Friday, November 25, 2022

ಮೊದಲ ಸಾಮಾನ್ಯಸಭೆ ಆರಂಭದಲ್ಲಿಯೇ ಪ್ರತಿಭಟನೆ ಬಿಸಿ

ವಾರ್ಡ್ ನಂ.೨೧ರ ಅಭಿವೃದ್ಧಿಯಲ್ಲಿ ನಿರ್ಲಕ್ಷ್ಯ :  ಆಕ್ರೋಶ

ಭದ್ರಾವತಿ ನಗರಸಭೆ ಆವರಣದಲ್ಲಿ ವಾರ್ಡ್ ನಂ.೨೧ರ ಜೆಡಿಎಸ್ ನಗರಸಭಾ ಸದಸ್ಯೆ ವಿಜಯರವರ ನೇತೃತ್ವದಲ್ಲಿ ವಾರ್ಡ್ ನಿವಾಸಿಗಳು ಪ್ರತಿಭಟನೆ ನಡೆಸಿದರು.
    ಭದ್ರಾವತಿ, ನ. ೨೫: ನಗರಸಭೆ ಅಧ್ಯಕ್ಷೆಯಾಗಿ ಅನುಸುಧಾ ಮೋಹನ್ ಪಳನಿ ಅಧಿಕಾರ ಸ್ವೀಕರಿಸಿದ ನಂತರ ನಡೆದ ಮೊದಲ ಸಾಮಾನ್ಯ ಸಭೆ ಆರಂಭದಲ್ಲಿಯೇ ಪ್ರತಿಭಟನೆ ಬಿಸಿ ಎದುರಿಸುವಂತಾಯಿತು.
    ಶುಕ್ರವಾರ ಮಧ್ಯಾಹ್ನ ೨.೩೦ಕ್ಕೆ ಆರಂಭಗೊಳ್ಳಬೇಕಿದ್ದ ಸಭೆ ಸಂಜೆ ೪ ಗಂಟೆಗೆ ಆರಂಭಗೊಂಡಿತು. ಸಭೆ ಆರಂಭಗೊಳ್ಳುವ ಮೊದಲು ನಗರಸಭೆ ಆವರಣದಲ್ಲಿ ವಾರ್ಡ್ ನಂ.೨೧ರ ಜೆಡಿಎಸ್ ನಗರಸಭಾ ಸದಸ್ಯೆ ವಿಜಯರವರ ನೇತೃತ್ವದಲ್ಲಿ ವಾರ್ಡ್ ನಿವಾಸಿಗಳು ಪ್ರತಿಭಟನೆ ನಡೆಸಿದರು.
    ಕಾಗದನಗರ, ಜೆಪಿಎಸ್ ಕಾಲೋನಿ, ಉಜ್ಜನಿಪುರ ವ್ಯಾಪ್ತಿಯನ್ನು ಹೊಂದಿರುವ ವಾರ್ಡ್‌ನಲ್ಲಿ ಇದುವರೆಗೂ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿಲ್ಲ. ಈ ವಾರ್ಡ್‌ಗೆ ಇದುವರೆಗೂ ಯಾವುದೇ ಅನುದಾನ ಸಹ ಬಿಡುಗಡೆಗೊಳಿಸಿಲ್ಲ. ಸಾರ್ವಜನಿಕ ಶೌಚಾಲಯದಲ್ಲಿ ಸ್ವಚ್ಛತೆ ಇಲ್ಲದಂತಾಗಿದ್ದು, ನೀರಿನ ವ್ಯವಸ್ಥೆ ಸಹ ಇಲ್ಲವಾಗಿದೆ. ಇದರಿಂದಾಗಿ ನಿವಾಸಿಗಳು ಪರದಾಡುವಂತಾಗಿದೆ.
    ರಸ್ತೆ, ಚರಂಡಿಗಳು ಸಹ ಹಾಳಾಗಿದ್ದು, ಇವುಗಳನ್ನು ದುರಸ್ತಿಪಡಿಸಿಲ್ಲ. ಕೆಲವು ಕಾಮಗಾರಿಗಳನ್ನು ಸ್ವಂತ ಹಣದಲ್ಲಿ ಕೈಗೊಳ್ಳಲಾಗಿದೆ. ಮಲತಾಯಿ ಧೋರಣೆ ಅನುಸರಿಸುವ ಮೂಲಕ ವಾರ್ಡ್ ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಎಂದು ಆರೋಪಿಸಲಾಯಿತು.
    ತಕ್ಷಣ ವಾರ್ಡ್ ಸಮಸ್ಯೆಗಳಿಗೆ ಪೂರಕವಾಗಿ ಸ್ಪಂದಿಸಿ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಲಾಯಿತು.
ಪೌರಾಯುಕ್ತ ಮನುಕುಮಾರ್ ಸಮಸ್ಯೆಗಳನ್ನು ಆಲಿಸಿ ಮುಂದಿನ ೧೦ ದಿನಗಳಲ್ಲಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.  
    ಜೆಡಿಎಸ್ ನಗರ ಅಧ್ಯಕ್ಷ ಆರ್. ಕರುಣಾಮೂರ್ತಿ, ಸದಸ್ಯರಾದ ಬಸವರಾಜ ಬಿ ಆನೇಕೊಪ್ಪ, ಉದಯಕುಮಾರ್, ಸವಿತಾ ಉಮೇಶ್, ಪಲ್ಲವಿ ದಿಲೀಪ್, ಕೋಟೇಶ್ವರರಾವ್, ಮಂಜುಳ ಸುಬ್ಬಣ್ಣ, ರೂಪಾವತಿ, ನಾಗರತ್ನ ಅನಿಲ್‌ಕುಮಾರ್ ಮುಖಂಡರಾದ ಬಿ.ಎಸ್ ನಾರಾಯಣಪ್ಪ, ಅಶೋಕ್‌ಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ನ.೨೬ರಂದು ಶಾಂತವೇರಿ ಗೋಪಾಲಗೌಡರ ಸ್ಮರಣೆ ಕಾರ್ಯಕ್ರಮ

