Thursday, June 30, 2022

ತುರ್ತುಪರಿಸ್ಥಿತಿ ನಿಜಕ್ಕೂ ಭಾರತದ ಇತಿಹಾಸದಲ್ಲಿ ಒಂದು ಕರಾಳಕಾಲಮಾನ : ಆರ್.ಕೆ ಸಿದ್ರಾಮಣ್ಣ

ಭದ್ರಾವತಿ ಹಳೇನಗರದ ಬಿಜೆಪಿ ಪಕ್ಷದ ಕಛೇರಿಯಲ್ಲಿ ಗುರುವಾರ ತುರ್ತು ಪರಿಸ್ಥಿತಿ ಕರಾಳ ನೆನಪಿನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
    ಭದ್ರಾವತಿ, ಜೂ. ೩೦: ಸಂವಿಧಾನಕ್ಕೆ ವಿರೋಧವಾಗಿ ಇಂದಿರಾಗಾಂಧಿಯವರು ೧೯೭೦ರಲ್ಲಿ  ಜಾರಿಗೆ ತಂದ ತುರ್ತುಪರಿಸ್ಥಿತಿ ನಿಜಕ್ಕೂ ಭಾರತದ ಇತಿಹಾಸದಲ್ಲಿ ಒಂದು ಕರಾಳಕಾಲಮಾನ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಆರ್.ಕೆ ಸಿದ್ರಾಮಣ್ಣ ಹೇಳಿದರು.
      ಅವರು ಗುರುವಾರ ಸಂಜೆ ಹಳೇನಗರದ ಬಿಜೆಪಿ ಪಕ್ಷದ ಕಾರ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದ್ದ ತುರ್ತು ಪರಿಸ್ಥಿತಿ ಕರಾಳ ನೆನಪಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅಧಿಕಾರ ದಾಹದಿಂದ ಕಾಂಗ್ರೆಸ್ ಪಕ್ಷದ ನಾಯಕಿ, ಮಾಜಿ ಪ್ರಧಾನಿ ಇಂದಿರಾಗಾಂಧಿಯವರು ಜಾರಿಗೆ ತಂದ ತುರ್ತುಪರಿಸ್ಥಿತಿಯಿಂದಾಗಿ ದೇಶದ ಸಾಮಾನ್ಯ ನಾಗರೀಕರ ಸ್ವಾತಂತ್ರ್ಯ ಹಾಗು ಪತ್ರಿಕಾ ಸ್ವಾತಂತ್ರ್ಯದ ಹರಣವಾಗಿ ಸಂವಿಧಾನದತ್ತವಾದ ಎಲ್ಲಾ ಹಕ್ಕುಗಳನ್ನು ಕಳೆದುಕೊಂಡು ಇಡೀ ದೇಶ ತೊಂದರೆ ಅನುಭವಿಸುವಂತಾಯಿತು. ಇದರ ವಿರುದ್ಧವಾಗಿ ಅಂದು