Monday, February 7, 2022

ಅಂಬೇಡ್ಕರ್‌ರವರ ಸ್ಪೂರ್ತಿಯ ಚಿಲುಮೆ ರಮಾಬಾಯಿ : ಮಂಜುನಾಥ್


ಭದ್ರಾವತಿ ತಾಲೂಕು ಛಲವಾದಿ ಮಹಾಸಭಾ ವತಿಯಿಂದ ಸೋಮವಾರ ರಮಾಬಾಯಿ ಅಂಬೇಡ್ಕರ್‌ರವರ ೧೨೪ನೇ ಜನ್ಮದಿನ ಹಮ್ಮಿಕೊಳ್ಳಲಾಗಿತ್ತು.
    ಭದ್ರಾವತಿ, ಫೆ. ೭: ರಮಾಬಾಯಿ ಅಂಬೇಡ್ಕರ್‌ರವರು ಓರ್ವ ಆದರ್ಶ ಮಹಿಳೆ ಮಾತ್ರವಲ್ಲದೆ, ವಿಶ್ವಜ್ಞಾನಿ, ಮಹಾಚೇತನ ಡಾ. ಬಿ.ಆರ್ ಅಂಬೇಡ್ಕರವರಿಗೆ ಸ್ಪೂರ್ತಿಯ ಚಿಲುಮೆಯಾಗಿದ್ದರು ಎಂದು ಎಂಪಿಎಂಇಎಸ್ ಕಾಲೇಜಿನ ಉಪನ್ಯಾಸಕ ಮಂಜುನಾಥ್ ಹೇಳಿದರು.
    ಅವರು ಸೋಮವಾರ ತಾಲೂಕು ಛಲವಾದಿ ಮಹಾಸಭಾ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ರಮಾಬಾಯಿ ಅಂಬೇಡ್ಕರ್‌ರವರ ೧೨೪ನೇ ಜನ್ಮದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
    ಅಂಬೇಡ್ಕರ್‌ರವರ ಸಾಧನೆ ಹಿಂದೆ ರಮಾಬಾಯಿಯವರ ಕೊಡುಗೆ ಅಪಾರವಾಗಿದ್ದು, ಚಿಕ್ಕ ವಯಸ್ಸಿನಲ್ಲಿಯೇ ಮದುವೆಯಾದ ರಮಾಬಾಯಿಯವರು ತಮ್ಮ ಸಂಪೂರ್ಣ ಬದುಕನ್ನು ಅಂಬೇಡ್ಕರ್‌ರವರ ಉಜ್ವಲ ಭವಿಷ್ಯಕ್ಕಾಗಿ ಮುಡುಪಾಗಿಟ್ಟರು. ಆ ಕಾಲದಲ್ಲಿಯೇ ತಮ್ಮ ಬದುಕಿನ ವೈಯಕ್ತಿಕ ಸಮಸ್ಯೆಗಳಿಗೆ ಅಂಬೇಡ್ಕರ್‌ರವರ ಶಿಕ್ಷಣ ಮೊಟಕಾಗದಂತೆ ಎಚ್ಚರವಹಿಸಿದರು. ಅಂಬೇಡ್ಕರ್‌ರವರು ವಿದೇಶದಲ್ಲಿ ವ್ಯಾಸಂಗ ಮುಗಿಸಿಕೊಂಡು ಹಿಂದಿರುಗವರೆಗೂ ಅನುಭವಿಸಿದ ನೋವು, ದುಃಖ ಎಲ್ಲವನ್ನು ನುಂಗಿಕೊಂಡು ಕೇವಲ ಸತಿಯಾಗಿರದೆ ಮಾತೆಯ ಸ್ವರೂಪಿಣಿಯಾಗಿದ್ದರು. ಇಂತಹ ಮಹಾನ್ ಮಾತೆಯ ಜನ್ಮದಿನ ಆಚರಿಸುತ್ತಿರುವುದು ಒಳ್ಳೆಯ ಬೆಳವಣಿಗೆಯಾಗಿದ್ದು, ಇವರ ದಾರಿಯಲ್ಲಿ ನಾವೆಲ್ಲರೂ ಸಾಗುವಂತಾಗಬೇಕೆಂದರು.
    ನಗರಸಭೆ ಇಂಜಿನಿಯರ್ ರಂಗರಾಜಪುರೆ, ಶಾರದಕುಮಾರಿ ಸೇರಿದಂತೆ ಇನ್ನಿತರರು ಮಾತನಾಡಿದರು. ಸಮಾಜದ ಹಿರಿಯ ಮಹಿಳೆ ಲಕ್ಷ್ಮಮ್ಮ ಕಾರ್ಯಕ್ರಮ ಉದ್ಘಾಟಿಸಿದರು. ಮೆಸ್ಕಾಂ ನಿವೃತ್ತ ಇಂಜಿನಿಯರ್ ಜಯರಾಜ್, ಶಿಕ್ಷಕಿ ವಿಜಯಲಕ್ಷ್ಮೀ, ಭಾಗ್ಯಮ್ಮ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ಛಲವಾದಿ ಮಹಾಸಭಾ ಜಿಲ್ಲಾಧ್ಯಕ್ಷ ಸುರೇಶ್ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಪುಟ್ಟರಾಜ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಮಹೇಶ್ ವಂದಿಸಿದರು.

