* ಅನಂತಕುಮಾರ್
ಭದ್ರಾವತಿ: ಕ್ಷೇತ್ರದ ೩ ದಶಕಗಳ ರಾಜಕೀಯ ಕೊಂಡಿಯೊಂದು ಕಳಚಿ ಹೋಗಿ ಇದೀಗ ಎರಡು ವರ್ಷ ಕಳೆದಿದ್ದು, ಆದರೂ ಸಹ ಜನಮಾನಸದಲ್ಲಿ ಮಾಜಿ ಶಾಸಕ ಎಂ.ಜಿ ಅಪ್ಪಾಜಿ ಅಚ್ಚಳಿಯದಂತೆ ಉಳಿದುಕೊಂಡಿದ್ದಾರೆ. ಸೆ.೨, ೨೦೨೦ರಂದು ನಡುರಾತ್ರಿ ಅಪ್ಪಾಜಿ ಇಹಲೋಕ ತ್ಯಜಿಸುತ್ತಾರೆಂಬ ಕನಸು ಸಹ ಯಾರಿಗೂ ಇರಲಿಲ್ಲ. ಅವರ ನಿಧನದ ಸುದ್ದಿ ಕ್ಷೇತ್ರದ ಜನತೆಯನ್ನು ಒಮ್ಮೆ ತಲ್ಲಣಗೊಳಿಸಿತ್ತು.
ಕೇಂದ್ರ ಉಕ್ಕು ಪ್ರಾಧಿಕಾರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯಲ್ಲಿ ಸಾಮಾನ್ಯ ಕಾರ್ಮಿಕನಾಗಿ ೨೦ ರು. ಸಂಬಳಕ್ಕೆ ದುಡಿಯುತ್ತಿದ್ದ ಅಪ್ಪಾಜಿ ಆರಂಭದಲ್ಲಿ ಕಾರ್ಮಿಕ ಹೋರಾಟಗಾರನಾಗಿ ಗುರುತಿಸಿ ಕೊಂಡಿದ್ದರು. ತಿಂಗಳ ಸಂಬಳದಲ್ಲಿ ಜೀವನ ನಡೆಸುವುದೇ ಕಷ್ಟವಿರುವ ಸಂದರ್ಭದಲ್ಲಿ ಜನರು ನೀಡಿದ ದೇಣಿಗೆ ಹಣದಿಂದಲೇ ಚುನಾವಣೆಗೆ ಸ್ಪರ್ಧಿಸುವ ಮೂಲಕ ರಾಜಕೀಯ ಅಸ್ತಿತ್ವ ಕಂಡು ಕೊಂಡರು. ನಂತರ ಅವರು ೩ ಬಾರಿ ಶಾಸಕರಾದರೂ ಸಾಮಾನ್ಯರಂತೆ ಬದುಕಿ ಕ್ಷೇತ್ರದ ಜನರೊಂದಿಗೆ ಗುರುತಿಸಿಕೊಂಡಿದ್ದರು. ಈ ಹಿನ್ನಲೆಯಲ್ಲಿ ಅವರು ಇಂದಿಗೂ ಜನಮಾನಸದಲ್ಲಿ ಉಳಿದುಕೊಂಡಿದ್ದಾರೆ.
