Saturday, April 15, 2023

ಅಪಪ್ರಚಾರಗಳಿಗೆ ಕಿವಿಗೊಡದೆ, ಬಿಜೆಪಿ ಅಭ್ಯರ್ಥಿ ಬೆಂಬಲಿಸಿ : ಬಿ.ವೈ ರಾಘವೇಂದ್ರ

ಭದ್ರಾವತಿ ತಾಲೂಕು ಭಾರತೀಯ ಜನತಾ ಪಕ್ಷದ ಮಂಡಲ ಕಛೇರಿಯಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಸಂಸದ ಬಿ.ವೈ ರಾಘವೇಂದ್ರ ಮಾತನಾಡಿದರು.
    ಭದ್ರಾವತಿ, ಏ. ೧೫ : ಕೇಂದ್ರ ಹಾಗು ರಾಜ್ಯ ಸರ್ಕಾರಗಳು ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿವೆ. ಆದರೂ ಸಹ ಅಪಪ್ರಚಾರ ನಡೆಸಲಾಗುತ್ತಿದೆ. ಮತದಾರರು ಇವುಗಳಿಗೆ ಕಿವಿಗೊಡದೆ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಸಂಸದ ಬಿ.ವೈ ರಾಘವೇಂದ್ರ ಮನವಿ ಮಾಡಿದರು.
    ಅವರು ಶನಿವಾರ ಪಕ್ಷದ ತಾಲೂಕು ಮಂಡಲ ಕಛೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕ್ಷೇತ್ರದಲ್ಲಿ ಕಳೆದ ೫ ವರ್ಷಗಳಲ್ಲಿ ಪಕ್ಷದಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ಎಲ್ಲರೂ ಸಹ ತಮ್ಮ ಜವಾಬ್ದಾರಿ ಸಮರ್ಥವಾಗಿ ನಿಭಾಯಿಸಿಕೊಂಡು ಬರುತ್ತಿದ್ದಾರೆ. ಪ್ರಸ್ತುತ ನೂತನವಾಗಿ ತಾಲೂಕು ಮಂಡಲ ಕಛೇರಿ ನಿರ್ಮಾಣಗೊಂಡಿರುವುದು ಇದಕ್ಕೆ ಸಾಕ್ಷಿಯಾಗಿದೆ ಎಂದರು.
    ಪಕ್ಷದವತಿಯಿಂದ ಹಮ್ಮಿಕೊಳ್ಳಲಾಗಿದ್ದ ಬಹಳಷ್ಟು ಕಾರ್ಯಕ್ರಮಗಳು ಯಶಸ್ವಿಯಾಗಿವೆ. ಅಲ್ಲದೆ ಪಕ್ಷದ ಕಾರ್ಯಕರ್ತರ ಸಂಖ್ಯೆ ಸಹ ಹೆಚ್ಚಳವಾಗಿದ್ದು, ಸಂಘಟನಾತ್ಮಕವಾಗಿ ಕ್ರಿಯಾವಾಗಿದೆ. ಈ ಹಿನ್ನಲೆಯಲ್ಲಿ ಈ ಬಾರಿ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲು ಬಹಳ ಮಂದಿ ಪೈಪೋಟಿಗೆ ಮುಂದಾಗಿದ್ದರು. ಪಕ್ಷ ಅಧಿಕೃತವಾಗಿ ಮಂಗೋಟೆ ರುದ್ರೇಶ್‌ರವರನ್ನು ಅಭ್ಯರ್ಥಿಯನ್ನಾಗಿ ಮಾಡಿದೆ. ಇವರ ಗೆಲುವಿಗೆ ಎಲ್ಲರೂ ಒಗ್ಗಟ್ಟಾಗಿ ಶ್ರಮಿಸಬೇಕಾಗಿದೆ ಎಂದರು.
