Sunday, July 24, 2022

ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷರಾಗಿ ಬಿ. ಸಿದ್ದಬಸಪ್ಪ

ಭದ್ರಾವತಿ, ಜು. 25:  ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷರಾಗಿ ಹಳೇನಗರದ ಸಂಚಿಹೊನ್ನಮ್ಮಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನ ಸಹ ಶಿಕ್ಷಕ ಬಿ. ಸಿದ್ದಬಸಪ್ಪ ಆಯ್ಕೆಯಾಗಿದ್ದಾರೆ.
        ಸಿದ್ದಬಸಪ್ಪ ಅವರು ಪ್ರಸ್ತುತ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷರಾಗಿದ್ದು, ಅಲ್ಲದೆ 2 ಬಾರಿ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
      ಸಂಘಟನಾ ಚತುರರಾಗಿರುವ ಸಿದ್ದಬಸಪ್ಪ ಇದೀಗ ಕಡಿಮೆ ಅವಧಿಯಲ್ಲಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗುವ ಮೂಲಕ ಸಾಧನೆ ಮೆರೆದಿದ್ದಾರೆ. 
       ಇವರಿಗೆ  ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ವಿಶ್ವೇಶ್ವರಾಯ ವಿದ್ಯಾಸಂಸ್ಥೆ, ತಾಲೂಕಿನ ಸಮಸ್ತ ಸರ್ಕಾರಿ ನೌಕರರು, ಶಿಕ್ಷಕ ವೃಂದದವರು, ಗಣ್ಯರು ಅಭಿನಂದಿಸಿದ್ದಾರೆ.

ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಎಟಿಎಲ್ ಲ್ಯಾಬ್ ಉದ್ಘಾಟನೆ


ಭದ್ರಾವತಿ ತಾಲೂಕಿನ ದೇವರನರಸೀಪುರ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನೂತನವಾಗಿ ಅಟಲ್ ಟಿಂಕರಿಂಗ್ ಲ್ಯಾಬ್ ಉದ್ಘಾಟಿಸಲಾಯಿತು.
    ಭದ್ರಾವತಿ, ಜು. ೨೪: ತಾಲೂಕಿನ ದೇವರನರಸೀಪುರ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನೂತನವಾಗಿ ಅಟಲ್ ಟಿಂಕರಿಂಗ್ ಲ್ಯಾಬ್ ಉದ್ಘಾಟಿಸಲಾಯಿತು.
    ಆಟ-ಪಾಠದ ಜೊತೆಯಲ್ಲಿ ನವೀನ ಕೌಶಲ್ಯ, ವೈಜ್ಞಾಜಿಕ ತಂತ್ರಜ್ಞಾನ, ಉದ್ಯೋಗ ಸೃಷ್ಟಿ, ನೂತನ ಅವಿಷ್ಕಾರದ ಜೊತೆ ವೈಜ್ಞಾನಿಕ ಮನೋಭಾವ ಬೆಳವಣಿಗೆಯ ಮೂಲಕ ನವೀನ ಭಾರತ ನಿರ್ಮಾಣಕ್ಕಾಗಿ ಎಟಿಎಲ್ ಲ್ಯಾಬ್ ಸಹಕಾರಿ ಆಗಿವೆ.
    ಎರೇಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ವೇತಾ ಮತ್ತು ಅಂತರಗಂಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕವಿತಾ ಲ್ಯಾಬ್ ಉದ್ಘಾಟಿಸಿದರು. ವಸತಿ ಶಾಲೆಯ ಪ್ರಾಂಶುಪಾಲ ಬಿ. ಬಸವರಾಜಪ್ಪ ಅಧ್ಯಕ್ಷತೆ ವಹಿಸಿದ್ದರು.
    ಅಂತರಗಂಗೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಶೋಭಾ, ಸದಸ್ಯರಾದ ನಾಗೇಶ್, ರವಿ, ಆನಂದ್, ಕರ್ನಾಟಕ ಪಬ್ಲಿಕ್ ಶಾಲೆಯ ಮುಖ್ಯೋಪಾಧ್ಯಾಯರು, ದೇವರನರಸೀಪುರ ಗ್ರಾಮ ಪಂಚಾಯಿತಿ ಸದಸ್ಯರು, ವಸತಿ ಶಾಲೆಯ ಶಿಕ್ಷಕ, ಸಿಬ್ಬಂದಿ ವರ್ಗದವರು, ಪೋಷಕರು ಉಪಸ್ಥಿತರಿದ್ದರು. ಸಹ ಶಿಕ್ಷಕರಾದ ಬಿಂದು ನಿರೂಪಿಸಿದರು. ಕೆ. ರಂಗನಾಥ್ ಸ್ವಾಗತಿಸಿ ಕೃಷ್ಣಪ್ರಸಾದ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ನಿಲಯಪಾಲಕ ಶಿವಕುಮಾರ್ ವಂದಿಸಿದರು.