ಜಯಪ್ರಕಾಶ್ ನಾರಾಯಣ್, ಅಟಲ್ ಬಿಹಾರಿ ವಾಜಪೇಯಿ, ಲಾಲ್ ಕೃಷ್ಣ ಅಡ್ವಾಣಿ ಸೇರಿದಂತೆ ಅನೇಕ ರಾಷ್ಟ್ರೀಯ ಹಾಗು ರಾಜ್ಯನಾಯಕರು ಹೋರಾಟ ನಡೆಸಿ ಸೆರೆವಾಸ ಅನುಭವಿಸಿದರು. ನಿರಂತರ ಹೋರಾಟದ ಪರಿಣಾಮ ನಂತರದ ದಿನಗಳಲ್ಲಿ ತುರ್ತುಪರಿಸ್ಥಿತಿಯನ್ನು ಹಿಂಪಡೆಯಲಾಯಿತು ಎಂದರು.
      ಪಕ್ಷದ ಹಿರಿಯರಾದ ಮಧುಕಾನಿಟ್ಕರ್ ಮಾತನಾಡಿ, ತುರ್ತುಪರಿಸ್ಥಿತಿ ವಿರೋಧಿಸಿ  ಸ್ಥಳೀಯವಾಗಿ ನಡೆದ ಹೋರಾಟ ಹಾಗೂ ಅದಕ್ಕಾಗಿ ಹೋರಾಟನಡೆಸಿದವರ ಸ್ಮರಣೆ ಹಾಗೂ ಅಂದಿನ ದಿನಗಳ ಅನುಭವವನ್ನು ಮೆಲಕುಹಾಕಿದರು.  
      ಪಕ್ಷದ ತಾಲೂಕು ಮಂಡಲ ಅಧ್ಯಕ್ಷ ಎಂ. ಪ್ರಭಾಕರ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಬಿ.ಕೆ ಶ್ರೀನಾಥ್, ಜಿ. ಧರ್ಮಪ್ರಸಾದ್, ತಾಲೂಕು ಮಂಡಲ ಕಾರ್ಯದರ್ಶಿ ಚನ್ನೇಶ್, ಮಹಿಳಾ ಘಟಕದ ಅಧ್ಯಕ್ಷೆ ಶೋಭಾ ಪಾಟೀಲ್, ಯುವ ಘಟಕದ ಅಧ್ಯಕ್ಷ ವಿಜಯ್ ಸಿದ್ದಾರ್ಥ್, ಪ್ರಮುಖರಾದ ಟಿ. ವೆಂಕಟೇಶ್, ರುದ್ರಪ್ಪ, ಎಸ್.ಎನ್ ಬಾಲಕೃಷ್ಣ, ವಿಶ್ವನಾಥ್ ಕೋಠಿ, ವಿಶ್ವನಾಥರಾವ್, ರಾಮಲಿಂಗಯ್ಯ, ನರಸಿಂಹಾಚಾರ್, ವಿ. ಕದಿರೇಶ್, ಬಿ.ಎಸ್ ನಾರಾಯಣಪ್ಪ, ಬಸವರಾಜ್, ಶಕುಂತಲ, ಅನ್ನಪೂರ್ಣ, ಮಂಜುಳಾ, ರೇಖಾ ಪದ್ಮಾವತಿ, ಜೆ. ಮೂರ್ತಿ, ರವಿಚಂದ್ರ, ಮಂಜುನಾಥ್, ರಾಮನಾಥ್ ಬರ್ಗೆ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.


