Friday, April 22, 2022

‘ಜನತಾ ಜಲಧಾರೆ ಯಾತ್ರೆ’ ಬಹಿರಂಗ ಸಭೆಗೆ ಭರದ ಸಿದ್ದತೆ : ಮುಖಂಡರಲ್ಲಿ ಉತ್ಸಾಹ

ಸಭೆಯಲ್ಲಿ ಪಾಲ್ಗೊಳ್ಳಲಿರುವ ಮಾಜಿ ಪ್ರಧಾನಿ ದೇವೇಗೌಡ

    ಭದ್ರಾವತಿ, ಏ. ೨೨: ರಾಜ್ಯದ ಸಮಗ್ರ ನೀರಾವರಿ ಮತ್ತು ಕುಡಿಯುವ ನೀರಿನ ಯೋಜನೆಗಳಿಗೆ ಆದ್ಯಾರ್ಪಣೆಗಾಗಿ ಜಾತ್ಯಾತೀತ ಜನತಾದಳ ವತಿಯಿಂದ ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗಿರುವ 'ಜನತಾ ಜಲಧಾರೆ ಯಾತ್ರೆ' ಶುಕ್ರವಾರ ಸಂಜೆ ತಾಲೂಕಿನ ಶ್ರೀರಾಮನಗರಕ್ಕೆ ಆಗಮಿಸಿತು.  
    ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ತುಂಗಾಭದ್ರಾ ಸಂಗಮ ಸ್ಥಳದ ಸಮೀಪದ ಚಿಕ್ಕಕೂಡ್ಲಿಯಿಂದ ಯಾತ್ರೆ ಹೊಳೆಹೊನ್ನೂರು, ಕೈಮರ, ಅರಹತೊಳಲು, ಕಲ್ಲಿಹಾಳ್, ಅರಬಿಳಿಚಿ, ಕೂಡ್ಲಿಗೆರೆ ಮಾರ್ಗವಾಗಿ ಶ್ರೀರಾಮನಗರ ಪ್ರವೇಶಿಸಿತು.
ಮಾಜಿ ಪ್ರಧಾನಿ ಆಗಮನಕ್ಕೆ ಭರದ ಸಿದ್ದತೆ :
    'ಜನತಾ ಜಲಧಾರೆ ಯಾತ್ರೆ' ಅಂಗವಾಗಿ ಶನಿವಾರ ಭದ್ರಾ ಜಲಾಶಯದ ಸಮೀಪದ ಬಿ.ಆರ್ ಪ್ರಾಜೆಕ್ಟ್‌ನಲ್ಲಿ ನಡೆಯಲಿರುವ ಬಹಿರಂಗ ಸಭೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಆಗಮಿಸಲಿದ್ದಾರೆ ಈ ಹಿನ್ನಲೆಯಲ್ಲಿ ನಗರದಲ್ಲಿ ಭರದ ಸಿದ್ದತೆ ನಡೆಸಲಾಗಿದೆ.
    ಮಾಜಿ ಶಾಸಕ ದಿವಂಗತ ಎಂ.ಜೆ ಅಪ್ಪಾಜಿಯವರ ಪ್ರಥಮ ವರ್ಷದ ಪುಣ್ಯ ಸ್ಮರಣೆ ನಂತರ ಶಾರದ ಅಪ್ಪಾಜಿ ನೇತೃತ್ವದಲ್ಲಿ ನಡೆಸುತ್ತಿರುವ ಬೃಹತ್ ಬಹಿರಂಗ ಸಭೆ ಇದಾಗಿದ್ದು, ನಗರದೆಲ್ಲೆಡೆ ಜೆಡಿಎಸ್ ಪಕ್ಷದ ಧ್ವಜ, ಬಂಟಿಂಗ್ಸ್‌ಗಳು ರಾರಾಜಿಸುತ್ತಿವೆ. 'ಜನತಾ ಜಲಧಾರೆ ಯಾತ್ರೆ'ಗೆ ಸ್ವಾಗತಕೋರಲು ಪ್ರಮುಖ ವೃತ್ತಗಳಲ್ಲಿ, ರಸ್ತೆಗಳಲ್ಲಿ ಫ್ಲೆಕ್ಸ್‌ಗಳು ರಾರಾಜಿಸುತ್ತಿವೆ.



