Tuesday, August 16, 2022

ಬಿವೈಆರ್ ಹುಟ್ಟುಹಬ್ಬ ವಿಶೇಷ ಪೂಜೆ

ಸಂಸದ ಬಿ.ವೈ ರಾಘವೇಂದ್ರ ಹುಟ್ಟುಹಬ್ಬ ಹಿನ್ನಲೆಯಲ್ಲಿ ಮಂಗಳವಾರ ಭದ್ರಾವತಿ ಹೊಸಮನೆ ಶ್ರೀ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನದಲ್ಲಿ ಬಿಜೆಪಿ ಪ್ರಮುಖರು ವಿಶೇಷ ಪೂಜೆ ಸಲ್ಲಿಸಿದರು.
    ಭದ್ರಾವತಿ, ಆ. ೧೬: ಸಂಸದ ಬಿ.ವೈ ರಾಘವೇಂದ್ರ ಹುಟ್ಟುಹಬ್ಬ ಹಿನ್ನಲೆಯಲ್ಲಿ ಮಂಗಳವಾರ ಹೊಸಮನೆ ಶ್ರೀ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನದಲ್ಲಿ ಬಿಜೆಪಿ ಪ್ರಮುಖರು ವಿಶೇಷ ಪೂಜೆ ಸಲ್ಲಿಸಿದರು.
    ಸಂಸದರ ಹೆಸರಿನಲ್ಲಿ ಕುಂಕುಂಮಾರ್ಚನೆ ನೆರವೇರಿಸಿ ಇನ್ನೂ ಹೆಚ್ಚಿನ ಆಯುರಾರೋಗ್ಯ ಕರುಣಿಸಲಿ ಎಂದು ಪ್ರಾರ್ಥಿಸಲಾಯಿತು. ಶಿವಮೊಗ್ಗದಲ್ಲಿ ಸೋಮವಾರ ನಡೆದ ಅಹಿತಕರ ಘಟನೆಗಳ ಹಿನ್ನಲೆಯಲ್ಲಿ ಮುಂಜಾಗ್ರತೆ ಕ್ರಮವಾಗಿ ನಗರಸಭೆ ವ್ಯಾಪ್ತಿ ಹಾಗು ಕೆಲ ಗ್ರಾಮಾಂತರ ಪ್ರದೇಶದ ವ್ಯಾಪ್ತಿ ೧೪೪ ಕಲಂರನ್ವಯ ನಿಷೇಧಾಜ್ಞೆ ಜಾರಿಗೊಳಿಸಿರುವ ಹಿನ್ನಲೆಯಲ್ಲಿ ಸಂಸದರ ಹುಟ್ಟುಹಬ್ಬವನ್ನು ಈ ಬಾರಿ ಸರಳವಾಗಿ ಆಚರಿಸಲಾಯಿತು.
    ಪಕ್ಷದ ಪ್ರಮುಖರಾದ ಜಿ. ಆನಂದ್‌ಕುಮಾರ್, ಮಂಗೋಟೆ ರುದ್ರೇಶ್, ಎಂ. ಮಂಜುನಾಥ್, ನಾಗರಾಜ್, ನರೇಂದ್ರ, ಮುರುಗನ್, ಬಿ.ಎಸ್ ಶ್ರೀನಾಥ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಹಲ್ಲೆಗೊಳಗಾಗಿರುವ ಸುನಿಲ್ ಬಜರಂಗದಳ ಕಾರ್ಯಕರ್ತ : ರಾಘವನ್ ವಡಿವೇಲು

ರಾಘವನ್ ವಡಿವೇಲು
    ಭದ್ರಾವತಿ, ಆ. ೧೬: ನಗರಸಭೆ ವ್ಯಾಪ್ತಿಯ ನೆಹರು ನಗರದ ನಿವಾಸಿ ಸುನಿಲ್ ಬಜರಂಗದಳ ಕಾರ್ಯಕರ್ತನಾಗಿದ್ದು, ಮಂಗಳವಾರ ಬೆಳಿಗ್ಗೆ ಮುಸ್ಲಿಂ ಸಮುದಾಯದ ಕೆಲವರು ಈತನ ಮೇಲೆ ಹಲ್ಲೆ ನಡೆಸಿದ್ದಾರೆ. ಪೊಲೀಸರು ಸುನಿಲ್ ನೀಡಿದ ಹೇಳಿಕೆಯನ್ನು ದೂರಿನಲ್ಲಿ ಸರಿಯಾಗಿ ದಾಖಲಿಸಿಕೊಂಡಿಲ್ಲ ಎಂದು ಬಜರಂಗದಳ ಜಿಲ್ಲಾ ಸಹ ಸಂಚಾಲಕ ರಾಘವನ್ ವಡಿವೇಲು ಆರೋಪಿಸಿದ್ದಾರೆ.
