Wednesday, June 22, 2022

ವಿಐಎಸ್‌ಎಲ್ ಕಾರ್ಖಾನೆಯಲ್ಲಿ ವಾಸವಿದ್ದ ಚಿರತೆ..?

ಭದ್ರಾವತಿ ನ್ಯೂಟೌನ್ ವಸತಿ ಗೃಹದಲ್ಲಿ ಬುಧವಾರ ಬೆಳಿಗ್ಗೆ ಪ್ರತ್ಯಕ್ಷವಾದ ಚಿರತೆ. 

    ಭದ್ರಾವತಿ, ಜೂ. ೨೨ : ನಗರದ ನ್ಯೂಟೌನ್ ವಸತಿ ಗೃಹದಲ್ಲಿ ಬುಧವಾರ ಬೆಳಿಗ್ಗೆ ಪ್ರತ್ಯಕ್ಷವಾದ ಚಿರತೆ ವಿಐಎಸ್‌ಎಲ್ ಕಾರ್ಖಾನೆಯಿಂದ ಬಂದಿರುವ ಸಾಧ್ಯತೆ ಹೆಚ್ಚಾಗಿದೆ ಎನ್ನಲಾಗಿದೆ.
    ಈ ಹಿಂದೆ ಸುಮಾರು ೨ ವರ್ಷಗಳ ಹಿಂದೆ ಕಾರ್ಖಾನೆಯಲ್ಲಿ ಚಿರತೆ ವಾಸವಿರುವ ಬಗ್ಗೆ ಸುಳಿವುಗಳು ಲಭ್ಯವಾಗಿದ್ದವು. ಅಲ್ಲದೆ ಚಿರತೆಗೆ ನಾಯಿಗಳು ಬಲಿಯಾಗಿರುವ ಮಾಹಿತಿ ಸಹ ಲಭ್ಯವಾಗಿದ್ದವು. ರಾತ್ರಿ ಪಾಳಿಯಲ್ಲಿ ಕೆಲಸ ಮಾಡುವ ಕೆಲವು ಕಾರ್ಮಿಕರು ಸಹ ಚಿರತೆ ಇರುವ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. ಈ ಹಿನ್ನಲೆಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಕಾರ್ಖಾನೆಯಲ್ಲಿ ಬೀಡುಬಿಟ್ಟು ಜಾಲಾಡಿದ್ದರು. ಅಲ್ಲದೆ ಬೋನ್ ಸಹ ಇಡಲಾಗಿತ್ತು. ಆದರೆ ಚಿರತೆ ಮಾತ್ರ ಪ್ರತ್ಯಕ್ಷವಾಗಿರಲಿಲ್ಲ.
    ಇದೀಗ ಈ ಕುರಿತು ಅರಣ್ಯ ಇಲಾಖೆ ಸಹ ಚಿರತೆ ವಿಐಎಸ್‌ಎಲ್ ಕಾರ್ಖಾನೆಯಿಂದ ಬಂದಿರುವ ಅನುಮಾನ ವ್ಯಕ್ತಪಡಿಸುತ್ತಿದೆ. ಅದರಲ್ಲೂ ಜನವಸತಿ ಪ್ರದೇಶಕ್ಕೆ ಚಿರತೆ ದೂರದಿಂದ ಬಂದಿರುವ ಸಾಧ್ಯತೆ ಕಡಿಮೆ ಎನ್ನಲಾಗಿದೆ. ವಾಸ್ತವ್ಯವಾಗಿ ಚಿರತೆ ಮೂಲ ನೆಲೆ ಕುರಿತು ಇದುವರೆಗೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಉಪ ಅರಣ್ಯ ಸಂಕರ್‍ಷಣಾಧಿಕಾರಿಯಾಗಿ ಶಿವಶರಣಯ್ಯ ಅಧಿಕಾರ ಸ್ವೀಕಾರ

ಶಿವಶರಣಯ್ಯ
    ಭದ್ರಾವತಿ, ಜೂ. ೨೨ : ಇಲ್ಲಿನ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಹಿರಿಯ ಎಸ್‌ಎಫ್‌ಎಸ್ ಅಧಿಕಾರಿ ಶಿವಶರಣಯ್ಯ ಅಧಿಕಾರ ವಹಿಸಿಕೊಂಡಿದ್ದಾರೆ.
    ಈ ಹಿಂದೆ ಉಪ ಅರಣ್ಯ ಸಂರಕ್ಷಣಾಧಿಕಾರಿಯಾಗಿದ್ದ ಕೆ.ಎಂ ಗಾಮನಗಟ್ಟಿಯವರು ವರ್ಗಾವಣೆಗೊಂಡ ಹಿನ್ನಲೆಯಲ್ಲಿ ಶಿವಶರಣಯ್ಯ ಅವರನ್ನು ನೇಮಕಗೊಳಿಸಲಾಗಿದೆ. ಶಿವಶರಣಯ್ಯರವರು ಈ ಹಿಂದೆ ಧಾರವಾಡದ ಅರಣ್ಯ ಇಲಾಖೆ ತರಬೇತಿ ಕೇಂದ್ರದಲ್ಲಿ ಸೇವೆ ಸಲ್ಲಿಸುತ್ತಿದ್ದರು. ಅಲ್ಲದೆ ಅರಣ್ಯ ಇಲಾಖೆಯ ಹಲವಾರು ವಿಭಾಗಗಳಲ್ಲಿ ಸೇವೆ ಸಲ್ಲಿಸಿರುವ ಅನುಭವ ಹೊಂದಿದ್ದಾರೆ.

ಶಾಲಾ ಮಕ್ಕಳಿಗೆ ಉಚಿತ ಸಮವಸ್ತ್ರ ವಿತರಣೆ, ಪೋಷಕರ ಸಭೆ

ಭದ್ರಾವತಿ ತಾಲೂಕಿನ ಸೀತಾರಾಮಪುರದ ಶ್ರೀ ಲೇಪಾಕ್ಷಸ್ವಾಮಿ  ಪ್ರೌಢಶಾಲೆಯಲ್ಲಿ ಬುಧವಾರ ಪೋಷಕರ ಸಭೆ ಮತ್ತು ಉಚಿತ ಸಮವಸ್ತ್ರ ವಿತರಣೆ ನಡೆಯಿತು.
    ಭದ್ರಾವತಿ, ಜೂ. ೨೨ : ತಾಲೂಕಿನ ಸೀತಾರಾಮಪುರದ ಶ್ರೀ ಲೇಪಾಕ್ಷಸ್ವಾಮಿ  ಪ್ರೌಢಶಾಲೆಯಲ್ಲಿ ಬುಧವಾರ ಪೋಷಕರ ಸಭೆ ಮತ್ತು ಉಚಿತ ಸಮವಸ್ತ್ರ ವಿತರಣೆ ನಡೆಯಿತು.
    ಶಿಕ್ಷಕರು ಹಾಗು ದಾನಿಗಳ ನೆರವಿನೊಂದಿಗೆ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಸಮವಸ್ತ್ರ ವಿತರಿಸಲಾಯಿತು. ಈ ಹಿನ್ನಲೆಯಲ್ಲಿ ಶಾಲಾ ಆಡಳಿತ ಮಂಡಳಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಅಭಿನಂದಿಸಿದರು.
    ಕ್ಷೇತ್ರ ಸಂಪನ್ಮೂಲ ವ್ಯಕ್ತಿ ನವೀದ್ ಅಹಮದ್, ಶಾಲೆಯ ಮುಖ್ಯ ಶಿಕ್ಷಕ ಎಸ್. ಪರಮೇಶ್ವರಪ್ಪ ಅಧ್ಯಕ್ಷತೆ ವಹಿಸಿದ್ದರು. ಶಾಲೆಯ ಎಲ್ಲಾ ಶಿಕ್ಷಕರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ವಿಐಎಸ್‌ಎಲ್ ವಸತಿಗೃಹಗಳಲ್ಲಿ ಪ್ರತ್ಯಕ್ಷವಾದ ಚಿರತೆ : ೪ ಗಂಟೆಗೂ ಹೆಚ್ಚು ಸಮಯ ನಿರಂತರ ಕಾರ್ಯಾಚರಣೆ

ಚಿರತೆ ಹಿಡಿಯುವಲ್ಲಿ ಯಶಸ್ವಿಯಾದ ಅರಣ್ಯ ಸಿಬ್ಬಂದಿಗಳು

ಭದ್ರಾವತಿ ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆ ಸಮೀಪ ವಸತಿ ಗೃಹಗಳಲ್ಲಿ ಬುಧವಾರ ಬೆಳಿಗ್ಗೆ ಏಕಾಏಕಿ ಕಾಣಿಸಿಕೊಂಡ ಚಿರತೆ.
    ಭದ್ರಾವತಿ, ಜೂ. ೨೨:  ನಗರದ ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆ ಸಮೀಪ ವಸತಿ ಗೃಹಗಳಲ್ಲಿ ಬುಧವಾರ ಬೆಳಿಗ್ಗೆ ಏಕಾಏಕಿ ಕಾಣಿಸಿಕೊಂಡು ಸ್ಥಳೀಯರಲ್ಲಿ ಭಯ ಹುಟ್ಟಿಸಿದ್ದ ಚಿರತೆಯೊಂದನ್ನು ಸುಮಾರು ೪ ಗಂಟೆಗೂ ಹೆಚ್ಚು ಸಮಯ ಕಾರ್ಯಾಚರಣೆ ನಡೆಸಿ  ಸೆರೆ ಹಿಡಿಯುವಲ್ಲಿ ಅರಣ್ಯ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ.


ಭದ್ರಾವತಿ ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆ ಸಮೀಪ ವಸತಿ ಗೃಹಗಳಲ್ಲಿ ಬುಧವಾರ ಬೆಳಿಗ್ಗೆ ಏಕಾಏಕಿ ಕಾಣಿಸಿಕೊಂಡ ಚಿರತೆಯನ್ನು ನೋಡಲು ಜಮಾಯಿಸಿರುವ ಜನರು.
    ಬೆಳಿಗ್ಗೆ ಪಾಳು ಬಿದ್ದಿದ್ದ ಮನೆಯಿಂದ ಏಕಾಏಕಿ ಹೊರಬಂದು ಕಾಣಿಸಿಕೊಂಡಿದ್ದ ಚಿರತೆ ಮಹಿಳೆಯೊಬ್ಬರ ಮೈ ಪರಚಿ ಮತ್ತೊಂದು ಮನೆಯ ಹಿಂಬದಿಯಲ್ಲಿ ಅವಿತುಕೊಂಡಿದ್ದು, ತಕ್ಷಣ ಮಾಹಿತಿ ತಿಳಿದ ಅರಣ್ಯ ಇಲಾಖೆಯವರು ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ಕೈಗೊಂಡರು. ಚಿರತೆ ಬೇರೆ ಕಡೆಗೆ ತಪ್ಪಿಸಿಕೊಳ್ಳದಂತೆ ಎಚ್ಚರ ವಹಿಸಿದ ಅರಣ್ಯ ಸಿಬ್ಬಂದಿಗಳು ಸುತ್ತುವರೆದು ಕಾರ್ಯಾಚರಣೆ ನಡೆಸಿದರು. ವನ್ಯಜೀವಿ ವಿಭಾಗದ ಶಿವಮೊಗ್ಗ ವೃತ್ತದ ಹಿರಿಯ ಪಶು ವೈದ್ಯಾಧಿಕಾರಿ ಡಾ. ವಿನಯ್‌ರವರ ತಂಡ ಚುಚ್ಚು ಮದ್ದು ನೀಡಿದ ನಂತ ಅರಣ್ಯ ಸಿಬ್ಬಂದಿಗಳು  ಚಿರತೆಯನ್ನು ಬಲೆ ಬೀಸಿ ಸೆರೆ ಹಿಡಿಯುವಲ್ಲಿ ಯಶಸ್ವಿಯಾದರು.


ಭದ್ರಾವತಿ ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆ ಸಮೀಪ ವಸತಿ ಗೃಹಗಳಲ್ಲಿ ಬುಧವಾರ ಬೆಳಿಗ್ಗೆ ಏಕಾಏಕಿ ಕಾಣಿಸಿಕೊಂಡ ಚಿರತೆ ಮಹಿಳೆಯೊಬ್ಬರ ಮೈ ಪರಚಿರುವುದು.
    ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವಶರಣಯ್ಯ, ಸಹಾಯಕ ಉಪ ಅರಣ್ಯ ಸಂರಕ್ಷಣಾಧಿಕಾರಿ ಪುಟ್ಟಟ್ನಳ್ಳಿ, ವಲಯ ಅರಣ್ಯಾಧಿಕಾರಿ ರಾಜೇಶ್, ಉಪ ವಲಯ ಅರಣ್ಯಾಧಿಕಾರಿಗಳಾದ ಬಿ.ಆರ್ ದಿನೇಶ್‌ಕುಮಾರ್, ನವೀನ್, ಅರಣ್ಯ ರಕ್ಷಕರಾದ ಬಾಲರಾಜ್, ಶ್ರೀಧರ್, ಅರಣ್ಯ ವೀಕ್ಷಕರಾದ ಶಶಿಲ್‌ಕುಮಾರ್, ನಾಗೇಂದ್ರಪ್ಪ ಹಾಗು ವ್ಯನ್ಯಜೀವಿ ವಿಭಾಗದ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.