     ಮುಖಂಡರಲ್ಲಿ ಉತ್ಸಾಹ :
    ಕಳೆದ ಕೆಲವು ತಿಂಗಳಿನಿಂದ ಪಕ್ಷದಲ್ಲಿ ಸಾಕಷ್ಟು ಬದಲಾವಣೆಗಳಾಗಿದ್ದು, ಅಪ್ಪಾಜಿ ಅವರೊಂದಿಗೆ ಗುರುತಿಸಿಕೊಂಡಿದ್ದ ಪ್ರಮುಖರು ಪಕ್ಷ ತೊರೆದು ಬೇರೆ ಬೇರೆ ಪಕ್ಷಗಳಿಗೆ ಸೇರ್ಪಡೆಗೊಂಡರೂ ಸಹ ಶಾರದ ಅಪ್ಪಾಜಿ  ಯಾವುದಕ್ಕೂ ಎದೆಗುಂದದೆ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಇದರಿಂದಾಗಿ ಪ್ರಸ್ತುತ ಪಕ್ಷದ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಮುಖಂಡರು, ಕಾರ್ಯಕರ್ತರಲ್ಲಿ ಉತ್ಸಾಹ ಹೆಚ್ಚಾಗಿದೆ.
    ಪಕ್ಷದ ಯುವ ಘಟಕದ ನೂತನ ಜಿಲ್ಲಾಧ್ಯಕ್ಷ ಮಧುಕುಮಾರ್ ಹೆಚ್ಚು ಉತ್ಸಾಹದಿಂದ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು, ಇವರೊಂದಿಗೆ ತಾಲೂಕು ಅಧ್ಯಕ್ಷ ಆರ್. ಕರುಣಾಮೂರ್ತಿ, ಯುವ ಘಟಕದ ತಾಲೂಕು ಅಧ್ಯಕ್ಷ ಎಂ.ಎ ಅಜಿತ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಎಸ್. ಮಣಿಶೇಖರ್, ಜೆ.ಪಿ ಯೋಗೇಶ್, ಶಿಮೂಲ್ ಮಾಜಿ ಅಧ್ಯಕ್ಷ ಡಿ. ಆನಂದ್, ನಗರಸಭೆ ವಿರೋಧ ಪಕ್ಷದ ನಾಯಕ ಬಸವರಾಜ ಬಿ. ಆನೇಕೊಪ್ಪ, ಸದಸ್ಯರಾದ ಉದಯಕುಮಾರ್, ಕೋಟೇಶ್ವರರಾವ್, ವಿಜಯ, ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷರಾದ ಎಚ್.ಬಿ ರವಿಕುಮಾರ್, ಎಂ. ರಾಜು, ಮುಖಂಡರಾದ ಕರಿಯಪ್ಪ, ಮುರ್ತುಜಾಖಾನ್, ನಂಜುಂಡೇಗೌಡ, ಲೋಕೇಶ್ವರರಾವ್, ಮೈಲಾರಪ್ಪ, ಉಮೇಶ್, ಗೊಂದಿ ಜಯರಾಂ, ದಿಲೀಪ್, ಗಿರಿನಾಯ್ಡು, ಗುಣಶೇಖರ್ ಸೇರಿದಂತೆ ಇನ್ನಿತರರು ಕೈಜೋಡಿಸಿ ಬಹಿರಂಗಸಭೆ ಯಶಸ್ವಿಗೆ ಮುಂದಾಗಿದ್ದಾರೆ.

