Thursday, January 26, 2023

ಸೇವೆಯಲ್ಲಿ ತೊಡಗಿಸಿಕೊಂಡಿರುವವರ ನೆರವಿಗೆ ಮುಂದಾಗಿ : ಬಿ.ಕೆ ಸಂಗಮೇಶ್ವರ್

ಭದ್ರಾವತಿ ಜನ್ನಾಪುರ ಜಯಶ್ರೀ ಕಲ್ಯಾಣ ಮಂದಿರದ ಎಡಬದಿ ರಸ್ತೆಯಲ್ಲಿರುವ ಕಾರುಣ್ಯ ಚಾರಿಟಬಲ್ ಟ್ರಸ್ಟ್  ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಟ್ರಸ್ಟ್ ಕರಪತ್ರ ಮತ್ತು ದಿನದರ್ಶಿಕೆ ಬಿಡುಗಡೆಗೊಳಿಸಲಾಯಿತು.
    ಭದ್ರಾವತಿ, ಜ. ೨೬: ವಯೋವೃದ್ಧರು, ನಿರ್ಗತಿಕರು, ಅಶಕ್ತರಿಗೆ ಹಾಗು ಶೋಷಣೆಗೆ ಒಳಗಾದವರಿಗೆ ಆಶ್ರಯ ನೀಡುವ ಮನೋಭಾವದೊಂದಿಗೆ ಸಮಾಜದಲ್ಲಿ ಸೇವೆ ಸಲ್ಲಿಸುತ್ತಿರುವವರಿಗೆ ಎಲ್ಲರೂ ಸಹಕಾರ ನೀಡುವುದು ಅಗತ್ಯವಾಗಿದೆ ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ಹೇಳಿದರು.
    ಅವರು ಗುರುವಾರ ನಗರದ ಜನ್ನಾಪುರ ಜಯಶ್ರೀ ಕಲ್ಯಾಣ ಮಂದಿರದ ಎಡಬದಿ ರಸ್ತೆಯಲ್ಲಿರುವ ಕಾರುಣ್ಯ ಚಾರಿಟಬಲ್ ಟ್ರಸ್ಟ್  ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಟ್ರಸ್ಟ್ ಕರಪತ್ರ ಮತ್ತು ದಿನದರ್ಶಿಕೆ ಬಿಡುಗಡೆಗೊಳಿಸಿ ಮಾತನಾಡಿದರು.
    ಪ್ರಸ್ತುತ ಸಮಾಜದಲ್ಲಿ ಬಹಳಷ್ಟು ಕುಟುಂಬಗಳಲ್ಲಿ ವಯೋವೃದ್ಧರನ್ನು ಕಡೆಗಣಿಸುವ ಮೂಲಕ ಅವರನ್ನು ಮನೆಯಿಂದ ಹೊರಗಿಡುವ ಮನಸ್ಥಿತಿ ಹೆಚ್ಚಾಗುತ್ತಿದೆ. ಅಲ್ಲದೆ ನಿರ್ಗತಿಕರು, ಅಶಕ್ತರು ಹಾಗು ಶೋಷಣೆಗೆ ಒಳಗಾದವರು ಸಹ ಹೆಚ್ಚಾಗಿ ಕಂಡು ಬರುತ್ತಿದ್ದಾರೆ. ಇವರ ನೆರವಿಗೆ ಮುಂದಾಗಿ ಸೇವೆಯಲ್ಲಿ ತೊಡಗಿಸಿಕೊಂಡಿರುವವರ  ಕಾರ್ಯ ಶ್ಲಾಘನೀಯವಾಗಿದ್ದು, ಇದಕ್ಕೆ ಯಾರು ಸಹ ಬೆಲೆ ಕಟ್ಟಲು ಸಾಧ್ಯವಿಲ್ಲ ಎಂದರು.
    ಕಾರುಣ್ಯ ಚಾರಿಟಬಲ್ ಟ್ರಸ್ಟ್ ಕಾರ್ಯಕ್ಕೆ ಎಲ್ಲಾ ರೀತಿಯ ಸಹಕಾರ ನೀಡಲು ಬದ್ದವಿದ್ದೇನೆ. ಅಲ್ಲದೆ ವೈಯಕ್ತಿಕವಾಗಿ ಸಹ ಹೆಚ್ಚಿನ ನೆರವು ನೀಡುವುದಾಗಿ ಭರವಸೆ ನೀಡಿದರು.
    ಸಾಮಾಜಿಕ ಚಿಂತಕ, ಕೋಮು ಸೌಹಾರ್ದ ವೇದಿಕೆ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಎಲ್.ಅಶೋಕ್, ನಗರಸಭೆ ಉಪಾಧ್ಯಕ್ಷ ಚನ್ನಪ್ಪ, ಸದಸ್ಯ ಮಣಿ ಎಎನ್‌ಎಸ್, ಮಾಜಿ ಸದಸ್ಯ ಬಾಲಕೃಷ್ಣ, ವೈದ್ಯ ಡಾ. ಎಚ್.ಆರ್ ನರೇಂದ್ರ, ಆರ್. ಮೋಸಸ್, ಜೈಪಾಲ್, ರಘು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ಸವಿತಾ, ವೈ.ಕೆ ಹನುಮಂತಯ್ಯ, ವಿಲ್ಸನ್ ಬಾಬು ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು. ಟ್ರಸ್ಟ್ ಅಧ್ಯಕ್ಷ ಜಿ. ರಾಜು ಹಾಗೂ ಸೇವಾಕರ್ತರು ಮತ್ತು ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

No comments:

Post a Comment