Wednesday, May 31, 2023

ವಿಶ್ವ ತಂಬಾಕು ವಿರೋಧಿ ದಿನ : ಜಾಗೃತಿ ಜಾಥಾ

ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಎನ್‌ಸಿಡಿ ಘಟಕ ಹಾಗು ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ವತಿಯಿಂದ ಬುಧವಾರ ವಿಶ್ವ ತಂಬಾಕು ವಿರೋಧಿ ದಿನ ಆಚರಿಸಲಾಯಿತು.
    ಭದ್ರಾವತಿ, ಮೇ. ೩೧: ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಎನ್‌ಸಿಡಿ ಘಟಕ ಹಾಗು ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ವತಿಯಿಂದ ಬುಧವಾರ ವಿಶ್ವ ತಂಬಾಕು ವಿರೋಧಿ ದಿನ ಆಚರಿಸಲಾಯಿತು.
    ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಆವರಣದಿಂದ ಪ್ಲೆಕ್ಸ್, ಫಲಕಗಳನ್ನು ಹಿಡಿದು ಜಾಥಾ ನಡೆಸುವ ಮೂಲಕ ತಂಬಾಕು ಉತ್ಪನ್ನಗಳಿಂದ ಉಂಟಾಗುವ ದುಷ್ಪರಿಣಾಗಳ ಕುರಿತು ಜಾಗೃತಿ ಮೂಡಿಸಲಾಯಿತು.
    ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್, ಆಸ್ಪತ್ರೆಯ ಹಿರಿಯ ವೈದ್ಯ ಡಾ. ಡಿ.ಎಸ್ ಶಿವಪ್ರಕಾಶ್ ಸೇರಿದಂತೆ ವೈದ್ಯರು, ಶುಶ್ರೂಷಕಿಯರು, ಆಶಾ ಕಾರ್ಯಕರ್ತೆಯರು ಹಾಗು ಸಿಬ್ಬಂದಿಗಳು ಪಾಲ್ಗೊಂಡಿದ್ದರು.

ಶಾಲಾ ಪ್ರಾರಂಭೋತ್ಸವ : ಸಂಭ್ರಮದ ಆಚರಣೆ

ಭದ್ರಾವತಿ ನ್ಯೂಟೌನ್ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿ(ಪ್ರೌಢ ಶಾಲಾ ವಿಭಾಗ)ನಲ್ಲಿ ಬುಧವಾರ ಶಾಲಾ ಪ್ರಾರಂಭೋತ್ಸವ ಸಂಭ್ರಮದಿಂದ ಆಚರಿಸಲಾಯಿತು.  ಸರ್ಕಾರದ ಉಚಿತ ಪಠ್ಯಪುಸ್ತಕ ಹಾಗೂ ಸಮವಸ್ತ್ರ ವಿತರಣೆ ಮಾಡಲಾಯಿತು.
    ಭದ್ರಾವತಿ, ಮೇ. ೩೧: ನ್ಯೂಟೌನ್ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿ(ಪ್ರೌಢ ಶಾಲಾ ವಿಭಾಗ)ನಲ್ಲಿ ಬುಧವಾರ ಶಾಲಾ ಪ್ರಾರಂಭೋತ್ಸವ ಸಂಭ್ರಮದಿಂದ ಆಚರಿಸಲಾಯಿತು.
    ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನರವರ ಅಧ್ಯಕ್ಷತೆಯಲ್ಲಿ ವಿದ್ಯಾರ್ಥಿನಿಯರಿಗೆ ಸರ್ಕಾರದ ಉಚಿತ ಪಠ್ಯಪುಸ್ತಕ ಹಾಗೂ ಸಮವಸ್ತ್ರ ವಿತರಣೆ ಮಾಡಲಾಯಿತು. ಕಾಲೇಜು ಆವರಣ ತಳಿರುತೋರಣಗಳಿಂದ ಕಂಗೊಳಿಸುತ್ತಿತ್ತು. ಹಬ್ಬದ ವಾತಾವರಣ ಕಂಡು ಬರುತ್ತಿತ್ತು. ಮೊದಲ ದಿನ ಕಾಲೇಜಿಗೆ ಆಗಮಿಸಿದ ವಿದ್ಯಾರ್ಥಿನಿಯರನ್ನು ಅದ್ದೂರಿಯಾಗಿ ಸ್ವಾಗತಿಸಲಾಯಿತು.
    ಉಪಪ್ರಾಚಾರ್ಯರಾದ ಟಿ.ಎಸ್ ಸುಮನ ಸರ್ಕಾರದ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ಉತ್ತಮ ಕಲಿಕೆಯಲ್ಲಿ ತೊಡಗಲು ಮತ್ತು ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಸಾರ್ಥಕ ಗೊಳಿಸಲು ಮಾರ್ಗದರ್ಶನ ನೀಡಿದರು.
    ನಗರಸಭಾ ಸದಸ್ಯ ಕಾಂತರಾಜು ಮುಖ್ಯ ಅತಿಥಿಯಾಗಿ ಪಾಲ್ಗೊಂಡು ವಿದ್ಯಾರ್ಥಿಗಳಿಗೆ ಶುಭ ಕೋರಿದರು. ಶಿಕ್ಷಕರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಮುಂಬಡ್ತಿಪಡೆದು ವರ್ಗಾವಣೆ, ವಯೋನಿವೃತ್ತಿ ಹೊಂದಿದವರಿಗೆ ಬೀಳ್ಕೊಡುಗೆ

ಭದ್ರಾವತಿಯಲ್ಲಿ ಅನೌಪಚಾರಿಕ ಪಡಿತರ ತಾಲೂಕು ಕಛೇರಿ, ಕರ್ನಾಟಕ ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘ ತಾಲೂಕು ಶಾಖೆ ಹಾಗು ಡಿ ಗ್ರೂಪ್ ನೌಕರರ ಸಂಘದ ವತಿಯಿಂದ ಬುಧವಾರ ಸಹಾಯಕ ನಿರ್ದೇಶಕರ ಕಛೇರಿಯಲ್ಲಿ ಬೀಳ್ಕೊಡುಗೆ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.
    ಭದ್ರಾವತಿ, ಮೇ. ೩೧ : ಅನೌಪಚಾರಿಕ ಪಡಿತರ ತಾಲೂಕು ಕಛೇರಿ, ಕರ್ನಾಟಕ ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘ ತಾಲೂಕು ಶಾಖೆ ಹಾಗು ಡಿ ಗ್ರೂಪ್ ನೌಕರರ ಸಂಘದ ವತಿಯಿಂದ ಬುಧವಾರ ಸಹಾಯಕ ನಿರ್ದೇಶಕರ ಕಛೇರಿಯಲ್ಲಿ ಬೀಳ್ಕೊಡುಗೆ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.
    ಹಲವು ವರ್ಷಗಳಿಂದ ಆಹಾರ ನಿರೀಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ಡಿ. ಗಾಯತ್ರಿ ದೇವಿಯವರು ಆಹಾರ ಇಲಾಖೆ ಶಿರಸ್ತೆದಾರ್ ಹುದ್ದೆಗೆ ಮುಂಬಡ್ತಿ ಹೊಂದಿ ಸಾಗರಕ್ಕೆ ವರ್ಗಾವಣೆಗೊಂಡಿದ್ದಾರೆ.  ಕೆಎಫ್‌ಸಿಎಸ್‌ಸಿ ಮಳಿಗೆ ವ್ಯವಸ್ಥಾಪಕ ಜೆ.ಎಸ್ ಈಶ್ವರಪ್ಪ ಮತ್ತು ಆಹಾರ ಇಲಾಖೆ ಬಿ.ಆರ್ ಓಂಕಾರಯ್ಯ  ವಯೋ ನಿವೃತ್ತಿಗೊಂಡಿದ್ದಾರೆ. ಇವರನ್ನು ಸನ್ಮಾನಿಸಿ ಬೀಳ್ಕೊಡುಗೆ ನೀಡಲಾಯಿತು.
    ಕರ್ನಾಟಕ ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘದ ಜಿಲ್ಲಾಧ್ಯಕ್ಷ ಸಿದ್ದಲಿಂಗಯ್ಯ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಶಾಖೆ ನಗರ ಅಧ್ಯಕ್ಷ ಎಸ್.ಆರ್ ನಾಗರಾಜ್ ಮತ್ತು ಪದಾಧಿಕಾರಿಗಳು, ಅನೌಪಚಾರಿಕ ಪಡಿತರ ಕಛೇರಿ ಸಹಾಯಕ ನಿರ್ದೇಶಕ ವಿ.ಎಸ್ ಅಂಕಯ್ಯ, ಎ.ಟಿ ಬಸವರಾಜ್ ಹಾಗು ಕಛೇರಿ ಸಿಬ್ಬಂದಿ ವರ್ಗದವರು, ಡಿ ಗ್ರೂಪ್ ನೌಕರರ ಸಂಘದ ಅಧ್ಯಕ್ಷ ಸ್ವಾಮಿ, ಆರ್‌ಎಸ್‌ಎಸ್‌ಎನ್ ಸೊಸೈಟಿ ಅಧ್ಯಕ್ಷ ಹನುಮಂತಪ್ಪ, ಲಕ್ಷ್ಮೀಕಾಂತ್, ಕೃಷ್ಣಾನಾಯ್ಕ ಹಾಗು ಪಡಿತರ ವಿತರಕರು ಉಪಸ್ಥಿತರಿದ್ದರು.

ಭದ್ರಾವತಿಯಲ್ಲಿ ಸುಗ್ರಾಮ ಒಕ್ಕೂಟದ ಸಭೆ

ಭದ್ರಾವತಿ ತಾಲೂಕು ಸುಗ್ರಾಮ ಚುನಾಯಿತ ಗ್ರಾಮ ಪಂಚಾಯಿತಿ ಮಹಿಳಾ ಸದಸ್ಯರ ಒಕ್ಕೂಟದ ಸಭೆ ನಗರದ ಕಾಂಚನ ಹೋಟೆಲ್ ಸಭಾಂಗಣದಲ್ಲಿ ನಡೆಯಿತು.  
    ಭದ್ರಾವತಿ, ಮೇ. ೩೧ : ತಾಲೂಕು ಸುಗ್ರಾಮ ಚುನಾಯಿತ ಗ್ರಾಮ ಪಂಚಾಯಿತಿ ಮಹಿಳಾ ಸದಸ್ಯರ ಒಕ್ಕೂಟದ ಸಭೆ ನಗರದ ಕಾಂಚನ ಹೋಟೆಲ್ ಸಭಾಂಗಣದಲ್ಲಿ ನಡೆಯಿತು.  
    ಸಭೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯರ ಕೆಲಸದ ಅನುಭವಿ ನಿಯಮದ ಮೂಲಕ ನಡೆಸಲಾದ ಕೆಲಸಗಳ ಬಗ್ಗೆ, ಗೌರವಧನ, ಸಭಾಬದ್ಧತೆ, ಅನುದಾನದ ಕೊರತೆ ಸೇರಿದಂತೆ ಇತ್ಯಾದಿ ವಿಷಯಗಳನ್ನು ಅಭಿವೃದ್ಧಿ ಅಧಿಕಾರಿಗಳ ಗಮನಕ್ಕೆ ತರಲಾಯಿತು.
    ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಶಶಿಧರ್ ಇಲಾಖೆಯ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು. ಒಕ್ಕೂಟದ ಅಧ್ಯಕ್ಷೆ ಗೌರಮ್ಮ ಮಹಾದೇವ್ ಕೂಡ್ಲಿಗೆರೆ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಗೀತಾ ಅಂತರಗಂಗೆ, ಖಜಾಂಚಿ ಕವಿತಾ ರುದ್ರೇಶ್, ಒಕ್ಕೂಟದ ಸದಸ್ಯರು ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.

ಇರುವೆ ಟ್ರಸ್ಟ್ ವತಿಯಿಂದ ಸಾರ್ವಜನಿಕ ಈಜು ಕೊಳ ನಿರ್ಮಿಸಲು ಮನವಿ

ನಗರದ ಅಗತ್ಯತೆಗಳಲ್ಲಿ ಒಂದಾಗಿರುವ ಸಾರ್ವಜನಿಕ ಈಜು ಕೊಳ ನಿರ್ಮಿಸುವಂತೆ ಆಗ್ರಹಿಸಿ ಇರುವೆ ಟ್ರಸ್ಟ್ ವತಿಯಿಂದ ಭದ್ರಾವತಿ ನಗರಸಭೆ ಆಡಳಿತಕ್ಕೆ ಮನವಿ ಸಲ್ಲಿಸಲಾಯಿತು.
    ಭದ್ರಾವತಿ, ಮೇ. ೩೧ : ನಗರದ ಅಗತ್ಯತೆಗಳಲ್ಲಿ ಒಂದಾಗಿರುವ ಸಾರ್ವಜನಿಕ ಈಜು ಕೊಳ ನಿರ್ಮಿಸುವಂತೆ ಆಗ್ರಹಿಸಿ ಇರುವೆ ಟ್ರಸ್ಟ್ ವತಿಯಿಂದ ನಗರಸಭೆ ಆಡಳಿತಕ್ಕೆ ಮನವಿ ಸಲ್ಲಿಸಲಾಯಿತು.
   ನಡಿಗೆ, ಓಟ, ಕಬಡ್ಡಿ, ವಾಲಿಬಾಲ್, ಕ್ರಿಕೆಟ್, ಖೋ ಖೋ ಸೇರಿದಂತೆ ಮುಂತಾದ ಕ್ರೀಡೆಗಳಿಗೆ ಕ್ರೀಡಾಂಗಣಗಳ ಕೊರತೆ ಇಲ್ಲ. ಆದರೆ ದೇಶದಲ್ಲಿ ಈಜು ಕ್ರೀಡೆಗೆ ಹೆಚ್ಚಿನ ಮಹತ್ವವಿದ್ದರೂ ಈಜು ಕೊಳವಿಲ್ಲದೆ ಈಜು ಉತ್ಸಾಹಿಗಳಿಗೆ ನಿರಾಸೆ ಹುಟ್ಟಿಸಿದೆ. ನಗರದ ಅನೇಕ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಮತ್ತು ಈಜು ಕ್ರೀಡಾ ಪ್ರೇಮಿಗಳು ಬೇರೆ ಬೇರೆ ನಗರಗಳಿಗೆ ತೆರಳಿ ಹೆಚ್ಚಿನ ಹಣ ವ್ಯಯ ಮಾಡಿ ಈಜು ಕಲಿಕೆಯಲ್ಲಿ ತೊಡಗಿದ್ದಾರೆ. ಇದರಿಂದ ಪೋಷಕರಿಗೆ ಹೆಚ್ಚಿನ ಹೊರೆಯಾಗಿದೆ ಎಂದು ಅಳಲು ತೋರ್ಪಡಿಸಲಾಗಿದೆ.
    ಸಾಮಾನ್ಯವಾಗಿ ಈಜು ಕ್ರೀಡೆಯಲ್ಲಿ ಆಸಕ್ತಿ ಹೊಂದಿರುವ ಕೆಲವು ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ಹಾಜರಾಗದೆ ಅಥವಾ ರಜಾ ದಿನಗಳಲ್ಲಿ ಹೊಳೆ, ನದಿ, ಕೆರೆ, ಚಾನಲ್ ಮತ್ತಿತರೆಡೆ ಈಜು ಕಲಿಯಲು ಹೋಗಿ ಪ್ರಾಣ ಕಳೆದುಕೊಳ್ಳುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. ಮತ್ತೆ ಕೆಲವರು ಈಜು ಕಲಿತು ರಾಷ್ಟ್ರ ಮತ್ತು ಅಂತರ ರಾಷ್ಟ್ರೀಯ ಮಟ್ಟದ ಕ್ರೀಡೆಗಳಲ್ಲಿ ಭಾಗವಹಿಸಿ ಉತ್ತಮ ಸಾಧನೆ ಮಾಡಿದ್ದಾರೆ.  ನಗರದಲ್ಲಿ ರೈತರ, ಕಾರ್ಮಿಕರ ಹಾಗೂ ಬಡ ವರ್ಗದವರ ಮಕ್ಕಳಿಗೆ ಈಜು ಕಲಿಕೆ ಬಗ್ಗೆ ಹೆಚ್ಚಿನ ಆಸಕ್ತಿ ಇದ್ದರೂ ಸಹ ಈಜು ಕೊಳವಿಲ್ಲದೆ ಪರಿತಪಿಸಿದ್ದಾರೆ. ಅದೆಷ್ಟೋ ಮಕ್ಕಳು ಈಜು ಕೊಳ ಕಾಣದೆ ಅದೊಂದು ಶ್ರೀಮಂತರ ಕ್ರೀಡೆ ಎಂದೂ ಭಾವಿಸಿದ್ದಾರೆ. ಈ ಭಾವನೆ ದೂರ ಮಾಡುವ ನಿಟ್ಟಿನಲ್ಲಿ ಹೆಚ್ಚಿನ ಗಮನ ಹರಿಸುವಂತೆ ಕೋರಲಾಗಿದೆ.  
    ಈಜು ಕೊಳ ನಿರ್ಮಿಸುವ ನಿಟ್ಟಿನಲ್ಲಿ ಸಂಸದರು, ಶಾಸಕರು, ಜಿಲ್ಲಾಡಳಿತ ಮತ್ತು ನಗರಸಭೆ ಆಡಳಿತ ಇಚ್ಛಾಶಕ್ತಿ ಪ್ರದರ್ಶಿಸಬೇಕು. ಈಜು ಕೊಳ ನಿರ್ಮಿಸುವ ಮೂಲಕ ನಗರವನ್ನು ವಿನೂತನವಾಗಿ ವಿಶಿಷ್ಟವಾಗಿ ಅಭಿವೃದ್ಧಿಗೊಳಿಸಬೇಕೆಂದು ಒತ್ತಾಯಿಸಲಾಗಿದೆ.
    ಇರುವೆ ಟ್ರಸ್ಟ್ ಅಧ್ಯಕ್ಷ ಶಾಂತಕುಮಾರ್, ಉಪಾಧ್ಯಕ್ಷ ಕಿರಣ್‌ಕುಮಾರ್, ಸುಂದರ್‌ಬಾಬು, ಕೀರ್ತಿ, ಬಿಆರ್‌ಪಿ ಹೇಮಂತ್‌ಕುಮಾರ್, ಆರ್. ಮೋಹನ್, ಈಜು ತರಬೇತಿದಾರ ಪ್ರಕಾಶ್, ವೆಂಕಟೇಶ್, ಕೂಡ್ಲಿಗೆರೆ ತಿಪ್ಪೇಸ್ವಾಮಿ, ಅಂತರ ರಾಷ್ಟ್ರೀಯ ಈಜು ಪಟು ಮೋತಿನಾಯ್ಕ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Tuesday, May 30, 2023

ಮೇ.೩೧ರಂದು ಶಾಲಾ ಹಬ್ಬದೊಂದಿಗೆ ಶೈಕ್ಷಣಿಕ ಚಟುವಟಿಕೆಗಳಿಗೆ ಚಾಲನೆ

ಪೋಷಕರು ಸ್ವಯಂ ಪ್ರೇರಣೆಯಿಂದ ಮುಂದೆ ಬರಲಿ

ಭದ್ರಾವತಿ ನಗರಸಭೆ ವಾಪ್ತಿಯ ಹೃದಯ ಭಾಗದ ಜಟ್‌ಪಟ್ ನಗರದಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಆವರಣಕ್ಕೆ ಕಾಂಪೌಂಡ್ ಇಲ್ಲದೆ ಇರುವುದು.
    ಭದ್ರಾವತಿ, ಮೇ. ೩೦ : ಪ್ರಸಕ್ತ ಸಾಲಿನ ಶೈಕ್ಷಣಿಕ ಚಟುವಟಿಕೆಗಳಿಗೆ ಮೇ.೩೧ರಿಂದ ಶಾಲಾಹಬ್ಬದೊಂದಿಗೆ ಚಾಲನೆ ನೀಡಲಾಗುತ್ತಿದ್ದು, ಕ್ಷೇತ್ರ ಶಿಕ್ಷಣ ಇಲಾಖೆ ಈಗಾಗಲೇ ಎಲ್ಲಾ ರೀತಿಯ ಸಿದ್ದತೆಗಳನ್ನು ಕೈಗೊಂಡಿದೆ.
    ಆದರೆ ಕೆಲವು ಸರ್ಕಾರಿ ಶಾಲೆಗಳಲ್ಲಿ ಮೂಲ ಸೌಕರ್ಯಗಳು ಸಮರ್ಪಕವಾಗಿಲ್ಲದಿರುವುದು ಕಂಡು ಬರುತ್ತಿದೆ. ಶಾಲಾ ಹಬ್ಬದ ಹಿಂದಿನ ೨ ದಿನ ಶಾಲಾ ಕೊಠಡಿ ಹಾಗು ಆವರಣದಲ್ಲಿ ಸ್ವಚ್ಛತೆಗೆ ಗಮನ ನೀಡುವಂತೆ ಹಾಗು ಶಾಲಾ ವ್ಯಾಪ್ತಿಯಲ್ಲಿ ವಿಶೇಷ ದಾಖಲಾತಿ ಹಾಗು ಸಾಮಾನ್ಯ ದಾಖಲಾತಿ ಅಂದೋಲನ ಕೈಗೊಳ್ಳುವಂತೆ ಸಂಬಂಧಪಟ್ಟ ಶಾಲೆಗಳ ಶಾಲಾಭಿವೃದ್ಧಿ ಸಮಿತಿ ಹಾಗು ಶಿಕ್ಷಕರು ಮತ್ತು ಸಿಬ್ಬಂದಿಗಳಿಗೆ ಸೂಚಿಸಲಾಗಿತ್ತು. ಆದರೆ ಕೆಲವು ಶಾಲೆಗಳಲ್ಲಿ ಕೊಠಡಿ ಹಾಗು ಆವರಣದಲ್ಲಿ ಸ್ವಚ್ಛತೆ ಇನ್ನೂ ಸಮರ್ಪಕವಾಗಿ ಕೈಗೊಂಡಿಲ್ಲ.
    ಕೆಲವು ಸರ್ಕಾರಿ ಶಾಲೆಗಳಿಗೆ ಸೂಕ್ತ ರಕ್ಷಣೆ ಇಲ್ಲವಾಗಿದೆ. ಮುಖ್ಯವಾಗಿ ಶಾಲೆಯ ಆವರಣಕ್ಕೆ ಕಾಂಪೌಂಡ್ ಇಲ್ಲದೆ ಇರುವುದು ಕಂಡು ಬರುತ್ತಿದ್ದು, ಇದರಿಂದಾಗಿ ಈ ಶಾಲೆಗಳ ಬಳಿ ರಾತ್ರಿ ವೇಳೆ ಅನೈತಿಕ ಚಟುವಟಿಕೆಗಳು ಹೆಚ್ಚಾಗುತ್ತಿವೆ. ಅಲ್ಲದೆ ಪುಂಡ ಪೋಕರಿಗಳ, ಹಾವು, ಮುಂಗುಸಿ, ಬೀದಿ ನಾಯಿಗಳ, ದನ ಕರುಗಳ ತಾಣಗಳಾಗಿ ಮಾರ್ಪಟ್ಟಿವೆ. ಈ ಹಿಂದೆ ಸಂಬಂಧಪಟ್ಟ ಶಿಕ್ಷಣ ಸಚಿವರಿಗೆ ಈ ಸಂಬಂಧ ದೂರು ಸಲ್ಲಿಸಿ ತಕ್ಷಣ ಕಾಂಪೌಂಡ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವಂತೆ ಮನವಿ ಸಹ ಸಲ್ಲಿಸಲಾಗಿತ್ತು. ಆದರೆ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ.
    ಕೆಲವು ಸರ್ಕಾರಿ ಶಾಲೆಗಳ ಬಳಿ ವಿಶೇಷ ದಾಖಲಾತಿ ಹಾಗೂ ಸಾಮಾನ್ಯ ದಾಖಲಾತಿ ಕುರಿತು ಹಾಗು ಶಾಲೆಯಲ್ಲಿ ಸರ್ಕಾರದ ಪೋತ್ಸಾಹದಾಯಕ ಯೋಜನೆಗಳು, ವಿಶೇಷ ಸೌಲಭ್ಯಗಳು ಹಾಗು ಶಾಲೆಯಲ್ಲಿ ಲಭ್ಯವಿರುವ ಇತರೆ ಸೌಲಭ್ಯಗಳ ಕುರಿತು ಪ್ಲೆಕ್ಸ್‌ಗಳನ್ನು ಹಾಕಲಾಗಿದೆ.
    ತಾಲೂಕಿನಲ್ಲಿ ಕೆಲವು ಸರ್ಕಾರಿ ಶಾಲೆಗಳು ಶಾಲಾಭಿವೃದ್ಧಿ ಸಮಿತಿ, ಸ್ವಯಂ ಸೇವಾ ಸಂಸ್ಥೆಗಳು, ದಾನಿಗಳು ಹಾಗು ಸ್ಥಳೀಯರ ಸಹಕಾರದೊಂದಿಗೆ ಖಾಸಗಿ ಶಾಲೆಗಳನ್ನು ಮೀರಿಸುವಂತೆ ಗುಣಮಟ್ಟದ ಶಿಕ್ಷಣ ನೀಡುತ್ತಿವೆ. ಹಲವು ವಿಶೇಷ ಸೌಲಭ್ಯಗಳನ್ನು ಹೊಂದಿ ಮಕ್ಕಳನ್ನು ಶಾಲೆಗಳ ಕಡೆಗೆ ಆಕರ್ಷಿಸುತ್ತಿವೆ. ಅಲ್ಲದೆ ಉತ್ತಮ ಫಲಿತಾಂಶ ಸಹ ಪಡೆದುಕೊಳ್ಳುತ್ತಿವೆ.
    ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಸೇರಿಸಲು ಪೋಷಕರು ಸ್ವಯಂ ಪ್ರೇರಣೆಯಿಂದ ಮುಂದೆ ಬರಬೇಕಾಗಿದೆ. ಆಗ ಮಾತ್ರ ಸರ್ಕಾರಿ ಶಾಲೆಗಳು ಸಹ ಅಸ್ತಿತ್ವ ಕಂಡುಕೊಳ್ಳಲು ಸಾಧ್ಯ.


