Tuesday, June 21, 2022

ಭದ್ರಾವತಿ ನ್ಯೂಟನ್ ಶ್ರೀ ಸತ್ಯ ಸಾಯಿಬಾಬಾ ಶಾಲೆ ಹತ್ತಿರ ಚಿರತೆ ಪ್ರತ್ಯಕ್ಷ

 


ಭದ್ರಾವತಿ ನ್ಯೂಟನ್ ಶ್ರೀ ಸತ್ಯ ಸಾಯಿಬಾಬಾ ಶಾಲೆ ಹತ್ತಿರ ವಿಐಎಸ್ಎಲ್  ವಸತಿಗೃಹಗಳ ಬಳಿ ಚಿರತೆ ಬುಧವಾರ ಬೆಳಗ್ಗೆ ಪ್ರತ್ಯಕ್ಷವಾಗಿದ್ದು ಜನರು ನೋಡಲು ಜಮಾಯಿಸಿರುವುದು ಕಂಡುಬಂದಿದ್ದು, ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿಗಳು ಚಿರತೆ ಹಿಡಿಯಲು ಹರಸಹಾಸ ಪಡುತ್ತಿದ್ದು ಸುಮಾರು ಎರಡು ಗಂಟೆಗಳಿಂದ ನಿರಂತರ ಕಾರ್ಯಾಚರಣೆ ಕೈಗೊಂಡಿದ್ದಾರೆ.