    ಭದ್ರಾವತಿ, ನ. ೨೫ : ನಗರದ ಚುಂಚಾದ್ರಿ ಮಹಿಳಾ ವೇದಿಕೆ ಹಾಗು ಶಾಂತವೇರಿ ಗೋಪಾಲಗೌಡರ ಜನ್ಮ ಶತಮಾನೋತ್ಸವ ಆಚರಣಾ ಸಮಿತಿ ವತಿಯಿಂದ ರಾಜ್ಯ ಕಂಡ ಧೀಮಂತ ರಾಜಕಾರಣಿ ದಿವಂಗತ ಶಾಂತವೇರಿ ಗೋಪಾಲಗೌಡರ ಜನ್ಮ ಶತಮಾನೋತ್ಸವ ಸಂದರ್ಭದಲ್ಲಿ ಅವರ ಸಾಧನೆಯ ಸ್ಮರಣೆ ಕಾರ್ಯಕ್ರಮ ನ.೨೬ರಂದು ಬೆಳಿಗ್ಗೆ ೧೦.೩೦ಕ್ಕೆ ಅಪ್ಪರ್ ಹುತ್ತಾ ಕೆಂಪೇಗೌಡ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
    ವಿಧಾನಸಭೆ ಮಾಜಿ ಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಉದ್ಘಾಟಿಸಲಿದ್ದು, ಚುಂಚಾದ್ರಿ ಮಹಿಳಾ ವೇದಿಕೆ ಗೌರವಾಧ್ಯಕ್ಷೆ ಡಾ. ಆರ್. ಅನುರಾಧ ಪಟೇಲ್ ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದಾರೆ.
    ಶಾಸಕ ಬಿ.ಕೆ ಸಂಗಮೇಶ್ವರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಕುಮಾರ್, ಶಾಂತವೇರಿ ಗೋಪಾಲಗೌಡರ ಪುತ್ರಿ ಇಳಾಗೀತಾ ಮತ್ತು ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಟಿ ರವಿ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು. ಚುಂಚಾದ್ರಿ ಮಹಿಳಾ ವೇದಿಕೆ ಅಧ್ಯಕ್ಷೆ ಎಂ.ಎಸ್ ಸುಧಾಮಣಿ ಅಧ್ಯಕ್ಷತೆ ವಹಿಸಲಿದ್ದಾರೆ.

ನ.೨೭ರಂದು ವಿದ್ಯುತ್ ವ್ಯತ್ಯಯ

    ಭದ್ರಾವತಿ, ನ. ೨೫: ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಮತ್ತು ೩೩ ಕೆ.ವಿ ಮಾರ್ಗ/ಅಂತರಗಂಗೆ ಫೀಡರ್ ನಿರ್ವಹಣೆ ಕಾಮಗಾರಿ ಹಿನ್ನಲೆಯಲ್ಲಿ ನ.೨೭ರಂದು ಬೆಳಿಗ್ಗೆ ೧೦ ಗಂಟೆಯಿಂದ ಸಂಜೆ ೫.೩೦ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 
    ೧೧ ಕೆವಿ ಮಾರ್ಗದ ದೊಡ್ಡೇರಿ, ಅಂತರಗಂಗೆ, ಕಾಚಗೊಂಡನಹಳ್ಳಿ, ಯರೇಹಳ್ಳಿ, ದೇವನರಸೀಪುರ, ಕಾರೇಹಳ್ಳಿ, ಕಾಳಿಂಗನಹಳ್ಳಿ, ಬೊಮ್ಮೇನಹಳ್ಳಿ, ಬಾರಂದೂರು, ಮಾವಿನಕೆರೆ, ಕೆಂಚೇನಹಳ್ಳಿ, ಶ್ರೀನಿವಾಸಪುರ, ಶವಪುರ, ಉಕ್ಕುಂದ, ಗಂಗೂರು ಗ್ರಾಮ ಪಂಚಾಯಿತಿ ವ್ಯಾಪಿಯ ಎಲ್ಲಾ ಗ್ರಾಮಗಳು ಮತ್ತು ಭದ್ರಾ ಪೇಪರ್ ಮಿಲ್, ನಗರಸಭೆ ನೀರು ಸರಬರಾಜು ಕೇಂದ್ರ, ಉಜ್ಜನಿಪುರ, ಎಂಪಿಎಂ ಬಡಾವಣೆ, ದೊಡ್ಡಗೊಪ್ಪೇನಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಗ್ರಾಮೀಣ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ.