Sunday, May 22, 2022

ಉಕ್ಕು ಪ್ರಾಧಿಕಾರ ವಿಐಎಸ್‌ಎಲ್‌ಗೆ ಬಂಡವಾಳ ತೊಡಗಿಸುವಂತೆ ಮಾಡಲು ಸಹಕಾರ ನೀಡಿ :

ಕಾರ್ಮಿಕ ಸಂಘದಿಂದ ಸಂಸದರಿಗೆ ಮನವಿ

ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಪ್ರಸ್ತುತ ಲಾಭದತ್ತ ಸಾಗುತ್ತಿದ್ದು, ಇದೀಗ ಬಂಡವಾಳ ತೊಡಗಿಸುವ ಅಗತ್ಯತೆ ಕಂಡು ಬರುತ್ತಿದೆ. ಈ ಹಿನ್ನಲೆಯಲ್ಲಿ ಸಹಕರಿಸುವಂತೆ ಕಾರ್ಖಾನೆಯ ಕಾರ್ಮಿಕ ಸಂಘ ಸಂಸದ ಬಿ.ವೈ ರಾಘವೇಂದ್ರ ಅವರಿಗೆ ಮನವಿ ಮಾಡಿದೆ.
    ಭದ್ರಾವತಿ, ಮೇ. ೨೨: ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಪ್ರಸ್ತುತ ಲಾಭದತ್ತ ಸಾಗುತ್ತಿದ್ದು, ಇದೀಗ ಬಂಡವಾಳ ತೊಡಗಿಸುವ ಅಗತ್ಯತೆ ಕಂಡು ಬರುತ್ತಿದೆ. ಈ ಹಿನ್ನಲೆಯಲ್ಲಿ ಸಹಕರಿಸುವಂತೆ ಕಾರ್ಖಾನೆಯ ಕಾರ್ಮಿಕ ಸಂಘ ಸಂಸದ ಬಿ.ವೈ ರಾಘವೇಂದ್ರ ಅವರಿಗೆ ಮನವಿ ಮಾಡಿದೆ.
      ಕಾರ್ಮಿಕ ಸಂಘದ ಅಧ್ಯಕ್ಷ ಜೆ. ಜಗದೀಶ್ ಮತ್ತು ಪದಾಧಿಕಾರಿಗಳು ಶಿವಮೊಗ್ಗದಲ್ಲಿರುವ ಸಂಸದರ ನಿವಾಸಕ್ಕೆ ತೆರಳಿ ಮನವಿ ಸಲ್ಲಿಸಿದ್ದು, ಮೈಸೂರು ಸಂಸ್ಥಾನ ೧೯೧೮ರಲ್ಲಿ ಆರಂಭಿಸಿದ ಮೈಸೂರು ವುಡ್ ಡಿಸ್ಟಿಲರಿ ವರ್ಕರ್‍ಸ್ ಲಿಮಿಟೆಡ್ ಕಾರ್ಖಾನೆಯನ್ನು ನಂತರದ ದಿನಗಳಲ್ಲಿ ಕರ್ನಾಟಕ ಸರ್ಕಾರ ತನ್ನ ಅಧೀನಕ್ಕೆ ಸೇರ್ಪಡೆ ಮಾಡಿಕೊಂಡು ಮೈಸೂರು ಐರನ್ ಸ್ಟೀಲ್ ಲಿಮಿಟೆಡ್(ಎಂಐಎಸ್‌ಎಲ್) ಎಂಬ ಹೆಸರನ್ನು ನಾಮಕರಣಗೊಳಿಸಿತು. ನಂತರ ೧೯೮೯ರಲ್ಲಿ ಕಾರ್ಖಾನೆಯನ್ನು ಕೇಂದ್ರ ಸರ್ಕಾರದ ಉಕ್ಕು ಪ್ರಾಧಿಕಾರದ ಅಂಗಸಂಸ್ಥೆಯಾಗಿ ಸೇರ್ಪಡೆಗೊಳಿಸಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಎಂಬ ಹೆಸರನ್ನು ನಾಮಕರಣಗೊಳಿಸಲಾಯಿತು.  ೧೯೯೮ರಲ್ಲಿ ಪ್ರಾಧಿಕಾರ ಕಾರ್ಖಾನೆಯನ್ನು ಸಂಪೂರ್ಣವಾಗಿ ತನ್ನ ಅಧೀನಕ್ಕೆ ವಹಿಸಿಕೊಂಡು ಘಟಕವನ್ನಾಗಿಸಿಕೊಂಡಿದೆ. ೨೦೧೬ರಲ್ಲಿ ಎನ್‌ಐಟಿಐ ಆಯೋಗ ಕಾರ್ಖಾನೆಯನ್ನು ಬಂಡವಾಳ ಹಿಂಪಡೆಯುವ ಪ್ರಕ್ರಿಯೆಗೆ ಒಳಪಡಿಸುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿತ್ತು. ಅದರಂತೆ ಸರ್ಕಾರ ಬಂಡವಾಳ ಹಿಂಪಡೆಯವ ಪ್ರಕ್ರಿಯೆ ಆರಂಭಿಸಿತು. ಆದರೆ ಕಾರ್ಖಾನೆಯನ್ನು ಕೊಂಡುಕೊಳ್ಳಲು ಯಾರು ಸಹ ಮುಂದೆ ಬರಲಿಲ್ಲ. ಸರ್ಕಾರ ಕೈಗೊಂಡ ಕ್ರಮ ವಿಫಲವಾಗಿದೆ ಎಂದು ಸಂಸದರಿಗೆ ಮನವಿಯಲ್ಲಿ ತಿಳಿಸಲಾಗಿದೆ.
    ಉಕ್ಕು ಪ್ರಾಧಿಕಾರದ ಆಡಳಿತ ಮಂಡಳಿ ಸಹಕಾರದೊಂದಿಗೆ ನಂತರದ ದಿನಗಳಲ್ಲಿ ಕಾರ್ಖಾನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸುಮಾರು ೨೮೦ ಕಾಯಂ ಹಾಗು ೧೩೪೦ ಗುತ್ತಿಗೆ ಕಾರ್ಮಿಕರು ಹೆಚ್ಚಿನ ಶ್ರಮ ವಹಿಸಿ ಕಡಿಮೆ ಬಂಡವಾಳದಲ್ಲಿ, ಕಡಿಮೆ ಉತ್ಪಾದನೆಯಲ್ಲಿ ಲಾಭಾಂಶ ಕಂಡುಕೊಳ್ಳುತ್ತಿದ್ದು, ವಹಿವಾಟು ಸುಮಾರು ೪೦೦ ಕೋ. ರು.ಗಳಿಗೆ ಹೆಚ್ಚಿಸಲಾಗಿದೆ. ಇದೀಗ ಕಾರ್ಖಾನೆಯಲ್ಲಿ ಉತ್ಪಾದನೆಯಾಗುವ ರೈಲ್ವೆ ಆಕ್ಸ್‌ಲೆಸ್‌ಗಳಿಗೆ ಪ್ರಾಧಿಕಾರದ ಕೇಂದ್ರ ಮಾರುಕಟ್ಟೆಯಲ್ಲಿ ಹೆಚ್ಚಿನ ಬೇಡಿಕೆ ಬರುತ್ತಿದ್ದು, ಈ ಹಿನ್ನಲೆಯಲ್ಲಿ ಉತ್ಪಾದನೆ ಹೆಚ್ಚಿಸಲು ಪ್ರಸ್ತುತ ಕನಿಷ್ಠ ೩೦೦ ಕೋ. ರು. ಅಗತ್ಯವಿದೆ. ಉಕ್ಕು ಪ್ರಾಧಿಕಾರ ೨೦೨೦-೨೧ನೇ ಮೊದಲ ತ್ರೈವಾರ್ಷಿಕ ಹಣಕಾಸು ವರ್ಷದಲ್ಲಿ ೯,೫೯೭ ಕೋ.ರು.ಗಳಿಗೂ ಹೆಚ್ಚಿನ ಲಾಭಾಂಶ ಸಾಧಿಸಿದೆ. ಈ ನಡುವೆ ತನ್ನ ಅಧೀನದಲ್ಲಿರುವ ಪ್ರಮುಖ ಕಾರ್ಖಾನೆಗಳಿಗೆ ಒಟ್ಟು ೧.೫ ಲಕ್ಷ ಕೋ. ರು. ಬಂಡವಾಳ ತೊಡಗಿಸಲು ಮುಂದಾಗಿದೆ. ಈ ಹಿನ್ನಲೆಯಲ್ಲಿ ಕಾರ್ಖಾನೆಯನ್ನು ಪ್ರಾಧಿಕಾರದ ಅಧೀನದಲ್ಲಿಯೇ ಮುಂದುವರೆಸಿ ಅಗತ್ಯವಿರುವ ಬಂಡವಾಳ ಪಡೆಯಲು ಹೆಚ್ಚಿನ ಸಹಕಾರ ನೀಡುವಂತೆ ಮನವರಿಕೆ ಮಾಡಲಾಗಿದೆ.
