Sunday, April 10, 2022

ಕೇಂದ್ರ, ರಾಜ್ಯದಲ್ಲಿ ಜನರ ಸಂಕಷ್ಟಗಳಿಗೆ ಸ್ಪಂದಿಸುವ ಸರ್ಕಾರಗಳು ಅಧಿಕಾರಕ್ಕೆ ಬರಲಿ

ಬೆಲೆ ಏರಿಕೆ ಖಂಡಿಸಿ ಯುವ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್

ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ನಗರ ಮತ್ತು ಗ್ರಾಮಾಂತರ ಯುವ ಕಾಂಗ್ರೆಸ್ ವತಿಯಿಂದ ಭಾನುವಾರ ಭದ್ರಾವತಿ ಬಿ.ಎಚ್ ರಸ್ತೆ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
    ಭದ್ರಾವತಿ, ಏ. ೧೦: ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ನಗರ ಮತ್ತು ಗ್ರಾಮಾಂತರ ಯುವ ಕಾಂಗ್ರೆಸ್ ವತಿಯಿಂದ ಭಾನುವಾರ ನಗರದ ಬಿ.ಎಚ್ ರಸ್ತೆ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
    ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಶಾಸಕ ಬಿ.ಕೆ ಸಂಗಮೇಶ್ವರ್, ಪೆಟ್ರೋಲ್, ಡೀಸೆಲ್ ಹಾಗು ಅಡುಗೆ ಅನಿಲ ಬೆಲೆ ಏರಿಕೆಯಿಂದಾಗಿ ದಿನನಿತ್ಯದ ಬಳಕೆ ವಸ್ತುಗಳ ಬೆಲೆ ಏರಿಕೆಯಾಗಿದೆ. ಇದರಿಂದಾಗಿ ಮಧ್ಯಮ ಹಾಗು ಬಡ ವರ್ಗದವರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ರೈತ ಹಾಗು ಕಾರ್ಮಿಕ ವಿರೋಧಿ ನೀತಿಗಳಿಂದಾಗಿ ದೇಶದಲ್ಲಿ ರೈತರು, ಕಾರ್ಮಿಕರ ಬದುಕು ಮತ್ತಷ್ಟು ಸಂಕಷ್ಟಕ್ಕೆ ಒಳಗಾಗಿದೆ. ನಿರುದ್ಯೋಗ ಹೆಚ್ಚಾಗಿದ್ದು, ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
    ಕೇಂದ್ರ ಹಾಗು ರಾಜ್ಯದಲ್ಲಿ ಜನರ ಸಮಸ್ಯೆಗಳಿಗೆ ಪೂರಕವಾಗಿ ಸ್ಪಂದಿಸುವ ಸರ್ಕಾರಗಳು ಅಧಿಕಾರಕ್ಕೆ ಬರಬೇಕು. ಆಗ ಮಾತ್ರ ಈ ದೇಶದಲ್ಲಿ ನೆಮ್ಮದಿ ಬದುಕು ಕಾಣಬಹುದು. ಈ ಹಿನ್ನಲೆಯಲ್ಲಿ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬೆಂಬಲಿಸಬೇಕೆಂದರು.
    ಯುವ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಜಿ. ವಿನೋದ್ ಕುಮಾರ್ ಮತ್ತು ಗ್ರಾಮಾಂತರ ಘಟಕದ ಅಧ್ಯಕ್ಷ ಅಫ್ತಾಬ್ ಅಹಮದ್ ಪ್ರತಿಭಟನೆ ನೇತೃತ್ವ ವಹಿಸಿದ್ದರು. ಅಡುಗೆ ಸಿಲಿಂಡರ್‌ಗಳಿಗೆ ಹೂವಿನ ಹಾರ ಹಾಕಿ ವಿನೂತನವಾಗಿ ಪ್ರತಿಭಟಿಸಲಾಯಿತು.
    ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಟಿ. ಚಂದ್ರೇಗೌಡ, ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿ ಮಹಮದ್ ರಫೀಕ್, ಅಮೋಸ್, ಹಿಂದುಳಿದ ಘಟಕದ ಅಧ್ಯಕ್ಷ ಬಿ. ಗಂಗಾಧರ್, ಕೃಷ್ಣರಾಜ್, ತಬ್ರೇಜ್ ಖಾನ್, ನವೀನ್‌ಕುಮಾರ್, ವರಣ್, ಸಜ್ಜದ್, ಸಂತೋಷ್, ಭರತ್, ಸುನಿಲ್, ಆದರ್ಶ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ರಾಮ್ ಸೇನಾ ಕರ್ನಾಟಕ ಸಂಘಟನೆಯಿಂದ ಶ್ರೀರಾಮ ನವಮಿ

