Thursday, June 16, 2022

ಟ್ರೆಂಚ್‌ನಲ್ಲಿ ಸಿಕ್ಕಿಹಾಕಿಕೊಂಡ ಹಸು : ಸ್ಥಳೀಯರಿಂದ ರಕ್ಷಣೆ


ಭದ್ರಾವತಿ ನ್ಯೂಟೌನ್ ಶ್ರೀ ಆದಿಚುಂಚನಗಿರಿ ವಿದ್ಯಾಸಂಸ್ಥೆಯ ಕನ್ನಡ ಪ್ರಾಥಮಿಕ ಶಾಲೆ ಪಕ್ಕದಲ್ಲಿ ಟ್ರೆಂಚ್(ಕಂದಕ)ನಲ್ಲಿ ಹಸು ಸಿಕ್ಕಿಹಾಕಿಕೊಂಡಿರುವುದು.
ಭದ್ರಾವತಿ, ಜೂ. ೧೬: ನಗರದ ನ್ಯೂಟೌನ್ ಶ್ರೀ ಆದಿಚುಂಚನಗಿರಿ ವಿದ್ಯಾಸಂಸ್ಥೆಯ ಕನ್ನಡ ಪ್ರಾಥಮಿಕ ಶಾಲೆ ಪಕ್ಕದಲ್ಲಿ ಟ್ರೆಂಚ್(ಕಂದಕ)ನಲ್ಲಿ ಹಸು ಸಿಕ್ಕಿಹಾಕಿಕೊಂಡ ಘಟನೆ ನಡೆದಿದ್ದು, ತಕ್ಷಣ ಸ್ಥಳೀಯರು ಹಸುವನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಶಾಲೆಯ ಪಕ್ಕದಲ್ಲಿ ಟ್ರೆಂಚ್ ಹೊಡೆದು ಹಲವು ದಿನಗಳು ಕಳೆದಿದ್ದು, ಆದರೆ ಟ್ರಂಚ್ ಮುಚ್ಚದ ಕಾರಣ ಹಸುವೊಂದು ಸಿಕ್ಕಿ ಹಾಕಿಕೊಂಡಿದೆ. ಸ್ಥಳೀಯರು ಹಸು ಸಿಕ್ಕಿ ಹಾಕಿಕೊಂಡ ತಕ್ಷಣ ಕಾರ್ಯಪ್ರವೃತರಾಗಿ ಟ್ರಂಚ್ ಅಕ್ಕಪಕ್ಕ  ಮಣ್ಣು ಹೊರ ತೆಗೆದು ಸಡಿಲಗೊಳಿಸುವ ಮೂಲಕ ರಕ್ಷಿಸಿದ್ದಾರೆ. ಈ ನಡುವೆ ಘಟನೆಗೆ ಬಿಎಸ್‌ಎನ್‌ಎಲ್ ನಿರ್ಲಕ್ಷ್ಯತನ ಕಾರಣ ಎಂದು ಸ್ಥಳೀಯರು ಆರೋಪಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಾಲೆ ಪಕ್ಕದಲ್ಲಿಯೇ ಟ್ರೆಂಚ್ ಇರುವ ಕಾರಣ ಒಂದು ವೇಳೆ ಶಾಲಾ ಮಕ್ಕಳು ಟ್ರಂಚ್‌ನಲ್ಲಿ ಸಿಕ್ಕಿ ಹಾಕಿಕೊಂಡು ಅವಘಡಗಳು ಸಂಭವಿಸುವ ಸಾಧ್ಯತೆ ಹೆಚ್ಚಾಗಿದ್ದು, ತಕ್ಷಣ ಟ್ರಂಚ್ ಮುಚ್ಚುವ ಕಾರ್ಯ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.


ಭದ್ರಾವತಿ ನ್ಯೂಟೌನ್ ಶ್ರೀ ಆದಿಚುಂಚನಗಿರಿ ವಿದ್ಯಾಸಂಸ್ಥೆಯ ಕನ್ನಡ ಪ್ರಾಥಮಿಕ ಶಾಲೆ ಪಕ್ಕದಲ್ಲಿ ಟ್ರೆಂಚ್(ಕಂದಕ)ನಲ್ಲಿ ಹಸು ಸಿಕ್ಕಿಹಾಕಿಕೊಂಡ ಘಟನೆ ನಡೆದಿದ್ದು, ತಕ್ಷಣ ಸ್ಥಳೀಯರು ಹಸುವನ್ನು ರಕ್ಷಿಸುವಲ್ಲಿ ಯಶಸ್ವಿಯಾದರು. 

