ಪೂರ್ವಭಾವಿ ಸಭೆಯಲ್ಲಿ ತಹಸೀಲ್ದಾರ್ ಆರ್. ಪ್ರದೀಪ್ ಮನವಿ
![](https://blogger.googleusercontent.com/img/a/AVvXsEjigSRS9YMRR1EpvaP5YbUcCxpPdWnUUkwjQSrCsIke10Xh_jnPd1kRqByjDqvD0k_nZp7-AFZ9TgP49KsbRTsas3O5saFlKKMOHAjFdVOvwtg37rxKh0Dn53-5xOGQ0G4JJg_zIJiiQIP9HBPqKjIP2Fa_sqKMYQC6l3UNaJmlz1hCBHA-jVLeMRfjMg=w400-h199-rw)
ಭದ್ರಾವತಿಯಲ್ಲಿ ಆರೋಗ್ಯ ಇಲಾಖೆ ವತಿಯಿಂದ ಏ.೨೨ರಂದು ತಾಲೂಕು ಮಟ್ಟದ 'ಬೃಹತ್ ಆರೋಗ್ಯ ಮೇಳ' ಏರ್ಪಡಿಸಲಾಗಿದ್ದು, ಮೇಳ ಯಶಸ್ವಿಗೊಳಿಸುವ ಸಂಬಂಧ ತಾಲೂಕು ಕಛೇರಿ ಸಭಾಂಗಣದಲ್ಲಿ ತಹಸೀಲ್ದಾರ್ ಆರ್. ಪ್ರದೀಪ್ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಯಿತು.
ಭದ್ರಾವತಿ, ಏ. ೧೯: ಆರೋಗ್ಯ ಇಲಾಖೆ ವತಿಯಿಂದ ಏ.೨೨ರಂದು ತಾಲೂಕು ಮಟ್ಟದ 'ಬೃಹತ್ ಆರೋಗ್ಯ ಮೇಳ' ಏರ್ಪಡಿಸಲಾಗಿದ್ದು, ಮೇಳ ಯಶಸ್ವಿಗೊಳಿಸುವ ಸಂಬಂಧ ತಾಲೂಕು ಕಛೇರಿ ಸಭಾಂಗಣದಲ್ಲಿ ತಹಸೀಲ್ದಾರ್ ಆರ್. ಪ್ರದೀಪ್ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಯಿತು.
ಸಭೆಯಲ್ಲಿ ಮಾತನಾಡಿದ ತಹಸೀಲ್ದಾರ್ ಆರ್. ಪ್ರದೀಪ್, ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮ, ಎಬಿಎಆರ್ಕೆ (ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆ) ಯೋಜನೆ ಮತ್ತು ಕ್ಷೇಮ ಕೇಂದ್ರಗಳಲ್ಲಿ ದೊರೆಯುವ ಇತರೆ ಸೇವೆಗಳ ಬಗ್ಗೆ ಸಾರ್ವಜನಿಕರಿಗೆ ಆರೋಗ್ಯ ಮೇಳದಲ್ಲಿ ಅರಿವು ಮೂಡಿಸುವ ಅಗತ್ಯವಿದ್ದು, ಈ ಸಂಬಂಧ ಆರೋಗ್ಯ ಇಲಾಖೆ ಗಮನ ಹರಿಸಬೇಕೆಂದರು.
ಮೇಳದಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರು, ಆಸನಗಳ ವ್ಯವಸ್ಥೆ ಕಲ್ಪಿಸಿಕೊಡುವ ಜೊತೆಗೆ ಯಾವುದೇ ರೀತಿ ತೊಂದರೆಯಾಗದಂತೆ ಎಚ್ಚರವಹಿಸಬೇಕು. ರೆಡ್ಕ್ರಾಸ್, ರೋಟರಿ, ಲಯನ್ಸ್ ಕ್ಲಬ್ ಸೇರಿದಂತೆ ಸ್ವಯಂ ಸೇವಾ ಸಂಸ್ಥೆಗಳು ಹಾಗು ಸ್ವಯಂ ಸೇವಕರ ಸಹಕಾರ ಪಡೆದುಕೊಳ್ಳುವಂತೆ ಹಾಗು ತಾಲೂಕಿನಲ್ಲಿ ಕೇಂದ್ರ ಮತ್ತು ರಾಜ್ಯ ಆರೋಗ್ಯ ಯೋಜನೆಗಳ ಒಪ್ಪಂದ ಮಾಡಿಕೊಂಡಿರುವ ಆಸ್ಪತ್ರೆಗಳ ವಿವರ ಪ್ರದರ್ಶಿಸುವಂತೆ ಸಲಹೆ ನೀಡಿದರು.
