎಸ್‌ಆರ್‌ಟಿಸಿ ಬಸ್-ದ್ವಿಚಕ್ರ ವಾಹನ ನಡುವೆ ಅಪಘಾತ : ಓರ್ವ ಸ್ಥಳದಲ್ಲಿಯೇ ಸಾವು

ಭದ್ರಾವತಿ ನಗರದ ಉಂಬ್ಳೆಬೈಲು ರಸ್ತೆ ನ್ಯೂಟೌನ್ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜು ಮುಂಭಾಗ ಬುಧವಾರ ಮಧ್ಯಾಹ್ನ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಆಂಜನೇಯ ಅಗ್ರಹಾರ ಮೂರನೇ ಕ್ರಾಸ್ ನಿವಾಸಿ ಲೋಕೇಶ್.
    ಭದ್ರಾವತಿ, ಸೆ. ೨೮: ನಗರದ ಉಂಬ್ಳೆಬೈಲು ರಸ್ತೆ  ನ್ಯೂಟೌನ್ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜು ಮುಂಭಾಗ ಬುಧವಾರ ಮಧ್ಯಾಹ್ನ ನಡೆದ ರಸ್ತೆ ಅಪಘಾತದಲ್ಲಿ  ದ್ವಿಚಕ್ರ  ವಾಹನ ಸವಾರನೋರ್ವ ಸ್ಥಳದಲ್ಲಿಯೇ ಮತಪಟ್ಟಿರುವ  ಘಟನೆ ನಡೆದಿದೆ.
    ಆಂಜನೇಯ ಅಗ್ರಹಾರ ಮೂರನೇ ಕ್ರಾಸ್ ನಿವಾಸಿ ಲೋಕೇಶ್(೩೬) ಮೃತಪಟ್ಟಿದ್ದು, ಈತ ಮಧ್ಯಾಹ್ನ ದ್ವಿಚಕ್ರ ವಾಹನದಲ್ಲಿ  ಹೋಗುವಾಗ ಕೆಎಸ್‌ಆರ್ ಟಿ ಸಿ ಬಸ್ ನಡುವೆ ಅಪಘಾತ ಸಂಭವಿಸಿ ತಲೆಗೆ ತೀವ್ರ ಗಾಯಗೊಂಡು ಸ್ಥಳದಲ್ಲಿಯೇ ಮತಪಟ್ಟಿದ್ದಾನೆ.
    ಈ ರಸ್ತೆಯಲ್ಲಿ ಶಾಲಾ-ಕಾಲೇಜು, ಪೊಲೀಸ್ ಠಾಣೆ, ಚರ್ಚ್ ಗಳು ಅಧಿಕವಾಗಿವೆ. ಈ ರಸ್ತೆಯನ್ನು ಇತ್ತೀಚೆಗೆ ಅಗಲೀಕರಣಗೊಳಿಸಿ ಸುಗಮ ಸಂಚಾರಕ್ಕೆ ಅವಕಾಶ ಮಾಡಿ ಕಲ್ಪಿಸಿಕೊಡಲಾಗಿದೆ. ಆದರೂ ಸಹ ಈ ರಸ್ತೆಯಲ್ಲಿ ವಾಹನ ದಟ್ಟನೆ ಅಧಿಕವಾಗಿ ಅಪಘಾತಗಳು ಹೆಚ್ಚಾಗುತ್ತಿವೆ. ಅಲ್ಲದೆ  ವೇಗ ಮಿತಿ ಇಲ್ಲದಿರುವುದು ಸಹ ಅಪಘಾತ ಹೆಚ್ಚಳಕ್ಕೆ ಕಾರಣ ಎನ್ನಲಾಗಿದೆ. ನ್ಯೂ ಟೌನ್ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.


ಭದ್ರಾವತಿ ನಗರದ ಉಂಬ್ಳೆಬೈಲು ರಸ್ತೆ ನ್ಯೂಟೌನ್ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜು ಮುಂಭಾಗ ಬುಧವಾರ ಮಧ್ಯಾಹ್ನ ನಡೆದ ರಸ್ತೆ ಅಪಘಾತದಲ್ಲಿ ದ್ವಿಚಕ್ರವಾಹನ ವಾಹನ ಕೆಎಸ್‌ಆರ್‌ಟಿಸಿ ಬಸ್‌ಗೆ ಸಿಲುಕಿಕೊಂಡಿರುವುದು.

Tuesday, September 27, 2022

7ನೇ ಆಲ್ ಇಂಡಿಯನ್ ನ್ಯಾಷನಲ್-2022 ಷಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಬಹುಮಾನ

 ಕೆ. ಪವನ್ ಕುಮಾರ್ ಅಂತರಾಷ್ಟ್ರೀಯ ಮಟ್ಟಕ್ಕೆ  ಆಯ್ಕೆ

ಕೆ. ಪವನ್ ಕುಮಾರ್
    ಭದ್ರಾವತಿ, ಸೆ. 28: ಮೂಲತಃ ಕಾಗದ ನಗರದ 6ನೇ ವಾರ್ಡ್ ನಿವಾಸಿ  ಕೆ. ಪವನ್ ಕುಮಾರ್  7ನೇ ಆಲ್ ಇಂಡಿಯನ್ ನ್ಯಾಷನಲ್-2022 ಷಟಲ್ ಬ್ಯಾಡ್ಮಿಂಟನ್   ಪಂದ್ಯಾವಳಿಯಲ್ಲಿ ಭಾಗವಹಿಸಿ ಬಹುಮಾನಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.   
     ಸಿಂಗಲ್ಸ್  ಮತ್ತು ಡಬಲ್ಸ್ ನಲ್ಲಿ ಪ್ರಥಮ ಸ್ಥಾನದೊಂದಿಗೆ ಚಿನ್ನ ಹಾಗೂ ಮಿಕ್ಸೆಡ್ ಡಬಲ್ಸ್ ನಲ್ಲಿ ಬೆಳ್ಳಿ ಪದಕ ಪಡೆಯುವ ಮೂಲಕ ಕೀರ್ತಿ ತಂದಿದ್ದಾರೆ.  ಅಲ್ಲದೆ ಅಂತರಾಷ್ಟ್ರೀಯ ಮಟ್ಟಕ್ಕೆ  ಆಯ್ಕೆಯಾಗಿದ್ದಾರೆ.
      ಕೆ. ಪವನ್ ಕುಮಾರ್ ಅವರನ್ನು ಕ್ರೀಡಾಭಿಮಾನಿಗಳು, ವಿವಿಧ ಸಂಘ ಸಂಸ್ಥೆಗಳ ಪ್ರಮುಖರು, ಸಾರ್ವಜನಿಕರು ಅಭಿನಂದಿಸಿದ್ದಾರೆ.

ನಗರ ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗಕ್ಕೆ ೪ ಮಂದಿ ನೇಮಕ


ಭದ್ರಾವತಿ ನಗರ ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗಕ್ಕೆ ಹೊಸದಾಗಿ ನೇಮಕಗೊಂಡ ನೂತನ ಪದಾಧಿಕಾರಿಗಳಿಗೆ ನೇಮಕ ಆದೇಶ ಪ್ರತಿ ವಿತರಿಸಿ ಶಾಸಕ ಬಿ.ಕೆ ಸಂಗಮೇಶ್ವರ್ ಅಭಿನಂದಿಸಿದರು.
    ಭದ್ರಾವತಿ, ಸೆ. ೨೭: ನಗರ ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗಕ್ಕೆ ಹೊಸದಾಗಿ ೪ ಮಂದಿ ಪದಾಧಿಕಾರಿಗಳನ್ನು ನೇಮಕಗೊಳಿಸಿ ನಗರ ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಬಿ.  ಗಂಗಾಧರ್ ಆದೇಶ ಹೊರಡಿಸಿದ್ದಾರೆ.
    ಶಾಸಕ ಬಿ.ಕೆ ಸಂಗಮೇಶ್ವರ್‌ರವರ ನಿರ್ದೇಶನದ ಮೇರೆಗೆ ಪ್ರಧಾನ ಸಂಚಾಲಕರಾಗಿ ಎಚ್. ಮಂಜಪ್ಪ, ಪ್ರಧಾನ ಕಾರ್ಯದರ್ಶಿಯಾಗಿ ಎಂ. ಬಸವರಾಜ್, ಸಂಘಟನಾ ಕಾರ್ಯದರ್ಶಿಗಳಾಗಿ ಸಂತೋಷ್ ಮತ್ತು ಜಿ. ಹರೀಶ್ ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಲಾಗಿದೆ.
    ನೂತನ ಪದಾಧಿಕಾರಿಗಳಿಗೆ ನೇಮಕ ಆದೇಶ ಪ್ರತಿ ವಿತರಿಸಿ ಶಾಸಕ ಬಿ.ಕೆ ಸಂಗಮೇಶ್ವರ್ ಅಭಿನಂದಿಸಿದರು. ಪ್ರಮುಖರಾದ ಬಲ್ಕೀಶ್ ಬಾನು, ಸಿ.ಎಂ ಖಾದರ್, ಟಿ.ವಿ ಗೋವಿಂದಸ್ವಾಮಿ, ವೈ. ರೇಣುಕಮ್ಮ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಎಸ್ ಸುಂದರೇಶ್, ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಟಿ. ಚಂದ್ರೇಗೌಡ, ಮಹಿಳಾ ಘಟಕದ ಅಧ್ಯಕ್ಷೆ ಹೇಮಾವತಿ, ಯುವ ಕಾಂಗ್ರೆಸ್ ಗ್ರಾಮಾಂತರ ಅಧ್ಯಕ್ಷ ಅಫ್ತಾಬ್ ಅಹಮದ್, ಅಮೀರ್‌ಜಾನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ದಸರಾ ಕ್ರೀಡಾಕೂಟದ ರಾಜ್ಯಮಟ್ಟದ ಕರಾಟೆ ಸ್ಪರ್ಧೆ : ಇಬ್ಬರು ವಿದ್ಯಾರ್ಥಿನಿಯರಿಗೆ ಚಿನ್ನದ ಪದಕ

ಶಿವಮೊಗ್ಗದಲ್ಲಿ ನಡೆದ ಮಕ್ಕಳ ದಸರಾ ಕ್ರೀಡಾಕೂಟದ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಭದ್ರಾವತಿ ಸೆಂಟ್ ಜೋಸೆಫ್ ಕಾಲೇಜಿನ ವಿದ್ಯಾರ್ಥಿಗಳಾದ  ಸಿಂಚನ ಎಂ ಪಾಟೀಲ್ ಹಾಗೂ ಪ್ರಕೃತಿ ಆರ್ ಗೌಡ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ತಮ್ಮದಾಗಿಸಿಕೊಂಡಿದ್ದಾರೆ.
    ಭದ್ರಾವತಿ, ಸೆ. ೨೭: ಶಿವಮೊಗ್ಗದಲ್ಲಿ ನಡೆದ ಮಕ್ಕಳ ದಸರಾ ಕ್ರೀಡಾಕೂಟದ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ನಗರದ ಸೆಂಟ್ ಜೋಸೆಫ್ ಕಾಲೇಜಿನ ವಿದ್ಯಾರ್ಥಿಗಳಾದ  ಸಿಂಚನ ಎಂ ಪಾಟೀಲ್ ಹಾಗೂ ಪ್ರಕೃತಿ ಆರ್ ಗೌಡ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ತಮ್ಮದಾಗಿಸಿಕೊಂಡಿದ್ದಾರೆ.
    ಸಿಂಚನ ಎಂ. ಪಾಟೀಲ್ ಹಾಗು ಪ್ರಕೃತಿ ಆರ್. ಗೌಡ ಅವರು ಈಗಾಗಲೇ ತಾಲೂಕು, ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನಗಳನ್ನು ಪಡೆದುಕೊಂಡಿದ್ದು, ರಾಜ್ಯಮಟ್ಟಕ್ಕೂ ಸಹ ಆಯ್ಕೆಯಾಗಿ ಕೀರ್ತಿ ತಂದಿದ್ದಾರೆ.
    ಇದೀಗ ದಸರಾ ಕ್ರೀಡಾಕೂಟದ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಭಾಗವಹಿಸಿ ಚಿನ್ನದ ಪದಕ ಪಡೆದುಕೊಂಡಿದ್ದಾರೆ. ಈ ಇಬ್ಬರು ವಿದ್ಯಾರ್ಥಿಗಳನ್ನು  ಬಾರಂದೂರು ಮಂಜುನಾಥ್ ಸೇರಿದಂತೆ ಇನ್ನಿತರರು ಅಭಿನಂದಿಸಿದ್ದಾರೆ.  

ಉಕ್ಕಿನ ನಗರದ ಮೂವರು ಪಿಎಫ್‌ಐ ಕಾರ್ಯಕರ್ತರು ಪೊಲೀಸರ ವಶಕ್ಕೆ

ಭದ್ರಾವತಿ ಖಾಜಿ ಮೊಹಲ್ಲಾ ಕೋಟೆ ಏರಿಯಾದ ಇಬ್ಬರು ಹಾಗೂ ಅನ್ವರ್ ಕಾಲೋನಿಯ ಒಬ್ಬನನ್ನು ಬಂಧಿಸಿ, ಮಂಗಳವಾರ ತಹಸೀಲ್ದಾರ್ ಮುಂದೆ ಹಾಜರುಪಡಿಸಲಾಯಿತು. 
    ಭದ್ರಾವತಿ, ಸೆ. ೨೭:  ಹಳೇನಗರ ಠಾಣೆ ಪೊಲೀಸರು ಮಂಗಳ ಬೆಳಿಗ್ಗೆ ನಡೆಸಿದ ದಾಳಿಯಲ್ಲಿ ಬಂಧನಕ್ಕೆ ಒಳಗಾಗಿರುವ ಮೂವರು ಪಿಎಫ್'ಐ ಕಾರ್ಯಕರ್ತರನ್ನು ಒಂದು ವಾರಗಳ ಕಾಲ ಪೊಲೀಸರ ವಶಕ್ಕೆ ವಹಿಸಲಾಗಿದೆ ಎಂಬ ತಿಳಿದು ಬಂದಿದೆ.
    ರಾಜ್ಯದಾದ್ಯಂತ ಬೆಳಗ್ಗಿನ ಜಾವ ಪಿಎಫ್‌ಐ ಹಾಗೂ ಎಸ್‌ಡಿಪಿಐ ಕಾರ್ಯಕರ್ತರುಗಳ ನಿವಾಸಗಳ ಮೇಲೆ ಪೊಲೀಸರು ದಾಳಿ ನಡೆಸಿರುವಂತೆಯೇ ನಗರದಲ್ಲೂ ಸಹ ದಾಳಿ ನಡೆಸಲಾಗಿದ್ದು, ಹಳೇನಗರ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
    ಖಾಜಿ ಮೊಹಲ್ಲಾ ಕೋಟೆ ಏರಿಯಾದ ಇಬ್ಬರು ಹಾಗೂ ಅನ್ವರ್ ಕಾಲೋನಿಯ ಒಬ್ಬನನ್ನು ಬಂಧಿಸಿ, ತಹಸೀಲ್ದಾರ್ ಮುಂದೆ ಹಾಜರುಪಡಿಸಲಾಯಿತು. ಈ ಮೂವರನ್ನು ಒಂದು ವಾರಗಳ ಕಾಲ ಪೊಲೀಸ್ ವಶಕ್ಕೆ ವಹಿಸಿ ತಹಸೀಲ್ದಾರ್‌ರವರು ಆದೇಶಿಸಿದ್ದಾರೆಂಬ ಮಾಹಿತಿ ತಿಳಿದು ಬಂದಿದೆ.
    ಬಂಧಿತರನ್ನು ತಾಹಿರ್, ಸಾಧಿಕ್ ಹಾಗೂ ಖುರೇಷಿ ಎಂದು ಗುರುತಿಸಲಾಗಿದ್ದು, ಬೆಳಗ್ಗಿನ ಜಾವ ಸುಮಾರು ೩ ಗಂಟೆ ಸಮಯದಲ್ಲಿ ಈ ಮೂವರ ನಿವಾಸಗಳ ಮೇಲೆ ದಾಳಿ ನಡೆಸಿ ಬಂಧಿಸಲಾಗಿದೆ ಎನ್ನಲಾಗಿದೆ.
    ಶಾಂತಿ, ಸುವ್ಯವಸ್ಥೆ ಕದಡುವ ಸಾಧ್ಯತೆ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಕಾರ್ಯಕರ್ತರನ್ನು ಬಂಧಿಸಿ, ಸೆಕ್ಷನ್ ೧೦೭, ೧೫೧ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.