ವಿಐಎಸ್‌ಎಲ್, ಎಂಪಿಎಂ ಪುನಶ್ಚೇತನ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಮನವಿ


ಭದ್ರಾವತಿ ವಿಐಎಸ್‌ಎಲ್ ಮತ್ತು ಎಂಪಿಎಂ ಕಾರ್ಖಾನೆಗಳ ಪುನಶ್ಚೇತನಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಭಾರತರತ್ನ ಸರ್.ಎಂ ವಿಶ್ವೇಶ್ವರಾಯ ಚಾರಿಟಬಲ್ ಟ್ರಸ್ಟ್ ವತಿಯಿಂದ ಶ್ರೀ ಡಿ. ದೇವರಾಜ ಅರಸು ಜನಸ್ಪಂದನ ವೇದಿಕೆ, ಸುವರ್ಣ ಮಹಿಳಾ ವೇದಿಕೆ ವತಿಯಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಲಾಯಿತು.
    ಭದ್ರಾವತಿ, ಏ. ೨೨: ನಗರದ ವಿಐಎಸ್‌ಎಲ್ ಮತ್ತು ಎಂಪಿಎಂ ಕಾರ್ಖಾನೆಗಳ ಪುನಶ್ಚೇತನಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಭಾರತರತ್ನ ಸರ್.ಎಂ ವಿಶ್ವೇಶ್ವರಾಯ ಚಾರಿಟಬಲ್ ಟ್ರಸ್ಟ್ ವತಿಯಿಂದ ಶ್ರೀ ಡಿ. ದೇವರಾಜ ಅರಸು ಜನಸ್ಪಂದನ ವೇದಿಕೆ, ಸುವರ್ಣ ಮಹಿಳಾ ವೇದಿಕೆ ವತಿಯಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಲಾಯಿತು.
    ಎರಡು ಕಾರ್ಖಾನೆಗಳನ್ನು ಪುನಶ್ಚೇತನಗೊಳಿಸುವ ಜೊತೆಗೆ ಆಧುನಿಕ ನಗರವನ್ನಾಗಿ ರೂಪಿಸಲು ನಗರಸಭೆ ೩೫ ವಾರ್ಡ್‌ಗಳಲ್ಲೂ ಪರಿಶುದ್ಧವಾದ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಬಾಕಿ ಉಳಿದಿರುವ ಒಳಚರಂಡಿ ಕಾಮಗಾರಿ ಕೈಗೆತ್ತಿಕೈಗೊಳ್ಳಲು, ಉದ್ಯಾನವನಗಳ ಅಭಿವೃದ್ಧಿ, ಕೆರೆಗಳ ಸಂರಕ್ಷಣೆ ಕೈಗೊಳ್ಳಲು ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಅಮೃತ್ ೨.೦ ನಗರಸಭೆಗೆ ಮಂಜೂರಾತಿ ಮಾಡುವುದು. ಜನ್ನಾಪುರ ಸರ್ವೆ ನಂ.೭೦ರ ಸುಮಾರು ೪೫.೨೦ ಎಕರೆ ವಿಸ್ತ್ರೀರ್ಣವುಳ್ಳ ಕೆರೆಗೆ ನಗರದ ವಿವಿಧ ಭಾಗಗಳಿಂದ ಕಲ್ಮಶಗೊಂಡ ನೀರು ಸೇರ್ಪಡೆಗೊಳ್ಳುತ್ತಿದ್ದು, ಈ ಹಿನ್ನಲೆಯಲ್ಲಿ ಕಲ್ಮಶಗೊಂಡ ನೀರು ಕೆರೆಗೆ ಸೇರ್ಪಡೆಗೊಳ್ಳದಂತೆ ತಡೆಯಲು ಕೆರೆ ಬದಿಯಲ್ಲಿ ರಾಜಕಾಲುವೆ ನಿರ್ಮಾಣ ಮಾಡಲು ನಗರಸಭೆಗೆ ಅಗತ್ಯವಿರುವ ಆರ್ಥಿಕ ನೆರವು ನೀಡುವಂತೆ ಮನವಿ ಮಾಡಲಾಗಿದೆ.