ಫೆ.೧೦ರಂದು ಸೀಳುತುಟಿ, ಸೀಳು ಅಂಗಳ ಪೀಡಿತರ ಗುರುತಿಸುವಿಕೆ, ಉಚಿತ ಶಸ್ತ್ರ ಚಿಕಿತ್ಸಾ ಶಿಬಿರ

    ಭದ್ರಾವತಿ, ಫೆ. ೭: ಬೆಂಗಳೂರಿನ ಭಗವಾನ್ ಮಹಾವೀರ್ ಜೈನ್ ಆಸ್ಪತ್ರೆ, ಸ್ಮೈಲ್ ಟ್ರೈನ್ ಹಾಗು ಚಿರಂತನ ಟ್ರಸ್ಟ್ ವತಿಯಿಂದ ತಾಲೂಕು ಆರೋಗ್ಯ ಇಲಾಖೆ ಹಾಗು ಸಾರ್ವಜನಿಕ ಆಸ್ಪತ್ರೆ ಮತ್ತು ಶಿಶು ಅಭಿವೃದ್ಧಿ ಯೋಜನಾ ಇಲಾಖೆ ಸಹಯೋಗದೊಂದಿಗೆ ಫೆ.೧೦ ರಂದು ಬೆಳಿಗ್ಗೆ ೧೦ ಗಂಟೆಯಿಂದ ಮಧ್ಯಾಹ್ನ ೧ ಗಂಟೆವರೆಗೆ ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಸೀಳುತುಟಿ ಮತ್ತು ಸೀಳು ಅಂಗಳ ಪೀಡಿತರನ್ನು ಗುರುತಿಸುವಿಕೆ ಮತ್ತು ಉಚಿತ ಶಸ್ತ್ರ ಚಿಕಿತ್ಸಾ ಶಿಬಿರ ಹಮ್ಮಿಕೊಳ್ಳಲಾಗಿದೆ.
    ಎಲ್ಲಾ ವಯಸ್ಸಿನವರು ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ. ಈ ಹಿಂದೆ ಬೇರೆ ಬೇರೆ ಕಡೆ ತಪಾಸಣೆ, ಶಸ್ತ್ರ ಚಿಕಿತ್ಸೆಯಲ್ಲಿ ಪಾಲ್ಗೊಂಡವರು ಸಹ ಮರು ತಪಾಸಣೆ ಮಾಡಿಸಿಕೊಳ್ಳಬಹುದಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ ಕೆ.ಎಸ್ ಮನೋಹರ್, ಶಿಬಿರದ ಸಂಚಾಲಕರು, ಮೊ: ೭೦೧೯೨೫೮೦೦೫ ಅಥವಾ ೯೯೬೪೦೭೮೨೨೨ ಸಂಖ್ಯೆಗೆ ಕರೆ ಮಾಡಬಹುದಾಗಿದೆ.

