Sunday, June 4, 2023

೪ ಬಾರಿ ಶಾಸಕರಾಗಿರುವ ಸಂಗಮೇಶ್ವರ್‌ಗೂ ಭವಿಷ್ಯದಲ್ಲಿ ಸಚಿವರಾಗುವ ಯೋಗ

ಸನ್ಮಾನ ಸ್ವೀಕರಿಸಿ ನೂತನ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿಶ್ವಾಸ

ಭದ್ರವತಿ ಶಾಸಕ ಬಿ.ಕೆ ಸಂಗಮೇಶ್ವರ್ ಕುಟುಂಬ ಸಂಬಂಧಿಕರಾದ ಲಕ್ಷ್ಮೀ ಹೆಬ್ಬಾಳ್ಕರ್‌ರವರು ಸಚಿವೆಯಾಗಿ ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ಕ್ಷೇತ್ರಕ್ಕೆ ಆಗಮಿಸಿದ್ದು, ಈ ಹಿನ್ನಲೆಯಲ್ಲಿ ಭಾನುವಾರ ಶಾಸಕ ಬಿ.ಕೆ ಸಂಗಮೇಶ್ವರ್‌ರವರ ಸಹೋದರ ಬಿ.ಕೆ ಶಿವಕುಮಾರ್‌ರವರ ಗಾಂಧಿನಗರದ ನಿವಾಸದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.
    ಭದ್ರಾವತಿ, ಜೂ. ೪ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದಂತೆ ನಡೆಯುವ ಆದರ್ಶ ವ್ಯಕ್ತಿಯಾಗಿದ್ದು, ಮುಂದಿನ ಅವಧಿಯಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್‌ಗೆ ಸಚಿವ ಸ್ಥಾನ ಸಿಗುವುದು ಬಹುತೇಕ ಖಚಿತ ಎಂದು ಬೆಳಗಾವಿ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲಚೇತನ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ನೂತನ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿಶ್ವಾಸ ವ್ಯಕ್ತಪಡಿಸಿದರು.
    ಶಾಸಕ ಬಿ.ಕೆ ಸಂಗಮೇಶ್ವರ್ ಕುಟುಂಬ ಸಂಬಂಧಿಕರಾದ ಲಕ್ಷ್ಮೀ ಹೆಬ್ಬಾಳ್ಕರ್‌ರವರು ಸಚಿವೆಯಾಗಿ ಅಧಿಕಾರ ವಹಿಸಿಕೊಂಡ ನಂತರ  ಮೊದಲ ಬಾರಿಗೆ ಕ್ಷೇತ್ರಕ್ಕೆ ಆಗಮಿಸಿದ್ದು, ಈ ಹಿನ್ನಲೆಯಲ್ಲಿ ಭಾನುವಾರ ಶಾಸಕ ಬಿ.ಕೆ ಸಂಗಮೇಶ್ವರ್‌ರವರ ಸಹೋದರ ಬಿ.ಕೆ ಶಿವಕುಮಾರ್‌ರವರ ಗಾಂಧಿನಗರದ ನಿವಾಸದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.      ಒಬ್ಬ ವ್ಯಕ್ತಿ ಒಂದು ಬಾರಿ ಶಾಸಕರಾಗುವುದೇ ಹೆಚ್ಚು ಇಲ್ಲಿನ ಕ್ಷೇತ್ರದ ಜನರು ಸಂಗಮೇಶ್ವರ್ ಅವರನ್ನು ೪ ಬಾರಿ ಆಯ್ಕೆ ಮಾಡಿರುವುದು ನಿಜಕ್ಕೂ ಹೆಮ್ಮೆಯ ಸಂಗತಿಯಾಗಿದೆ. ಈ ಬಾರಿ ರಾಜ್ಯದಲ್ಲಿ ಸಿದ್ದರಾಮಯ್ಯ ಹಾಗು ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ೧೩೫ ಅಭ್ಯರ್ಥಿಗಳು ಶಾಸಕರಾಗಿ ಆಯ್ಕೆಯಾಗುವ ಮೂಲಕ ಅಭೂತಪೂರ್ವ ಇತಿಹಾಸ ನಿರ್ಮಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದಂತೆ ನಡೆಯುವ ಆದರ್ಶ ವ್ಯಕ್ತಿಯಾಗಿದ್ದು, ಸಂಗಮೇಶ್ವರ್ ಅವರಿಗೂ ಸಚಿವ ಸ್ಥಾನ ನೀಡುವ ಭರವಸೆ ನೀಡಿದ್ದಾರೆ. ಸಂಗಮೇಶ್ವರ್ ಅವರಿಗೂ ಸಚಿವರಾಗುವ ಯೋಗವಿದ್ದು, ಸ್ವಲ್ಪ ವಿಳಂಬವಾಗಬಹುದು. ಮುಂದಿನ ದಿನಗಳಲ್ಲಿ ಕ್ಷೇತ್ರದ ಜನರ ೭೫ ವರ್ಷಗಳ ಕನಸು ನನಸಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
    ಕ್ಷೇತ್ರದ ಮತದಾರರು ಚಿಂತೆ ಮಾಡುವ ಅಗತ್ಯವಿಲ್ಲ. ಈ ಕ್ಷೇತ್ರದ ಶಾಸಕರ ಕುಟುಂಬ ಸಂಬಂಧಿಯಾಗಿರುವ ನಾನು ನಿಮ್ಮ ಪರವಾಗಿದ್ದೇನೆ. ವಿಐಎಸ್‌ಎಲ್ ಮತ್ತು ಎಂಪಿಎಂ ಕಾರ್ಖಾನೆಗಳ ಅಭಿವೃದ್ಧಿ ವಿಚಾರದಲ್ಲಿ ನಾನು ಸಹ ಕೈ ಜೋಡಿಸುತ್ತೇನೆ. ನೀವುಗಳು ನಮ್ಮ ಮೇಲೆ ಹೊಂದಿರುವ ಅಭಿಮಾನ, ವಿಶ್ವಾಸಕ್ಕೆ ಚಿರಋಣಿಯಾಗಿರುತ್ತೇನೆ ಎಂದರು.
    ವೈದ್ಯೆಯಾಗುವ ಕನಸು ಸೊಸೆಯಿಂದ ಈಡೇರಿದೆ, ಅದೃಷ್ಟದ ಮೊಮ್ಮಗಳು :
    ದೂರದ ಬೆಳಗಾವಿಗೂ ಭದ್ರಾವತಿಗೂ ನಂಟು ಬೆಳೆಯುತ್ತದೆ ಎಂದು ನಾನು ಎಂದಿಗೂ ನಿರೀಕ್ಷಿಸಿರಲಿಲ್ಲ. ಶಾಸಕ ಬಿ.ಕೆ ಸಂಗಮೇಶ್ವರ್‌ರವರು ನನ್ನ ಬಳಿ ಬಂದು ನಿಮ್ಮ ಮಗನಿಗೆ ಹೆಣ್ಣು ಹುಡುಕುತ್ತಿದ್ದೀರಾ ಎಂಬ ಮಾಹಿತಿ ಕೇಳಿ ಬಂತು. ನನ್ನ ಸಹೋದರನ ಮಗಳು ವೈದ್ಯೆಯಾಗಿದ್ದು, ಒಂದು ಸಲ ಬಂದು ನೋಡಿ ಎಂದು ಹೇಳಿದರು. ನಾನು ವೈದ್ಯೆಯಾಗಬೇಕು ಎಂಬ ಆಸೆ ಹೊಂದಿದ್ದೆ. ಆದರೆ ವೈದ್ಯೆಯಾಗಲು ಸಾಧ್ಯವಾಗಲಿಲ್ಲ. ಈ ಹಿನ್ನಲೆಯಲ್ಲಿ ನಾನು ಇಲ್ಲಿಗೆ ಬರಲು ತೀರ್ಮಾನಿಸಿದೆ.  ಮೊದಲ ಸಲವೇ ಸಂಬಂಧ ಕೂಡಿ ಬಂತು. ಸೊಸೆ ಬಂದ ನಂತರ ನನ್ನ ತಮ್ಮ ವಿಧಾನ ಪರಿಷತ್ ಸದಸ್ಯನಾಗಿ ಆಯ್ಕೆಯಾಗಿದ್ದು, ನಾನು ೨ನೇ ಬಾರಿಗೆ ಶಾಸಕಿಯಾಗಿದ್ದೇನೆ. ಇದೀಗ ನನ್ನ ಮೊಮ್ಮಗಳು ಜನಿಸಿದ ಮರುದಿನ ಸಚಿವೆಯಾಗಿದ್ದೇನೆ. ಸೊಸೆ ಮತ್ತು ಮೊಮ್ಮಗಳು ಇಬ್ಬರು ನಮ್ಮ ಕುಟುಂಬಕ್ಕೆ ಅದೃಷ್ಟ ತಂದಿದ್ದಾರೆ ಎಂದರು.
    ಇಲಾಖೆ ಬಗ್ಗೆ ಅಭಿಮಾನ :
    ನನಗೆ ನೀಡಿರುವ ಇಲಾಖೆ ಬಗ್ಗೆ ಅಭಿಮಾನಿವಿದ್ದು, ಹುಟ್ಟು ಮಕ್ಕಳಿಂದ ಹಿಡಿದು ಗರ್ಭಿಣಿ ಮಹಿಳೆ, ಅಂಗವಿಕಲರ ಹಾಗು ಸಾಯುವವರೆಗಿನ ವಯೋವೃದ್ಧರ ಸೇವೆ ಸಲ್ಲಿಸುವ ಅವಕಾಶ ಲಭಿಸಿರುವುದು ನನ್ನ ಸೌಭಾಗ್ಯವಾಗಿದೆ. ಭದ್ರಾವತಿ ಕ್ಷೇತ್ರ ಸೇರಿದಂತೆ ನಾಡಿನಾದ್ಯಂತ ಇಲಾಖೆ ಕೆಲಸ ಕಾರ್ಯಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.
    ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಎಂ. ಗುರುಮೂರ್ತಿ, ಅಲ್ಪ ಸಂಖ್ಯಾತ ಸಮುದಾಯದ ಫೀರ್‌ಷರೀಫ್, ಪ್ರಚಾರ ಸಮಿತಿ ಅಧ್ಯಕ್ಷ ಎಸ್. ಮಣಿಶೇಖರ್, ದಲಿತ ಸಂಘರ್ಷ ಸಮಿತಿ ರಾಜ್ಯ ಖಜಾಂಚಿ ಸತ್ಯ ಭದ್ರಾವತಿ, ಬ್ಲಾಕ್ ಕಾಂಗ್ರೆಸ್ ಸಮಿತಿ ನಗರ ಘಟಕದ ಅಧ್ಯಕ್ಷ ಟಿ. ಚಂದ್ರೇಗೌಡ, ಗ್ರಾಮಾಂತರ ಘಟಕದ ಅಧ್ಯಕ್ಷ ಎಚ್.ಎಲ್ ಷಡಾಕ್ಷರಿ ಸೇರಿದಂತೆ ಇನ್ನಿತರರು ಅಭಿನಂದನಾ ನುಡಿಗಳನ್ನಾಡಿದರು.
    ಶ್ರೀ ಕ್ಷೇತ್ರ ಭದ್ರಗಿರಿ ಶ್ರೀ ಮುರುಗೇಶ್ ಸ್ವಾಮೀಜಿ, ನಗರಸಭೆ ಅಧ್ಯಕ್ಷೆ ಅನುಸುಧಾ ಮೋಹನ್ ಪಳನಿ, ಉಪಾಧ್ಯಕ್ಷೆ ಸರ್ವಮಂಗಳ ಭೈರಪ್ಪ, ಶಾಸಕ ಬಿ.ಕೆ ಸಂಗಮೇಶ್ವರ್ ಸಹೋದರರಾದ ಬಿ.ಕೆ ಜಗನ್ನಾಥ್, ಬಿ.ಕೆ ಮೋಹನ್, ಬಿ.ಕೆ ಶಿವಕುಮಾರ್ ಹಾಗು ಮಕ್ಕಳು, ಕುಟುಂಬ ವರ್ಗದವರು, ಕಾಂಗ್ರೆಸ್ ಪಕ್ಷದ ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.
    ನಗರಸಭೆ, ಗ್ರಾಮ ಪಂಚಾಯಿತಿ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಪಾಲ್ಗೊಂಡಿದ್ದರು.


ಭದ್ರವತಿ ಶಾಸಕ ಬಿ.ಕೆ ಸಂಗಮೇಶ್ವರ್ ಕುಟುಂಬ ಸಂಬಂಧಿಕರಾದ ಲಕ್ಷ್ಮೀ ಹೆಬ್ಬಾಳ್ಕರ್‌ರವರು ಸಚಿವೆಯಾಗಿ ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ಕ್ಷೇತ್ರಕ್ಕೆ ಆಗಮಿಸಿದ್ದು, ಈ ಹಿನ್ನಲೆಯಲ್ಲಿ ಭಾನುವಾರ ಶಾಸಕ ಬಿ.ಕೆ ಸಂಗಮೇಶ್ವರ್‌ರವರ ಸಹೋದರ ಬಿ.ಕೆ ಶಿವಕುಮಾರ್‌ರವರ ಗಾಂಧಿನಗರದ ನಿವಾಸದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿದರು.

No comments:

Post a Comment