    ನಗರಸಭೆ ವ್ಯಾಪ್ತಿಯಲ್ಲಿ ಸುಮಾರು ೭೦ ಕೆರೆಗಳಲ್ಲಿ ಬೌಂಡರಿ ನಿಗದಿಪಡಿಸಲು, ಬಸಿಕಾಲುವೆ ನಿರ್ಮಾಣ ಮಾಡಲು, ಕೆರೆಗಳನ್ನು ಅಭಿವೃದ್ಧಿಪಡಿಸಲು ನಗರಸಭೆಯಲ್ಲಿ ಆರ್ಥಿಕ ಕೊರತೆ ಹಿನ್ನಲೆಯಲ್ಲಿ ತುರ್ತಾಗಿ ೫ ಕೋ. ರು. ಅನುದಾನ ನಗರಸಭೆಗೆ ಬಿಡುಗಡೆಗೊಳಿಸುವುದು. ಇದೆ ರೀತಿ ಕ್ಷೇತ್ರದ ೨೩ ಗ್ರಾಮ ಪಂಚಾಯಿತಿಗಳಲ್ಲಿರುವ ಕೆರೆಗಳನ್ನು ಅಭಿವೃದ್ಧಿಪಡಿಸಲು  ಎಲ್ಲಾ ಪಂಚಾಯಿತಿಗಳಿಗೆ ತಲಾ ೧ ಕೋ. ರು. ನಂತೆ ಒಟ್ಟು ೨೩ ಕೋ. ರು. ಬಿಡುಗಡೆಗೊಳಿಸುವಂತೆ ಒತ್ತಾಯಿಸಲಾಗಿದೆ.
    ರಾಜ್ಯದ  ಎಲ್ಲಾ ೨೨೪ ವಿಧಾನಸಭಾ ಕ್ಷೇತ್ರಗಳಲ್ಲೂ ಕೆರೆಕಟ್ಟೆಗಳ ಉತ್ಸವ ಹಾಗು ಕೊಳಚ ಪ್ರದೇಶಗಳಲ್ಲಿ ಸ್ಲಂ ನಿವಾಸಿಗಳ ದಿನಾಚರಣೆ ಆಚರಿಸಲು ಸೂಕ್ತ ಕ್ರಮ ಕೈಗೊಂಡು ಆದೇಶ ಹೊರಡಿಸುವಂತೆ ಕೋರಲಾಗಿದೆ.
    ಟ್ರಸ್ಟ್ ಛೇರ್‍ಮನ್, ನಗರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಆರ್. ವೇಣುಗೋಪಾಲ್, ಮುರುಗೇಶ್ ಸೇರಿದಂತೆ ಇನ್ನಿತರರು ಮನವಿ ಸಲ್ಲಿಸುವ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಮೆಕ್ಕೆಜೋಳ ಬೆಳೆಗೆ ‘ಲದ್ದಿ ಹುಳು’ ಬಾಧೆ : ಶೇ.೭೦ರಷ್ಟು ಬೆಳೆ ಹಾನಿ

ಭತ್ತದ ಬೆಳೆಗೂ ವ್ಯಾಪಿಸುವ ಆತಂಕ : ಮುನ್ನಚ್ಚರಿಕೆ ಕ್ರಮ ಕೈಗೊಳ್ಳಲು ಸೂಚನೆ

    ಭದ್ರಾವತಿ, ಏ. ೨೨:  ತಾಲೂಕಿನ ಕೆಲವು ಭಾಗಗಳಲ್ಲಿ ಇದೀಗ ಮೆಕ್ಕೆಜೋಳ ಬೆಳೆಗೆ 'ಲದ್ದಿ ಹುಳು' ಬಾಧೆ ವ್ಯಾಪಕವಾಗಿ ಕಾಣಿಸಿಕೊಂಡಿದ್ದು, ರೈತರು ಸಂಕಷ್ಟಕ್ಕೆ ಒಳಗಾಗುವಂತಾಗಿದೆ. ಈ ನಡುವೆ 'ಲದ್ದಿ ಹುಳು' ಬಾಧೆ ಭತ್ತದ ಬೆಳೆಗೂ ವ್ಯಾಪಿಸಿಕೊಳ್ಳುವ ಆತಂಕ ಎದುರಾಗಿದ್ದು, ಕೃಷಿ ಇಲಾಖೆ ರೈತರಿಗೆ ಮುನ್ನಚ್ಚರಿಕೆ ಕ್ರಮಗಳನ್ನು ಅನುಸರಿಸುವಂತೆ ಸಲಹೆ ನೀಡಿದೆ.
    ತಾಲೂಕಿನ ಕೂಡ್ಲಿಗೆರೆ ಹೋಬಳಿ ದೊಡ್ಡೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಮ್ಮೆದೊಡ್ಡಿ, ಬಸಲಿಕಟ್ಟೆ, ಬಂಡಿಗುಡ್ಡ, ದೊಡ್ಡೇರಿ ಮತ್ತು ಸುತ್ತಮುತ್ತ ಗ್ರಾಮಗಳಲ್ಲಿ ಅಡಕೆ ತೋಟಗಳಲ್ಲಿ ಮೇವಿಗಾಗಿ ಬೆಳೆದಿರುವ ಮೆಕ್ಕೆಜೋಳ ಬೆಳೆಯಲ್ಲಿ 'ಲದ್ದಿ ಹುಳು' ಬಾಧೆ ಕಾಣಿಸಿಕೊಂಡಿದ್ದು, ಶೇ.೭೦ರಷ್ಟು ಬೆಳೆ ಹಾನಿಗೊಳಗಾಗಿರುತ್ತದೆ.
    ಲದ್ದಿ ಹುಳು ಮುಂದಿನ ೪-೫ ದಿವಸಗಳಲ್ಲಿ ಭತ್ತದ ಬೆಳೆಗು ಹಾನಿ ಉಂಟುಮಾಡವ ಸಂಭವವಿದ್ದು,  ಈ ವ್ಯಾಪ್ತಿಯ ರೈತರು ಸಾಮೂಹಿಕವಾಗಿ ಹತೋಟಿ ಕ್ರಮವನ್ನು ಕೈಗೊಳ್ಳಬೇಕಾಗಿದೆ.
    ಹತೋಟಿ ಕ್ರಮಗಳು:
    ಕೀಟನಾಶಕ ಸಿಂಪಡಣೆ: ಎಮ್ಮಮ್ಕಟಿನ್ ಬೆಂಜೋಯೇಟ್ (Emmamectin Benzoate) ಕೀಟನಾಶಕವನ್ನು ಪ್ರತಿ ಔಷಧಿ ಕ್ಯಾನ್‌ಗೆ ೧೦ ಗ್ರಾಂ ಕೀಟನಾಶಕವನ್ನು ಬೇರೆಸಿ ಪ್ರತಿ ಎಕರೆಗೆ ೧೫೦ ರಿಂದ ೨೦೦ ಲೀಟರ್ ದ್ರಾವಣ ಸಿಂಪಡಿಸಬೇಕು.
    ವಿಷಪ್ರಾಶನ:  ೧೦ ಕೆಜಿ ಅಕ್ಕಿ  ತೌಡು, ೨ ಕೆಜಿ ಬೆಲ್ಲ , ೨೫೦ ಎಂ.ಎಲ್  ಕ್ಲೋರೋಪೈರಿಫಾಸ್ ಕ್ರಿಮಿನಾಶಕ ಹಾಗೂ ನೀರು.