ಜೂ.೨೪ರಂದು ಉಚಿತ ನೇತ್ರ ತಪಾಸಣೆ, ಶಸ್ತ್ರ ಚಿಕಿತ್ಸಾ ಶಿಬಿರ : ಬಿ.ಎಸ್ ಮಹೇಶ್ ಕುಮಾರ್

ಭದ್ರಾವತಿ ಲಯನ್ಸ್ ಕ್ಲಬ್ ಅಧ್ಯಕ್ಷ ಬಿ.ಎಸ್ ಮಹೇಶ್‌ಕುಮಾರ್ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
    ಭದ್ರಾವತಿ, ಜೂ. ೨೧ : ಅಂತರಾಷ್ಟ್ರೀಯ ಲಯನ್ಸ್ ಸೇವಾ ಸಂಸ್ಥೆ ಲಯನ್ಸ್ ಕ್ಲಬ್ ವತಿಯಿಂದ ಜೂ.೨೪ರಂದು ತಾಲೂಕಿನ ಶ್ರೀರಾಮನಗರದ ಶ್ರೀ ಶ್ರಮಜೀವಿ ಮರಿಸಿದ್ದಯ್ಯ ಕಲ್ಯಾಣ ಮಂದಿರದಲ್ಲಿ ಉಚಿತ ನೇತ್ರ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ ಹಾಗು ಕಣ್ಣಿನ ಇತರ ತೊಂದರೆಗಳಿಗೆ ಚಿಕಿತ್ಸೆ ನೀಡಲಾಗುವುದು ಎಂದು ಕ್ಲಬ್ ಅಧ್ಯಕ್ಷ ಬಿ.ಎಸ್ ಮಹೇಶ್ ಕುಮಾರ್ ಹೇಳಿದರು.
    ಅವರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,  ಶ್ರೀ ಕಂಚಿ ಕಾಮಕೋಟಿ ಮೆಡಿಕಲ್ ಟ್ರಸ್ಟ್, ಶಂಕರ ಕಣ್ಣಿನ ಆಸ್ಪತ್ರೆ ಶಿವಮೊಗ್ಗ, ಪ್ರಾಥಮಿಕ ಆರೋಗ್ಯ ಕೇಂದ್ರ, ಭದ್ರಾಕಾಲೋನಿ-ತಳ್ಳಿಕಟ್ಟೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಂಧತ್ವ ನಿಯಂತ್ರಣಾ ಕಾರ್ಯಕ್ರಮ ಮತ್ತು ತಾಲೂಕು ವೈದ್ಯಾಧಿಕಾರಿಗಳ ಕಛೇರಿ ಸಹಕಾರದೊಂದಿಗೆ ಶಿಬಿರ ಆಯೋಜಿಸಲಾಗಿದೆ.  
    ಕ್ಲಬ್ ವತಿಯಿಂದ ಹಲವಾರು ಸೇವಾ ಕಾರ್ಯಗಳನ್ನು ಯಶಸ್ವಿಯಾಗಿ ಆಯೋಜಿಸಿಕೊಂಡು ಬರಲಾಗುತ್ತಿದೆ. ಅದರಲ್ಲೂ ಆರೋಗ್ಯಕ್ಕೆ ಹೆಚ್ಚಿನ ಗಮನ ನೀಡುವ ಮೂಲಕ ಆರೋಗ್ಯ ಶಿಬಿರಗಳನ್ನು ಹೆಚ್ಚಾಗಿ ಆಯೋಜಿಸಲಾಗುತ್ತಿದೆ. ಸಾರ್ವಜನಿಕರು ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕೆಂದು ಮನವಿ ಮಾಡಿದರು.
    ಶಿಬಿರ ಬೆಳಿಗ್ಗೆ ೯ ಗಂಟೆಯಿಂದ ಮಧ್ಯಾಹ್ನ ೧ ಗಂಟೆವರೆಗೆ ನಡೆಯಲಿದ್ದು, ಹೆಚ್ಚಿನ ಮಾಹಿತಿಗೆ ಶಂಕರ ಕಣ್ಣಿನ ಆಸ್ಪತ್ರೆ, ಹರಕೆರೆ, ತೀರ್ಥಹಳ್ಳಿ ರಸ್ತೆ, ಶಿವಮೊಗ್ಗ. ದೂರವಾಣಿ ಸಂಜೆ ೦೮೧೮೨-೨೨೨೦೯೯, ೨೨೨೧೦೦ ಅಥವಾ ಪ್ರಾಥಮಿಕ ಆರೋಗ್ಯ ಕೇಂದ್ರ, ಭದ್ರಾಕಾಲೋನಿ-ತಳ್ಳಿಕಟ್ಟೆ ಅಥವಾ ಬಿ.ಎಸ್ ಮಹೇಶ್‌ಕುಮಾರ್, ಮೊ: ೯೪೪೯೧೩೬೩೩೩, ಡಿ. ಶಂಕರಮೂರ್ತಿ, ಮೊ: ೯೮೮೦೦೩೦೪೨೮ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದರು.
    ಜೂ.೨೫ರಂದು ನೂತನ ಪದಾಧಿಕಾರಿಗಳ ಪದಗ್ರಹಣ:
    ಪ್ರಸಕ್ತ ಸಾಲಿನ ಲಯನ್ಸ್ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಜೂ.೨೫ರಂದು ಸಂಜೆ ೭ ಗಂಟೆ ನ್ಯೂಟೌನ್ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ನಡೆಯಲಿದೆ. ನೂತನ ಅಧ್ಯಕ್ಷರಾಗಿ ಎ.ಎನ್ ಕಾರ್ತಿಕ್, ಕಾರ್ಯದರ್ಶಿಯಾಗಿ ಎಂ. ನಾಗರಾಜ ಶೇಟ್ ಮತ್ತು ಖಜಾಂಚಿಯಾಗಿ ಜಿ.ಪಿ ದರ್ಶನ್ ಹಾಗು ಇನ್ನಿತರ ಪದಾಧಿಕಾರಿಗಳು ಅಧಿಕಾರ ಸ್ವೀಕರಿಸಲಿದ್ದಾರೆ ಎಂದರು.
    ಪತ್ರಿಕಾಗೋಷ್ಠಿಯಲ್ಲಿ ಕಾರ್ಯದರ್ಶಿ ಡಿ. ಶಂಕರಮೂರ್ತಿ, ಪ್ರಮುಖರಾದ ಪಿ. ವೆಂಕಟರಮಣಶೇಟ್, ಬಿ. ದಿವಾಕರ ಶೆಟ್ಟಿ, ಎ.ಎನ್ ಕಾರ್ತಿಕ್ ಮತ್ತು ಪರಮೇಶ್ವರಪ್ಪ ಉಪಸ್ಥಿತರಿದ್ದರು.

೮ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ : ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ

ಭದ್ರಾವತಿ ನಗರಸಭೆ ವಾರ್ಡ್ ನಂ.೫ರ ಸದಸ್ಯೆ ಶಶಿಕಲಾ ಬಿ.ಎಸ್ ನಾರಾಯಣಪ್ಪ ಅವರು ನಗರಸಭಾ ಸದಸ್ಯರಾಗಿ ೧ ವರ್ಷ ಪೂರೈಸಿದ ಹಿನ್ನಲೆಯಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ೮ ವರ್ಷದ ಸಾಧನೆ ಮನೆ ಮನೆಗೆ ಮುಟ್ಟಿಸುವ ಹಾಗು ೮ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ, ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಬಿ ಭಾನುಪ್ರಕಾಶ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.  
    ಭದ್ರಾವತಿ, ಜೂ. ೨೧: ನಗರಸಭೆ ವಾರ್ಡ್ ನಂ.೫ರ ಸದಸ್ಯೆ ಶಶಿಕಲಾ ಬಿ.ಎಸ್ ನಾರಾಯಣಪ್ಪ ಅವರು ನಗರಸಭಾ ಸದಸ್ಯರಾಗಿ ೧ ವರ್ಷ ಪೂರೈಸಿದ ಹಿನ್ನಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ೮ ವರ್ಷದ ಸಾಧನೆ ಮನೆ ಮನೆಗೆ ಮುಟ್ಟಿಸುವ ಹಾಗು ೮ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಉದ್ಘಾಟಿಸಿದರು.
    ಹಳೇನಗರದ ಗ್ರಾಮ ದೇವತೆ ಶ್ರೀ ಹಳದಮ್ಮ ದೇವಸ್ಥಾನದ ಆವರಣದಲ್ಲಿ ಮಂಗಳವಾರ ಸಂಜೆ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.೮೫ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಅಭಿನಂದಿಸಲಾಯಿತು.
    ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ ವಿಜೇತ, ಅಂತರಾಷ್ಟ್ರೀಯ ಯೋಗಪಟು ಡಿ. ನಾಗರಾಜ್, ಖೋ ಖೋ ತರಬೇತಿದಾರ ಕೆ.ಟಿ ಶ್ರೀನಿವಾಸ್ ಮತ್ತು ರಾಷ್ಟ್ರೀಯ ಕುಸ್ತಿ ಕ್ರೀಡಾಪಟು ಕಿರಣ್ ನಾಗರಾಜ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
    ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಬಿ ಭಾನುಪ್ರಕಾಶ್, ಬಿಜೆಪಿ ತಾಲೂಕು ಮಂಡಲ ಅಧ್ಯಕ್ಷ ಎಂ. ಪ್ರಭಾಕರ್, ನಗರಸಭಾ ಸದಸ್ಯೆ ಅನುಪಮಾ, ಮಾಜಿ ಉಪಾಧ್ಯಕ್ಷ ವೆಂಕಟೇಶ್, ಪ್ರಮುಖರಾದ ನರಸಿಂಹಚಾರ್, ಚನ್ನೇಶ್, ಸುದರ್ಶನ್, ರೇವಣಕರ್, ಪರಶುರಾಮ್ ಭೋವಿ, ಕಾರನಾಗರಾಜ್, ಮಂಜುನಾಥ್, ಶೋಭಾ ಪಾಟೀಲ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.  
    ಬಿ.ಎಸ್ ನಾರಾಯಣಪ್ಪ ಪ್ರಾಸ್ತಾವಿಕ ನುಡಿಗಳಾಡಿದರು. ಕಾಂತರಾಜ್ ಸ್ವಾಗತಿಸಿ, ರಾಜು ರೇವಣಕರ್ ವಂದಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ಸಿಹಿ ಹಂಚಲಾಯಿತು.

ಯೋಗ ಬದುಕಿನ ದಿನನಿತ್ಯದ ಚಟುವಟಿಕೆಯಾಗಲಿ : ಎಂ.ಎಲ್ ವೈಶಾಲಿ

ಕೇಂದ್ರ ಸರ್ಕಾರದ ಆಯುಷ್ ಮಂತ್ರಾಲಯ ಹಾಗೂ ರಾಜ್ಯ ಸರ್ಕಾರದ ಸೂಚನೆ ಮೇರೆಗೆ ರಾಷ್ಟ್ರೀಯ ಮತ್ತು ರಾಜ್ಯ ಪುರಾತತ್ವ ಸಂಗ್ರಹಾಲಯ ಮತ್ತು ಪಾರಂಪರಿಕ ಇಲಾಖೆ ಸಹಯೋಗದೊಂದಿಗೆ ತಾಲೂಕು ಆಡಳಿತ ಹಾಗು ನಗರಸಭೆ ವತಿಯಿಂದ ಭದ್ರಾವತಿ ಹಳೇನಗರದ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ೮ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್ ವೈಶಾಲಿ ಉದ್ಘಾಟಿಸಿದರು. 
    ಭದ್ರಾವತಿ, ಜೂ. ೨೧; ದೈಹಿಕ ಹಾಗೂ ಮಾನಸಿಕ ಸದೃಢತೆಗೆ ಯೋಗ ಸಹಕಾರಿಯಾಗಿದ್ದು, ಪ್ರತಿಯೊಬ್ಬರು ಯೋಗ ಕಲಿಕೆಯೊಂದಿಗೆ ಅದನ್ನು ತಮ್ಮ ದಿನನಿತ್ಯದ ಬದುಕಿನಲ್ಲಿ ರೂಢಿಸಿಕೊಳ್ಳುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್ ವೈಶಾಲಿ ಕರೆ ನೀಡಿದರು.
     ಅವರು ಮಂಗಳವಾರ ಕೇಂದ್ರ ಸರ್ಕಾರದ ಆಯುಷ್ ಮಂತ್ರಾಲಯ ಹಾಗೂ ರಾಜ್ಯ ಸರ್ಕಾರದ ಸೂಚನೆ ಮೇರೆಗೆ ರಾಷ್ಟ್ರೀಯ ಮತ್ತು ರಾಜ್ಯ ಪುರಾತತ್ವ ಸಂಗ್ರಹಾಲಯ ಮತ್ತು ಪಾರಂಪರಿಕ ಇಲಾಖೆ ಸಹಯೋಗದೊಂದಿಗೆ ತಾಲೂಕು ಆಡಳಿತ ಹಾಗು ನಗರಸಭೆ ವತಿಯಿಂದ ಹಳೇನಗರದ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ೮ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.  
    ಯೋಗ ಒಂದು ದಿನಕ್ಕೆ ಸೀಮಿತವಾಗಬಾರದು ದಿನನಿತ್ಯದ ಚಟುವಟಿಕೆಯ ಭಾಗವಾಗಬೇಕು. ಈ ಮೂಲಕ ಆರೋಗ್ಯವಂತೆ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರು ಕೈಜೋಡಿಸಬೇಕೆಂದರು.
     ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಅಂತರಾಷ್ಟ್ರೀಯ ಯೋಗಪಟು ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿ ಪುರಸ್ಕೃತ ಡಿ. ನಾಗರಾಜ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.


    ತಹಸೀಲ್ದಾರ್ ಆರ್. ಪ್ರದೀಪ್, ನಗರಸಭೆ ಉಪಾಧ್ಯಕ್ಷ ಚನ್ನಪ್ಪ, ಪೌರಾಯುಕ್ತ ಮನುಕುಮಾರ್, ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್,  ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಮೇಶ್,  ಆಯುಷ್ ವೈದ್ಯರುಗಳಾದ ಡಾ. ಅನಿಲ್‌ಕುಮಾರ್, ಡಾ,ಪುಷ್ಪಾ, ಕೆಎಸ್‌ಆರ್‌ಪಿ ೮ನೇ ಪಡೆಯ ಇನ್ಸ್‌ಪೆಕ್ಟರ್ ಮಂಜುನಾಥ್, ಡಾ. ವೀಣಾಭಟ್, ಉದ್ಯಮಿ ಬಿ.ಕೆ ಜಗನ್ನಾಥ್, ಎಂ.ಪ್ರಭಾಕರ್, ನಗರಸಭಾ ಸದಸ್ಯರುಗಳಾದ ಅನುಪಮಾ ಚನ್ನೇಶ್, ಅನುಪಮಾ, ಮೋಹನ್, ಮಹಲಿಂಗಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ಕೆಎಸ್‌ಆರ್‌ಪಿ ೮ನೇ ಪಡೆ, ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ, ಡಾ. ಬಿ.ಆರ್ ಅಂಬೇಡ್ಕರ್ ಪ್ಯಾರಾ ಮೆಡಿಕಲ್ ಎಜ್ಯುಕೇಷನ್ ಸೊಸೈಟಿ ವಿದ್ಯಾರ್ಥಿಗಳು, ನಯನ ಆಸ್ಪತ್ರೆ, ಪತಾಂಜಲಿ ಯೋಗ ಕೇಂದ್ರ, ಸ್ವಾಮಿ ವಿವೇಕಾನಂದ, ಸಂಚಿ ಹೊನ್ನಮ್ಮ ಯೋಗ ಕೇಂದ್ರ ಸೇರಿದಂತೆ ಹಾಗೂ ವಿವಿಧ ಯೋಗ ಕೇಂದ್ರಗಳ ಯೋಗಪಟುಗಳು ಪಾಲ್ಗೊಂಡು ಯೋಗದ ವಿವಿಧ ಭಂಗಿಗಳ ಮೂಲಕ ಅವುಗಳ ಮಹತ್ವ ತಿಳಿಸಿದರು.