Friday, October 28, 2022

ಕ್ಷೇತ್ರದಾದ್ಯಂತ ಶಾಸಕ ಬಿ.ಕೆ ಸಂಗಮೇಶ್ವರ್ ೬೦ನೇ ಹುಟ್ಟುಹಬ್ಬ ಆಚರಣೆ

ವಿವಿಧ ಸಂಘಟನೆಗಳಿಂದ ಹಲವು ಸೇವಾ ಕಾರ್ಯಗಳು

ಭದ್ರಾವತಿ ಜನ್ನಾಪುರ ಜಯಶ್ರೀ ವೃತ್ತದಲ್ಲಿರುವ ಕಾಂಗ್ರೆಸ್ ಪಕ್ಷದ ಕಚೇರಿ ಬಳಿ ಕಲ್ಪವೃಕ್ಷ ಸೇವಾ ಟ್ರಸ್ಟ್ ವತಿಯಿಂದ ಶಾಸಕ ಬಿ.ಕೆ ಸಂಗಮೇಶ್ವರ್ ಅವರ ೬೦ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ, ಪೌರಕಾರ್ಮಿಕರಿಗೆ ಸನ್ಮಾನ, ಮಹಿಳಾ ಕಾರ್ಮಿಕರಿಗೆ ಸೀರೆ ವಿತರಣೆ ನಡೆಯಿತು. ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್ ಹಾಗೂ ಟ್ರಸ್ಟ್ ಪದಾಧಿಕಾರಿಗಳು, ಪ್ರಮುಖರು ಪಾಲ್ಗೊಂಡಿದ್ದರು.
    ಭದ್ರಾವತಿ, ಅ. ೨೮: ಕ್ಷೇತ್ರದ ರಾಜಕಾರಣದಲ್ಲಿ ೩ ದಶಕಗಳಿಂದ ತಮ್ಮದೇ ವರ್ಚಸ್ಸನ್ನು ಕಾಯ್ದುಕೊಂಡು ಬರುವ ಮೂಲಕ ೩ ಬಾರಿ ಶಾಸಕರಾಗಿರುವ ಬಿ.ಕೆ ಸಂಗಮೇಶ್ವರ ಶುಕ್ರವಾರ ೬೦ ವಸಂತಗಳನ್ನು ಪೂರೈಸುವ ಮೂಲಕ ಅದ್ದೂರಿಯಾಗಿ ತಮ್ಮ ಜನ್ಮದಿನ ಆಚರಿಸಿಕೊಂಡರು.
      ಕ್ಷೇತ್ರದಾದ್ಯಂತ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು, ಹಿತೈಷಿಗಳು, ವಿವಿಧ ಸಂಘ-ಸಂಸ್ಥೆಗಳು, ಜನಪ್ರತಿನಿಧಿಗಳು ಹಾಗು ಶಾಸಕರ ಕುಟುಂಬ ಸಂಬಂಧಿಗಳು ವಿಭಿನ್ನವಾಗಿ ಶಾಸಕರ ಹುಟ್ಟುಹಬ್ಬ ಆಚರಿಸುವ ಮೂಲಕ ಗಮನ ಸೆಳೆದರು.
      ೫-೬ ದಿನಗಳ ಹಿಂದೆಯೇ ಕ್ಷೇತ್ರದ ಎಲ್ಲೆಡೆ ಶಾಸಕರ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿ ಫ್ಲೆಕ್ಸ್‌ಗಳನ್ನು ಅಳವಡಿಸಲಾಗಿತ್ತು. ಅಲ್ಲದೆ ಸಾಮಾಜಿಕ ಜಾಲತಾಣಗಳಲ್ಲೂ ಶುಭಾಶಯಗಳ ಮಹಾಪೂರವೇ ಹರಿದು ಬಂದಿತ್ತು.


      ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ಶ್ರೀ ಜಗದ್ಗುರು ಪ್ರಸನ್ನ ರೇಣುಕಾ ಡಾ. ವೀರ ಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು, ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸೇರಿದಂತೆ ಅನೇಕ ಗಣ್ಯರು, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು, ಜನಪ್ರತಿನಿಧಿಗಳು ಬೆಳಿಗ್ಗೆಯೇ ಶಾಸಕರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದರು.
      ಸಾಮಾಜಿಕ ಸೇವಾಕಾರ್ಯಗಳು :
      ಶಾಸಕರ ೬೦ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ವಿವಿಧ ಸಂಘ-ಸಂಸ್ಥೆಗಳಿಂದ ಆರೋಗ್ಯ ಶಿಬಿರ, ಪೌರಕಾರ್ಮಿಕರು ಹಾಗು ಹಿರಿಯ ನಾಗರೀಕರಿಗೆ ಸನ್ಮಾನ, ಮಹಿಳಾ ಕಾರ್ಮಿಕರಿಗೆ ಸೀರೆ ವಿತರಣೆ, ಕಟ್ಟಡ ಕಾರ್ಮಿಕರಿಗೆ ಟಿಫನ್ ಬಾಕ್ಸ್ ವಿತರಣೆ ಸೇರಿದಂತೆ ಇನ್ನಿತರ ಸೇವಾ ಕಾರ್ಯಗಳು ಜರುಗಿದವು.

No comments:

Post a Comment