    ಮಾಡುವ ವಿಧಾನ: ೨ ಕೆಜಿ ಬೆಲ್ಲವನ್ನು ೫ ಲೀಟರ್ ನೀರಿನಲ್ಲಿ ಕರಗಿಸಿ ೧೦ ಕೆಜಿ ಅಕ್ಕಿ ತೌಡಿಗೆ ಸೇರಿಸಿ ಚನ್ನಾಗಿ ಬೇರಿಸಿ, ೨೫೦ ಎಂ.ಎಲ್ ಕ್ಲೋರೋಪೈರಿಫಾಸ್ ಕ್ರಿಮಿನಾಶಕ ಮಿಶ್ರಣಮಾಡಿ ೨೪ ಗಂಟೆಗಳ ಕಾಲ ಗಾಳಿ ಆಡದಂತೆ ಚೀಲದಲ್ಲಿ ಕಟ್ಟಿ ಇಡುವುದು. ಮಾರನೇ ದಿನ ಸಂಜೆ ೪ ಗಂಟೆ ನಂತರ ಈ ವಿಷಪ್ರಾಶನವನ್ನು ಉಂಡೆ ಮಾಡಿ ಒಂದು ಎಕರೆ ಜಮೀನಿನಲ್ಲಿ ಇಡುವುದು.
    ಹೆಚ್ಚಿನ ಮಾಹಿತಿಗೆ ಕೂಡ್ಲಿಗೆರೆ ಭಾಗದ ಕೃಷಿ ಆಧಿಕಾರಿ ಮೊ: ೮೨೭೭೯೩೨೬೫೦ ಅಥವಾ ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಮೊ: ೭೮೯೨೪೨೫೪೫೫ ಸಂಪರ್ಕಿಸಬಹುದಾಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.


ಭದ್ರಾವತಿ ತಾಲೂಕಿನ ಕೂಡ್ಲಿಗೆರೆ ಹೋಬಳಿ ದೊಡ್ಡೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಮ್ಮೆದೊಡ್ಡಿ, ಬಸಲಿಕಟ್ಟೆ, ಬಂಡಿಗುಡ್ಡ, ದೊಡ್ಡೇರಿ ಮತ್ತು ಸುತ್ತಮುತ್ತ ಗ್ರಾಮಗಳಲ್ಲಿ ಅಡಕೆ ತೋಟಗಳಲ್ಲಿ ಮೇವಿಗಾಗಿ ಬೆಳೆದಿರುವ ಮೆಕ್ಕೆಜೋಳ ಬೆಳೆಯಲ್ಲಿ 'ಲದ್ದಿ ಹುಳು' ಬಾಧೆ ಕಾಣಿಸಿಕೊಂಡಿದ್ದು, ಶೇ.೭೦ರಷ್ಟು ಬೆಳೆ ಹಾನಿಗೊಳಗಾಗಿರುತ್ತದೆ.

ಪ್ರತಿಯೊಬ್ಬರಿಗೂ ಆರೋಗ್ಯ ಮುಖ್ಯ : ಬಿ.ಕೆ ಸಂಗಮೇಶ್ವರ್

ಭದ್ರಾವತಿಯಲ್ಲಿ ಆರೋಗ್ಯ ಇಲಾಖೆ ವತಿಯಿಂದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ತಾಲೂಕು ಮಟ್ಟದ ಆರೋಗ್ಯ ಮೇಳ ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಿದರು.
    ಭದ್ರಾವತಿ, ಏ. ೨೨: ಮನುಷ್ಯನಿಗೆ ಆರೋಗ್ಯವೇ ಭಾಗ್ಯ. ಆರೋಗ್ಯವಿಲ್ಲದಿದ್ದರೆ ಏನನ್ನು ಸಹ ಸಾಧಿಸಲು ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ಆರೋಗ್ಯ ಮೇಳ ಆಯೋಜನೆ ಮಾಡುವ ಮೂಲಕ ಆರೋಗ್ಯದ ಬಗ್ಗೆ ಅರಿವು ಮೂಡಿಸುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ಹೇಳಿದರು.
    ಅವರು ಶುಕ್ರವಾರ ಆರೋಗ್ಯ ಇಲಾಖೆ ವತಿಯಿಂದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ತಾಲೂಕು ಮಟ್ಟದ ಆರೋಗ್ಯ ಮೇಳ ಉದ್ಘಾಟಿಸಿ ಮಾತನಾಡಿದರು.