    ಕ್ಷೇತ್ರದಲ್ಲಿ ಕೇಂದ್ರ ಹಾಗು ರಾಜ್ಯ ಸರ್ಕಾರಗಳಿಂದ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳನ್ನು ಮುಂದಿಟ್ಟುಕೊಂಡು ಮತಯಾಚನೆ ನಡೆಸಬೇಕಾಗಿದೆ. ವಿಐಎಸ್‌ಎಲ್ ಮತ್ತು ಎಂಪಿಎಂ ಈ ಕಾರ್ಖಾನೆಗಳ ವಿಚಾರವಾಗಿರಲಿ ಪೂರಕವಾಗಿ ಸ್ಪಂದಿಸಲಾಗಿದೆ. ಇದರ ಕುರಿತು ಮತದಾರರಿಗೆ ಸರಿಯಾಗಿ ಮನವರಿಕೆ ಮಾಡಬೇಕಾಗಿದೆ.  ಕ್ಷೇತ್ರದಾದ್ಯಂತ ಕಾರ್ಯಕರ್ತರ ಪಡೆ ಈ ಬಾರಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜಿಲ್ಲೆಯ ೭ ವಿಧಾನಸಭಾ ಕ್ಷೇತ್ರಗಳ ಪೈಕಿ ಈ  ವಿಧಾನಸಭಾ ಕ್ಷೇತ್ರದಲ್ಲೂ ಪಕ್ಷದ ಅಭ್ಯರ್ಥಿ ಗೆಲುವು ಸಾಧಿಸುವ ವಿಶ್ವಾಸವಿದೆ ಎಂದರು.
    ಪಕ್ಷದ ಅಭ್ಯರ್ಥಿ ಮಂಗೋಟೆ ರುದ್ರೇಶ್ ಮಾತನಾಡಿ, ಒಬ್ಬ ಸಾಮಾನ್ಯ ಕಾರ್ಯಕರ್ತನನ್ನು ಗುರುತಿಸಿ ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡಿರುವುದಕ್ಕೆ ಪಕ್ಷದ ಮುಖಂಡರುಗಳಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಈ ಬಾರಿ ಚುನಾವಣೆಯಲ್ಲಿ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುತ್ತಿದ್ದು, ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು.
    ವಿಧಾನ ಪರಿಷತ್ ಸದಸ್ಯ ಎಸ್. ರುದ್ರೇಗೌಡ, ಪಕ್ಷದ ಪ್ರಮುಖರಾದ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್, ಚುನಾವಣಾ ಪ್ರಭಾರಿ ಅಶೋಕ್ ಮೂರ್ತಿ, ಚುನಾವಣಾ ಸಂಚಾಲಕ ಎಂ. ಮಂಜುನಾಥ್, ಸಹ ಸಂಚಾಲಕ ಎಂ.ಎಸ್ ಸುರೇಶಪ್ಪ, ಮುಖಂಡರಾದ ಕೆ.ಪಿ ಪವಿತ್ರ ರಾಮಯ್ಯ, ತೀರ್ಥಯ್ಯ, ಜಿ. ಆನಂದಕುಮಾರ್, ಕೆ.ವಿ ಸತೀಶ್‌ಗೌಡ, ಉಷಾ ಸತೀಶ್‌ಗೌಡ, ಅನುಪಮ, ಶಶಿಕಲಾ, ಚನ್ನೇಶ್, ಚಂದ್ರು, ಗೋಕುಲ್ ಕೃಷ್ಣ, ಧನುಷ್ ಬೋಸ್ಲೆ, ಬಿ.ಎಸ್ ಶ್ರೀನಾಥ್ ಆಚಾರ್, ಸಿ. ರಾಘವೇಂದ್ರ, ಕವಿತಾ ಸುರೇಶ್, ಕವಿತಾ ರಾವ್, ಸಂಪತ್‌ರಾಜ್ ಬಾಂಟಿಯಾ, ಅವಿನಾಶ್, ಸುನಿಲ್ ಗಾಯಕ್ವಾಡ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

No comments:

Post a Comment