Tuesday, October 11, 2022

ಶ್ರೀ ಮಹಾಗಣಪತಿ ದೇವಸ್ಥಾನದ ಸಮುದಾಯ ಭವನ ಉದ್ಘಾಟನೆ

ಭದ್ರಾವತಿ ನಗರಸಭೆ ವಾರ್ಡ್ ನಂ.೨೯ರ ಹೊಸ ಸಿದ್ದಾಪುರ ಗ್ರಾಮದಲ್ಲಿ ಮಂಗಳವಾರ ನಡೆದ ಶ್ರೀ ಮಹಾಗಣಪತಿ ದೇವಸ್ಥಾನದ ಸಮುದಾಯ ಭವನ ಉದ್ಘಾಟನಾ ಕಾರ್ಯಕ್ರಮದಲ್ಲಿ  ಸಂಸದ ಬಿ.ವೈ ರಾಘವೇಂದ್ರ ಮತ್ತು ವಿಧಾನಪರಿಷತ್ ಸದಸ್ಯ ಎಸ್. ರುದ್ರೇಗೌಡ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
    ಭದ್ರಾವತಿ, ಅ. ೧೧: ನಗರಸಭೆ ವಾರ್ಡ್ ನಂ.೨೯ರ ಹೊಸ ಸಿದ್ದಾಪುರ ಗ್ರಾಮದ ಶ್ರೀ ಮಹಾಗಣಪತಿ ದೇವಸ್ಥಾನದ ಸಮುದಾಯ ಭವನ ಮಂಗಳವಾರ ಸಂಸದ ಬಿ.ವೈ ರಾಘವೇಂದ್ರ ಉದ್ಘಾಟಿಸಿದರು.
    ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮಠ-ಮಂದಿರ, ಸಂಘ-ಸಂಸ್ಥೆಗಳ ಸಮುದಾಯ ಭವನ ನಿರ್ಮಾಣಕ್ಕೆ ಬಿ.ಎಸ್ ಯಡಿಯೂರಪ್ಪನವರ ಕೊಡುಗೆ ಅಪಾರವಾಗಿದೆ. ಭದ್ರಾವತಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿಯೇ ಸುಮಾರು ೬೦ ರಿಂದ ೭೦ ಕೋ. ರು. ಅನುದಾನ ತಮ್ಮ ಅಧಿಕಾರದ ಅವಧಿಯಲ್ಲಿ ಬಿಡುಗಡೆಗೊಳಿಸಿದ್ದರು ಎಂದರು.
    ವಿಧಾನಪರಿಷತ್ ಸದಸ್ಯ ಎಸ್. ರುದ್ರೇಗೌಡ, ನಗರಸಭಾ ಸದಸ್ಯೆ ನಾಗರತ್ನ ಅನಿಲ್‌ಕುಮಾರ್, ಶ್ರೀ ಮಹಾಗಣಪತಿ ದೇವಸ್ಥಾನ ಧಾರ್ಮಿಕ ಸೇವಾ ಟ್ರಸ್ಟ್ ಅಧ್ಯಕ್ಷ ಮೈಲಾರಪ್ಪ, ಬಿಜೆಪಿ ಪ್ರಮುಖರಾದ ಜಿ. ಧರ್ಮಪ್ರಸಾದ್, ಎಸ್. ಕುಮಾರ್, ಕೂಡ್ಲಿಗೆರೆ ಹಾಲೇಶ್, ಮಂಗೋಟೆ ರುದ್ರೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಜನಜಾಗೃತಿ ಸಮಾವೇಶ, ನವಜೀವನ ಸಮಿತಿ ಸದಸ್ಯರ ಅಭಿನಂದನಾ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ವತಿಯಿಂದ ಭದ್ರಾವತಿ ತಾಲೂಕಿನ ನಾಗತಿಬೆಳಗಲು ವಲಯದ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಜನಜಾಗೃತಿ ಸಮಾವೇಶ ಮತ್ತು ನವಜೀವನ ಸಮಿತಿ ಸದಸ್ಯರ ಅಭಿನಂದನಾ ಕಾರ್ಯಕ್ರಮ ಜಿ. ಆನಂದಕುಮಾರ್, ಆರ್. ಕರುಣಾಮೂರ್ತಿ ಸೇರಿದಂತೆ ಇನ್ನಿತರರು ಉದ್ಘಾಟಿಸಿದರು.
    ಭದ್ರಾವತಿ, ಅ. ೧೧:  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ವತಿಯಿಂದ ತಾಲೂಕಿನ ನಾಗತಿಬೆಳಗಲು ವಲಯದ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಜನಜಾಗೃತಿ ಸಮಾವೇಶ ಮತ್ತು ನವಜೀವನ ಸಮಿತಿ ಸದಸ್ಯರ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
    ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ಜಿ. ಆನಂದ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರಾದ ಆರ್. ಕರುಣಾಮೂರ್ತಿ, ಜಯರಾಂ ಗೊಂದಿ, ಶ್ರೀ ನಂಜುಂಡೇಶ್ವರ ದೇವಸ್ಥಾನ ಆಡಳಿತ ಮಂಡಳಿ ಕಾರ್ಯದರ್ಶಿ ನಂಜುಂಡಪ್ಪ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ತಾಲೂಕು ಯೋಜನಾಧಿಕಾರಿ ಪ್ರಕಾಶ್, ಮಾಧವ, ನಾಗತಿಬೆಳಗಲು ಗ್ರಾಮಪಂಚಾಯಿತಿ ಉಪಾಧ್ಯಕ್ಷ ದಿನೇಶ್, ಒಕ್ಕೂಟದ ಅಧ್ಯಕ್ಷೆ ಭಾರತಿ, ಮೇಲ್ವಿಚಾರಕ ಶ್ರೀನಿವಾಸ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.  