    ಪ್ರತಿಯೊಬ್ಬರು ಆರೋಗ್ಯದ ಬಗ್ಗೆ ಜಾಗೃತಿ ಹೊಂದಬೇಕು. ಇಲ್ಲವಾದಲ್ಲಿ ಸಾಕಷ್ಟು ಸಮಸ್ಯೆ ಎದುರಿಸಬೇಕಾಗುತ್ತದೆ. ಸರ್ಕಾರ ಹಲವಾರು ಆರೋಗ್ಯ ಸೌಲಭ್ಯಗಳನ್ನು ಕಲ್ಪಿಸಿಕೊಟ್ಟಿದೆ. ಇವುಗಳ ಸದುಪಯೋಗಪಡೆದುಕೊಳ್ಳಬೇಕೆಂದರು.
    ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್ ಮಾತನಾಡಿ, ನಮ್ಮ ಆರೋಗ್ಯ ರಕ್ಷಣೆ ನಮ್ಮ ಜವಾಬ್ದಾರಿಯಾಗಿದೆ. ಇಂದು ನಾವು ನಮ್ಮ ಮನೆಗಳಲ್ಲಿ ಬೇಕರಿ ಹಾಗು ಹೊರಗಿನಿಂದ ತಂದ ಆಹಾರ ಪದಾರ್ಥಗಳನ್ನು ಹೆಚ್ಚಾಗಿ ಬಳಸುತ್ತಿದ್ದೇವೆ. ಮಹಿಳೆಯರು ಮನೆಗಳಲ್ಲಿ ತಮಗೆ ಲಭ್ಯವಿರುವ ಸೊಪ್ಪು, ತರಕಾರಿ, ಬೇಳೆ-ಕಾಳುಗಳನ್ನು ಬಳಸಿ ರುಚಿ ಹಾಗು ಶುಚಿಯಾದ ಗುಣಮಟ್ಟದ ಆಹಾರ ಸಿದ್ದಪಡಿಸಿ ಮಕ್ಕಳಿಗೆ ನೀಡಬೇಕು. ಇದರಿಂದ ಆರೋಗ್ಯ ರಕ್ಷಣೆ ಸಾಧ್ಯ. ಇವುಗಳ ಜೊತೆಗೆ ಮಹಿಳೆಯರು ಹೆಚ್ಚಾಗಿ ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿವಹಿಸಬೇಕು. ಮಹಿಳೆಯರು ಆರೋಗ್ಯವಾಗಿದ್ದಾಗ ಮಾತ್ರ ಕುಟುಂಬದಲ್ಲಿ ಎಲ್ಲರೂ ಆರೋಗ್ಯದಿಂದ ಇರಲು ಸಾಧ್ಯ ಎಂದರು.
    ಉಪಾಧ್ಯಕ್ಷ ಚನ್ನಪ್ಪ ಮಾತನಾಡಿ, ನಮ್ಮ ದೇಶದಲ್ಲಿ ಪ್ರತಿಯೊಬ್ಬರಿಗೂ ಉಚಿತ ಆರೋಗ್ಯ ಮತ್ತು ಶಿಕ್ಷಣ ಈ ಎರಡು ಸಮರ್ಪಕವಾಗಿ ಲಭಿಸಿದರೆ ಮಾತ್ರ ದೇಶ ಪ್ರಗತಿ ಕಾಣಲು ಸಾಧ್ಯ. ಅಲ್ಲದೆ ಆರೋಗ್ಯವಂತರು ಈ ದೇಶದ ಆಸ್ತಿ. ಅರೋಗ್ಯ ಹಾಳುಮಾಡಿಕೊಂಡವರು ಆರ್ಥಿಕವಾಗಿ ಸಂಕಷ್ಟಕ್ಕೆ ಒಳಗಾಗಬೇಕಾಗುತ್ತದೆ. ದೇಶದಲ್ಲಿ ಸರ್ಕಾರಿ ಆಸ್ಪತ್ರೆಗಳು, ಸರ್ಕಾರಿ ಶಾಲೆಗಳು ಉಳಿಯಬೇಕೆಂದರು.
