Sunday, March 6, 2022

ಶಿವಮೊಗ್ಗ ಪ್ರತ್ಯೇಕ ಹಾಲು ಒಕ್ಕೂಟ, ವಾರ್ಡ್‌ಗಳಲ್ಲಿ ಕ್ಲಿನಿಕ್, ಯಶಸ್ವಿನಿ ಆರೋಗ್ಯ ಯೋಜನೆ ಅನುಷ್ಠಾನಗೊಳ್ಳಲಿ

ಶಿಮುಲ್ ಮಾಜಿ ಅಧ್ಯಕ್ಷ ಆನಂದ್, ಎಎಪಿ ಜಿಲ್ಲಾಧ್ಯಕ್ಷ ರವಿಕುಮಾರ್, ಬಿಜೆಪಿ ಯುವ ಮುಖಂಡ ಸುನೀಲ್ ಗಾಯಕ್ವಾಡ್ ಸರ್ಕಾರಕ್ಕೆ ಕೃತಜ್ಞತೆ

ಡಿ. ಆನಂದ್, ಶಿಮುಲ್ ಮಾಜಿ ಅಧ್ಯಕ್ಷರು, ಭದ್ರಾವತಿ

    ಭದ್ರಾವತಿ, ಮಾ. ೬: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಈ ಬಾರಿ ಮಂಡಿಸಿರುವ ಬಜೆಟ್‌ನಲ್ಲಿ ಶಿವಮೊಗ್ಗ ಹಾಲು ಒಕ್ಕೂಟವನ್ನು ಪ್ರತ್ಯೇಕಿಸುವ ಕುರಿತು  ಪ್ರಸ್ತಾಪ ಮಾಡಿರುವುದು ಒಳ್ಳೆಯ ಬೆಳೆವಣಿಗೆಯಾಗಿದ್ದು, ಇದು ಅನುಷ್ಠಾನಗೊಂಡಲ್ಲಿ ಶಿವಮೊಗ್ಗ ಜಿಲ್ಲೆಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಒಕ್ಕೂಟದ ಮಾಜಿ ಅಧ್ಯಕ್ಷ ಡಿ. ಆನಂದ್ ತಿಳಿಸಿದ್ದಾರೆ.
    ಒಕ್ಕೂಟ ಪ್ರತ್ಯೇಕಿಸುವ ವಿಚಾರ ಹಲವಾರು ವರ್ಷಗಳಿಂದ ಉಳಿದುಕೊಂಡಿದ್ದು, ಪ್ರಸ್ತುತ ಒಕ್ಕೂಟ ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳನ್ನು ಒಳಗೊಂಡಿರುವ ಹಿನ್ನಲೆಯಲ್ಲಿ ಒಂದು ಜಿಲ್ಲೆಯವರು ಗಳಿಸುವ ಲಾಭ ೩ ಜಿಲ್ಲೆಗಳಿಗೆ ಹಂಚಿಕೆಯಾಗುತ್ತಿದೆ. ಇದರಿಂದಾಗಿ ಒಕ್ಕೂಟ ಬೆಳವಣಿಗೆ ಕಾಣಲು ಸಾಧ್ಯವಾಗುತ್ತಿಲ್ಲ. ಶಿವಮೊಗ್ಗ ಜಿಲ್ಲೆಯಲ್ಲಿ ಪ್ರತಿದಿನ ಸುಮಾರು ೨.೫ ಲಕ್ಷ ಲೀಟರ್ ಹಾಲು ಸಂಗ್ರಹವಾಗುತ್ತಿದ್ದು, ಈ ಪೈಕಿ ಸುಮಾರು ೧.೫ ಲಕ್ಷ ಲೀಟರ್ ಹಾಲು ಮಾರಾಟವಾಗುತ್ತಿದೆ. ದಾವಣಗೆರೆ ಮತ್ತು ಚಿತ್ರದುರ್ಗ ಎರಡು ಜಿಲ್ಲೆಗಳು ಸೇರಿ ಪ್ರತಿದಿನ ಒಟ್ಟು ಸುಮಾರು ೩ ಲಕ್ಷ ಲೀಟರ್ ಹಾಲು ಸಂಗ್ರಹವಾಗುತ್ತಿದ್ದು, ಆದರೆ ಸುಮಾರು ೧.೫ ಲಕ್ಷ ಲೀಟರ್ ಹಾಲು ಮಾತ್ರ ಮಾರಾಟವಾಗುತ್ತಿದೆ. ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳ ವ್ಯಾಪ್ತಿಯಲ್ಲಿ ಆರೋಗ್ಯ ದೊದ್ಲಾ ಸೇರಿದಂತೆ ಖಾಸಗಿ ಕಂಪನಿಗಳ ಹಾಲು ಹೆಚ್ಚಾಗಿ ಮಾರಾಟವಾಗುತ್ತಿದ್ದು, ಇದರಿಂದಾಗಿ ಒಕ್ಕೂಟದ ಹಾಲು ಉಳಿಯುತ್ತಿದೆ. ಈ ಹಿನ್ನಲೆಯಲ್ಲಿ ಶಿವಮೊಗ್ಗ ಒಕ್ಕೂಟ ರಚನೆಯಾದಲ್ಲಿ ಜಿಲ್ಲೆಯಲ್ಲಿರುವ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದರು.


