ಭದ್ರಾವತಿ ಹೊಸಸೇತುವೆ ರಸ್ತೆಯ ಸಿದ್ದರೂಢನಗರದ ಬಸವೇಶ್ವರ ಸಭಾಭವನದಲ್ಲಿ ಸೋಮವಾರ ನಡೆದ ಶಿವಮೊಗ್ಗ ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸಭೆ ಸಂಸದ ಬಿ.ವೈ ರಾಘವೇಂದ್ರ ಉದ್ಘಾಟಿಸಿದರು.
ಮುಖ್ಯಾಂಶಗಳು:
- ವಿಐಎಸ್ಎಲ್-ಎಂಪಿಎಂ ಕಾರ್ಖಾನೆ ಇಂದಿನ ಸ್ಥಿತಿಗೆ ಬಿಜೆಪಿ ಸರ್ಕಾರ ಕಾರಣವಲ್ಲ
- ಕಾರ್ಮಿಕರಿಂದ ಬೃಹತ್ ಪ್ರತಿಭಟನೆ, ೨ ದಿನದಲ್ಲಿ ಸಭೆ ನಡೆಸಿ ಸಮಸ್ಯೆ ಇತ್ಯರ್ಥ
- ಸಭೆನಂತರ ಹೋರಾಟದ ಮುಂದಿನ ತೀರ್ಮಾನ
- ಎಚ್.ಡಿ ಕುಮಾರಸ್ವಾಮಿ ಸೂಚನೆ ನಂತರ ಜಿಲ್ಲಾಧಿಕಾರಿ ಕಛೇರಿವರೆಗೂ ಪಾದಯಾತ್ರೆ
ಭದ್ರಾವತಿ, ಜ. ೩೦ : ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರೀತಿ ತಾರತಮ್ಯ ಮಾಡಿಲ್ಲ. ವಿಐಎಸ್ಎಲ್ ಮತ್ತು ಎಂಪಿಎಂ ಕಾರ್ಖಾನೆಗಳನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಬಿಜೆಪಿ ಪಕ್ಷ ಈಗಲೂ ಬದ್ದವಾಗಿದೆ ಎಂದು ಸಂಸದ ಬಿ.ವೈ ರಾಘವೇಂದ್ರ ಹೇಳಿದರು.
ನಗರದ ಹೊಸಸೇತುವೆ ರಸ್ತೆಯ ಸಿದ್ದರೂಢನಗರದ ಬಸವೇಶ್ವರ ಸಭಾಭವನದಲ್ಲಿ ಸೋಮವಾರ ನಡೆದ ಶಿವಮೊಗ್ಗ ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಮಾತನಾಡಿದರು. ನಗರದ ವಿಐಎಸ್ಎಲ್ ಮತ್ತು ಎಂಪಿಎಂ ಕಾರ್ಖಾನೆಗಳ ಇಂದಿನ ಸ್ಥಿತಿಗೆ ಬಿಜೆಪಿ ಪಕ್ಷ ಕಾರಣವಲ್ಲ. ವಿಐಎಸ್ಎಲ್ ಮತ್ತು ಎಂಪಿಎಂ ಎರಡು ಕಾರ್ಖಾನೆಗಳ ಅಭಿವೃದ್ಧಿಗೆ ಸೂಕ್ತ ಸಂದರ್ಭದಲ್ಲಿ ಅಂದಿನ ಸರ್ಕಾರಗಳು ಪೂರಕವಾಗಿ ಸ್ಪಂದಿಸಲಿಲ್ಲ. ಈ ಹಿನ್ನಲೆಯಲ್ಲಿ ಸಮಸ್ಯೆ ಎದುರಾಗಿದ್ದು, ಬಿಜೆಪಿ ಪಕ್ಷದ ಅಧಿಕಾರಕ್ಕೆ ಬಂದ ನಂತರ ಎರಡು ಕಾರ್ಖಾನೆಗಳನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಸಿದೆ ಎಂದರು.