ವಿಐಎಸ್‌ಎಲ್ ಅತಿಥಿ ಗೃಹದಲ್ಲಿ ನವೀಕರಣಗೊಂಡ ಪಾಕಶಾಲೆ ಕೊಠಡಿ ಉದ್ಘಾಟನೆ

ಭದ್ರಾವತಿ ವಿಐಎಸ್‌ಎಲ್ ಅತಿಥಿ ಗೃಹದಲ್ಲಿ ಪಾಕಶಾಲೆಯ ನಿವೀಕರಣಗೊಂಡ ಕೊಠಡಿಯನ್ನು ಸೋಮವಾರ ಕಾರ್ಖಾನೆಯ ಕಾರ್ಯಪಾಲಕ ನಿರ್ದೇಶಕ ಸುರಜಿತ್ ಮಿಶ್ರಾ ಉದ್ಘಾಟಿಸಿದರು.
    ಭದ್ರಾವತಿ, ಫೆ. ೭: ವಿಐಎಸ್‌ಎಲ್ ಅತಿಥಿ ಗೃಹದಲ್ಲಿ ಪಾಕಶಾಲೆಯ ನಿವೀಕರಣಗೊಂಡ ಕೊಠಡಿಯನ್ನು ಸೋಮವಾರ ಕಾರ್ಖಾನೆಯ ಕಾರ್ಯಪಾಲಕ ನಿರ್ದೇಶಕ ಸುರಜಿತ್ ಮಿಶ್ರಾ ಉದ್ಘಾಟಿಸಿದರು.
    ತುಂಬಾ ಹಳೇಯದಾದ ಅತಿಥಿ ಗೃಹದಲ್ಲಿ ಶಿಥಿಲಗೊಂಡ ಕೊಠಡಿಯನ್ನು ಆಧುನಿಕ ರೀತಿಯಲ್ಲಿ ನವೀಕರಣಗೊಳಿಸಲಾಗಿದೆ. ಧಾರ್ಮಿಕ ಆಚರಣೆಯೊಂದಿಗೆ ಕೊಠಡಿಯನ್ನು ಉದ್ಘಾಟಿಸಲಾಯಿತು.
    ಸಿಬ್ಬಂದಿ ಮತ್ತು ಆಡಳಿತ ವಿಭಾಗದ ಪ್ರಭಾರ ಮಹಾಪ್ರಬಂಧಕ ಪಿ.ಪಿ ಚಕ್ರವರ್ತಿ, ಅಪರೇಷನ್ ವಿಭಾಗದ ಮುಖ್ಯ ವ್ಯವಸ್ಥಾಪಕ ಕೆ.ಎಸ್ ಸುರೇಶ್, ಅತಿಥಿ ಗೃಹದ ಅಧಿಕಾರಿಗಳಾದ ಎ.ಆರ್ ವೀರಣ್ಣ, ಚಂದ್ರಕಾಂತ್, ಕಾರ್ಮಿಕ ಸಂಘದ ಅಧ್ಯಕ್ಷ ಜೆ. ಜಗದೀಶ್ ಹಾಗು ಪದಾಧಿಕಾರಿಗಳು, ಅಧಿಕಾರಿಗಳ ಸಂಘದ ಪದಾಧಿಕಾರಿಗಳು, ಅತಿಥಿ ಗೃಹದ ಸಿಬ್ಬಂದಿಗಳಾದ ಮೋಹನ್, ಪ್ರತಾಪ್, ಪ್ರಭಾಕರ್, ವಿಲ್ಸನ್, ಆದಿನಾರಾಯಣ, ಆಸ್ಲಾಂ, ಸುರೇಶ್, ಸುಜಾತ, ಸಾವಿತ್ರಮ್ಮ, ತುಳಸಿ, ಲಕ್ಷ್ಮೀಬಾಯಿ, ರೂಪ, ಪದ್ಮಮ್ಮ ಮತ್ತು ಪಾರ್ವತಮ್ಮ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಸರ್ಕಾರದ ಆದೇಶದ ವಿರುದ್ಧ ಮುಸ್ಲಿಂ ವಿದ್ಯಾರ್ಥಿಗಳ ಪ್ರತಿಭಟನೆ