ಭದ್ರಾವತಿ ತಾಲೂಕು ಕಛೇರಿ ರಸ್ತೆಯ ಎ.ಕೆ ಕಾಲೋನಿ, ಹನುಮಂತ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಳಿ ವಿಶೇಷ ದಾಖಲಾತಿ, ಸಾಮಾನ್ಯ ದಾಖಲಾತಿ ಹಾಗು ಸೌಲಭ್ಯಗಳ ಕುರಿತ ಮಾಹಿತಿಗಳನ್ನೊಳಗೊಂಡ ಪ್ಲೆಕ್ಸ್ ಹಾಕಿರುವುದು.

ಶ್ರೀ ಜಗದ್ಗುರು ರೇಣುಕಾಚಾರ್ಯರ ಶಿಲಾವಿಗ್ರಹ ನಿರ್ಮಾಣದ ೩ನೇ ಕಲ್ಲಿಗೆ ವಿಶೇಷ ಪೂಜೆ

ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ಪೀಠದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ೭೫ ಅಡಿ ಎತ್ತರದ ಶ್ರೀ ಜಗದ್ಗುರು ರೇಣುಕಾಚಾರ್ಯರ ಶಿಲಾವಿಗ್ರಹದ ಕೆತ್ತನೆ ಕಾರ್ಯ ಭರದಿಂದ ಸಾಗುತ್ತಿದ್ದು, ಪಾಣಿಪೀಠದ ಕಲ್ಲನ್ನು ಮಡಕಶಿರದಿಂದ ಸಾಗಿಸಲಾಗುತ್ತಿದ್ದು, ೩ನೇ ಬೃಹತ್ ಕಲ್ಲು ಮಂಗಳವಾರ ಭದ್ರಾವತಿ ನಗರವನ್ನು ಪ್ರವೇಶಿದ ಹಿನ್ನಲೆಯಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
    ಭದ್ರಾವತಿ, ಮೇ. ೩೦: ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ಪೀಠದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ೭೫ ಅಡಿ ಎತ್ತರದ ಶ್ರೀ ಜಗದ್ಗುರು ರೇಣುಕಾಚಾರ್ಯರ ಶಿಲಾವಿಗ್ರಹದ ಕೆತ್ತನೆ ಕಾರ್ಯ ಭರದಿಂದ ಸಾಗುತ್ತಿದ್ದು, ಪಾಣಿಪೀಠದ ಕಲ್ಲನ್ನು ಮಡಕಶಿರದಿಂದ ಸಾಗಿಸಲಾಗುತ್ತಿದ್ದು, ೩ನೇ ಬೃಹತ್ ಕಲ್ಲು ಮಂಗಳವಾರ ನಗರವನ್ನು ಪ್ರವೇಶಿದ ಹಿನ್ನಲೆಯಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
    ಬೃಹತ್ ಗಾತ್ರದ ಕಲ್ಲನ್ನು ೧೧೨ ಚಕ್ರ ಹೊಂದಿರುವ ಲಾರಿಯಲ್ಲಿ ಪೀಠಕ್ಕೆ ಸಾಗಿಸಲಾಗುತ್ತಿದ್ದು, ನಗರದ ಬೈಪಾಸ್ ರಸ್ತೆಗೆ ಆಗಮಿಸಿದ ಲಾರಿಗೆ ಉಜ್ಜನಿಪುರ ಬಳಿ ಬಾಳೆಹೊನ್ನೂರು ರಂಭಾಪುರಿ ಶಾಖಾ ಬಿಳಕಿ ಹಿರೇಮಠದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿಯವರ ನೇತೃತ್ವದಲ್ಲಿ ಭಕ್ತರು ಸ್ವಾಗತಿಸಿ ವಿಶೇಷ ಪೂಜೆ ಸಲ್ಲಿಸಿದರು.  
    ಪಾಣಿಪೀಠದ ೧ ಮತ್ತು ೨ನೇ ಕಲ್ಲಿಗೂ ಈ ಹಿಂದೆ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿಯವರ ನೇತೃತ್ವದಲ್ಲಿ ಸ್ವಾಗತಿಸಿ ವಿಶೇಷ ಪೂಜೆ ಸಲ್ಲಿಸಲಾಗಿತ್ತು. ಶ್ರೀ ಜಗದ್ಗುರು ರೇಣುಕಾಚಾರ್ಯರ ಶಿಲಾವಿಗ್ರಹದ ಕತ್ತನೆ ಕಾರ್ಯ ಕೆಲವೇ ದಿನಗಳಲ್ಲಿ ಮುಕ್ತಾಯಗೊಂಡು ವಿಗ್ರಹ ಲೋಕಾರ್ಪಣೆಗೊಳ್ಳಲಿದೆ.
       ಪ್ರಮುಖರಾದ ಜಿ.ಎಂ ಮೂರ್ತಿ, ಅಶೋಕ್, ಎಚ್. ಮಂಜುನಾಥ್, ಬಿ.ಎಂ ರಮೇಶ್, ಬಿ.ಎಂ ಮಂಜುನಾಥ, ಎಸ್. ವಾಗೀಶ್, ಸತೀಶ್, ಮೋಹನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಜೂ.೬ರಂದು ಚಾಮೇಗೌಡ ಏರಿಯಾ ಶ್ರೀ ಮಾರಿಯಮ್ಮ ದೇವಿ ಕರಗ ಮಹೋತ್ಸವ

ಶ್ರೀ ಮಾರಿಯಮ್ಮ ದೇವಿ
    ಭದ್ರಾವತಿ, ಮೇ. ೩೦ : ಬಿ.ಎಚ್ ರಸ್ತೆ, ಚಾಮೇಗೌಡ ಏರಿಯಾ, ಶ್ರೀ ಮಾರಿಯಮ್ಮ ದೇವಿ ದೇವಸ್ಥಾನದಲ್ಲಿ ಜೂ.೬ರಂದು ಶ್ರೀ ಅಮ್ಮನವರ ಕರಗ ಮಹೋತ್ಸವ ನಡೆಯಲಿದೆ.
    ಜೂ.೬ರಂದು ಬೆಳಿಗ್ಗೆ ೮.೩೦ಕ್ಕೆ ಶ್ರೀ ಮುನೇಶ್ವರಸ್ವಾಮಿ ಪೂಜೆ ನಂತರ ಭದ್ರಾನದಿ ತೀರದಿಂದ ಶ್ರೀ ಅಮ್ಮನವರ ಕರಗ ಜೋಡಿಸಿಕೊಂಡು ರಾಜಬೀದಿ ಮೆರವಣಿಗೆ ಮುಖಾಂತರ ಬಂದು ದೇವಸ್ಥಾನ ತಲುಪುವುದು. ಮಧ್ಯಾಹ್ನ ೧ ಗಂಟೆಗೆ ಮಹಾಮಂಗಳಾರತಿ ನಂತರ ಅಂಬಲಿ ಉಯ್ಯಲಾಗುವುದು ಸಂಜೆ ೬ ಗಂಟೆಗೆ ಶ್ರೀ ಅಮ್ಮನವರ ಕರಗ ರಾಜಬೀದಿ ಮೆರವಣಿಗೆ ಬರುವುದು.
    ಜೂ.೭ರಂದು ಬೆಳಿಗ್ಗೆ ೯ಕ್ಕೆ ಅಮ್ಮನವರಿಗೆ ಅರಿಶಿನ ಅಭಿಷೇಕ ನಡೆಯುವುದು. ಜೂ.೧೩ರಂದು ಸಂಜೆ ೭ ರಿಂದ ಶಾಂತಿ ಪೂಜೆ ನಡೆಯುವುದು. ಜೂ.೧೩ರಂದು ಮಧ್ಯಾಹ್ನ ೧೨.೩೦ಕ್ಕೆ ಅನ್ನದಾನ ನಡೆಯಲಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಯಶಸ್ವಿಗೊಳಿಸುವಂತೆ ದೇವಸ್ಥಾನ ಸಮಿತಿ ಕೋರಿದೆ.

ಮೇ.೩೧ರಂದು ಬೀಳ್ಕೊಡುಗೆ ಸಮಾರಂಭ

    ಭದ್ರಾವತಿ, ಮೇ. ೩೦ : ಅನೌಪಚಾರಿಕ ಪಡಿತರ ತಾಲೂಕು ಕಛೇರಿ, ಕರ್ನಾಟಕ ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘ ತಾಲೂಕು ಶಾಖೆ ವತಿಯಿಂದ ಮೇ.೩೧ರಂದು ಮಧ್ಯಾಹ್ನ ೩ ಗಂಟೆಗೆ ಸಹಾಯಕ ನಿರ್ದೇಶಕರ ಕಛೇರಿಯಲ್ಲಿ ಬೀಳ್ಕೊಡುಗೆ ಸಮಾರಂಭ ಹಮ್ಮಿಕೊಳ್ಳಲಾಗಿದೆ.
    ಕರ್ನಾಟಕ ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘದ ಜಿಲ್ಲಾಧ್ಯಕ್ಷ ಸಿದ್ದಲಿಂಗಯ್ಯ ಅಧ್ಯಕ್ಷತೆ ವಹಿಸಲಿದ್ದು, ತಾಲೂಕು ಶಾಖೆ ನಗರ ಅಧ್ಯಕ್ಷ ಎಸ್.ಆರ್ ನಾಗರಾಜ್ ಮತ್ತು ಅನೌಪಚಾರಿಕ ಪಡಿತರ ಕಛೇರಿ ಸಹಾಯಕ ನಿರ್ದೇಶಕ ವಿ.ಎಸ್ ಅಂಕಯ್ಯ ಉಪಸ್ಥಿತರಿರುವರು.
    ಆಹಾರ ನಿರೀಕ್ಷಕಿ ಡಿ. ಗಾಯತ್ರಿ ದೇವಿ, ಕೆಎಫ್‌ಸಿಎಸ್‌ಸಿ ಮಳಿಗೆ ವ್ಯವಸ್ಥಾಪಕ ಜೆ.ಎಸ್ ಈಶ್ವರಪ್ಪ ಮತ್ತು ಆಹಾರ ಇಲಾಖೆ ಬಿ.ಆರ್ ಓಂಕಾರಯ್ಯ ಉಪಸ್ಥಿತರಿರುವರು. 

Monday, May 29, 2023

ಹೆಚ್ಚುತ್ತಿರುವ ರಸ್ತೆ ನಿಯಮ ಉಲ್ಲಂಘನೆ ಪ್ರಕರಣಗಳು : ಸಂಚಾರಿ ಪೊಲೀಸರ ಆತಂಕ

    ಭದ್ರಾವತಿ, ಮೇ. ೨೯ : ಶಿವಮೊಗ್ಗ ಪೊಲೀಸ್ ವತಿಯಿಂದ ರಸ್ತೆ ನಿಯಮ ಕುರಿತು ಸಾಕಷ್ಟು ಜಾಗೃತಿ ಮೂಡಿಸುತ್ತಿದ್ದರೂ ಸಹ ಇತ್ತೀಚಿನ ದಿನಗಳಲ್ಲಿ ಪ್ರಕರಣಗಳು ಹೆಚ್ಚಾಗುತ್ತಿವೆ.
    ರಸ್ತೆ ನಿಯಮ ಕಡ್ಡಾಯವಾಗಿ ಪಾಲಿಸುವಂತೆ ಜಾಗೃತಿ ಮೂಡಿಸುವ ಕಾರ್ಯದಲ್ಲಿ ಇಲಾಖೆ ನಿರಂತರವಾಗಿ ತೊಡಗಿಸಿಕೊಂಡಿದೆ. ಅದರಲ್ಲೂ ಯುವ ಸಮೂಹಕ್ಕೆ ಈ ಕುರಿತು ಹೆಚ್ಚಿನ ಜಾಗೃತಿ ಮೂಡಿಸಲಾಗುತ್ತಿದೆ. ಆದರೂ ಇತ್ತೀಚಿನ ದಿನಗಳಲ್ಲಿ ಪ್ರಕರಣಗಳು ಹೆಚ್ಚುತ್ತಿರುವುದಕ್ಕೆ ಸಂಚಾರಿ ಪೊಲೀಸರು ಆತಂಕ ವ್ಯಕ್ತಪಡಿಸುತ್ತಿದ್ದಾರೆ.
    ಪ್ರಮುಖವಾಗಿ ಹೆಲ್ಮೆಟ್ ಧರಿಸದಿರುವ ಹಾಗು ಚಾಲನಾ ಪರವಾನಗಿ ಇಲ್ಲದ ಪ್ರಕರಣಗಳು ಹೆಚ್ಚಾಗುತ್ತಿವೆ. ಸಂಚಾರಿ ಪೊಲೀಸ್ ಠಾಣಾಧಿಕಾರಿ ಭಾರತಿ ಅನಿಲ್ ಪತ್ರಿಕೆಗೆ ಮಾಹಿತಿ ನೀಡಿ, ಇಲಾಖೆವತಿಯಿಂದ ರಸ್ತೆ ಸುರಕ್ಷತೆ ಹಾಗು ನಿಯಮ ಪಾಲನೆ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ಆದರೂ ಸಹ ಹೆಲ್ಮೆಟ್ ಧರಿಸದಿರುವ ಪ್ರಕರಣಗಳು ಹೆಚ್ಚುತ್ತಿವೆ. ಪ್ರತಿ ದಿನ ಸುಮಾರು ೨೦ ಪ್ರಕರಣಗಳು ಹಾಗು ಚಾಲನಾ ಪರವಾನಗಿ ಇಲ್ಲದ ಸುಮಾರು ೨-೩ ಪಕರಣಗಳು ದಾಖಲಾಗುತ್ತಿವೆ. ಅಲ್ಲದೆ ಸರ್ಕಾರ ರಸ್ತೆ ಸುರಕ್ಷತೆ ಹಾಗು ನಿಯಮಗಳಿಗೆ ಸಂಬಂಧಿಸಿದಂತೆ ಹೊಸ ಹೊಸ ಕಾನೂನುಗಳನ್ನು ಜಾರಿಗೊಳಿಸುತ್ತಿದೆ. ಈ ಕಾನೂನುಗಳನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಇಲಾಖೆ ಮುಂದಾಗುತ್ತಿದೆ ಎಂದರು.
    ನಗರದಲ್ಲಿ ಹೆಚ್ಚಿನ ಸಂಖ್ಯೆಯ ಯುವಕರು ಚಾಲನಾ ಪರವಾನಗಿ ಇಲ್ಲದೆ ವಾಹನಗಳನ್ನು ಚಲಾಯಿಸುತ್ತಿದ್ದು, ಈ ಹಿನ್ನಲೆಯಲ್ಲಿ ಸುಮಾರು ೧೦೦೦ ಮಂದಿಗೆ ಉಚಿತವಾಗಿ ಚಾಲನಾ ಪರವಾನಗಿ ಮಾಡಿಸಿ ಕೊಡುವ ಬೃಹತ್ ಶಿಬಿರ ಆಯೋಜಿಸುವ ಅಗತ್ಯವಿದೆ.  ಈ ನಿಟ್ಟಿನಲ್ಲಿ ಸಂಘ-ಸಂಸ್ಥೆಗಳು, ಸ್ವಯಂ ಸೇವಾ ಸಂಸ್ಥೆಗಳು, ಆಸಕ್ತರು ಮುಂದೆ ಬಂದಲ್ಲಿ ಇಲಾಖೆ ಸಂಪೂರ್ಣ ಸಹಕಾರ ನೀಡಲಿದೆ ಎಂದರು.  

ಉತ್ತಮ ಪ್ರಜೆಯಾಗಿ ಬಾಳಲು ಜ್ಞಾನ ದಾರಿ ದೀಪ : ವೇ.ಬ್ರ. ಜಿ. ರಾಘವೇಂದ್ರ ಉಪಾಧ್ಯಾಯ

ಭದ್ರಾವತಿ ಅಪ್ಪರ್ ಹುತ್ತಾ ಅನನ್ಯ ಎಜ್ಯುಕೇಷನ್ ಟ್ರಸ್ಟ್ ವತಿಯಿಂದ ಸೋಮವಾರ ಅನನ್ಯ ಹ್ಯಾಪಿ ಹಾರ್ಟ್ಸ್ ಯುಕೆಜಿ ಹಾಗು ಎಲ್‌ಕೆಜಿ ವಿದ್ಯಾರ್ಥಿಗಳಿಗೆ ಶಾಸ್ತ್ರೋಕ್ತವಾಗಿ ಅಕ್ಷರಾಭ್ಯಾಸದ ಧಾರ್ಮಿಕ ಆಚರಣೆಗಳನ್ನು ನೆರವೇರಿಸಲಾಯಿತು.
    ಭದ್ರಾವತಿ, ಮೇ. ೨೯:  ಜಗತ್ತಿನಲ್ಲಿ ಜ್ಞಾನ ಹೊಂದಿರುವ ಏಕೈಕ ಜೀವಿ ಮನುಷ್ಯ. ಆತ ಸರಿಯಾದ ಸಮಯದಲ್ಲಿ ಸೂಕ್ತ ಸಂಸ್ಕಾರಗಳನ್ನು ಪಡೆದು ಜ್ಞಾನವಂತ, ಬುದ್ದಿವಂತ, ವಿದ್ಯಾವಂತನಾಗಿ ಉತ್ತಮ ಪ್ರಜೆಯಾಗಿ ಬಾಳಲು ಜ್ಞಾನ ದಾರಿ ತೋರುತ್ತದೆ ಎಂದು ಹುತ್ತಾಕಾಲೋನಿ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಪ್ರಧಾನ ಆರ್ಚಕ ವೇ.ಬ್ರ ಜಿ. ರಾಘವೇಂದ್ರ ಉಪಾಧ್ಯಾಯ ಹೇಳಿದರು.
    ಅವರು ಸೋಮವಾರ ನಗರದ ಅಪ್ಪರ್ ಹುತ್ತಾ ಅನನ್ಯ ಎಜ್ಯುಕೇಷನ್ ಟ್ರಸ್ಟ್ ವತಿಯಿಂದ ಅನನ್ಯ ಹ್ಯಾಪಿ ಹಾರ್ಟ್ಸ್ ಯುಕೆಜಿ ಹಾಗು ಎಲ್‌ಕೆಜಿ ವಿದ್ಯಾರ್ಥಿಗಳಿಗೆ ಶಾಸ್ತ್ರೋಕ್ತವಾಗಿ ಅಕ್ಷರಾಭ್ಯಾಸದ ಧಾರ್ಮಿಕ ಆಚರಣೆಗಳನ್ನು ನೆರವೇರಿಸಿ ಮಾತನಾಡಿದರು.
    ಭಾರತೀಯ ಸಂಸ್ಕೃತಿಯಲ್ಲಿ ಮಗು ಜನನದಿಂದ ಅಂತಿಮ ದಿನದವರೆಗೆ ಹಲವಾರು ರೀತಿಯ ಷೋಡಶ ಸಂಸ್ಕಾರಗಳನ್ನು ನಡೆಸಿಕೊಂಡು ಬರಲಾಗುತ್ತಿದೆ. ಷೋಡಶ ಸಂಸ್ಕಾರ ೧೬ ವಿಧಿವಿಧಾನಗಳನ್ನು ಒಳಗೊಂಡಿದೆ. ಅವುಗಳಲ್ಲಿ ಅಕ್ಷರಾಭ್ಯಾಸ ಬಹುಮುಖ್ಯ ಹಾಗು ಮಹತ್ವದ್ದಾಗಿದೆ. ಕಾರಣ ಪ್ರಾರಂಭದಲ್ಲಿ ಇದನ್ನು ಕೈಗೊಂಡಾಗ ಮಕ್ಕಳು ತಮ್ಮ ಶೈಕ್ಷಣಿಕ ವಿದ್ಯಾಭ್ಯಾಸದ ಬಗ್ಗೆ ಹೆಚ್ಚು ಗಮನ ಕೇಂದ್ರೀಕರಿಸುವ ಮೂಲಕ ತಮ್ಮ ಓದಿನ ಬಗ್ಗೆ ಆಸಕ್ತಿ ತಾಳುತ್ತಾರೆ ಎಂದರು.
    ಮಕ್ಕಳು ಶಿಕ್ಷಣ ಪಡೆಯುವ ಶಾಲೆಯೇ ಅವರ ಜೀವನದ ಸರಸ್ವತಿ ದೇಗುಲವಾಗಿದೆ. ಈ ದೇಗುಲದಲ್ಲಿ ಇಂದು ಮಕ್ಕಳಿಗೆ ಅಕ್ಷರಾಭ್ಯಾಸ ಶಾಸ್ತ್ರೋಕ್ತವಾಗಿ ಕೈಗೊಂಡು ಉತ್ತಮ ಸಂಸ್ಕಾರ ನೀಡುವ ಮೂಲಕ ಶಾಲಾ ದಿನವನ್ನು ಪ್ರಾರಂಭ ಮಾಡಲಾಗಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದರು.
    ಸಮಾಜದಲ್ಲಿ ಸ್ಥಿತಿವಂತರು, ಶ್ರೀಮಂತರು, ಆರ್ಥಿಕವಾಗಿ ಸಬಲರಾಗಿರುವವರು ತಮ್ಮ ತಮ್ಮ ಮಕ್ಕಳಿಗೆ ಈ ರೀತಿಯ ಸಂಸ್ಕಾರವನ್ನು ಪ್ರಸಿಧ್ದ ಧಾರ್ಮಿಕ ಸ್ಥಳಗಳು, ದೇವಾಲಯಗಳಲ್ಲಿ ವೈಯುಕ್ತಿಕವಾಗಿ ಮಾಡಿಸುತ್ತಾರೆ. ಆದರೆ ಅನನ್ಯ ಎಜ್ಯುಕೇಷನ್ ಟ್ರಸ್ಟ್ ವತಿಯಿಂದ ಎಲ್ಲಾ ಮಕ್ಕಳಿಗೂ ಈ ಸಂಸ್ಕಾರ ಸಾಮೂಹಿಕವಾಗಿ ಪ್ರತಿಯೊಬ್ಬರಿಗೂ ಮಾಡಿಸಿದ್ದು ಅಭಿನಂದನಾರ್ಹ ಎಂದರು.
    ಶಾಲಾ ಆಢಳಿತಾಧಿಕಾರಿ ಎನ್. ವೇಣುಗೋಪಾಲ್, ಮುಖ್ಯೋಪಾಧ್ಯಾಯರಾದ ಕಲ್ಲೇಶ್ ಕುಮಾರ್, ಸುನಿತಾ ನಟರಾಜ್, ತನುಜಾ, ಅನಿಲ್ ಹಾಗು ಶಾಲಾ ಅಧ್ಯಾಪಕ ಮತ್ತು ಇತರ ಸಿಬ್ಬಂದಿಗಳು, ಮಕ್ಕಳ ಪೋಷಕರು ,ಶಾಲಾ ಆಡಳಿತ ಮಂಡಳಿ ಸದಸ್ಯರುಗಳು ಉಪಸ್ಥಿತರಿದ್ದರು.

Sunday, May 28, 2023

ಪರಿಸರ ಉಳಿವಿನ ಜಾಗೃತಿಗಾಗಿ ಯುವಕನಿಂದ ೫೦ ಸಾವಿರ ಕಿ.ಮೀ ಸೈಕಲ್ ಜಾಥಾ ಅಭಿಯಾನ

ಭದ್ರಾವತಿ ಶ್ರೀ ವಾಸವಾಂಬ ದೇವಾಲಯದಲ್ಲಿ ಗುರ್ರಂ ಚೈತನ್ಯರಿಗೆ ಅಭಿನಂದನೆ

ಪರಿಸರ ಉಳಿಸುವ ನಿಟ್ಟಿನಲ್ಲಿ ಜಾಗೃತಿ ಮೂಡಿಸಲು ಆಂಧ್ರ ಪ್ರದೇಶದ ನೆಲ್ಲೂರಿನ ಯುವಕ ಗುರ್ರಂ ಚೈತನ್ಯರವರು ಸುಮಾರು ೫೦ ಸಾವಿರ ಕಿ.ಮೀ ಸೈಕಲ್ ಜಾಥಾ ಮೂಲಕ ಅಭಿಯಾನ ಕೈಗೊಂಡಿದ್ದು, ಭಾನುವಾರ ಭದ್ರಾವತಿಗೆ ಆಗಮಿಸಿದ ಇವರನ್ನು ಅಭಿನಂದಿಸಲಾಯಿತು.
    ಭದ್ರಾವತಿ, ಮೇ. ೨೮ : ಪರಿಸರ ಉಳಿಸುವ ನಿಟ್ಟಿನಲ್ಲಿ ಜಾಗೃತಿ ಮೂಡಿಸಲು ಆಂಧ್ರ ಪ್ರದೇಶದ ನೆಲ್ಲೂರಿನ ಯುವಕ ಗುರ್ರಂ ಚೈತನ್ಯರವರು ಸುಮಾರು ೫೦ ಸಾವಿರ ಕಿ.ಮೀ ಸೈಕಲ್ ಜಾಥಾ ಮೂಲಕ ಅಭಿಯಾನ ಕೈಗೊಂಡಿದ್ದಾರೆ.
    ನೆಲ್ಲೂರಿನಿಂದ ಆರಂಭಗೊಂಡಿರುವ ಸೈಕಲ್ ಜಾಥಾ ಅಭಿಯಾನ ೧೫೦ ದಿನಗಳನ್ನು ಪೂರೈಸಿದ್ದು, ಇದುವರೆಗೂ ಸುಮಾರು ೧೦ ಸಾವಿರ ಕಿ.ಮೀ ಕ್ರಮಿಸಿದ್ದಾರೆ. ಭಾನುವಾರ ನಗರಕ್ಕೆ ಆಗಮಿಸಿದ ಚೈತನ್ಯರನ್ನು ಹಳೇನಗರದ ಬಸವೇಶ್ವರ ವೃತ್ತದಲ್ಲಿರುವ ಶ್ರೀ ವಾಸವಾಂಬ ದೇವಾಲಯದಲ್ಲಿ ಸ್ವಾಗತಿಸಿ ಅಭಿನಂದಿಸಲಾಯಿತು.
    ಆರ್ಯವೈಶ್ಯ ಮಂಡಳಿ ಅಧ್ಯಕ್ಷ ಬದರಿನಾರಾಯಣ ಶ್ರೇಷ್ಠಿ, ಶ್ರೀ ಕನ್ಯಕಾಪರಮೇಶ್ವರಿ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಸಿ.ಎನ್ ಗಿರೀಶ್, ವಾಸವಿ ಮಹಿಳಾ ಮಂಡಳಿ ಅಧ್ಯಕ್ಷೆ ಸತ್ಯಲಕ್ಷ್ಮಿ, ಉಪಾಧ್ಯಕ್ಷೆ ಲತಾ ಬದರೀಶ್, ವಾಸವಿ ಯುವಜನ ಸಂಘದ ಸುಬ್ಬರಾಜ್, ವಾಸವಿ ವನಿತಾ ಸಂಘದ ಅಧ್ಯಕ್ಷೆ ಶ್ರೀಲಕ್ಷ್ಮಿ, ಕಾ.ರಾ ನಾಗರಾಜ್, ವಿಶಾಲಾಕ್ಷಿ, ನಾಗೇಶ್, ಗೋವಿಂದ, ಎಂ.ಎಲ್ ಶ್ರೀಧರಮೂರ್ತಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಸರ್ಕಾರಿ ಐಟಿಐ ವಿದ್ಯಾರ್ಥಿಗಳಿಗೆ ಕಾನೂನು ಅರಿವು, ಜಾಗೃತಿ ಕಾರ್ಯಕ್ರಮ

ಭದ್ರಾವತಿ ನ್ಯೂಟೌನ್ ಪೊಲೀಸ್ ಠಾಣೆ ವತಿಯಿಂದ ಬಿ.ಎಚ್ ರಸ್ತೆ, ಕಡದಕಟ್ಟೆ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಹಾಗು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.  
    ಭದ್ರಾವತಿ, ಮೇ. ೨೮ : ನಗರದ ನ್ಯೂಟೌನ್ ಪೊಲೀಸ್ ಠಾಣೆ ವತಿಯಿಂದ ಬಿ.ಎಚ್ ರಸ್ತೆ, ಕಡದಕಟ್ಟೆ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಹಾಗು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.  
    ಪ್ರೊಬೆಷನರಿ ಐಪಿಎಸ್ ಅಧಿಕಾರಿ ಬಿಂದುಮಣಿ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾದಕ ದ್ರವ್ಯ, ಸಂಚಾರಿ ನಿಯಮ ಪಾಲನೆ ಮತ್ತು ರಸ್ತೆ ಸುರಕ್ಷತೆ, ಇಆರ್‌ಎಸ್‌ಎಸ್-೧೧೨ ಸಹಾಯವಾಣಿ ಮತ್ತು ಪೋಕ್ಸೋ ಕಾಯ್ದೆ ಕುರಿತು ಮಾಹಿತಿ ನೀಡಲಾಯಿತು.
    ನಗರ ಪೊಲೀಸ್ ವೃತ್ತ ನಿರೀಕ್ಷಕ ಬಿ.ಪಿ ಶಾಂತಿನಾಥ್, ಸಂಚಾರಿ ಪೊಲೀಸ್ ಠಾಣಾಧಿಕಾರಿ ಭಾರತಿ ಅನಿಲ್, ಕೈಗಾರಿಕಾ ತರಬೇತಿ ಸಂಸ್ಥೆ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.  

ವಿಜೃಂಭಣೆಯಿಂದ ಜರುಗಿದ ಶ್ರೀ ಕರುಮಾರಿಯಮ್ಮ ೪೩ನೇ ವರ್ಷದ ಕರಗ ಮಹೋತ್ಸವ

ಭದ್ರಾವತಿ ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆ ಸಮೀಪದ ಶ್ರೀ ಕರುಮಾರಿಯಮ್ಮ ದೇವಸ್ಥಾನದ ೪೩ನೇ ವರ್ಷದ ಕರಗ ಮಹೋತ್ಸವ ಭಾನುವಾರ ವಿಜೃಂಭಣೆಯಿಂದ ನೆರವೇರಿತು.
    ಭದ್ರಾವತಿ, ಮೇ. ೨೮: ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆ ಸಮೀಪದ ಶ್ರೀ ಕರುಮಾರಿಯಮ್ಮ ದೇವಸ್ಥಾನದ ೪೩ನೇ ವರ್ಷದ ಕರಗ ಮಹೋತ್ಸವ ಭಾನುವಾರ ವಿಜೃಂಭಣೆಯಿಂದ ನೆರವೇರಿತು.
    ಬೆಳಿಗ್ಗೆ ಅಮ್ಮನವರಿಗೆ ಎಳನೀರು ಅಭಿಷೇಕ, ನಂತರ ಪಂಚಾಮೃತ ಮತ್ತು ತೀರ್ಥ ಪ್ರಸಾದ ವಿನಿಯೋಗ ನಡೆಯಿತು. ಬುಳ್ಳಾಪುರ ಚಾನಲ್ ಬಳಿ ಶಕ್ತಿ ಕರಗ ಸ್ಥಾಪನೆ ಮಾಡಿ ನಾದಸ್ವರ ಸೇರಿದಂತೆ ವಿವಿಧ ಕಲಾತಂಡಗಳೊಂದಿಗೆ ಮೆರವಣಿಗೆ ಮೂಲಕ ಮಧ್ಯಾಹ್ನ ೩ ಗಂಟೆಗೆ ಅಮ್ಮನವರ ದೇವಸ್ಥಾನಕ್ಕೆ ತರಲಾಯಿತು. ನಂತರ ಮಹಾಮಂಗಳಾರತಿಯೊಂದಿಗೆ ತೀರ್ಥಪ್ರಸಾದ ವಿನಿಯೊಗ ಹಾಗು ಶ್ರಿ ದೇವಿಗೆ ಅಂಬಲಿ ಮತ್ತು ಅನ್ನದಾನ ಸಂತರ್ಪಣೆ ನಡೆಯಿತು.
    ಪ್ರತಿ ವರ್ಷದಂತೆ ಈ ಬಾರಿ ಸಹ ವಿಜಯ್‌ಕುಮಾರ್ ಶಕ್ತಿ ಕರಗ ಹೊತ್ತು ತರುವ ಮೂಲಕ ಸೇವೆ ಸಮರ್ಪಿಸಿದರು. ನ್ಯೂಟೌನ್, ನ್ಯೂಕಾಲೋನಿ, ಕೂಲಿಬ್ಲಾಕ್ ಶೆಡ್ ಆಂಜನೇಯ ಅಗ್ರಹಾರ, ವಿದ್ಯಾಮಂದಿರ, ಜನ್ನಾಪುರ ಸೇರಿದಂತೆ ನಗರದ ವಿವಿಧೆಡೆಗಳಿಂದ ಭಕ್ತರು ಆಗಮಿಸಿದ್ದರು.
    ದೇವಸ್ಥಾನ ಸಮಿತಿ ಅಧ್ಯಕ್ಷ ಕುಪ್ಪಸ್ವಾಮಿ ನೇತೃತ್ವವಹಿಸಿದ್ದರು. ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು, ಸೇವಾಕರ್ತರು, ದೇವಸ್ಥಾನದ ಪ್ರಧಾನ ಅರ್ಚಕ ಕಾಶಿನಾಥ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Saturday, May 27, 2023

ರಂಗ ಕಲಾವಿದರು ಭದ್ರಾವತಿ ಅಧ್ಯಕ್ಷರಾಗಿ ಬಿ. ಕಮಲಾಕರ

ಬಿ. ಕಮಲಾಕರ
    ಭದ್ರಾವತಿ, ಮೇ. ೨೭ : ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ರಂಗ ಕಲಾವಿದರು ಭದ್ರಾವತಿ ಸಂಘದ ಅಧ್ಯಕ್ಷರಾಗಿ ಎಂಪಿಎಂ ನಿವೃತ್ತ ಕಾರ್ಮಿಕ, ಹಿರಿಯ ರಂಗಕಲಾವಿದ ಬಿ. ಕಮಲಾಕರ ಆಯ್ಕೆಯಾಗಿದ್ದಾರೆ.
    ಶುಕ್ರವಾರ ನಡೆದ ಸಭೆಯಲ್ಲಿ ಸಂಘದ ನೂತನ ಅಧ್ಯಕ್ಷರು ಹಾಗು ಪದಾಧಿಕಾರಿಗಳು ಮತ್ತು ಸದಸ್ಯರನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಬಿ. ಕಮಲಾಕರ, ಉಪಾಧ್ಯಕ್ಷರಾಗಿ ಜಿ. ದಿವಾಕರ, ಪ್ರಧಾನ ಕಾರ್ಯದರ್ಶಿಯಾಗಿ ತಮಟೆ ಜಗದೀಶ್, ಸಹ ಕಾರ್ಯದರ್ಶಿಯಾಗಿ ಚಿದಾನಂದ, ಖಜಾಂಚಿಯಾಗಿ ಕೆ.ಎಸ್ ರವಿಕುಮಾರ್ ಮತ್ತು ಸದಸ್ಯರಾಗಿ ಡಿ.ಎನ್ ಪುಟ್ಟಸ್ವಾಮಿ, ಎಂ. ಸುಚಿತ್ರ., ಶಿಲ್ಪಕಲಾ, ಶಿವಾನಂದಮೂರ್ತಿ, ವೈ.ಕೆ ಹನುಮಂತಯ್ಯ, ಶಿವರಾಜ್, ಶ್ರೀಧರೇಶ್ ಮತ್ತು ಜಿ. ರವಿಕುಮಾರ್ ಆಯ್ಕೆಯಾಗಿದ್ದಾರೆ.

ಕೈಗಾರಿಕಾ ಕ್ಷೇತ್ರಕ್ಕೆ ಮಂತ್ರಿಗಿರಿ ಸ್ಥಾನದ ಶಾಪ ವಿಮೋಚನೆ ಯಾವಾಗ..?

    * ಅನಂತಕುಮಾರ್
    ಭದ್ರಾವತಿ, ಮೇ. ೨೭ : ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಹಾಗು ಮೈಸೂರು ಕಾಗದ ಕಾರ್ಖಾನೆ ಸ್ಥಾಪನೆಯೊಂದಿಗೆ ಸುಮಾರು ೮ ದಶಕಗಳ ಹಿಂದೆಯೇ ವಿಶ್ವದ ಭೂಪಟದಲ್ಲಿ ಕೈಗಾರಿಕಾ ನಗರ ಎಂಬ ಹೆಗ್ಗಳಿಕೆಯಿಂದ ಗುರುತಿಸಿಕೊಂಡಿದ್ದ ಕ್ಷೇತ್ರಕ್ಕೆ ಇದುವರೆಗೂ ಮಂತ್ರಿ ಭಾಗ್ಯ ಒದಗಿ ಬಂದಿಲ್ಲ.
    ರಾಜಕೀಯವಾಗಿ ಕ್ಷೇತ್ರವನ್ನು ಆರಂಭದಿಂದಲೂ ಕಡೆಗಣಿಸಿಕೊಂಡು ಬರಲಾಗುತ್ತಿದ್ದು, ಇದು ಇಂದಿಗೂ ಮುಂದುವರೆದಿದೆ. ಪ್ರಸ್ತುತ ಕಾಲಘಟ್ಟದಲ್ಲಿ ಕ್ಷೇತ್ರ ಬೆಂಗಳೂರು ಮಹಾನಗರದಂತೆ ಬೆಳವಣಿಗೆ ಹೊಂದಬೇಕಾಗಿತ್ತು. ಆದರೆ ಈ ಕ್ಷೇತ್ರವನ್ನು ಪ್ರತಿನಿಧಿಸಿರುವ ಜನಪ್ರತಿನಿಧಿಗಳಿಗೆ ರಾಜಕೀಯವಾಗಿ ಸೂಕ್ತ ಸ್ಥಾನಮಾನಗಳು ಲಭಿಸದಿರುವುದು ವಿಪರ್ಯಾಸದ ಸಂಗತಿಯಾಗಿದೆ.  
    ೧೯೫೭ರಲ್ಲಿ ಕಾಂಗ್ರೆಸ್ ಪಕ್ಷದಿಂದ ಡಿ.ಟಿ ಸೀತಾರಾಮರಾವ್, ೧೯೬೨ರಲ್ಲಿ ಕಾಂಗ್ರೆಸ್ ಪಕ್ಷದಿಂದ ಟಿ.ಡಿ ದೇವೇಂದ್ರಪ್ಪ, ೧೯೬೭ರಲ್ಲಿ ಪ್ರಜಾ ಸೋಷಿಯಲಿಸ್ಟ್ ಪಾರ್ಟಿ(ಪಿಎಸ್‌ಪಿ)ಯಿಂದ ಅಬ್ದುಲ್ ಖುದ್ದೂಸ್ ಅನ್ವರ್, ೧೯೭೨ರಲ್ಲಿ ಕಾಂಗ್ರೆಸ್ ಪಕ್ಷದಿಂದ ಅಬ್ದುಲ್ ಖುದ್ದೂಸ್ ಅನ್ವರ್, ೧೯೭೮ರಲ್ಲಿ ಕಾಂಗ್ರೆಸ್(ಐ) ಪಕ್ಷದಿಂದ ಜಿ. ರಾಜಶೇಖರ್, ೧೯೮೩ರಲ್ಲಿ ಜೆಎನ್‌ಪಿ ಪಕ್ಷದಿಂದ ಸಾಲೇರ ಎಸ್ ಸಿದ್ದಪ್ಪ, ೧೯೮೫ರಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸಾಲೇರ ಎಸ್ ಸಿದ್ದಪ್ಪ, ೧೯೮೯ರಲ್ಲಿ ಕಾಂಗ್ರೆಸ್ ಪಕ್ಷದಿಂದ ಇಸಾಮಿಯಾ, ೧೯೯೪ರಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಎಂ.ಜೆ ಅಪ್ಪಾಜಿ, ೧೯೯೯ರಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಎಂ.ಜೆ ಅಪ್ಪಾಜಿ, ೨೦೦೪ರಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಬಿ.ಕೆ ಸಂಗಮೇಶ್ವರ್, ೨೦೦೮ರಲ್ಲಿ ಕಾಂಗ್ರೆಸ್ ಪಕ್ಷದಿಂದ ಬಿ.ಕೆ ಸಂಗಮೇಶ್ವರ್, ೨೦೧೩ರಲ್ಲಿ ಜೆಡಿಎಸ್ ಪಕ್ಷದಿಂದ ಎಂ.ಜೆ ಅಪ್ಪಾಜಿ, ೨೦೧೮ರಲ್ಲಿ ಕಾಂಗ್ರೆಸ್ ಪಕ್ಷದಿಂದ ಬಿ.ಕೆ ಸಂಗಮೇಶ್ವರ್ ಮತ್ತು ೨೦೨೩ರಲ್ಲಿ ಕಾಂಗ್ರೆಸ್ ಪಕ್ಷದಿಂದ ಬಿ.ಕೆ ಸಂಗಮೇಶ್ವರ್ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಈ ಪೈಕಿ ಅಬ್ದುಲ್ ಖುದ್ದೂಸ್ ಅನ್ವರ್ ಮತ್ತು ಸಾಲೇರ ಎಸ್ ಸಿದ್ದಪ್ಪ ತಲಾ ಎರಡು ಬಾರಿ, ಎಂ.ಜೆ ಅಪ್ಪಾಜಿ ೩ ಬಾರಿ ಹಾಗು ಬಿ.ಕೆ ಸಂಗಮೇಶ್ವರ್ ೪ ಬಾರಿ ಶಾಸಕರಾಗಿದ್ದಾರೆ. ಆದರೆ ಇದುವರೆಗೂ ಯಾರಿಗೂ ಮಂತ್ರಿಗಿರಿ ಸ್ಥಾನ ಲಭಿಸಿಲ್ಲ.
    ೪ ಬಾರಿ ಗೆದ್ದರೂ ಮಂತ್ರಿ ಭಾಗ್ಯ ಇಲ್ಲ :
    ರಾಜ್ಯದ ರಾಜಕೀಯದ ಇತಿಹಾಸದಲ್ಲಿ ಒಂದು ಅಥವಾ ಎರಡು ಬಾರಿ ಗೆದ್ದವರೇ ಮುಖ್ಯಮಂತ್ರಿ, ಮಂತ್ರಿಯಾಗಿರುವುದು ಕಾಣಬಹುದಾಗಿದೆ. ಸಂಗಮೇಶ್ವರ್ ೪ ಬಾರಿ ಗೆದ್ದರೂ ಮಂತ್ರಿಯಾಗದಿರುವುದು ವಿಪರ್ಯಾಸದ ಸಂಗತಿಯಾಗಿದೆ. ಸಂಗಮೇಶ್ವರ್ ಬಿಟ್ಟು ಕ್ಷೇತ್ರವನ್ನು ಪ್ರತಿನಿಧಿಸಿರುವ ಮಾಜಿ ಶಾಸಕರು ಯಾರು ಸಹ ಬದುಕಿಲ್ಲ. ಕಣ್ಮರೆಯಾಗಿ ಇತಿಹಾಸ ಪುಟಗಳಲ್ಲಿ ಸೇರ್ಪಡೆಗೊಂಡಿದ್ದಾರೆ. ಕ್ಷೇತ್ರದ ಜನರು ಈ ಬಾರಿ ಮಂತ್ರಿ ಸ್ಥಾನ ಲಭಿಸುವ ಕನಸು ಕಂಡಿದ್ದರು. ಆದರೆ ಇದೀಗ ಕನಸು ಕನಸಾಗಿಯೇ ಉಳಿದು ಬಿಟ್ಟಿದೆ.
    ನಿಗಮ ಮಂಡಳಿಗೆ ಸೀಮಿತ :
    ಕ್ಷೇತ್ರಕ್ಕೆ ಸಚಿವ ಸ್ಥಾನ ಲಭಿಸುವ ಬದಲು ನಿಗಮ ಮಂಡಳಿ ಸ್ಥಾನ ಲಭಿಸಿದ್ದು, ಅದರಲ್ಲೂ ವಿಶೇಷತೆ ಎಂದರೆ ಶಾಸಕರಾಗಿ ಆಯ್ಕೆಯಾಗದವರಿಗೆ ನಿಗಮ ಮಂಡಳಿ ಸ್ಥಾನ ಲಭಿಸಿದೆ. ಈ ಹಿಂದೆ ಯಡಿಯೂರಪ್ಪ ನೇತೃತ್ವದ ಸರ್ಕಾರದಲ್ಲಿ ಬಿಜೆಪಿ ತಾಲೂಕು ಮಂಡಲ ಮಾಜಿ ಅಧ್ಯಕ್ಷೆ ಸಿ. ಮಂಜುಳ ಅವರನ್ನು ಮಹಿಳಾ ಆಯೋಗದ ಅಧ್ಯಕ್ಷರನ್ನಾಗಿ ನೇಮಕಗೊಳಿಸಲಾಗಿತ್ತು. ನಂತರ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಬಲ್ಕೀಶ್ ಬಾನು ಅವರನ್ನು ಕರ್ನಾಟಕ ರಾಜ್ಯ ಅಲ್ಪ ಸಂಖ್ಯಾತರ ಆಯೋಗದ ಅಧ್ಯಕ್ಷರನ್ನಾಗಿ ನೇಮಕಗೊಳಿಸಲಾಗಿತ್ತು. ೨೦೧೯ರಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್‌ರವರನ್ನು ಕೆಆರ್‌ಐಡಿಎಲ್ ಅಧ್ಯಕ್ಷರಾಗಿ ನೇಮಕಗೊಳಿಸಲಾಗಿತ್ತು. ಸುಮಾರು ೭ ತಿಂಗಳು ಸಂಗಮೇಶ್ವರ್ ಅಧ್ಯಕ್ಷರಾಗಿದ್ದರು.
    ಪಕ್ಷದಲ್ಲಿ ಉನ್ನತ ಸ್ಥಾನ :
    ಮೂಲತಃ ಕ್ಷೇತ್ರದವರಾದ ಬಿ.ವಿ ಶ್ರೀನಿವಾಸ್ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿದ್ದು, ಇದೆ ರೀತಿ ಮಹಮದ್ ನಲಪಾಡ್ ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿದ್ದಾರೆ. ಪಕ್ಷದಲ್ಲಿ ಮಾತ್ರ ಉನ್ನತ ಸ್ಥಾನ ಲಭಿಸಿದ್ದು, ಆದರೆ ಸರ್ಕಾರದಲ್ಲಿ ಇದುವರೆಗೂ ಮಂತ್ರಿಗಿರಿ ಸ್ಥಾನ ಲಭಿಸದಿರುವುದು ವಿಪರ್ಯಾಸದ ಸಂಗತಿಯಾಗಿದೆ.  ಮಂತ್ರಿಗಿರಿ ಸ್ಥಾನ ಎಂಬುದು ಒಂದು ರೀತಿ ಶಾಪದ ಕಗ್ಗಂಟಿನಲ್ಲಿಯೇ ಸಿಲುಕಿಕೊಂಡಿದೆಯೇ ಎಂಬ ಭಾವನೆ ಇದೀಗ ಕ್ಷೇತ್ರದ ಜನತೆಯಲ್ಲಿ ಮೂಡಿದೆ.