ಈ ಎರಡು ಕಾರ್ಖಾನೆಗಳ ವಿಚಾರ ಒಂದೆಡೆಯಾದರೆ ಇಲ್ಲಿನ ಕಾರ್ಮಿಕರ ಹಿತಕ್ಕಾಗಿ ಯಡಿಯೂರಪ್ಪನವರು ತಮ್ಮ ಅಧಿಕಾರದ ಅವಧಿಯಲ್ಲಿ ಶಾಹಿ ಗಾರ್ಮೆಂಟ್ಸ್ ಆರಂಭಗೊಳ್ಳಲು ಕಾರಣಕರ್ತರಾಗಿದ್ದಾರೆ. ಇದರಿಂದಾಗಿ ಕ್ಷೇತ್ರದ ಸುಮಾರು ೨ ಸಾವಿರ ಮಂದಿಗೆ ಉದ್ಯೋಗ ಲಭಿಸಿದೆ. ಅಲ್ಲದೆ ಕೇಂದ್ರ ಹಾಗು ರಾಜ್ಯ ಸರ್ಕಾರದ ಹಲವಾರು ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಎಂದಿಗೂ ಕಡೆಗಣಿಸಿಲ್ಲ ಎಂದು ಸ್ಪಷ್ಟಪಡಿಸಿದರು.
ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಮಾತನಾಡಿ, ನಮ್ಮದು ರಾಷ್ಟ್ರೀಯವಾದ ಹಿಂದುತ್ವವಾಗಿದೆ. ಹಿಂದುತ್ವ ಎಂಬುದು ಯಾವುದೇ ಜಾತಿಗೆ ಸೀಮಿತವಾಗಿಲ್ಲ. ಈ ದೇಶದಲ್ಲಿರುವ ಎಲ್ಲಾ ಹಿಂದುಗಳು ಕೂಡ ಒಂದೇ ಎಂಬ ಭಾವನೆಯನ್ನು ಹೊಂದಿದೆ. ನಮ್ಮದು ಯಾರನ್ನು ಓಲೈಕೆ ಮಾಡುವ ಪಕ್ಷವಲ್ಲ. ಹಿಂದುತ್ವ ಆಧಾರದ ಮೇಲೆ ಅಧಿಕಾರಕ್ಕೆ ಬಂದಿದೆ. ಜಿಲ್ಲೆಯಲ್ಲೂ ಸಹ ಮುಂಬರುವ ಚುನಾವಣೆಯಲ್ಲಿ ಭದ್ರಾವತಿ ಸೇರಿದಂತೆ ಎಲ್ಲಾ ವಿಧಾನ ಸಭಾ ಕ್ಷೇತ್ರಗಳಲ್ಲೂ ಬಿಜೆಪಿ ಗೆಲುವು ಸಾಧಿಸಲಿದೆ ಎಂದರು.
ಜಿಲ್ಲಾಧ್ಯಕ್ಷ ಟಿ.ಡಿ ಮೇಘರಾಜ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ವಿಧಾನಸಭಾ ಸದಸ್ಯರಾ ಹರತಾಳು ಹಾಲಪ್ಪ, ಕುಮಾರ್ ಬಂಗಾರಪ್ಪ, ವಿಧಾನಪರಿಷತ್ ಸದಸ್ಯರಾದ ಎಸ್. ರುದ್ರೇಗೌಡ, ಭಾರತಿ ಶೆಟ್ಟಿ, ಡಿ.ಎಸ್ ಅರುಣ್, ಆಯನೂರು ಮಂಜುನಾಥ್, ಮಾಜಿ ಸದಸ್ಯ ಎಂ.ಬಿ ಭಾನುಪ್ರಕಾಶ್, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಬಿ.ಕೆ ಶ್ರೀನಾಥ್, ಶಿವರಾಜ್, ತಾಲೂಕು ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಎರಡು ದಿನದಲ್ಲಿ ಸಭೆ ನಡೆಸಿ ಸಮಸ್ಯೆ ಬಗೆಹರಿಸಲು ಪ್ರಯತ್ನ : ಬಿ.ವೈ ರಾಘವೇಂದ್ರ ಭರವಸೆ
ವಿಐಎಸ್ಎಲ್ ಕಾರ್ಖಾನೆ ಮುಚ್ಚುವ ಆದೇಶದ ವಿರುದ್ಧ ಕಳೆದ ೧೨ ದಿನಗಳಿಂದ ನಿರಂತರವಾಗಿ ಕಾರ್ಖಾನೆ ಮುಂಭಾಗ ಹೋರಾಟ ನಡೆಸುತ್ತಿರುವ ಗುತ್ತಿಗೆ ಕಾರ್ಮಿಕರು ಸೋಮವಾರ ಸಂಸದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಬೃಹತ್ ಪ್ರತಿಭಟನೆ ನಡೆಸಿದರು.