ಸಂಗೀತ, ಸಾಹಿತ್ಯ, ಕಲೆಗೆ ವಿಶಿಷ್ಟವಾದ ಶಕ್ತಿ : ಡಾ. ಅನುರಾಧ ಪಟೇಲ್

ಭದ್ರಾವತಿಯಲ್ಲಿ ಚುಂಚಾದ್ರಿ ಮಹಿಳಾ ವೇದಿಕೆವತಿಯಿಂದ ವಿಶ್ವ ಸಂಗೀತ ದಿನದ ಅಂಗವಾಗಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ಸನ್ಮಾನ ಹಾಗು ಬಹುಮಾನ ವಿತರಣೆ ಕಾರ್ಯಕ್ರಮದಲ್ಲಿ ಹಿರಿಯ ಸುಗಮ ಸಂಗೀತ ಕಲಾವಿದ ಎಸ್.ಬಿ ಶಿವಲಿಂಗಪ್ಪ ಸೇರಿದಂತೆ ಇನ್ನಿತರರನ್ನು ಸನ್ಮಾನಿಸಿ ಗೌರವಿಸಲಾಯಿತು.
    ಭದ್ರಾವತಿ, ಜೂ. ೩೦: ಸಂಗೀತ, ಸಾಹಿತ್ಯ, ಕಲೆ ಇವುಗಳು ಮನುಷ್ಯನ ಅವಿಭಾಜ್ಯ ಅಂಗವಾಗಿದ್ದು, ವಿಶಿಷ್ಟವಾದ ಶಕ್ತಿ ಹೊಂದಿವೆ ಎಂದು ಚುಂಚಾದ್ರಿ ಮಹಿಳಾ ವೇದಿಕೆ ಗೌರವಾಧ್ಯಕ್ಷೆ ಡಾ. ಅನುರಾಧ ಪಟೇಲ್ ಹೇಳಿದರು.
      ಅವರು ಗುರುವಾರ ವೇದಿಕೆವತಿಯಿಂದ ವಿಶ್ವ ಸಂಗೀತ ದಿನದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಸನ್ಮಾನ ಹಾಗು ಬಹುಮಾನ ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
      ಸಂಗೀತ, ಸಾಹಿತ್ಯ, ಕಲೆ ಇವುಗಳು ಮನಸ್ಸಿಗೆ ನೆಮ್ಮದಿ ನೀಡುವ ಜೊತೆಗೆ ಮನಸ್ಸುಗಳನ್ನು ಒಂದುಗೂಡಿಸುವ ಶಕ್ತಿ ಹೊಂದಿವೆ. ಇವು ಮನಷ್ಯರಲ್ಲಿ ಮಾತ್ರವಲ್ಲ ಪ್ರಾಣಿ, ಪಕ್ಷಿಗಳಲ್ಲೂ ಅಡಗಿವೆ. ಇವುಗಳಲ್ಲಿ ತೊಡಗಿಸಿಕೊಂಡಾಗ ಮಾತ್ರ ಸಮಾಜದಲ್ಲಿ ಸಂಸ್ಕಾರಯುತವಾದ ಉತ್ತಮ ಬದುಕು ರೂಪಿಸಿಕೊಳ್ಳಲು ಸಾಧ್ಯ ಎಂದರು.
      ಸಂಗೀತ ಶಿಕ್ಷಕಿ ವಿದ್ವಾನ್ ಪುಷ್ಪ ಕೃಷ್ಣಮೂರ್ತಿ ಮಾತನಾಡಿ, ಕೈಗಾರಿಕೆ ನಗರ ಸಂಗೀತ, ಸಾಹಿತ್ಯ, ಕಲೆಗಳ ತವರೂರಾಗಿದೆ. ಇಲ್ಲಿನ ಕಲಾವಿದರು ರಾಜ್ಯ ಹಾಗು ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ಕಲಾವಿದರನ್ನು ಗುರುತಿಸಿ ಪ್ರೋತ್ಸಾಹಿಸಿ ಅಭಿನಂದಿಸುವ ಕಾರ್ಯ ಶ್ಲಾಘನೀಯ ಎಂದರು.
      ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಮಣಿಶೇಖರ್, ಸಂಗೀತ ಶಿಕ್ಷಕಿ ವಿದೂಷಿ ಗಾಯತ್ರಿ, ನಗರಸಭೆ ಮಾಜಿ ಅಧ್ಯಕ್ಷೆ ವಿಶಾಲಾಕ್ಷಿ, ಸೇರಿದಂತೆ ಇನ್ನಿತರರು ಮಾತನಾಡಿದರು. ಹಿರಿಯ ಸುಗಮ ಸಂಗೀತ ಕಲಾವಿದ ಎಸ್.ಬಿ ಶಿವಲಿಂಗಪ್ಪ ಕಾರ್ಯಕ್ರಮ ಉದ್ಘಾಟಿಸಿದರು. ವೇದಿಕೆ ಅಧ್ಯಕ್ಷೆ ಎಂ.ಎಸ್ ಸುಧಾಮಣಿ ಅಧ್ಯಕ್ಷತೆ ವಹಿಸಿದ್ದರು.
      ನಗರಸಭಾ ಸದಸ್ಯ ಮಣಿ ಎಎನ್‌ಎಸ್, ಪತಂಜಲಿ ಯೋಗ ಶಿಕ್ಷಕ ಮಂಜುನಾಥ್, ಪುಷ್ಪಾ ಕೇಶವಮೂರ್ತಿ, ವೇದಿಕೆ ಖಜಾಂಚಿ ಭಾರತಿ ಕುಮಾರ್ ಹಾಗು ನಿರ್ದೇಶಕಿಯರು  ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.  ವೇದಿಕೆ ಕಾರ್ಯದರ್ಶಿ ಲತಾ ಪ್ರಭಾಕರ್ ಸ್ವಾಗತಿಸಿದರು. ನೂತನ್ ನಿರೂಪಿಸಿದರು. ಸಹಕಾರ್ಯದರ್ಶಿ ಶೀಲಾ ರವಿ ವಂದಿಸಿದರು.    


ಪರಿಶುದ್ಧ ಕುಡಿಯುವ ನೀರಿನ ಪೂರೈಕೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯ

ವಿಧಾನಪರಿಷತ್ ಸದಸ್ಯ ಡಿ.ಎಸ್ ಅರುಣ್‌ಗೆ ಮನವಿ

ಭದ್ರಾವತಿ ಕ್ಷೇತ್ರದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ  ಭಾರತರತ್ನ ಸರ್.ಎಂ ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್, ಶ್ರೀ ಡಿ ದೇವರಾಜ ಅರಸು ಜನಸ್ಪಂದನ ವೇದಿಕೆ ಹಾಗು ಸುವರ್ಣ ಮಹಿಳಾ ವೇದಿಕೆ ವತಿಯಿಂದ ವಿಧಾನಪರಿಷತ್ ಸದಸ್ಯ ಡಿ.ಎಸ್ ಅರುಣ್ ಅವರಿಗೆ ಮನವಿ ಸಲ್ಲಿಸಲಾಯಿತು.
    ಭದ್ರಾವತಿ, ಜೂ. ೩೦ : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಭಾರತರತ್ನ ಸರ್.ಎಂ ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್, ಶ್ರೀ ಡಿ ದೇವರಾಜ ಅರಸು ಜನಸ್ಪಂದನ ವೇದಿಕೆ ಹಾಗು ಸುವರ್ಣ ಮಹಿಳಾ ವೇದಿಕೆ ವತಿಯಿಂದ ವಿಧಾನಪರಿಷತ್ ಸದಸ್ಯ ಡಿ.ಎಸ್ ಅರುಣ್ ಅವರಿಗೆ ಮನವಿ ಸಲ್ಲಿಸಲಾಯಿತು.
    ಉಂಬ್ಳೆಬೈಲು ಹಾಗು ತಾಲೂಕಿನ ಕಲ್ಲಹಳ್ಳಿ ಮತ್ತು ೨೮ ಗ್ರಾಮಗಳನ್ನೊಳಗೊಂಡ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿದ್ದು, ಈ ಹಿನ್ನಲೆಯಲ್ಲಿ ಸಮರ್ಪಕವಾದ, ಪರಿಶುದ್ಧವಾದ ಕುಡಿಯುವ ನೀರನ್ನು ಪೂರೈಸಲು ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಮಂಜೂರಾತಿ ಮಾಡಿಸುವುದು. ಕಲ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಉದ್ಯಾನವನ, ರಸ್ತೆ, ಕೆರೆಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಶಾಸಕರ ವಿಶೇಷ ಅನುದಾನವನ್ನು ಬಿಡುಗಡೆಗೊಳಿಸುವಂತೆ ಒತ್ತಾಯಿಸಲಾಗಿದೆ.
    ದೊಣಬಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳಿಗೆ ಸಮರ್ಪಕವಾದ, ಪರಿಶುದ್ಧವಾದ ಕುಡಿಯುವ ನೀರಿನ ಪೂರೈಕೆ ಮಾಡಲು ಕ್ರಮ ಕೈಗೊಳ್ಳುವುದು. ದೊಣಬಘಟ್ಟ, ತಡಸ, ಬಿಳಿಕಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಮಹಿಳೆಯರ ಅನುಕೂಲಕ್ಕಾಗಿ ದೊಣಬಘಟ್ಟದಲ್ಲಿರುವ ಸರ್ಕಾರಿ ಆಸ್ಪತ್ರೆಯನ್ನು ೨೫ ಹಾಸಿಗೆಯುಳ್ಳ ತಾಯಿ ಮತ್ತು ಮಗುವಿನ ಆಸ್ಪತ್ರೆಯನ್ನಾಗಿ ಪರಿವರ್ತಿಸುವುದು. ಕೇಂದ್ರ ಸರ್ಕಾರದ ಮಾದರಿಯಂತೆ ಅಮೃತ್ ೨.೦ ಯೋಜನೆಯನ್ನು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅನುಷ್ಠಾನಕ್ಕೆ ತರುವುದು ಹಾಗು ನಗರಸಭೆ ವ್ಯಾಪ್ತಿ ಜನ್ನಾಪುರ ಸರ್ವೆ ನಂ.೭೦ರ ಸುಮಾರು ೪೫ ಎಕರೆ ೨೦ ಗುಂಟೆ ವಿಸ್ತೀರ್ಣವುಳ್ಳ ಜನ್ನಾಪುರ ಕೆರೆ ಬದಿಯಲ್ಲಿ ರಾಜಕಾಲುವೆ ನಿರ್ಮಿಸಲು ೩ ಕೋ. ರು. ಅನುದಾನ ಬಿಡುಗಡೆಗೊಳಿಸುವಂತೆ ಆಗ್ರಹಿಸಲಾಗಿದೆ.
    ಟ್ರಸ್ಟ್ ಛೇರ್‍ಮನ್, ನಗರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಆರ್. ವೇಣುಗೋಪಾಲ್, ಕಲ್ಲಹಳ್ಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಬಿ. ಆನಂದ್, ಸದಸ್ಯರಾದ ಉಮೇಶ್, ಧರ್ಮಪ್ಪ, ಪುನೀತ್, ಗ್ರಾಮಸ್ಥರಾದ ಬೋಟ್ಯಾನಾಯ್ಕ್, ಕುಮಾರ್, ಕೃಷ್ಣ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.