    ಅಲ್ಲದೆ ಕಾರ್ಖಾನೆಗೆ ಸೇರಿದ ಸಾಕಷ್ಟು ಖಾಲಿ ಜಾಗವಿದ್ದು, ಕೇಂದ್ರ ಹಾಗು ರಾಜ್ಯ ಸರ್ಕಾರಗಳು ಸದ್ಬಳಕೆ ಮಾಡಿಕೊಂಡು ಅಭಿವೃದ್ಧಿ ಯೋಜನೆಗಳನ್ನು ರೂಪಿಸಿಕೊಳ್ಳುವಂತೆ ರಾಜ್ಯ ಹಾಗು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸುವಂತೆ ಕೋರಲಾಗಿದೆ.
ಮನವಿಗೆ ಸ್ಪಂದಿಸಿರುವ ಸಂಸದರು, ಕಾರ್ಖಾನೆಗೆ ಅಗತ್ಯವಿರುವ ಬಂಡವಾಳ ತೊಡಗಿಸುವಂತೆ ಪ್ರಾಧಿಕಾರಕ್ಕೆ ಒತ್ತಾಯಿಸುವುದಾಗಿ ಹಾಗು ಖಾಲಿ ಜಾಗ ಸದ್ಬಳಕೆ ಮಾಡಿಕೊಳ್ಳುವಂತೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಮನವಿ ಮಾಡುವುದಾಗಿ  ಭರವಸೆ ನೀಡಿದ್ದಾರೆ.
    ಉಪಾಧ್ಯಕ್ಷ ಕುಮಾರ್ ಎಎಲ್‌ಡಬ್ಲ್ಯೂ, ಪ್ರಧಾನ ಕಾರ್ಯದರ್ಶಿ ಯು.ಎ ಬಸಂತ್‌ಕುಮಾರ್, ಕಾರ್ಯದರ್ಶಿ ಕೆ.ಆರ್ ಮನು ಮತ್ತು ಎಸ್ ಮೋಹನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಮೇ.೨೪ರಂದು ತ್ರಿವಿಧ ದಾಸೋಹಿ ಶ್ರೀ ಡಾ. ಶಿವಕುಮಾರ ಸ್ವಾಮೀಜಿಯವರ ೧೧೫ನೇ ಜನ್ಮದಿನೋತ್ಸವ

ಭದ್ರಾವತಿಯಲ್ಲಿ ಮೇ.೨೪ರಂದು ಹಮ್ಮಿಕೊಳ್ಳಲಾಗಿರುವ ಶ್ರೀ ಡಾ. ಶಿವಕುಮಾರ ಸ್ವಾಮೀಜಿಯವರ ೧೧೫ನೇ ಜನ್ಮದಿನೋತ್ಸವ ಕುರಿತು ತಾಲೂಕು ವೀರಶೈವ ಸಮಾಜದ ಅಧ್ಯಕ್ಷ ಕೆ.ಎಚ್ ತೀರ್ಥಯ್ಯ ಮಾಹಿತಿ ನೀಡಿದರು.
