Wednesday, January 11, 2023

‘ನಮ್ಮೂರು-ನಮ್ಮ ಕೆರೆ’ ೪೦೧ನೇ ದೇವರಹಳ್ಳಿ ಕೆರೆ ಪುನಶ್ಚೇತನಕ್ಕೆ ಚಾಲನೆ

ಭದ್ರಾವತಿ ತಾಲೂಕಿನ ಕೊಮಾರನಹಳ್ಳಿ ಗ್ರಾಮ ಪಂಚಾಯಿತಿ ಹಾಗು ದೇವರಹಳ್ಳಿ ಕೆರೆ ಅಭಿವೃದ್ಧಿ ಸಮಿತಿ ಸಹಕಾರದೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಬುಧವಾರ 'ನಮ್ಮೂರು-ನಮ್ಮ ಕೆರೆ' ೪೦೧ನೇ ದೇವರಹಳ್ಳಿ ಕೆರೆ ಪುನಶ್ಚೇತನಕ್ಕೆ ಚಾಲನೆ ನೀಡಲಾಯಿತು.
    ಭದ್ರಾವತಿ, ಜ. ೧೧: ತಾಲೂಕಿನ ಕೊಮಾರನಹಳ್ಳಿ ಗ್ರಾಮ ಪಂಚಾಯಿತಿ ಹಾಗು ದೇವರಹಳ್ಳಿ ಕೆರೆ ಅಭಿವೃದ್ಧಿ ಸಮಿತಿ ಸಹಕಾರದೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಬುಧವಾರ 'ನಮ್ಮೂರು-ನಮ್ಮ ಕೆರೆ' ೪೦೧ನೇ ದೇವರಹಳ್ಳಿ ಕೆರೆ ಪುನಶ್ಚೇತನಕ್ಕೆ ಚಾಲನೆ ನೀಡಲಾಯಿತು.
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕ ಚಂದ್ರಶೇಖರ್ ಕೆರೆ ಪುನಶ್ಚೇತನಕ್ಕೆ ಚಾಲನೆ ನೀಡಿ ಮಾತನಾಡಿ, ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕೆರೆಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಕೆರೆಗಳನ್ನು ಸಮರ್ಪಕವಾಗಿ ಸದ್ಬಳಕೆ ಮಾಡಿಕೊಳ್ಳಬೇಕೆಂದರು.
    ತಾಲೂಕು ಯೋಜನಾಧಿಕಾರಿ ಪ್ರಕಾಶ್‌ನಾಯ್ಕ, ಕೆರೆ ಸಮಿತಿ ಅಧ್ಯಕ್ಷ ಚಂದ್ರಶೇಖರ್‌ರಾವ್, ಅಭಿಯಂತರ ಗಣಪತಿ ಭಟ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ದೇವಮ್ಮ, ಅಭಿವೃದ್ಧಿ ಅಧಿಕಾರಿ ಕೇಶವಮೂರ್ತಿ, ಕೃಷಿ ಕ್ಷೇತ್ರ ಅಧಿಕಾರಿ ಗೋವಿಂದಪ್ಪ, ದೇವೇಂದ್ರಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಮಕ್ಕಳಿಗೆ ಕನ್ನಡ ಭಾಷೆ ಕಲಿಸುವಲ್ಲಿ ಪೋಷಕರು ಹೆಚ್ಚಿನ ಗಮನ ಹರಿಸಿ : ಶ್ರದ್ದಾ

ಭದ್ರಾವತಿಯಲ್ಲಿ ಬುಧವಾರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ನೂತನ ವರ್ಷದ ದಿನದರ್ಶಿಕೆ ಬಿಡುಗಡೆಗೊಳಿಸಲಾಯಿತು.
    ಭದ್ರಾವತಿ, ಜ. ೧೧ : ಮಕ್ಕಳ ಕಲಿಕಾ ಮಾಧ್ಯಮ ಯಾವುದೇ ಇರಲಿ ಅವರಿಗೆ ಕನ್ನಡ ಭಾಷೆ ಕಲಿಸುವಲ್ಲಿ ಪೋಷಕರು ಹೆಚ್ಚಿನ ಗಮನ ಹರಿಸಬೇಕೆಂದು ತಾಂತ್ರಿಕ ಅಭಿಯಂತರರಾದ ಶ್ರದ್ದಾ ಹೇಳಿದರು.