ಮೇ.೩೧ರಂದು ಶಾಲಾ ಪ್ರಾರಂಭೋತ್ಸವಕ್ಕೆ ಹಬ್ಬದ ರೀತಿಯಲ್ಲಿ ಸಕಲ ಸಿದ್ದತೆ

ಪತ್ರಿಕಾಗೋಷ್ಠಿಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಮಾಹಿತಿ

ಭದ್ರಾವತಿಯಲ್ಲಿ ಶನಿವಾರ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಶಿಕ್ಷಣ ಇಲಾಖೆಯ ಪ್ರಸಕ್ತ ಶೈಕ್ಷಣಿಕ ಸಾಲಿನ ಮಾಗದರ್ಶಿ ಬಿಡುಗಡೆಗೊಳಿಸಿದರು. 
    ಭದ್ರಾವತಿ, ಮೇ. ೨೭ : ತಾಲೂಕಿನ ಸರ್ಕಾರಿ ಶಾಲೆಗಳಲ್ಲಿ ಈ ಬಾರಿ ಪ್ರಸಕ್ತ ಶೈಕ್ಷಣಿಕ ಸಾಲಿನ ಶಾಲಾ ಪ್ರಾರಂಭೋತ್ಸವ ಮೇ.೩೧ರಂದು ಹಬ್ಬದ ರೀತಿಯಲ್ಲಿ ಆಚರಿಸಲು ಸಕಲ ಸಿದ್ದತೆಗಳನ್ನು ಕೈಗೊಳ್ಳಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಹೇಳಿದರು.
    ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಶಿಕ್ಷಣ ಇಲಾಖೆಯ ಪ್ರಸಕ್ತ ಶೈಕ್ಷಣಿಕ ಸಾಲಿನ ಮಾಗದರ್ಶಿ ಬಿಡುಗಡೆಗೊಳಿಸಿ ಮಾತನಾಡಿದರು. ಮೇ.೨೯ ಮತ್ತು ೩೦ ಎರಡು ದಿನ ಶಾಲಾ ಕೊಠಡಿ, ಆವರಣದ ಪರಿಸರ ಸ್ವಚ್ಛತೆ, ಕುಡಿಯುವ ನೀರು ಸೇರಿದಂತೆ ಮೂಲ ಸೌಕರ್ಯಗಳ ವ್ಯವಸ್ಥೆ ಕೈಗೊಳ್ಳುವುದು ಹಾಗು ಮಕ್ಕಳಿಗೆ ಪಠ್ಯ ಪುಸ್ತಕ, ಸಮವಸ್ತ್ರ ಸೇರಿದಂತೆ ಸರ್ಕಾರದ ಉಚಿತ ಸೌಲಭ್ಯಗಳ ವಿತರಣೆ ನಡೆಯಲಿದೆ ಎಂದರು.  
    ಮೇ.೩೧ರಂದು ಪ್ರಾರಂಭೋತ್ಸವ ನಡೆಯಲಿದ್ದು, ಆಯಾ ಶಾಲೆಗಳ ಶಾಲಾಭಿವೃದ್ಧಿ ಸಮಿತಿ ವತಿಯಿಂದ ಮಕ್ಕಳನ್ನು ಆಕರ್ಷಿಸಲು ತಳಿರು ತೋರಣಗಳಿಂದ ಅಲಂಕರಿಸಿ ಹಬ್ಬದ ರೀತಿಯ ವಾತಾವರಣ ರೂಪಿಸಲಾಗುವುದು. ಈಗಾಗಲೇ ಪೋಷಕರು, ಶಾಲಾಭಿವೃದ್ಧಿ ಸಮಿತಿ ಮತ್ತು ಶಿಕ್ಷಕರ ಪೂರ್ವಭಾವಿ ಸಭೆ ನಡೆಸಲಾಗಿದೆ. ಅಂದು ನಗರ ಭಾಗದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ನ್ಯೂಟೌನ್ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ (ಪ್ರೌಢಶಾಲಾ ವಿಭಾಗ) ಬೆಳಿಗ್ಗೆ ೧೦.೩೦ಕ್ಕೆ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಲಿದ್ದಾರೆ ಎಂದರು.
    ತಾಲೂಕಿನ ಸರ್ಕಾರಿ ಶಾಲೆಗಳಲ್ಲಿ ಆ.೩, ೨೦೨೨ರ ಮಾಹಿತಿಯಂತೆ ೧೯,೧೧೫ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಗ್ರಾಮೀಣ ಭಾಗದಲ್ಲಿ ೯೭ ಕಿರಿಯ ಪ್ರಾಥಮಿಕ, ೧೧೨ ಹಿರಿಯ ಪ್ರಾಥಮಿಕ, ೧೬ ಪ್ರೌಢ ಶಾಲೆಗಳು, ಒಟ್ಟು ೨೨೫ ಹಾಗು ನಗರ ಭಾಗದಲ್ಲಿ ೧೮ ಕಿರಿಯ ಪ್ರಾಥಮಿಕ, ೩೬ ಹಿರಿಯ ಪ್ರಾಥಮಿಕ ಮತ್ತು ೮ ಪ್ರೌಢಶಾಲೆಗಳು, ಒಟ್ಟು ೬೨ ಸೇರಿದಂತೆ ತಾಲೂಕಿನಲ್ಲಿ ೨೮೭ ಸರ್ಕಾರಿ ಶಾಲೆಗಳಿವೆ. ೫೬ ಪ್ರಾಥಮಿಕ ಹಾಗು ೧೬ ಪ್ರೌಢಶಾಲೆ ಅತಿಥಿ ಶಿಕ್ಷಕರನ್ನು ನೇಮಕಗೊಳಿಸಲಾಗಿದೆ. ತಾಲೂಕಿನಲ್ಲಿ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಒಟ್ಟು ೧೦೬೭ ಹುದ್ದೆಗಳಿದ್ದು, ಈ ಪೈಕಿ ೩೦ ಮುಖ್ಯ ಶಿಕ್ಷಕರು, ೧೩೧ ಸಹಾಯಕ ಶಿಕ್ಷಕರು ಹಾಗು ೧೧ ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆಗಳು ಸೇರಿದಂತೆ ಒಟ್ಟು ೧೭೨ ಹುದ್ದೆಗಳು ಖಾಲಿ ಉಳಿದಿವೆ. ಇದೆ ರೀತಿ ಪ್ರೌಢಶಾಲಾ ವಿಭಾಗದಲ್ಲಿ ಒಟ್ಟು ೨೫೭ ಹುದ್ದೆಗಳಿದ್ದು, ಈ ಪೈಕಿ ೨೨೭ ಹುದ್ದೆಗಳು ಭರ್ತಿಯಾಗಿ ೩೦ ಹುದ್ದೆಗಳು ಖಾಲಿ ಉಳಿದಿವೆ ಎಂದರು.
    ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಮಕ್ಕಳ ಸಂಖ್ಯೆ ಹೆಚ್ಚಿಸಲು ಆಯಾ ಶಾಲೆಗಳ ವ್ಯಾಪ್ತಿಯಲ್ಲಿ ಇಲಾಖೆಯ ಸಿಬ್ಬಂದಿಗಳು ಪೋಷಕರನ್ನು ಬಳಸಿಕೊಂಡು ಶಾಲಾ ದಾಖಲಾತಿ ಅಂದೋಲನ ಕೈಗೊಳ್ಳಲಾಗುತ್ತಿದೆ. ಅಲ್ಲದೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆಯುವ ನಿಟ್ಟಿನಲ್ಲಿ ಈ ಬಾರಿ ಹೆಚ್ಚಿನ ಗಮನ ಹರಿಸಲಾಗುವುದು ಎಂದರು.
    ಪತ್ರಿಕಾಗೋಷ್ಠಿಯಲ್ಲಿ ದೈಹಿಕ ಶಿಕ್ಷಣ ಪರಿವೀಕ್ಷಕ ಪ್ರಭು, ಶಿಕ್ಷಣ ಸಂಯೋಜಕ ರವಿಕುಮಾರ್, ಸಿಆರ್‌ಪಿ ಸಿ. ಚನ್ನಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Friday, May 26, 2023

ಶಾಸಕ ಸಂಗಮೇಶ್ವರ್‌ಗೆ ಕೈ ತಪ್ಪಿದ ಸಚಿವ ಸ್ಥಾನ : ಕ್ಷೇತ್ರದ ಜನತೆಯಲ್ಲಿ ನಿರಾಸೆ

    ಭದ್ರಾವತಿ, ಮೇ. ೨೬ : ಕ್ಷೇತ್ರದ ಶಾಸಕರಾಗಿ ೪ನೇ ಬಾರಿಗೆ ಆಯ್ಕೆಯಾದರೂ ಸಹ ಬಿ.ಕೆ ಸಂಗಮೇಶ್ವರ್‌ಗೆ ಈ ಬಾರಿ ಸಹ ಸಚಿವ ಸ್ಥಾನ ಕೈ ತಪ್ಪಿದ್ದು, ಕ್ಷೇತ್ರದ ಜನತೆಯಲ್ಲಿ ನಿರಾಸೆಯನ್ನುಂಟು ಮಾಡಿದೆ.
    ಸರ್ಕಾರ ರಚನೆ ಸಂದರ್ಭದಲ್ಲಿಯೇ ಸಚಿವ ಸ್ಥಾನ ಸಿಗುವ ವಿಶ್ವಾಸ ಹೊಂದಲಾಗಿತ್ತು. ಇದೀಗ ಸಂಪುಟ ವಿಸ್ತರಣೆ ಸಂದರ್ಭದಲ್ಲೂ ಸಚಿವ ಸ್ಥಾನದಿಂದ ವಂಚಿತರಾಗಿರುವುದು ವಿಪರ್ಯಾಸದ ಸಂಗತಿಯಾಗಿದೆ. ಚುನಾವಣೆಯಲ್ಲಿ ಗೆಲುವು ಸಾಧಿಸಿದ ನಂತರ ಬೆಂಗಳೂರಿನಲ್ಲಿಯೇ ಉಳಿದುಕೊಂಡು ಸಚಿವ ಸ್ಥಾನಕ್ಕಾಗಿ ತೀವ್ರ ಪೈಪೋಟಿಗೆ ಮುಂದಾಗಿದ್ದ ಬಿ.ಕೆ ಸಂಗಮೇಶ್ವರ್ ಇದೀಗ ಬರಿ ಕೈಯಲ್ಲಿ ಹಿಂದಿರುಗುವಂತಾಗಿದೆ.
    ಈ ಹಿಂದೆ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲೂ  ಸಹ ಸಚಿವ ಸ್ಥಾನಕ್ಕಾಗಿ ಸಂಗಮೇಶ್ವರ್ ತೀವ್ರ ಪೈಪೋಟಿ ನಡೆಸಿದ್ದರು. ಕೊನೆ ಹಂತದಲ್ಲಿ  ಇವರನ್ನು ನಿಗಮ ಮಂಡಳಿಗೆ ಅಧ್ಯಕ್ಷರನ್ನಾಗಿ ನೇಮಕಗೊಳಿಸಲಾಗಿತ್ತು. ಇದೀಗ ೪ನೇ ಬಾರಿಗೆ ಗೆಲುವು ಸಾಧಿಸಿದ್ದು, ಅಲ್ಲದೆ ಪಕ್ಷದ ವರಿಷ್ಠರು ಈ ಬಾರಿ ಗೆಲುವು ಸಾಧಿಸಿದ್ದಲ್ಲಿ ಸಚಿವರಾಗುವುದು ಖಚಿತ ಎಂದು ಬಹಿರಂಗ ಸಭೆಯಲ್ಲಿ ಘೋಷಿಸಿದ್ದರು. ಆದರೆ ಇದೀಗ ಸಚಿವ ಸ್ಥಾನದಿಂದ ವಂಚಿತರಾಗಿರುವುದು ಪಕ್ಷದ ಸ್ಥಳೀಯ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಸೇರಿದಂತೆ ಕ್ಷೇತ್ರದ ಜನತೆಯಲ್ಲಿ ನಿರಾಸೆಯನ್ನುಂಟು ಮಾಡಿದೆ.
    ಸಂಗಮೇಶ್ವರ್‌ಗೆ ಯಾವುದೇ ರಾಜಕೀಯ ಹಿನ್ನಲೆಯೂ ಇಲ್ಲ, ಗುರುಗಳು ಸಹ ಯಾರು ಇಲ್ಲ. ಅನಿರೀಕ್ಷಿತವಾಗಿ ರಾಜಕೀಯಕ್ಕೆ ಬಂದವರು. ಸ್ವಂತ ಬಲದ ಮೇಲೆ ರಾಜಕೀಯ ಅಸ್ತಿತ್ವ ಕಂಡುಕೊಂಡವರು. ತಮ್ಮದೇ ವರ್ಚಸ್ಸನ್ನು ಉಳಿಸಿಕೊಳ್ಳುವ ಜೊತೆಗೆ ಪಕ್ಷ ನಿಷ್ಠೆಯಲ್ಲಿ ಮುಂದುವರೆದವರು. ಕಾಂಗ್ರೆಸ್ ಪಕ್ಷದ ಶಾಸಕರಲ್ಲಿ ಜಿಲ್ಲೆಯಲ್ಲಿಯೇ ಹಿರಿಯರಾಗಿದ್ದು, ೪ ಬಾರಿ ಗೆದ್ದರೂ ಸಹ ಸೂಕ್ತ ಸ್ಥಾನಮಾನ ಸಿಗದಿರುವುದು ನಿಜಕ್ಕೂ ವಿಷಾದನೀಯ ಸಂಗತಿಯಾಗಿದೆ.
    ಸಚಿವ ಸ್ಥಾನ ಕೈ ತಪ್ಪಲು ಹಲವು ಕಾರಣ :
    ಶಾಸಕ ಬಿ.ಕೆ ಸಂಗಮೇಶ್ವರ್ ಸಚಿವ ಸ್ಥಾನ ಕೈ ತಪ್ಪಲು ಹಲವು ಕಾರಣಗಳಿದ್ದು, ಪ್ರಮುಖರಾಗಿ ಸಂಗಮೇಶ್ವರ್ ಕ್ಷೇತ್ರಕ್ಕೆ ಮಾತ್ರ ಸೀಮಿತವಾಗಿ ಗುರುತಿಸಿಕೊಂಡಿದ್ದಾರೆ. ಜಿಲ್ಲಾಮಟ್ಟದ ನಾಯಕರಾಗಿ ಗುರುತಿಸಿಕೊಳ್ಳಲು ಪ್ರಯತ್ನಿಸಲಿಲ್ಲ. ಹೈಕಮಾಂಡ್ ಮಟ್ಟದಲ್ಲಿ ಸಂಗಮೇಶ್ವರ್ ಪರ ಲಾಭಿ ನಡೆಸಲು ಯಾರು ಇಲ್ಲದಿರುವುದು. ಕ್ಷೇತ್ರದವರೇ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿದ್ದರೂ ಸಹ ಸಂಗಮೇಶ್ವರ್ ನೇರವಾಗಿ ಹೈಕಮಾಂಡ್ ಸಂಪರ್ಕ ಬೆಳೆಸಿಕೊಳ್ಳದಿರುವುದು. ಹೀಗೆ ಹಲವು ಕಾರಣಗಳಿಂದ ಸಚಿವ ಸ್ಥಾನ ಕೈ ತಪ್ಪಿದೆ ಎನ್ನಲಾಗಿದೆ.

ಸರ್ಕಾರಿ ಕಾಲೇಜು ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕಾರ್ಯಾಗಾರ

    ಭದ್ರಾವತಿ, ಡಿ. ೨೬ : ನಗರದ ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವತಿಯಿಂದ ಶಿವಮೊಗ್ಗ ಸ್ಪರ್ಧಾ ಕರ್ನಾಟಕ ಅಕಾಡೆಮಿ ಸಹಯೋಗದೊಂದಿಗೆ ಕಾಲೇಜಿನ ಚಂದನ ಸಭಾಂಗಣದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.
    ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡಿದ್ದ ಡಿ. ನಂಜನಾಯ್ಕರವರು, ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆ, ಪಿಯುಸಿ ಹಾಗೂ ಪದವಿ ಶಿಕ್ಷಣದ ನಂತರ ಉದ್ಯೋಗವಕಾಶಗಳು ಮತ್ತು ಸಂದರ್ಶನದಲ್ಲಿ ಭಾಗವಹಿಸುವ ಬಗೆಯನ್ನು ಕುರಿತು ಸಮಗ್ರ ಮಾಹಿತಿ ನೀಡಿದರು.
    ಇದೆ ಸಂದರ್ಭದಲ್ಲಿ ಕಾಲೇಜು ಆಡಳಿತ ಮಂಡಳಿ ಮತ್ತು ಸ್ಪರ್ಧಾ ಕರ್ನಾಟಕ ಅಕಾಡೆಮಿ ನಡುವೆ ಪರಸ್ಪರ ಐದು ವರ್ಷಗಳ ತಿಳುವಳಿಕೆ ಒಪ್ಪಂದಕ್ಕೆ ಸಹಿ
ಹಾಕಲಾಯಿತು.
    ಕಾರ್ಯಕ್ರಮದ ಅಧ್ಯಕ್ಷತೆ ಕಾಲೇಜಿನ ಪ್ರಾಂಶುಪಾಲ ಡಾ. ಮಂಜುನಾಥ ಸಕಲೇಶ್ ವಹಿಸಿದ್ದರು.  ಐಕ್ಯೂಎಸಿ ಸಂಚಾಲಕ ಡಾ. ಟಿ. ಪ್ರಸನ್ನ ಮತ್ತು ಪ್ಲೇಸ್‌ಮೆಂಟ್ ಸಂಚಾಲಕ ಪರಶುರಾಮ ಮತ್ತು ಕಾಲೇಜಿನ ಬೋಧಕ ಮತ್ತು ಬೋಧಕೇತರರು, ವಿದ್ಯಾರ್ಥಿಗಳು ಭಾಗವಹಿಸಿರುತ್ತಾರೆ.

ಪ್ರಥಮ ವರ್ಷದ ಡಿಪ್ಲೋಮಾ ಕೋರ್ಸಿಗೆ ಅರ್ಜಿ ಆಹ್ವಾನ

ಭದ್ರಾವತಿ ನ್ಯೂಟೌನ್ ವಿಐಎಸ್‌ಎಸ್‌ಜೆ ಸರ್ಕಾರಿ ಪಾಲಿಟೆಕ್ನಿಕ್.
    ಭದ್ರಾವತಿ, ಮೇ. ೨೬ : ನಗರದ ನ್ಯೂಟೌನ್ ವಿಐಎಸ್‌ಎಸ್‌ಜೆ ಸರ್ಕಾರಿ ಪಾಲಿಟೆಕ್ನಿಕ್ ವತಿಯಿಂದ ೨೦೨೩-೨೪ನೇ ಸಾಲಿನ ಪ್ರಥಮ ಸೆಮಿಸ್ಟರ್ ಡಿಪ್ಲೋಮಾ ಕೋರ್ಸಿಗೆ ಪ್ರವೇಶ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
    ಸಿವಿಲ್ ಇಂಜಿನಿಯರಿಂಗ್, ಎಲೆಕ್ಟಿಕಲ್ ಅಂಡ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್, ಮೆಕ್ಯಾನಿಕಲ್ ಇಂಜಿನಿಯರಿಂಗ್ ಮತ್ತು (೪)ಮೆಟಲರ್ಜಿ ಇಂಜಿನಿಯರಿಂಗ್ ವಿಭಾಗಗಳು ಲಭ್ಯವಿರುತ್ತವೆ.
    ಮೇ. ೯ರಿಂದ ಪ್ರವೇಶ ಪ್ರಕ್ರಿಯೆಗಳು ಆರಂಭಗೊಂಡಿದ್ದು, ಎಸ್‌ಎಸ್‌ಎಲ್‌ಸಿ ಮತ್ತು ಜೆಟಿಎಸ್ ಪರೀಕ್ಷೆಯಲ್ಲಿ ಪಾಸಾದ ವಿದ್ಯಾರ್ಥಿಗಳು ಪ್ರಥಮ ಸೆಮಿಸ್ಟರ್/ ೧ನೇ ವರ್ಷಕ್ಕೆ, ಡಿಪ್ಲೋಮಾಗೆ ಪ್ರವೇಶವನ್ನು ಪಡೆಯಲು ಅರ್ಹರಾಗಿದ್ದು, ಸೀಟು ಹಂಚಿಕೆಯಾದ ನಂತರ ಭರ್ತಿಯಾಗದ ಉಳಿಕೆ ಸೀಟುಗಳನ್ನು ಮೇ.೨೯ ರಿಂದ ಜೂ. ೩ರವರೆಗೆ ಆಫ್‌ಲೈನ್ ಮೂಲಕ ಸೀಟು ಹಂಚಿಕೆ ಮಾಡಲಾಗುವುದು, ಇಚ್ಛೆಯುಳ್ಳ ವಿದ್ಯಾರ್ಥಿಗಳು ನೇರವಾಗಿ ಹಾಜರಾಗಿ ಪ್ರವೇಶ ಅರ್ಜಿಯನ್ನು ಸಲ್ಲಿಸಲು ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಪ್ರಾಂಶುಪಾಲರು, ಮೊ. ೮೮೬೯೩೧೫೩೯, ೯೪೮೦೩೯೪೯೦೯ ಮತ್ತು ೯೯೮೬೪೦೬೯೪೧ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ.

ಮೇ.೨೮ರವರೆಗೆ ೪೩ನೇ ವರ್ಷದ ಕರಗ ಮಹೋತ್ಸವ

ಭದ್ರಾವತಿ ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆ ಸಮೀಪದ ಶ್ರೀ ಕರುಮಾರಿಯಮ್ಮ ದೇವಿ.
    ಭದ್ರಾವತಿ, ಮೇ. ೨೬: ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆ ಸಮೀಪದ ಶ್ರೀ ಕರುಮಾರಿಯಮ್ಮ ದೇವಸ್ಥಾನದ ೪೩ನೇ ವರ್ಷದ ಕರಗ ಮಹೋತ್ಸವ ಮೇ.೨೮ರವರೆಗೆ ನಡೆಯಲಿದೆ.
    ಶುಕ್ರವಾರ ಬೆಳಿಗ್ಗೆ ದೇವತಾ ಪ್ರಾರ್ಥನೆ, ಶುದ್ಧ ಪುಣ್ಯಾಹ್ನ ಮತ್ತು ಧ್ವಜಾರೋಹಣ ಸಂಜೆ ಕಂಕಣ ಬಂಧನ ನೆರವೇರಿತು. ಮೇ.೨೭ರ ಶನಿವಾರ ಬೆಳಿಗ್ಗೆ ೧೦ ಗಂಟೆಗೆ ಅಮ್ಮನವರಿಗೆ ಪಂಚಾಮೃತ ಅಭಿಷೇಕ, ಮಧ್ಯಾಹ್ನ ೧೨ ಗಂಟೆಗೆ ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಲಿವೆ. ಸಂಜೆ ೬ ಗಂಟೆಗೆ ಉಮಾ ಮಹಿಳಾ ಭಜನ ಮಂಡಳಿ ವತಿಯಿಂದ ಭಕ್ತಿಗೀತೆ ನಡೆಯಲಿದೆ.
    ಮೇ.೨೮ರಂದು ಬೆಳಿಗ್ಗೆ ೯ ಗಂಟೆಗೆ ಎಳನೀರು ಅಭಿಷೇಕ, ಪಂಚಾಮೃತ ಮತ್ತು ತೀರ್ಥ ಪ್ರಸಾದ ವಿನಿಯೋಗ, ಮಧ್ಯಾಹ್ನ ೧೨ ಗಂಟೆಗೆ ಅಮ್ಮನವರ ಶಕ್ತಿ ಕರಗ ಸ್ಥಾಪನೆ ನಂತರ ಮಹಾಮಂಗಳಾರತಿಯೊಂದಿಗೆ ತೀರ್ಥಪ್ರಸಾದ ವಿನಿಯೊಗ ಹಾಗು ಶ್ರಿ ದೇವಿಗೆ ಅಂಬಲಿ ಮತ್ತು ಅನ್ನದಾನ ಸಂತರ್ಪಣೆ ನಡೆಯಲಿದೆ. ಭಕ್ತರು ಹೆಚ್ಚಿನಯಲ್ಲಿ ಪಾಲ್ಗೊಂಡು ಕರಗ ಮಹೋತ್ಸವ ಯಶಸ್ವಿಗೊಳಿಸುವಂತೆ ಕೋರಲಾಗಿದೆ.