ದೊಣಬಘಟ್ಟ ಗ್ರಾಮ ಅಧ್ಯಕ್ಷರಾಗಿ ಎಂ.ಡಿ ಕಲೀಂ, ಉಪಾಧ್ಯಕ್ಷರಾಗಿ ಮಲ್ಲಮ್ಮ ಅವಿರೋಧ ಆಯ್ಕೆ

ಭದ್ರಾವತಿ ದೊಣಬಘಟ್ಟ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷ ಎಂ.ಡಿ ಕಲೀಂ

    ಭದ್ರಾವತಿ, ಜೂ. ೧೬: ತಾಲೂಕಿನ ದೊಣಬಘಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಎಂ.ಡಿ ಕಲೀಂ ಹಾಗು ಉಪಾಧ್ಯಕ್ಷರಾಗಿ ಮಲ್ಲಮ್ಮ ಗುರುವಾರ ನಡೆದ ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ.
    ಒಟ್ಟು ೨೧ ಸದಸ್ಯ ಬಲವನ್ನು ಹೊಂದಿರುವ ಗ್ರಾಮ ಪಂಚಾಯಿತಿಯಲ್ಲಿ ಅಧ್ಯಕ್ಷ ಸ್ಥಾನ ಎ ವರ್ಗಕ್ಕೆ ಹಾಗು ಉಪಾಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಾಗಿದೆ. ಒಡಂಬಡಿಕೆಯಂತೆ ಅಧಿಕಾರ ಹಂಚಿಕೆ ಮಾಡಿಕೊಂಡಿದ್ದು, ಮೊದಲ ಹಂತದಲ್ಲಿ ಖಲೀಲ್ ಸಾಬ್ ಅಧ್ಯಕ್ಷರಾಗಿ ಹಾಗು ಹಾಲಮ್ಮ ಉಪಾಧ್ಯಕ್ಷರಾಗಿ ಅಧಿಕಾರ ನಡೆಸಿ ತಮ್ಮ ಸ್ಥಾನಗಳಿಗೆ ರಾಜೀನಾಮೆ ಸಲ್ಲಿಸಿದ್ದರು.


ಭದ್ರಾವತಿ ದೊಣಬಘಟ್ಟ ಗ್ರಾಮ ಪಂಚಾಯಿತಿ ನೂತನ ಉಪಾಧ್ಯಕ್ಷೆ ಮಲ್ಲಮ್ಮ

    ತೆರವಾದ ಸ್ಥಾನಕ್ಕೆ ಗುರುವಾರ ಚುನಾವಣೆ ನಡೆದಿದ್ದು, ಅಧ್ಯಕ್ಷರಾಗಿ ಎಂ.ಡಿ ಕಲೀಂ ಹಾಗು ಉಪಾಧ್ಯಕ್ಷರಾಗಿ ಪರಿಶಿಷ್ಟ ಪಂಗಡಕ್ಕೆ ಸೇರಿದ ಮಲ್ಲಮ್ಮ ಅವಿರೋಧವಾಗಿ ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಮೇಶ್ ಕಾರ್ಯ ನಿರ್ವಹಿಸಿದರು. ಚುನಾವಣಾ ಪ್ರಕ್ರಿಯೆಯಲ್ಲಿ ೧೨ ಸದಸ್ಯರು ಭಾಗವಹಿಸಿದ್ದು, ಎರಡು ಸ್ಥಾನಗಳಿಗೂ ಪ್ರತಿಸ್ಪರ್ಧಿಗಳು ಇಲ್ಲದ ಕಾರಣ ಅವಿರೋಧ ಆಯ್ಕೆ ಘೋಷಿಸಲಾಯಿತು. ಚುನಾವಣೆ ಪ್ರಕ್ರಿಯೆ ಮುಕ್ತಾಯಗೊಂಡ ನಂತರ ನೂತನ ಅಧ್ಯಕ್ಷರು, ಉಪಾಧ್ಯಕ್ಷರ ಬೆಂಬಲಿಗರು ಸಂಭ್ರಮಾಚರಣೆ ನಡೆಸಿದರು.  