ದೇಶಕ್ಕೆ ರೋಟರಿ ಕೊಡುಗೆ ಅನನ್ಯ : ಸಂಸದ ಬಿ.ವೈ ರಾಘವೇಂದ್ರ


ಭದ್ರಾವತಿ ನಗರದ ಉಂಬ್ಳೆಬೈಲು ರಸ್ತೆಯಲ್ಲಿ ನೂತನವಾಗಿ ನಿರ್ಮಿಸಿರುವ ರೋಟರಿ ಸಮುದಾಯ ಭವನ ಮಂಗಳವಾರ ಸಂಸದ ಬಿ.ವೈ ರಾಘವೇಂದ್ರ ಉದ್ಘಾಟಿಸಿದರು. 
    ಭದ್ರಾವತಿ, ಅ. ೧೧ :  ರೋಟರಿ ಸಂಸ್ಥೆ ಸೇವಾ ಕಾರ್ಯದ ಮೂಲಕ ದೇಶಕ್ಕೆ ತನ್ನದೇ ಆದ ಕೊಡುಗೆಯನ್ನು ನೀಡುತ್ತಿದ್ದು, ಇಂತಹ ಸಂಸ್ಥೆ ಮತ್ತಷ್ಟು ಸದೃಢವಾಗಿ ಬೆಳೆಯಲು ಪ್ರತಿಯೊಬ್ಬರ ಸಹಕಾರ ಮುಖ್ಯವಾಗಿದೆ ಎಂದು ಸಂಸದ ಬಿ.ವೈ ರಾಘವೇಂದ್ರ ಹೇಳಿದರು.
    ಅವರು ಮಂಗಳವಾರ ನಗರದ ಉಂಬ್ಳೆಬೈಲು ರಸ್ತೆಯಲ್ಲಿ ನೂತನವಾಗಿ ನಿರ್ಮಿಸಿರುವ ರೋಟರಿ ಸಮುದಾಯ ಭವನ ಉದ್ಘಾಟಿಸಿ ಮಾತನಾಡಿ,  ಅಂತರಾಷ್ಟ್ರೀಯ ಮಟ್ಟದ ಸಂಸ್ಥೆಯಾಗಿರುವ ರೋಟರಿಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿರುವ ಬಹಳಷ್ಟು ಮಂದಿ ಇದ್ದು, ಇವರೆಲ್ಲರೂ ತಮ್ಮ ಬಿಡುವಿನ ಸಮಯದಲ್ಲಿ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುತ್ತಿರುವುದು ಹೆಮ್ಮೆಯ ವಿಚಾರವಾಗಿದೆ. ಈ ಸಂಸ್ಥೆಯ ಸೇವಾ ಕಾರ್ಯಗಳಿಗೆ ಪ್ರಧಾನಿ ನರೇಂದ್ರ ಮೋದಿ ಸಹ ಪ್ರಶಂಸೆ ವ್ಯಕ್ತಪಡಿಸಿದ್ದಾರೆ ಎಂದರು.
    ಸರ್ಕಾರದ ಅನುದಾನ ಹಾಗು ದಾನಿಗಳ ಸಹಕಾರದೊಂದಿಗೆ ಇಲ್ಲಿನ ರೋಟರಿ ಸಂಸ್ಥೆಯವರು ತಮ್ಮ ಸ್ವಂತ ಮನೆಯನ್ನು ನಿರ್ಮಿಸುವಂತೆ ಹಣ ವ್ಯರ್ಥವಾಗದಂತೆ ಸುಸಜ್ಜಿತವಾದ ಸಮುದಾಯ ಭವನ ನಿರ್ಮಿಸಿಕೊಂಡಿದ್ದಾರೆ. ಈ ಹಿನ್ನಲೆಯಲ್ಲಿ ಸಂಸ್ಥೆಯವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.
    ಪ್ರಸ್ತುತ ಎಲ್ಲಾ ಕ್ಷೇತ್ರಗಳಲ್ಲೂ ಭಾರತ ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಳವಣಿಗೆ ಸಾಧಿಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿಯವರ ದೃಢ ನಿರ್ಧಾರ, ಸಂಕಲ್ಪ, ನುಡಿದಂತೆ ನಡೆಯುವ ಮನೋಭಾವ ಪ್ರಪಂಚದ ಎಲ್ಲಾ ರಾಷ್ಟ್ರಗಳು ಎದುರು ನೋಡುವಂತೆ ಮಾಡಿದೆ. ಇಂತಹ ಸಂದರ್ಭದಲ್ಲಿ ರೋಟರಿ ಸಂಸ್ಥೆ ಸಹ ದೇಶದ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವುದು ಶ್ಲಾಘನೀಯ ಎಂದರು.
    ವಿಧಾನ ಪರಿಷತ್ ಸದಸ್ಯರಾದ ಎಸ್. ರುದ್ರೇಗೌಡ, ಡಿ.ಎಸ್ ಅರುಣ್, ಕ್ಲಬ್ ಕಾರ್ಯದರ್ಶಿ ಕೆ.ಎಚ್ ಶಿವಕುಮಾರ್, ರೋಟರಿ ಕಟ್ಟಡ ಸಮಿತಿ ಅಧ್ಯಕ್ಷ ಕೂಡ್ಲಿಗೆರೆ ಹಾಲೇಶ್, ಉಪಾಧ್ಯಕ್ಷ ಪಿ. ಸುಧಾಕರ ಶೆಟ್ಟಿ, ಕೋಶಾಧಿಕಾರಿ ಟಿ.ಎಸ್ ದುಷ್ಯಂತ್ ರಾಜ್, ಝೋನಲ್ ಲೆಫ್ಟಿನೆಂಟ್ ವಾದಿರಾಜ ಅಡಿಗ, ಜಿಲ್ಲಾ ಗವರ್ನರ್ ಡಾ. ಜಯಗೌರಿ ಹಾದಿಗಲ್, ಅಸಿಸ್ಟೆಂಟ್ ಗವರ್ನರ್ ಸುನೀತಾ ಶ್ರೀಧರ್, ಆನ್ಸ್ ಕ್ಲಬ್ ಅಧ್ಯಕ್ಷೆ ಲತಾ, ಕಾರ್ಯದರ್ಶಿ ಡಾ. ಮಯೂರಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ಕ್ಲಬ್ ಅಧ್ಯಕ್ಷ ಅಡವೀಶಯ್ಯ ಅಧ್ಯಕ್ಷತೆವಹಿಸಿದ್ದರು. ರೋಟರಿ ಕಟ್ಟಡ ಸಮಿತಿ ಪ್ರಧಾನ ಕಾರ್ಯದರ್ಶಿ ತೀರ್ಥಯ್ಯ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಶೈಲೇಂದ್ರ ಸ್ವಾಗತಿಸಿದರು.