ಅಸಂಘಟಿತ ಕಾರ್ಮಿಕರು ಸರ್ಕಾರದ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಿ : ಕೆ.ಎನ್ ಶ್ರೀಹರ್ಷ

ಭಾರತೀಯ ಮಜ್ದೂರ್ ಸಂಘ, ಶಿವಮೊಗ್ಗ ಮತ್ತು ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರು ಸಂಘದ ವತಿಯಿಂದ ಭದ್ರಾವತಿಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಹಾಗು ಗುರುತಿನ ಚೀಟಿ ವಿತರಣೆ ಕಾರ್ಯಕ್ರಮದಲ್ಲಿ ಹಮ್ಮಿಕೊಳ್ಳಲಾಗಿತ್ತು.
    ಭದ್ರಾವತಿ, ಜು. ೨೪: ಅಸಂಘಟಿತ ಕಾರ್ಮಿಕರು ಸರ್ಕಾರದ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ಎನ್ ಶ್ರೀಹರ್ಷ ಹೇಳಿದರು.
    ಅವರು ಭಾನುವಾರ ಭಾರತೀಯ ಮಜ್ದೂರ್ ಸಂಘ, ಶಿವಮೊಗ್ಗ ಮತ್ತು ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರು ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ನೂತನ ಪದಾಧಿಕಾರಿಗಳ ಆಯ್ಕೆ ಹಾಗು ಗುರುತಿನ ಚೀಟಿ ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
    ದೇಶದಲ್ಲಿ ಶ್ರಮ ಜೀವಿಗಳಾದ ಅಸಂಘಟಿತ ಕಾರ್ಮಿಕರು ಕೊನೆಯವರೆಗೂ ಬಡತನದಲ್ಲಿಯೇ ಬದುಕು ಸಾಗಿಸುವಂತಾಗಿದೆ. ಪ್ರಸ್ತುತ ಸರ್ಕಾರ ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಕೋಟ್ಯಾಂತರ ರು. ಹಣ ಮೀಸಲಿಡುತ್ತಿದೆ. ಈ ಹಿನ್ನಲೆಯಲ್ಲಿ ಕಾರ್ಮಿಕರು ಸರ್ಕಾರದಿಂದ ಕಡ್ಡಾಯವಾಗಿ ಗುರುತಿನ ಪಡೆದುಕೊಳ್ಳಬೇಕು. ಆ ಮೂಲಕ ಸರ್ಕಾರದ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದರು.
    ಭಾರತೀಯ ಮಜ್ದೂರು ಸಂಘದ ಎಚ್.ಎಲ್ ವಿಶ್ವನಾಥ್ ಮಾತನಾಡಿ,  ಅಸಂಘಟಿತ ಕಾರ್ಮಿಕರು ಕೇವಲ ಸರ್ಕಾರದ ಸೌಲಭ್ಯಗಳನ್ನು ಪಡೆಯುವ ಉದ್ದೇಶದಿಂದ ಸಂಘಟಿತರಾಗಬಾರದು. ನಾವು ಮಾಡುವ ಕೆಲಸ ದೇಶಕ್ಕಾಗಿ ಎಂಬ ಅಭಿಮಾನದ ಮೇಲೆ ಸಂಘಟಿತರಾಗುವ ಮೂಲಕ ದೇಶ ಸೇವೆಗೂ ಸಿದ್ದ ಎಂಬುದನ್ನು ಎತ್ತಿ ಹಿಡಿಯಬೇಕೆಂದರು.
    ನೂತನ ಪದಾಧಿಕಾರಿಗಳು :
    ಭಾರತೀಯ ಮಜ್ದೂರು ಸಂಘ ತಾಲೂಕು ಶಾಖೆಯ ನೂತನ ಅಧ್ಯಕ್ಷರಾಗಿ ಮಂಜುನಾಥ್, ಉಪಾಧ್ಯಕ್ಷರಾಗಿ ರಘು, ಪ್ರಧಾನ ಕಾರ್ಯದರ್ಶಿಯಾಗಿ ಪಚ್ಚಪ್ಪ, ಖಜಾಂಚಿಯಾಗಿ ಫ್ಯಾಟ್ರಿಕ್, ಕಾರ್ಯದರ್ಶಿಯಾಗಿ ಪ್ರವೀಣ್‌ಕುಮಾರ್, ಸಂಘಟನಾ ಕಾರ್ಯದರ್ಶಿಗಳಾಗಿ ರಂಗಸ್ವಾಮಿ ಮತ್ತು ಡಿ. ಜೈರಾಮು ಆಯ್ಕೆಯಾದರು.
    ಕಾರ್ಯಕ್ರಮದಲ್ಲಿ ಅಸಂಘಟಿತ ಕಾರ್ಮಿಕರಿಗೆ ಗುರುತಿನ ಚೀಟಿಗಳನ್ನು ವಿತರಿಸಲಾಯಿತು. ವೇದಿಕೆಯಲ್ಲಿ ಮಂಜುನಾಥ್, ಪಚ್ಚಪ್ಪ, ಫ್ಯಾಟ್ರಿಕ್, ರಘು ಮತ್ತು ರಾಜು ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಜಗದೀಶ್ ನಿರೂಪಿಸಿದರು.

