Sunday, January 15, 2023

ಉಕ್ಕಿನ ನಗರದೆಲ್ಲೆಡೆ ಸಂಕ್ರಾಂತಿ ಸಂಭ್ರಮ, ಸಡಗರ

ನ್ಯೂಟೌನ್ ಆಂಜನೇಯ ಅಗ್ರಹಾರ, ಕೂಲಿಬ್ಲಾಕ್ ಶೆಡ್ ಶ್ರೀ ಮಾರಿಯಮ್ಮ ಅಖಾಡ ಪೊಂಗಲ್ ಕಮಿಟಿ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿ ಸಹ ೫೪ನೇ ವರ್ಷದ ಸಂಕ್ರಾಂತಿ ಹಾಗು ಪೊಂಗಲ್ ಹಬ್ಬದ ಆಚರಣೆ ಹಮ್ಮಿಕೊಳ್ಳಲಾಗಿತ್ತು. ಭಾನುವಾರ ದನಗಳ ಪ್ರದರ್ಶನ ಹಾಗು ಓಟದ ಸ್ಪರ್ಧೆ ಆಯೋಜಿಸಲಾಗಿತ್ತು. ಸ್ಪರ್ಧೆಯನ್ನು ವೀಕ್ಷಿಸಲು ಸುತ್ತಮುತ್ತಲ ಪ್ರದೇಶಗಳಿಂದ ಜನರು ಆಗಮಿಸಿದ್ದರು.
    ಭದ್ರಾವತಿ, ಜ. ೧೫ : ವರ್ಷದ ಮೊದಲ ಹಬ್ಬ ಮಕರ ಸಂಕ್ರಾಂತಿ ಆಚರಣೆ ನಗರದಲ್ಲೆಡೆ ವಿಜೃಂಭಣೆಯಿಂದ ಕಂಡು ಬಂದಿದ್ದು, ಬೆಳಿಗ್ಗೆಯೇ ಮನೆ ಮನೆಗಳ ಮುಂದೆ ರಂಗುರಂಗಿನ ರಂಗೋಲಿ ಮೂಲಕ ಹಬ್ಬಕ್ಕೆ ಅದ್ದೂರಿ ಸ್ವಾಗತ ಕೋರಿರುವುದು ಕಂಡು ಬಂದಿತು.
    ಸಂಕ್ರಾಂತಿ ಅಂಗವಾಗಿ ವಿವಿಧ ದೇವಾಲಯಗಳಲ್ಲೂ ವಿಶೇಷ ಪೂಜೆ ನಡೆಯಿತು. ಅಲ್ಲದೆ ವಿವಿಧ ಸಂಘ-ಸಂಸ್ಥೆಗಳಿಂದ ಸಹ ವಿಶಿಷ್ಟವಾಗಿ ಹಬ್ಬ ಆಚರಣೆ ನಡೆಸಲಾಯಿತು. ತಿಂಡಿತಿನಿಸುಗಳೊಂದಿಗೆ ಗೋ ಮಾತೆಗೆ ವಿಶೇಷ ಪೂಜೆ ಸಲ್ಲಿಸಲಾಯಿತು.  