ಪ್ರತಿಭಟನೆ ತೀವ್ರಗೊಂಡ ಹಿನ್ನಲೆಯಲ್ಲಿ ಸ್ಥಳಕ್ಕೆ ಆಗಮಿಸಿದ ಸಂಸದರು. ಪ್ರತಿಭಟನಾಕಾರರಿಗೆ ಪ್ರಸ್ತುತ ಸ್ಥಿತಿಗತಿಗಳ ಕುರಿತು ಮನವರಿಕೆ ಮಾಡಿಕೊಡಲು ಪ್ರಯತ್ನಿಸಿದರು. ಆದರೆ ಸಾಧ್ಯವಾಗದ ಹಿನ್ನಲೆಯಲ್ಲಿ ಮುಂದಿನ ೨ ದಿನಗಳಲ್ಲಿ ಸಭೆ ನಡೆಸಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು.
ಸಭೆಯ ನಂತರ ಮುಂದಿನ ತೀರ್ಮಾನ :
ಶಾಸಕ ಬಿ.ಕೆ ಸಂಗಮೇಶ್ವರ್ ಮಾತನಾಡಿ, ಸಂಸದರು ೨ ದಿನಗಳ ಒಳಗಾಗಿ ಕಾರ್ಖಾನೆ ಆಡಳಿತ ಮಂಡಳಿ, ಕಾರ್ಮಿಕ ಸಂಘಟನೆಗಳ ಪ್ರಮುಖರು ಹಾಗು ಗಣಪ್ರತಿನಿಧಿಗಳ ಸಭೆ ನಡೆಸಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಸಭೆ ನಂತರ ನಮ್ಮ ಮುಂದಿನ ಹೋರಾಟಕ್ಕೆ ತೀರ್ಮಾನಿಸಲಾಗುವುದು ಕಾರ್ಮಿಕರು ಯಾವುದೇ ಆತಂಕಕ್ಕೆ ಒಳಗಾಗದಿರುವಂತೆ ಮನವಿ ಮಾಡಿದರು.
ಜಿಲ್ಲಾಧಿಕಾರಿ ಕಛೇರಿವರೆಗೂ ಪಾದಯಾತ್ರೆ :
ಈ ನಡುವೆ ಜೆಡಿಎಸ್ ಪಕ್ಷದ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಶಾರದ ಅಪ್ಪಾಜಿ ಮಾತನಾಡಿ, ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿಯವರು ವಿಐಎಸ್ಎಲ್ ಕಾರ್ಖಾನೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತುಕತೆಗೆ ಮುಂದಾಗಿದ್ದಾರೆ. ಅವರ ಸೂಚನೆ ನಂತರ ಕಾರ್ಖಾನೆ ಉಳಿವಿಗಾಗಿ ಶಿವಮೊಗ್ಗ ಜಿಲ್ಲಾಧಿಕಾರಿ ಕಛೇರಿ ವರೆಗೂ ಪಾದಯಾತ್ರೆ ನಡೆಸಲಾಗುವುದು. ಕಾರ್ಮಿಕರ ಎಲ್ಲಾ ರೀತಿಯ ಹೋರಾಟಕ್ಕೂ ಸಂಪೂರ್ಣ ಬೆಂಬಲ ನೀಡುವುದಾಗಿ ಭರವಸೆ ನೀಡಿದರು.
ಭದ್ರಾವತಿ ವಿಐಎಸ್ಎಲ್ ಕಾರ್ಖಾನೆ ಮುಚ್ಚುವ ಆದೇಶದ ವಿರುದ್ಧ ಕಳೆದ ೧೨ ದಿನಗಳಿಂದ ನಿರಂತರವಾಗಿ ಕಾರ್ಖಾನೆ ಮುಂಭಾಗ ಹೋರಾಟ ನಡೆಸುತ್ತಿರುವ ಗುತ್ತಿಗೆ ಕಾರ್ಮಿಕರು ಸೋಮವಾರ ಸಂಸದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಬೃಹತ್ ಪ್ರತಿಭಟನೆ ನಡೆಸಿದರು.
No comments:
Post a Comment