ಎಚ್. ರವಿಕುಮಾರ್, ಆಮ್ ಆದ್ಮಿ ಜಿಲ್ಲಾಧ್ಯಕ್ಷರು, ಭದ್ರಾವತಿ.

    ಪ್ರತಿ ವಾರ್ಡ್‌ಗಳಲ್ಲಿ ಕ್ಲಿನಿಕ್ ಪ್ರಸ್ತಾವನೆಗೆ ಅಭಿನಂದನೆ :

    ಈ ಬಾರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಡಿಸಿರುವ ಬಜೆಟ್ ಸಮಾಧಾನಕರವಾಗಿದೆ ಎಂದು ಆಮ್ ಆದ್ಮಿ ಪಾರ್ಟಿ ಜಿಲ್ಲಾಧ್ಯಕ್ಷ ಎಚ್. ರವಿಕುಮಾರ್ ತಿಳಿಸಿದ್ದಾರೆ.
    ಆಮ್ ಆದ್ಮಿ ಪಕ್ಷದ ದೆಹಲಿ ಸರ್ಕಾರ ಬಡ ವರ್ಗದವರಿಗೆ ಗುಣಮಟ್ಟದ ಆರೋಗ್ಯ ನೀಡುವ ಹಿನ್ನಲೆಯಲ್ಲಿ ಮೊಹಲ್ಲಾ ಕ್ಲಿನಿಕ್‌ಗಳನ್ನು ಆರಂಭಿಸಿದೆ. ಇದೆ ರೀತಿ ಇದೀಗ ರಾಜ್ಯದಲ್ಲಿ ಪ್ರತಿ ವಾರ್ಡ್‌ಗಳಲ್ಲಿ ಕ್ಲಿನಿಕ್ ಆರಂಭಿಸುವ ಕುರಿತು ಬಜೆಟ್‌ನಲ್ಲಿ ಪ್ರಸ್ತಾಪಿಸಿರುವುದು ಸ್ವಾಗತಾರ್ಹ ವಿಚಾರವಾಗಿದೆ. ಈ ಹಿನ್ನಲೆಯಲ್ಲಿ ಸರ್ಕಾರಕ್ಕೆ ಪಕ್ಷದ ವತಿಯಿಂದ ಕೃತಜ್ಞತೆ ಸಲ್ಲಿಸುತ್ತೇನೆ. ಜೊತೆಗೆ ತಕ್ಷಣ ಕ್ಲಿನಿಕ್‌ಗಳನ್ನು ಆರಂಭಿಸುವಂತೆ ಮನವಿ ಮಾಡಿದ್ದಾರೆ.


