Wednesday, February 1, 2023

ವಿಐಎಸ್‌ಎಲ್ ಹೋರಾಟಕ್ಕೆ ಜೆಡಿಯು ಸಂಪೂರ್ಣ ಬೆಂಬಲ : ಮಹಿಮಾ ಜೆ. ಪಟೇಲ್

ಭದ್ರಾವತಿಯಲ್ಲಿ ವಿಐಎಸ್‌ಎಲ್ ಕಾರ್ಖಾನೆ ಮುಚ್ಚುವ ಆದೇಶದ ವಿರುದ್ಧ ಕಾರ್ಖಾನೆ ಮುಂಭಾಗದಲ್ಲಿ ಗುತ್ತಿಗೆ ಕಾರ್ಮಿಕರು ನಡೆಸುತ್ತಿರುವ ಅನಿರ್ಧಿಷ್ಟಾವಧಿ ಹೋರಾಟ ಬುಧವಾರ ೧೪ನೇ ದಿನ ಪೂರೈಸಿತು. ಈ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ ಜೆಡಿಯು ರಾಜ್ಯಾಧ್ಯಕ್ಷ ಮಹಿಮಾ ಜೆ. ಪಟೇಲ್‌ರವರಿಗೆ ಗುತ್ತಿಗೆ ಕಾರ್ಮಿಕರು ಮನವಿ ಸಲ್ಲಿಸಿದರು.
    ಭದ್ರಾವತಿ, ಫೆ. ೧ : ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಕರ್ನಾಟಕ ಜನತಾದಳ(ಸಂಯುಕ್ತ) ಪಕ್ಷ ಎಲ್ಲಾ ರೀತಿಯ ಹೋರಾಟಕ್ಕೂ ಸಿದ್ದವಾಗಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಮಹಿಮಾ ಜೆ. ಪಟೇಲ್ ಹೇಳಿದರು.
    ಕಾರ್ಖಾನೆ ಮುಚ್ಚುವ ಆದೇಶದ ವಿರುದ್ಧ ಕಾರ್ಖಾನೆ ಮುಂಭಾಗದಲ್ಲಿ ಗುತ್ತಿಗೆ ಕಾರ್ಮಿಕರು ನಡೆಸುತ್ತಿರುವ ಅನಿರ್ಧಿಷ್ಟಾವಧಿ ಹೋರಾಟ ಬುಧವಾರ ೧೪ನೇ ದಿನ ಪೂರೈಸಿತು. ಈ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ ಮಾತನಾಡಿದ ಅವರು, ನಮ್ಮ ಪಕ್ಷದ ವತಿಯಿಂದ ಕಾರ್ಖಾನೆ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು. ಈ ಸಂಬಂಧ ಬೆಂಗಳೂರಿನಲ್ಲಿ ಬೃಹತ್ ಸಮಾವೇಶ ಸಹ ಆಯೋಜಿಸಲಾಗುವುದು. ಅಲ್ಲದೆ ಬಿಹಾರ ರಾಜ್ಯದಲ್ಲಿ ನಮ್ಮ ಪಕ್ಷ ಅಧಿಕಾರದಲ್ಲಿದ್ದು, ಅಲ್ಲಿನ ಮುಖ್ಯಮಂತ್ರಿಗಳು, ಪಕ್ಷದ ಪ್ರಮುಖರಾದ ನಿತೀಶ್‌ಕುಮಾರ್‌ರವರ ನೇತೃತ್ವದಲ್ಲಿ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಲಾಗುವುದು ಎಂದರು.
    ನಮ್ಮ ತಂದೆಯವರು ರಾಜ್ಯದ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಅಂದು ರಾಜ್ಯ ಸರ್ಕಾರದ ಆರ್ಥಿಕ ಪರಿಸ್ಥಿತಿ ಸರಿ ಇಲ್ಲದ ಹಿನ್ನಲೆಯಲ್ಲಿ ಈ ಕಾರ್ಖಾನೆಯನ್ನು ಕೇಂದ್ರ ಸರ್ಕಾರಕ್ಕೆ ಹಸ್ತಾಂತರಿಸುವ ತೀರ್ಮಾನ ಕೈಗೊಳ್ಳಲಾಯಿತು. ನಂತರ ಕೇಂದ್ರ ಸರ್ಕಾರದ ಉಕ್ಕು ಪ್ರಾಧಿಕಾರಕ್ಕೆ ವಹಿಸಿಕೊಟ್ಟರೂ ಸಹ ಕಾರ್ಖಾನೆ ಅಭಿವೃದ್ಧಿ ಕಾಣದಿರುವುದು ವಿಪರ್ಯಾಸದ ಸಂಗತಿಯಾಗಿದೆ. ಪ್ರಸ್ತುತ ಕಾರ್ಖಾನೆ ಮುಚ್ಚುವ ಹಂತಕ್ಕೆ ತಲುಪಿರುವುದು ವಿಷಾದನೀಯ ಬೆಳವಣಿಯಾಗಿದೆ. ಕಾರ್ಮಿಕರು ಯಾವುದೇ ಕಾರಣಕ್ಕೂ ವಿಚಲಿತರಾಗಬಾರದು. ತಮ್ಮಲ್ಲಿರುವ ಕೌಶಲ್ಯಗಳಿಗೆ ತಕ್ಕಂತೆ ಬದುಕಿಗೆ ಪೂರಕವಾದ ಉದ್ಯೋಗಗಳನ್ನು ಸೃಷ್ಟಿಸಿಕೊಂಡು ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಬೇಕೆಂದರು.  
    ಬೃಹತ್ ಕಾರ್ಖಾನೆಗಳ ಆರಂಭದಲ್ಲಿಯೇ ಇವುಗಳು ಒಂದಲ್ಲ ಒಂದು ದಿನ ಅವನತಿ ದಾರಿ ಹಿಡಿಯುತ್ತವೆ ಎಂಬುದನ್ನು ನಮ್ಮ ಪೂರ್ವಿಕರಿಗೆ ಮನವರಿಕೆಯಾಗಿತ್ತು. ಈ ಹಿನ್ನಲೆಯಲ್ಲಿಯೇ ಮಹಾತ್ಮಗಾಂಧಿಯವರು ದೇಶದಲ್ಲಿ ಗುಡಿ ಕೈಗಾರಿಕೆಗಳು, ಸಣ್ಣ ಕೈಗಾರಿಕೆಗಳು ಹೆಚ್ಚು ಹೆಚ್ಚು ಆರಂಭಗೊಳ್ಳಬೇಕೆಂದಿದ್ದರು. ಇದೀಗ ಅವರ ಮಾತು ಸತ್ಯವಾಗಿ ಕಾಣುತ್ತಿದೆ ಎಂದರು.
    ಪಕ್ಷದ ಪ್ರಮುಖರಾದ ರಾಜ್ಯ ಪ್ರಧಾನ ಕಾರ್ಯದರ್ಶಿ ನಾಗರಾಜ್, ವಕ್ತಾರ ಬಿ.ಟಿ ರಮೇಶ್‌ಗೌಡ, ರಾಜ್ಯ ಕಾರ್ಯದರ್ಶಿಗಳಾದ ಶಶಿಕುಮಾರ್ ಗೌಡ, ಕಲ್ಪನ ಗೌಡ, ರೈತ ಘಟಕದ ಅಧ್ಯಕ್ಷರಾದ ಲಕ್ಷ್ಮೀ, ಕಲಾವತಿ, ಶ್ರೀನಿವಾಸ್,  ಸೇರಿದಂತೆ ಇನ್ನಿತರರು ಮಾತನಾಡಿದರು. ಯುವ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಾಬುದೀಪಕ್‌ಕುಮಾರ್, ಜಿಲ್ಲಾ ಸಂಚಾಲಕ ದೇವರಾಜ್ ಶಿಂಧೆ, ತಾಲೂಕು ಅಧ್ಯಕ್ಷ ರಘು ಸಂಕ್ಲಿಪುರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.


ಗುತ್ತಿಗೆ ಕಾರ್ಮಿಕರು ನಡೆಸುತ್ತಿರುವ ಹೋರಾಟಕ್ಕೆ ರಾಷ್ಟ್ರೀಯ ಮಾನವ ಹಕ್ಕುಗಳು ಮತ್ತು ಭ್ರಷ್ಟಾಚಾರ ನಿಯಂತ್ರಣ ಮಂಡಳಿ ಬೆಂಬಲ ಸೂಚಿಸಿದೆ. ಮಂಡಳಿ ಸಂಸ್ಥಾಪಕ ರಾಜ್ಯಾಧ್ಯಕ್ಷ ಡಿ.ಜೆ ಪ್ರಭು ಮಾತನಾಡಿದರು.

    ರಾಷ್ಟ್ರೀಯ ಮಾನವ ಹಕ್ಕುಗಳು ಮತ್ತು ಭ್ರಷ್ಟಾಚಾರ ನಿಯಂತ್ರಣ ಮಂಡಳಿ ಬೆಂಬಲ:

    ಗುತ್ತಿಗೆ ಕಾರ್ಮಿಕರು ನಡೆಸುತ್ತಿರುವ ಹೋರಾಟಕ್ಕೆ ರಾಷ್ಟ್ರೀಯ ಮಾನವ ಹಕ್ಕುಗಳು ಮತ್ತು ಭ್ರಷ್ಟಾಚಾರ ನಿಯಂತ್ರಣ ಮಂಡಳಿ ಬೆಂಬಲ ಸೂಚಿಸಿದೆ. ಮಂಡಳಿ ಸಂಸ್ಥಾಪಕ ರಾಜ್ಯಾಧ್ಯಕ್ಷ ಡಿ.ಜೆ ಪ್ರಭು ಮಾತನಾಡಿ, ಕಾರ್ಖಾನೆಗೆ ಅಗತ್ಯವಿರುವ ಬಂಡವಾಳ ಹೂಡುವ ಮೂಲಕ ಪುನಶ್ಚೇತನ ಕೈಗೊಳ್ಳಲು ಇಚ್ಛಾಶಕ್ತಿ ಇಲ್ಲದ ಸರ್ಕಾರ ಹಾಗು ಜನಪ್ರತಿನಿಧಿಗಳ ವಿರುದ್ಧ ಕಾರ್ಮಿಕರು ಸೂಕ್ತ ನಿರ್ಣಯ ಕೈಗೊಳ್ಳುವವರೆಗೂ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಾಧ್ಯವಿಲ್ಲ. ಈಗಲಾದರೂ ಕಾರ್ಮಿಕರು ಎಚ್ಚೆತ್ತುಕೊಂಡು ತಮ್ಮ ಹೋರಾಟ ನಡೆಸಬೇಕೆಂದರು.  ಮಂಡಳಿ ತಾಲೂಕು ಅಧ್ಯಕ್ಷ ಸಂತೋಷ್‌ಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

No comments:

Post a Comment