Wednesday, February 1, 2023

ಕೇಂದ್ರ ಬಜೆಟ್ : ಗಣ್ಯರ ಮೆಚ್ಚುಗೆ

ಜಿ. ಧರ್ಮಪ್ರಸಾದ್-ಲೆಕ್ಕ ಪರಿಶೋಧಕರು, ಭದ್ರಾವತಿ.
    ಭದ್ರಾವತಿ, ಫೆ. ೧: ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್‌ರವರು ಬುಧವಾರ ಮಂಡಿಸಿರುವ ಬಜೆಟ್ ಮಂಡನೆ ನಗರದ ಪ್ರಮುಖ ಗಣ್ಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
    ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ನೆಮ್ಮದಿಯ ಬದುಕು ನೀಡುವ ಬಜೆಟ್ :
    ಕೋವಿಡ್ ಸಂಕಷ್ಟದಲ್ಲಿ ಇಡೀ ಜಗತ್ತೇ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುವ ಈ ಸಂದರ್ಭದಲ್ಲಿ ೨೦೨೩-೨೪ನೇ ಸಾಲಿಗೆ ಸಂಬಂಧಿಸಿದಂತೆ ಮಂಡಿಸಿರುವ ಕೇಂದ್ರ ಬಜೆಟ್ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ನೆಮ್ಮದಿಯ ಬದುಕನ್ನು ಕಟ್ಟಿಕೊಳ್ಳುವ ಅವಕಾಶ ಕಲ್ಪಿಸಿದೆ.
    ರೈತರ ಬಾಳನ್ನು ಹಸನು ಮಾಡುವ ಕೃಷಿ ಆಧಾರಿತ ಸ್ಟಾರ್ಟಪ್‌ಗಳಿಗೆ ಉತ್ತೇಜನ, ಶಿಕ್ಷಣ ಕ್ಷೇತ್ರಕ್ಕೆ ಶೇಕಡ ೧೩ರಷ್ಟು ಹೆಚ್ಚಿನ ಅನುದಾನ ನಿಗದಿಪಡಿಸಿರುವುದು, ಬಂಡವಾಳ ವೆಚ್ಚ ಕ್ಯಾಪಿಟಲ್ ಎಕ್ಸ್ಪೆಂಡಿಚರ್ ಶೇ. ೩೩ರಷ್ಟು ಹೆಚ್ಚಿಸಿರುವ ಪರಿಣಾಮ ಸುಮಾರು ೧೦ ಲಕ್ಷ ಕೋಟಿ ವೆಚ್ಚ ಮಾಡುವ ಯೋಜನೆ ಭಾರತದಲ್ಲಿ ಬೃಹತ್ ಪ್ರಮಾಣದಲ್ಲಿ ಉದ್ಯೋಗಾವಕಾಶವನ್ನು ಸೃಷ್ಟಿಸುತ್ತದೆ. ಬಂಡವಾಳ ಹೂಡಿಕೆದಾರರಿಗೆ ಅನುಕೂಲವಾಗುವ ದೃಷ್ಟಿಯಿಂದ ಐವತ್ತಕ್ಕೂ ಹೆಚ್ಚು ವಿಮಾನ ನಿಲ್ದಾಣಗಳನ್ನು ನಿರ್ಮಿಸುತ್ತಿರುವುದು ಉದ್ಯೋಗಾವಕಾಶದ ಆಶಯಕ್ಕೆ ಪೂರಕವಾದ ಅಂಶವಾಗಿರುತ್ತದೆ. ಆದಾಯ ತೆರಿಗೆಯಲ್ಲಿ ಸಾಮಾನ್ಯ ವೇತನದಾರರಿಗೆ ಆರ್ಥಿಕ ಉತ್ತೇಜನ ನೀಡಿದ ಆಶಾದಾಯಕ ಬಜೆಟ್. ವಿಶ್ವದ ಪ್ರಬಲ ಆರ್ಥಿಕ ಶಕ್ತಿಯಾಗಿ ಬೆಳೆಯುತ್ತಿರುವ ಈ ಸನ್ನಿವೇಶದಲ್ಲಿ  ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಬಜೆಟ್ ಅತ್ಯಂತ ಶ್ಲಾಘನೀಯ ಮತ್ತು ದೂರ ದೃಷ್ಟಿ ಹೊಂದಿರುವ ಬಜೆಟ್ ಆಗಿದೆ ಎಂದು ನಗರದ ಲೆಕ್ಕ ಪರಿಶೋಧಕ ಜಿ. ಧರ್ಮಪ್ರಸಾದ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.


ಡಾ. ಬಿ.ಜಿ ಧನಂಜಯ
ಪ್ರಾಂಶುಪಾಲರು, ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಭದ್ರಾವತಿ.

    ಎಲ್ಲಾ ವರ್ಗದ ಜನರಿಗೂ ಪೂರಕವಾದ ಜನಪರ ಬಜೆಟ್ :
    ಸಂಪನ್ಮೂಲ ಕ್ರೋಢೀಕರಣಕ್ಕೆ ವಿಶೇಷ ಆದ್ಯತೆ ನೀಡಿರುವುದು ಆರ್ಥಿಕತೆ ಸದೃಢಗೊಳ್ಳಲಿದೆ. ರಫ್ತಿಗೆ ಉತ್ತೇಜನ ನೀಡಿರುವುದು ಸಹ ಒಳ್ಳೆಯ ಬೆಳವಣಿಗೆಯಾಗಿದೆ. ರಾಜ್ಯಗಳಿಗೆ ಹೆಚ್ಚಿನ ಅನುದಾನ ನೀಡುತ್ತಿರುವುದು ಒಕ್ಕೂಟ ವ್ಯವಸ್ಥೆಯಲ್ಲಿ ಸಣ್ಣ ರಾಜ್ಯಗಳಿಗೆ ಹೆಚ್ಚಿನ ಅನುಕೂಲವಾಗಲಿದೆ. ರಕ್ಷಣಾ ಕ್ಷೇತ್ರದಲ್ಲಿ ಆತ್ಮ ನಿರ್ಭರತೆ ಅಂತರಾಷ್ಟ್ರೀಯ ಮಟ್ಟದಲ್ಲಿ ಎಲ್ಲಾ ಸವಾಲುಗಳನ್ನು ಎದುರಿಸಲು ಶಕ್ತಿ ತುಂಬುತ್ತದೆ. ತೆರಿಗೆ ವಂಚನೆ ವಿರುದ್ಧ ನಿರ್ಧಾರ ತೆಗೆದುಕೊಳ್ಳುತ್ತಿರುವುದು ಒಳ್ಳೆಯ ಬೆಳವಣಿಗೆಯಾಗಿದೆ. ಒಟ್ಟಾರೆ ಭವಿಷ್ಯದಲ್ಲಿ ದೇಶ ಆರ್ಥಿಕವಾಗಿ ಸದೃಢಗೊಳ್ಳಲು ಅಗತ್ಯವಿರುವ ಎಲ್ಲಾ ವರ್ಗದ, ಎಲ್ಲಾ ಸಮಾಜದ ಜನಪರ ಬಜೆಟ್ ಆಗಿದೆ ಎಂದು ನಗರದ ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಜಿ ಧನಂಜಯ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

No comments:

Post a Comment