ಭದ್ರಾವತಿಯಲ್ಲಿ ರಾಮ್ ಸೇನಾ ಕರ್ನಾಟಕ ಸಂಘಟನೆ ವತಿಯಿಂದ ನಗರದ ಬಿ.ಎಚ್ ರಸ್ತೆ, ಡಾ. ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ಭಾನುವಾರ ಶ್ರೀ ರಾಮನವಮಿ ಆಚರಿಸಲಾಯಿತು.
    ಭದ್ರಾವತಿ, ಏ. ೧೦: ರಾಮ್ ಸೇನಾ ಕರ್ನಾಟಕ ಸಂಘಟನೆ ವತಿಯಿಂದ ನಗರದ ಬಿ.ಎಚ್ ರಸ್ತೆ, ಡಾ. ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ಭಾನುವಾರ ಶ್ರೀ ರಾಮನವಮಿ ಆಚರಿಸಲಾಯಿತು.
    ಶ್ರೀ ರಾಮನವಮಿ ಅಂಗವಾಗಿ ವಿಶೇಷ ಧಾರ್ಮಿಕ ಆಚರಣೆಗಳೊಂದಿಗೆ ಸಾರ್ವಜನಿಕರಿಗೆ ಪಾನಕ ಮತ್ತು ಕೋಸಂಬರಿ ವಿತರಿಸಲಾಯಿತು. ರಾಮ್ ಸೇನಾ ಕರ್ನಾಟಕ ಸಂಘಟನೆ ಮುಖಂಡರು, ಕಾರ್ಯಕರ್ತರು ಜೈ ಶ್ರೀರಾಮ್ ಘೋಷಣೆಗಳನ್ನು ಹಾಕಿ ಸಂಭ್ರಮಿಸಿದರು. ಸಂವಿಧಾನ ಶಿಲ್ಪಿ, ಬಾಬಾ ಸಾಹೇಬ್ ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವಿಸಲಾಯಿತು.
    ಪೊಲೀಸ್ ನಗರ ವೃತ್ತ ನಿರೀಕ್ಷಕ ರಾಘವೇಂದ್ರ ಕಾಂಡಿಕೆ, ಸಂಚಾರಿ ಪೊಲೀಸ್ ಠಾಣಾಧಿಕಾರಿ ಕವಿತ, ಪ್ರಮುಖರಾದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಕುಮಾರ್, ಎಪಿಎಂಸಿ ಮಾಜಿ ಅಧ್ಯಕ್ಷ ಲವೇಶ್‌ಗೌಡ, ಬಿಜೆಪಿ ಮಂಡಲ ಅಧ್ಯಕ್ಷ ಎಂ. ಪ್ರಭಾಕರ್, ಯುವ ಘಟಕದ ಅಧ್ಯಕ್ಷ ವಿಜಯ್‌ರಾಜ್, ಜಿಲ್ಲಾ ಕಾರ್ಯದರ್ಶಿ ಧನುಷ್ ಬೋಸ್ಲೆ,  ರಾಮ್ ಸೇನಾ ಕರ್ನಾಟಕ ಸಂಘಟನೆ ಪ್ರಮುಖರಾದ ಉಮೇಶ್‌ಗೌಡ, ಸಚಿನ್ ವರ್ಣೇಕರ್, ಅವಿನಾಶ್, ನವೀನ್, ಕಿರಣ್‌ಗೌಡ, ಹೇಮಂತ್, ರಮೇಶ್, ಕೃಷ್ಣ ಜೋಗಿ, ಪ್ರಭು, ಕಾಂತರಾಜ್, ಸಂತೋಷ್, ಮಂಜುನಾಥ್, ರೋಹಿತ್ ಪ್ರವೀಣ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.