ಹಿಜಾಬ್ ಧರಿಸಿಕೊಂಡು ತರಗತಿಗೆ ಹೋಗಲು ಅವಕಾಶ ನೀಡುವಂತೆ ಮನವಿ

ಭದ್ರಾವತಿ ನ್ಯೂಟೌನ್ ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ಮುಂಭಾಗ ಮುಸ್ಲಿಂ ವಿದ್ಯಾರ್ಥಿಗಳು ಸರ್ಕಾರದ ಆದೇಶದ ವಿರುದ್ಧ ಸೋಮವಾರ ಪ್ರತಿಭಟನೆ ನಡೆಸಿದರು.
    ಭದ್ರಾವತಿ, ಫೆ. ೭: ನಗರದ ನ್ಯೂಟೌನ್ ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಹಿಜಾಬ್ ವಿವಾದ ಇನ್ನೂ ಬಗೆ ಹರಿದಿಲ್ಲ. ವಿದ್ಯಾರ್ಥಿಗಳಿಗೆ ಆಯಾ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳು ನಿಗದಿಪಡಿಸಿರುವ ಸಮವಸ್ತ್ರ ಕಡ್ಡಾಯಗೊಳಿಸಲಾಗಿದೆ ಎಂದು ಸರ್ಕಾರ ಆದೇಶ ಹೊರಡಿಸಿದ್ದರೂ ಸಹ ಮುಸ್ಲಿಂ ವಿದ್ಯಾರ್ಥಿಗಳು ಸೋಮವಾರ ಆದೇಶದ ವಿರುದ್ಧ ಕಾಲೇಜು ಮುಂಭಾಗ ಪ್ರತಿಭಟನೆ ನಡೆಸಿದರು.
    ಹಿಜಾಬ್ ಧರಿಸಿಕೊಂಡು ಬಂದ ವಿದ್ಯಾರ್ಥಿಗಳನ್ನು ಕಾಲೇಜಿನ ಒಳಗೆ ಬಿಡದಂತೆ ಕಾಲೇಜಿನ ಮುಂಭಾಗ ಪ್ರಾಂಶುಪಾಲರು ಸರ್ಕಾರದ ಆದೇಶವನ್ನು ಓದಿ ತಿಳಿಸಿದರು. ಆದರೂ ಸಹ ವಿದ್ಯಾರ್ಥಿಗಳು ತರಗತಿಗಳಿಗೆ ಹಿಜಾಬ್ ಧರಿಸಿಕೊಂಡು ಹೋಗುವುದಾಗಿ ಹಠಕ್ಕೆ ಬಿದ್ದು, ಪ್ರತಿಭಟನೆ ಕೈಗೊಂಡಿದ್ದಾರೆ. ಅಲ್ಲದೆ ಹಿಜಾಬ್ ಧರಿಸಿಕೊಂಡು ತರಗತಿಗಳಿಗೆ ಹೋಗಲು ಅವಕಾಶ ನೀಡುವಂತೆ ಒತ್ತಾಯಿಸಿ ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದ್ದಾರೆ.
    ಕೇಸರಿ ವಸ್ತ್ರದೊಂದಿಗೆ ಆಗಮಿಸಿದ್ದ ವಿದ್ಯಾರ್ಥಿಗಳು ಸರ್ಕಾರದ ಆದೇಶ ಪಾಲನೆ ಮಾಡುವ ಮೂಲಕ ತರಗತಿಗಳಿಗೆ ಹಾಜರಾದರು. ಈ ನಡುವೆ ಪೊಲೀಸರು ಕಾಲೇಜು ಆವರಣದ ಸುತ್ತಮುತ್ತ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಬಂದೋಬಸ್ತ್ ಕೈಗೊಂಡಿದ್ದರು.