Monday, December 12, 2022

ವಿಐಎಸ್‌ಎಲ್‌ಗೆ ಬಂಡವಾಳ ತೊಡಗಿಸಲು ಒತ್ತಾಯಿಸಿ ಡಿ.೧೩ರಂದು ಪ್ರತಿಭಟನೆ

    ಭದ್ರಾವತಿ, ಡಿ. ೧೨ : ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಗೆ ಬಂಡವಾಳ ತೊಡಗಿಸಿ ಸಾರ್ವಜನಿಕ ರಂಗದಲ್ಲಿ ಉಳಿಸಲು ಒತ್ತಾಯಿಸಿ ಡಿ.೧೩ರಂದು ಸಿಐಟಿಯು ಜಿಲ್ಲಾ ಸಂಘಟನಾ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳ ಕಛೇರಿ ಮುಂಭಾಗ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
    ಸರ್.ಎಂ ವಿಶ್ವೇಶ್ವರಾಯರವರು ದೇಶದಲ್ಲಿ ಸ್ಥಾಪಿಸಿದ ಮೊಟ್ಟ ಮೊದಲ ಉಕ್ಕು ಉದ್ಯಮ ಇದ್ದಾಗಿದ್ದು, ತಕ್ಷಣ ಕಾರ್ಖಾನೆಗೆ ಅಗತ್ಯವಿರುವ ಸುಮಾರು ೬೦೦೦ ಕೋ. ರು. ಬಂಡವಾಳ ತೊಡಗಿಸಿ ಸಾರ್ವಜನಿಕ ರಂಗದಲ್ಲಿ ಉಳಿಸಲು ಒತ್ತಾಯಿಸಿ ಬೆಳಿಗ್ಗೆ ೧೧.೧೫ಕ್ಕೆ ಬೃಹತ್ ಪ್ರತಿಭಟನೆ ನಡೆಸಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಮನವಿ ಸಲ್ಲಿಸಲಾಗುವುದು. ಕಾರ್ಮಿಕರು, ಹೋರಾಟಗಾರರು, ವಿವಿಧ ಸಂಘಟನೆಗಳು ಸೇರಿದಂತೆ ನಾಗರೀಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಸಿಐಟಿಯು ಜಿಲ್ಲಾ ಸಂಚಾಲಕ ಎಂ. ನಾರಾಯಣ ಕೋರಿದ್ದಾರೆ.

ಹುಟ್ಟುಹಬ್ಬ ಅಂಗವಾಗಿ ಉಚಿತ ಕನ್ನಡಕ ವಿತರಣೆ

    ಭದ್ರಾವತಿ, ಡಿ. ೧೨ :  ಪೊಲೀಸ್ ಉಮೇಶ್‌ರವರ ಹುಟ್ಟುಹಬ್ಬದ ಅಂಗವಾಗಿ ದೃಷ್ಟಿದೋಷ ಹೊಂದಿರುವ ಹಿರಿಯ ನಾಗರೀಕರಿಗೆ ಸ್ನೇಹಜೀವಿ ಬಳಗ ಉಚಿತ ಕನ್ನಡಕ ವಿತರಿಸಲಿದೆ.
    ದೃಷ್ಟಿದೋಷ ಹೊಂದಿರುವ ಹಿರಿಯ ನಾಗರೀಕರು ತಜ್ಞ ವೈದ್ಯರು ತಪಾಸಣೆ ನಡೆಸಿ ಕನ್ನಡಕ ಧರಿಸಲು ಶಿಫಾರಸ್ಸು ಮಾಡಿರುವ ಚೀಟಿಯನ್ನು ಡಿ.೧೭ರೊಳಗೆ ನೀಡತಕ್ಕದ್ದು, ಹೆಚ್ಚಿನ ಮಾಹಿತಿಗೆ ಮೊ: ೯೬೨೦೫೨೪೫೦೩ ಅಥವಾ ೮೩೧೦೮೭೭೨೯೬ ಸಂಖ್ಯೆಗೆ ಕರೆ ಮಾಡಬಹುದಾಗಿದೆ.



ವಿಜೃಂಭಣೆಯಿಂದ ಜರುಗಿದ ಅಮಲೋದ್ಭವಿ ಮಾತೆ ದೇವಾಲಯದ ೮೪ನೇ ವರ್ಷದ ವಾರ್ಷಿಕೋತ್ಸವ

ಭದ್ರಾವತಿ ನ್ಯೂಟೌನ್ ಅಮಲೋದ್ಭವಿ ಮಾತೆ ದೇವಾಲಯದ ೮೪ನೇ ವರ್ಷದ ವಾರ್ಷಿಕೋತ್ಸವದಲ್ಲಿ ದೇವಾಲಯದ ಆವರಣದಲ್ಲಿ ಪ್ರಾರ್ಥನೆಗೆ ಅನುಕೂಲವಾಗುವಂತೆ ಸುಮಾರು ೧೫ ಲಕ್ಷ ರು. ವೆಚ್ಚದಲ್ಲಿ ಅಮಲೋದ್ಭವಿ ಮಾತೆಯ 'ಗ್ರೋಟ್ಟೋ' ನಿರ್ಮಾಣ ಮಾಡಿಸಿಕೊಟ್ಟಿರುವ ದಾನಿಗಳಾದ ಗಾಂಧಿನಗರದ ಸೇಂಟ್ ಜೋಸೆಫ್ ಮತ್ತು ಲಿಟರ್ ಫ್ಲವರ್ ಶಾಲೆಗಳ ಸಂಸ್ಥಾಪಕರಾದ ರಾಬರ್ಟ್ ಡಿಸೋಜಾ-ಲತಾ ರಾಬರ್ಟ್ ದಂಪತಿ ಸೇರಿದಂತೆ ಇನ್ನಿತರರನ್ನು ಸನ್ಮಾನಿಸಿ ಗೌರವಿಸಲಾಯಿತು
    ಭದ್ರಾವತಿ, ಡಿ. ೧೨ : ನಗರದ ನ್ಯೂಟೌನ್ ಅಮಲೋದ್ಭವಿ ಮಾತೆ ದೇವಾಲಯದ ೮೪ನೇ ವರ್ಷದ ವಾರ್ಷಿಕೋತ್ಸವ ೧೧ ದಿನಗಳ ಕಾಲ 'ಅಮಲೋದ್ಭವಿ ಮಾತೆಯೊಂದಿಗೆ ಸಾಗು, ಕುಟುಂಬದಲ್ಲಿ ವಿಶ್ವಾಸವ ಸಾರು' ಧ್ಯೇಯವಾಕ್ಯದೊಂದಿಗೆ ವಿಜೃಂಭಣೆಯಿಂದ ಜರುಗಿತು.
    ಪ್ರತಿದಿನ ಸಂಜೆ ಜಪಸರ ಪ್ರಾರ್ಥನೆ, ಬಲಿಪೂಜೆ ಮತ್ತು ಪ್ರಬೋಧನೆಗಳು ಜರುಗಿದವು. ೧೦ನೇ ದಿನ ಅಮಲೋದ್ಭವಿ ಮಾತೆಯ ಅಲೃಂಕೃತಗೊಂಡ ಭವ್ಯ ತೇರಿನ ಮೆರವಣಿಗೆ ನಡೆಯಿತು. ಧರ್ಮಗುರುಗಳಿಂದ ಆಶೀರ್ವಾದ ಹಾಗು ಅನ್ನಸಂತರ್ಪಣೆ ನೆರವೇರಿತು.
    ೧೧ನೇ ದಿನ ಶಿವಮೊಗ್ಗ ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಡಾ. ಫ್ರಾನ್ಸಿಸ್ ಸೆರಾವೋರವರು ಸುಮಾರು ೫೦ಕ್ಕೂ ಹೆಚ್ಚು ಧರ್ಮಗುರುಗಳೊಂದಿಗೆ ದಿವ್ಯ ಬಲಿಪೂಜೆ ನೆರವೇರಿಸಿದರು.
    ದೇವಾಲಯದ ಆವರಣದಲ್ಲಿ ಪ್ರಾರ್ಥನೆಗೆ ಅನುಕೂಲವಾಗುವಂತೆ ಸುಮಾರು ೧೫ ಲಕ್ಷ ರು. ವೆಚ್ಚದಲ್ಲಿ ಅಮಲೋದ್ಭವಿ ಮಾತೆಯ 'ಗ್ರೋಟ್ಟೋ' ನಿರ್ಮಾಣ ಮಾಡಿಸಿಕೊಟ್ಟಿರುವ ದಾನಿಗಳಾದ ಗಾಂಧಿನಗರದ ಸೇಂಟ್ ಜೋಸೆಫ್ ಮತ್ತು ಲಿಟರ್ ಫ್ಲವರ್ ಶಾಲೆಗಳ ಸಂಸ್ಥಾಪಕರಾದ ರಾಬರ್ಟ್ ಡಿಸೋಜಾ-ಲತಾ ರಾಬರ್ಟ್ ದಂಪತಿಯನ್ನು, ಚಿಕ್ಕಮಗಳೂರು ಧರ್ಮಕ್ಷೇತ್ರದ ಗುರು ಶ್ರೇಷ್ಠ ವಂದನೀಯ ಸ್ವಾಮಿ ಎಲಿಯಾಸ್ ಸಿಕ್ವೇರಾರವರನ್ನು, ಆಲ್ ಇಂಡಿಯಾ ಕ್ಯಾಥೋಲಿಕ್ ಯೂನಿಯನ್(ಎಐಸಿಯು) ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿರುವ ದೇವಾಲಯದ ಪಾಲನಾ ಪರಿಷತ್ ಕಾರ್ಯದರ್ಶಿ ಅಂತೋಣಿ ವಿಲ್ಸನ್ ಮತ್ತು ನಗರಸಭಾ ಸದಸ್ಯ ಜಾಜ್‌ರವರನ್ನು ಸನ್ಮಾನಿಸಿ ಗೌರಿವಿಸಲಾಯಿತು.  
  ದೇವಾಲಯದ ಧರ್ಮಗುರು ವಂದನೀಯ ಸ್ವಾಮಿ ಲಾನ್ಸಿ ಡಿಸೋಜ ವಾರ್ಷಿಕೋತ್ಸವದ ನೇತೃತ್ವ ವಹಿಸಿದ್ದರು. ಸುತ್ತಮುತ್ತಲ ಕ್ಯಾಥೋಲಿಕ್ ಕ್ರೈಸ್ತ ಸಮುದಾಯದ ಭಕ್ತರು ಪಾಲ್ಗೊಂಡಿದ್ದರು.