ಕಾಗವಾಡ ವಿಧಾಸಭಾ ಕ್ಷೇತ್ರದ ಶಾಸಕ ಶ್ರೀಮಂತ ಪಾಟೀಲ್‌ಗೆ ಪುನಃ ಸಚಿವ ಸ್ಥಾನ ನೀಡಿ

ಶ್ರೀ ಛತ್ರಪತಿ ಶಿವಾಜಿ ಸೇವಾ ಸಂಘ ಸರ್ಕಾರಕ್ಕೆ ಆಗ್ರಹ

ಭದ್ರಾವತಿ ಶ್ರೀ ಛತ್ರಪತಿ ಶಿವಾಜಿ ಸೇವಾ ಸಂಘದ ಅಧ್ಯಕ್ಷ ಸಚಿನ್ ಎಸ್ ಸಿಂಧ್ಯಾ ಕಾಗವಾಡ ವಿಧಾಸಭಾ ಕ್ಷೇತ್ರದ ಶಾಸಕ ಶ್ರೀಮಂತ ಪಾಟೀಲ್ ಅವರನ್ನು ಭೇಟಿ ಮಾಡಿ ಸಚಿವ ಸ್ಥಾನ ನೀಡಲು ಸರ್ಕಾರಕ್ಕೆ ಆಗ್ರಹಿಸಿದರು.
    ಭದ್ರಾವತಿ, ಸೆ. ೨೭ : ಕ್ಷತ್ರಿಯ ಮರಾಠ ಸಮುದಾಯದ ನಾಯಕರಲ್ಲಿ ಒಬ್ಬರಾಗಿರುವ ಕಾಗವಾಡ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀಮಂತ್ ಪಾಟೀಲ್‌ರವರಿಗೆ ಪುನಃ  ಸಚಿವ ಸ್ಥಾನ ನೀಡಬೇಕೆಂದು ಶ್ರೀ ಛತ್ರಪತಿ ಶಿವಾಜಿ ಸೇವಾ ಸಂಘದ ಅಧ್ಯಕ್ಷ ಸಚಿನ್ ಎಸ್ ಸಿಂಧ್ಯಾ ಅಗ್ರಹಿಸಿದ್ದಾರೆ.
    ಶ್ರೀಮಂತ್ ಪಾಟೀಲ್‌ರವರನ್ನು ಸಂಪುಟದಿಂದ ಕೈ ಬಿಡುವ ಮೂಲಕ ಮರಾಠ ಸಮುದಾಯವನ್ನು ಕಡೆಗಣಿಸಲಾಗಿದೆ. ತಕ್ಷಣ ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ಸೂಕ್ತ ಸ್ಥಾನಮಾನ ನೀಡಬೇಕು. ಮರಾಠ ಸಮುದಾಯದ ಏಳಿಗೆಗೆ ಮುಂದಾಗಬೇಕೆಂದು ಒತ್ತಾಯಿಸಲಾಗಿದೆ.
    ಸಂಘದ ಮಾಜಿ ಅಧ್ಯಕ್ಷ ಯಸವಂತರಾವ್ ಘೋರ್ಪಡೆ, ಉಪಾಧ್ಯಕ್ಷ ವಿಶ್ವನಾಥ್‌ರಾವ್ ಸಿಂಧೆ, ಪ್ರಧಾನ ಕಾರ್ಯದರ್ಶಿ ವಿಶ್ವೇಶ್ವರ ರಾವ್ ಗಾಯಕ್ವಾಡ್, ಸಹ ಕಾರ್ಯದರ್ಶಿ ಮೋಹನ್ ರಾವ್, ಖಜಾಂಚಿ ರಮೇಶ್ ಪಟತಾರೆ, ನಿರ್ದೇಶಕರಾದ ಮಲ್ಲೇಶ್ ರಾವ್, ಪರಶುರಾಮ್ ರಾವ್, ಜಗನ್ನಾಥ ರಾವ್, ಕೃಷ್ಣೋಜಿರಾವ್, ರಾಮಚಂದ್ರ ರಾವ್, ಚಂದ್ರೋಜಿರಾವ್, ಶಂಕರ್‌ರಾವ್ ಸೇರಿದಂತೆ ಇನ್ನಿತರರು ಶ್ರೀಮಂತ್ ಪಾಟೀಲ್ ಅವರನ್ನು ಭೇಟಿ ಮಾಡಿ ಸರ್ಕಾರಕ್ಕೆ ಆಗ್ರಹಿಸಲಾಗಿದೆ.
    ಅ.೧೧ರಂದು ವಾರ್ಷಿಕ ಮಹಾಸಭೆ: 
ಶ್ರೀ ಛತ್ರಪತಿ ಶಿವಾಜಿ ಸೇವಾ ಸಂಘದ ವಾರ್ಷಿಕ ಮಹಾಸಭೆ ಅ.೧೧ರಂದು ಬೆಳಿಗ್ಗೆ ೧೧ ಗಂಟೆಗೆ ನಡೆಯಲಿದ್ದು, ಸದಸ್ಯರು ತಪ್ಪದೇ ಭಾಗವಹಿಸಿ ಯಶಸ್ವಿಗೊಳಿಸುವಂತೆ ಸಚಿನ್ ಎಸ್. ಸಿಂಧ್ಯಾ ಕೋರಿದ್ದಾರೆ. 

Monday, September 26, 2022

ಬೆಂಕಿಪುರ ಭದ್ರಾವತಿಯಾಗಿ ರೂಪುಗೊಳ್ಳಲು ಮೈಸೂರು ಸಂಸ್ಥಾನದ ಕೊಡುಗೆ ಅಪಾರ : ಡಿ.ಸಿ ಮಾಯಣ್ಣ

ನಗರಸಭೆ ವತಿಯಿಂದ ಹಮ್ಮಿಕೊಳ್ಳಲಾಗಿರುವ ನಾಡಹಬ್ಬ ದಸರಾ ೧೦ ದಿನಗಳ ಆಚರಣೆಗೆ ಚಾಲನೆ

ಭದ್ರಾವತಿ ನಗರಸಭೆವತಿಯಿಂದ ಹಮ್ಮಿಕೊಳ್ಳಲಾಗಿರುವ ನಾಡಹಬ್ಬ ದಸರಾ ೧೦ ದಿನಗಳ ಆಚರಣೆಗೆ ಹಿರಿಯ ಕಾರ್ಮಿಕ ಹೋರಾಟ ಡಿ.ಸಿ ಮಾಯಣ್ಣ ಸೋಮವಾರ ಚಾಲನೆ ನೀಡಿದರು.
    ಭದ್ರಾವತಿ, ಸೆ. ೨೬ : ಬೆಂಕಿಪುರ ನಗರವನ್ನು ಭದ್ರಾವತಿವನ್ನಾಗಿಸಿದ ಹಿರಿಮೆ ಮೈಸೂರು ಸಂಸ್ಥಾನಕ್ಕೆ ಲಭಿಸುತ್ತದೆ ಎಂದು ಹಿರಿಯ ಕಾರ್ಮಿಕ ಹೋರಾಟ ಡಿ.ಸಿ ಮಾಯಣ್ಣ ಹೇಳಿದರು.
    ಅವರು ಸೋಮವಾರ ನಗರಸಭೆವತಿಯಿಂದ ಹಮ್ಮಿಕೊಳ್ಳಲಾಗಿರುವ ನಾಡಹಬ್ಬ ದಸರಾ ೧೦ ದಿನಗಳ ಆಚರಣೆಗೆ ಚಾಲನೆ ನೀಡಿ ಮಾತನಾಡಿದರು. ಮೈಸೂರು ಸಂಸ್ಥಾನದ ಮಹಾರಾಜರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಅಭಿವೃದ್ಧಿ ಚಿಂತನೆಗಳು ಹಾಗು ಭಾರತರತ್ನ ಸರ್.ಎಂ ವಿಶ್ವೇಶ್ವರಾಯ ಅವರ ಶ್ರಮದ ಫಲವಾಗಿ ಮೈಸೂರು ಸಂಸ್ಥಾನದಲ್ಲಿ ಅಭಿವೃದ್ಧಿ ಕಾರ್ಯಗಳು ಬೆಳವಣಿಗೆ ಹೊಂದಿದವು. ಏಷ್ಯಾದಲ್ಲಿಯೇ ಮೊದಲ ಬಾರಿಗೆ ಈ ಭಾಗದಲ್ಲಿ ಜಲವಿದ್ಯುತ್ ಯೋಜನೆಯನ್ನು ಆರಂಭಿಸಲಾಯಿತು. ಕೆಮ್ಮಣ್ಣು ಗುಂಡಿಯಲ್ಲಿ ಅದಿರು ನಿಕ್ಷೇಪವಿರುವುದನ್ನು ಪತ್ತೆಹಚ್ಚುವ ಮೂಲಕ ಕಬ್ಬಿಣದ ಅದಿರು ಕಾರ್ಖಾನೆಯನ್ನು ಪ್ರಾರಂಭಿಸಲಾಯಿತು. ನಂತರ ಕಾಗದ ಕಾರ್ಖಾನೆ ಸಹ ಆರಂಭಿಸಲಾಯಿತು. ಆರಂಭದಲ್ಲಿ ಎರಡು ಕಾರ್ಖಾನೆಗಳನ್ನು ನಂಬಿ ಸುಮಾರು ೨೦ ಸಾವಿರಕ್ಕೂ ಹೆಚ್ಚಿನ ಕಾರ್ಮಿಕ ಕುಟುಂಬಗಳು ಬದುಕು ರೂಪಿಸಿಕೊಂಡಿದ್ದವು. ಇವೆಲ್ಲದರ ಪರಿಣಾಮ ಬೆಂಕಿಪುರ ಭದ್ರಾವತಿಯಾಗಿ ವಿಶ್ವದ ಭೂಪಟದಲ್ಲಿ ಗುರುತಿಸಿ ಸಾಧ್ಯವಾಯಿತು ಎಂದರು.
    ಪ್ರಸ್ತುತ ಎರಡು ಕಾರ್ಖಾನೆಗಳು ಅವನತಿ ದಾರಿಯಲ್ಲಿ ಸಾಗುತ್ತಿರುವುದು ವಿಪರ್ಯಾಸದ ಸಂಗತಿಯಾಗಿದೆ. ಇದುವರೆಗೂ ಯಾವುದೇ ಸರ್ಕಾರ ಈ ಎರಡು ಕಾರ್ಖಾನೆಗಳ ಅಭಿವೃದ್ಧಿಗೆ ಇಚ್ಛಾಶಕ್ತಿ ತೋರಿಸಿಲ್ಲ. ಮುಂಬರುವ ಸರ್ಕಾರಗಳು ಈ ಎರಡು ಕಾರ್ಖಾನೆಗಳನ್ನು ಅಭಿವೃದ್ಧಿಪಡಿಸುವಂತಾಗಲಿ ಎಂದು ಚಾಮುಂಡೇಶ್ವರಿ ದೇವಿಯಲ್ಲಿ ಪ್ರಾರ್ಥಿಸುತ್ತೇನೆ ಎಂದರು.
    ಶಾಸಕ ಬಿ.ಕೆ ಸಂಗಮೇಶ್ವರ್ ಮಾತನಾಡಿ, ಪ್ರಸ್ತುತ ಕೇಂದ್ರ ಹಾಗು ರಾಜ್ಯ ಸರ್ಕಾರಗಳು ಜನ ವಿರೋಧಿ ನೀತಿಗಳನ್ನು ಅನುಸರಿಸುತ್ತಿವೆ. ಮುಂಬರುವ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ. ಈ ಸರ್ಕಾರದಲ್ಲಿ ಸಚಿವನಾಗುವುದು ಖಚಿತ. ಈ ಎರಡು ಕಾರ್ಖಾನೆಗಳನ್ನು ಅಭಿವೃದ್ಧಿ ಪಡಿಸುವುದು ನನ್ನ ಮುಂದಿನ ಗುರಿಯಾಗಿದೆ ಎಂದರು.
    ವೇದಿಕೆಯಲ್ಲಿ ನಗರಸಭೆ ನೂತನ ಅಧ್ಯಕ್ಷೆ ಅನುಸುಧಾ ಮೋಹನ್ ಪಳನಿ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್‌ಕುಮಾರ್, ವಿವಿಧ ಸಮಿತಿ ಅಧ್ಯಕ್ಷರುಗಳಾದ ವಿ. ಕದಿರೇಶ್, ಲತಾ ಚಂದ್ರಶೇಖರ್, ಆರ್. ಶ್ರೇಯಸ್(ಚಿಟ್ಟೆ), ಜಾರ್ಜ್, ಕಾಂತರಾಜು, ಕೋಟೇಶ್ವರರಾವ್, ಮಾಜಿ ಅಧ್ಯಕ್ಷರಾದ ಗೀತಾ ರಾಜ್‌ಕುಮಾರ್, ಬಿ.ಟಿ ನಾಗರಾಜ್, ಡಾ.ಎಸ್.ಎಸ್ ವಿಜಯದೇವಿ, ಪೌರಾಯುಕ್ತ ಮನುಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಧನಲಕ್ಷ್ಮಿ ಪ್ರಾರ್ಥಿಸಿದರು. ಉಪಾಧ್ಯಕ್ಷ ಚನ್ನಪ್ಪ ಸ್ವಾಗತಿಸಿದರು. ಸಮುದಾಯ ಸಂಘಟನಾ ಅಧಿಕಾರಿ ಸುವಾಸಿನಿ ವಂದಿಸಿದರು.
    ಇದಕ್ಕೂ ಮೊದಲು ಮಾಧವಚಾರ್ ವೃತ್ತದಿಂದ ಡಿ.ಸಿ ಮಾಯಣ್ಣ ಅವರನ್ನು ಮಂಗಳ ವಾದ್ಯಗಳೊಂದಿಗೆ ಮೆರವಣಿಯಲ್ಲಿ ಕರೆ ತರಲಾಯಿತು. ನಂತರ ಶ್ರೀ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.
    ನಗರಸಭೆ ಸದಸ್ಯರು, ಅಧಿಕಾರಿಗಳು, ಸಿಬ್ಬಂದಿಗಳು, ಪೌರಸೇವಾ ನೌಕರರ ಸೇವಾ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಪೌರಕಾರ್ಮಿಕರು, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.


ಭದ್ರಾವತಿ ನಗರಸಭೆವತಿಯಿಂದ ಹಮ್ಮಿಕೊಳ್ಳಲಾಗಿರುವ ನಾಡಹಬ್ಬ ದಸರಾ ಆಚರಣೆ ಉದ್ಘಾಟಿಸಲು ಆಗಮಿಸಿದ ಡಿ.ಸಿ ಮಾಯಣ್ಣ ಅವರನ್ನು ಮಾಧವಚಾರ್ ವೃತ್ತದಿಂದ ಮಂಗಳ ವಾದ್ಯಗಳೊಂದಿಗೆ ಮೆರವಣಿಯಲ್ಲಿ ಕರೆ ತರಲಾಯಿತು

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಧರಣಿ ಸತ್ಯಾಗ್ರಹ

ಅಮಾನತುಗೊಂಡಿರುವ ನ್ಯಾಯಾಬೆಲೆ ಅಂಗಡಿಗಳನ್ನು ವಜಾಗೊಳಿಸುವುದು, ಕರ್ತವ್ಯ ಲೋಪವೆಸಗಿರುವ ಆಹಾರ ಇಲಾಖೆ ಅಧಿಕಾರಿಗಳನ್ನು ಸೇವೆಯಿಂದ ಅಮಾನತುಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸೋಮವಾರ ಭದ್ರಾವತಿ ತಾಲೂಕು ಕಛೇರಿ ಮಿನಿ ವಿಧಾನಸೌಧದ ಮುಂಭಾಗ ಧರಣಿ ಸತ್ಯಾಗ್ರಹ ಆರಂಭಗೊಂಡಿದೆ.
    ಭದ್ರಾವತಿ, ಸೆ. ೨೬: ಅಮಾನತುಗೊಂಡಿರುವ ನ್ಯಾಯಾಬೆಲೆ ಅಂಗಡಿಗಳನ್ನು ವಜಾಗೊಳಿಸುವುದು, ಕರ್ತವ್ಯ ಲೋಪವೆಸಗಿರುವ ಆಹಾರ ಇಲಾಖೆ ಅಧಿಕಾರಿಗಳನ್ನು ಸೇವೆಯಿಂದ ಅಮಾನತುಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸೋಮವಾರ ತಾಲೂಕು ಕಛೇರಿ ಮಿನಿ ವಿಧಾನಸೌಧದ ಮುಂಭಾಗ ಧರಣಿ ಸತ್ಯಾಗ್ರಹ ಆರಂಭಗೊಂಡಿದೆ.
    ಸರ್ಕಾರದ ಆದೇಶದ ಪ್ರಕಾರ ನ್ಯಾಯಬೆಲೆ ಅಂಗಡಿಗಳು ಬೆಳಿಗ್ಗೆ ೮ ಗಂಟೆಯಿಂದ ಮಧ್ಯಾಹ್ನ ೧೨ ಗಂಟೆವರೆಗೆ ಹಾಗು ಸಂಜೆ ೪ ರಿಂದ ರಾತ್ರಿ ೮ ಗಂಟೆವರೆಗೆ ಕಾರ್ಯ ನಿರ್ವಹಿಸಬೇಕು. ಮಂಗಳವಾರ ಹೊರತುಪಡಿಸಿ ಉಳಿದ ಎಲ್ಲಾ ದಿನ ಕಡ್ಡಾಯವಾಗಿ ತೆರೆದಿರಬೇಕು ಹಾಗು ಅಂಗಡಿ ಮುಂಭಾಗದಲ್ಲಿ ಸ್ಥಳೀಯ ಆಹಾರ ಇಲಾಖೆ ಅಧಿಕಾರಿಗಳ ದೂರವಾಣಿ ಸಂಖ್ಯೆ, ಜಾಗೃತಿ ಸಮಿತಿ ಸದಸ್ಯರ ಹೆಸರು, ಸಂಖ್ಯೆ, ಸಿಸಿಟಿವಿ ಕ್ಯಾಮೆರಾ ಅಳವಡಿಕೆ, ಕಾರ್ಯ ನಿರ್ವಹಿಸುವ ಸಮಯ ಮತ್ತು ರಜಾ ದಿನದ ಬಗ್ಗೆ ಕಪ್ಪು ಹಲಗೆಯ ಮೇಲೆ ನಮೂದಿಸಬೇಕು. ಆದರೆ ಸ್ಥಳೀಯ ಅಧಿಕಾರಿಗಳ ಕುಮ್ಮಕ್ಕಿನಿಂದ ಸರ್ಕಾರದ ಆದೇಶಗಳನ್ನು ನ್ಯಾಯಬೆಲೆ ಅಂಗಡಿಗಳು ಪಾಲಿಸುತ್ತಿಲ್ಲ ಎಂದು ಆರೋಪಿಸಲಾಯಿತು.
    ಕಳೆದ ೩ ವರ್ಷಗಳಿಂದ ಈ ಸಂಬಂಧ ಹಲವು ಬಾರಿ ಮನವಿ ಮಾಡಿದರೂ ಸಹ ಯಾವುದೇ ಪ್ರಯೋಜನವಾಗಿರುವುದಿಲ್ಲ. ಈ ಹಿನ್ನಲೆಯಲ್ಲಿ ಕರ್ತವ್ಯ ಲೋಪವೆಸಗಿರುವ ಆಹಾರ ಇಲಾಖೆಯ ನಗರ ಮತ್ತು ಗ್ರಾಮಾಂತರ ಭಾಗದ ಅಧಿಕಾರಿಗಳನ್ನು ಸೇವೆಯಿಂದ ಅಮಾನತುಗೊಳಿಸುವುದು. ಅಮಾನತುಗೊಂಡಿರುವ ನಗರದ ೭ ನ್ಯಾಯಬೆಲೆ ಅಂಗಡಿಗಳನ್ನು ವಜಾಗೊಳಿಸುವುದು ಹಾಗು ಕೆಎಫ್‌ಎಸ್‌ಸಿಎಸ್ ಗೋದಾಮು ಭ್ರಷ್ಟಾಚಾರ ನಿಯಂತ್ರಿಸಬೇಕೆಂದು ಆಗ್ರಹಿಸಲಾಯಿತು.
    ಜನತಾದಳ(ಸಂಯುಕ್ತ) ಕರ್ನಾಟಕ ವತಿಯಿಂದ ನಗರದ ಮಾನವ ಹಕ್ಕುಗಳ ಹೋರಾಟ ಸಮಿತಿ ಹಾಗು ಕೆಆರ್‌ಎಸ್ ಪಕ್ಷ ಸಹಕಾರದೊಂದಿಗೆ ಹಮ್ಮಿಕೊಳ್ಳಲಾಗಿರುವ ಧರಣಿ ಸತ್ಯಾಗ್ರಹದಲ್ಲಿ ಪ್ರಮುಖರಾದ eಡಿಯು ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಗೌಡ, ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು, ರಘು ಸಂಕ್ಲಿಪುರ, ಬಾಬುದೀಪಕ್‌ಕುಮಾರ್ ಹಾಗು ಕೆಆರ್‌ಎಸ್ ಪಕ್ಷದ ಪ್ರಮುಖರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