    ಪತ್ರಿಕೆಗೆ ಮಾಹಿತಿ ನೀಡಿದ ಅವರು, ಹಲ್ಲೆಗೊಳಗಾಗಿ ನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸುನಿಲ್ ಮೂಲತಃ ಬಜರಂಗದಳ ಕಾರ್ಯಕರ್ತನಾಗಿದ್ದು, ಇದನ್ನು ಸುನಿಲ್ ಸಹ ಟಿ.ವಿ ಮಾಧ್ಯಮದವರ ಮುಂದೆ ಸ್ಪಷ್ಟಪಡಿಸಿದ್ದಾನೆ. ಈತನ ಮೇಲೆ ವಿನಾಕಾರಣ ಮುಸ್ಲಿಂ ಸಮುದಾಯದ ಕೆಲವರು ಹಲ್ಲೆ ನಡೆಸಿದ್ದಾರೆ.
    ಆದರೆ ಕೆಲವರು ಸುನಿಲ್ ಯಾವುದೇ ಸಂಘಟನೆ, ಪಕ್ಷಕ್ಕೆ ಸೇರಿಲ್ಲ ಎಂದು ಹೇಳುವ ಮೂಲಕ ಈ ಪ್ರಕರಣದ ದಿಕ್ಕು ತಪ್ಪಿಸುವ ನಿಟ್ಟಿನಲ್ಲಿ ತೊಡಗಿದ್ದಾರೆ.  ಪೊಲೀಸರು ಸುನಿಲ್ ಹೇಳಿಕೆಯನ್ನು ಸರಿಯಾಗಿ ದಾಖಲಿಸಿಕೊಂಡು ತನಿಖೆ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಮುಸ್ಲಿಂ ಸಮಾಜದ ಕೆಲ ಗೂಂಡಾಗಳಿಂದ ಸಮಾಜದಲ್ಲಿ ಆಶಾಂತಿ ವಾತಾರಣ : ಕೆ.ಎಸ್ ಈಶ್ವರಪ್ಪ

ಮಾಜಿ ಉಪಮುಖ್ಯಮಂತ್ರಿ ಕೆ.ಎಸ್ ಈಶ್ವರಪ್ಪ ಭದ್ರಾವತಿ ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಹಲ್ಲೆಗೊಳಗಾಗಿ ಚಿಕಿತ್ಸೆ ಪಡೆಯುತ್ತಿರುವ ನೆಹರು ನಗರದ ನಿವಾಸಿ, ಯುವಕ ಸುನಿಲ್ ಆರೋಗ್ಯ ವಿಚಾರಿಸಿದರು.
    ಭದ್ರಾವತಿ, ಆ. ೧೬: ರಾಜ್ಯದಲ್ಲಿ ಹಿಂದೂ ಮುಸ್ಲಿಂ ಎಲ್ಲರೂ ಒಗ್ಗಟ್ಟಾಗಿ ಬದುಕಬೇಕು. ಮುಸ್ಲಿಂ ಸಮುದಾಯದಲ್ಲಿನ ಕೆಲವು ಗೂಂಡಾಗಳಿಂದ ಸಮಾಜದಲ್ಲಿ ಆಶಾಂತಿ ವಾತಾವರಣ ನಿರ್ಮಾಣವಾಗುತ್ತಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್ ಈಶ್ವರಪ್ಪ ಆರೋಪಿಸಿದರು.
    ಅವರು ಮಂಗಳವಾರ ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಹಲ್ಲೆಗೊಳಗಾಗಿ ಚಿಕಿತ್ಸೆ ಪಡೆಯುತ್ತಿರುವ ನೆಹರು ನಗರದ ನಿವಾಸಿ, ಯುವಕ ಸುನಿಲ್ ಆರೋಗ್ಯ ವಿಚಾರಿಸಿ ನಂತರ ಮಾತನಾಡಿದರು.


    ತಪ್ಪು ಮಾಡಿದ ಯಾರೇ ಆಗಲಿ ಅವರಿಗೆ ಶಿಕ್ಷೆ ವಿಧಿಸಬೇಕು. ರಾಜ್ಯದಲ್ಲಿ ಪೊಲೀಸರು ಹೆಚ್ಚಿನ ಶ್ರಮವಹಿಸಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಆದರೂ ಮುಸ್ಲಿಂ ಸಮುದಾಯದಲ್ಲಿನ ಕೆಲವು ಗೂಂಡಾಗಳು ಆಶಾಂತಿ ವಾತಾವರಣ ಸೃಷ್ಟಿಸುತ್ತಿದ್ದಾರೆ. ಇಂತಹವರಿಗೆ ಮುಸ್ಲಿಂ ಸಮುದಾಯದಲ್ಲಿನ ಹಿರಿಯರು ಬುದ್ಧಿ ಹೇಳಬೇಕು.  ಇಲ್ಲವಾದಲ್ಲಿ ಇವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.
    ಹಲ್ಲೆಗೊಳಗಾಗಿರುವ ಸುನಿಲ್‌ಗೆ ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದಲ್ಲಿ ಕಲ್ಪಿಸಿಕೊಡುವ ಭರವಸೆ ನೀಡಿ, ಈ ರೀತಿಯ ಘಟನೆಗಳು ನಡೆಯದಂತೆ ಎಚ್ಚರವಹಿಸಬೇಕೆಂದರು.
    ಬಿಜೆಪಿ ಪಕ್ಷದ ಪ್ರಮುಖರಾದ ಡಿ.ಟಿ ಮೇಘರಾಜ್, ಬಿ.ಕೆ ಶ್ರೀನಾಥ್, ಶಿವರಾಜ್, ಮಂಗೋಟೆ ರುದ್ರೇಶ್, ಜಿ. ಧರ್ಮಪ್ರಸಾದ್, ಎಂ. ಪ್ರಭಾಕರ್, ಕೆ.ಇ ಕಾಂತೇಶ್, ಜಿ. ಆನಂದಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ನೆಹರು ನಗರದಲ್ಲಿ ಯುವಕನ ಮೇಲೆ ಹಲ್ಲೆ : ವ್ಯಾಪಕ ಅಪಪ್ರಚಾರ

ಭದ್ರಾವತಿ ನಗರಸಭೆ ವ್ಯಾಪ್ತಿಯ ನೆಹರು ನಗರದಲ್ಲಿ ಮಂಗಳವಾರ ಬೆಳಿಗ್ಗೆ ಸುನಿಲ್ ಎಂಬಾತನ ಮೇಲೆ ಹಲ್ಲೆ ನಡೆದಿದ್ದು, ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದು.
    ಭದ್ರಾವತಿ, ಆ. ೧೬: ನಗರಸಭೆ ವ್ಯಾಪ್ತಿಯ ನೆಹರು ನಗರದಲ್ಲಿ ಮಂಗಳವಾರ ಬೆಳಿಗ್ಗೆ ಯುವಕನೋರ್ವನ ಮೇಲೆ ಹಲ್ಲೆ ನಡೆದಿದ್ದು, ಈ ಸಂಬಂಧ ಹಳೇನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
    ಡಿಚ್ಚಿ ಎಂಬಾತ ಹಲ್ಲೆ ನಡೆಸಿದ್ದು, ಹಲ್ಲೆಗೊಳಗಾಗಿರುವ ಸುನಿಲ್ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದಾನೆ.  ಹಲ್ಲೆಗೆ ಯಾವುದೇ ನಿಖರವಾದ ಕಾರಣ ದೂರಿನಲ್ಲಿ ದಾಖಲಿಸಿಲ್ಲ.
    ನಗರಸಭೆ ವಾರ್ಡ್ ನಂ.೧೭ರ ನೆಹರು ನಗರದಲ್ಲಿರುವ ರಾಜೇಶ್ವರಿ ದೇವಸ್ಥಾನ ಸಮೀಪದ ನಿವಾಸಿಯಾಗಿರುವ ಸುನಿಲ್ ಅವರ ಮನೆಯ ಮುಂದಿನ ರಸ್ತೆಯಲ್ಲಿ ಬೆಳಿಗ್ಗೆ ೮.೩೦ರ ಸಮಯದಲ್ಲಿ ಕೆಲಸಕ್ಕೆ ಹೋಗುತ್ತಿದ್ದಾಗ ಡಿಚ್ಚಿ ಏಕಾಏಕಿ ಹಲ್ಲೆ ನಡೆಸಿದ್ದು, ಈ ಸಂದರ್ಭದಲ್ಲಿ ಚಟಾಕು ಎಂಬುವವನು ಬಂದು ಹಲ್ಲೆ ತಪ್ಪಿಸಿದ್ದಾನೆ. ನಂತರ ಹಲ್ಲೆಗೊಳಗಾದ ಸುನಿಲ್‌ನನ್ನು ಈತನ ಸಹೋದರ ಸುಮನ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ.
    ವ್ಯಾಪಕ ಅಪಪ್ರಚಾರ :
    ಸುನಿಲ್ ಯಾವುದೇ ಪಕ್ಷದ ಅಥವಾ ಸಂಘಟನೆ ಕಾರ್ಯಕರ್ತನಲ್ಲ ಎನ್ನಲಾಗಿದೆ. ಆದರೂ ಈ ನಡುವೆ ಬಜರಂಗದಳ ಪ್ರಮುಖರು ಆಸ್ಪತ್ರೆಗೆ ತೆರಳಿ ಸುನಿಲ್ ಬಜರಂಗದಳ ಕಾರ್ಯಕರ್ತ ಎಂದು ಹೇಳಿಕೊಳ್ಳುತ್ತಿದ್ದು, ಈ ನಡುವೆ ಡಿಚ್ಚಿ ಜೊತೆಗೆ ೩-೪ ಜನ ಹಲ್ಲೆ ನಡೆಸಿದ್ದಾರೆಂದು ಅಪಪ್ರಚಾರ ನಡೆಯುತ್ತಿದೆ. ಅಲ್ಲದೆ ಈ ಘಟನೆಯನ್ನು ಹಿಂದೂ ಮತ್ತು ಮುಸ್ಲಿಂ ನಡುವೆ ನಡೆದಿರುವ ಕೋಮು ಗಲಭೆಯಾಗಿ ಬಿಂಬಿಸಲು ಯತ್ನಿಸಲಾಗುತ್ತಿದೆ. ಇದರಿಂದಾಗಿ ಕ್ಷೇತ್ರದ ನಿವಾಸಿಗಳಲ್ಲಿ ಭಯದ ವಾತಾವರಣ ಉಂಟಾಗಿದೆ.
    ಶಿವಮೊಗ್ಗ ನಗರದಲ್ಲಿ ಉಂಟಾಗಿರುವ ಅಹಿತಕರ ಘಟನೆ ಹಿನ್ನಲೆಯಲ್ಲಿ ಈಗಾಗಲೇ ತಾಲೂಕಿನ ನಗರಸಭೆ ವ್ಯಾಪ್ತಿ ಹಾಗು ಕೆಲವು ಗ್ರಾಮಾಂತರ ಭಾಗದಲ್ಲಿ  ಸೋಮವಾರ ಕಲಂ ೧೪೪ರನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ನಡುವೆ ಈ ಬೆಳವಣಿಗೆಯಿಂದಾಗಿ ಪೊಲೀಸರು ಸಹ ಆತಂಕಕ್ಕೆ ಒಳಗಾಗಿದ್ದಾರೆ.