ತಾಲೂಕು ಆರೋಗ್ಯಾಧಿಕಾರಿ ಡಾ.ಎಂ.ವಿ ಅಶೋಕ್ ಮಾತನಾಡಿ, ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಬೆಳಿಗ್ಗೆ ೯ ಗಂಟೆಯಿಂದ ಸಂಜೆ ೪ ಗಂಟೆವರೆಗೆ ಮೇಳ ನಡೆಯಲಿದೆ. ತಪಾಸಣೆಗೆ ಬರುವವರನ್ನು ನೋಂದಣಿ ಮಾಡಿಸಿಕೊಂಡು ಎಬಿಎಆರ್ಕೆ ಕಾರ್ಡ್ ಹಾಗೂ ಡಿಜಿಟಲ್ ಹೆಲ್ತ್ ಐಡಿ ಕಾರ್ಡ್ ಗ್ಗೆ ಮಾಹಿತಿಯನ್ನು ನೀಡಲಾಗುವುದು. ಕಾರ್ಡ್ ಇಲ್ಲದವರಿಗೆ ಸ್ಥಳದಲ್ಲಿಯೇ ಕಾರ್ಡ್ ವಿತರಣೆ ಮಾಡಲಾಗುವುದು. ತಜ್ಞವೈದ್ಯರಿಂದ ತಪಾಸಣೆ ನಡೆಸಿ ಲಭ್ಯವಿರುವ ಚಿಕಿತ್ಸೆ ನೀಡಲಾಗುವುದು. ಅಲ್ಲದೆ ಆಪ್ತಸಮಾಲೋಚನೆಗೂ ಅವಕಾಶ ಕಲ್ಪಿಸಲಾಗಿದ್ದು, ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡಲು ಅವಶ್ಯಕವಿರುವ ಎಲ್ಲಾ ಔಷಧಗಳು ಹಾಗೂ ಫಾರ್ಮಸಿಸ್ಟ್, ಪ್ರಯೋಗಶಾಲಾ ತಂತ್ರಜ್ಞರ ಸೇವೆ ಲಭ್ಯವಿದೆ. ಯಾವುದೇ ರೀತಿ ತೊಂದರೆಯಾಗದಂತೆ ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಮೇಳದ ಸದುಪಯೋಗ ಪಡೆದುಕೊಳ್ಳುವಂತೆ ಕೋರಿದರು.
ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಶಂಕರಪ್ಪ ಮಾತನಾಡಿ, ಮೇಳದಲ್ಲಿ ವೈದ್ಯಕೀಯ ಶಸ್ತ್ರ ಚಿಕಿತ್ಸಕರು, ಪ್ರಸೂತಿ ಮತ್ತು ಸ್ತ್ರೀರೋಗ, ಕೀಲು, ಮೂಳೆ, ಚರ್ಮ ಮತ್ತು ಲೈಂಗಿಕ ರೋಗ, ಇಎನ್ಟಿ(ಕಿವಿ, ಮೂಗು ಮತ್ತು ಗಂಟಲು), ನೇತ್ರ, ದಂತ, ಮಾನಸಿಕ ರೋಗ ಮತ್ತು ಆಯುರ್ವೇದ ತಜ್ಞರು ಲಭ್ಯವಿರಲಿದ್ದಾರೆ. ಹೆಚ್ಐವಿ ಆಪ್ತಸಮಾಲೋಚನೆ ಮತ್ತು ಪರೀಕ್ಷೆ, ಹದಿಹರೆಯದವರಿಗೆ ಆಪ್ತಸಮಾಲೋಚನೆ, ಪೌಷ್ಠಿಕ ಆಹಾರ ತಯಾರಿ ಪ್ರಾತ್ಯಕ್ಷತೆ, ಕ್ಷಯ ರೋಗ, ಮಲೇರಿಯಾ, ಹಿಮೋಗ್ಲೋಬಿನ್ ಪರೀಕ್ಷೆಗಳು ಮತ್ತು ಆರೋಗ್ಯ ಶಿಕ್ಷಣ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ಶಿಶು ಅಭಿವೃದ್ದಿ ಯೋಜನೆ ಅಧಿಕಾರಿ ರಾಘವೇಂದ್ರ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಗೋಪಿನಾಥ್, ಹಿಂದುಳಿದ ವರ್ಗಗಳ ಇಲಾಖೆ ಅಧಿಕಾರಿ ರಾಜೇಶ್ವರಿ, ವೈದ್ಯರಾದ ಡಾ. ಹೇಮಲತಾ, ಡಾ. ರವಿಶಂಕರ್, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಆನಂದ ಮೂರ್ತಿ, ಸುಂದರ್ ಬಾಬು ಸೇರಿದಂತೆ ಇನ್ನಿತರರು ಸಭೆಯಲ್ಲಿ ಪಾಲ್ಗೊಂಡಿದ್ದರು.