Sunday, September 25, 2022

ಹಿರಿಯ ಕಾರ್ಮಿಕ ಹೋರಾಟಗಾರ ಡಿ.ಸಿ ಮಾಯಣ್ಣನವರಿಗೆ ದಸರಾ ಉದ್ಘಾಟನೆ ಭಾಗ್ಯ

ಸೆ.೨೬ರಂದು ನಗರಸಭೆ ಆವರಣದಲ್ಲಿ ಚಾಲನೆ

ಡಿ.ಸಿ ಮಾಯಣ್ಣ
        
    * ಅನಂತಕುಮಾರ್
    ಭದ್ರಾವತಿ, ಸೆ. ೨೫: ನಗರಸಭೆ ವತಿಯಿಂದ ಹಮ್ಮಿಕೊಳ್ಳಲಾಗಿರುವ ಈ ಬಾರಿ ನಾಡಹಬ್ಬ ದಸರಾ ಉದ್ಘಾಟನೆ ಭಾಗ್ಯ ಹಿರಿಯ ಕಾರ್ಮಿಕ ಹೋರಾಟಗಾರ ಡಿ.ಸಿ ಮಾಯಣ್ಣ ಅವರಿಗೆ ಒಲಿದು ಬಂದಿದೆ.
    ಮೂಲತಃ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ದಂಡಿನಶಿವರ ಗ್ರಾಮದ ೮೮ರ ಹರೆಯದ ಡಿ.ಸಿ ಮಾಯಣ್ಣ ಅವರು ಸೆ.೨೬ರಂದು ನಗರಸಭೆ ಆವರಣದಲ್ಲಿ ನಾಡಹಬ್ಬ ದಸರಾ ಆಚರಣೆಗೆ ಚಾಲನೆ ನೀಡಲಿದ್ದಾರೆ.



    ವಿಐಎಸ್‌ಎಲ್ ಕಾರ್ಮಿಕನಾಗಿ ಹೋರಾಟದ ಬದುಕು:
    ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ದಂಡಿನಶಿವರ ಗ್ರಾಮದಲ್ಲಿ ಚಿಕ್ಕಣ್ಣ ಮತ್ತು ನಂಜಮ್ಮ ದಂಪತಿಯ ಹಿರಿಯ ಮಗನಾಗಿ ೨೦ ಜೂನ್ ೧೯೩೪ರಲ್ಲಿ ಜನಿಸಿದ ಮಾಯಣ್ಣ ಅವರು ತಮ್ಮ ಪ್ರಾಥಮಿಕ ಹಾಗು ಪ್ರೌಢಶಿಕ್ಷಣವನ್ನು ತಿಪಟೂರಿನಲ್ಲಿ ಪೂರೈಸಿದರು. ಕಡುಬಡತನದ ಹಿನ್ನಲೆಯಲ್ಲಿ ತಮ್ಮ ಪದವಿ ಶಿಕ್ಷಣ ಮೊಟಕುಗೊಳಿಸಿ ಭದ್ರಾವತಿಗೆ ಆಗಮಿಸಿ ೧೯೫೭ರಲ್ಲಿ ವಿಐಎಸ್‌ಎಲ್ ಕಾರ್ಖಾನೆ ಕಾರ್ಮಿಕರಾಗಿ ಸೇರ್ಪಡೆಗೊಳ್ಳುವ ಮೂಲಕ ಕಾರ್ಮಿಕರಾಗಿ ವೃತ್ತಿ ಜೀವನ ಆರಂಭಿಸಿದರು.
    ಮಾಯಣ್ಣನವರು ಪ್ರೌಢ ಶಿಕ್ಷಣ ವ್ಯಾಸಂಗ ನಡೆಸುತ್ತಿದ್ದ ಸಂದರ್ಭದಲ್ಲಿ ಟಿ.ಎಚ್ ವೆಂಕಟಪ್ಪರವರು ಬೋಧಿಸುತ್ತಿದ್ದ ಚರಿತ್ರೆಯ ಪಾಠಗಳಿಂದ ಪ್ರಭಾವಿತರಾಗಿ ಕಮ್ಯೂನಿಸಂ ಸಿದ್ದಾಂತದ ಜನಕರಾದ ಕಾರ್ಲ್ ಮಾಕ್ಸ್, ಫ್ರೆಢರಿಕ್, ಏಂಗೆಲ್ಸ್, ಲೆನಿನ್, ಸ್ಟಾಲಿನ್‌ರವರ ಬರವಣಿಗೆಗಳಿಂದ ಪ್ರೇರೇಪಿತರಾಗಿದ್ದರು. ಈ ನಡುವೆ ಕಾರ್ಖಾನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಕಮ್ಯೂನಿಸಂ ಸಿದ್ದಾಂತಗಳನ್ನು ಮೈಗೂಡಿಸಿಕೊಂಡಿದ್ದ ಕಾರ್ಮಿಕ ಹೋರಾಟಗಾರರಾದ ಎಚ್.ಎನ್ ಚಂದ್ರಶೇಖರ್, ವೆಂಕಟಪ್ಪ, ಹನುಮಂತರಾವ್ ಸಲಗರ್, ಅಂಕಪ್ಪ, ಬಿ.ಎನ್ ಚಂದ್ರಶೇಖರ್, ಮುನಿಸ್ವಾಮಿ ಹಾಗು ನಾಗರಾಜ್ ಸೇರಿದಂತೆ ಇನ್ನಿತರರ ಒಡನಾಟದಿಂದ ಕಮ್ಯೂನಿಸ್ಟ್ ಸಿದ್ದಾಂತಗಳು ಸಾಕಾರಗೊಳ್ಳಲು ಕಾರಣವಾದವು.


    ಹೋರಾಟ ಎಂದರೆ ಡಿ.ಸಿ ಮಾಯಣ್ಣ :
    ಆರಂಭದಲ್ಲಿ ಕಾರ್ಖಾನೆಯ ಕಾರ್ಮಿಕ ಸಂಘದ ಜೊತೆಸೇರಿ ಕಾರ್ಮಿಕರ ಹೋರಾಟಗಳಿಗೆ ಧ್ವನಿಯಾದವರು ಮಾಯಣ್ಣ ಎಂದರೆ ತಪ್ಪಾಗಲಾರದು. ಕಾರ್ಮಿಕರ ತುಟಿಭತ್ಯೆಗಾಗಿ ಆಡಳಿತ ಮಂಡಳಿ ವಿರುದ್ಧ ಹೋರಾಟ ನಡೆಸಿ ಈ ಪ್ರಕರಣ ೧೯೬೫ರಲ್ಲಿ ಸರ್ವೋಚ್ಛ ನ್ಯಾಯಾಲಯದ ಮೆಟ್ಟಿಲೇರಬೇಕಾಯಿತು. ಸುಮಾರು ೬ ವರ್ಷಗಳ ವಿಚಾರಣೆ ನಡೆದು ಅಂತಿಮವಾಗಿ ಕಾರ್ಮಿಕರಿಗೆ ನ್ಯಾಯ ಒದಗಿಸಿಕೊಡುವಲ್ಲಿ ಯಶಸ್ವಿಯಾದರು. ಈ ನಡುವೆ ಕಾರ್ಖಾನೆ ಆಡಳಿತ ಮಂಡಳಿ ನ್ಯಾಯಾಲಯದ ಆದೇಶ ಉಲ್ಲಂಘಿಸಿದೆ ಎಂಬ ಆರೋಪದ ಮೇಲೆ ೧೯೭೨ರಲ್ಲಿ ಕಾರ್ಖಾನೆ ಲಾಕ್‌ಔಟ್‌ಗೊಳಿಸಲು ಆದೇಶಿಸಲಾಯಿತು. ಈ ಸಂದರ್ಭದಲ್ಲಿ ಪ್ರತಿಭಟನೆಯಲ್ಲಿ ತೊಡಗಿದ್ದ ಮಾಯಣ್ಣನವರು ವಾರಗಟ್ಟಲೆ ಪೊಲೀಸರ ವಶದಲ್ಲಿರಬೇಕಾಯಿತು.
    ಮಾಯಣ್ಣನವರು ಕಾರ್ಮಿಕ ಸಂಘದಿಂದ ಹೊರಬಂದು ೧೯೭೮ರಲ್ಲಿ ವಿಐಎಸ್‌ಎಲ್ ಎಂಪ್ಲಾಯಿಸ್ ಅಸೋಸಿಯೇಷನ್(ಎಐಟಿಯುಸಿ) ಸಂಘಟಿಸುವ ಮೂಲಕ ಅದರ ಅಧ್ಯಕ್ಷರಾಗಿ ಕಾರ್ಮಿಕರ ಹಲವಾರು ಹೋರಾಟಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಕಾರ್ಮಿಕರಿಗೆ ನ್ಯಾಯ ಒದಗಿಸಿಕೊಡುವಲ್ಲಿ ಯಶಸ್ವಿಯಾದರು.


    ಮಾಯಣ್ಣನವರು ಕೇವಲ ವಿಐಎಸ್‌ಎಲ್ ಕಾರ್ಮಿಕರ ಪರವಾದ ಹೋರಾಟಗಳಲ್ಲದೆ ಕುವೆಂಪು ವಿಶ್ವ ವಿದ್ಯಾನಿಲಯದ ಗುತ್ತಿಗೆ ಕಾರ್ಮಿಕರು, ಅಕ್ಷರ ದಾಸೋಹ ಬಿಸಿಯೂಟ, ಅಂಗನವಾಡಿ ಕಾರ್ಯಕರ್ತೆಯರು, ಪೌರಕಾರ್ಮಿಕರು, ಹಮಾಲಿ ಮತ್ತು ಬೀಡಿ ಕಾರ್ಮಿಕರನ್ನು ಸಂಘಟಿಸಿ ಅವರ ಬೇಡಿಕೆಗಳು ಸರ್ಕಾರದ ಗಮನ ಸೆಳೆಯುವಂತೆ ಮಾಡಿದ್ದಾರೆ. ಎಂಪಿಎಂ ನಾನ್ ಪಿಎಫ್ ಗುತ್ತಿಗೆ ಕಾರ್ಮಿಕರ ವೇತನ ತಾರತಮ್ಯ ನಿವಾರಿಸಲು ೨೦೦೮ರಲ್ಲಿ ಕಾರ್ಖಾನೆ ಮುಂಭಾಗ ಸುಮಾರು ೧ ತಿಂಗಳ ನಿರಂತರವಾಗಿ ಹೋರಾಟ ನಡೆಸಿ ನ್ಯಾಯ ಒದಗಿಸಿಕೊಡುವಲ್ಲಿ ಯಶಸ್ವಿಯಾಗಿದರು. ೨೦೧೩ರಲ್ಲಿ ವಿಐಎಸ್‌ಎಲ್ ಖಾಸಗಿ ಸಹಭಾಗಿತ್ವದ ವಿರುದ್ಧ ಸುಮಾರು ಒಂದು ತಿಂಗಳಿಗೂ ಹೆಚ್ಚು ಕಾಲ ಧರಣಿ ನಡೆಸಿದರು. ಸರ್ಕಾರಗಳ ಜನವಿರೋಧಿ ನೀತಿ, ಬೆಲೆ ಏರಿಕೆ, ಭ್ರಷ್ಟಾಚಾರ ವಿರುದ್ಧ ಹೋರಾಟ ನಡೆಸುವ ಮೂಲಕ ಪ್ರಗತಿಪರ ಚಳುವಳಿಗಳಲ್ಲಿ ತೊಡಗಿಸಿಕೊಂಡಿದ್ದಾರೆ.
    ವಿಧಾನಸಭಾ ಚುನಾವಣೆಗೆ ಸ್ಪರ್ಧೆ :
    ವಿಐಎಸ್‌ಎಲ್ ಕಾರ್ಖಾನೆಯಲ್ಲಿ ಸಾಮಾನ್ಯ ಕಾರ್ಮಿಕರಾಗಿದ್ದ ಖುದ್ದೂಸ್ ಅನ್ವರ್ ೨ ಬಾರಿ ಹಾಗು ಎಂ.ಜೆ ಅಪ್ಪಾಜಿ ೩ ಬಾರಿ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿರುವುದು ಇತಿಹಾಸದ ಪುಟಗಳಲ್ಲಿ ಅಚ್ಚಳಿಯದಂತೆ ಉಳಿದುಕೊಂಡಿದೆ. ಮಾಯಣ್ಣನವರು ಸಹ ೧೯೮೯ರಲ್ಲಿ ಸಿಪಿಐ ಪಕ್ಷದ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಿದ್ದರು. ಚುನಾವಣೆಯಲ್ಲಿ ಸೋಲು ಕಂಡ ನಂತರ ರಾಜಕೀಯದಿಂದ ದೂರ ಉಳಿದು ಹೋರಾಟಗಳಲ್ಲಿ ಮತ್ತಷ್ಟು ಸಕ್ರಿಯವಾಗ ತೊಡಗಿದರು. ಈಗಲೂ ವಿಐಎಸ್‌ಎಲ್ ಎಂಪ್ಲಾಯಿಸ್ ಅಸೋಸಿಯೇಷನ್(ಎಐಟಿಯುಸಿ) ಗೌರವಾಧ್ಯಕ್ಷರಾಗಿದ್ದು, ಕಾರ್ಮಿಕರ ಪರವಾದ ಧ್ವನಿಯಾಗಿ ಉಳಿದುಕೊಂಡಿದ್ದಾರೆ.
    ಮಾಯಣ್ಣನವರು ಇಬ್ಬರು ಹೆಣ್ಣು ಹಾಗು ಮೂವರು ಗಂಡು ಮಕ್ಕಳನ್ನು ಹೊಂದಿದ್ದಾರೆ. ೮೮ರ ಹರೆಯದಲ್ಲೂ ಲವಲವಿಕೆಯಿಂದ ಇದ್ದು, ಇಂದಿನ ಪೀಳಿಗೆಯವರಿಗೆ ಮಾದರಿಯಾಗಿದ್ದಾರೆ.

ಮಹಾಲಯ ಅಮಾವಾಸ್ಯೆ ಹಿನ್ನಲೆಯಲ್ಲಿ ಭದ್ರಾ ನದಿಯಲ್ಲಿ ಹಿರಿಯರಿಗೆ ಪಿಂಡ ಸಮರ್ಪಣೆ

ಪಿತೃಪಕ್ಷ ಕೊನೆಯ ದಿನವಾದ ಮಹಾಲಯ ಅಮಾವಾಸ್ಯೆ ಹಿನ್ನಲೆಯಲ್ಲಿ ಭದ್ರಾವತಿ ಹಳೇ ಸೇತುವೆ ಸಮೀಪದ ಶ್ರೀ ಸಂಗಮೇಶ್ವರ ಸ್ವಾಮಿ ದೇವಸ್ಥಾನದ ಬಳಿ ಹಿರಿಯರಿಗೆ ಪಿಂಡ ಸಮರ್ಪಣೆ ನಡೆಸಲಾಯಿತು.
    ಭದ್ರಾವತಿ, ಸೆ. ೨೫: ಪಿತೃಪಕ್ಷ ಕೊನೆಯ ದಿನವಾದ ಮಹಾಲಯ ಅಮಾವಾಸ್ಯೆ ಹಿನ್ನಲೆಯಲ್ಲಿ ಹಳೇ ಸೇತುವೆ ಸಮೀಪದ ಶ್ರೀ ಸಂಗಮೇಶ್ವರ ಸ್ವಾಮಿ ದೇವಸ್ಥಾನದ ಬಳಿ ಹಿರಿಯರಿಗೆ ಪಿಂಡ ಸಮರ್ಪಣೆ ನಡೆಸಲಾಯಿತು.
    ಪ್ರತಿ ವರ್ಷದಂತೆ ಈ ಬಾರಿ ಸಹ ಶ್ರೀ ರಾಮೇಶ್ವರ ದೇವಸ್ಥಾನದ ಆವರಣದಲ್ಲಿ ಪುರೋಹಿತರಿಂದ ಧಾರ್ಮಿಕ ಆಚರಣೆಗಳು ಜರುಗಿದವು. ನಗರದ ವಿವಿಧೆಡೆಗಳಿಂದ ಆಗಮಿಸಿದ್ದ ನೂರಾರು ಮಂದಿ ಧಾರ್ಮಿಕ ಆಚರಣೆಗಳ ಮೂಲಕ ಹಿರಿಯರನ್ನು ಸ್ಮರಿಸಿ ಅವರ ಆತ್ಮಕ್ಕೆ ಶಾಂತಿ ಬಯಸುವ ಮೂಲಕ ಆಶೀರ್ವಾದ ಕೋರಿದರು. ಕೊನೆಯಲ್ಲಿ ಭದ್ರಾ ನದಿಯಲ್ಲಿ ಪಿಂಡ ಸಮರ್ಪಣೆ ನೆರವೇರಿಸಿದರು.


ಪಿತೃಪಕ್ಷ ಕೊನೆಯ ದಿನವಾದ ಮಹಾಲಯ ಅಮಾವಾಸ್ಯೆ ಹಿನ್ನಲೆಯಲ್ಲಿ ಭದ್ರಾವತಿ ಶ್ರೀ ರಾಮೇಶ್ವರ ದೇವಸ್ಥಾನದ ಆವರಣದಲ್ಲಿ ಪುರೋಹಿತರಿಂದ ಧಾರ್ಮಿಕ ಆಚರಣೆಗಳು ಜರುಗಿದವು.

ರ‍್ಯಾಮ್ಕೋಸ್ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ : ಅಭಿನಂದನೆ

ಭದ್ರಾವತಿಯಲ್ಲಿ ರೈತರ ಅಡಕೆ ಮಾರಾಟ ಮತ್ತು ಪರಿಷ್ಕರಣ ಸಹಕಾರ ಸಂಘದ ಸರ್ವಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ ಭಾನುವಾರ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
    ಭದ್ರಾವತಿ, ಸೆ. ೨೫ : ರೈತರ ಅಡಕೆ ಮಾರಾಟ ಮತ್ತು ಪರಿಷ್ಕರಣ ಸಹಕಾರ ಸಂಘದ ಸರ್ವಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ ಭಾನುವಾರ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
    ಸಂಘದ ಅಧ್ಯಕ್ಷ ಸಿ. ಮಲ್ಲೇಶಪ್ಪ ಅಧ್ಯಕ್ಷತೆ ವಹಿಸಿದ್ದರು. ಪ್ರಾಸ್ತಾವಿಕವಾಗಿ ಮಾತನಾಡಿದ ಮುಖ್ಯ ಕಾರ್ಯನಿರ್ವಾಹಕ ಎಂ. ವಿರುಪಾಕ್ಷಪ್ಪ, ಪ್ರಸಕ್ತ ಸಾಲಿನ ವರ್ಷಾಂತ್ಯಕ್ಕೆ ೧೮೯ ಲಕ್ಷ ಷೇರುಧನ, ೩೬೬೩ ಸದಸ್ಯರನ್ನು ಸಂಘ ಹೊಂದಿದೆ. ೧೪೪ ಲಕ್ಷ ಆಪದ್ಧನನಿಧಿ ಹೊಂದಿದ್ದು, ಸುಮಾರು ೨೭ ಕೋ. ರು. ವಿವಿಧ ಠೇವಣಿಗಳನ್ನು ಒಳಗೊಂಡಿದೆ.  ೯೨೭೭ ಕ್ವಿಂಟಾಲ್(೧೩೨೫೩ ಚೀಲ)  ರು. ೪೩ ಕೋ. ಅಡಕೆ ವಹಿವಾಟು ನಡೆಸಿದ್ದು, ದಲ್ಲಾಳಿ ರು. ೫೩.೬೦ ಲಕ್ಷ ಗಳಿಸಿದೆ. ಸಂಘದ ಎಲ್ಲಾ ಖರ್ಚುವೆಚ್ಚಗಳನ್ನು ಕಳೆದು ರು.೧೦೪.೫೪ ಲಕ್ಷ ನಿವ್ವಳ ಲಾಭ ಗಳಿಸಿದೆ. ಇದು ಸಂಘದ ೨೮ ವರ್ಷದಲ್ಲೇ ಅತ್ಯಂತ ಗರಿಷ್ಠ ಲಾಭವಾಗಿದೆ ಎಂದರು.
    ಉಪಾಧ್ಯಕ್ಷ ಎಚ್.ಟಿ ಉಮೇಶ್, ನಿರ್ದೇಶಕರಾದ ಜಿ.ಈ ಚನ್ನಪ್ಪ, ಯು. ಗಂಗನಗೌಡ, ಎಚ್.ಆರ್ ತಿಮ್ಮಪ್ಪ, ಸಿ. ಹನುಮಂತು, ಬಿ.ಜಿ ಜಗದೀಶ್‌ಗೌಡ, ಮಹೇಶ್, ಎಚ್.ಎಲ್ ಷಡಾಕ್ಷರಿ, ಎಂ.ಎಸ್ ಬಸವರಾಜಪ್ಪ, ಎಚ್.ಎಸ್ ಸಂಜೀವಕುಮಾರ್, ಎಸ್. ಮಹೇಶ್ವರಪ್ಪ, ಉಮಾ, ಲಲಿತಮ್ಮ ಸೇರಿದಮತೆ ಇನ್ನಿತರರು ಉಪರಿದ್ದರು. ನಿರ್ದೇಶಕ ಎಂ. ಪರಮೇಶ್ವರಪ್ಪ ಸ್ವಾಗತಿಸಿದರು.

ನಗರಸಭೆ ವತಿಯಿಂದ ಸೆ.೨೬ರಿಂದ ನಾಡಹಬ್ಬ ದಸರಾ ಆಚರಣೆ

ಭದ್ರಾವತಿಯಲ್ಲಿ ನಗರಸಭೆ ವತಿಯಿಂದ ೧೦ ದಿನಗಳ ಕಾಲ ಹಮ್ಮಿಕೊಳ್ಳಲಾಗಿರುವ ನಾಡಹಬ್ಬ ದಸರಾ ಆಚರಣೆ ಹಿನ್ನಲೆಯಲ್ಲಿ ನಗರದ ಪ್ರಮುಕ ವೃತ್ತಗಳಲ್ಲಿ ಮಹಾದ್ವಾರ ನಿರ್ಮಿಸಿರುವುದು.
    ಭದ್ರಾವತಿ, ಸೆ. ೨೫ : ನಗರಸಭೆ ವತಿಯಿಂದ ೧೦ ದಿನಗಳ ಕಾಲ ಹಮ್ಮಿಕೊಳ್ಳಲಾಗಿರುವ ನಾಡಹಬ್ಬ ದಸರಾ ಆಚರಣೆಗೆ ಸೆ.೨೬ರಂದು ಬೆಳಿಗ್ಗೆ ೧೧ ಗಂಟೆಗೆ ನಗರಸಭೆ ಆವರಣದಲ್ಲಿ ಚಾಲನೆ ದೊರೆಯಲಿದೆ.
    ಶಾಸಕ ಬಿ.ಕೆ ಸಂಗಮೇಶ್ವರ್‌ರವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಹಿರಿಯ ಕಾರ್ಮಿಕ ಹೋರಾಟಗಾರ ಡಿ.ಸಿ ಮಾಯಣ್ಣ ಚಾಲನೆ ನೀಡಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಡಾ. ಕೆ.ಸಿ ನಾರಾಯಣಗೌಡ, ಗೃಹ ಸಚಿವ ಅರಗಜ್ಞಾನೇಂದ್ರ, ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಸಂಸದ ಬಿ.ವೈ ರಾಘವೇಂದ್ರ, ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್, ಎಸ್.ಎಸ್ ಭೋಜೆಗೌಡ, ಎಸ್. ರುದ್ರೇಗೌಡ, ಭಾರತಿ ಶೆಟ್ಟಿ, ಡಿ.ಎಸ್ ಅರುಣ್, ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಕೆ.ಎಸ್ ಗುರುಮೂರ್ತಿ, ನಗರಸಭೆ ಅಧ್ಯಕ್ಷೆ ಅನುಸುಧಾ ಮೋಹನ್ ಪಳನಿ, ಕಾಡಾ ಅಧ್ಯಕ್ಷೆ ಪವಿತ್ರ ರಾಮಯ್ಯ, ಜಿಲ್ಲಾಧಿಕಾರಿ ಡಾ. ಸೆಲ್ವಮಣಿ, ನಗರಸಭೆ ಉಪಾಧ್ಯಕ್ಷ ಚನ್ನಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್‌ಕುಮಾರ್, ಪೌರಾಯುಕ್ತ ಎಚ್.ಎಂ ಮನುಕುಮಾರ್ ಹಾಗು ನಗರಸಭೆ ದಸರಾ ಆಚರಣೆ ವಿವಿಧ ಸಮಿತಿಗಳ ಅಧ್ಯಕ್ಷರು, ಸದಸ್ಯರು ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು.
    ಮೊದಲ ಬಾರಿಗೆ ನಗರಸಭೆ ಆವರಣದಲ್ಲಿ ದಸರಾ ಹಬ್ಬಕ್ಕೆ ಚಾಲನೆ :
    ನಗರಸಭೆ ಆವರಣದಲ್ಲಿ ನೂತನವಾಗಿ ಶ್ರೀ ಚಾಮುಂಡೇಶ್ವರಿ ದೇವಿ ದೇವಸ್ಥಾನ ನಿರ್ಮಾಣಗೊಂಡ ನಂತರ ಮೊದಲ ಬಾರಿಗೆ ದಸರಾ ಆಚರಣೆಗೆ ಚಾಲನೆ ನೀಡಲಾಗುತ್ತಿದೆ. ಈ ಹಿಂದೆ ೩೩ ಗ್ರಾಮಗಳ ಅದಿದೇವತೆ ಹಳೇನಗರದ ಶ್ರೀ ಹಳದಮ್ಮ ದೇವಿ ದೇವಸ್ಥಾನದಲ್ಲಿ ನಾಡಹಬ್ಬಕ್ಕೆ ಚಾಲನೆ ನೀಡಲಾಗುತ್ತಿತ್ತು. ನಗರಸಭೆ ವತಿಯಿಂದ ಕೆಲವು ವರ್ಷಗಳ ಹಿಂದೆ ಪಂಚ ಲೋಹದಿಂದ ಕೂಡಿದ ಶ್ರೀ ಚಾಮುಂಡೇಶ್ವರಿ ದೇವಿ ವಿಗ್ರಹ ಖರೀದಿಸಲಾಗಿದ್ದು, ದಸರಾ ಉತ್ಸವ ಮೆರವಣಿಗೆಯಲ್ಲಿ ಈ ವಿಗ್ರಹವನ್ನು ಬಳಸಲಾಗುತ್ತಿದೆ. ಇದಕ್ಕೂ ಮೊದಲು ಚಾಮುಂಡೇಶ್ವರಿ ವಿಗ್ರಹವನ್ನು ಬಾಡಿಗೆಗೆ ಪಡೆಯಲಾಗುತ್ತಿತ್ತು.
    ಪ್ರಮುಖ ವೃತ್ತಗಳಲ್ಲಿ ಮಹಾದ್ವಾರ ನಿರ್ಮಾಣ :
    ೧೦ ದಿನಗಳ ನಾಡಹಬ್ಬ ದಸರಾ ಆಚರಣೆ ಹಿನ್ನಲೆಯಲ್ಲಿ ನಗರದ ಅಂಬೇಡ್ಕರ್ ವೃತ್ತ, ಮಾಧವಚಾರ್ ವೃತ್ತ, ರಂಗಪ್ಪ ವೃತ್ತ ಸೇರಿದಂತೆ ಪ್ರಮುಖ ವೃತ್ತಗಳಲ್ಲಿ ಮಹಾದ್ವಾರಗಳನ್ನು ನಿರ್ಮಿಸಲಾಗಿದೆ.
    ರಂಗಪ್ಪ ವೃತ್ತದಲ್ಲಿ ಅಳವಡಿಸಲಾಗಿರುವ ಮಹಾದ್ವಾರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಸದ ಬಿ.ವೈ ರಾಘವೇಂದ್ರ ಹಾಗು ಶಾಸಕ ಬಿ.ಕೆ ಸಂಗಮೇಶ್ವರ್ ಅವರ ಬೃಹತ್ ಭಾವಚಿತ್ರಗಳು ರಾರಾಜಿಸುತ್ತಿವೆ.

Saturday, September 24, 2022

ಕಾಂಗ್ರೆಸ್ ಒಬಿಸಿ ನಗರ ಘಟಕದಿಂದ ಮಧು ಬಂಗಾರಪ್ಪಗೆ ಸ್ವಾಗತ

ಪ್ರದೇಶ ಕಾಂಗ್ರೆಸ್ ಸಮಿತಿ ಹಿಂದುಳಿದ(ಒಬಿಸಿ) ಘಟಕದ ನೂತನ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿರುವ ಮಾಜಿ ಶಾಸಕ ಮಧು ಬಂಗಾರಪ್ಪ ಅವರನ್ನು ಶನಿವಾರ ಭದ್ರಾವತಿನಗರದ ಬೈಪಾಸ್ ರಸ್ತೆ ಬಿಳಿಕಿ ವೃತ್ತದಲ್ಲಿ ಹಿಂದುಳಿದ ನಗರ ಘಟಕದ ಪ್ರಮುಖರು ಸ್ವಾಗತಿಸುವ ಮೂಲಕ ಅಭಿನಂದಿಸಿದರು.
    ಭದ್ರಾವತಿ, ಸೆ. ೨೪: ಪ್ರದೇಶ ಕಾಂಗ್ರೆಸ್ ಸಮಿತಿ ಹಿಂದುಳಿದ(ಒಬಿಸಿ) ಘಟಕದ ನೂತನ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿರುವ ಮಾಜಿ ಶಾಸಕ ಮಧು ಬಂಗಾರಪ್ಪ ಅವರನ್ನು ಶನಿವಾರ ನಗರದ ಬೈಪಾಸ್ ರಸ್ತೆ ಬಿಳಿಕಿ ವೃತ್ತದಲ್ಲಿ ಹಿಂದುಳಿದ ನಗರ ಘಟಕದ ಪ್ರಮುಖರು ಸ್ವಾಗತಿಸುವ ಮೂಲಕ ಅಭಿನಂದಿಸಿದರು.
    ಹಿಂದುಳಿದ ನಗರ ಘಟಕದ ಅಧ್ಯಕ್ಷ ಬಿ. ಗಂಗಾಧರ್ ನೇತೃತ್ವದಲ್ಲಿ ಮಧು ಬಂಗಾರಪ್ಪ ಅವರನ್ನು ಅಭಿನಂದಿಸಿ ಸನ್ಮಾನಿಸಲಾಯಿತು. ಉಪಾಧ್ಯಕ್ಷ ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಜಗದೀಶ್, ಕಾರ್ಯದರ್ಶಿ ಸತೀಶ್, ಜಿಲ್ಲಾ ಕಾರ್ಯದರ್ಶಿ ಕೃಷ್ಣರಾಜ್, ಯುವ ಕಾಂಗ್ರೆಸ್ ವಕ್ತಾರ ಅಮೋಸ್, ನ್ಯಾಯವಾದಿ ಬಸವರಾಜ್, ತಾಲೂಕು ಮಡಿವಾಳ ಸಮಾಜದ ಉಪಾಧ್ಯಕ್ಷ ಮಂಜಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಸೆ.೨೬ರಂದು ಜಿಲ್ಲಾಧಿಕಾರಿ ಕಛೇರಿ ಆವರಣದಲ್ಲಿ ಬೃಹತ್ ಪ್ರತಿಭಟನೆ, ಸಭೆ

    ಭದ್ರಾವತಿ, ಸೆ. ೨೪: ಕೇಂದ್ರ ಸರ್ಕಾರದ ವಿದ್ಯುಚ್ಛಕ್ತಿ ಖಾಸಗೀಕರಣ ಮತ್ತು ರೈತರ ಐ.ಪಿ ಸೆಟ್ಟುಗಳಿಗೆ ಮೀಟರ್ ಅಳವಡಿಸುವ ರೈತ ವಿರೋಧಿ ನೀತಿಯನ್ನು ಖಂಡಿಸಿ ಸೆ.೨೬ರಂದು ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ಜಿಲ್ಲಾ ಶಾಖೆವತಿಯಿಂದ ರೈತರ ಬೃಹತ್ ಪ್ರತಿಭಟನೆ ಮತ್ತು ಸಭೆಯನ್ನು ಹಮ್ಮಿಕೊಳ್ಳಲಾಗಿದೆ.
    ಜಿಲ್ಲಾಧಿಕಾರಿಗಳ ಕಛೇರಿ ಆವರಣದಲ್ಲಿ ನಡೆಯಲಿರುವ ಬೃಹತ್ ಪ್ರತಿಭಟನೆ ಮತ್ತು ಸಭೆಯಲ್ಲಿ ರೈತರು, ಮಹಿಳೆಯರು, ಕಾರ್ಮಿಕರು, ವಿದ್ಯಾರ್ಥಿಗಳು, ಯುವಕ-ಯುವತಿಯರು, ಚಿಂತಕರು, ಬರಹಗಾರರು ಸೇರಿದಂತೆ ಸಮಸ್ತ ನಾಗರೀಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ತಾಲೂಕು ಅಧ್ಯಕ್ಷ ಎಚ್.ಪಿ ಹಿರಿಯಣಯ್ಯ, ಕಾರ್ಯದರ್ಶಿ ರಾಮಚಂದ್ರರಾವ್ ಹಾಗು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಿ.ವಿ ವೀರೇಶ್ ಕೋರಿದ್ದಾರೆ. 

ಸೆ.೨೬ರಂದು ಅಮಾನತ್ತುಗೊಂಡಿರುವ ನ್ಯಾಯಬೆಲೆಗಳನ್ನು ರದ್ದುಪಡಿಸಲು ಆಗ್ರಹಿಸಿ ಪಾದಯಾತ್ರೆ

    ಭದ್ರಾವತಿ, ಸೆ. ೨೪ : ನಗರ ವ್ಯಾಪ್ತಿಯ ೭ ನ್ಯಾಯಬೆಲೆ ಅಂಗಡಿಗಳನ್ನು ವ್ಯಾಪಕ ಭ್ರಷ್ಟಾಚಾರ ಹಿನ್ನಲೆಯಲ್ಲಿ ಅಮಾನತ್ತುಗೊಳಿಸಲಾಗಿದ್ದು, ಈ ನ್ಯಾಯಬೆಲೆ ಅಂಗಡಿಗಳನ್ನು ರದ್ದು ಮಾಡುವಂತೆ ಆಗ್ರಹಿಸಿ ಸೆ.೨೬ರಂದು ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ.
    ನಗರ ವ್ಯಾಪ್ತಿಯ ಸುಪ್ರೀಂ, ನ್ಯಾಷನಲ್ ಮತ್ತು ಜನತಾ ನ್ಯಾಯಬೆಲೆ ಅಂಗಡಿ ಸೇರಿದಂತೆ ಒಟ್ಟು ೭ ನ್ಯಾಯಬೆಲೆ ಅಂಗಡಿಗಳನ್ನು ವ್ಯಾಪಕ ಭ್ರಷ್ಟಾಚಾರದ ಹಿನ್ನಲೆಯಲ್ಲಿ ಅಮಾನತ್ತುಗೊಳಿಸಲಾಗಿದೆ. ಈ ಹಿನ್ನಲೆಯಲ್ಲಿ ಈ ನ್ಯಾಯಬೆಲೆ ಅಂಗಡಿಗಳನ್ನು ರದ್ದು ಮಾಡುವಂತೆ ಆಗ್ರಹಿಸಿ ಬೆಳಿಗ್ಗೆ ೧೧.೩೦ಕ್ಕೆ  ಜನತಾದಳ(ಸಂಯುಕ್ತ) ಕರ್ನಾಟಕ ವತಿಯಿಂದ ನಗರದ ಮಾನವ ಹಕ್ಕುಗಳ ಹೋರಾಟ ಸಮಿತಿ ಹಾಗು ಕೆಆರ್‌ಎಸ್ ಪಕ್ಷ ಸಹಕಾರದೊಂದಿಗೆ ಬಿ.ಎಚ್ ರಸ್ತೆ ಅಂಡರ್‌ಬಿಡ್ಜ್ ಡಾ. ಬಿ.ಆರ್ ಅಂಬೇಡ್ಕರ್ ವೃತ್ತದಿಂದ ತಾಲೂಕು ಕಛೇರಿವರೆಗೂ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ.
    ಪಾದಯಾತ್ರೆ ನಂತರ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗುವುದು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಜೆಡಿಯು ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಗೌಡ ಮನವಿ ಮಾಡಿದ್ದಾರೆ. 

ಪೌರಕಾರ್ಮಿಕರು ದುಶ್ಚಟಗಳಿಂದ ದೂರವಿದ್ದು ಮಕ್ಕಳನ್ನು ವಿದ್ಯಾವಂತರನ್ನಾಗಿಸಿ : ಬಿ.ಕೆ ಸಂಗಮೇಶ್ವರ್

ಭದ್ರಾವತಿ ಬಿ.ಎಚ್ ಶ್ರೀ ಮಂಜುನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮವನ್ನು ಶಾಸಕ ಬಿ.ಕೆ ಸಂಗಮೇಶ್ವರ ಉದ್ಘಾಟಿಸಿದರು.  
    ಭದ್ರಾವತಿ, ಸೆ. ೨೪ :  ಪೌರಕಾರ್ಮಿಕರಲ್ಲಿ ಬಹಳಷ್ಟು ಮಂದಿ ಇಂದಿಗೂ ದುಶ್ಚಟಗಳಿಂದ ಹೊರಬಂದಿಲ್ಲ. ಇದರಿಂದಾಗಿ ಅವರ ಕುಟುಂಬಗಳಲ್ಲಿ ನೆಮ್ಮದಿ ಕಾಣಲು ಸಾಧ್ಯವಾಗುತ್ತಿಲ್ಲ ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ವಿಷಾದ ವ್ಯಕ್ತಪಡಿಸಿದರು.
    ಅವರು ನಗರದ ಬಿ.ಎಚ್ ಶ್ರೀ ಮಂಜುನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
    ಸಮಾಜದಲ್ಲಿ ಶ್ರಮಜೀವಿಗಳಾಗಿರುವ ಪೌರಕಾರ್ಮಿಕರು ಇಂದಿಗೂ ನ್ಯಾಯಯುತವಾದ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಕೇಂದ್ರ ಹಾಗು ರಾಜ್ಯ ಸರ್ಕಾರಗಳು ಅವರಿಗೆ ಹೆಚ್ಚಿನ ಸೌಲಭ್ಯಗಳನ್ನು ಕಲ್ಪಿಸಿಕೊಡಬೇಕೆಂದು ಒತ್ತಾಯಿಸಿದರು.
    ಬಹಳಷ್ಟು ಪೌರಕಾರ್ಮಿಕರು ಇಂದಿಗೂ ಬದಲಾಗಿಲ್ಲ. ದುಶ್ಚಟಗಳಿಂದ ದೂರವಿದ್ದು, ಒಳ್ಳೆಯ ಗುಣಗಳನ್ನು ಮೈಗೂಡಿಸಿಕೊಳ್ಳುವ ಜೊತೆಗೆ ತಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸುವ ನಿಟ್ಟಿನಲ್ಲಿ ಗಮನ ಹರಿಸಬೇಕು. ಕುಟುಂಬದಲ್ಲಿ ಶಾಂತಿ, ನೆಮ್ಮದಿ ಕಂಡುಕೊಳ್ಳಬೇಕು. ಪೌರಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಿಕೊಡುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನಿಸಲಾಗುತ್ತಿದೆ. ಪೌರಕಾರ್ಮಿಕರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ. ಇವುಗಳ ಸದುಪಯೋಗಪಡೆದುಕೊಳ್ಳಬೇಕೆಂದು ಮನವಿ ಮಾಡಿದರು.
    ನಗರಸಭೆ ಉಪಾಧ್ಯಕ್ಷ ಚನ್ನಪ್ಪ ಮಾತನಾಡಿ, ಪೌರಕಾರ್ಮಿಕರು ತಮ್ಮ ಆರೋಗ್ಯಕ್ಕೆ ಹೆಚ್ಚಿನ ಗಮನ ನೀಡಬೇಕು. ಬಾಬಾ ಸಾಹೇಬ್ ಅಂಬೇಡ್ಕರ್‌ರವರು  ಈ ದೇಶಕ್ಕೆ ನೀಡಿರುವ ಸಂವಿಧಾನದ ಫಲವಾಗಿ ಪೌರಕಾರ್ಮಿಕರು ಸಹ  ನೆಮ್ಮದಿಯಾಗಿ ಬದಕಲು ಸಾಧ್ಯವಾಗಿದೆ. ಅಂಬೇಡ್ಕರ್‌ರವರ ಆಶಯದಂತೆ ಸಮಾಜದಲ್ಲಿ ಪ್ರತಿಯೊಬ್ಬರಿಗೂ ಹೋರಾಟ, ಸಂಘಟನೆ ಮತ್ತು ಶಿಕ್ಷಣ ಅಗತ್ಯವಾಗಿದೆ. ಇದನ್ನು ಪೌರಕಾರ್ಮಿಕರು ಅರಿತುಕೊಂಡು ತಮ್ಮ ಮಕ್ಕಳಿಗೆ ಒಳ್ಳೆಯ ಶಿಕ್ಷಣ ಕೊಡಿಸಬೇಕೆಂದರು.
    ಪೌರಾಯುಕ್ತ ಮನುಕುಮಾರ್ ಮಾತನಾಡಿ, ನಾವುಗಳು ಸಮಾಜದಲ್ಲಿ ಹೆಚ್ಚಿನ ಶ್ರಮ ಜೀವಿಗಳಾಗಿದ್ದೇವೆ. ಆದರೆ ಶ್ರಮಕ್ಕೆ ತಕ್ಕಂತೆ ಗೌರವ ಲಭಿಸುತ್ತಿಲ್ಲ. ನಮ್ಮ ವೃತ್ತಿ ಗೌರವ, ಸ್ವಾಭಿಮಾನಕ್ಕೆ ಧಕ್ಕೆ ಬರದಂತೆ ನಡೆದುಕೊಳ್ಳಬೇಕಾಗಿದೆ. ಕಾಲಘಟ್ಟಗಳು ಬದಲಾದಂತೆ ನಾವುಗಳು ಸಹ ಬದಲಾಗಬೇಕಾಗಿದೆ. ನಮ್ಮ ಮಕ್ಕಳನ್ನು ಸಹ ವಿದ್ಯಾವಂತರನ್ನಾಗಿ ಮಾಡಿ ಉನ್ನತ ಹುದ್ದೆಗಳನ್ನು ಅಲಂಕರಿಸುವಂತಾಗಬೇಕು. ಆಗ ಮಾತ್ರ ನಮ್ಮ ವೃತ್ತಿ ಬದುಕು ಸಾರ್ಥಕವಾಗುತ್ತದೆ ಎಂದರು.  
    ನಗರಸಭೆ ಸದಸ್ಯರಾದ ಬಿ.ಕೆ ಮೋಹನ್, ಜಾರ್ಜ್ ಸೇರಿದಂತೆ ಇನ್ನಿತರರು ಮಾತನಾಡಿದರು. ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್‌ಕುಮಾರ್, ಜಾರ್ಜ್, ಆರ್. ಮೋಹನ್‌ಕುಮಾರ್, ಉದಯ್‌ಕುಮಾರ್, ಲತಾ ಚಂದ್ರಶೇಖರ್, ಟಿಪ್ಪು ಸುಲ್ತಾನ್, ಕೋಟೇಶ್ವರರಾವ್, ಬಸವರಾಜ ಬಿ. ಆನೇಕೊಪ್ಪ, ಮಣಿ ಎಎನ್‌ಎಸ್, ಮಂಜುಳ ಸುಬ್ಬಣ್ಣ, ಅನುಪಮ ಚನ್ನೇಶ್, ಶಶಿಕಲಾ ನಾರಾಯಣಪ್ಪ, ಶೃತಿ ವಸಂತ್, ನಾಗರತ್ನ, ಬಿ.ಎಂ ಮಂಜುನಾಥ್, ರಿಯಾಜ್ ಅಹಮದ್ ಸೇರಿದಂತೆ ನಗರಸಭೆ ಬಹುತೇಕ ಸದಸ್ಯರು, ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘದ ತಾಲೂಕು ಅಧ್ಯಕ್ಷ ಮಂಜುನಾಥ್ ಹಾಗು ಪದಾಧಿಕಾರಿಗಳು ಉಪಸ್ಥಿತರಿದ್ದರು. ಪೌರಕಾರ್ಮಿಕರಿಂದ ನಾಟಕ ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
    ನೂತನ ಅಧ್ಯಕ್ಷೆ ಅನುಸುಧಾ ಮೋಹನ್ ಪಳನಿ ಅಧ್ಯಕ್ಷತೆ ವಹಿಸಿದ್ದರು. ಪರಿಸರ ಅಭಿಯಂತರ ಪ್ರಭಾಕರ್ ಸ್ವಾಗತಿಸಿದರು. ನರಸಿಂಹಮೂರ್ತಿ ಕಾರ್ಯಕ್ರಮ ನಿರೂಪಿಸಿದರು.

ಪೌರಕಾರ್ಮಿಕರ ದಿನಾಚರಣೆ : ಭವ್ಯ ಮೆರವಣಿಗೆ

ಭದ್ರಾವತಿಯಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ಪೌರಕಾರ್ಮಿಕರ ದಿನಾಚರಣೆ ಅಂಗವಾಗಿ ಶನಿವಾರ ರಾಷ್ಟ್ರಪಿತ ಮಹಾತ್ಮಗಾಂಧಿ ಹಾಗು ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್‌ರವರ ಭಾವಚಿತ್ರ ಹಾಗು ವಿವಿಧ ಕಲಾತಂಡಗಳೊಂದಿಗೆ ಮೆರವಣಿಗೆ ನಡೆಸಲಾಯಿತು.
    ಭದ್ರಾವತಿ, ಸೆ. ೨೪: ಪ್ರತಿ ವರ್ಷದಂತೆ ಈ ಬಾರಿ ಸಹ ಪೌರಕಾರ್ಮಿಕರ ದಿನಾಚರಣೆ ಅಂಗವಾಗಿ ಶನಿವಾರ ರಾಷ್ಟ್ರಪಿತ ಮಹಾತ್ಮಗಾಂಧಿ ಹಾಗು ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್‌ರವರ ಭಾವಚಿತ್ರ ಹಾಗು ವಿವಿಧ ಕಲಾತಂಡಗಳೊಂದಿಗೆ ಮೆರವಣಿಗೆ ನಡೆಸಲಾಯಿತು.
    ಬೆಳಿಗ್ಗೆ ನಗರದ ರಂಗಪ್ಪ ವೃತ್ತದಿಂದ ಆರಂಭಗೊಂಡ ಮೆರವಣಿಗೆ ಮಾಧವಚಾರ್ ವೃತ್ತ, ಹಾಲಪ್ಪ ವೃತ್ತ ಹಾಗು ಅಂಬೇಡ್ಕರ್ ವೃತ್ತದ ಮೂಲಕ ಮಧ್ಯಾಹ್ನ ೧ ಗಂಟೆಗೆ ಶ್ರೀ ಮಂಜುನಾಥಸ್ವಾಮಿ ಕಲ್ಯಾಣ ಮಂಟಪ ತಲುಪಿತು.
    ಶಾಸಕ ಬಿ.ಕೆ ಸಂಗಮೇಶ್ವರ್, ನಗರಸಭೆ ನೂತನ ಅಧ್ಯಕ್ಷೆ ಅನುಸುಧಾ ಮೋಹನ್ ಪಳನಿ, ಉಪಾಧ್ಯಕ್ಷ ಚನ್ನಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್‌ಕುಮಾರ್, ಪೌರಾಯುಕ್ತ ಮನುಕುಮಾರ್ ಹಾಗು ನಗರಸಭಾ ಸದಸ್ಯರು, ಕಂದಾಯಾಧಿಕಾರಿ ರಾಜ್‌ಕುಮಾರ್, ಪರಿಸರ ಅಭಿಯಂತರ ಪ್ರಭಾಕರ್, ಸಮುದಾಯ ಸಂಘಟನಾ ಅಧಿಕಾರಿ ಸುವಾಸಿನಿ ಸೇರಿದಂತೆ ಇನ್ನಿತರ ಅಧಿಕಾರಿಗಳು, ಸಿಬ್ಬಂದಿಗಳು, ಕರ್ನಾಟಕ ರಾಜ್ಯ ಪೌರನೌಕರರ ಪೌರ ಸೇವಾ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಡಿಎಸ್‌ಎಸ್ ಪ್ರಮುಖರಾದ ಸತ್ಯ, ಚಿನ್ನಯ್ಯ, ನಗರದ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು, ಪೌರಕಾರ್ಮಿಕರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.


ಭದ್ರಾವತಿಯಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ಪೌರಕಾರ್ಮಿಕರ ದಿನಾಚರಣೆ ಅಂಗವಾಗಿ ಶನಿವಾರ ರಾಷ್ಟ್ರಪಿತ ಮಹಾತ್ಮಗಾಂಧಿ ಹಾಗು ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್‌ರವರ ಭಾವಚಿತ್ರ ಹಾಗು ವಿವಿಧ ಕಲಾತಂಡಗಳೊಂದಿಗೆ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯಲ್ಲಿ ಪೌರಾಯುಕ್ತ ಮನುಕುಮಾರ್ ಪೌರಕಾರ್ಮಿಕರೊಂದಿಗೆ ಸಂಭ್ರಮಿಸಿದರು.

Friday, September 23, 2022

ಸೆ.೨೪ರಂದು ಪೌರಕಾರ್ಮಿಕರ ದಿನಾಚರಣೆ : ಮೆರವಣಿಗೆ


    ಭದ್ರಾವತಿ, ಸೆ. ೨೩: ಪ್ರತಿ ವರ್ಷದಂತೆ ಈ ಬಾರಿ ಸಹ ಪೌರಕಾರ್ಮಿಕರ ದಿನಾಚರಣೆ ಸೆ.೨೪ರಂದು ನಡೆಯಲಿದ್ದು, ಈ ಸಂಬಂಧ ಬೆಳಿಗ್ಗೆ ೯ ಗಂಟೆಗೆ ನಗರದ ರಂಗಪ್ಪ ವೃತ್ತದಿಂದ ಮೆರವಣಿಗೆ ನಡೆಯಲಿದೆ.
    ಬಿ.ಎಚ್ ರಸ್ತೆ ಶ್ರೀ ಮಂಜುನಾಥ ಸ್ವಾಮಿ ಕಲ್ಯಾಣ ಮಂಟಪದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಶಾಸಕ ಬಿ.ಕೆ ಸಂಗಮೇಶ್ವರ್, ನಗರಸಭೆ ಅಧ್ಯಕ್ಷೆ ಅನುಸುಧಾ ಮೋಹನ್, ಉಪಾಧ್ಯಕ್ಷ ಚನ್ನಪ್ಪ ಹಾಗು ನಗರಸಭಾ ಸದಸ್ಯರು, ಕರ್ನಾಟಕ ರಾಜ್ಯ ಪೌರನೌಕರರ ಪೌರ ಸೇವಾ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ನಗರಸಭೆ ಅಧಿಕಾರಿಗಳು, ಸಿಬ್ಬಂದಿಗಳು, ನಗರದ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು, ಪೌರಕಾರ್ಮಿಕರು ಸೇರಿದಂತೆ ಇನ್ನಿತರರು ಪಾಲ್ಗೊಳ್ಳಲಿದ್ದಾರೆ.

