ಭದ್ರಾವತಿ ಅಪ್ಪರ್ ಹುತ್ತಾ ಅನನ್ಯ ಎಜ್ಯುಕೇಷನ್ ಟ್ರಸ್ಟ್ ವತಿಯಿಂದ ಸೋಮವಾರ ಅನನ್ಯ ಹ್ಯಾಪಿ ಹಾರ್ಟ್ಸ್ ಯುಕೆಜಿ ಹಾಗು ಎಲ್ಕೆಜಿ ವಿದ್ಯಾರ್ಥಿಗಳಿಗೆ ಶಾಸ್ತ್ರೋಕ್ತವಾಗಿ ಅಕ್ಷರಾಭ್ಯಾಸದ ಧಾರ್ಮಿಕ ಆಚರಣೆಗಳನ್ನು ನೆರವೇರಿಸಲಾಯಿತು.
ಭದ್ರಾವತಿ, ಮೇ. ೨೯: ಜಗತ್ತಿನಲ್ಲಿ ಜ್ಞಾನ ಹೊಂದಿರುವ ಏಕೈಕ ಜೀವಿ ಮನುಷ್ಯ. ಆತ ಸರಿಯಾದ ಸಮಯದಲ್ಲಿ ಸೂಕ್ತ ಸಂಸ್ಕಾರಗಳನ್ನು ಪಡೆದು ಜ್ಞಾನವಂತ, ಬುದ್ದಿವಂತ, ವಿದ್ಯಾವಂತನಾಗಿ ಉತ್ತಮ ಪ್ರಜೆಯಾಗಿ ಬಾಳಲು ಜ್ಞಾನ ದಾರಿ ತೋರುತ್ತದೆ ಎಂದು ಹುತ್ತಾಕಾಲೋನಿ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಪ್ರಧಾನ ಆರ್ಚಕ ವೇ.ಬ್ರ ಜಿ. ರಾಘವೇಂದ್ರ ಉಪಾಧ್ಯಾಯ ಹೇಳಿದರು.
ಅವರು ಸೋಮವಾರ ನಗರದ ಅಪ್ಪರ್ ಹುತ್ತಾ ಅನನ್ಯ ಎಜ್ಯುಕೇಷನ್ ಟ್ರಸ್ಟ್ ವತಿಯಿಂದ ಅನನ್ಯ ಹ್ಯಾಪಿ ಹಾರ್ಟ್ಸ್ ಯುಕೆಜಿ ಹಾಗು ಎಲ್ಕೆಜಿ ವಿದ್ಯಾರ್ಥಿಗಳಿಗೆ ಶಾಸ್ತ್ರೋಕ್ತವಾಗಿ ಅಕ್ಷರಾಭ್ಯಾಸದ ಧಾರ್ಮಿಕ ಆಚರಣೆಗಳನ್ನು ನೆರವೇರಿಸಿ ಮಾತನಾಡಿದರು.
ಭಾರತೀಯ ಸಂಸ್ಕೃತಿಯಲ್ಲಿ ಮಗು ಜನನದಿಂದ ಅಂತಿಮ ದಿನದವರೆಗೆ ಹಲವಾರು ರೀತಿಯ ಷೋಡಶ ಸಂಸ್ಕಾರಗಳನ್ನು ನಡೆಸಿಕೊಂಡು ಬರಲಾಗುತ್ತಿದೆ. ಷೋಡಶ ಸಂಸ್ಕಾರ ೧೬ ವಿಧಿವಿಧಾನಗಳನ್ನು ಒಳಗೊಂಡಿದೆ. ಅವುಗಳಲ್ಲಿ ಅಕ್ಷರಾಭ್ಯಾಸ ಬಹುಮುಖ್ಯ ಹಾಗು ಮಹತ್ವದ್ದಾಗಿದೆ. ಕಾರಣ ಪ್ರಾರಂಭದಲ್ಲಿ ಇದನ್ನು ಕೈಗೊಂಡಾಗ ಮಕ್ಕಳು ತಮ್ಮ ಶೈಕ್ಷಣಿಕ ವಿದ್ಯಾಭ್ಯಾಸದ ಬಗ್ಗೆ ಹೆಚ್ಚು ಗಮನ ಕೇಂದ್ರೀಕರಿಸುವ ಮೂಲಕ ತಮ್ಮ ಓದಿನ ಬಗ್ಗೆ ಆಸಕ್ತಿ ತಾಳುತ್ತಾರೆ ಎಂದರು.
ಮಕ್ಕಳು ಶಿಕ್ಷಣ ಪಡೆಯುವ ಶಾಲೆಯೇ ಅವರ ಜೀವನದ ಸರಸ್ವತಿ ದೇಗುಲವಾಗಿದೆ. ಈ ದೇಗುಲದಲ್ಲಿ ಇಂದು ಮಕ್ಕಳಿಗೆ ಅಕ್ಷರಾಭ್ಯಾಸ ಶಾಸ್ತ್ರೋಕ್ತವಾಗಿ ಕೈಗೊಂಡು ಉತ್ತಮ ಸಂಸ್ಕಾರ ನೀಡುವ ಮೂಲಕ ಶಾಲಾ ದಿನವನ್ನು ಪ್ರಾರಂಭ ಮಾಡಲಾಗಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದರು.
ಸಮಾಜದಲ್ಲಿ ಸ್ಥಿತಿವಂತರು, ಶ್ರೀಮಂತರು, ಆರ್ಥಿಕವಾಗಿ ಸಬಲರಾಗಿರುವವರು ತಮ್ಮ ತಮ್ಮ ಮಕ್ಕಳಿಗೆ ಈ ರೀತಿಯ ಸಂಸ್ಕಾರವನ್ನು ಪ್ರಸಿಧ್ದ ಧಾರ್ಮಿಕ ಸ್ಥಳಗಳು, ದೇವಾಲಯಗಳಲ್ಲಿ ವೈಯುಕ್ತಿಕವಾಗಿ ಮಾಡಿಸುತ್ತಾರೆ. ಆದರೆ ಅನನ್ಯ ಎಜ್ಯುಕೇಷನ್ ಟ್ರಸ್ಟ್ ವತಿಯಿಂದ ಎಲ್ಲಾ ಮಕ್ಕಳಿಗೂ ಈ ಸಂಸ್ಕಾರ ಸಾಮೂಹಿಕವಾಗಿ ಪ್ರತಿಯೊಬ್ಬರಿಗೂ ಮಾಡಿಸಿದ್ದು ಅಭಿನಂದನಾರ್ಹ ಎಂದರು.
ಶಾಲಾ ಆಢಳಿತಾಧಿಕಾರಿ ಎನ್. ವೇಣುಗೋಪಾಲ್, ಮುಖ್ಯೋಪಾಧ್ಯಾಯರಾದ ಕಲ್ಲೇಶ್ ಕುಮಾರ್, ಸುನಿತಾ ನಟರಾಜ್, ತನುಜಾ, ಅನಿಲ್ ಹಾಗು ಶಾಲಾ ಅಧ್ಯಾಪಕ ಮತ್ತು ಇತರ ಸಿಬ್ಬಂದಿಗಳು, ಮಕ್ಕಳ ಪೋಷಕರು ,ಶಾಲಾ ಆಡಳಿತ ಮಂಡಳಿ ಸದಸ್ಯರುಗಳು ಉಪಸ್ಥಿತರಿದ್ದರು.
No comments:
Post a Comment