Friday, July 28, 2023

ಅಪ್ಪಾಜಿ ಶಿಷ್ಯ ಎಸ್.‌ ಕುಮಾರ್‌ ನಗರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ

ಭದ್ರಾವತಿ ಬಿಜೆಪಿ ಮುಖಂಡ ಎಸ್.‌ ಕುಮಾರ್‌ರವರನ್ನು ನಗರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ ಅಧ್ಯಕ್ಷರಾಗಿ ಶುಕ್ರವಾರ ನೇಮಕಗೊಳಿಸಲಾಗಿದೆ.
    ಭದ್ರಾವತಿ, ಜು. ೨೮: ಮಾಜಿ ಶಾಸಕ ದಿವಂಗತ ಎಂ.ಜೆ ಅಪ್ಪಾಜಿಯವರೊಂದಿಗೆ  ಬಹುಕಾಲದವರೆಗೆ ರಾಜಕೀಯ ಶಿಷ್ಯರಾಗಿ ಗುರುತಿಸಿಕೊಂಡಿದ್ದ, ಈ ಬಾರಿ ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಗೊಂಡಿದ್ದ ಬಿಜೆಪಿ ಮುಖಂಡ ಎಸ್.‌ ಕುಮಾರ್‌ರವರನ್ನು ಇದೀಗ ನಗರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ ಅಧ್ಯಕ್ಷರಾಗಿ ನೇಮಕಗೊಳಿಸಲಾಗಿದೆ.
    ಈ ಕುರಿತು ಶುಕ್ರವಾರ ಜಿಲ್ಲಾ ಕಾಂಗ್ರೆಸ್‌ ಸಮಿತಿ ಜಿಲ್ಲಾಧ್ಯಕ್ಷ ಎಚ್.ಎಸ್‌ ಸುಂದರೇಶ್‌ರವರು ಕೆಪಿಸಿಸಿ ಆದೇಶದ ಅನ್ವಯ ನಗರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ ಅಧ್ಯಕ್ಷರನ್ನಾಗಿ ನೇಮಕಗೊಳಿಸಿ ಆದೇಶ ಪತ್ರ ಹೊರಡಿಸಿದ್ದಾರೆ.
    ಎಸ್.‌ ಕುಮಾರ್‌  ಮೂಲತಃ ಎಂ.ಜೆ ಅಪ್ಪಾಜಿಯವರ ಶಿಷ್ಯರಾಗಿ ರಾಜಕೀಯ ಪ್ರವೇಶಿಸುವ ಮೂಲಕ ಮೊದಲ ಬಾರಿಗೆ ಮಾವಿನಕೆರೆ ಗ್ರಾಮ ಪಂಚಾಯಿತಿ ಸದಸ್ಯರಾಗಿ ಆಯ್ಕೆಯಾಗುವ ಮೂಲಕ ಅಧ್ಯಕ್ಷರಾಗಿದ್ದರು. ನಂತರ ಇದೆ ಕ್ಷೇತ್ರದಿಂದ ತಾಲೂಕು ಪಂಚಾಯಿತಿ ಸದಸ್ಯರಾಗಿ ಆಯ್ಕೆಯಾಗುವ ಮೂಲಕ ಅಧ್ಯಕ್ಷರಾಗಿದ್ದರು. ನಂತರ  ಇದೆ ಕ್ಷೇತ್ರದಿಂದ ೨ ಬಾರಿ ಜಿಲ್ಲಾ ಪಂಚಾಯಿತಿ ಸದಸ್ಯರಾಗಿ ಆಯ್ಕೆಯಾಗುವ ಮೂಲಕ ಒಂದು ಬಾರಿ ಶಿಕ್ಷಣ, ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿದ್ದರು. ಅಲ್ಲದೆ ಇವರ ಪತ್ನಿ ಜ್ಯೋತಿ ಸಹ ೨ ಬಾರಿ ಜಿಲ್ಲಾ ಪಂಚಾಯಿತಿ ಸದಸ್ಯರಾಗಿ ಆಯ್ಕೆಯಾಗುವ ಮೂಲಕ ಒಂದು ಬಾರಿ ಉಪಾಧ್ಯಕ್ಷರಾಗಿ, ಮತ್ತೊಂದು ಬಾರಿ ಅಧ್ಯಕ್ಷರಾಗಿದ್ದರು. ಎಂ.ಜೆ ಅಪ್ಪಾಜಿ ನಿಧನ ಹೊಂದಿದ ನಂತರ ಜೆಡಿಎಸ್‌ ಪಕ್ಷ ತೊರೆದು ಸಂಸದ ಬಿ.ವೈ ರಾಘವೇಂದ್ರ ಅವರೊಂದಿಗೆ ಗುರುತಿಸಿಕೊಂಡು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು.
    ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಗೊಂಡು ಶಾಸಕ ಬಿ.ಕೆ ಸಂಗಮೇಶ್ವರ್‌ರವರ ಗೆಲುವಿಗೆ ಕಾರಣರಾಗಿದ್ದರು. ಇದೀಗ ನಗರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ ಅಧ್ಯಕ್ಷರನ್ನಾಗಿ ನೇಮಕಗೊಳಿಸಲಾಗಿದೆ.
    ಇದುವರೆಗೂ ನಗರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ ಅಧ್ಯಕ್ಷರಾಗಿದ್ದ ನ್ಯಾಯವಾದಿ ಟಿ. ಚಂದ್ರೇಗೌಡ ಅವರನ್ನು ಏಕಾಏಕಿ ಕೈ ಬಿಡಲಾಗಿದೆ.

No comments:

Post a Comment