ಭದ್ರಾವತಿಯಲ್ಲಿ ರಾಮ್ ಸೇನಾ ಕರ್ನಾಟಕ ಸಂಘಟನೆ ವತಿಯಿಂದ ನಗರದ ಬಿ.ಎಚ್ ರಸ್ತೆ, ಡಾ. ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ಭಾನುವಾರ ಶ್ರೀ ರಾಮನವಮಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಸಂವಿಧಾನ ಶಿಲ್ಪಿ, ಭಾರತರತ್ನ ಡಾ.ಬಿ.ಆರ್ ಅಂಬೇಡ್ಕರ್‌ರವರ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು.

ವಿಜೃಂಭಣೆಯಿಂದ ಜರುಗಿದ ಶ್ರೀ ರಂಗನಾಥ, ಕೂಗು ಮಲ್ಲೇಶ್ವರಸ್ವಾಮಿ ಜಾತ್ರಾ ಮಹೋತ್ಸವ

ಭದ್ರಾವತಿ ತಾಲೂಕಿನ ಇತಿಹಾಸ ಪ್ರಸಿದ್ದ ಗೊಂದಿ ಹೊನ್ನೆಗುಡ್ಡ ಶ್ರೀ ರಂಗನಾಥಸ್ವಾಮಿ ಮತ್ತು ಶ್ರೀ ಕೂಗು ಮಲ್ಲೇಶ್ವರಸ್ವಾಮಿ ಜಾತ್ರಾ ಮಹೋತ್ಸವ ಭಾನುವಾರ ವಿಜೃಂಭಣೆಯಿಂದ ಜರುಗಿತು.
    ಭದ್ರಾವತಿ, ಏ. ೧೦:  ತಾಲೂಕಿನ ಇತಿಹಾಸ ಪ್ರಸಿದ್ದ ಗೊಂದಿ ಹೊನ್ನೆಗುಡ್ಡ ಶ್ರೀ ರಂಗನಾಥಸ್ವಾಮಿ ಮತ್ತು ಶ್ರೀ ಕೂಗು ಮಲ್ಲೇಶ್ವರಸ್ವಾಮಿ ಜಾತ್ರಾ ಮಹೋತ್ಸವ ಭಾನುವಾರ ವಿಜೃಂಭಣೆಯಿಂದ ಜರುಗಿತು.
    ಪ್ರತಿ ವರ್ಷ ಶ್ರೀರಾಮ ನವಮಿಯಂದು ಜಾತ್ರಾ ಮಹೋತ್ಸವ ಆಚರಿಸಿಕೊಂಡು ಬರಲಾಗುತ್ತಿದ್ದು, ಕಳೆದ ೨ ವರ್ಷಗಳಿಂದ ಕೊರೋನಾ ಹಿನ್ನಲೆಯಲ್ಲಿ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ನಡೆದಿರಲಿಲ್ಲ. ಈ ಬಾರಿ ಅದ್ದೂರಿ ಆಚರಣೆಗೆ ತಿರ್ಮಾನಿಸಲಾಗಿತ್ತು. ಮಧ್ಯಾಹ್ನ ಜಾತ್ರಾ ಮಹೋತ್ಸವದ ಅಂಗವಾಗಿ ರಥೋತ್ಸವ ನಡೆಯಿತು. ಇದಕ್ಕೂ ಮೊದಲು ವಿವಿಧ ಧಾರ್ಮಿಕ ಆಚರಣೆಗಳು ನೆರವೇರಿದವು.
    ಶಾಸಕ ಬಿ.ಕೆ ಸಂಗಮೇಶ್ವರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಕುಮಾರ್ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಹಾಗು ಗೊಂದಿ, ತಾರೀಕಟ್ಟೆ, ಅರಳಿಕೊಪ್ಪ, ಬಾಳೆಮಾರನಹಳ್ಳಿ, ಚಿಕ್ಕಗೊಪ್ಪೇನಹಳ್ಳಿ, ಹುಣಸೇಕಟ್ಟೆ, ಹಿರಿಯೂರು ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ಭಕ್ತಾಧಿಗಳು ಪಾಲ್ಗೊಂಡಿದ್ದರು.