ಸುನೀಲ್ ಗಾಯಕ್ವಾಡ್, ಯುವ ಮುಖಂಡರು, ಬಿಜೆಪಿ, ಭದ್ರಾವತಿ.

    ಯಶಸ್ವಿನಿ ಯೋಜನೆಯಿಂದ ಮಲೆನಾಡಿನ ಭಾಗದ ರೈತರಿಗೆ ಹೆಚ್ಚಿನ ಅನುಕೂಲ:

    ರೈತ ನಾಯಕ, ಬಡವರ ಬಂಧು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಈ ಹಿಂದೆ ಆರಂಭಿಸಿದ್ದ ಯಶಸ್ವಿನಿ ಆರೋಗ್ಯ ಯೋಜನೆಗೆ ಈ ಬಾರಿ ಮಂಡಿಸಿರುವ ಬಜೆಟ್‌ನಲ್ಲಿ ಮರುಜೀವ ತುಂಬಲು ಮುಂದಾಗಿರುವುದು ಒಳ್ಳೆಯ ಬೆಳೆವಣಿಗೆಯಾಗಿದೆ ಎಂದು ಬಿಜೆಪಿ ಯುವ ಮುಖಂಡ ಸುನೀಲ್ ಗಾಯಕ್ವಾಡ್ ತಿಳಿಸಿದ್ದಾರೆ.
    ರೈತರಿಗೆ ಪ್ರಸ್ತುತ ಕೆಲವು ಆರೋಗ್ಯ ಯೋಜನೆಗಳು ಜಾರಿಯಲ್ಲಿದ್ದರೂ ಸಹ ಇವುಗಳಿಂದ ಯಾವುದೇ ಪ್ರಯೋಜನವಾಗುತ್ತಿಲ್ಲ. ಯಡಿಯೂರಪ್ಪನವರು ಆರಂಭಿಸಿದ ಯಶಸ್ವಿನಿ ಯೋಜನೆಯಿಂದ ಈ ಹಿಂದೆ ಸಾಕಷ್ಟು ರೈತರಿಗೆ ಹೆಚ್ಚಿನ ಅನುಕೂಲವಾಗಿತ್ತು. ಇದೀಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹಲವಾರು ಮಾರ್ಪಾಡುಗಳೊಂದಿಗೆ ಪುನಃ ಯಶಸ್ವಿನಿ ಯೋಜನೆ ಆರಂಭಿಸುವುದಾಗಿ ಪ್ರಸ್ತಾಪಿಸುವ ಜೊತೆಗೆ ರು. ೩೦೦ ಕೋ. ಮೀಸಲಿಟ್ಟಿರುವುದು ಸಂತೋಷದ ವಿಚಾರವಾಗಿದೆ. ಯಶಸ್ವಿಯೋಜನೆಯಿಂದ ಮಲೆನಾಡಿನ ಭಾಗದ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ. ಈ ಹಿನ್ನಲೆಯಲ್ಲಿ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದ್ದಾರೆ.

