Monday, April 3, 2023

ಸಂವಿಧಾನ, ಕಾನೂನು ಗಾಳಿಗೆ ತೂರಿ ಪರಿಶಿಷ್ಟ ಜಾತಿಗಳ ವರ್ಗೀಕರಣ ಹಂಚಿಕೆ : ಆರೋಪ

ತಾಲೂಕು ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ


ರಾಜ್ಯ ಸರ್ಕಾರ ಪರಿಶಿಷ್ಟ ಜಾತಿಗಳ ವರ್ಗೀಕರಣ(ಒಳ ಮೀಸಲಾತಿ) ಹಂಚಿಕೆ ನಿರ್ಣಯ ವಿರೋಧಿಸಿ ಸೋಮವಾರ ಭದ್ರಾವತಿ ತಾಲೂಕು ಕಛೇರಿ ಮಿನಿವಿಧಾನಸೌಧ ಮುಂಭಾಗ ಮೀಸಲಾತಿ ಸಂರಕ್ಷಣಾ ಒಕ್ಕೂಟ ತಾಲೂಕು ಸಮಿತಿ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. 
    ಭದ್ರಾವತಿ, ಏ. ೩ : ರಾಜ್ಯ ಸರ್ಕಾರ ಪರಿಶಿಷ್ಟ ಜಾತಿಗಳ ವರ್ಗೀಕರಣ(ಒಳ ಮೀಸಲಾತಿ) ಹಂಚಿಕೆ ನಿರ್ಣಯ ಮಾಡಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ನಿರ್ಧರಿಸಲಾಗಿದೆ. ರಾಜ್ಯ ಸರ್ಕಾರದ ಈ ನಿರ್ಧಾರದಿಂದ ಭಾರತದ ಸಂವಿಧಾನ ಮತ್ತು ಕಾನೂನನ್ನು ಗಾಳಿಗೆ ತೂರಲಾಗಿದೆ. ಈ ಅಸಂವಿಧಾನಿಕ ಮತ್ತು ಅವೈಜ್ಞಾನಿಕ ಪ್ರಕ್ರಿಯೆಯನ್ನು ಮೀಸಲಾತಿ ಸಂರಕ್ಷಣಾ ಒಕ್ಕೂಟ ತಾಲೂಕು ಸಮಿತಿ ಖಂಡಿಸುವ ಜೊತೆಗೆ ವಿರೋಧಿಸುತ್ತದೆ ಎಂದು ಬಂಜಾರ ಸಮಾಜದ ಪ್ರಮುಖರು ಹೇಳಿದರು.
    ಸೋಮವಾರ ತಾಲೂಕು ಕಛೇರಿ ಮಿನಿವಿಧಾನಸೌಧ ಮುಂಭಾಗ ಪ್ರತಿಭಟನೆ ನಡೆಸಿ ಮಾತನಾಡಿದ ಪ್ರಮುಖರು, "ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ಒಪ್ಪಿರುವುದಿಲ್ಲ" ಎನ್ನುತ್ತಲೇ ರಾಜ್ಯ ಸರ್ಕಾರ ಈ ವರದಿಯನ್ನುಆಧರಿಸಿ ಪರಿಶಿಷ್ಟ ಜಾತಿಗಳನ್ನು ೪ ಗುಂಪುಗಳಾಗಿ ವಿಭಜಿಸಿ, ಒಳ ಮೀಸಲಾತಿ ಹಂಚಿಕೆ ಮಾಡಿರುವುದು ನ್ಯಾಯ ಸಮ್ಮತವಾಗಿಲ್ಲ ಮತ್ತು ಸಂವಿಧಾನ ವಿರೋಧವಾಗಿರುತ್ತದೆ. ನಾಡಿನ ಬಂಜಾರ, ಭೋವಿ, ಕೊರಮ, ಕೊರಚ ಸಮುದಾಯಗಳು ಸರ್ಕಾರದ ಈ ನಿರ್ಧಾರವನ್ನು ವಿರೋಧಿಸುತ್ತವೆ. ಈ ಸಂಬಂಧ ಮಾ.೨೫ರಂದು ನಡೆದ ರಾಜ್ಯ ಸಚಿವ ಸಂಪುಟದ ಸಭೆಯಲ್ಲಿ ಕೈಗೊಂಡಿರುವ ನಿರ್ಣಯ ತಕ್ಷಣ ಹಿಂಪಡೆಯಬೇಕೆಂದು ಆಗ್ರಹಿಸಿದರು.
    ಸರ್ಕಾರದ ಈ ನಿರ್ಧಾರ ವಿರೋಧಿಸಿ ಮಾ.೨೭ ರಂದು ಶಿಕಾರಿಮರದಲ್ಲಿ ನಡೆದ ಬೃಹತ್ ಪ್ರತಿಭಟನೆಯ ನೇತೃತ್ವವಹಿಸಿದ್ದ ಹೋರಾಟಗಾರರ ಮೇಲೆ ದೂರು ದಾಖಲಾಗಿದ್ದು, ದಾಖಲಾಗಿರುವ ಎಫ್‌ಐಆರ್ ಕೂಡಲೇ ರದ್ದುಪಡಿಸಬೇಕೆಂದು ಒತ್ತಾಯಿಸಿದರು. ಅಲ್ಪಸಂಖ್ಯಾತರಾದ ಮುಸ್ಲಿಂ ಸಮುದಾಯದವರ ಶೇ. ೪ ಮೀಸಲಾತಿ ರದ್ದು ಪಡಿಸಿರುವುದನ್ನು ಒಕ್ಕೂಟ ಖಂಡಿಸುತ್ತದೆ ಎಂದರು.
                                        ಪ್ರತಿಭಟನೆಯಲ್ಲಿ ತಾಲೂಕು ಬಂಜಾರ ಸಮಾಜದ ಅಧ್ಯಕ್ಷ ಪ್ರೇಮ್‌ಕುಮಾರ್, ಬಂಜಾರ ರೈತ ಸಂಘದ ರಾಜ್ಯಾಧ್ಯಕ್ಷ ಕೃಷ್ಣನಾಯ್ಕ, ಪ್ರಮುಖರಾದ ಡಿಎಸ್‌ಎಸ್ ಮುಖಂಡ ಸಿ. ಜಯಪ್ಪ, ಪ್ರವೀಣ್‌ನಾಯ್ಕ, ಎ. ಮಸ್ತಾನ್, ಇಬ್ರಾಹಿಂ ಖಾನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ತಾಲೂಕಿನ ವಿವಿಧ ತಾಂಡಗಳ ಬಂಜಾರ ಸಮಾಜದ ಮುಖಂಡರು, ಮಹಿಳೆಯರು ಪಾಲ್ಗೊಂಡಿದ್ದರು. ಹಳೇನಗರದ ಕನಕಮಂಟಪ ಮೈದಾನದಿಂದ ತಾಲೂಕು ಕಛೇರಿ ಮಿನಿವಿಧಾನಸೌಧದವರೆಗೂ ಪ್ರತಿಭಟನಾ ಮೆರವಣಿಗೆ ನಡೆಯಿತು. ತಹಸೀಲ್ದಾರ್ ಸುರೇಶ್ ಆಚಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಹೆಚ್ಚಿನ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.

No comments:

Post a Comment