    ಈ ನಡುವೆ ಒಡಂಬಡಿಕೆಯಂತೆ ನಡೆದುಕೊಂಡಿಲ್ಲ ಎಂದು ಆರೋಪಿಸಿ ಗ್ರಾಮ ಪಂಚಾಯಿತಿ ಸದಸ್ಯೆ ಕೌಸರು ಬಾನು ಬೆಂಬಲಿಗರೊಂದಿಗೆ ಪ್ರತಿಭಟನಡೆಸಿ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಸಂದರ್ಭದಲ್ಲಿ ಕೆಲ ಸಮಯ ಅಹಿತಕರ ವಾತಾವರಣ ನಿರ್ಮಾಣಗೊಂಡಿದ್ದು, ಪೊಲೀಸರು ಮಧ್ಯ ಪ್ರವೇಶಿಸಿ ಪ್ರತಿಭಟನಾಕಾರರನ್ನು ತೆರವುಗೊಳಿಸಿದ್ದಾರೆ.  ಕೌಸರ್ ಬಾನು ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸುವಲ್ಲಿ ಯಶಸ್ವಿಯಾದರು. ಗ್ರಾಮ ಪಂಚಾಯಿತಿ ಮುಂಭಾಗದಲ್ಲಿ ನಡೆದಿರುವ ಘಟನೆ ವಿಡಿಯೋ ಎಲ್ಲೆಡೆ ವ್ಯಾಪಕವಾಗಿ ಹರಿದಾಡುತ್ತಿದೆ.


ಅಧ್ಯಕ್ಷ ಸ್ಥಾನ ವಂಚನೆ ಆರೋಪ : ಗ್ರಾ.ಪಂ ಸದಸ್ಯ ಆತ್ಮಹತ್ಯೆಗೆ ಯತ್ನ

ಅತ್ಮಹತ್ಯೆಗೆ ಯತ್ನಿಸಿದ ಭದ್ರಾವತಿ ದೊಣಬಘಟ್ಟ ಗ್ರಾಮ ಪಂಚಾಯಿತಿ ಸದಸ್ಯೆ ಕೌಸರ್ ಬಾನು.
    ಭದ್ರಾವತಿ, ಜೂ. ೧೬: ತಾಲೂಕಿನ ದೊಣಬಘಟ್ಟ ಗ್ರಾಮ ಪಂಚಾಯತಿ ಸದಸ್ಯೆಯೊಬ್ಬರು ಅಧ್ಯಕ್ಷ ಸ್ಥಾನ ನೀಡದೆ ವಂಚಿಸಿದ್ದಾರೆಂದು ಮನನೊಂದು ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಗುರುವಾರ ನಡೆದಿದೆ.
    ದೊಣಬಘಟ್ಟ ಗ್ರಾಮ ಪಂಚಾಯಿತಿಯಲ್ಲಿ ಒಡಂಬಡಿಕೆಯಂತೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನ ಹಂಚಿಕೆ ಮಾಡಿಕೊಂಡಿದ್ದು, ಅದರಂತೆ ತೆರವಾದ ೨ ಸ್ಥಾನಗಳಿಗೆ ಚುನಾವಣೆ ಪ್ರಕ್ರಿಯೆ ಆರಂಭಗೊಂಡಿದೆ. ಈ ಸಂದರ್ಭದಲ್ಲಿ ಸದಸ್ಯೆ ಕೌಸರ್ ಬಾನು ನನಗೆ ಅಧ್ಯಕ್ಷ ಸ್ಥಾನ ನೀಡದೆ ವಂಚಿಸಲಾಗಿದೆ ಎಂದು ಆರೋಪಿಸಿ ಗ್ರಾಮ ಪಂಚಾಯಿತಿ ಮುಂಭಾಗ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಕ್ಷಣ ಅವರನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
    ಈ ನಡುವೆಯೂ ಚುನಾವಣೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ನೂತನ ಅಧ್ಯಕ್ಷರು, ಉಪಾಧ್ಯಕ್ಷರ ಆಯ್ಕೆ ನಡೆದಿದೆ. ಚುನಾವಣಾಧಿಕಾರಿಯಾಗಿ ತಾಲೂಕು ಕಾರ್ಯನಿರ್ವಹಣಾಧಿಕಾರಿ ರಮೇಶ್ ಕಾರ್ಯ ನಿರ್ವಹಿಸಿದರು.

ವಿವಿಧ ಬೇಡಿಕೆ ಈಡೇರಿಸಲು ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ರಿಗೆ ಮನವಿ

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ ಸಚಿವ ಬಿ.ಸಿ ನಾಗೇಶ್‌ರವರಿಗೆ ಮನವಿ ಸಲ್ಲಿಸಿದೆ. 
    ಭದ್ರಾವತಿ, ಜೂ. ೧೬: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ ಸಚಿವ ಬಿ.ಸಿ ನಾಗೇಶ್‌ರವರಿಗೆ ಮನವಿ ಸಲ್ಲಿಸಿದೆ.
    ಪ್ರಾಥಮಿಕ ಶಾಲೆಗಳಲ್ಲಿ ೧ ರಿಂದ ೭ನೇ ತರಗತಿವರೆಗೆ ಕಾರ್ಯನಿರ್ವಹಿಸುತ್ತಿರುವ ಸೇವಾನಿರತ ಎಲ್ಲಾ ಪದವಿಧರ ಶಿಕ್ಷಕರಿಗೆ ವೃಂದ ಮತ್ತು ನೇಮಕಾತಿ ನಿಯಮಗಳನ್ನು ತಿದ್ದುಪಡಿ ಮಾಡುವ ಮೂಲಕ ಪದವಿಧರ ಪ್ರಾಥಮಿಕ ಶಾಲಾ ಶಿಕ್ಷಕರುಗಳೆಂದು ಪದನಾಮೀಕರಿಸಿ ವಿಲೀನಗೊಳಿಸುವುದರ ಜೊತೆಗೆ ವೇತನ ಬಡ್ತಿ ನೀಡುವುದು. ಹೊಸ ಪಿಂಚಣಿ ಯೋಜನೆ  ರದ್ದುಗೊಳಿಸಿ ಪುನಃ ಹಳೇ ಪಿಂಚಣಿ ಯೋಜನೆ ಜಾರಿಗೊಳಿಸುವುದು. ೨೦೦೫ರಲ್ಲಿ ಅಧಿಸೂಚನೆಯಾಗಿ ೨೦೦೭ರ ಜನವರಿಯಲ್ಲಿ ನೇಮಕಾತಿ ಆದೇಶ ಪಡೆದ ಶಿಕ್ಷಕರುಗಳಿಗೆ ಹಳೇ ಪಿಂಚಣಿ ಯೋಜನೆ ಜಾರಿಗೊಳಿಸುವ ಸಂಬಂಧ ನ್ಯಾಯಾಲಯದ ತೀರ್ಪಿನ ಅನ್ವಯದಂತೆ ಕ್ರಮ ಕೈಗೊಳ್ಳಲು ಇಲಾಖೆಗೆ ಸೂಚಿಸುವುದು ಹಾಗು ಖಾಸಗಿ ಶಾಲೆಗಳ ಸ್ಥಾಪನೆಗೆ ನೀಡುವ ಅನುಮತಿ ಕಡಿಮೆಗೊಳಿಸಿ ಮೂಲ ಸೌಲಭ್ಯಗಳೊಂದಿಗೆ ಸರ್ಕಾರಿ ಶಾಲೆಗಳನ್ನು ಸಬಲೀಕರಣಗೊಳಿಸುವಂತೆ ಮನವಿ ಮಾಡಲಾಗಿದೆ.
    ಜಿ.ಪಿ.ಟಿ ಹುದ್ದೆಗೆ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಪರಿಗಣಿಸುವ ಸಂದರ್ಭದಲ್ಲಿ ಯಾವುದೇ ಶಿಕ್ಷಕರಿಗೂ ತೊಂದರೆಯಾಗದಂತೆ ಎಲ್ಲಾ ವರ್ಗದ ಶಿಕ್ಷಕರಿಗೂ ನ್ಯಾಯ ದೊರಕುವಂತಾಗಬೇಕು. ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗಳಿಗೆ ಸಂಬಂಧಿಸಿದಂತೆ ಯಾವುದೇ ಲೋಪದೋಷಗಳು ಕಂಡುಬಾರದಂತೆ ವ್ಯವಸ್ಥಿತವಾಗಿ ಪ್ರತಿ ವರ್ಷ ವರ್ಗಾವಣೆ ನಡೆಸುವುದು. ಪ್ರತಿ ಶಾಲೆಗೆ ಒಬ್ಬ ಮುಖ್ಯೋಪಾಧ್ಯಾಯ, ತರಗತಿಗೆ ಒಬ್ಬ ಹಾಗು ಪ್ರತಿ ವಿಷಯಕ್ಕೆ ಒಬ್ಬ ಶಿಕ್ಷಕರನ್ನು, ಗುಮಾಸ್ತರನ್ನು, ಡಿ ದರ್ಜೆ ನೌಕರರನ್ನು ಹಾಗು ಗಣಕಯಂತ್ರ ಶಿಕ್ಷಕರನ್ನು ನಿಯುಕ್ತಿಗೊಳಿಸುವುದು. ಮುಖ್ಯೋಪಾಧ್ಯಾಯರಿಗೆ ಪ್ರತ್ಯೇಕ ವೇತನ ಶ್ರೇಣಿ ನಿಗದಿಗೊಳಿಸುವುದು ಹಾಗು ಶಿಕ್ಷಕರುಗಳನ್ನು ಶಿಕ್ಷಣೇತರ ಕಾರ್ಯಗಳಿಂದ ವಿಶೇಷವಾಗಿ ಮತಗಟ್ಟೆ ಅಧಿಕಾರಿಗಳಾಗಿ(ಬಿಎಲ್‌ಓ) ಕಾರ್ಯನಿರ್ವಹಿಸುವ ಕೆಲಸದಿಂದ ವಿಮುಕ್ತಿಗೊಳಿಸುವಂತೆ ಮನವಿಯಲ್ಲಿ ಕೋರಲಾಗಿದೆ.
    ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಣ ಸಂಯೋಜಕರ ಹುದ್ದೆಗಳನ್ನು ಯಾವುದೇ ಪರೀಕ್ಷೆ ನಡೆಸದೆ ಸೇವಾ ಜೇಷ್ಠತೆ ಆಧಾರದ ಮೇಲೆ ಹಿರಿಯ ಮುಖ್ಯ ಶಿಕ್ಷಕರಿಗೆ ಬಡ್ತಿ ನೀಡುವ ಮೂಲಕ ಭರ್ತಿ ಮಾಡುವುದು. ಶಾಲಾ ದಾಖಲಾತಿ ೧೦೦ ಮಕ್ಕಳನ್ನು ಹೊಂದಿರುವ ಹಿರಿಯ ಪ್ರಾಥಮಿಕ ಶಾಲೆಗಳಿಗೆ ಪದವಿಧರೇತರ ಮುಖ್ಯೋಪಾಧ್ಯಾಯರ ಹುದ್ದೆಯೆಂದು ಪರಿಗಣಿಸಿ ಆದೇಶ ಹೊರಡಿಸುವುದು. ಗ್ರಾಮೀಣ ಕೃಪಾಂಕ ಶಿಕ್ಷಕರ ವಜಾ ಆದ ಸೇವೆಯನ್ನು ಸತತ ಸೇವೆ ಎಂದು ಪರಿಗಣಿಸಿ, ಆರ್ಥಿಕ ಹಾಗು ಇನ್ನಿತರೆ ಎಲ್ಲಾ ಸೇವಾ ಸೌಲಭ್ಯ ನೀಡುವುದು. ದೈಹಿಕ ಶಿಕ್ಷಣ ಶಿಕ್ಷಕರ ಸಮಸ್ಯೆಗಳನ್ನು ಪರಿಹರಿಸುವುದು ಹಾಗು ಹಿಂದಿ ಶಿಕ್ಷಕರ ಸಮಸ್ಯೆಗಳನ್ನು ಪರಿಹರಿಸಿ ವರ್ಗಾವಣೆಯಲ್ಲಿ ಅವಕಾಶ ಕಲ್ಪಿಸಿಕೊಡುವುದು ಸೇರಿದಂತೆ ಒಟ್ಟು ೧೮ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಸಲ್ಲಿಸಲಾಗಿದೆ.
    ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಟಿ. ಪೃಥ್ವಿರಾಜ್ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ತಹಸೀಲ್ದಾರ್ ಆರ್. ಪ್ರದೀಪ್, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಿ. ಸಿದ್ದಬಸಪ್ಪ, ಸರ್ಕಾರಿ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಬಿ.ಎಲ್ ರಂಗಸ್ವಾಮಿ, ಸೂಡಾ ಮಾಜಿ ಅಧ್ಯಕ್ಷ ಎಸ್.ಎಸ್ ಜ್ಯೋತಿಪ್ರಕಾಶ್, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಪ್ರಧಾನ ಕಾರ್ಯದರ್ಶಿ ಎಸ್.ಕೆ ಮೋಹನ್, ಯು. ಮಹಾದೇವಪ್ಪ, ಬಸವಂತರಾವ್‌ದಾಳೆ, ರೇವಣಪ್ಪ, ಎ. ತಿಪ್ಪೇಸ್ವಾಮಿ, ಡಿ.ಎಸ್ ರಾಜಪ್ಪ, ರಂಗನಾಥಪ್ರಸಾದ್, ಡಿ. ನಾಗರತ್ನ, ಶಿವಲಿಂಗೇಗೌಡ, ಶಿಕ್ಷಣ ಸಂಯೋಜಕ ರವಿಕುಮಾರ್, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ನವೀದ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.