ಅಗಮುಡಿ ಸಮುದಾಯಕ್ಕೆ ಒಬಿಸಿ ಮೀಸಲಾತಿಗೆ ಪ್ರಧಾನಿಗೆ ಪತ್ರ : ಬಿಎಸ್‌ವೈ

೨೫ನೇ ವರ್ಷದ ರಜತ ಮಹೋತ್ಸವ, ಸಮುದಾಯ ಭವನದ ಲೋಕಾರ್ಪಣೆ ಸಮಾರಂಭದಲ್ಲಿ ಭರವಸೆ

ಭದ್ರಾವತಿ ಗಾಂಧಿನಗರದಲ್ಲಿ ಭಾನುವಾರ ಜರುಗಿದ ಅಗಮುಡಿ ಮೊದಲಿಯರ್ ಸಂಘದ ೨೫ನೇ ವರ್ಷದ ರಜತ ಮಹೋತ್ಸವ ಹಾಗು ಅಗಮುಡಿ ಸಮುದಾಯ ಭವನದ ಲೋಕಾರ್ಪಣೆ ಸಮಾರಂಭವನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಉದ್ಘಾಟಿಸಿದರು.
    ಭದ್ರಾವತಿ, ಮಾ. ೬: ಅಗಮುಡಿ ಸಮುದಾಯದವರಿಗೆ ಒಬಿಸಿ ಮೀಸಲಾತಿ ನೀಡುವಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರ ಬರೆಯುವುದಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಭರವಸೆ ನೀಡಿದರು.
ಅವರು ಭಾನುವಾರ ಗಾಂಧಿನಗರದ ಅಗಮುಡಿ ಮೊದಲಿಯರ್ ಸಂಘದ ೨೫ನೇ ವರ್ಷದ ರಜತ ಮಹೋತ್ಸವ ಹಾಗು ಅಗಮುಡಿ ಸಮುದಾಯ ಭವನದ ಲೋಕಾರ್ಪಣೆ ನೆರವೇರಿಸಿ ಮಾತನಾಡಿದರು.
    ಕರ್ನಾಟಕ ರಾಜ್ಯದಲ್ಲಿ ಕನ್ನಡಿಗರು ಮತ್ತು ತಮಿಳು ಸಮುದಾಯದವರು ಸೌಹಾರ್ದತೆಯಿಂದ ಬದುಕು ಕಟ್ಟಿಕೊಂಡಿದ್ದಾರೆ. ಇದಕ್ಕೆ ಪೂರಕವೆಂಬಂತೆ ನನ್ನ ಅಧಿಕಾರದ ಅವಧಿಯಲ್ಲಿ ಬೆಂಗಳೂರಿನಲ್ಲಿ ತಿರುವಳ್ಳುವರ್‌ರವರ ಪ್ರತಿಮೆ ಹಾಗು ತಮಿಳುನಾಡು ಚೆನ್ನೈನಲ್ಲಿ ರನ್ನರವರ ಪ್ರತಿಮೆಗಳನ್ನು ಅನಾವರಣಗೊಳಿಸಲಾಯಿತು. ತಮಿಳು ಸಮುದಾಯದವರು ನನ್ನ ಮೇಲೆ ಅತ್ಯಂತ ವಿಶ್ವಾಸ ಹೊಂದಿರುವುದು ಹೆಮ್ಮೆಯ ವಿಚಾರವಾಗಿದೆ. ಈ ಸಮುದಾಯಕ್ಕೆ ಒಬಿಸಿ ಮೀಸಲಾತಿ ನೀಡುವ ಮೂಲಕ ಆರ್ಥಿಕವಾಗಿ, ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಅಭಿವೃದ್ಧಿಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವ ಮೂಲಕ ಸಮುದಾಯದವರ ಬೇಡಿಕೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸುತ್ತೇನೆ. ಜೊತೆಗೆ ಸಮುದಾಯದವರು ತಮ್ಮ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ನೀಡುವ ಬಗ್ಗೆ ಹೆಚ್ಚಿನ ಗಮನ ಹರಿಸಬೇಕೆಂದು ಮನವಿ ಮಾಡುತ್ತೇನೆ ಎಂದರು.
    ಶ್ರೀ ಕ್ಷೇತ್ರ ಭದ್ರಗಿರಿ ಅಭಿವೃದ್ಧಿ ಜೊತೆಗೆ ಶ್ರೀಗಳ ಆಶೀರ್ವಾದದೊಂದಿಗೆ ಸಮುದಾಯ ಭವನ ಸಹ ಹಂತ ಹಂತವಾಗಿ ಅಭಿವೃದ್ಧಿಗೊಳಿಸುವಲ್ಲಿ ಸಮುದಾಯದ ಆನೇಕ ಮಹನೀಯರ ಶ್ರಮ ಹೆಚ್ಚಿನದ್ದಾಗಿದೆ. ಇವರೆಲ್ಲರನ್ನು ಸ್ಮರಣೆ ಮಾಡಿಕೊಳ್ಳುವ ಮೂಲಕ ಇದೀಗ ಸಮುದಾಯಭವನದ ಲೋಕಾರ್ಪಣೆ ನೆರವೇರಿಸಲು ನನಗೆ ಅವಕಾಶ ಮಾಡಿಕೊಟ್ಟಿರುವುದಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.