    ಭದ್ರಾವತಿ, ಮೇ. ೨೨: ನಡೆದಾಡುವ ದೇವರು, ತ್ರಿವಿಧ ದಾಸೋಹಿ, ಕರ್ನಾಟಕ ರತ್ನ ಶ್ರೀ ಡಾ. ಶಿವಕುಮಾರ ಸ್ವಾಮೀಜಿಯವರ ೧೧೫ನೇ ಜನ್ಮದಿನೋತ್ಸವ ಮೇ.೨೪ರಂದು ಬೆಳಿಗ್ಗೆ ೧೧ ಗಂಟೆಗೆ ಹಳೇನಗರದ ಕನಕಮಂಟಪ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ವೀರಶೈವ ಸಮಾಜದ ಅಧ್ಯಕ್ಷ ಕೆ.ಎಚ್ ತೀರ್ಥಯ್ಯ ಹೇಳಿದರು.
    ತಾಲೂಕು ವೀರಶೈವ ಲಿಂಗಾಯತ ಸಮಾಜ ಹೆಸರಿನಲ್ಲಿ ಲಿಂಗಾಯತ ಸಮಾಜದ ಎಲ್ಲಾ ಸಂಘಟನೆಗಳು ಒಗ್ಗೂಡಿ ಶ್ರೀಗಳ ೧೧೫ನೇ ಜಯಂತ್ಯೋತ್ಸವ ಆಚರಿಸಲಾಗುತ್ತಿದೆ. ಶ್ರೀ ಸಿದ್ದಗಂಗಾಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರು ದಿವ್ಯ ಸಾನಿಧ್ಯ ವಹಿಸಲಿದ್ದಾರೆ ಎಂದರು.
    ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಜಯಂತ್ಯೋತ್ಸವ ಉದ್ಘಾಟಿಸಲಿದ್ದು, ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್ ಅಧ್ಯಕ್ಷತೆ ವಹಿಸಲಿದ್ದಾರೆ. ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಗೌರವ ಸಲಹೆಗಾರರಾದ ನಾಡೋಜ ಡಾ. ಗೊ.ರು. ಚನ್ನಬಸಪ್ಪ ಅವರಿಗೆ ಗೌರವ ಸಮರ್ಪಣೆ ನಡೆಯಲಿದೆ. ಸಂಸದ ಬಿ.ವೈ ರಾಘವೇಂದ್ರ, ಶಾಸಕ ಬಿ.ಕೆ ಸಂಗಮೇಶ್ವರ್, ವಿಧಾನಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್, ಎಸ್. ರುದ್ರೇಗೌಡ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಾಕ್ಷರಿ, ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ.ಎಸ್ ನಾಗೇಶ್, ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್ ಹಾಗು ತಾಲೂಕು ವೀರಶೈವ ಸಮಾಜದ ಅಧ್ಯಕ್ಷ ಕೆ.ಎಚ್ ತೀರ್ಥಯ್ಯ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು ಎಂದರು.
    ಪತ್ರಿಕಾಗೋಷ್ಠಿಯಲ್ಲಿ ಲಿಂಗಾಯತ ಸಮಾಜದ ವಿವಿಧ ಸಂಘಟನೆಗಳ ಪ್ರಮುಖರಾದ ಆರ್. ಮಹೇಶ್ ಕುಮಾರ್, ಎಸ್. ಅಡವೀಶಯ್ಯ, ಬಿ.ಎಸ್ ಮಹೇಶ್‌ಕುಮಾರ್, ಎಸ್. ವಾಗೀಶ್, ನಂದಿ ಮಲ್ಲಿಕಾರ್ಜುನ, ಆರ್.ಎಸ್ ಶೋಭ, ಪರಮೇಶ್ವರಪ್ಪ ಮತ್ತು ಮಂಗೋಟೆ ರುದ್ರೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.