ಭದ್ರಾವತಿ ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆ ಸಮೀಪ ವಸತಿ ಗೃಹಗಳಲ್ಲಿ ಬುಧವಾರ ಬೆಳಿಗ್ಗೆ ಏಕಾಏಕಿ ಕಾಣಿಸಿಕೊಂಡ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಚುಚ್ಚುಮದ್ದು ನೀಡಿದ ನಂತರ ಬಲೆ ಬೀಸಿ ಸೆರೆ ಹಿಡಿದಿರುವುದು.
    ಸ್ಥಳಕ್ಕೆ ಪೊಲೀಸ್ ಉಪಾಧೀಕ್ಷಕ ಜಿತೇಂದ್ರ ಕುಮಾರ್ ದಯಾಮ, ನಗರ ವೃತ್ತ ನಿರೀಕ್ಷಕ ರಾಘವೇಂದ್ರ ಕಾಂಡಿಕೆ, ಸಂಚಾರಿ ಪೊಲೀಸ್ ಠಾಣಾಧಿಕಾರಿ ಕವಿತಾ, ವಿವಿಧ ಪೊಲೀಸ್ ಠಾಣೆಗಳ ಠಾಣಾಧಿಕಾರಿಗಳು, ಅಗ್ನಿಶಾಮಕ ಇಲಾಖೆ ಠಾಣಾಧಿಕಾರಿ ವಸಂತಕುಮಾರ್ ಹಾಗು ಸಿಬ್ಬಂದಿಗಳು ಸ್ಥಳದಲ್ಲಿಯೇ ಬೀಡು ಬಿಟ್ಟು ಕಾರ್ಯಾಚರಣೆಗೆ ಸಹಕರಿಸಿದರು.


ಭದ್ರಾವತಿ ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆ ಸಮೀಪ ವಸತಿ ಗೃಹಗಳಲ್ಲಿ ಬುಧವಾರ ಬೆಳಿಗ್ಗೆ ಏಕಾಏಕಿ ಕಾಣಿಸಿಕೊಂಡ ಚಿರತೆಯನ್ನು ಯಶಸ್ವಿಯಾಗಿ ಸೆರೆ ಹಿಡಿದು ಬೋನಿಗೆ ಬಿಡಲಾಯಿತು. 
    ಇದಕ್ಕೂ ಮೊದಲು ಸ್ಥಳೀಯ ನಿವಾಸಿಗಳಿಗೆ ಮನೆಯಿಂದ ಹೊರಬರದಂತೆ ಎಚ್ಚರಿಕೆ ನೀಡಲಾಯಿತು. ಚಿರತೆ ಪತ್ತೆಯಾದ ಸ್ಥಳದ ಸಮೀಪದಲ್ಲಿಯೇ ಶ್ರೀ ಸತ್ಯಸಾಯಿಬಾಬಾ ಶಾಲೆ, ವಿಐಎಸ್‌ಎಲ್ ಆಸ್ಪತ್ರೆ(ದೊಡ್ಡಾಸ್ಪತ್ರೆ) ಹಾಗು ಅಂಗಡಿ ಮುಂಗಟ್ಟುಗಳಿವೆ. ಸದ್ಯ ಚಿರತೆ ಶಾಲೆ ಆವರಣ ಪ್ರವೇಶಿಸಿಲ್ಲ. ಅಲ್ಲದೆ ಯಾವುದೇ ಜೀವ ಹಾನಿ ಸಂಭವಿಸಿಲ್ಲ. ಅರಣ್ಯ ಸಿಬ್ಬಂದಿಗಳ ಕಾರ್ಯಾಚರಣೆ ಸ್ಥಳೀಯರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.  
    ಚಿರತೆ ಬಗ್ಗೆ ಮಾಹಿತಿ ತಿಳಿದು ನಗರದ ವಿವಿಧೆಡೆಗಳಿಂದ ಜನರು ಸ್ಥಳಕ್ಕೆ ಆಗಮಿಸಿ ಜಮಾಯಿಸಿದ್ದರು. ಇದರಿಂದಾಗಿ ಜನರನ್ನು ಪೊಲೀಸರು ನಿಯಂತ್ರಿಸಲು ಹರಸಾಹಸ ಪಡುವಂತಾಯಿತು. ಜನರ ಸದ್ದು ಗದ್ದಲದಿಂದಾಗಿ ಸೆರೆ ಹಿಡಿಯುವುದು ಸ್ವಲ್ಪ ವಿಳಂಬವಾಯಿತು ಎನ್ನಲಾಗಿದೆ.