ಡಿ.೧೩ರಂದು ಶ್ರೀ ಸತ್ಯಸಾಯಿ ಸಮಗ್ರ ಶಿಕ್ಷಣ ಸಂಸ್ಥೆಯಲ್ಲಿ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ

ಡಿ.೧೩ರಂದು ಶ್ರೀ ಸತ್ಯಸಾಯಿ ಸಮಗ್ರ ಶಿಕ್ಷಣ ಸಂಸ್ಥೆಯಲ್ಲಿ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ

    ಭದ್ರಾವತಿ, ಡಿ. ೧೩ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉಪನಿರ್ದೇಶಕರ ಕಛೇರಿ, ಶಿವಮೊಗ್ಗ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗು ನ್ಯೂಟೌನ್ ಪ್ರಶಾಂತಿ ಸೇವಾ ಟ್ರಸ್ಟ್, ಶ್ರೀ ಸತ್ಯಸಾಯಿ ಸಮಗ್ರ ಶಿಕ್ಷಣ ಸಂಸ್ಥೆ ವತಿಯಿಂದ ಜಿಲ್ಲಾಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಡಿ.೧೩ರ ಮಂಗಳವಾರ ಬೆಳಿಗ್ಗೆ ೧೦ ಗಂಟೆಗೆ ಶ್ರೀ ಸತ್ಯಸಾಯಿ ಸಮಗ್ರ ಶಿಕ್ಷಣ ಸಂಸ್ಥೆಯಲ್ಲಿ ಆಯೋಜಿಸಲಾಗಿದೆ.
    ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸಿ ನಾರಾಯಣಗೌಡ, ಗೃಹ ಸಚಿವ ಆರಗ ಜ್ಞಾನೇಂದ್ರ, ಪ್ರಾಥಮಿಕ ಹಾಗು ಪ್ರೌಢ ಶಿಕ್ಷಣ ಖಾತೆ ಸಚಿವ ಬಿ.ಸಿ ನಾಗೇಶ್, ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಸಂಸದ ಬಿ.ವೈ ರಾಘವೇಂದ್ರ, ಶಾಸಕರಾದ ಕೆ.ಎಸ್ ಈಶ್ವರಪ್ಪ, ಹರತಾಳು ಹಾಲಪ್ಪ, ಎಸ್. ಕುಮಾರ್ ಬಂಗಾರಪ್ಪ, ಕೆ.ಬಿ ಅಶೋಕ್ ನಾಯ್ಕ್, ಆಯನೂರು ಮಂಜುನಾಥ್, ಎಸ್.ಎಲ್ ಭೋಜೇಗೌಡ, ಎಸ್. ರುದ್ರೇಗೌಡ, ಭಾರತಿ ಶೆಟ್ಟಿ, ಡಿ.ಎಸ್ ಅರುಣ್, ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಕೆ.ಎಸ್ ಗುರುಮೂರ್ತಿ, ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ಪವಿತ್ರ ರಾಮಯ್ಯ, ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎನ್.ಜಿ ನಾಗರಾಜ್, ನಗರಸಭೆ ಅಧ್ಯಕ್ಷೆ ಅನುಸುಧಾ ಮೋಹನ್ ಪಳನಿ, ಶ್ರೀ ಸತ್ಯಸಾಯಿ ಸೇವಾ ಸಂಸ್ಥೆಗಳ ರಾಜ್ಯ ಸಂಯೋಜಕ ಡಿ. ಪ್ರಭಾಕರ ಬೀರಯ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಬಿ. ಸಿದ್ದಬಸಪ್ಪ, ಜಿಲ್ಲಾಧಿಕಾರಿ ಡಾ. ಸೆಲ್ವಮಣಿ, ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ಕುಮಾರ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕರಾದ ಸಿ.ಆರ್ ಪರಮೇಶ್ವರಪ್ಪ, ಬಿ.ಆರ್ ಬಸವರಾಜಪ್ಪ, ತಹಸೀಲ್ದಾರ್ ಆರ್. ಪ್ರದೀಪ್ ಸೇರಿದಂತೆ ಇನ್ನಿತರರು ಮುಖ್ಯಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
    ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆ ವಹಿಸಲಿದ್ದು, ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಯಶಸ್ವಿಗೊಳಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಮತ್ತು ಪ್ರಶಾಂತಿ ಸೇವಾ ಟ್ರಸ್ಟ್ ಕಾರ್ಯದರ್ಶಿ ಡಿ. ಪ್ರಭಾಕರ ಬೀರಯ್ಯ ಕೋರಿದ್ದಾರೆ.