ಅಧಿಕಾರ ಇರಲಿ, ಇಲ್ಲದಿರಲಿ ಕ್ಷೇತ್ರದಲ್ಲಿ ಅಪ್ಪಾಜಿ ತಮ್ಮದೇ ಆದ ವರ್ಚಸ್ಸು, ಮತ ಬ್ಯಾಂಕ್ ಹೊಂದಿದ್ದರು. ಈ ನಡುವೆ ಸ್ಥಳೀಯ ಸಂಸ್ಥೆಗಳ ಅಧಿಕಾರದ ಚುಕ್ಕಾಣಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದರು. ಅಲ್ಲದೆ ಹಲವು ಮುಖಂಡರು ರಾಜಕೀಯವಾಗಿ ಮುಂಚೂಣಿಗೆ ಬರಲು ಕಾರಣಕರ್ತರಾಗಿದ್ದರು. ಇದೀಗ ಅಪ್ಪಾಜಿ ಇಲ್ಲದೆ ೨ ವರ್ಷ ಕಳೆದಿದ್ದು, ಈ ನಡುವೆ ಎದುರಾದ ಗ್ರಾಮ ಪಂಚಾಯಿತಿ, ನಗರಸಭೆ ಚುನಾವಣೆಗಳಲ್ಲಿ ಅಪ್ಪಾಜಿ ಹಿಂಬಾಲಕರು ಸ್ವಲ್ಪ ಮಟ್ಟಿಗೆ ಹಿನ್ನಡೆ ಎದುರಿಸಿದ್ದಾರೆ. ಒಂದು ಹಂತದಲ್ಲಿ ಹಿನ್ನಡೆಯಾಗಿರಬಹುದು. ಆದರೆ ಭವಿಷ್ಯದಲ್ಲಿ ಪೂರ್ಣ ಗುರಿ ಸಾಧಿಸುವ ವಿಶ್ವಾಸ ಹೆಚ್ಚಿಸಿಕೊಂಡಿರುವುದು ಮಾತ್ರ ನೂರಕ್ಕೆ ನೂರರಷ್ಟು ಸತ್ಯ ಎಂಬುದು ಎಲ್ಲರಿಗೂ ಮನವರಿಕೆಯಾಗಿದೆ.
ಅಪ್ಪಾಜಿ ಕುಟುಂಬ ಸಹ ಅಗಲಿಕೆ ನೋವಿನಿಂದ ಹಂತ ಹಂತವಾಗಿ ಹೊರಬಂದಿದ್ದು, ಅಪ್ಪಾಜಿಯವರ ಆದರ್ಶಗಳನ್ನು ಮೈಗೂಡಿಸಿಕೊಂಡು ಭವಿಷ್ಯದಲ್ಲಿ ರಾಜಕೀಯ ಅಸ್ತಿತ್ವ ಕಂಡುಕೊಳ್ಳುವ ನಿಟ್ಟಿನಲ್ಲಿ ಗಮನ ಹರಿಸುತ್ತಿದೆ. ಪ್ರಸ್ತುತ ಅಪ್ಪಾಜಿ ಹಿಂಬಾಲಕರು ಶಾರದ ಅಪ್ಪಾಜಿ ಮಾರ್ಗದರ್ಶನದಲ್ಲಿಯೇ ಮುನ್ನಡೆಯುತ್ತಿದ್ದು, ಈಗಾಗಲೇ ಅಪ್ಪಾಜಿ ಅವರು ಮೊದಲ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಶಾರದ ಅಪ್ಪಾಜಿ ಅವರನ್ನು ಮುಂಬರುವ ವಿಧಾನಸಭಾ ಚುನಾವಣೆ ಅಭ್ಯರ್ಥಿಯಾಗಿ ಘೋಷಿಸಿದ್ದಾರೆ. ಈ ಹಿನ್ನಲೆಯಲ್ಲಿ ಅಭ್ಯರ್ಥಿ ಕುರಿತು ಯಾವುದೇ ಗೊಂದಲ ಇಲ್ಲವಾಗಿದೆ.
ಪಕ್ಷದ ಸಂಪೂರ್ಣ ಜವಾಬ್ದಾರಿ ವಹಿಸಿಕೊಂಡಿರುವ ಶಾರದ ಅಪ್ಪಾಜಿ ಇದೀಗ ತಮ್ಮದೇ ಪಡೆಯನ್ನು ಸಮರ್ಥವಾಗಿ ಕಟ್ಟಿಕೊಂಡಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಹೊಸ ಪದಾಧಿಕಾರಿಗಳನ್ನು ನೇಮಕಗೊಳಿಸಿದ್ದಾರೆ. ಯಾವುದೇ ಕಾರಣಕ್ಕೂ ಅಪ್ಪಾಜಿ ಅವರ ವರ್ಚಸ್ಸಿನ ಮತಗಳು ಛಿದ್ರವಾಗದಂತೆ ಹಾಗು ಹೊಸ ಮತದಾರರನ್ನು ಸೆಳೆಯಲು ನಾನಾ ರೀತಿಯ ತಂತ್ರಗಾರಿಕೆಗಳಿಗೆ ಮೊರೆ ಹೋಗಿದ್ದಾರೆ. ಈ ನಡುವೆ ಎದುರಾಗಿರುವ ಅಪ್ಪಾಜಿಯವರ ಎರಡನೇ ವರ್ಷದ ನೆನಪು ಇವರಲ್ಲಿ ಮತ್ತಷ್ಟು ಚೈತನ್ಯವನ್ನುಂಟು ಮಾಡಲಿದೆ ಎನ್ನುವ ವಿಶ್ವಾಸ ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು ಹೊಂದಿದ್ದಾರೆ.
೨ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ವಿವಿಧೆಡೆ ಕಾರ್ಯಕ್ರಮ:
ಉಚಿತ ಕೇಶವಿನ್ಯಾಸ :
ತಾಲೂಕು ಸವಿತಾ ಸಮಾಜ ಹಾಗು ದಯಾಸಾಗರ್ ಟ್ರಸ್ಟ್ ವತಿಯಿಂದ ಸೆ.೨ರಂದು ಬೆಳಿಗ್ಗೆ ೧೦.೩೦ಕ್ಕೆ ೨ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ನ್ಯೂಟೌನ್ ಉಂಬ್ಳೆಬೈಲ್ ರಸ್ತೆಯಲ್ಲಿರುವ ದಯಾಸಾಗರ್ ಟ್ರಸ್ಟ್ ಆವರಣದಲ್ಲಿ ನಿರಾಶ್ರಿತರು ಹಾಗು ವಿಕಲಚೇತನರಿಗೆ ಉಚಿತ ಕೇಶವಿನ್ಯಾಸ(ಕಟಿಂಗ್ ಮತ್ತು ಶೇವಿಂಗ್) ಹಮ್ಮಿಕೊಳ್ಳಲಾಗಿದೆ. ಸವಿತಾ ಸಮಾಜದ ಅಧ್ಯಕ್ಷ ವಿಶ್ವನಾಥ್ ಅಧ್ಯಕ್ಷತೆ ವಹಿಸಲಿದ್ದಾರೆ.
ಪುಣ್ಯಸ್ಮರಣೆ :
ಕಾಗದನಗರದ ವಾರ್ಡ್ ನಂ.೧ರ ಉದ್ಯಾನವನದಲ್ಲಿ ಸಂಜೆ ೭.೩೦ಕ್ಕೆ ಅಪ್ಪಾಜಿ ಅವರ ೨ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮ ನಡೆಯಲಿದೆ. ಶ್ರೀ ವಿನಾಯಕ ಗೆಳೆಯರ ಬಳಗ ಹಾಗು ಶಾರದ ಅಪ್ಪಾಜಿ ಅಭಿಮಾನಿಗಳ ಬಳಗ ಮತ್ತು ಸ್ಥಳೀಯ ನಿವಾಸಿಗಳ ಸಹಕಾರದೊಂದಿಗೆ ಕಾರ್ಯಕ್ರಮ ಆಯೋಜಿಸಲಾಗಿದೆ. ನಗರಸಭೆ ವಾರ್ಡ್ ನಂ.೧೯ರ ಸದಸ್ಯ ಬಸವರಾಜ ಬಿ. ಆನೇಕೊಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ.
No comments:
Post a Comment