ಭದ್ರಾವತಿ ರೋಟರಿ ಸಮುದಾಯ ಭವನ ಉದ್ಘಾಟಿಸಿದ ಬಿ.ವೈ ರಾಘವೇಂದ್ರ 

    ಭದ್ರಾವತಿ, ಅ. 11: ಸಂಸದ ಬಿ.ವೈ ರಾಘವೇಂದ್ರ ಮಂಗಳವಾರ ರೋಟರಿ ಸಮುದಾಯ ಭವನ ಉದ್ಘಾಟಿಸಿದರು.
    ನಗರದ ಉಂಬ್ಳೆಬೈಲು ರಸ್ತೆಯಲ್ಲಿ ನೂತನವಾಗಿ ನಿರ್ಮಿಸಿರುವ ರೋಟರಿ ಸಮುದಾಯ ಭವನ ಉದ್ಘಾಟಿಸಿ ಕ್ಲಬ್ ಸೇವಾ ಕಾರ್ಯ ಸ್ಮರಿಸಿದರು.
    ವಿಧಾನ ಪರಿಷತ್ ಸದಸ್ಯರಾದ ಎಸ್. ರುದ್ರೇಗೌಡ, ಡಿ.ಎಸ್ ಅರುಣ್, ಕ್ಲಬ್ ಪ್ರಮುಖರಾದ ತೀರ್ಥಯ್ಯ, ಕೂಡ್ಲಿಗೆರೆ ಹಾಲೇಶ್, ದುಷ್ಯಂತ್ ರಾಜ್, ವಾದಿರಾಜ ಅಡಿಗ, ಜಯಭೇರ ಹಾದಿಗಲ್, ಸುನೀತಾ ಶ್ರೀಧರ್, ಲತಾ, ಡಾ. ಮಯೂರಿ ಸೇರಿಸದಂತೆ ಇನ್ನಿತರರು ಉಪಸ್ಥಿತರದ್ದರು.
ಕ್ಲಬ್ ಅಧ್ಯಕ್ಷ ಅಡವೀಶಯ್ಯ ಅಧ್ಯಕ್ಷತೆವಹಿಸಿದ್ದರು.