ಜೆಡಿಎಸ್ ಯುವಘಟಕದ ಜಿಲ್ಲಾಧ್ಯಕ್ಷರ ಹುಟ್ಟುಹಬ್ಬ : ರೋಗಿಗಳಿಗೆ ಬ್ರೆಡ್, ಹಣ್ಣು ವಿತರಣೆ

ಜಾತ್ಯತೀತ ಜನತಾದಳ ಯುವ ಘಟಕದ ಜಿಲ್ಲಾಧ್ಯಕ್ಷ ಮಧುಕುಮಾರ್ ಅವರ ಹುಟ್ಟುಹಬ್ಬದ ಅಂಗವಾಗಿ ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಬ್ರೆಡ್ ಮತ್ತು ಹಣ್ಣು ವಿತರಿಸಲಾಯಿತು.
    ಭದ್ರಾವತಿ, ಜು. ೨೪ : ಜಾತ್ಯತೀತ ಜನತಾದಳ ಯುವ ಘಟಕದ ಜಿಲ್ಲಾಧ್ಯಕ್ಷ ಮಧುಕುಮಾರ್ ಅವರ ಹುಟ್ಟುಹಬ್ಬದ ಅಂಗವಾಗಿ ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಬ್ರೆಡ್ ಮತ್ತು ಹಣ್ಣು ವಿತರಿಸಲಾಯಿತು.
    ಹಿರಿಯ ನಾಗರೀಕರ ಆರೈಕೆ ಕೇಂದ್ರದ ವೃದ್ಧರಿಗೆ ಹಾಗು ನ್ಯೂಟೌನ್ ಸಿದ್ದಾರ್ಥ ಅಂಧರ ಕೇಂದ್ರದ ವಿಕಲಚೇತನರಿಗೆ ಬಟ್ಟೆ ವಿತರಿಸಲಾಯಿತು. ರೋಟರಿ ಕ್ಲಬ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವನ್ನು ಜೆಡಿಎಸ್ ಮುಖಂಡರಾದ ಶಾರದ ಅಪ್ಪಾಜಿ ಉದ್ಘಾಟಿಸಿದರು.
    ಮಧುಕುಮಾರ್ ಅವರ ತಾಯಿ, ನಗರಸಭಾ ಸದಸ್ಯೆ ವಿಜಯ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಮಣಿಶೇಖರ್, ಜೆಡಿಎಸ್ ತಾಲೂಕು ಅಧ್ಯಕ್ಷ ಆರ್. ಕರುಣಾಮೂರ್ತಿ, ಮುಖಂಡರಾದ ಡಿ.ಟಿ ಶ್ರೀಧರ್. ಎನ್. ರಾಮಕೃಷ್ಣ, ಉಮೇಶ್ ಸುರಗಿತೋಪು ಸೇರಿದಂತೆ ಜೆಡಿಎಸ್ ಪಕ್ಷದ ಪ್ರಮುಖರು, ಕಾರ್ಯಕರ್ತರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ನಿವೃತ್ತ ಎಎಸ್‌ಐ ಟಿ. ದೇವದಾಸ್ ನಿಧನ

ಟಿ. ದೇವದಾಸ್
    ಭದ್ರಾವತಿ, ಜು. ೨೪: ನಗರಸಭೆ ವ್ಯಾಪ್ತಿಯ ಉಜ್ಜನಿಪುರ ನಿವಾಸಿ, ನಿವೃತ್ತ ಎಎಸ್‌ಐ ಟಿ. ದೇವದಾಸ್(೬೭) ಭಾನುವಾರ ಬೆಳಿಗ್ಗೆ ನಿಧನ ಹೊಂದಿದರು.
    ಪತ್ನಿ, ಓರ್ವ ಪುತ್ರ ಹಾಗು ನಾಲ್ವರು ಪುತ್ರಿಯರು ಇದ್ದರು. ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ್ದರು. ತೆಲುಗು ಕ್ರಿಶ್ಚಿಯನ್ ಅಸೋಸಿಯೇಷನ್ ಗೌರವಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು.
    ಮೃತರ ಅಂತ್ಯಕ್ರಿಯೆ ಸಂಜೆ ನಗರದ ಬೈಪಾಸ್ ರಸ್ತೆ ಮಿಲ್ಟ್ರಿಕ್ಯಾಂಪ್ ಸಮೀಪದ ಪ್ರೊಟೆಸ್ಟೆಂಟ್ ಕ್ರೈಸ್ತ ಸಮಾಧಿಯಲ್ಲಿ ನೆರವೇರಿತು. ನಗರದ ವಿವಿಧ ಕ್ರೈಸ್ತ ಸಂಘಟನೆಗಳ ಪ್ರಮುಖರು, ಗಣ್ಯರು ಸಂತಾಪ ಸೂಚಿಸಿದ್ದಾರೆ.