Thursday, May 25, 2023

ಸರ್ವತೋಮುಖ ಅಭಿವೃದ್ಧಿಗಾಗಿ ಸಂಗಮೇಶ್ವರ್‌ಗೆ ಸಚಿವ ಸ್ಥಾನ ನೀಡಿ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಯುವ ಘಟಕ ಆಗ್ರಹ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಯುವ ಘಟಕ ಅಧ್ಯಕ್ಷ ಮಂಜುನಾಥ್
    ಭದ್ರಾವತಿ, ಮೇ. ೨೫: ಕ್ಷೇತ್ರದಲ್ಲಿ ೪ನೇ ಬಾರಿಗೆ ಆಯ್ಕೆಯಾಗಿರುವ ಏಕೈಕ ಶಾಸಕರು ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ, ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಬದ್ಧರಾಗಿರುವ ಶಾಸಕ ಬಿ.ಕೆ ಸಂಗಮೇಶ್ವರ್‌ಗೆ ಈ ಬಾರಿ ಸಚಿವ ಸ್ಥಾನ ನೀಡಬೇಕೆಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಯುವ ಘಟಕ ಆಗ್ರಹಿಸಿದೆ.
    ಬಿ.ಕೆ ಸಂಗಮೇಶ್ವರ್‌ರವರು ಕ್ಷೇತ್ರದ ಜನರಿಗೆ ಯಾವುದೇ ಸಮಸ್ಯೆ ಎದುರಾದರೂ ಸಹ ತಕ್ಷಣ ಸ್ಪಂದಿಸುವ ಮನೋಭಾವ ಹೊಂದಿದ್ದಾರೆ. ಧರ್ಮ, ಜಾತಿ-ಭೇದಭಾವ ಮಾಡದೆ ಎಲ್ಲರನ್ನು ಸಮಾನವಾಗಿ ಕಾಣುತ್ತಿದ್ದಾರೆ. ತನ್ನದೇ ಆದ ಪ್ರಭಾವ ಮತ್ತು ಪ್ರತಿಷ್ಠೆ ಕಾಯ್ದುಕೊಳ್ಳುವ ಮೂಲಕ ೪ನೇ ಬಾರಿಗೆ ಆಯ್ಕೆಯಾಗಿರುವುದು ವಿಶೇಷತೆಯಾಗಿದೆ. ಕ್ಷೇತ್ರವನ್ನು ಸರ್ವತೋಮುಖವಾಗಿ ಅಭಿವೃದ್ಧಿಗೊಳಿಸುವ ಕನಸು ಕಂಡಿದ್ದಾರೆ. ಅವರ ಕನಸು ನನಸಾಗಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ರವರು ಹೆಚ್ಚಿನ ಸಹಕಾರಬೇಕಾಗಿದೆ ಎಂದು ಮನವಿ ಮಾಡಿದೆ.
    ಕ್ಷೇತ್ರದಲ್ಲಿ ಎಂಪಿಎಂ ಮತ್ತು ವಿಐಎಸ್‌ಎಲ್ ಎರಡೂ ಕಾರ್ಖಾನೆಗಳು ಪುನಶ್ಚೇತನಗೊಳ್ಳಬೇಕು. ನಿರುದ್ಯೋಗಿಗಳಿಗೆ ಉದ್ಯೋಗ ಲಭಿಸಬೇಕು. ಕ್ಷೇತ್ರದ ಆರ್ಥಿಕ ಮಟ್ಟ ಹೆಚ್ಚಾಗಬೇಕು. ಉನ್ನತ ಶಿಕ್ಷಣ, ಆರೋಗ್ಯ ಮತ್ತು ಗುಣಮಟ್ಟದ ಮೂಲ ಸೌಲಭ್ಯಗಳನ್ನು ಕಲ್ಪಿಸಿಕೊಡುವುದು ಸೇರಿದಂತೆ ಹಲವಾರು ಅಭಿವೃದ್ಧಿ ಕಾರ್ಯಗಳು ನಡೆಯಬೇಕಾಗಿದೆ. ಈ ಹಿನ್ನಲೆಯಲ್ಲಿ ಸಂಗಮೇಶ್ವರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿದೆ.
    ಒಂದು ವೇಳೆ ಸಂಗಮೇಶ್ವರ್‌ಗೆ ಸಚಿವ ಸ್ಥಾನ ನೀಡದಿದ್ದಲ್ಲಿ ಮುಂದಿನ ದಿನಗಳಲ್ಲಿ ಕ್ಷೇತ್ರದಾದ್ಯಂತ ಉಗ್ರ ಹೋರಾಟ ನಡೆಸಲಿದೆ ಎಂದು ಯುವ ಘಟಕದ ಅಧ್ಯಕ್ಷ ಮಂಜುನಾಥ್ ಹಾಗು ಪದಾಧಿಕಾರಿಗಳಾದ ಬಿ.ಎಂ ರಮೇಶ್, ಮಹಾದೇವ್, ವಿನಯ್ ಮತ್ತು ಬಿ. ಮಂಜುನಾಥ್ ಸೇರಿದಂತೆ ಇನ್ನಿತರರು ಎಚ್ಚರಿಸಿದ್ದಾರೆ.

ಅರಳಿಹಳ್ಳಿ ಗ್ರಾಮದ ಬಡಕುಟುಂಬಗಳಿಗೆ ಮೂಲ ಸೌಕರ್ಯ ಕಲ್ಪಿಸಲು ಆಗ್ರಹ

ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ನಿವಾಸಿಗಳಿಂದ ಮನವಿ

ಭದ್ರಾವತಿ ತಾಲೂಕಿನ ಅರಳಿಹಳ್ಳಿ ಗ್ರಾಮದಲ್ಲಿ ವಾಸಿಸುತ್ತಿರುವ ಸುಮಾರು ೭೫ ಕುಟುಂಬಗಳಿಗೆ ಮೂಲ ಸೌಕರ್ಯಗಳನ್ನು ಸಮರ್ಪಕವಾಗಿ ಕಲ್ಪಿಸಿಕೊಡುವಂತೆ ಆಗ್ರಹಿಸಿ ಗುರುವಾರ ಸರ್ಕಾರಕ್ಕೆ ತಹಸೀಲ್ದಾರ್ ಗ್ರೇಡ್-೨ ರಂಗಮ್ಮ ಮೂಲಕ ಮನವಿ ಸಲ್ಲಿಸಲಾಯಿತು.
    ಭದ್ರಾವತಿ, ಮೇ. ೨೫: ತಾಲೂಕಿನ ಅರಳಿಹಳ್ಳಿ ಗ್ರಾಮದಲ್ಲಿ ವಾಸಿಸುತ್ತಿರುವ ಸುಮಾರು ೭೫ ಕುಟುಂಬಗಳಿಗೆ ಮೂಲ ಸೌಕರ್ಯಗಳನ್ನು ಸಮರ್ಪಕವಾಗಿ ಕಲ್ಪಿಸಿಕೊಡುವಂತೆ ಆಗ್ರಹಿಸಿ ಗುರುವಾರ ಸರ್ಕಾರಕ್ಕೆ ತಹಸೀಲ್ದಾರ್ ಗ್ರೇಡ್-೨ ರಂಗಮ್ಮ ಮೂಲಕ ಮನವಿ ಸಲ್ಲಿಸಲಾಯಿತು.
    ಕರ್ನಾಟಕ ರಾಷ್ಟ್ರ ಸಮಿತಿ(ಕೆಆರ್‌ಎಸ್) ಪಕ್ಷದ ಸಹಕಾರದೊಂದಿಗೆ ನಿವಾಸಿಗಳು ತಾಲೂಕು ಕಛೇರಿ ಮಿನಿವಿಧಾನಸೌಧದ ಮುಂಭಾಗ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
    ಬಡ ಕುಟುಂಬಗಳಿಗೆ ಮೂಲ ಸೌಕರ್ಯಗಳನ್ನು ಕಲ್ಪಿಸಿಕೊಡುವಲ್ಲಿ ಸ್ಥಳೀಯ ಆಡಳಿತ, ಜನಪ್ರತಿನಿಧಿಗಳು ವಿಫಲವಾಗಿದ್ದು, ಇದರಿಂದಾಗಿ ಸಂಕಷ್ಟಕ್ಕೆ ಒಳಗಾಗುವಂತಾಗಿದೆ.  ಸರ್ಕಾರ ತಕ್ಷಣ ಸ್ಪಂದಿಸುವ ಮೂಲಕ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.  
    ಪಕ್ಷದ ತಾಲೂಕು ಅಧ್ಯಕ್ಷ ನಾಗರಾಜ್ ರಾವ್ ಸಿಂಧೆ, ಯುವ ಘಟಕದ ಅಧ್ಯಕ್ಷ ಅರಳಿಹಳ್ಳಿ ತ್ಯಾಗರಾಜ್, ಸಂಘಟನಾ ಕಾರ್ಯದರ್ಶಿ ರಾಜೇಂದ್ರ, ಮುಖಂಡರಾದ ಮಲ್ಲಿಕಾರ್ಜುನ್, ತೀರ್ಥ ಕುಮಾರ್, ಚಲಪತಿ, ಸಂತೋಷ್, ಉದಯಕುಮಾರ್, ಸುಮಿತ್ರ ಬಾಯಿ. ಚಂದನ ಮತ್ತು ಅರಳಿಹಳ್ಳಿ ಗ್ರಾಮಸ್ಥರು ಉಪಸಿತರಿದ್ದರು

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ : ಬಂಜಾರ ಸಮುದಾಯದ ಶಾಸಕರಿಗೆ ಸಚಿವ ಸ್ಥಾನ ನೀಡಿ

ಶಾಸಕ ಬಿ.ಕೆ ಸಂಗಮೇಶ್ವರ್‌ಗೂ ಸಚಿವ ಸ್ಥಾನಕ್ಕೆ ಗೋರ ಸೇನಾ ತಾಲೂಕು ಶಾಖೆ ಒತ್ತಾಯ

ರುದ್ರಪ್ಪ ಮಾನಪ್ಪ ಲಮಾಣಿ
    ಭದ್ರಾವತಿ, ಮೇ. ೨೫: ರಾಜ್ಯದಲ್ಲಿ ಸುಮಾರು ೪೦ ಲಕ್ಷ ಜನಸಂಖ್ಯೆ ಹೊಂದಿರುವ ಬಂಜಾರ ಸಮುದಾಯ ಈ ಬಾರಿ ಚುನಾವಣೆಯಲ್ಲಿ ಪ್ರಮುಖ ಪಾತ್ರವಹಿಸಿದ್ದು, ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಕಾರಣವಾಗಿದೆ. ಈ ಹಿನ್ನಲೆಯಲ್ಲಿ ಸಮುದಾಯ ಪ್ರತಿನಿಧಿಸುತ್ತಿರುವ ಶಾಸಕರಿಗೆ ಸಚಿವ ಸ್ಥಾನ ನೀಡಬೇಕೆಂದು ಗೋರ ಸೇನಾ ತಾಲೂಕು ಶಾಖೆ ಒತ್ತಾಯಿಸಿದೆ.
    ಈ ಬಂಜಾರ ಸಮುದಾಯ ಒಳ ಮೀಸಲಾತಿ ವಿರುದ್ಧ ತಾಂಡಾ ಬಜಾವೋ ಬಿಜೆಪಿ ಹಟಾವೋ ಅಂದೋಲನ ನಡೆಸಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಬಹುಮತ ಪಡೆದುಕೊಳ್ಳುವಲ್ಲಿ ಕಾರಣವಾಗಿದೆ. ಅದರಲ್ಲೂ ವಿಶೇಷವಾಗಿ ಸುಮಾರು ೭೦ಕ್ಕಿಂತ ಹೆಚ್ಚು ಕ್ಷೇತ್ರಗಳಲ್ಲಿ ಸಾಮೂಹಿಕವಾಗಿ ಮತ ನೀಡುವ ಮೂಲಕ ನಿರ್ಣಾಯಕ ಪಾತ್ರ ವಹಿಸಿದೆ.
    ಸಮುದಾಯ ಪ್ರತಿನಿಧಿಸುತ್ತಿರುವ ಹಾವೇರಿ ಕ್ಷೇತ್ರದ ಶಾಸಕ ರುದ್ರಪ್ಪ ಮಾನಪ್ಪ ಲಮಾಣಿ ಮತ್ತು ವಿಧಾನಪರಿಷತ್ ಸದಸ್ಯ ಪ್ರಕಾಶ್ ರಾಠೋಡ್‌ರವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಸಂಪುಟ ದರ್ಜೆ ಸಚಿವ ಸ್ಥಾನ ಹಾಗು ಚಿಂಚೋಳಿ ಕ್ಷೇತ್ರದಲ್ಲಿ ಕಡಿಮೆ ಮತಗಳ ಅಂತರದಿಂದ ಸೊಲು ಕಂಡಿರುವ ಸುಭಾಷ್ ರಾಥೋಡ್‌ರವರು ಸಮುದಾಯದಲ್ಲಿ ಉತ್ತಮ ಬಾಂಧವ್ಯದೊಂದಿಗೆ ಪ್ರಭಾವ ಹೊಂದಿದ್ದಾರೆ. ಈ ಹಿನ್ನಲೆಯಲ್ಲಿ ಇವರಿಗೆ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನ ನೀಡಬೇಕೆಂದು ಒತ್ತಾಯಿಸಲಾಗಿದೆ.


ಬಿ.ಕೆ ಸಂಗಮೇಶ್ವರ್
    ಭದ್ರಾವತಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಬಿ.ಕೆ ಸಂಗಮೇಶ್ವರ್‌ರವರು ೪ ಬಾರಿ ಆಯ್ಕೆಯಾಗಿದ್ದು, ಇವರಿಗೂ ಸಹ ಸಂಪುಟ ದರ್ಜೆ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಲಾಗಿದೆ.

Wednesday, May 24, 2023

ಸಂಗಮೇಶ್ವರ್‌ಗೆ ಸಚಿವ ಸ್ಥಾನ ಖಚಿತ : ಬಿ.ವಿ ಶ್ರೀನಿವಾಸ್

ರಾಷ್ಟ್ರೀಯ ಯುವ  ಕಾಂಗ್ರೆಸ್ ಅಧ್ಯಕ್ಷ ಬಿ.ವಿ ಶ್ರೀನಿವಾಸ್,
    ಭದ್ರಾವತಿ, ಮೇ. ೨೪: ನಮ್ಮೂರಿನಲ್ಲಿ ಇದುವರೆಗೂ ಯಾರು ಸಚಿವರಾಗಿಲ್ಲ. ಶಾಸಕ ಬಿ.ಕೆ ಸಂಗಮೇಶ್ವರ್ ಸಚಿವರಾಗುವುದು ಖಚಿತ ಎಂದು ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ ಶ್ರೀನಿವಾಸ್ ಹೇಳಿದರು.
    ಅವರು ಪತ್ರಿಕೆಗೆ ಜೊತೆ ಮಾತನಾಡಿ, ನಮ್ಮೂರಿನ ಮೇಲೆ ನನಗೆ ಅಭಿಮಾನವಿದೆ. ಶಾಸಕರು ಸಚಿವರಾಗಬೇಕೆಂಬ ಆಸೆ ನನಗೂ ಇದೆ. ಒಂದು ವೇಳೆ ವಿಳಂಬವಾಗಬಹುದು. ಆದರೆ ಅವರು ಸಚಿವರಾಗುವುದು ಖಚಿತ. ಇದರ ಬಗ್ಗೆ ಯಾರಿಗೂ ಆತಂಕಬೇಡ ಎಂದರು.
    ಸಂಗಮೇಶ್ವರ್‌ಗೆ ಸಚಿವ ಸ್ಥಾನ ಕೊಡಿಸುವ ನಿಟ್ಟಿನಲ್ಲಿ ಸಾಕಷ್ಟು ಪ್ರಯತ್ನಿಸುತ್ತಿದ್ದೇನೆ. ಈ ಸಂಬಂಧ ರಾಹುಲ್ ಗಾಂಧಿಯವರ ಗಮನ ಸೆಳೆಯುವುದಾಗಿ ಭರವಸೆ ವ್ಯಕ್ತಪಡಿಸಿದರು.
    ಶಾಸಕ ಬಿ.ಕೆ ಸಂಗಮೇಶ್ವರ್ ಮುಖ್ಯಮಂತ್ರಿ ಭೇಟಿ :
    ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ನಂತರ ಬೆಂಗಳೂರಿನಲ್ಲಿಯೇ ಉಳಿದುಕೊಂಡಿರುವ ಶಾಸಕ ಬಿ.ಕೆ ಸಂಗಮೇಶ್ವರ್ ಸಚಿವ ಸ್ಥಾನಕ್ಕಾಗಿ ತೀವ್ರ  ಕಸರತ್ತು ನಡೆಸುತ್ತಿದ್ದು, ಪಕ್ಷದ ಮೇಲೆ ನಾನಾ ರೀತಿಯಲ್ಲಿ ಒತ್ತಡ ಹಾಕುವ ತಂತ್ರಗಾರಿಕೆಗೆ ಮುಂದಾಗಿದ್ದಾರೆ.
ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಖುದ್ದಾಗಿ ಭೇಟಿ ಮಾಡಿ ಕ್ಷೇತ್ರದ ಜನತೆಗೆ ನೀಡಿರುವ ಭರವಸೆಯಂತೆ ನನಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿದ್ದಾರೆ.


ಭದ್ರಾವತಿ ಶಾಸಕ ಬಿ.ಕೆ ಸಂಗಮೇಶ್ವರ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಖುದ್ದಾಗಿ ಭೇಟಿ ಮಾಡಿ ಅವರನ್ನು ಸನ್ಮಾನಿಸಿ ಅಭಿನಂದಿಸುವ ಮೂಲಕ ಕ್ಷೇತ್ರದ ಜನತೆಗೆ ನೀಡಿರುವ ಭರವಸೆಯಂತೆ ನನಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿದ್ದಾರೆ.

ಸಂಗಮೇಶ್ವರ್‌ಗೆ ಸಚಿವ ಸ್ಥಾನಕ್ಕೆ ತಮಿಳು ಗೌಂಡರ್ ಸಮಾಜ ಆಗ್ರಹ

ನೀಡದ್ದಲ್ಲಿ 'ಭದ್ರಾವತಿ ಬಂದ್' : ಮಣಿ ಎಎನ್‌ಎಸ್

ಮಣಿ ಎಎನ್‌ಎಸ್
    ಭದ್ರಾವತಿ, ಮೇ. ೨೪: ಕ್ಷೇತ್ರದಲ್ಲಿ ತನ್ನದೇ ಆದ ಪ್ರಭಾವ ಮತ್ತು ಪ್ರತಿಷ್ಠೆ ಕಾಯ್ದುಕೊಳ್ಳುವ ಜೊತೆಗೆ ಪ್ರತಿಯೊಬ್ಬರ ಸಂಕಷ್ಟಗಳಿಗೆ ಸ್ಪಂದಿಸುವ ಮೂಲಕ ಜನರ ಮನಸ್ಸಿನಲ್ಲಿ ಉಳಿದುಕೊಂಡಿರುವ ಶಾಸಕ ಬಿ.ಕೆ ಸಂಗಮೇಶ್ವರ್‌ಗೆ ಈ ಬಾರಿ ಸಚಿವ ಸ್ಥಾನ ನೀಡಬೇಕೆಂದು ತಮಿಳು ಗೌಂಡರ್ ಸಮಾಜದ ತಾಲೂಕು ಅಧ್ಯಕ್ಷ, ನಗರಸಭಾ ಸದಸ್ಯ ಮಣಿ ಎಎನ್‌ಎಸ್ ಆಗ್ರಹಿಸಿದ್ದಾರೆ.
    ಬಿ.ಕೆ ಸಂಗಮೇಶ್ವರ್‌ರವರು ಕ್ಷೇತ್ರದ ಜನರಿಗೆ ಯಾವುದೇ ಸಮಸ್ಯೆ ಎದುರಾದರೂ ಸಹ ತಕ್ಷಣ ಸ್ಪಂದಿಸುವ ಮನೋಭಾವ  ಹೊಂದಿದ್ದಾರೆ. ಧರ್ಮ, ಜಾತಿ-ಭೇದಭಾವ ಮಾಡದೆ ಎಲ್ಲರನ್ನು ಸಮಾನವಾಗಿ ಕಾಣುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಕ್ಷೇತ್ರದ ಮತದಾರರು ಇವರ ಬಳಿ ಧಾವಿಸುತ್ತಾರೆ. ಕ್ಷೇತ್ರದಲ್ಲಿ ೪ ಬಾರಿ ಶಾಸಕರಾಗಿರುವ ಏಕೈಕ ರಾಜಕಾರಣಿ ಸಂಗಮೇಶ್ವರ್ ಎಂಬುದು ಹೆಗ್ಗಳಿಕೆಯಾಗಿದೆ. ಅಲ್ಲದೆ ಇದುವರೆಗೂ ಕ್ಷೇತ್ರದಲ್ಲಿ ಯಾರು ಸಹ ಸಚಿವರಾಗಿಲ್ಲ. ಇವರಿಗೆ ಬಿಟ್ಟು ಬೇರೆಯವರಿಗೆ ಸಚಿವ ಸ್ಥಾನ ನೀಡುವುದು ಸರಿಯಲ್ಲ ಎಂದು  ಮನವರಿಕೆ ಮಾಡಿದ್ದಾರೆ.
    ಕ್ಷೇತ್ರದಲ್ಲಿ ಎಂಪಿಎಂ ಮತ್ತು ವಿಐಎಸ್‌ಎಲ್ ಎರಡೂ ಕಾರ್ಖಾನೆಗಳು ಪುನಶ್ಚೇತನಗೊಳ್ಳಬೇಕು. ನಿರುದ್ಯೋಗಿಗಳಿಗೆ ಉದ್ಯೋಗ ಲಭಿಸಬೇಕು. ಕ್ಷೇತ್ರದ ಆರ್ಥಿಕ ಮಟ್ಟ ಹೆಚ್ಚಾಗಬೇಕು. ಹಲವಾರು ಅಭಿವೃದ್ಧಿ ಕಾರ್ಯಗಳು ನಡೆಯಬೇಕಾಗಿದೆ. ಈ ಹಿನ್ನಲೆಯಲ್ಲಿ ಸಂಗಮೇಶ್ವರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿದ್ದಾರೆ.
    ಒಂದು ವೇಳೆ ಸಂಗಮೇಶ್ವರ್‌ಗೆ ಸಚಿವ ಸ್ಥಾನ ನೀಡದಿದ್ದಲ್ಲಿ ಮುಂದಿನ ದಿನಗಳಲ್ಲಿ  ತಮಿಳು ಗೌಂಡರ್ ಸಮಾಜದ ವತಿಯಿಂದ ಭದ್ರಾವತಿ ಬಂದ್ ನಡೆಸುವ ಮೂಲಕ ಕ್ಷೇತ್ರದಾದ್ಯಂತ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.  