ರಾಜ್ಯದಲ್ಲಿರುವ ಜೆಸಿಬಿ ಪಕ್ಷಗಳನ್ನು ಅಧಿಕಾರದಿಂದ ದೂರವಿಡಿ : ಮುಖ್ಯಮಂತ್ರಿ ಚಂದ್ರು

ಭದ್ರಾವತಿ ರಂಗಪ್ಪ ವೃತ್ತದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯ  ಎಎಪಿ ಪಕ್ಷದ ಆಕಾಂಕ್ಷಿ ಅಭ್ಯರ್ಥಿ ಆನಂದ್(ಮಾರುತಿ ಮೆಡಿಕಲ್) ಅವರ ಕಛೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಮಾತನಾಡಿದರು.
    ಭದ್ರಾವತಿ, ಸೆ. ೨೩: ರಾಜ್ಯದಲ್ಲಿರುವ ಜೆಸಿಬಿ ಪಕ್ಷಗಳನ್ನು ಅಧಿಕಾರದಿಂದ ದೂರವಿಟ್ಟು, ಆಮ್ ಆದ್ಮಿ ಪಾರ್ಟಿ ಬೆಂಬಲಿಸುವಂತೆ ಪಕ್ಷದ ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹೇಳಿದರು.
    ಅವರು ನಗರದ ರಂಗಪ್ಪ ವೃತ್ತದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯ ಆಕಾಂಕ್ಷಿ ಅಭ್ಯರ್ಥಿ ಆನಂದ್(ಮಾರುತಿ ಮೆಡಿಕಲ್) ಅವರ ಕಛೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
    ರಾಜ್ಯದಲ್ಲಿ ಪ್ರಮುಖವಾಗಿ ಜೆಡಿಎಸ್, ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳಿದ್ದು, ನಾನು ಈ ೩ ಪಕ್ಷಗಳ ರಾಜಕೀಯ ಸಿದ್ದಾಂತಗಳನ್ನು ಚನ್ನಾಗಿ ಅರಿತುಕೊಂಡಿದ್ದೇನೆ. ಇವು ಸರ್ವಾಧಿಕಾರಿ ಧೋರಣೆಯೊಂದಿಗೆ ಭ್ರಷ್ಟಾಚಾರ, ಸ್ವಾರ್ಥ ರಾಜಕಾರಣ ನಡೆಸುತ್ತಿವೆ. ಅಲ್ಲದೆ ಜನರ ಹಿತಾಸಕ್ತಿಗಳನ್ನು ಕಡೆಗಣಿಸಿವೆ. ಸುಳ್ಳು ಭರವಸೆಗಳನ್ನು ನೀಡಿ ವಂಚಿಸುತ್ತಿವೆ ಎಂದು ಆರೋಪಿಸಿದರು.
    ಆಮ್ ಆದ್ಮಿ ಪಾರ್ಟಿ ಜನರ ಪಕ್ಷವಾಗಿದೆ. ಉಚಿತ ಶಿಕ್ಷಣ, ಆರೋಗ್ಯ, ವಿದ್ಯುತ್ ಸೇರಿದಂತೆ ಮೂಲ ಸೌಲಭ್ಯಗಳನ್ನು ಕಲ್ಪಿಸಿಕೊಡುವಲ್ಲಿ ಪ್ರಾಮಾಣಿಕವಾಗಿ ಶ್ರಮಿಸುತ್ತಿದೆ. ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ ನಡೆದುಕೊಳ್ಳುತ್ತಿರುವ ದೇಶದ ಏಕೈಕ ಪಕ್ಷ ಇದಾಗಿದೆ. ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರ ಇದಕ್ಕೆ ಉದಾಹರಣೆಯಾಗಿದೆ. ರಾಜ್ಯದ ಜನರು ಜೆಸಿಬಿ ಪಕ್ಷಗಳನ್ನು ತಿರಸ್ಕಾರ ಮಾಡಿ ಆಮ್ ಆದ್ಮಿ ಪಾರ್ಟಿ ಬೆಂಬಲಿಸುವಂತೆ ಮನವಿ ಮಾಡಿದರು.
    ಪಕ್ಷದ ರಾಜ್ಯಧ್ಯಕ್ಷ ಪೃಥ್ವಿರೆಡ್ಡಿ ಮಾತನಾಡಿ, ಪ್ರಸ್ತುತ ಬೆಂಗಳೂರಿನ ಸ್ಥಿತಿ ಚಿಂತಾಜನಕವಾಗಿದೆ. ಕೆರೆಗಳ ಮೇಲೆ, ರಾಜಕಾಲುವೆಗಳ ಮೇಲೆ ಅಕ್ರಮವಾಗಿ ಮನೆ, ಕಟ್ಟಡಗಳನ್ನು ನಿರ್ಮಿಸಿಕೊಂಡಿರುವ ಪರಿಣಾಮ ಎದುರಾಗಿರುವ ಸಮಸ್ಯೆಗಳಿಂದ ಜನರು ರೋಸಿ ಹೋಗಿದ್ದಾರೆ. ಮತ್ತೊಂದೆಡೆ ಭ್ರಷ್ಟಾಚಾರ ಹೆಚ್ಚಾಗುತ್ತಿದೆ. ಸರ್ಕಾರಿ ಶಾಲೆಗಳು ಮುಚ್ಚುತ್ತಿವೆ. ಬಡವರು ಬದುಕುವುದು ಅಸಾಧ್ಯವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಆಮ್ ಆದ್ಮಿ ಪಾರ್ಟಿ ರಾಜ್ಯಕ್ಕೆ ಆಶಾಕಿರಣವಾಗಿದೆ ಎಂದರು.
    ರಾಜ್ಯದಲ್ಲಿ ಪರ್ಯಾಯ ರಾಜಕಾರಣಕ್ಕೆ ಎಎಪಿ ನಾಂದಿ ಹಾಡಲಿದೆ. ರಾಜ್ಯದಲ್ಲೆಡೆ ಪಕ್ಷವನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ಕಳೆದ ಸುಮಾರು ೧ ತಿಂಗಳಿನಿಂದ ಗ್ರಾi ಸಂಪರ್ಕ ಅಭಿಯಾನ ನಡೆಸಲಾಗುತ್ತಿದೆ. ರಾಜ್ಯದಲ್ಲಿ ಉತ್ತಮ ಭವಿಷ್ಯ ನಿರೀಕ್ಷಿಸುವ ಪ್ರತಿಯೊಬ್ಬರಿಗೂ ಪಕ್ಷದಲ್ಲಿ ಅವಕಾಶವಿದೆ ಎಂದರು.
    ಪಕ್ಷದ ರಾಜ್ಯ ಜಂಟಿ ಕಾರ್ಯದರ್ಶಿ ದರ್ಶನ್ ಜೈನ್, ಸ್ಥಳೀಯ ಪ್ರಮುಖರಾದ ಆನಂದ್(ಮೆಡಿಕಲ್), ಎಚ್. ರವಿಕುಮಾರ್, ರೇಷ್ಮಾಬಾನು, ಎ. ಮಸ್ತಾನ್, ಡಿ.ಎಂ ಚಂದ್ರಪ್ಪ, ಪರಮೇಶ್ವರಚಾರ್, ಎನ್.ಪಿ ಜೋಸೆಫ್, ಪರಮೇಶ್ವರನಾಯ್ಕ್, ಭಾಗ್ಯಮ್ಮ, ಜೋಸೆಫ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

೮ ಮತಗಳ ಅಂತರದಿಂದ ಅನುಸುಧಾ ಮೋಹನ್ ಪಳನಿ ಗೆಲುವು : ಭದ್ರಾವತಿ ನಗರಸಭೆ ಅಧ್ಯಕ್ಷರಾಗಿ ಆಯ್ಕೆ

ಭದ್ರಾವತಿ ನಗರಸಭೆ ನೂತನ ಅಧ್ಯಕ್ಷರಾಗಿ ವಾರ್ಡ್ ನಂ. ೧೩ರ ಸದಸ್ಯೆ ಅನುಸುಧಾ ಮೋಹನ್ ಶುಕ್ರವಾರ ನಡೆದ ಚುನಾವಣೆಯಲ್ಲಿ ಗೆಲುವು ಸಾಧಿಸುವ ಮೂಲಕ ಆಯ್ಕೆಯಾದರು.    
    ಭದ್ರಾವತಿ, ಸೆ.೨೩: ನಗರಸಭೆ ನೂತನ ಅಧ್ಯಕ್ಷರಾಗಿ ವಾರ್ಡ್ ನಂ. ೧೩ರ ಸದಸ್ಯೆ ಅನುಸುಧಾ ಮೋಹನ್ ಶುಕ್ರವಾರ ನಡೆದ ಚುನಾವಣೆಯಲ್ಲಿ ಗೆಲುವು ಸಾಧಿಸುವ ಮೂಲಕ ಆಯ್ಕೆಯಾದರು.
    ಸಾಮಾನ್ಯ ಮಹಿಳೆಗೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದ ಅನುಸುಧಾ ಮೋಹನ್, ಜೆಡಿಎಸ್ ಪಕ್ಷದಿಂದ ವಾರ್ಡ್ ನಂ.೨೧ರ ವಿಜಯ ಹಾಗು ಬಿಜೆಪಿ ಪಕ್ಷದಿಂದ ವಾರ್ಡ್ ನಂ.೪ರ ಅನುಪಮ ಚನ್ನೇಶ್ ಸ್ಪರ್ಧಿಸಿದ್ದರು. ೩೫ ನಗರಸಭಾ ಸದಸ್ಯರು, ೧ ವಿಧಾನಸಭಾ ಸದಸ್ಯರು ಮತ್ತು ೧ ಲೋಕಸಭಾ ಸದಸ್ಯರು ಒಟ್ಟು ೩೭ ಮತಗಳಿದ್ದು, ಈ ಪೈಕಿ ಲೋಕಸಭಾ ಸದಸ್ಯರು ಮತ ಚಲಾಯಿಸಿಲ್ಲ. ಉಳಿದ ೩೬ ಮತಗಳ ಪೈಕಿ ಅನುಸುಧಾ ಮೋಹನ್ ಪಳನಿ ೨೦, ವಿಜಯ ೧೨ ಹಾಗು ಅನುಪಮ ಚನ್ನೇಶ್ ೪ ಮತಗಳನ್ನು ಪಡೆದುಕೊಂಡರು. ಒಟ್ಟು ೮ ಮತಗಳ ಅಂತರದಿಂದ ಅನುಸುಧಾ ಮೋಹನ್ ಪಳನಿ ಆಯ್ಕೆಯಾಗಿದ್ದಾರೆ.  
    ತಮಿಳು ವನ್ನಿಯರ್ ಗೌಂಡರ್ ಸಮುದಾಯಕ್ಕೆ ಸೇರಿದ ಅನುಸುಧಾ ಮೊದಲ ಬಾರಿಗೆ ನಗರಸಭೆ ಸದಸ್ಯರಾಗಿ ಆಯ್ಕೆಯಾಗಿದ್ದು, ಮೊದಲ ಅವಧಿಯಲ್ಲಿಯೇ ಅಧ್ಯಕ್ಷರಾಗಿದ್ದಾರೆ. ಇವರ ಮಾವ ಕೆ. ಪಳನಿ ಅವರು ಸುಮಾರು ೪ ಬಾರಿ ಪುರಸಭಾ ಸದಸ್ಯರಾಗಿದ್ದು, ಇವರ ರಾಜಕೀಯ ಅನುಭವ ಅನುಸುಧಾ ಅವರಿಗೆ ಮಾರ್ಗದರ್ಶನವಾಗಿದೆ.
    ವನ್ನಿಯರ್‌ಗೆ ಪ್ರತಿಸ್ಪರ್ಧಿ ಮೊದಲಿಯಾರ್:
    ತಮಿಳು ಜನಾಂಗದ ಒಳಪಂಗಡಗಳಾಗಿರುವ ವನ್ನಿಯರ್ ಗೌಂಡರ್ ಮತ್ತು ಆಗಮುಡಿ ಮೊದಲಿಯಾರ್ ಸಮಾಜದ ಅಭ್ಯರ್ಥಿಗಳು ಚುನಾವಣಾ ಕಣದಲ್ಲಿರುವುದು ವಿಶೇಷವಾಗಿತ್ತು. ಅನುಸುಧಾ ವನ್ನಿಯರ್ ಗೌಂಡರ್ ಸಮುದಾಯಕ್ಕೆ ಸೇರಿದ್ದು, ಇವರ ಪ್ರತಿಸ್ಪರ್ಧಿ ವಿಜಯ ಆಗಮುಡಿ ಮೊದಲಿಯಾರ್ ಸಮುದಾಯಕ್ಕೆ ಸೇರಿದ್ದಾರೆ.
    ಪ್ರಸ್ತುತ ನಗರಸಭೆಯಲ್ಲಿ ಕಾಂಗ್ರೆಸ್-೧೮, ಜೆಡಿಎಸ್-೧೨, ಬಿಜೆಪಿ-೦೪ ಮತ್ತು ಪಕ್ಷೇತರ-೦೧ ಸ್ಥಾನ ಹೊಂದಿದೆ. ಚುನಾವಣಾಧಿಕಾರಿಯಾಗಿ ಉಪವಿಭಾಗಾಧಿಕಾರಿ ಎಸ್.ಬಿ ದೊಡ್ಡೇಗೌಡರ್ ಕಾರ್ಯ ನಿರ್ವಹಿಸಿದರು. ಪೌರಾಯುಕ್ತ ಮನುಕುಮಾರ್ ಉಪಸ್ಥಿತರಿದ್ದರು.


    ನಾಡಹಬ್ಬ ದಸರಾಗೆ ಹೊಸ ಅಧ್ಯಕ್ಷರು :
    ನಗರಸಭೆ ವತಿಯಿಂದ ಸೆ.೨೬ರಿಂದ ನಾಡಹಬ್ಬ ದಸರಾ ಆಚರಣೆ ನಡೆಯಲಿದ್ದು, ಉಪಾಧ್ಯಕ್ಷರಾದ ಚನ್ನಪ್ಪ ಅವರು ಸುಮಾರು ೧ ತಿಂಗಳಿನಿಂದ ಪ್ರಭಾರ ಅಧ್ಯಕ್ಷರಾಗಿದ್ದರು. ಇದೀಗ ನಾಡಹಬ್ಬ ದಸರಾ ಆಚರಣೆ ನೂತನ ಅಧ್ಯಕ್ಷೆ ಅನುಸುಧಾ ಅವರ ನೇತೃತ್ವದಲ್ಲಿ ನಡೆಯಲಿದೆ. ಸುಮಾರು ೧೦ ದಿನಗಳ ದಸರಾ ಆಚರಣೆ ವಿಜೃಂಭಣೆಯಿಂದ ಆಚರಿಸಲು ಸಕಲ ಸಿದ್ದತೆಗಳು ನಡೆದಿವೆ.
    ನೂತನ ಅಧ್ಯಕ್ಷರಿಗೆ ಶಾಸಕ ಬಿ.ಕೆ ಸಂಗಮೇಶ್ವರ್, ಉಪಾಧ್ಯಕ್ಷ ಚನ್ನಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್‌ಕುಮಾರ್ ಹಾಗು ಜಂಬೂ ಮಹರ್ಷಿ ವನ್ನಿಯರ್ ಗೌಂಡರ್ ಸಮಾಜದ ರಾಜ್ಯಾಧ್ಯಕ್ಷ ನಂದಕುಮಾರ್, ತಾಲೂಕು ಅಧ್ಯಕ್ಷ ಮಣಿ ಎಎನ್‌ಎಸ್, ತಮಿಳು ಸಮಾಜದ ತಾಲೂಕು ಅಧ್ಯಕ್ಷ ರವಿ, ಆಗಮುಡಿ ಮೊದಲಿಯಾರ್ ಸಮಾಜದ ಅಧ್ಯಕ್ಷ ಕಣ್ಣಪ್ಪ, ಕಾಂಗ್ರೆಸ್ ಪಕ್ಷದ ನಗರ ಘಟಕದ ಅಧ್ಯಕ್ಷ ಟಿ. ಚಂದ್ರೇಗೌಡ, ಮಹಿಳಾ ಘಟಕದ ಅಧ್ಯಕ್ಷೆ ಹೇಮಾವತಿ, ಯುವ ಘಟಕದ ಅಧ್ಯಕ್ಷರಾದ ಅಫ್ತಾಬ್ ಅಹಮದ್, ವಿನೋದ್ ಸೇರಿದಂತೆ ಪಕ್ಷದ ಮುಖಂಡರು, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಇನ್ನಿತರರು ಅಭಿನಂದಿಸಿದರು.
    ಅನುಸುಧಾ ಅವರು ಅಧ್ಯಕ್ಷರಾಗಿ ಆಯ್ಕೆಯಾಗುತ್ತಿದ್ದಂತೆ ನಗರಸಭೆ ಮುಂಭಾಗ ಪಕ್ಷದ ಮುಖಂಡರು, ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದರು. ನಂತರ ಕಲಾತಂಡಗಳೊಂದಿಗೆ ಮೆರವಣಿಗೆ ನಡೆಸಿ ಮಹಾತ್ಮಗಾಂಧಿ ವೃತ್ತದಲ್ಲಿರುವ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು.