    ಹಿರಿಯ ವೈದ್ಯಾಧಿಕಾರಿ ಡಾ. ಗುಡದಪ್ಪ ಕಸಬಿ ಪ್ರಾಸ್ತಾವಿಕ ನುಡಿಗಳನ್ನಾಡಿ, ಇಂದು ನಾವುಗಳು ಆರೋಗ್ಯವನ್ನು ನಿರ್ಲಕ್ಷ್ಯ ಮಾಡಿರುವ ಹಿನ್ನೆಲೆಯಲ್ಲಿ ಅತಿಚಿಕ್ಕವಯಸ್ಸಿನಲ್ಲಿಯೇ ಸಾವು ನೋವುಗಳನ್ನು ಎದುರಿಸುವಂತಾಗಿದೆ. ಆರೋಗ್ಯ ಬಗ್ಗೆ ಎಚ್ಚರ ವಹಿಸಬೇಕು. ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಆರೋಗ್ಯ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದರು.
    ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್‌ಕುಮಾರ್, ತಹಸೀಲ್ದಾರ್ ಆರ್. ಪ್ರದೀಪ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಮೇಶ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸುರೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ಕರ್ನಾಟಕ ನಗರ ನೀರು ಸರಬರಾಜು ಹಾಗು ಒಳಚರಂಡಿ ಮಂಡಳಿ ನಿರ್ದೇಶಕ ಮಂಗೋಟೆ ರುದ್ರೇಶ್, ನಗರಸಭಾ ಸದಸ್ಯರಾದ ಅನುಸುಧಾ ಮೋಹನ್, ಕಾಂತರಾಜ್, ಜಾರ್ಜ್, ರಿಯಾಜ್ ಅಹಮದ್, ಸರ್ವಮಂಗಳ, ಲತಾ ಚಂದ್ರಶೇಖರ್, ಸವಿತಾ ಉಮೇಶ್, ಶಶಿಕಲಾ ನಾರಾಯಣಪ್ಪ, ಎಂ. ಪ್ರಭಾಕರ್, ಕರಿಗೌಡ ಹಾಗು ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಅನುಷಾ, ರಾಮನಾಥ್ ಬರ್ಗೆ, ಕೃಷ್ಣಮೂರ್ತಿ, ಗಣೇಶ್‌ರಾವ್, ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ. ಡಾ. ಶಂಕರಪ್ಪ, ಡಾ. ಓ. ಮಲ್ಲಪ್ಪ, ಡಾ. ಶಿವಪ್ರಸಾದ್ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.  
    ಹಿರಿಯ ವೈದ್ಯಾಧಿಕಾರಿ ಡಾ. ಗುಡದಪ್ಪ ಕಸಬಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್ ಸ್ವಾಗತಿಸಿದರು. ನೆಹರೂ ನಗರ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ವಂದಿಸಿದರು. ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ವೈದ್ಯರು, ಸಿಬ್ಬಂದಿಗಳು, ವಿವಿಧ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯರು, ಸಿಬ್ಬಂದಿಗಳು ಪಾಲ್ಗೊಂಡಿದ್ದರು. ಮೇಳದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿವಿಧ ವಿಭಾಗಗಳಿಂದ ಹಾಗು ಶಿಶು ಅಭಿವೃದ್ಧಿ ಇಲಾಖೆ ವತಿಯಿಂದ ವಸ್ತು ಪ್ರದರ್ಶನ ಆಯೋಜಿಸಲಾಗಿತ್ತು.


ಭದ್ರಾವತಿಯಲ್ಲಿ ಆರೋಗ್ಯ ಇಲಾಖೆ ವತಿಯಿಂದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ತಾಲೂಕು ಮಟ್ಟದ ಆರೋಗ್ಯ ಮೇಳದಲ್ಲಿ ನಗರಸಭೆ ಉಪಾಧ್ಯಕ್ಷ ಚನ್ನಪ್ಪ ವಸ್ತು ಪ್ರದರ್ಶನ ಉದ್ಘಾಟಿಸಿದರು.