Tuesday, May 23, 2023

ಶಿಮೂಲ್ ಮಾಜಿ ನಿರ್ದೇಶಕ ದಾದೇಗೌಡ ನಿಧನ

ದಾದೇಗೌಡ 
    ಭದ್ರಾವತಿ, ಮೇ. ೨೩ :  ತಾಲೂಕಿನ ಕಾಚಗೊಂಡನಹಳ್ಳಿ ನಿವಾಸಿ, ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಮಾಜಿ ನಿರ್ದೇಶಕ ದಾದೇಗೌಡ (೭೩) ನಿಧನ ಹೊಂದಿದರು.
     ಅನಾರೋಗ್ಯದಿಂದ ಶಿವಮೊಗ್ಗ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು. ಪತ್ನಿ ವಿಜಯಲಕ್ಷ್ಮೀ, ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಮಾಜಿ ಅಧ್ಯಕ್ಷ ಡಿ. ಆನಂದ್ ಸೇರಿದಂತೆ ಇಬ್ಬರು ಪುತ್ರರು, ಮೂವರು ಪುತ್ರಿಯರನ್ನು ಹೊಂದಿದ್ದರು.
    ದಾದೇಗೌಡ ಅವರು ಒಕ್ಕಲಿಗರ ಸಂಘದ ಮಹಾಪೋಷಕರು, ಶ್ರೀ ಕಾಲಭೈರವೇಶ್ವರ ಪತ್ತಿನ ಸಹಕಾರ ಸಂಘದ ಹಿರಿಯ ಸದಸ್ಯರಾಗಿದ್ದರು. ಮಂಗಳವಾರ ಕಾಚಗೊಂಡನಹಳ್ಳಿಯಲ್ಲಿ ಇವರ ಅಂತ್ಯಕ್ರಿಯೆ ನೆರವೇರಿತು.
    ಜೆಡಿಎಸ್ ಮುಖಂಡರಾದ ಶಾರದಾ ಅಪ್ಪಾಜಿ, ಎಂ.ಎ ಅಜಿತ್, ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಟಿ.ರವಿ, ಬಿ.ಎಸ್ ಮಲ್ಲೇಶ್, ವಿವಿಧ ರಾಜಕೀಯ ಪಕ್ಷಗಳ, ಸಂಘ-ಸಂಸ್ಥೆಗಳ ಪ್ರಮುಖರು, ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷರು, ನಿರ್ದೇಶಕರು ಸಂತಾಪ ಸೂಚಿಸಿದ್ದಾರೆ.

Monday, May 22, 2023

ನಗರಸಭೆ ವ್ಯಾಪ್ತಿಯಲ್ಲಿ ಮೂಲ ಸೌಕರ್ಯಗಳ ಉಲ್ಬಣ : ತುರ್ತಾಗಿ ಸಾಮಾನ್ಯ ಸಭೆ ನಡೆಯಲಿ

ಭದ್ರಾವತಿ ನಗರಸಭೆ 
    ಭದ್ರಾವತಿ, ಮೇ. ೨೨ : ವಿಧಾನಸಭಾ ಚುನಾವಣೆ ಘೋಷಣೆಯಾದ ಹಿನ್ನಲೆಯಲ್ಲಿ ಕಳೆದ ೨ ತಿಂಗಳಿನಿಂದ ನಗರಸಭೆ ಸಾಮಾನ್ಯ ಸಭೆ ನಡೆದಿಲ್ಲ. ಇದರಿಂದಾಗಿ ವಾರ್ಡ್‌ಗಳಲ್ಲಿ ಸಮಸ್ಯೆಗಳು ಉಲ್ಬಣಗೊಂಡಿವೆ.
    ೩೫ ವಾರ್ಡ್‌ಗಳನ್ನು ಒಳಗೊಂಡಿರುವ ನಗರಸಭೆಯಲ್ಲಿ ಮೂಲ ಸೌಕರ್ಯಗಳನ್ನು ಸಮರ್ಪಕವಾಗಿ ಕಲ್ಪಿಸಿಕೊಡಲು ಸಾಧ್ಯವಾಗುತ್ತಿಲ್ಲ. ಪ್ರತಿ ಬಾರಿ ಸಾಮಾನ್ಯ ಸಭೆಯಲ್ಲಿ ಸದಸ್ಯರು ಕುಡಿಯುವ ನೀರು, ರಸ್ತೆ, ತ್ಯಾಜ್ಯ ವಿಲೇವಾರಿ ಸೇರಿದಂತೆ ಹಲವು ಮೂಲ ಸೌಕರ್ಯಗಳನ್ನು ಸಮರ್ಪಕವಾಗಿ ಕೈಗೊಳ್ಳುವಂತೆ ಆಗ್ರಹಿಸಿಕೊಂಡು ಬರುತ್ತಿದ್ದಾರೆ.
    ಮಾ.೧೮ರಂದು ನಡೆದ ಸಾಮಾನ್ಯ ಸಭೆಯಲ್ಲಿ ಬಹುತೇಕ ಸದಸ್ಯರು ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ಒಕ್ಕೊರಲಿನಿಂದ ಆಗ್ರಹಿಸಿದ್ದರು. ಪ್ರಸ್ತುತ ೨ ತಿಂಗಳು ಮುಕ್ತಾಯಗೊಂಡಿದ್ದು, ಈ ನಡುವೆ ಇದೀಗ ಮತ್ತಷ್ಟು  ಸಮಸ್ಯೆಗಳು ಎದುರಾಗುತ್ತಿವೆ. ಬಹುತೇಕ ಚರಂಡಿ, ರಸ್ತೆಗಳು ಹಾಳಾಗಿದ್ದು,  ಬೇಸಿಗೆ ಮುಕ್ತಾಯಗೊಂಡು ಮಳೆಗಾಲ ಎದುರಾಗುತ್ತಿರುವ ಹಿನ್ನಲೆಯಲ್ಲಿ ತಕ್ಷಣ ಕ್ರಮ ಕೈಗೊಳ್ಳಬೇಕಾಗಿದೆ. ವಿಧಾನಸಭಾ ಚುನಾವಣೆ ಎಲ್ಲಾ ಪ್ರಕ್ರಿಯೆಗಳು ಇದೀಗ ಮುಕ್ತಾಯಗೊಂಡಿದ್ದು, ವಿಳಂಬ ಮಾಡದೆ ತಕ್ಷಣ ಸಾಮಾನ್ಯಸಭೆ ನಡೆಸಬೇಕಾಗಿದೆ.
    ರಾಜ್ಯದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ನೆನೆಗುದಿಗೆ ಬಿದ್ದಿರುವ ಕಾಮಗಾರಿಗಳಿಗೆ ಮರು ಚಾಲನೆ ನೀಡಬೇಕಾಗಿದೆ. ಇದರ ಜೊತೆಗೆ ಹೊಸ ಕಾಮಗಾರಿಗಳಿಗೆ ಸಂಬಂಧಿಸಿದಂತೆ ರೂಪುರೇಷೆ ಸಿದ್ದಪಡಿಸಿಕೊಳ್ಳಬೇಕಾಗಿದೆ. ಈ ಹಿನ್ನಲೆಯಲ್ಲಿ ನಗರಸಭೆ ಆಡಳಿತ ಗಮನ ಹರಿಸಬೇಕಾಗಿದೆ.

ನೆಲಕ್ಕುರುಳುವ ಸ್ಥಿತಿಯಲ್ಲಿ ತೆಂಗಿನ ಮರ : ಅವಘಡ ಸಂಭವಿಸುವ ಮೊದಲು ಎಚ್ಚೆತ್ತುಕೊಳ್ಳಿ

ಭದ್ರಾವತಿ ಹಳೇನಗರದ ಬಸವೇಶ್ವರ ವೃತ್ತ ಮಾರುಕಟ್ಟೆ ಸಮೀಪದ ರಸ್ತೆಯೊಂದರಲ್ಲಿ ಬೃಹತ್ ಗಾತ್ರದ ತೆಂಗಿನ ಮರ ನೆಲಕ್ಕುರುಳುವ ಸ್ಥಿತಿಯಲ್ಲಿದ್ದು, ಅವಘಡ ಸಂಭವಿಸುವ ಮೊದಲು ಎಚ್ಚೆತ್ತುಕೊಳ್ಳಬೇಕಾಗಿದೆ.
    ಭದ್ರಾವತಿ, ಮೇ. ೨೨: ಹಳೇನಗರದ ಬಸವೇಶ್ವರ ವೃತ್ತ ಮಾರುಕಟ್ಟೆ ಸಮೀಪದ ರಸ್ತೆಯೊಂದರಲ್ಲಿ ಬೃಹತ್ ಗಾತ್ರದ ತೆಂಗಿನ ಮರ ನೆಲಕ್ಕುರುಳುವ ಸ್ಥಿತಿಯಲ್ಲಿದ್ದು, ಅವಘಡ ಸಂಭವಿಸುವ ಮೊದಲು ಎಚ್ಚೆತ್ತುಕೊಳ್ಳಬೇಕಾಗಿದೆ.
    ಮಾರುಕಟ್ಟೆಯಿಂದ ನ್ಯಾಯಾಲಯದ ಮುಂಭಾಗದ ರಸ್ತೆಗೆ ಸಂಪರ್ಕಗೊಂಡಿರುವ ಕಿರು ರಸ್ತೆ ಇದಾಗಿದ್ದು, ಈ ರಸ್ತೆಯಲ್ಲಿ ಪಾದಚಾರಿಗಳು ಹೆಚ್ಚಾಗಿ ಸಂಚರಿಸುತ್ತಾರೆ. ಈ ರಸ್ತೆಯಲ್ಲಿ ತೆಂಗಿನ ಮರ ಬಹುತೇಕ ಒಂದೆಡೆ ಬಾಗಿದ್ದು, ಮಳೆ ಬಿರುಗಾಳಿಗೆ ನೆಲಕ್ಕುರುಳುವ ಸಾಧ್ಯತೆ ಹೆಚ್ಚಾಗಿದೆ.
    ಒಂದು ವೇಳೆ ತೆಂಗಿನ ಮರ ನೆಲಕ್ಕುರುಳಿದ್ದಲ್ಲಿ ಕಟ್ಟಡಕ್ಕೆ ಹಾನಿ ಉಂಟಾಗಲಿದ್ದು, ಅಲ್ಲದೆ ಕೆಳ ಭಾಗದಲ್ಲಿರುವ ವಿದ್ಯುತ್ ಕಂಬ ಮುರಿದು ಬಿದ್ದು, ವಿದ್ಯುತ್ ತಂತಿ ಕತ್ತರಿಸಿ ಹೋಗಲಿದೆ. ಅಲ್ಲದೆ ಪ್ರಾಣಹಾನಿಯಂತಹ ದುರ್ಘಟನೆ ಸಹ ಸಂಭವಿಸುವ ಸಾಧ್ಯತೆ ಇದ್ದು, ಈ ಹಿನ್ನಲೆಯಲ್ಲಿ ಸಂಬಂಧಪಟ್ಟವರು ಗಮನ ಹರಿಸಬೇಕಾಗಿದೆ.

ವಿವಾಹ ಎಂಬುದು ಕೇವಲ ಎರಡು ದೇಹಗಳ ನಡುವಿನ ಸಂಬಂಧವಲ್ಲ

೩೯ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಡಾ.ಬಿ.ಜಿ.ಧನಂಜಯ

ವಿಶ್ವ ಹಿಂದು ಪರಿಷದ್, ವಿಶ್ವಭಾರತಿ ವಿಶ್ವಸ್ಥ ಮ೦ಡಳಿವತಿಯಿಂದ ಭದ್ರಾವತಿ ಸಿದ್ಧಾರೂಢ ನಗರದ ಧರ್ಮಶ್ರೀ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ೩೯ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಹೊನ್ನಾಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಜಿ ಧನಂಜಯ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
    ಭದ್ರಾವತಿ, ಮೇ. ೨೨ : ಭದ್ರಾವತಿ : ವಿಶ್ವದಲ್ಲಿಯೇ ತನ್ನದೇ ಆದ ವೈಶಿಷ್ಟ್ಯತೆಯಿಂದ ಜಗತ್ತಿನ ಗಮನ ಸೆಳೆದಿರುವ ಭಾರತ ದೇಶದಲ್ಲಿ ವಿವಾಹಕ್ಕೆ ಅತ್ಯಂತ ಮಹತ್ವದ ಸ್ಥಾನವಿದ್ದು, ಪರಿಣಾಮವಾಗಿ ಪಾಶ್ಚಿಮಾತ್ಯರು ಸಹ ಭಾರತೀಯರ ವಿವಾಹ ಪದ್ಧತಿ ಅನುಸರಿಸುತ್ತಿರುವುದು ಹೆಚ್ಚಾಗಿ ಕಂಡು ಬರುತ್ತಿದೆ ಎಂದು ಹೊನ್ನಾಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಜಿ ಧನಂಜಯ ಹೇಳಿದರು.
    ವಿಶ್ವ ಹಿಂದು ಪರಿಷದ್, ವಿಶ್ವಭಾರತಿ ವಿಶ್ವಸ್ಥ ಮ೦ಡಳಿವತಿಯಿಂದ ಸಿದ್ಧಾರೂಢ ನಗರದ ಧರ್ಮಶ್ರೀ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ೩೯ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಅವರು ಪಾಲ್ಗೊಂಡು ಪ್ರಾಸ್ತಾವಿಕವಾಗಿ ಮಾತನಾಡಿದರು.
    ಸದೃಢ ಕುಟುಂಬದಿಂದ ಮಾತ್ರ ಸಶಕ್ತರಾಷ್ಟ್ರ ನಿರ್ಮಾಣ ಸಾಧ್ಯ. ಈ ಹಿನ್ನೆಲೆಯಲ್ಲಿ ಬೆಳೆಯುವ ಹಂತದಲ್ಲಿಯೇ ಸಂಸ್ಕೃತಿ ಹಾಗೂ ಸಂಸ್ಕಾರ ಅತ್ಯಗತ್ಯ ಎಂದರು. ವಿವಾಹ ಎಂದರೆ ಕೇವಲ ಗಂಡು-ಹೆಣ್ಣಿನ ನಡುವಿನ ದೈಹಿಕ ಸಂಬಂಧ ಮಾತ್ರವಲ್ಲ ಎಂದ ಅವರು, ಈ ಕುರಿತಾಗಿ ವಿವರಣೆ ನೀಡಿದರು.
    ಮದುವೆ ಎಂಬುದು ಮಧ್ಯಮ ವರ್ಗಕ್ಕೆ ದುಸ್ತರವಾಗಿದ್ದ ಕಾಲದಲ್ಲಿ ಡಿ. ವೀರೇಂದ್ರ ಹೆಗ್ಗಡೆಯವರು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ೭೦ರ ದಶಕದಲ್ಲಿ ಆರಂಭಿಸಿದ ಉಚಿತ ಸಾಮೂಹಿಕ ವಿವಾಹದಿಂದ ಪ್ರೇರಣೆಗೊಂಡು ವಿಶ್ವ ಹಿಂದು ಪರಿಷದ್ ವತಿಯಿಂದ ನಗರದಲ್ಲಿ ಸುಮಾರು ೩೯ ವರ್ಷಗಳಿಂದ ಉಚಿತ ಸಾಮೂಹಿಕ ವಿವಾಹ ಸಮಾರಂಭ ಆಯೋಜಿಸಿಕೊಂಡು ಬರಲಾಗುತ್ತಿದೆ. ಸಾಮೂಹಿಕ ವಿವಾಹದಲ್ಲಿ ಇದುವರೆಗೂ ಒಟ್ಟು ೭೭೪ ಜೊತೆ ವಿವಾಹ ನಡೆಸಿರುವುದು ಹೆಮ್ಮಯ ಸಂಗತಿಯಾಗಿದೆ ಎಂದರು.
    ಸಮಾರಂಭದ ಸಾನಿಧ್ಯ ವಹಿಸಿದ್ದ ಅರಕೆರೆಯ ವಿರಕ್ತ ಮಠದ ಶ್ರೀ ಕರಿಸಿದ್ದೇಶ್ವರ ಸ್ವಾಮೀಜಿ ಮಾತನಾಡಿ, ವಿವಾಹ ಎಂಬುದು ಪವಿತ್ರ ವಾದ ಅನುಬಂಧವಾಗಿದ್ದು, ಸತಿ-ಪತಿಗಳು ಪರಸ್ಪರ ಅರಿತು ಸಮಾಜದಲ್ಲಿ ಸತ್ಪ್ರಜೆಗಳಾಗಿ ಬಾಳುವಂತೆ ಕರೆನೀಡಿದರು.
    ಬಜರಂಗದಳದ ಪ್ರಾಂತ ಸ೦ಯೋಜಕ ಕೆ.ಆರ್ ಸುನಿಲ್ ಮಾತನಾಡಿ, ಹಿಂದೂ ಸಮಾಜವನ್ನು ಜಾಗೃತಿಗೊಳಿಸುವ ನಿಟ್ಟಿನಲ್ಲಿ ವಿಎಚ್‌ಪಿ ಹಾಗೂ ಸಂಘ ಪರಿವಾರ ನಿರಂತರವಾಗಿ ಕೆಲಸಮಾಡುತ್ತಿವೆ ಎಂದರು.
    ವಿಶ್ವ ಹಿಂದು ಪರಿಷದ್ ಅಧ್ಯಕ್ಷ ಪಿ.ವೆಂಕಟರಮಣಶೇಟ್ ಅಧ್ಯಕ್ಷತೆ ವಹಿಸಿದ್ದರು. ನಗರಸಭೆ ಅಧ್ಯಕ್ಷ ಅನುಸುಧಾ ಮೋಹನ್ ಪಳನಿ, ಸದಸ್ಯರಾದ ಬಿ.ಕೆ ಮೋಹನ್, ವಿ. ಕದಿರೇಶ್, ಜಾರ್ಜ್, ಮಾಜಿ ಅಧ್ಯಕ್ಷ ಆರ್.ಕರುಣಾಮೂರ್ತಿ, ವಿಐಎಸ್‌ಎಲ್ ಕಾರ್ಖಾನೆ ಕಾರ್ಯಪಾಲಕ ನಿರ್ದೇಶಕರಾದ ಬಿ.ಎಲ್ ಚಾಂದ್ವಾನಿ, ಡಾ.ಟಿ.ನರೇಂದ್ರ ಭಟ್, ಹಾ. ರಾಮಪ್ಪ, ನಾರಾಯಣ, ಜಿ.ವರ್ಣೇಕರ್, ಸುಧಾಕರ ಶೆಟ್ಟಿ, ಮುತ್ತು ರಾಮಲಿಂಗಮ್, ದಾನಿ ಶಾರದ ಟ್ರಾನ್ಸ್‌ಪೋರ್ಟ್ ಶಿವಮೂರ್ತಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ಸಾಮೂಹಿಕ ವಿವಾಹದಲ್ಲಿ ಸಂತೋಷ್ ಜಾಧವ್ ಮತ್ತು ಎನ್. ಶಿವಲೀಲಾ ಹಾಗೂ ವಿನಯ್ ಡಿ.ಎನ್ ಮತ್ತು ನೇತ್ರಾಬಾಯಿ ಡಿ. ನವಜೀವನಕ್ಕೆ ಕಾಲಿಟ್ಟರು. ಮಂಜುನಾಥ್‌ರಾವ್ ಪವಾರ್ ಸ್ವಾಗತಿಸಿದರು. ವೈ.ಎಸ್ ರಾಮಮೂರ್ತಿ ನಿರೂಪಿಸಿ, ಡಿ.ಆರ್ ಶಿವಕುಮಾರ್ ವಂದಿಸಿದರು.

Sunday, May 21, 2023

ಶಾಸಕ ಬಿ.ಕೆ ಸಂಗಮೇಶ್ವರ್‌ಗೆ ಸಚಿವ ಸ್ಥಾನಕ್ಕಾಗಿ ಸಾಮಾಜಿಕ ಜಾಲತಾಣದಲ್ಲಿ ಅಂದೋಲನ

ಭದ್ರಾವತಿ ಶಾಸಕ ಬಿ.ಕೆ ಸಂಗಮೇಶ್ವರ್‌ಗೆ ಈ ಬಾರಿ ಸಚಿವ ಸ್ಥಾನ ನೀಡಬೇಕೆಂಬ ಕೂಗು ಕ್ಷೇತ್ರದಲ್ಲಿ ಹೆಚ್ಚಾಗುತ್ತಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಅಂದೋಲನವಾಗಿ ಮಾರ್ಪಟ್ಟಿದೆ.
    ಭದ್ರಾವತಿ, ಮೇ. ೨೧ : ಶಾಸಕ ಬಿ.ಕೆ ಸಂಗಮೇಶ್ವರ್‌ಗೆ ಈ ಬಾರಿ ಸಚಿವ ಸ್ಥಾನ ನೀಡಬೇಕೆಂಬ ಕೂಗು ಕ್ಷೇತ್ರದಲ್ಲಿ ಹೆಚ್ಚಾಗುತ್ತಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಅಂದೋಲನವಾಗಿ ಮಾರ್ಪಟ್ಟಿದೆ.
ಶ್ರೀ ಬಿ.ಕೆ ಸಂಗಮೇಶ್ವರ್‌ರವರು ಮಿನಿಸ್ಟರ್ ಪಟ್ಟ ಏರಲೇಬೇಕು... ಎಂಬ ಶೀರ್ಷಿಕೆಯೊಂದಿಗೆ ಅಂದೋಲನ ನಡೆಯುತ್ತಿದ್ದು, ಭದ್ರಾವತಿಯಲ್ಲಿ ೪ನೇ ಬಾರಿ ಗೆದ್ದು ಶಾಸಕರಾಗಿ ಆಯ್ಕೆಯಾದ ನಮ್ಮ ಶ್ರೀ ಬಿ.ಕೆ ಸಂಗಮೇಶ್ವರ್ ಅವರನ್ನು ಮಿನಿಸ್ಟರ್ ಮಾಡದೆ ಇನ್ಯಾರನ್ನ ಮಾಡುತ್ತೀರಾ..? ಎಂಬ ಅಂದೋಲನದಲ್ಲಿ ಆರಂಭಿಸಿದ್ದಾರೆ.
    ಈಗಾಗಲೇ ಪಕ್ಷದ ಸ್ಥಳೀಯ ಮುಖಂಡರು, ಅಭಿಮಾನಿಗಳು, ಕಾರ್ಯಕರ್ತರು ಮಾತ್ರವಲ್ಲದೆ ಪಕ್ಷಭೇದ ಮರೆತು ವಿವಿಧ ಸಮುದಾಯಗಳು, ಸಂಘ-ಸಂಸ್ಥೆಗಳು, ಗಣ್ಯರು ಸಹ ಸಂಗಮೇಶ್ವರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಒಕ್ಕೂರಲಿನಿಂದ ಆಗ್ರಹಿಸಿದ್ದಾರೆ.
    ಒಂದು ವೇಳೆ ಸಚಿವ ಸ್ಥಾನ ನೀಡಲು ವಿಳಂಬ ಮಾಡಿದ್ದಲ್ಲಿ ಉಗ್ರ ಹೋರಾಟ ನಡೆಸುವ ಎಚ್ಚರಿಕೆ ಸಹ ಕೇಳಿ ಬರುತ್ತಿದೆ. ಈಗಾಗಲೇ ಶಾಸಕ ಬಿ.ಕೆ ಸಂಗಮೇಶ್ವರ್‌ರವರು ಸರ್ಕಾರ ರಚನೆ ಆರಂಭದಲ್ಲಿಯೇ ಸಚಿವ ಸ್ಥಾನ ಸಿಗದಿರುವ ಕುರಿತು ಬಹಿರಂಗವಾಗಿ ಬೇಸರ ವ್ಯಕ್ತಪಡಿಸಿದ್ದಾರೆ.  

ವಿಜೃಂಭಣೆಯಿಂದ ಜರುಗಿದ ಮಾರಿಯಮ್ಮ ದೇವಿ ಕರಗ ಉತ್ಸವ

ಪ್ರತಿವರ್ಷದಂತೆ ಈ ಬಾರಿ ಸಹ ಭದ್ರಾವತಿ ನ್ಯೂಟೌನ್ ಕೂಲಿಬ್ಲಾಕ್ ಶೆಡ್, ಆಂಜನೇಯ ಅಗ್ರಹಾರದ ಶ್ರೀ ಮಾರಿಯಮ್ಮನವರ ದೇವಸ್ಥಾನದಲ್ಲಿ ಭಾನುವಾರ ಕರಗ ಉತ್ಸವ ವಿಜೃಂಭಣೆಯಿಂದ ಜರುಗಿತು.
    ಭದ್ರಾವತಿ, ಮೇ. ೨೧ : ಪ್ರತಿವರ್ಷದಂತೆ ಈ ಬಾರಿ ಸಹ ನ್ಯೂಟೌನ್ ಕೂಲಿಬ್ಲಾಕ್ ಶೆಡ್, ಆಂಜನೇಯ ಅಗ್ರಹಾರದ ಶ್ರೀ ಮಾರಿಯಮ್ಮನವರ ದೇವಸ್ಥಾನದಲ್ಲಿ ಭಾನುವಾರ ಕರಗ ಉತ್ಸವ ವಿಜೃಂಭಣೆಯಿಂದ ಜರುಗಿತು.
    ಮಿಲ್ಟ್ರಿಕ್ಯಾಂಪ್ ಶ್ರೀ ಶ್ರೀನಿವಾಸ ಸ್ವಾಮಿ ದೇವಸ್ಥಾನದಿಂದ ಅಲಂಕೃತಗೊಂಡ ಶಕ್ತಿ ಕರಗ ಮೆರವಣಿಗೆ ಮೂಲಕ ಕಲಾತಂಡಗಳೊಂದಿಗೆ ಮಧ್ಯಾಹ್ನ ಸುಮಾರು ೨ ಗಂಟೆಗೆ ಅಮ್ಮನವರ ದೇವಸ್ಥಾನಕ್ಕೆ ಆಗಮಿಸಿತು. ನಂತರ ಕರಗ ಪ್ರತಿಷ್ಠಾಪನೆ ನಡೆಯಿತು. ಇದಕ್ಕೂ ಮೊದಲು ಬೆಳಿಗ್ಗೆ ಅಮ್ಮನವರಿಗೆ ಎಳನೀರು ಅಭಿಷೇಕ ಮತ್ತು ೧೦೮ ಕಲಶ ಸಹಿತ ಬ್ರಹ್ಮಕಲಶ ಅಭಿಷೇಕ ಮತ್ತು ಪೂಜೆ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು.