ಭದ್ರಾವತಿಯಲ್ಲಿ ಸಂಕ್ರಾಂತಿ ಹಬ್ಬದ ಅಂಗವಾಗಿ ಭಾನುವಾರ ತಿಂಡಿತಿನಿಸುಗಳೊಂದಿಗೆ ಗೋ ಮಾತೆಗೆ ವಿಶೇಷ ಪೂಜೆ ಸಲ್ಲಿಸಲಾಯಿತು.   
     ನ್ಯೂಟೌನ್ ಆಂಜನೇಯ ಅಗ್ರಹಾರ, ಕೂಲಿಬ್ಲಾಕ್ ಶೆಡ್ ಶ್ರೀ ಮಾರಿಯಮ್ಮ ಅಖಾಡ ಪೊಂಗಲ್ ಕಮಿಟಿ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿ ಸಹ ೫೪ನೇ ವರ್ಷದ ಸಂಕ್ರಾಂತಿ ಹಾಗು ಪೊಂಗಲ್ ಹಬ್ಬದ ಆಚರಣೆ ಹಮ್ಮಿಕೊಳ್ಳಲಾಗಿತ್ತು. ಭಾನುವಾರ ದನಗಳ ಪ್ರದರ್ಶನ ಹಾಗು ಓಟದ ಸ್ಪರ್ಧೆ ಆಯೋಜಿಸಲಾಗಿತ್ತು. ಸ್ಪರ್ಧೆಯನ್ನು ವೀಕ್ಷಿಸಲು ಸುತ್ತಮುತ್ತಲ ಪ್ರದೇಶಗಳಿಂದ ಜನರು ಆಗಮಿಸಿದ್ದರು.
    ಸ್ಪರ್ಧೆ ಮಾರಿಯಮ್ಮ ದೇವಸ್ಥಾನ ಬಳಿ ಆಂಜನೇಯ ಆಗ್ರಹಾರದ ಮುಖ್ಯ ರಸ್ತೆಯಲ್ಲಿ ಆಯೋಜಿಸಲಾಗಿತ್ತು. ಸ್ಪರ್ಧೆ ಸಂದರ್ಭದಲ್ಲಿ ಎರಡು ಕಡೆ ಕಬ್ಬಿಣದ ಬ್ಯಾರಿಗೇಡ್‌ಗಳನ್ನು ಅಳವಡಿಸಲಾಗಿತ್ತು.  
    ನಗರದ ಅಪ್ಪರ್ ಹುತ್ತಾ ಗೆಳೆಯರ ಬಳಗ ಟ್ರಸ್ಟ್ ವತಿಯಿಂದ ಈ ಬಾರಿ ವಿಶೇಷವಾಗಿ ಸಂಕ್ರಾಂತಿ ಸಂಭ್ರಮ ಹಮ್ಮಿಕೊಳ್ಳಲಾಗಿತ್ತು. ಶ್ರೀ ನಂದಿ, ಈಶ್ವರ ಮತ್ತು ಸಂಕಷ್ಟಹರ ಗಣಪತಿ ದೇವಸ್ಥಾನದ ಮುಂಭಾಗ ಬೆಳಿಗ್ಗೆ ಪೊಂಗಲ್, ಗೋವಿನ ಪೂಜೆ, ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನಡೆಯಿತು. ಸಂಜೆ ವಿಶೇಷ ಆಕರ್ಷಣೆಯಾಗಿ ಹೋರಿಗಳ ಕಿಚ್ಚಾಯಿಸುವ ಕಾರ್ಯಕ್ರಮ ಎಲ್ಲರ ಗಮನ ಸೆಳೆಯಿತು.

ಭದ್ರಾವತಿ ಅಪ್ಪರ್ ಹುತ್ತಾ ಗೆಳೆಯರ ಬಳಗ ಟ್ರಸ್ಟ್ ವತಿಯಿಂದ ಈ ಬಾರಿ ವಿಶೇಷವಾಗಿ ಸಂಕ್ರಾಂತಿ ಸಂಭ್ರಮ ಹಮ್ಮಿಕೊಳ್ಳಲಾಗಿತ್ತು. ಶ್ರೀ ನಂದಿ, ಈಶ್ವರ ಮತ್ತು ಸಂಕಷ್ಟಹರ ಗಣಪತಿ ದೇವಸ್ಥಾನದ ಮುಂಭಾಗ ಬೆಳಿಗ್ಗೆ ಪೊಂಗಲ್, ಗೋವಿನ ಪೂಜೆ, ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನಡೆಯಿತು.
    ನಂತರ ಹೊಳೆಹೊನ್ನೂರು ಸರ್ಕಾರಿ ಪ್ರೌಢಶಾಲೆಯ ರವಿಕಿರಣ್ ಅವರಿಂದ ದೈವ ನೃತ್ಯರೂಪಕ, ಚೌಡೇಶ್ವರಿ ಮಹಿಳಾ ಮಂಡಳಿಯಿಂದ ಕೋಲಾಟ, ದಿವಾಕರ ಮತ್ತು ತಂಡದಿಂದ ಹಾಗು ವೀರಾಂಜನೇಯ ಭಜನಾ ಮಂಡಳಿ ವತಿಯಿಂದ ಜಾನಪದ ಗೀತೆ, ಹೊಳೆಗಂಗೂರು ಸರ್ಕಾರಿ ಪ್ರೌಢ ಶಾಲೆ ವತಿಯಿಂದ ಕೋಲಾಟ ಹಾಗು ಸೋಂಪಾನಾಯ್ಕ ಮತ್ತು ತಂಡದವರಿಂದ ಬಣಜಾರ್ ಶೈಲಿಯ ಕೋಲಾಟ ಸೇರಿದಂತೆ ಜಾನಪದ ಕಾರ್ಯಕ್ರಮಗಳು ಜರುಗಿದವು.

ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿಯಿಂದ ಎಸ್. ಕುಮಾರ್‌ಗೆ ಅವಕಾಶ ನೀಡಿ

ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಭದ್ರಾವತಿ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದಿಂದ ಎಸ್. ಕುಮಾರ್ ಸ್ಪರ್ಧಿಸಲು ಅವಕಾಶ ನೀಡುವಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರಿಗೆ ಒತ್ತಾಯಿಸಿದೆ.
    ಭದ್ರಾವತಿ, ಜ. ೧೫:  : ಈ ಹಿಂದೆ ಕ್ಷೇತ್ರದಲ್ಲಿ ತಮ್ಮದೇ ಆದ ಪ್ರಾಬಲ್ಯ ಹೊಂದಿದ್ದ ಒಕ್ಕಲಿಗರು ಇದೀಗ ತಮ್ಮ ಪ್ರಾಬಲ್ಯ ಕಳೆದುಕೊಳ್ಳುತ್ತಿದ್ದಾರೆ. ಎಲ್ಲಾ ರಂಗದಲ್ಲೂ ಶೋಷಣೆಗೆ ಒಳಗಾಗುತ್ತಿದ್ದು, ಈಗಲಾದರೂ ಎಚ್ಚೆತ್ತುಕೊಂಡು ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಸಂಘಟಿತರಾಗುವುದು ಅನಿವಾರ್ಯವಾಗಿದೆ ಎಂಬ ಸಂದೇಶದೊಂದಿಗೆ ಕಳೆದ ೩ ತಿಂಗಳ ಹಿಂದೆ ನೂತನವಾಗಿ ಅಸ್ತಿತ್ವಕ್ಕೆ ಬಂದ ನಾಡಪ್ರಭು ಕೆಂಪೇಗೌಡ ಹಿತರಕ್ಷಣಾ ವೇದಿಕೆ ಇದೀಗ ಮತ್ತಷ್ಟು ಕ್ರಿಯಾಶೀಲವಾಗಿದ್ದು, ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಎಸ್. ಕುಮಾರ್ ಸ್ಪರ್ಧಿಸಲು ಅವಕಾಶ ನೀಡುವಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರಿಗೆ ಒತ್ತಾಯಿಸಿದೆ.
    ಒಕ್ಕಲಿಗ ಸಮುದಾಯಕ್ಕೆ ಸೇರಿರುವ ಎಸ್. ಕುಮಾರ್‌ರವರು ಕ್ಷೇತ್ರದಲ್ಲಿ ತನ್ನದೇ ಆದ ವರ್ಚಸ್ಸನ್ನು ಹೊಂದಿದ್ದು, ೪ ಬಾರಿ ಜಿಲ್ಲಾ ಪಂಚಾಯಿತಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ತಮ್ಮ ಅಧಿಕಾರದ ಅವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದು, ಅಲ್ಲದೆ ವಿವಿಧ ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಗುರುತಿಸಿಕೊಂಡಿದ್ದಾರೆ. ಕ್ಷೇತ್ರದಲ್ಲಿ ಒಕ್ಕಲಿಗ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಈ ಬಾರಿ ಚುನಾವಣೆಯಲ್ಲಿ ಕ್ಷೇತ್ರದಿಂದ ಸ್ಪರ್ಧಿಸಲು ಆಕಾಂಕ್ಷಿಯಾಗಿದ್ದಾರೆ. ಒಕ್ಕಲಿಗ ಸಮುದಾಯಕ್ಕೆ ಸೂಕ್ತ ಪ್ರಾತಿನಿಧ್ಯ ಸಿಗಬೇಕೆಂಬ ಉದ್ದೇಶದಿಂದ ಒಂದು ಬಾರಿ ಎಸ್. ಕುಮಾರ್‌ಗೆ ಅವಕಾಶ ನೀಡುವಂತೆ ವೇದಿಕೆ ಕೋರಿದೆ.
    ಸಂಸದ ಬಿ.ವೈ ರಾಘವೇಂದ್ರ, ಒಕ್ಕಲಿಗ ಸಮುದಾಯದ ಮುಖಂಡರು, ಮೇದಿಕೆ ಪ್ರಮುಖರು, ಬಿಜೆಪಿ ಪಕ್ಷದ ಸ್ಥಳೀಯ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.