    ಅವರು ಬುಧವಾರ ತಾಲೂಕು ಕನ್ನಡ ಸಾಹಿತ್ಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ನೂತನ ದಿನದರ್ಶಿಕೆ ಕಾರ್ಯಕ್ರಮ ಎಳ್ಳುಬೆಲ್ಲ ಹಂಚುವ ಮೂಲಕ ಉದ್ಘಾಟಿಸಿ ಮಾತನಾಡಿದರು.
    ನಾವೆಲ್ಲರೂ ನೆಲ, ಜಲ, ಭಾಷೆ ಎಲ್ಲವನ್ನು ಉಳಿಸಿ ಬೆಳೆಸಬೇಕು. ಇಂದಿನ ಮಕ್ಕಳು ಮುಂದಿನ ಪ್ರಜೆಗಳಾಗಿದ್ದು, ಈ ಹಿನ್ನಲೆಯಲ್ಲಿ ಮಕ್ಕಳು ಆಂಗ್ಲ ಮಾಧ್ಯಮ ಸೇರಿದಂತೆ ಯಾವುದೇ ಮಾಧ್ಯಮದಲ್ಲಿ ಶಿಕ್ಷಣ ಪಡೆಯುತ್ತಿದ್ದರೂ ಸಹ ಅವರಿಗೆ ಕನ್ನಡ ಭಾಷೆ ಕಲಿಸುವುದು ಪೋಷಕರ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಕನ್ನಡ ಭಾಷಾಭಿಮಾನ ಬೆಳೆಸಿಕೊಳ್ಳಬೇಕೆಂದರು.
    ದಿನದರ್ಶಿಕೆ ಬಿಡುಗಡೆಗೊಳಿಸಿದ ಉದ್ಯಮಿ ಬಿ.ಕೆ ಜಗನ್ನಾಥ ಮಾತನಾಡಿ, ಪರಿಷತ್ ವತಿಯಿಂದ ಕನ್ನಡ ನಾಡು, ತಾಯಿ ಭುವನೇಶ್ವರಿ ಹಾಗು ಜ್ಞಾನಪೀಠ ಪುರಸ್ಕೃತರ ಭಾವಚಿತ್ರಗಳನ್ನೊಳಗೊಂಡಿರುವ ಸಂಪೂರ್ಣವಾಗಿ ಕನ್ನಡದಲ್ಲಿ ಮುದ್ರಿತಗೊಂಡಿರುವ ದಿನದರ್ಶಿಕೆ ಆಕರ್ಷಕವಾಗಿದೆ. ಪ್ರತಿಯೊಬ್ಬರು ಕನ್ನಡ ಭಾಷೆ ಮೇಲೆ ಪ್ರೀತಿ ಹೊಂದಬೇಕು. ಈ ನಿಟ್ಟಿನಲ್ಲಿ ದಿನದರ್ಶಿಕೆ ಜನರ ಮನಸ್ಸಿನಲ್ಲಿ ಭಾವನೆಯುನ್ನುಂಟು ಮಾಡಲಿ. ಪರಿಷತ್ ಕಾರ್ಯ ಚಟುವಟಿಕೆಗಳು ನಿರಂತರವಾಗಿ ಮುಂದುವರೆಯಲಿ ಎಂದು ಹಾರೈಸಿದರು.
    ವೇದಿಕೆಯಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕೆ.ಎನ್ ಶ್ರೀಹರ್ಷ, ವೀರಭದ್ರಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಪರಿಷತ್ ಅಧ್ಯಕ್ಷ ಕೋಗಲೂರು ತಿಪ್ಪೇಸ್ವಾಮಿ ಅಧ್ಯಕ್ಷತೆ ವಹಿಸಿದ್ದರು.
    ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಅಧ್ಯಕ್ಷೆ ಎಂ.ಎಸ್ ಸುಧಾಮಣಿ, ಜಾನಪದ ಪರಿಷತ್ ಅಧ್ಯಕ್ಷ ಕೋಗಲೂರು ಯಜ್ಞಯ್ಯ, ಪರಿಷತ್ ಖಜಾಂಚಿ ಕೆ.ಟಿ ಪ್ರಸನ್ನ, ಸಂಘಟನಾ ಕಾರ್ಯದರ್ಶಿಗಳಾದ ನಾಗೋಜಿರಾವ್, ಕಮಲಕರ್, ಪರಿಷತ್ ಹೊಳೆಹೊನ್ನೂರು ಅಧ್ಯಕ್ಷ ಸಿದ್ದಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ಸುಮತಿ ಕಾರಂತ್ ಪ್ರಾರ್ಥಿಸಿ, ಪರಿಷತ್ ಕಾರ್ಯದರ್ಶಿ ಎಂ.ಈ ಜಗದೀಶ್ ಸ್ವಾಗತಿಸಿದರು. ಎಚ್. ತಿಮ್ಮಪ್ಪ ನಿರೂಪಿಸಿದರು.

ಹೆಣ್ಣು ಮಕ್ಕಳು ರಾಜಕಾರಣ ಪ್ರವೇಶಿಸಲು ಕೆಆರ್‌ಎಸ್ ಪಕ್ಷದಿಂದ ಮುಕ್ತ ಅವಕಾಶ : ಜನನಿ ವತ್ಸಲಾ

ಭದ್ರಾವತಿಯಲ್ಲಿ ಕೆಆರ್‌ಎಸ್ ಪಕ್ಷದ ಬೆಂಗಳೂರು ನಗರ ಕಾರ್ಯದರ್ಶಿ ಜನನಿ ವತ್ಸಲ ನೇತೃತ್ವದಲ್ಲಿ ಪತ್ರಿಕಾಗೋಷ್ಠಿ ನಡೆಯಿತು. ಜಂಟಿ ಕಾರ್ಯದರ್ಶಿ ಪುಷ್ಪ, ರಾಮೇಶ್ವರಿ, ಅಂಬಿಕಾ ಸೆರಿದಂತೆ ಇನ್ನಿತರರಿದ್ದರು.
    ಭದ್ರಾವತಿ, ಜ. ೧೧: ಪ್ರಾಮಾಣಿಕ, ಜನಪರ ಕಾಳಜಿ ಹೊಂದಿರುವ ವಿದ್ಯಾವಂತ ಮಹಿಳೆಯರಿಗೆ ರಾಜಕೀಯ ರಂಗ ಪ್ರವೇಶಿಸಲು 'ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ' ಮುಕ್ತ ಅವಕಾಶ ನೀಡಲಿದ್ದು, ಆಸಕ್ತ ಸ್ವಾಭಿಮಾನಿ ಕನ್ನಡದ ಮಹಿಳೆಯರು ಪಕ್ಷ ಸೇರ್ಪಡೆಗೆ ಮುಂದಾಗುವಂತೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಬೆಂಗಳೂರು ನಗರ ಕಾರ್ಯದರ್ಶಿ, ಮಹಿಳಾ ಉಸ್ತುವಾರಿ ಜನನಿ ವತ್ಸಲಾ ಹೇಳಿದರು.
    ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸುವ  ಮೂಲಕ ವಿಧಾನಸಭೆಯಲ್ಲಿ ಮಹಿಳಾ ಶಕ್ತಿ ವೃದ್ದಿಸಬೇಕಾಗಿದೆ. ಈ ಹಿನ್ನಲೆಯಲ್ಲಿ ಪಕ್ಷವು ಮಹಿಳೆಯರನ್ನು ರಾಜಕೀಯಕ್ಕೆ ಆಹ್ವಾನಿಸುತ್ತಿದೆ. ಪ್ರ್ರಾಮಾಣಿಕ ರಾಜಕಾರಣ ಮಾಡಬಯಸುವ ಅರ್ಹ ಮಹಿಳೆಯರು ಪಕ್ಷಕ್ಕೆ ಸೇರ್ಪಡೆಕೊಳ್ಳಬೇಕೆಂದು ಮನವಿ ಮಾಡಿದರು.
    ಇತ್ತೀಚೆಗೆ ರಾಜಕೀಯ ಕ್ಷೇತ್ರದಲ್ಲಿ ಮಹಿಳೆಯರು ಅಷ್ಟಾಗಿ ಕಂಡು ಬರುತ್ತಿಲ್ಲ. ಪ್ರಸ್ತುತ ಜೆಡಿಎಸ್, ಕಾಂಗ್ರೆಸ್, ಬಿಜೆಪಿಯಂತಹ ರಾಜಕೀಯ ಪಕ್ಷಗಳು ಮಹಿಳಾ ಸಬಲೀಕರಣಕ್ಕೆ ಒತ್ತು ನೀಡುತ್ತಿಲ್ಲ. ಮಹಿಳೆಯರಿಗೆ ಲಭಿಸಬೇಕಾದ ರಾಜಕೀಯ ಸ್ಥಾನಮಾನಗಳನ್ನು ನೀಡುತ್ತಿಲ್ಲ. ಮಹಿಳಾ ಮೀಸಲಿರುವ ಕಡೆಯಲ್ಲಿಯೂ ಕೂಡ ಪುರುಷ ಪ್ರಾಬಲ್ಯವೇ ನಡೆಯುತ್ತಿದೆ. ಶಾಸನಸಭೆಯಲ್ಲಿ ಮಹಿಳೆಯರ ಬಗ್ಗೆ ಧ್ವನಿ ಎತ್ತುವಂತಹ ಮಹಿಳಾ ನಾಯಕಿಯರು ಬೇಕಾಗಿದ್ದಾರೆ. ಈ ನಿಟ್ಟಿನಲ್ಲಿ ರೈತಪರ, ಹೋರಾಟಪರ ಮಹಿಳೆಯರು ಕೆಆರ್‌ಎಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುವುದು ಅವಶ್ಯಕವಾಗಿದೆ ಎಂದರು.  
    ಆರಂಭದಲ್ಲಿ ಕೇವಲ ೨೦ ಕಾರ್ಯಕರ್ತರಿಂದ ಆರಂಭವಾದ ಪಕ್ಷದಲ್ಲಿ ಈಗ ೩೦ ಸಾವಿರ ಕಾರ್ಯಕರ್ತರಿದ್ದಾರೆ. ಪಕ್ಷದ ನಿಲುವುಗಳಿಗೆ ಬದ್ಧರಾಗಿ ಸ್ವಚ್ಚ, ಜನಪರ ರಾಜಕಾರಣ ನಡೆಸಲು ನಿತ್ಯ ಸಾಕಷ್ಟು ಜನರು ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ. ಇದಕ್ಕೆ ಪೂರಕವಾಗಿ 'ಸ್ವಾಭಿಮಾನಿ ಕನ್ನಡದ ಹೆಣ್ಣೇ ಪವಿತ್ರ ರಾಜಕಾರಣಕ್ಕೆ ಮುಂದಾಗು' ಎನ್ನುವ ಅಭಿಯಾನ ಆರಂಭಿಸಿದ್ದು, ಈಗಾಗಲೇ ಎರಡು ಹಂತದಲ್ಲಿ ಅಭಿಯಾನ ಮುಕ್ತಾಯಗೊಳಿಸಲಾಗಿದೆ. ಇದೀಗ ೩ನೇ ಹಂತದಲ್ಲಿ ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಚನ್ನಗಿರಿ, ಚಿತ್ರದುರ್ಗ ನಗರಗಳಲ್ಲಿ ಅಭಿಯಾನ ನಡೆಸಲಾಗುತ್ತಿದೆ ಎಂದರು.
    ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಮಹಿಳಾ ಘಟಕದ ಜಂಟಿ ಕಾರ್ಯದರ್ಶಿ ಪುಷ್ಪ, ರಾಮೇಶ್ವರಿ, ಅಂಬಿಕಾ, ಆನೇಕಲ್ ಜಯರಾಂ, ನಾಗರಾಜ್‌ರಾವ್ ಸಿಂಧೆ, ತ್ಯಾಗರಾಜ್, ಶಬರೀಶ್, ಸುಮಿತ್ರಾಬಾಯಿ, ಕಲಾವತಿ, ನಾಗರಾಜ್, ನಾಗರತ್ನಮ್ಮ, ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.