    ಬಹುತೇಕ ಭಕ್ತರು ಅಂಬಲಿ ಸೇವೆ ಹಾಗು ಪ್ರಸಾದ ನೈವೇದ್ಯ ಸಮರ್ಪಿಸಿದರು. ತೀರ್ಥಪ್ರಸಾದ ವಿನಿಯೋಗ, ನಂತರ ಅನ್ನದಾನ ನಡೆಯಿತು. ಸಂಜೆ  ವಿದ್ಯುತ್ ದೀಪಗಳಿಂದ ಅಲಂಕೃತಗೊಂಡ ರಥದಲ್ಲಿ ಅಮ್ಮನವರ ರಾಜಬೀದಿ ಉತ್ಸವ ಮತ್ತು ಮಂಗಳವಾದ್ಯದೊಂದಿಗೆ ಕರಗ ಆಟ ನಡೆಯಿತು. ಸುರಗಿತೋಪು, ಬಾಲಭಾರತಿ, ನ್ಯೂಟೌನ್, ವಿದ್ಯಾಮಂದಿರ, ಗಣೇಶ್‌ಕಾಲೋನಿ, ಜನ್ನಾಪುರ, ಹುಡ್ಕೋಕಾಲೋನಿ ಸೇರಿದಂತೆ ವಿವಿಧೆಡೆಗಳಿಂದ ಭಕ್ತರು ಆಗಮಿಸಿದ್ದರು.

Saturday, May 20, 2023

ಮೇ.೨೧ರಂದು ಮಾರಿಯಮ್ಮ ದೇವಿ ಕರಗ ಉತ್ಸವ

    ಭದ್ರಾವತಿ, ಮೇ. ೨೦ : ಪ್ರತಿವರ್ಷದಂತೆ ಈ ಬಾರಿ ಸಹ ನ್ಯೂಟೌನ್ ಶ್ರೀ ಮಾರಿಯಮ್ಮನವರ ದೇವಸ್ಥಾನದಲ್ಲಿ ವಿಜೃಂಭಣೆಯಿಂದ ಕರಗ ಮಹೋತ್ಸವ ನಡೆಯುತ್ತಿದ್ದು, ಮೇ.೨೧ರ ಭಾನುವಾರ ಕರಗ ಉತ್ಸವ ಜರುಗಲಿದೆ.
    ಬೆಳಿಗ್ಗೆ ೮ ಗಂಟೆಗೆ ಶ್ರೀ ದೇವಿಗೆ ಎಳನೀರು ಅಭಿಷೇಕ ಮತ್ತು ೧೦೮ ಕಲಶ ಸಹಿತ ಬ್ರಹ್ಮಕಲಶ ಅಭಿಷೇಕ ಮತ್ತು ಪೂಜೆ, ಮಧ್ಯಾಹ್ನ ೧ ಗಂಟೆಗೆ ಶಕ್ತಿ ಕರಗ ಸ್ಥಾಪನೆ, ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ, ನಂತರ ಅನ್ನದಾನ ನಡೆಯಲಿದೆ. ಸಂಜೆ ೬ ಗಂಟೆಗೆ ವಿದ್ಯುತ್ ದೀಪಗಳಿಂದ ಅಲಂಕೃತಗೊಂಡ ರಥದಲ್ಲಿ ಶ್ರೀ ದೇವಿಯವರ ರಾಜಬೀದಿ ಉತ್ಸವ ಮತ್ತು ಮಂಗಳವಾದ್ಯದೊಂದಿಗೆ ಕರಗ ಆಟ ನಡೆಯಲಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಲು ಕೋರಲಾಗಿದೆ.

ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ : ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಸಂಭ್ರಮಾಚರಣೆ

 ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಶನಿವಾರ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಹಿನ್ನಲೆಯಲ್ಲಿ ಭದ್ರಾವತಿಯಲ್ಲಿ ಪಕ್ಷದ ಸ್ಥಳೀಯ ಮುಖಂಡರು, ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಸಂಭ್ರಮಾಚರಣೆ ನಡೆಸಿದರು.
    ಭದ್ರಾವತಿ, ಮೇ. ೨೦ : ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಶನಿವಾರ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಹಿನ್ನಲೆಯಲ್ಲಿ ಪಕ್ಷದ ಸ್ಥಳೀಯ ಮುಖಂಡರು, ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಸಂಭ್ರಮಾಚರಣೆ ನಡೆಸಿದರು.
    ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹಾಗು ೮ ಮಂದಿ ಸಚಿವರಾಗಿ ಪದಗ್ರಹಣ ಸ್ವೀಕರಿಸುವ ಮೂಲಕ ನಾಡಿನ ಜನರ ಆಶಯದಂತೆ ನೂತನ ಜನಹಿತ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ರಾಜ್ಯದಲ್ಲಿ ಉತ್ತಮ ಆಡಳಿತ ನೀಡುವ ವಿಶ್ವಾಸವನ್ನು ಮುಖಂಡರು, ಕಾರ್ಯಕರ್ತರು ವ್ಯಕ್ತಪಡಿಸಿದರು.  
    ನಗರದ ಮಾಧವಚಾರ್ ವೃತ್ತ ಮತ್ತು ರಂಗಪ್ಪ ವೃತ್ತದಲ್ಲಿ ಸಂಭ್ರಮಾಚರಣೆ ನಡೆಸಲಾಯಿತು. ನಗರಸಭೆ ಅಧ್ಯಕ್ಷೆ ಅನುಸುಧಾ ಮೋಹನ್ ಪಳನಿ, ಸದಸ್ಯರಾದ ಟಿಪ್ಪು ಸುಲ್ತಾನ್, ಬಷೀರ್ ಅಹಮದ್, ಜಾರ್ಜ್, ಮಾಜಿ ಅಧ್ಯಕ್ಷೆ ವೈ. ರೇಣುಕಮ್ಮ, ಮಾಜಿ ಉಪಾಧ್ಯಕ್ಷ ಚನ್ನಪ್ಪ, ಮಾಜಿ ಸದಸ್ಯ ಆಂಜನಪ್ಪ, ಪಕ್ಷದ ಮಹಿಳಾ ಘಟಕದ ಮಾಜಿ ಅಧ್ಯಕ್ಷೆ ಮಂಜುಳಾ ರಾಮಚಂದ್ರ, ರೂಪಾನಾರಾಯಣ, ಮುಖಂಡರಾದ ರಮಾಕಾಂತ್, ಪ್ರಕಾಶ್‌ರಾವ್, ಕೇಶವ, ಅಯೂಬ್ ಖಾನ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ಸಂಗಮೇಶ್ವರ್‌ಗೆ ಕೈ ತಪ್ಪಿದ ಸಚಿವ ಸ್ಥಾನ : ಕ್ಷೇತ್ರದ ಜನತೆಗೆ ನಿರಾಸೆ

ಬಿ.ಕೆ ಸಂಗಮೇಶ್ವರ್
    ಭದ್ರಾವತಿ, ಮೇ. ೨೦ : ಈ ಬಾರಿ ಶಾಸಕ ಬಿ.ಕೆ ಸಂಗಮೇಶ್ವರ್‌ಗೆ ಸಚಿವ ಸ್ಥಾನ ಸಿಗುವ ನಿರೀಕ್ಷೆಯಲ್ಲಿದ್ದ ಕ್ಷೇತ್ರದ ಜನತೆಗೆ ನಿರಾಸೆಯುಂಟಾಗಿದೆ. ಸರ್ಕಾರ ರಚನೆ ಆರಂಭದಲ್ಲಿಯೇ ಸಚಿವ ಸ್ಥಾನ ಸಿಗುವ ಮೂಲಕ ಕ್ಷೇತ್ರದ ಮೊದಲ ಸಚಿವ ಎಂಬ ಹೆಗ್ಗಳಿಕೆಗೆ ಪಾತ್ರರಾಗುತ್ತಾರೆಂಬ ನಿರೀಕ್ಷೆ ಹೊಂದಲಾಗಿತ್ತು.  
    ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಶನಿವಾರ ಕೇವಲ ೮ ಮಂದಿ ಮಾತ್ರ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಶಾಸಕ ಬಿ.ಕೆ ಸಂಗಮೇಶ್ವರ್ ಸಹ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆಂಬ ಸುದ್ದಿ ಕ್ಷೇತ್ರದಾದ್ಯಂತ ವ್ಯಾಪಕವಾಗಿ ಹರಡಿತ್ತು. ಪ್ರಮಾಣ ವಚನ ಸ್ವೀಕಾರಕ್ಕೆ ಕೆಲವೇ ಗಂಟೆಗಳು ಬಾಕಿ ಇರುವಂತೆ ನೂತನ ಸಚಿವರ ಪಟ್ಟಿ ಅಧಿಕೃತವಾಗಿ ಬಿಡುಗಡೆಗೊಂಡ ನಂತರ ಕ್ಷೇತ್ರದ ಜನರಲ್ಲಿ ಹೆಚ್ಚಿನ ನಿರಾಸೆಯನ್ನುಂಟು ಮಾಡಿದೆ.
    ಕ್ಷೇತ್ರದಲ್ಲಿ ಇದುವರೆಗೂ ಯಾರಿಗೂ ಸಚಿವ ಸ್ಥಾನ ಸಿಕ್ಕಿಲ್ಲ. ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದ್ದು, ನನಗೆ ಸಚಿವ ಸ್ಥಾನ ಸಿಗುವುದು ಖಚಿತ ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ಚುನಾವಣಾ ಪ್ರಚಾರ ಸಂದರ್ಭದಲ್ಲಿ ಕ್ಷೇತ್ರದಾದ್ಯಂತ ಮತಯಾಚನೆ ನಡೆಸಿದ್ದರು. ಅಲ್ಲದೆ ಪಕ್ಷದ ಸ್ಥಳೀಯ ಮುಖಂಡರು, ಕಾರ್ಯಕರ್ತರು ಹಾಗು ಅಭಿಮಾನಿಗಳಲ್ಲೂ ಸಚಿವ ಸ್ಥಾನ ಸಿಗುವ ವಿಶ್ವಾಸ ಮೂಡಿಸುವ ಮೂಲಕ ಉತ್ಸಾಹ ತುಂಬಿದ್ದರು.
    ಜಿಲ್ಲೆಯಲ್ಲಿ ಪ್ರಸ್ತುತ ೩ ಮಂದಿ ಶಾಸಕರಿದ್ದು, ಈ ಪೈಕಿ ಶಾಸಕ ಬಿ.ಕೆ ಸಂಗಮೇಶ್ವರ್ ಹಿರಿಯರಾಗಿದ್ದಾರೆ. ಅಲ್ಲದೆ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಶಾಸಕರಾಗಿದ್ದು,  ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬೆಂಬಲಿಗರಲ್ಲಿ ಒಬ್ಬರಾಗಿದ್ದಾರೆ. ಈ ಹಿನ್ನಲೆಯಲ್ಲಿ ಇವರಿಗೆ ಸಚಿವ ಸ್ಥಾನ ಸಿಗುವುದು ಬಹುತೇಕ ಖಚಿತ ಎನ್ನಲಾಗಿತ್ತು. ಈ ಬಾರಿ ಸಚಿವ ಸ್ಥಾನ ಸಿಗದಿರುವುದು ವಿಪರ್ಯಾಸದ ಸಂಗತಿಯಾಗಿದೆ.

Friday, May 19, 2023

ಸಂಗಮೇಶ್ವರ್‌ಗೆ ಸಚಿವ ಸ್ಥಾನ ಸಿಗುವ ನಿರೀಕ್ಷೆ

ಜಾತಕ ಪಕ್ಷಿಗಳಂತೆ ಎದುರು ನೋಡುತ್ತಿರುವ ಕ್ಷೇತ್ರದ ಮತದಾರರು

ಬಿ.ಕೆ ಸಂಗಮೇಶ್ವರ್
    ಭದ್ರಾವತಿ, ಮೇ. ೧೯ : ಈ ಬಾರಿಯಾದರೂ ಶಾಸಕ ಬಿ.ಕೆ ಸಂಗಮೇಶ್ವರ್‌ಗೆ ಸಚಿವ ಸ್ಥಾನ ಸಿಗುವ ನಿರೀಕ್ಷೆಯಲ್ಲಿ ಕ್ಷೇತ್ರದ ಜನತೆ ಎದುರು ನೋಡುತ್ತಿದ್ದು, ಶುಕ್ರವಾರ ರಾತ್ರಿ ೧೦ ಗಂಟೆ ಕಳೆದರೂ ಸಹ ಅಧಿಕೃತ ಮಾಹಿತಿ ಹೊರಬೀಳದೆ ಇರುವುದು ನಿರಾಸೆಯನ್ನುಂಟು ಮಾಡಿದೆ.
    ಕ್ಷೇತ್ರದಲ್ಲಿ ಇದುವರೆಗೂ ಯಾರಿಗೂ ಸಚಿವ ಸ್ಥಾನ ಸಿಕ್ಕಿಲ್ಲ. ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದ್ದು, ನನಗೆ ಸಚಿವ ಸ್ಥಾನ ಸಿಗುವುದು ಖಚಿತ ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ಚುನಾವಣಾ ಪ್ರಚಾರ ಸಂದರ್ಭದಲ್ಲಿ ಕ್ಷೇತ್ರದಾದ್ಯಂತ ಮತಯಾಚನೆ ನಡೆಸಿದ್ದರು. ಅಲ್ಲದೆ ಪಕ್ಷದ ಸ್ಥಳೀಯ ಮುಖಂಡರು, ಕಾರ್ಯಕರ್ತರು ಹಾಗು ಅಭಿಮಾನಿಗಳಲ್ಲೂ ಸಚಿವ ಸ್ಥಾನ ಸಿಗುವ ವಿಶ್ವಾಸ ಮೂಡಿಸುವ ಮೂಲಕ ಉತ್ಸಾಹ ತುಂಬಿದ್ದರು. ಇದೀಗ ಪದಗ್ರಹಣ ಸಮಾರಂಭಕ್ಕೆ ಕೆಲವು ಕೆಲವು ಗಂಟೆಗಳು ಮಾತ್ರ ಬಾಕಿ ಉಳಿದಿವೆ. ಇನ್ನೂ ಸಚಿವ ಸ್ಥಾನ ಸಿಗುವ ಅಧಿಕೃತ ಘೋಷಣೆಯಾಗದಿರುವುದು ನಿರಾಸೆಯನ್ನುಂಟು ಮಾಡುತ್ತಿದೆ.
    ಜಿಲ್ಲೆಯಲ್ಲಿ ಪ್ರಸ್ತುತ ೩ ಮಂದಿ ಶಾಸಕರಿದ್ದು, ಈ ಪೈಕಿ ಶಾಸಕ ಬಿ.ಕೆ ಸಂಗಮೇಶ್ವರ್ ಹಿರಿಯರಾಗಿದ್ದಾರೆ. ಅಲ್ಲದೆ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಶಾಸಕರಾಗಿದ್ದು, ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬೆಂಬಲಿಗರಲ್ಲಿ ಒಬ್ಬರಾಗಿದ್ದಾರೆ. ಈ ಹಿನ್ನಲೆಯಲ್ಲಿ ಇವರಿಗೆ ಸಚಿವ ಸಿಗುವುದು ಬಹುತೇಕ ಖಚಿತ ಎನ್ನಲಾಗಿದ್ದು, ಆದರೂ ಸಹ ಈ ನಡುವೆ ಪಕ್ಷದ ಸ್ಥಳೀಯ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಹಾಗು  ಕ್ಷೇತ್ರದ ಮತದಾರರಲ್ಲಿ ಆತಂಕ ಮನೆ ಮಾಡಿದೆ.  

ಭದ್ರಾವತಿ ಕ್ಷೇತ್ರದ ಸರ್ವತೋಮುಖ ಅಭಿವೃದಿಗೆ ಸಂಗಮೇಶ್ವರ್‌ಗೆ ಸಚಿವ ಸ್ಥಾನ ನೀಡಿ

ಭದ್ರಾವತಿ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿ ಹಿನ್ನಲೆಯಲ್ಲಿ ಈ ಬಾರಿ ಶಾಸಕ ಬಿ.ಕೆ ಸಂಗಮೇಶ್ವರ್‌ಗೆ ಸಚಿವ ಸ್ಥಾನ ನೀಡಬೇಕೆಂದು ವೀರಶೈವ ಲಿಂಗಾಯತ ಸಮಾಜದ ವಿವಿಧ ಸಂಘಟನೆಗಳು ಒತ್ತಾಯಿಸಿವೆ.
     ಭದ್ರಾವತಿ, ಮೇ. ೧೯ : ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿ ಹಿನ್ನಲೆಯಲ್ಲಿ ಈ ಬಾರಿ ಶಾಸಕ ಬಿ.ಕೆ ಸಂಗಮೇಶ್ವರ್‌ಗೆ ಸಚಿವ ಸ್ಥಾನ ನೀಡಬೇಕೆಂದು ವೀರಶೈವ ಲಿಂಗಾಯತ ಸಮಾಜದ ವಿವಿಧ ಸಂಘಟನೆಗಳು ಒತ್ತಾಯಿಸಿವೆ.
    ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘಟನೆಗಳ ಪ್ರಮುಖರು, ವೀರಶೈವ ಲಿಂಗಾಯತ ಸಮಾಜ ರಾಜಕೀಯವಾಗಿ ಸಮನ್ವಯತೆ ಕಾಯ್ದುಕೊಂಡು ಬರುತ್ತಿದೆ. ಚುನಾವಣೆ ಸಂದರ್ಭದಲ್ಲಿ ಎಲ್ಲಾ ಪಕ್ಷಗಳಲ್ಲೂ ಸಮಾಜದವರು ಗುರುತಿಸಿಕೊಂಡಿದ್ದು, ಚುನಾವಣೆ ನಂತರ ನಾವೆಲ್ಲರೂ ಒಗ್ಗಟ್ಟಿನಿಂದ ಸಮಾಜದ ಅಭಿವೃದ್ಧಿಗೆ ಪೂರಕವಾಗಿ ಚಿಂತಿಸುವ ಮನೋಭಾವನೆ ಹೊಂದಿದ್ದೇವೆ. ಸಮಾಜದ ಬಿ.ಕೆ ಸಂಗಮೇಶ್ವರ್‌ರವರು ೪ನೇ ಬಾರಿಗೆ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿರುವುದು ಹೆಮ್ಮೆಯ ವಿಚಾರವಾಗಿದೆ ಎಂದರು.
    ಸಂಗಮೇಶ್ವರ್‌ರವರು ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿ ಬಗ್ಗೆ ಹೆಚ್ಚಿನ ಕಾಳಜಿ ಹೊಂದಿದ್ದಾರೆ. ವಿಶೇಷವಾಗಿ ವಿಐಎಸ್‌ಎಲ್ ಮತ್ತು ಎಂಪಿಎಂ ಕಾರ್ಖಾನೆಗಳ ಅಭಿವೃದ್ಧಿಗೆ ಹೆಚ್ಚಿನ ಗಮನ ನೀಡಿದ್ದಾರೆ. ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿ ಕೈಗೊಳ್ಳಲು ಸಂಗಮೇಶ್ವರ್ ಸಮರ್ಥರಾಗಿದ್ದಾರೆ. ಈ ಹಿನ್ನಲೆಯಲ್ಲಿ ಅವರಿಗೆ ಈ ಬಾರಿ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸುತ್ತೇವೆ ಎಂದರು.
    ಸಮಾಜದ ವಿವಿಧ ಸಂಘಟನೆಗಳ ಪ್ರಮುಖರಾದ ಅಡವೀಶಯ್ಯ, ಜಿ. ಸುರೇಶಯ್ಯ, ಸಿದ್ದಲಿಂಗಯ್ಯ, ಬಸವರಾಜಯ್ಯ, ಸತೀಶ್, ಆರ್. ಮಹೇಶ್‌ಕುಮಾರ್, ಬಸವಂತಪ್ಪ, ಡಾ. ಜಿ.ಎಂ ನಟರಾಜ್, ವಾಗೀಶ್, ಪೂರ್ಣಿಮಾ, ಮಹಾದೇವ್, ಜಗದೀಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಶಾಸಕ ಬಿ.ಕೆ ಸಂಗಮೇಶ್ವರ್‌ಗೆ ಸಚಿವ ಸ್ಥಾನ ನೀಡಲು ಆಗ್ರಹ

ಭದ್ರಾವತಿ ಕ್ಷೇತ್ರದಲ್ಲಿ ಇದುವರೆಗೂ ಯಾರಿಗೂ ಸಚಿವ ಸ್ಥಾನ ಲಭಿಸಿಲ್ಲ. ಕಾಂಗ್ರೆಸ್ ಪಕ್ಷದ ನಾಯಕರು ಭರವಸೆ ನೀಡಿರುವಂತೆ ಶಾಸಕ ಬಿ.ಕೆ ಸಂಗಮೇಶ್ವರ್‌ಗೆ ಈ ಬಾರಿ ಸಚಿವ ನೀಡಲೇಬೇಕೆಂದು ಸಂಗೊಳ್ಳಿ ರಾಯಣ್ಣ ಯುವಪಡೆ ಪ್ರಮುಖರು ಆಗ್ರಹಿಸಿದರು.
    ಭದ್ರಾವತಿ, ಮೇ. ೧೯: ಕ್ಷೇತ್ರದಲ್ಲಿ ಇದುವರೆಗೂ ಯಾರಿಗೂ ಸಚಿವ ಸ್ಥಾನ ಲಭಿಸಿಲ್ಲ. ಕಾಂಗ್ರೆಸ್ ಪಕ್ಷದ ನಾಯಕರು ಭರವಸೆ ನೀಡಿರುವಂತೆ ಶಾಸಕ ಬಿ.ಕೆ ಸಂಗಮೇಶ್ವರ್‌ಗೆ ಈ ಬಾರಿ ಸಚಿವ ನೀಡಲೇಬೇಕೆಂದು ಸಂಗೊಳ್ಳಿ ರಾಯಣ್ಣ ಯುವಪಡೆ ಪ್ರಮುಖರು ಆಗ್ರಹಿಸಿದರು.
    ಅವರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಮಾಜದ ನಾಯಕರು ಹಾಗು ರಾಜಕೀಯ ಮುತ್ಸದ್ದಿಯಾಗಿರುವ ಸಿದ್ದರಾಮಯ್ಯನವರು ಶನಿವಾರ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರವಹಿಸಿಕೊಳ್ಳುತ್ತಿರುವುದು ಸಂತಸದ ಸಂಗತಿಯಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿರುವುದು ಕ್ಷೇತ್ರದ ಅಭಿವೃದ್ಧಿಗೆ ಸಹಕಾರಿಯಾಗಿದೆ ಎಂದರು.
    ಕ್ಷೇತ್ರದ ಶಾಸಕರಾಗಿ ೪ನೇ ಬಾರಿಗೆ ಆಯ್ಕೆಯಾಗಿರುವ ಬಿ.ಕೆ ಸಂಗಮೇಶ್ವರ್‌ರವರಿಗೆ ಈ ಬಾರಿ ಸಚಿವ ಸ್ಥಾನ ನೀಡಬೇಕು. ವಿಐಎಸ್‌ಎಲ್ ಮತ್ತು ಎಂಪಿಎಂ ಎರಡೂ ಕಾರ್ಖಾನೆಗಳು ಅಭಿವೃದ್ಧಿಯಾಗಬೇಕು. ಈಗಾಗಲೇ ಸಂಗಮೇಶ್ವರ್‌ರವರು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಲ್ಲಿ ಎಂಪಿಎಂ ಕಾರ್ಖಾನೆ ಪುನರ್ ಆರಂಭಗೊಳಿಸುವುದಾಗಿ ಭರವಸೆ ನೀಡಿದ್ದಾರೆ. ಅಲ್ಲದೆ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿ ಬಗ್ಗೆ ಹೆಚ್ಚಿನ ಕಾಳಜಿ ಹೊಂದಿದ್ದಾರೆ. ಈ ಹಿನ್ನಲೆಯಲ್ಲಿ ಅವರಿಗೆ ಈ ಬಾರಿ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿದರು.
    ಪತ್ರಿಕಾಗೋಷ್ಠಿಯಲ್ಲಿ ಯುವಪಡೆ ಪ್ರಮುಖರಾದ ದೊಡ್ಮನೆ ನಾಗಭೂಷಣ್, ಅಭಿಲಾಷ್, ಎಚ್. ರವಿಕುಮಾರ್, ನಗರಸಭಾ ಸದಸ್ಯರಾದ ಕಾಂತರಾಜ್, ಆರ್. ಶ್ರೇಯಸ್, ಶಿವಣ್ಣಗೌಡ, ಸುನಿಲ್‌ಕುಮಾರ್, ಶ್ರೀನಿವಾಸ್, ಗೋಪಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.  