ನಂದಕುಮಾರ್, ರಾಜ್ಯಾಧ್ಯಕ್ಷರು, ಜಂಬೂ ಮಹರ್ಷಿ ವನ್ನಿಯರ್ ಗೌಂಡರ್ ಸಮಾಜ.

ಕ್ಷೇತ್ರದಲ್ಲಿ ಅತಿ ಕಡಿಮೆ ಜನಸಂಖ್ಯೆ ಹೊಂದಿರುವ ವನ್ನಿಯರ್ ಗೌಂಡರ್ ಸಮಾಜವನ್ನು ಗುರುತಿಸಿ ರಾಜಕೀಯದಲ್ಲಿ ಅವರಿಗೂ ಸೂಕ್ತ ಸ್ಥಾನಮಾನ ನೀಡಿರುವುದು ಸಂತಸ ಸಂಗತಿಯಾಗಿದೆ. ಗೌಂಡರ್ ಸಮಾಜ ಎಲ್ಲಾ ಸಮುದಾಯಗಳೊಂದಿಗೂ ಸೌಹಾರ್ದತೆ ಕಂಡುಕೊಂಡಿದ್ದು, ಇಂತಹ ಸಮುದಾಯಕ್ಕೆ ಅವಕಾಶ ಕಲ್ಪಿಸಿಕೊಟ್ಟಿರುವ ಶಾಸಕ ಬಿ.ಕೆ ಸಂಗಮೇಶ್ವರ್ ಹಾಗು ಕಾಂಗ್ರೆಸ್ ಪಕ್ಷದ ಎಲ್ಲಾ ಸದಸ್ಯರಿಗೆ ಕೃತಜ್ಞತೆ ಸಲ್ಲಿಸುತ್ತೇನೆ.
 - ನಂದಕುಮಾರ್, ರಾಜ್ಯಾಧ್ಯಕ್ಷರು, ಜಂಬೂ ಮಹರ್ಷಿ ವನ್ನಿಯರ್ ಗೌಂಡರ್ ಸಮಾಜ.

Thursday, September 22, 2022

ಹಳೇದ್ವೇಷದ ಹಿನ್ನಲೆಯಲ್ಲಿ ಚಾಕುವಿನಿಂದ ಹಲ್ಲೆ


    ಭದ್ರಾವತಿ, ಸೆ. ೨೨: ಹಳೇದ್ವೇಷದ ಹಿನ್ನಲೆಯಲ್ಲಿ ವ್ಯಕ್ತಿಯೋರ್ವನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿರುವ ಘಟನೆ ತಾಲೂಕಿನ ಅಂತರಗಂಗೆ ಗ್ರಾಮದಲ್ಲಿ ಕಳೆದ ೩ ದಿನಗಳ ಹಿಂದೆ ನಡೆದಿದೆ.
    ಮಹೇಶ ಮತ್ತು ಮನೋಜ್ ಇಬ್ಬರು ಸಹೋದರರು ಮದ್ಯ ಸೇವನೆ ಮಾಡಿ ಹಳೇದ್ವೇಷದ ಹಿನ್ನಲೆಯಲ್ಲಿ ಕಿರಣ್ ಎಂಬಾತನ ಮೇಲೆ ಜಾಕುವಿನಿಂದ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಕೈ ಮತ್ತು ತೊಡೆಗೆ ಗಾಯವಾಗಿದ್ದು, ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಇಬ್ಬರು ಸಹೋದರರನ್ನು ಬಂಧಿಸಿದ್ದಾರೆ.

ಹಳ್ಳಿಗಾಡಿನ ಕಲೆ ಮೂಲಕ ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳುವಲ್ಲಿ ಮಾದಾಪುರ ಕಲಾವಿದರು ಯಶಸ್ವಿ : ವೀರೇಶ್ ಆಲುವಳ್ಳಿ

ಭದ್ರಾವತಿ ತಾಲೂಕಿನ ಸುಲ್ತಾನಮಟ್ಟಿ ಗ್ರಾಮದ ಸರ್ಕಾರಿ ಶಾಲೆಯ ಶಿಕ್ಷಕ, ಜಾನಪದ ಕಲಾವಿದ ಎಂ.ಆರ್ ರೇವಣಪ್ಪರಿಗೆ ಸನ್ಮಾನ

ಹೊಸನಗರ ತಾಲೂಕಿನ ಮಾದಾಪುರ ಗ್ರಾಮದಲ್ಲಿ ಶ್ರೀ ಶನಿಪರಮೇಶ್ವರ ಯುವಕ ಸಂಘದವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಭದ್ರಾವತಿ ತಾಲೂಕಿನ ಸುಲ್ತಾನಮಟ್ಟಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ರಾಜ್ಯಮಟ್ಟದ ಶಿಕ್ಷಕ ಪ್ರಶಸ್ತಿ ಪುರಸ್ಕೃತ, ಜಾನಪದ ಕಲಾವಿದ ಡಾ. ಎಂ.ಆರ್ ರೇವಣಪ್ಪ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.  
    ಭದ್ರಾವತಿ, ಸೆ. ೨೨ : ಹಳ್ಳಿಗಾಡಿನ ಕಲೆ ಮೂಲಕ ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳುವಲ್ಲಿ ಹೊಸನಗರ ತಾಲೂಕಿನ ಮಾದಾಪುರ ಕಲಾವಿದರು ಯಶಸ್ವಿಯಾಗಿದ್ದಾರೆಂದು ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ವೀರೇಶ್ ಆಲುವಳ್ಳಿ ಹೇಳಿದರು.
    ಅವರು ಮಾದಾಪುರ ಗ್ರಾಮದಲ್ಲಿ ಶ್ರೀ ಶನಿಪರಮೇಶ್ವರ ಯುವಕ ಸಂಘದವತಿಯಿಂದ ಹಮ್ಮಿಕೊಳ್ಳಲಾಗಿದ್ದ ಭದ್ರಾವತಿ ತಾಲೂಕಿನ ಸುಲ್ತಾನಮಟ್ಟಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ರಾಜ್ಯಮಟ್ಟದ ಶಿಕ್ಷಕ ಪ್ರಶಸ್ತಿ ಪುರಸ್ಕೃತ, ಜಾನಪದ ಕಲಾವಿದ ಡಾ. ಎಂ.ಆರ್ ರೇವಣಪ್ಪ ಅವರಿಗೆ ಸನ್ಮಾನ, ಚಲನಚಿತ್ರ ನಟ ದಿವಂಗತ ಡಾ. ವಿಷ್ಣುವರ್ಧನ್ ಅವರ ಜನ್ಮದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
    ಹಳ್ಳಿಗಾಡಿನ ಕಲೆ ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಪಸರಿಸುವಲ್ಲಿ ಮಾದಾಪುರ ಕಲಾವಿದರ ಶ್ರಮ ಹೆಚ್ಚಿನದ್ದಾಗಿದ್ದು, ಇಲ್ಲಿನ ಕಲಾವಿದರು ರಾಜ್ಯಕ್ಕೆ ಮಾದರಿಯಾಗಿದ್ದಾರೆಂದು ಪ್ರಶಂಸೆ ವ್ಯಕ್ತಪಡಿಸಿದರು.
    ಬಟ್ಟೆಮಲ್ಲಪ್ಪ ವ್ಯಾಸ ಮಹರ್ಷಿ ಗುರುಕುಲ ಶಿಕ್ಷಣ ಸಂಸ್ಥೆ ಸಂಸ್ಥಾಪಕ ಮಂಜುನಾಥ ಬ್ಯಾಣದ ಮಾತನಾಡಿ, ಶಿಕ್ಷಣವೇ ಶಕ್ತಿ, ಮಕ್ಕಳನ್ನು ಶಿಕ್ಷಣವಂತರನ್ನಾಗಿ ಮಾಡುವ ಮೂಲಕ ಸಾರ್ಥಕ ಬದುಕಿಗೆ ಪ್ರೇರೇಪಿಸಿ ಸಾಧನೆ ಮಾರ್ಗದಲ್ಲಿ ಸಾಗಲು ಕಾರಣಕರ್ತರಾಗಬೇಕೆಂದರು.
    ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ.ಎಂ.ಆರ್ ರೇವಣಪ್ಪ, ಕುಗ್ರಾಮವಾಗಿರುವ ಮಾದಾಪುರ ಕಲಾವಿದರ ಕಣಜವಾಗಿದ್ದು, ನಮ್ಮ ಕುಟುಂಬದವರು, ಗ್ರಾಮಸ್ಥರು, ಸಹೋದ್ಯೋಗಿಗಳು, ಕಲಾವಿದರು, ಹಿರಿಯುರು ನೀಡಿದ ಸಹಕಾರದಿಂದಾಗಿ ರಾಷ್ಟ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ನಾನು ಗುರುತಿಸಿಕೊಳ್ಳಲು ಕಾರಣವಾಗಿದೆ. ನನ್ನ ಸಾಧನೆಯನ್ನು ಗುರುತಿಸಿ ಹುಟ್ಟೂರಲ್ಲಿ ಸನ್ಮಾನ ನೆರವೇರಿಸಿರುವುದು ತುಂಬಾ ಸಂತಸವನ್ನುಂಟು ಮಾಡಿದೆ ಎಂದರು.
    ಡಾ. ಎಂ.ಆರ್ ರೇವಣಪ್ಪ ಅವರ ತಾಯಿ ಭರಮಮ್ಮ, ಹಿರಿಯ ಕಲಾವಿದರಾದ ಎಂ.ಆರ್ ಲೋಕಪ್ಪ, ಎಂ.ಆರ್ ಗಿರೀಶ್‌ಕುಮಾರ್, ಗ್ರಾಮ ಪಂಚಾಯಿತಿ ಸದಸ್ಯರಾದ ಮಹಮದ್ ಷರೀಫ್, ಕೃಷ್ಣೋಜಿರಾವ್, ರವಿ, ರಮ್ಯಾ, ಧರ್ಮರಾಜ್, ಈರಪ್ಪ, ಚಂದ್ರಪ್ಪ ಕೊರಟೀಕೆರೆ, ಆರ್. ಪ್ರಕಾಶ್, ಎಂ.ಎಂ ಧರ್ಮಪ್ಪ, ದೇವೇಂದ್ರ, ಇಮಾಮ್,   ಸೋಮಶೇಖರ್, ಗೋಮೇಧ, ನಾಗರಾಜು, ದೇವರಾಜು, ಮಂಜುನಾಥ್, ಮೈಲಾರಿ, ಲಕ್ಷ್ಮಣಪ್ಪ ಹಾಗೂ ಶನಿ ಪರಮೇಶ್ವರ ಯುವಕ  ಸಂಘದ ಹರೀಶ್, ಪ್ರೇಮ್ ಕುಮಾರ್, ಮಂಜು, ಚಿನ್ನು, ವಿನಿ, ವೆಂಕಟೇಶ್, ಮನು, ದೇವರಾಜ್, ಪವನ್ ಹೇಮಂತ್, ತ್ಯಾಗ ಹಾಗು ಮಾದಾಪುರ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ಹಿರಿಯರು, ಗ್ರಾಮಸ್ಥರು ಪಾಲ್ಗೊಂಡಿದ್ದರು.

Wednesday, September 21, 2022

ಭದ್ರಾ ವಲಯ ಮಟ್ಟದ ಕ್ರೀಡಾಕೂಟದಲ್ಲಿ ವಿಇಎಸ್ ಶಾಲೆ ವಿದ್ಯಾರ್ಥಿಗಳಿಗೆ ಬಹುಮಾನ

ಭದ್ರಾವತಿ ಹೊಸ ಸೇತುವೆ ರಸ್ತೆಯಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಆಶ್ರಿತದ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯ ಪ್ರೌಢಶಾಲಾ ವಿಭಾಗದ ಬಾಲಕ-ಬಾಲಕಿಯರು ಭದ್ರಾ ವಲಯ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ಭಾಗವಹಿಸಿ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.
    ಭದ್ರಾವತಿ, ಸೆ. ೨೧ : ನಗರದ ಹೊಸ ಸೇತುವೆ ರಸ್ತೆಯಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಆಶ್ರಿತದ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯ ಪ್ರೌಢಶಾಲಾ ವಿಭಾಗದ ಬಾಲಕ-ಬಾಲಕಿಯರು ಭದ್ರಾ ವಲಯ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ಭಾಗವಹಿಸಿ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.
    ಮೊಹಮ್ಮದ್ ಸೈಯದ್ ಅಲಿ ಹಾಗೂ ಭಾವನ ವೈಯಕ್ತಿಕ ಪ್ರಶಸ್ತಿ ಹಾಗು ಬಾಲಕ-ಬಾಲಕಿಯರು ವಿವಿಧ ಸ್ಪರ್ಧೆಗಳಲ್ಲಿ ತಂಡ ಪ್ರಶಸ್ತಿ ಹಾಗು ೨೦೨೨-೨೩ನೇ ಸಾಲಿನ ಸಮಗ್ರ ಪ್ರಶಸ್ತಿ ಪಡೆದುಕೊಂಡಿದ್ದಾರೆ.
    ವಿದ್ಯಾ ಸಂಸ್ಥೆ ಅಧ್ಯಕ್ಷ ಬಿ. ಸಿದ್ದಬಸಪ್ಪ, ಆಡಳಿತಾಧಿಕಾರಿ ಡಾ. ಎಸ್.ಪಿ ರಾಕೇಶ್, ದೈಹಿಕ ಶಿಕ್ಷಣ ನಿರ್ದೇಶಕ ಶಿವಲಿಂಗೇಗೌಡ, ಎಲ್ಲಾ ವಿಭಾಗಗಳ ಮುಖ್ಯಶಿಕ್ಷಕರು, ದೈಹಿಕ ಶಿಕ್ಷಕರಾದ ರವಿ, ರೇವತಿ ಹಾಗೂ ಶಿಕ್ಷಕ ವೃಂದದವರು ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

ಅಸಂಘಟಿತ ಕಾರ್ಮಿಕರು ಸರ್ಕಾರಿ ಸೌಲಭ್ಯ ಪಡೆಯಲು ಸಂಘಟಿತರಾಗಿ : ಸುಂದರ್ ಬಾಬು

ಭದ್ರಾವತಿ ರೋಟರಿಕ್ಲಬ್ ಸಭಾಂಗಣದಲ್ಲಿ ಶ್ರಮಶಕ್ತಿ ಅಸಂಘಟಿತ ಕಾರ್ಮಿಕರ ಒಕ್ಕೂಟ ಹಾಗು ರೋಟರಿ ಕ್ಲಬ್ ಸಹಯೋಗದೊಂದಿಗೆ ಕಾರ್ಮಿಕ ಇಲಾಖೆ ವತಿಯಿಂದ ನಗರದ ಬ್ಯೂಟಿಷಿಯನ್ ಮಾಲೀಕರು ಹಾಗು ಕೆಲಸಗಾರರಿಗೆ  ಮಾಹಿತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.
    ಭದ್ರಾವತಿ, ಸೆ. ೨೧: ಅಸಂಘಟಿತ ಕಾರ್ಮಿಕರು ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳಲು ಸಂಘಟಿತರಾಗಬೇಕೆಂದು ಕರ್ನಾಟಕ ಸ್ಟೇಟ್ ಕನ್‌ಸ್ಟ್ರಕ್ಷನ್ ವರ್ಕರ್ಸ್ ಸೆಂಟ್ರಲ್ ಯೂನಿಯನ್ ಜಿಲ್ಲಾ ಕಾರ್ಯಾಧ್ಯಕ್ಷ ಸುಂದರ್ ಬಾಬು ಹೇಳಿದರು.
    ಅವರು ರೋಟರಿಕ್ಲಬ್ ಸಭಾಂಗಣದಲ್ಲಿ ಶ್ರಮಶಕ್ತಿ ಅಸಂಘಟಿತ ಕಾರ್ಮಿಕರ ಒಕ್ಕೂಟ ಹಾಗು ರೋಟರಿ ಕ್ಲಬ್ ಸಹಯೋಗದೊಂದಿಗೆ ಕಾರ್ಮಿಕ ಇಲಾಖೆ ವತಿಯಿಂದ ನಗರದ ಬ್ಯೂಟಿಷಿಯನ್ ಮಾಲೀಕರು ಹಾಗು ಕೆಲಸಗಾರರಿಗೆ ಹಮ್ಮಿಕೊಳ್ಳಲಾಗಿದ್ದ ಮಾಹಿತಿ ಕಾರ್ಯಾಗಾರದಲ್ಲಿ ಪಾಲ್ಗೊಂಡು ಮಾತನಾಡಿದರು.
    ಅಸಂಘಟಿತ ಕಾರ್ಮಿಕರಿಗೆ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಇವುಗಳ ಕುರಿತು ಜಾಗೃತಿ ಮೂಡಿಸುವ ಜೊತೆಗೆ ಸೌಲಭ್ಯಗಳನ್ನು ಪಡೆದುಕೊಳ್ಳಲು ಸಂಘಟಿತರಾಗುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಸಂಸದ ಬಿ.ವೈ ರಾಘವೇಂದ್ರ ಮತ್ತು ಶಾಸಕ ಬಿ.ಕೆ ಸಂಗಮೇಶ್ವರ್ ಅವರು ಅಸಂಘಟಿತ ಕಾರ್ಮಿಕರು ಸಂಘಟಿತರಾಗಲು ಹೆಚ್ಚಿನ ಸಹಕಾರ ನೀಡುತ್ತಿದ್ದಾರೆ. ಬ್ಯೂಟಿಷಿಯನ್ ಕೆಲಸಗಾರರನ್ನು ಸಹ ಸರ್ಕಾರ ಅಸಂಘಟಿತ ಕಾರ್ಮಿಕರೆಂದು ಗುರುತಿಸಿದೆ. ಈ ಹಿನ್ನಲೆಯಲ್ಲಿ ಜಿಲ್ಲಾಮಟ್ಟದಲ್ಲಿ ಪ್ರಬಲವಾದ ಸಂಘಟನೆ ರೂಪುಗೊಳ್ಳಬೇಕೆಂದರು.
    ಕಾರ್ಮಿಕ ನಿರೀಕ್ಷಕಿ ಮುಮ್ತಾಜ್ ಬೇಗಂ, ಅಸಂಘಟಿತ ಕಾರ್ಮಿಕರಿಗೆ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳು, ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು. ರೋಟರಿ ಕ್ಲಬ್ ಅಧ್ಯಕ್ಷ ಅಡವೀಶಯ್ಯ, ಕಾರ್ಯದರ್ಶಿ ಶಿವಕುಮಾರ್, ಪ್ರಮುಖರಾದ ಪದ್ಮಾವತಿ, ಕವಿತ ಸುರೇಶ್ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
    ಶ್ರಮಶಕ್ತಿ ಅಸಂಘಟಿತ ಕಾರ್ಮಿಕರ ಒಕ್ಕೂಟದ ಪದಾಧಿಕಾರಿಗಳಾದ ಕವಿತ, ಸುಮಿತ್ರ, ಶಾರದ, ಶಶಿ, ನೇತ್ರ, ಸವಿತಾ, ಆರತಿ, ವಿಜಯ್ ಸೇರಿದಂತೆ ಬ್ಯೂಟಿಷಿಯನ್ ಮಾಲೀಕರು, ಕೆಲಸಗಾರರು ಪಾಲ್ಗೊಂಡಿದ್ದರು.  