    ಅಗಮುಡಿ ಮೊದಲಿಯರ್ ಸಂಘದ ಅಧ್ಯಕ್ಷ, ಹಿರಿಯ ಪತ್ರಕರ್ತ ಕಣ್ಣಪ್ಪ ಮಾತನಾಡಿ, ಸಮುದಾಯದ ಎಲ್ಲರ ಪರಿಶ್ರಮದಿಂದಾಗಿ ಹಾಗು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಸಂಸದ ಬಿ.ವೈ ರಾಘವೇಂದ್ರ, ಶಾಸಕ ಬಿ.ಕೆ ಸಂಗಮೇಶ್ವರ್, ವಿಜಯೇಂದ್ರ ಸೇರಿದಂತೆ ಇನ್ನಿತರರ ಸಹಕಾರದಿಂದಾಗಿ ಇದೀಗ ನಮ್ಮ ಸಮುದಾಯಕ್ಕೂ ಒಂದು  ಸುಸಜ್ಜಿತವಾದ ಸಮುದಾಯ ಭವನ ಹೊಂದಲು ಸಾಧ್ಯವಾಗಿದೆ. ಈ ಹಿನ್ನಲೆಯಲ್ಲಿ ಸಮುದಾಯದ ಪರವಾಗಿ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.
ಅಗಮುಡಿ ಸಮುದಾಯದ ಅತ್ಯಂತ ಹಿಂದುಳಿದ ಸಮುದಾಯವಾಗಿದ್ದು, ರಾಜ್ಯದಲ್ಲಿ ೨ ಉಪ ಪಂಗಡಗಳನ್ನು ಹೊಂದಿದೆ. ನೂರಾರು ವರ್ಷಗಳಿಂದ ರಾಜ್ಯದಲ್ಲಿಯೇ ನೆಲೆಸಿರುವ ಸಮುದಾಯವರ ಏಳಿಗೆಗಾಗಿ ಒಬಿಸಿ ಮೀಸಲಾತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಬೇಕೆಂದು ಮನವಿ ಮಾಡಿದರು.
    ಸಂಸದ ಬಿ.ವೈ ರಾಘವೇಂದ್ರ, ಶಾಸಕ ಬಿ.ಕೆ ಸಂಗಮೇಶ್ವರ್, ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್‌ಕುಮಾರ್, ಸದಸ್ಯರಾದ ವಿ. ಕದಿರೇಶ್, ವಿಜಯ, ಮಾಜಿ ಅಧ್ಯಕ್ಷ ಆರ್. ಕರುಣಾಮೂರ್ತಿ, ಜಿ. ಸುರೇಶ್‌ಕುಮಾರ್, ಶ್ರೀ ಭದ್ರಗಿತಿ ದೇವಸ್ಥಾನ ಟ್ರಸ್ಟ್ ಕಾರ್ಯದರ್ಶಿ ಚಂದ್ರಘೋಷನ್, ಸಂಘದ ಕಾರ್ಯದರ್ಶಿ ಪಿ. ದೊರೈ ಮತ್ತು ಎಂ. ಸುಬ್ರಮಣಿ ಸೇರಿದಂತೆ ಪದಾಧಿಕಾರಿಗಳು ಉಪಸ್ಥಿತರಿದ್ದರು.