Thursday, May 18, 2023

ಬಜರಂಗದಳದಿಂದ ಕಾಲೇಜು ವಿದ್ಯಾರ್ಥಿನಿಯರಿಗೆ ಕೇರಳ ಸ್ಟೋರಿ ಉಚಿತ ಪ್ರದರ್ಶನ ವ್ಯವಸ್ಥೆ

ಭದ್ರಾವತಿ ಸಿ.ಎನ್ ರಸ್ತೆಯಲ್ಲಿರುವ ನೇತ್ರಾವತಿ ಚಿತ್ರಮಂದಿರದಲ್ಲಿ ಕೇರಳ ಸ್ಟೋರಿ ಚಲನಚಿತ್ರ ಪ್ರದರ್ಶನಗೊಳ್ಳುತ್ತಿದ್ದು, ಬಜರಂಗದಳ ವತಿಯಿಂದ ಕಾಲೇಜುವಿದ್ಯಾರ್ಥಿನಿಯರಿಗೆ ಉಚಿತ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗಿದೆ.
    ಭದ್ರಾವತಿ, ಮೇ. ೧೮ : ನಗರದ ಸಿ.ಎನ್ ರಸ್ತೆಯಲ್ಲಿರುವ ನೇತ್ರಾವತಿ ಚಿತ್ರಮಂದಿರದಲ್ಲಿ ಕೇರಳ ಸ್ಟೋರಿ ಚಲನಚಿತ್ರ ಪ್ರದರ್ಶನಗೊಳ್ಳುತ್ತಿದ್ದು, ಕಾಲೇಜುವಿದ್ಯಾರ್ಥಿನಿಯರಿಗೆ ಉಚಿತ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗಿದೆ.
    ಕೇರಳ ಸ್ಟೋರಿ ಚಲನಚಿತ್ರ ವೀಕ್ಷಣೆಗೆ ಹೆಚ್ಚಿನ ಜನರು ಆಗಮಿಸುತ್ತಿದ್ದು, ಬಜರಂಗದಳ ವತಿಯಿಂದ ಗುರುವಾರ ಮೊದಲ ಪ್ರದರ್ಶನದಲ್ಲಿ ವಿವಿಧ ಕಾಲೇಜುಗಳ ಸುಮಾರು ೧೫೦ ವಿದ್ಯಾರ್ಥಿನಿಯರಿಗೆ ಉಚಿತ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಯಿತು.
    ಮೇ.೧೨ರಿಂದ ಪ್ರತಿದಿನ ಚಲನಚಿತ್ರ ೪ ಪ್ರದರ್ಶನಗೊಳ್ಳುತ್ತಿದ್ದು, ಬಜರಂಗದಳ ವಿದ್ಯಾರ್ಥಿನಿಯರಿಗೆ ಚಲನಚಿತ್ರ ಮೂಲಕ ಜಾಗೃತಿ ಮೂಡಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದೆ.

ಸಿದ್ದರಾಮಯ್ಯ ೨ನೇ ಬಾರಿಗೆ ಮುಖ್ಯಮಂತ್ರಿ : ವೈ. ನಟರಾಜ್ ಸಂತಸ

ಶಾಸಕ ಬಿ.ಕೆ ಸಂಗಮೇಶ್ವರ್ ಸಚಿವರಾಗಲಿ ಶಬರಿಮಲೆಯಲ್ಲಿ ಪ್ರಾರ್ಥನೆ

ಭದ್ರಾವತಿ ಶ್ರೀ ಕನಕ ಪತ್ತಿನ ಸಹಕಾರ ಸಂಘದ ನಿರ್ದೇಶಕ ವೈ. ನಟರಾಜ್ ವೈ. ನಟರಾಜ್‌ರವರು ಚುನಾವಣಾ ಫಲಿತಾಂಶ ಪ್ರಕಟಗೊಂಡ ನಂತರ  ಶಬರಿಮಲೆ ಪ್ರವಾಸ ಕೈಗೊಂಡು ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಲಿ ಹಾಗು ಕ್ಷೇತ್ರದ ಶಾಸಕರಾಗಿ ೪ನೇ ಬಾರಿಗೆ ಆಯ್ಕೆಯಾಗಿರುವ ಬಿ.ಕೆ ಸಂಗಮೇಶ್ವರ್‌ರವರು ಸಚಿವರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದಾರೆ.
    ಭದ್ರಾವತಿ, ಮೇ. ೧೮ : ರಾಜ್ಯದ ಮುಖ್ಯಮಂತ್ರಿಯಾಗಿ ೨ನೇ ಬಾರಿಗೆ ಪದಗ್ರಹಣ ಸ್ವೀಕರಿಸುತ್ತಿರುವ ಹಿರಿಯ ರಾಜಕೀಯ ಮುತ್ಸದ್ದಿ ಸಿದ್ದರಾಮಯ್ಯನವರಿಗೆ ಶ್ರೀ ಕನಕ ಪತ್ತಿನ ಸಹಕಾರ ಸಂಘದ ನಿರ್ದೇಶಕ ವೈ. ನಟರಾಜ್ ಸಂತಸ ವ್ಯಕ್ತಪಡಿಸಿದ್ದಾರೆ.
    ಸಿದ್ದರಾಮಯ್ಯನವರು ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ತರಲು ಪ್ರಮುಖ ಕಾರಣಕರ್ತರಲ್ಲಿ ಒಬ್ಬರಾಗಿದ್ದು, ಮೊದಲ ಬಾರಿಗೆ ಮುಖ್ಯಮಂತ್ರಿಯಾದ ಸಂದರ್ಭದಲ್ಲಿ ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು. ಈ ಬಾರಿ ಸಹ ಉತ್ತಮ ಆಡಳಿತ ನೀಡುವ ಮೂಲಕ ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
    ವೈ. ನಟರಾಜ್‌ರವರು ಚುನಾವಣಾ ಫಲಿತಾಂಶ ಪ್ರಕಟಗೊಂಡ ನಂತರ  ಶಬರಿಮಲೆ ಪ್ರವಾಸ ಕೈಗೊಂಡು ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಲಿ ಹಾಗು ಕ್ಷೇತ್ರದ ಶಾಸಕರಾಗಿ ೪ನೇ ಬಾರಿಗೆ ಆಯ್ಕೆಯಾಗಿರುವ ಬಿ.ಕೆ ಸಂಗಮೇಶ್ವರ್‌ರವರು ಸಚಿವರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದಾರೆ.
    ಸಿದ್ದರಾಮಯ್ಯನವರು ಮೇ.೨೦ರಂದು ಪದಗ್ರಹಣ ಸ್ವೀಕರಿಸುತ್ತಿದ್ದು, ಬಿ.ಕೆ ಸಂಗಮೇಶ್ವರ್‌ರವರು ಸಹ ಅಂದು ಸಚಿವರಾಗಿ ಪದಗ್ರಹಣ ಸ್ವೀಕರಿಸುವಂತಾಗಲಿ ಎಂದು ಪ್ರಾರ್ಥಿಸಿದ್ದಾರೆ.

ಅಂತರಾಷ್ಟ್ರೀಯ ಯೋಗ ಸ್ಪರ್ಧೆ : ಡಿ. ನಾಗರಾಜ್ ಚಿನ್ನದ ಪದಕ

ದುಬೈ, ಇಂಟರ್ ನ್ಯಾಷನಲ್ ಯೂತ್ ಯೋಗ ಫೆಡರೇಷನ್ ಅಂಡ್ ಸುಬ್ರ ಸ್ಕೂಲ್ ಆಫ್ ಯೋಗ ಸಹಯೋಗದೊಂದಿಗೆ ಹೋಟೆಲ್ ಅಡ್ಮಿರಲ್ ಪ್ಲಾಸದಲ್ಲಿ ನಡೆದ ಅಂತರಾಷ್ಟ್ರೀಯ ಯೋಗ ಸ್ಪರ್ಧೆಯಲ್ಲಿ ಭದ್ರಾವತಿ ವಿವೇಕಾನಂದ ಯೋಗ ಶಿಕ್ಷಣ ಟ್ರಸ್ಟ್ ಅಧ್ಯಕ್ಷ ಡಿ. ನಾಗರಾಜ್ ಚಿನ್ನದ ಪದಕ ತಮ್ಮದಾಗಿಸಿಕೊಂಡಿದ್ದಾರೆ.
    ಭದ್ರಾವತಿ, ಮೇ. ೧೮ : ದುಬೈ, ಇಂಟರ್ ನ್ಯಾಷನಲ್ ಯೂತ್ ಯೋಗ ಫೆಡರೇಷನ್ ಅಂಡ್ ಸುಬ್ರ ಸ್ಕೂಲ್ ಆಫ್ ಯೋಗ ಸಹಯೋಗದೊಂದಿಗೆ ಹೋಟೆಲ್ ಅಡ್ಮಿರಲ್ ಪ್ಲಾಸದಲ್ಲಿ ನಡೆದ ಅಂತರಾಷ್ಟ್ರೀಯ ಯೋಗ ಸ್ಪರ್ಧೆಯಲ್ಲಿ ನಗರದ ವಿವೇಕಾನಂದ ಯೋಗ ಶಿಕ್ಷಣ ಟ್ರಸ್ಟ್ ಅಧ್ಯಕ್ಷ ಡಿ. ನಾಗರಾಜ್ ಚಿನ್ನದ ಪದಕ ತಮ್ಮದಾಗಿಸಿಕೊಂಡಿದ್ದಾರೆ.
    ೬೦ ಮರ್ಷ ಮೇಲ್ಪಟ್ಟ ವಿಭಾಗದಲ್ಲಿ ಚಿನ್ನದ ಪದಕ ಹಾಗು ಚಾಂಪಿಯನ್ ಆಫ್ ಚಾಂಪಿಯನ್ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಸುಬ್ರ ಸ್ಕೂಲ್ ಆಫ್ ಯೋಗ ಅಧ್ಯಕ್ಷ ಮುತ್ತುರಾಮಲಿಂಗಂ ಪ್ರಶಸ್ತಿ ವಿತರಿಸಿದರು.
    ಮೆಕ್ಸಿಕೋ ಪವರ್ ಯೋಗ ಸೆಂಟರ್ ಕೆ. ನಾರಾಯಣಸ್ವಾಮಿ, ಕೊಯಂಬತ್ತೂರಿನ ಪ್ರಾಣ ಯೋಗ ಕೇಂದ್ರದ ಬಾಲಕೃಷ್ಣ ಹಾಗು ಇಂಟರ್ ನ್ಯಾಷನಲ್ ಯೂತ್ ಯೋಗ ಫೆಡರೇಷನ್ ಅಧ್ಯಕ್ಷ ಎಸ್. ಆರ‍್ಮುಗಂ, ಕಾರ್ಯದರ್ಶಿ ಧನರಾಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ಯೋಗ ಸ್ಪರ್ಧೆಯಲ್ಲಿ ಮೆಕ್ಸಿಕೋ, ಸಿಂಗಪೂರ್, ಥೈರ್ಲ್ಯಾಂಡ್, ಮಲೇಷಿಯಾ, ಶ್ರೀಲಂಕಾ, ಇಂಡಿಯಾ ಮತ್ತು ಮಸ್ಕತ್ ದೇಶಗಳ ಒಟ್ಟು ೩೬೦ ಯೋಗ ಪಟುಗಳು ಭಾಗವಹಿಸಿದ್ದರು.
    ಕರ್ನಾಟಕ ಯೋಗ ಸಂಸ್ಥೆ ಅಧ್ಯಕ್ಷ ಡಾ. ರಾಮಮೂರ್ತಿ ಮತ್ತು ಕಾರ್ಯದರ್ಶಿ ಡಿ. ಪುಟ್ಟೇಗೌಡ ಸೇರಿದಂತೆ ಇನ್ನಿತರರು ಡಿ. ನಾಗರಾಜ್‌ರವರನ್ನು ಅಭಿನಂದಿಸಿದ್ದಾರೆ.

Wednesday, May 17, 2023

ಮೇ.೨೧ರಂದು ೩೯ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಮಹೋತ್ಸವ

    ಭದ್ರಾವತಿ, ಮೇ. ೧೭ : ವಿಶ್ವ ಹಿಂದು ಪರಿಷತ್, ವಿಶ್ವಭಾರತಿ ವಿಶ್ವಸ್ಥ ಮಂಡಳಿ ವತಿಯಿಂದ ಮೇ.೨೧ರ ಭಾನುವಾರ ಬೆಳಿಗ್ಗೆ ೧೧ ಗಂಟೆಯಿಂದ ಮಧ್ಯಾಹ್ನ ೧ರವರೆಗೆ ಸಿದ್ದಾರೂಢನಗರದ ಕಾಳಿದಾಸ ಬಡಾವಣೆಯಲ್ಲಿರುವ ಧರ್ಮಶ್ರೀ ಸಭಾಭವನದಲ್ಲಿ ೩೯ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಮಹೋತ್ಸವ ಹಮ್ಮಿಕೊಳ್ಳಲಾಗಿದೆ.
    ಅರಕೆರೆ ವಿರಕ್ತ ಮಠದ ಶ್ರೀ ಕರಿಸಿದ್ದೇಶ್ವರ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಲಿದ್ದು, ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಲಿದ್ದಾರೆ. ವಿಶ್ವ ಹಿಂದು ಪರಿಷತ್ ಅಧ್ಯಕ್ಷ ಪಿ. ವೆಂಕಟರಮಣಶೇಟ್ ಅಧ್ಯಕ್ಷತೆ ವಹಿಸಲಿದ್ದು, ನಗರಸಭೆ ಅಧ್ಯಕ್ಷೆ ಅನುಸುಧಾ ಮೋಹನ್ ಪಳನಿ, ನಗರಸಭೆ ಪೌರಾಯುಕ್ತ ಎಚ್.ಎಂ ಮನುಕುಮಾರ್, ಬಜರಂಗದಳ ಪ್ರಾಂತ ಸಂಯೋಜಕ ಕೆ.ಆರ್ ಸುನೀಲ್, ವಿಶ್ವ ಹಿಂದು ಪರಿಷತ್ ಪ್ರಾಂತ ಕಾರ್ಯಕಾರಿಣಿ ಸದಸ್ಯ ಹಾ. ರಾಮಪ್ಪ, ಜಿಲ್ಲಾ ಕಾರ್ಯದರ್ಶಿ ನಾರಾಯಣ ಜಿ. ವರ್ಣೀಕರ್, ಗ್ರಾಮಾಂತರ ಅಧ್ಯಕ್ಷ ಎಸ್. ಮುತ್ತುರಾಮಲಿಂಗಮ್, ಮಾತೃಮಂಡಳಿ ಅಧ್ಯಕ್ಷೆ ಯಶೋಧ ವೀರಭದ್ರಪ್ಪ, ವೈದ್ಯ ಡಾ. ಟಿ. ನರೇಂದ್ರ ಭಟ್, ವಿಶ್ವಭಾರತಿ ವಿಶ್ವಸ್ಥ ಮಂಡಳಿ ಉಪಾಧ್ಯಕ್ಷ ಕೆ.ಎಚ್ ತೀರ್ಥಯ್ಯ, ವೇದಾವತಿ ಶಿವಮೂರ್ತಿ, ಡಿ. ನಂಜುಂಡಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು.  
    ತಾಲೂಕಿನ ಸರ್ಕಾರಿ ಶಾಲೆಯ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದವರಿಗೆ ಹಾಗು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯಲ್ಲಿ ೧೨೫ಕ್ಕೆ ೧೨೫ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಲಿದೆ.

ಭದ್ರಾವತಿಯಲ್ಲಿ ಜೂಜಾಟ, ಅಕ್ರಮ ದಂಧೆಗಳಿಗೆ ಕಡಿವಾಣ ಹಾಕಿ

ಶಾರದ ಅಪ್ಪಾಜಿ ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಮನವಿ

ಶಾರದ ಅಪ್ಪಾಜಿ
    ಭದ್ರಾವತಿ, ಮೇ. ೧೭ : ಕ್ಷೇತ್ರದಲ್ಲಿ ಇತ್ತೀಚೆಗೆ ಓ.ಸಿ, ಮಟ್ಕಾ, ಇಸ್ಪೀಟ್ ಸೇರಿದಂತೆ ಜೂಜಾಟ, ಅಕ್ರಮ ದಂಧೆಗಳು ಮಿತಿಮೀರಿವೆ. ತಕ್ಷಣ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಜೆಡಿಎಸ್ ಪಕ್ಷದ ಮುಖಂಡರಾದ ಶಾರದ ಅಪ್ಪಾಜಿ ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಬುಧವಾರ ಮನವಿ ಸಲ್ಲಿಸಿದ್ದಾರೆ.
    ವಿಐಎಸ್‌ಎಲ್ ಮತ್ತು ಎಂಪಿಎಂ ಎರಡು ಕಾರ್ಖಾನೆಗಳ ಅವನತಿಯಿಂದಾಗಿ ಬಡಕುಟುಂಬಗಳು ಬೀದಿ ಪಾಲಾಗಿವೆ. ನಿರುದ್ಯೋಗಿ ಯುವಕರಿಗೆ ಅಕ್ರಮ ದಂಧೆಗಳು ಕಸುಬಾಗಿ ಮಾರ್ಪಟ್ಟಿವೆ. ವಿಶೇಷವಾಗಿ ಅನೇಕ ಬಡಾವಣೆಗಳಲ್ಲಿ, ಮೊಹಲ್ಲಾಗಳಲ್ಲಿ ಗಾಂಜಾ ಮಾದಕ ವ್ಯಸನಿಗಳ ಸಂಖ್ಯೆ ಹೆಚ್ಚುತ್ತಿದೆ. ಇದರಿಂದಾಗಿ ನಾಗರೀಕರ ನೆಮ್ಮದಿ ಬದುಕಿಗೆ ಭಂಗ ಉಂಟು ಮಾಡುವ ಜೊತೆಗೆ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಆತಂಕ ವ್ಯಕ್ತಪಡಿಸಲಾಗಿದೆ.
    ಗಾಂಜಾದಂತಹ ಮಾದಕ ವಸ್ತುಗಳು ರಾಜಾರೋಷವಾಗಿ ಯುವಕರ, ವಿದ್ಯಾರ್ಥಿಗಳ ಕೈಗೆ ಸುಲಭವಾಗಿ ದೊರೆಯುತ್ತಿದ್ದು, ಕಾನೂನಿನ ಭಯ ಇಲ್ಲದಂತಾಗಿದೆ. ದುಶ್ಚಟಗಳಿಗೆ ಯುವ ಜನಾಂಗ ಬಲಿಯಾಗುತ್ತಿರುವುದು ನೋವಿನ ಸಂಗತಿಯಾಗಿದೆ. ಈ ಹಿನ್ನಲೆಯಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ.

ಸೊಳ್ಳೆಗಳು ಉತ್ಪತ್ತಿಯಾಗದಂತೆ ಎಚ್ಚರವಹಿಸಿ ಡೆಂಗ್ಯೂ ರೋಗ ನಿಯಂತ್ರಿಸಿ : ಡಾ. ಎಂ.ವಿ ಅಶೋಕ್

ಭದ್ರಾವತಿ ಸೀಗೆಬಾಗಿ ಡಾ. ಬಿ.ಆರ್ ಅಂಬೇಡ್ಕರ್ ಪ್ಯಾರಾ ಮೆಡಿಕಲ್ ಎಜುಕೇಷನ್ ಟ್ರಸ್ಟ್  ಸಹಯೋಗದೊಂದಿಗೆ ತಾಲೂಕು ಆರೋಗ್ಯಾಧಿಕಾರಿಗಳ ಕಛೇರಿ ವತಿಯಿಂದ ಕಾಲೇಜಿನಲ್ಲಿ  ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
    ಭದ್ರಾವತಿ, ಮೇ. ೧೭ : ಸೊಳ್ಳೆಗಳು ಉತ್ಪತ್ತಿಯಾಗದಂತೆ ಎಚ್ಚರವಹಿಸುವ ಮೂಲಕ ಡೆಂಗ್ಯೂ ರೋಗ ನಿಯಂತ್ರಣಕ್ಕೆ ಮುಂದಾಗಬೇಕೆಂದು ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್ ಹೇಳಿದರು.
ಅವರು ಸೀಗೆಬಾಗಿ ಡಾ. ಬಿ.ಆರ್ ಅಂಬೇಡ್ಕರ್ ಪ್ಯಾರಾ ಮೆಡಿಕಲ್ ಎಜುಕೇಷನ್ ಟ್ರಸ್ಟ್  ಸಹಯೋಗದೊಂದಿಗೆ ತಾಲೂಕು ಆರೋಗ್ಯಾಧಿಕಾರಿಗಳ ಕಛೇರಿ ವತಿಯಿಂದ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
    ಸೊಳ್ಳೆಗಳ ನಿಯಂತ್ರಣದಿಂದ ಡೆಂಗ್ಯೂ ರೋಗ ಹರಡದಂತೆ ತಡೆಯಬಹುದು. ಈ ಹಿನ್ನಲೆಯಲ್ಲಿ ಸೊಳ್ಳೆಗಳು ಉತ್ಪತ್ತಿಯಾಗದಂತೆ ನೀರಿನ ಸಂಗ್ರಹಣೆಗಳನ್ನು ವಾರಕ್ಕೆರಡು ಬಾರಿ ತೊಳೆದು ಮುಚ್ಚಿಡಬೇಕು. ಘನತ್ಯಾಜ್ಯಗಳನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಬೇಕು ಎಂದರು.
    ಡಾ. ಅಚ್ಯುತ್ ಮಾತನಾಡಿ, ಡೆಂಗ್ಯೂ ಜ್ವರಕ್ಕೆ ಸೂಕ್ತ ಚಿಕಿತ್ಸೆ ಇಲ್ಲದಿರುವುದರಿಂದ ಹೆಚ್ಚು ದ್ರವ ಆಹಾರ ಸೇವನೆ ಮಾಡಬೇಕು. ಸೊಳ್ಳೆಪರದೆ ಬಳಸಿ ಆರೈಕೆಗೆ ಗಮನ ನೀಡಬೇಕೆಂದರು.
    ಆರೋಗ್ಯ ಶಿಕ್ಷಣಾಧಿಕಾರಿ ಕೆ. ಸುಶೀಲಬಾಯಿ ಪ್ರತಿಜ್ಞಾವಿಧಿ ಸ್ವೀಕರಿಸಿದರು. ಡಾ. ಬಿ.ಆರ್ ಅಂಬೇಡ್ಕರ್ ಪ್ಯಾರಾ ಮೆಡಿಕಲ್ ಎಜುಕೇಷನ್ ಟ್ರಸ್ಟ್ ಅಧ್ಯಕ್ಷ ಶ್ರೀನಿವಾಸ್, ಕಾರ್ಯದರ್ಶಿ ಗಣೇಶ್, ನಿರ್ದೇಶಕರಾದ ಜೋಬಿಲ್, ರಾಜೇಂದ್ರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.