ಕಬ್ಬು ಬೆಳೆಗಾರರು, ಕೃಷಿ ಪಂಪ್‌ಸೆಟ್ ರೈತರಿಂದ ಸೆ.೨೬ರಂದು ಬೆಂಗಳೂರು ವಿಧಾನಸೌಧ ಚಲೋ

ಭದ್ರಾವತಿಯಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯ ಜಿಲ್ಲಾ ಸಂಚಾಲಕ ಎನ್.ಎಚ್ ದೇವಕುಮಾರ್ ಮಾತನಾಡಿದರು. 
    ಭದ್ರಾವತಿ, ಸೆ. ೨೧ : ಪ್ರಸಕ್ತ ಸಾಲಿನ ಕಬ್ಬಿನ ಎಫ್‌ಆರ್‌ಪಿ ದರ ನಿಗದಿಯಲ್ಲಿ ರೈತರಿಗೆ ದ್ರೋಹ ಬಗೆದಿರುವ ಕೇಂದ್ರ ಸರ್ಕಾರದ ನೀತಿಯ ವಿರುದ್ಧ, ದರ ಪುನರ್ ಪರಿಶೀಲನೆ ನಡೆಸಲು, ವಿದ್ಯುತ್ ಕಾಯ್ದೆ ಖಾಸಗಿಕರಣ ತಿದ್ದುಪಡಿ ಕೈಬಿಡಬೇಕು ಹಾಗು ಕೃಷಿ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ನಿಲ್ಲಿಸುವ ಹುನ್ನಾರ ಕೈಬಿಡಬೇಕೆಂದು ಒತ್ತಾಯಿಸಿ ಸೆ.೨೬ರಂದು ಬೆಂಗಳೂರು ವಿಧಾನಸೌಧ ಚಲೋ ನಡೆಸಲಾಗುತ್ತಿದೆ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯ ಜಿಲ್ಲಾ ಸಂಚಾಲಕ ಎನ್.ಎಚ್ ದೇವಕುಮಾರ್ ತಿಳಿಸಿದರು.
    ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಬ್ಬು ಬೆಳೆಗಾರರು ಹಾಗು ಕೃಷಿ ಪಂಪ್‌ಸೆಟ್ ರೈತರಿಂದ ಬೆಂಗಳೂರು ವಿಧಾನಸೌಧ ಚಲೋ ನಡೆಸಲಾಗುತ್ತಿದ್ದು, ಸಂಯುಕ್ತ ಕಿಸಾನ್ ಮೋರ್ಚಾ ರಾಷ್ಟ್ರೀಯ ರೈತ ಮುಖಂಡರು ಈ ರ‍್ಯಾಲಿಯಲ್ಲಿ ಭಾಗವಹಿಸಲಿದ್ದಾರೆ ಎಂದರು.
    ಕೇಂದ್ರ ಸರ್ಕಾರ ನವಂಬರ್, ೨೦೨೧ರಂದು ೩ ಕೃಷಿ ಕಾಯ್ದೆಗಳನ್ನು ರದ್ದುಮಾಡಿ ಹೋರಾಟದಲ್ಲಿ ಮಡಿದ ಸುಮಾರು ೭೫೦ ರೈತ ಕುಟುಂಬಗಳಿಗೆ ಪರಿಹಾರ ನೀಡುವ ಜೊತೆಗೆ ಹಲವು ಬೇಡಿಕೆ ಈಡೇರಿಸಿ ಕೊಡುವುದಾಗಿ ಭರವಸೆ ನೀಡಿತ್ತು. ಆದರೆ ಭರವಸೆ ಇದುವರೆಗೂ ಹುಸಿಯಾಗಿ ಉಳಿದು ಕೊಂಡಿದೆ. ಕನಿಷ್ಠ ಬೆಂಬಲ ಬೆಲೆ ನಿಗದಿ ಕಾನೂನು ಜಾರಿ ಮಾಡಲು ಸಮಿತಿ ರಚಿಸಿದ್ದೇವೆ ಎನ್ನುವ ಮೂಲಕ ಹೋರಾಟ ನಡೆಸಿದ ರೈತ ಮುಖಂಡರನ್ನು ಹೊರಗಿಟ್ಟು ಸಮಿತಿ ರಚಿಸಿ ನಾಟಕವಾಡುತ್ತಿದೆ ಎಂದು ಆರೋಪಿಸಿದರು.
    ದೇಶಾದ್ಯಂತ ರೈತ ಚಳುವಳಿಯನ್ನು ಮತ್ತಷ್ಟು ಪ್ರಬಲಗೊಳಿಸಲು ದಕ್ಷಿಣ ಭಾರತದ ಕೇಂದ್ರ ಸ್ಥಾನ ಬೆಂಗಳೂರಿನಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ರಾಷ್ಟ್ರೀಯ ರೈತ ಮುಖಂಡರ ಅಧಿವೇಶನ ಸೆ.೨೫ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದೆ. ಎಲ್ಲಾ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಎಂಎಸ್‌ಪಿ ಕಾತರಿ ಕಾನೂನು ಜಾರಿಗೊಳಿಸುವ ಮೂಲಕ ಡಾ. ಸ್ವಾಮಿನಾಥನ್ ವರದಿಯಂತೆ ಬೆಂಬಲ ಬೆಲೆ ನಿಗದಿಗೊಳಿಸಬೇಕು. ಕೃಷಿ ಉತ್ಪನ್ನಗಳ ಹಾಗು ಉಪಕರಣಗಳ ಮೇಲಿನ ಜಿಎಸ್‌ಟಿ ರದ್ದುಪಡಿಸಬೇಕು. ದೇಶದಲ್ಲಿ ಸುಮಾರು ೩.೫ ಲಕ್ಷ ರೈತರು ಕೃಷಿ ಸಂಕಷ್ಟದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊರೋನಾ ಲಾಕ್‌ಡೌನ್, ಅತಿವೃಷ್ಟಿ ಮಳೆ ಹಾನಿ ಸಂಕಷ್ಟದಿಂದ ನಲುಗಿದ್ದಾರೆ. ಈ ಹಿನ್ನಲೆಯಲ್ಲಿ ದೇಶದ ಉದ್ಯಮಿಗಳ ೧೦ ಲಕ್ಷ ಕೋಟಿ ಸಾಲ ಮನ್ನಾ ಮಾಡಿದ ರೀತಿಯಲ್ಲಿ ರೈತರ ಸಾಲ ಮನ್ನಾ ಮಾಡಬೇಕೆಂದು ಆಗ್ರಹಿಸಿದರು.  
    ರಾಜ್ಯದಲ್ಲಿ ಅಂದಾಜು ೧೦ ಲಕ್ಷ ಹೆಕ್ಟರ್ ಪ್ರದೇಶದಲ್ಲಿ ಮಳೆ ಹಾನಿಯಿಂದ ರೈತರ ಬೆಳೆ ನಷ್ಟವಾಗಿದ್ದು, ಕೇಂದ್ರ ತಂಡ ನಾಟಕೀಯವಾಗಿ ನಾಮಕಾವಸ್ತೆ ಪರಿಶೀಲನೆ ನಡೆಸಿದೆ. ರೈತರ ಜಮೀನುಗಳಿಗೆ ನಷ್ಟ ಅಂದಾಜು ಮಾಡಲು ವಿಫಲವಾಗಿದೆ. ಕೆಲವು ಜಿಲ್ಲೆಗಳಲ್ಲಿ ಜಿಲ್ಲಾ ಮಂತ್ರಿಗಳು, ಅಧಿಕಾರಿಗಳು ಕಾಣೆಯಾಗಿದ್ದಾರೆ. ಈಗಾಗಲೇ ಕಂದಾಯ, ಕೃಷಿ, ತೋಟಗಾರಿಕೆ ಇಲಾಖೆ ಅಧಿಕಾರಿಗಳು ಮಳೆ ಹಾನಿಯಾಗಿರುವ ಹಳ್ಳಿಗಳಿಗೆ ಭೇಟಿ ನೀಡಿ ರೈತರ ನೈಜ ಬೆಳೆ ನಷ್ಟ ಸಮೀಕ್ಷೆ ನಡೆಸಿ ಅಂದಾಜಿನ ಸಂಪೂರ್ಣ ಪರಿಹಾರ ನೀಡಲು ಮುಂದಾಗಬೇಕು. ರೈತರಿಕೆ ಭಿಕ್ಷೆ ರೂಪದ ಪರಿಹಾರ ಬೇಡ, ನೈಜ ನಷ್ಟ ಪರಿಹಾರ ನೀಡಬೇಕು. ಒಂದು ವೇಳೆ ಅವೈಜ್ಞಾನಿಕವಾಗಿ ಸಣ್ಣಪುಟ್ಟ ಮೊತ್ತದ ಚೆಕ್ ನೀಡಿದರೆ ನೀಡಿದರೆ ತಹಸೀಲ್ದಾರ್, ಜಿಲ್ಲಾಧಿಕಾರಿ ಕಛೇರಿ ಮುಂದೆ ಚೆಕ್ ಸುಡುವ ಚಳುವಳಿ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.
    ಪ್ರಸ್ತುತ ರೈತರು ಸಂಕಷ್ಟದಲ್ಲಿದ್ದು, ರೈತರ ಸಾಲ ವಸೂಲಾತಿ ನಿಲ್ಲಿಸಿ ಆರ್‌ಬಿಐ ನಿಯಮದಂತೆ ಸಾಲದ ಮೇಲೆ ಶೇ.೨೫ರಷ್ಟು ಹೆಚ್ಚುವರಿ ಸಾಲ ನೀಡಬೇಕು. ರಾಜ್ಯದಲ್ಲಿ ಜಾರಿಗೊಳಿಸಿರುವ ಎಪಿಎಂಸಿ ಕಾಯ್ದೆಯನ್ನು ಹಿಂದಕ್ಕೆ ಪಡೆಯಬೇಕೆಂದು ಒತ್ತಾಯಿಸಿದರು.
    ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಕಬ್ಬು ಬೆಳೆಗಾರರ ಸಂಘ ಜಿಲ್ಲಾಧ್ಯಕ್ಷ ಕೆ. ಈರಣ್ಣ, ಉಪಾಧ್ಯಕ್ಷ ನಾಗರಾಜ, ಪ್ರಧಾನ ಕಾರ್ಯದರ್ಶಿ ಸಣ್ಣಯ್ಯ, ಕಾರ್ಯದರ್ಶಿ ಬಿ.ಎಚ್ ವಸಂತ, ಖಜಾಂಚಿ ಆರ್. ಕೃಷ್ಣೋಜಿರಾವ್, ಗೊಂದಿ ಜಯರಾಂ, ದೇವೇಗೌಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Tuesday, September 20, 2022

ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಸೆ.೨೩ರಂದು ಚುನಾವಣೆ :

ಅನುಸುಧಾ ಮೋಹನ್ ಪಳನಿ ಅಧ್ಯಕ್ಷೆ ಬಹುತೇಕ ಖಚಿತ

ಅನುಸುಧಾ ಮೋಹನ್
    ಭದ್ರಾವತಿ, ಸೆ. ೨೦: ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಸೆ. ೨೩ರಂದು ಚುನಾವಣೆ ನಡೆಯಲಿದ್ದು, ಸಾಮಾನ್ಯ ಮಹಿಳೆಗೆ ಮೀಸಲಾದ ಸ್ಥಾನಕ್ಕೆ ವಾರ್ಡ್ ನಂ.೧೩ರ ಸದಸ್ಯೆ ಅನುಸುಧಾ ಮೋಹನ್ ಪಳನಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.
    ನಗರಸಭೆಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್  ಮೀಸಲಾತಿಯ ಮೊದಲ ೩೦ ತಿಂಗಳ ಅವಧಿಯನ್ನು ಆಂತರಿಕವಾಗಿ ಹಂಚಿಕೆ ಮಾಡಿಕೊಂಡಿದ್ದು, ಅದರಂತೆ ಸಾಮಾನ್ಯ ಮಹಿಳೆಗೆ ಮೀಸಲಾದ ಅಧ್ಯಕ್ಷ ಸ್ಥಾನದ ಮೊದಲ ೧೦ ತಿಂಗಳು ವಾರ್ಡ್ ನಂ.೨ರ ಗೀತಾರಾಜ್‌ಕುಮಾರ್ ಅಧಿಕಾರ ನಡೆಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಇದೀಗ ೧೦ ತಿಂಗಳ ೨ನೇ ಅವಧಿಗೆ ಸೆ.೨೩ರಂದು ಚುನಾವಣೆ ನಡೆಯಲಿದೆ.
    ಅಧ್ಯಕ್ಷ ಸ್ಥಾನಕ್ಕೆ ವಾರ್ಡ್ ನಂ.೧೩ರ ಸದಸ್ಯೆ ಅನುಸುಧಾ ಮೋಹನ್ ಪಳನಿ, ವಾರ್ಡ್ ನಂ. ೩೪ರ ಲತಾ ಚಂದ್ರಶೇಖರ್ ಹಾಗು ವಾರ್ಡ್ ನಂ.೩೫ರ ಶೃತಿ ವಸಂತ್ ಮೂರು ಮಂದಿ ಪೈಪೋಟಿಗೆ ಮುಂದಾಗಿದ್ದಾರೆ. ಶಾಸಕ ಬಿ.ಕೆ ಸಂಗಮೇಶ್ವರ್ ನಿರ್ಧಾರವೇ ಅಂತಿಮವಾಗಿದ್ದು, ಅನುಸುಧಾ ಮೋಹನ್ ಪಳನಿ ಅಧ್ಯಕ್ಷರಾಗುವುದು ಬಹುತೇಕ ಖಚಿತವಾಗಿದೆ.
ಪ್ರಸ್ತುತ ನಗರಸಭೆಯಲ್ಲಿ ಕಾಂಗ್ರೆಸ್-೧೮, ಜೆಡಿಎಸ್-೧೨, ಬಿಜೆಪಿ-೦೪ ಮತ್ತು ಪಕ್ಷೇತರ-೦೧ ಸ್ಥಾನ ಹೊಂದಿದೆ. ಉಳಿದಂತೆ ಉಪಾಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿಗೆ ಮೀಸಲಾಗಿದ್ದು, ಚನ್ನಪ್ಪ ಮುಂದುವರೆಯಲಿದ್ದಾರೆ.
    ಸಾಮಾಜಿಕ ಜಾಲತಾಣಗಳಲ್ಲಿ ರಾಜೀನಾಮೆ ಪತ್ರ:
    ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿರುವ ವಾರ್ಡ್ ನಂ.೩೫ರ ಸದಸ್ಯೆ ಶೃತಿ ವಸಂತ್ ಅವರು ತಮ್ಮ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆಂಬ ವದಂತಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಶೃತಿ ವಸಂತ್ ಅವರು ಸೆ.೧೨ರಂದು ಜಿಲ್ಲಾಧಿಕಾರಿಗಳಿಗೆ ರಾಜೀನಾಮೆ ಸಲ್ಲಿಸಿರುವ ಪತ್ರ ಹರಿದಾಡುತ್ತಿದೆ. ಆದರೆ ಈ ಬಗ್ಗೆ ಯಾವುದೇ ಸ್ಪಷ್ಟನೆ ವ್ಯಕ್ತವಾಗಿಲ್ಲ.
    ಸೆ.೨೩ರಂದು ಚುನಾವಣೆ :
    ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಸೆ.೨೩ರಂದು ಚುನಾವಣೆ ನಡೆಯಲಿದ್ದು, ಉಪವಿಭಾಗಾಧಿಕಾರಿ ಎಸ್.ಬಿ ದೊಡ್ಡಗೌಡರ್ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ.
    ಬೆಳಿಗ್ಗೆ ೧೦ ರಿಂದ ೧೧ ಗಂಟೆವರೆಗೆ ನಾಮಪತ್ರ ಸಲ್ಲಿಕೆ, ಮಧ್ಯಾಹ್ನ ೧ ಗಂಟೆಗೆ ಪರಿಶೀಲನೆ, ೧.೧೫ರ ವರೆಗೆ ನಾಮಪತ್ರ ಹಿಂಪಡೆಯಲು ಕಾಲಾವಕಾಶ, ಚುನಾವಣೆ ಅಗತ್ಯವಿದ್ದಲ್ಲಿ ೧.೩೦ಕ್ಕೆ ನಡೆಯಲಿದೆ.