Tuesday, January 24, 2023

ಮನೆ ಕಾಂಪೌಂಡ್‌ನಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು

    ಭದ್ರಾವತಿ, ಜ. ೨೪: ಮನೆಯ ಕಾಂಪೌಂಡ್‌ನಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿರುವ ಘಟನೆ ಬೆಳಕಿಗೆ ಬಂದಿದ್ದು, ಈ ಸಂಬಂಧ ಹಳೇನಗರ ಪೊಲೀಸ್ ಠಾಣೆಯಲ್ಲಿ ತಡವಾಗಿ ಪ್ರಕರಣ ದಾಖಲಾಗಿದೆ.
    ಖಲಂದರ್ ನಗರದ ಅಬ್ದುಲ್ ರೆಹಮಾನ್ ಎಂಬುವರು ರಾತ್ರಿ ಮನೆಯ ಕಾಂಪೌಂಡ್‌ನಲ್ಲಿ ರಾಯಲ್ ಎನ್ ಫೀಲ್ಡ್ ಬೈಕನ್ನು ನಿಲ್ಲಿಸಿದ್ದು, ಬೆಳಿಗ್ಗೆ ಬೈಕ್ ಕಳುವಾಗಿರುವುದು ಕಂಡು ಬಂದಿದೆ. ಈ ಸಂಬಂಧ ಹಳೇನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಅಪಘಾತ : ವೃದ್ಧೆ ಸ್ಥಳದಲ್ಲಿಯೇ ಸಾವು

     ಭದ್ರಾವತಿ, ಜ. ೨೪ :  ರಸ್ತೆಯಲ್ಲಿ ಹೋಗುತ್ತಿದ್ದಾಗ ವೃದ್ಧೆಯೊಬ್ಬರು ಟ್ರ್ಯಾಕ್ಟರ್ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ತಾಲೂಕಿನ ಭದ್ರಾವತಿ-ಚನ್ನಗಿರಿ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.
  ಅರಳಿಹಳ್ಳಿ ಗ್ರಾಮದ ನಿವಾಸಿ ಮಹಮ್ಮದ್ ಸಾಧಿಕ್‌ರವರ  ಮುತ್ತಜ್ಜಿ ಸುಮಾರು ೯೨ ವರ್ಷ ವಯೋಮಾನದ ಚಮನ್ ಬೀ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಟ್ರ್ಯಾಕ್ಟರ್ ಚಾಲಕ ನಾಗರಾಜ ಎಂಬುವರ ವಿರುದ್ಧ ಪ್ರಕರಣ ದಾಖಲಾಗಿದೆ.

೬ ದಿನ ಪೂರೈಸಿದ ವಿಐಎಸ್‌ಎಲ್ ಗುತ್ತಿಗೆ ಕಾರ್ಮಿಕರ ಅನಿರ್ಧಿಷ್ಟಾವಧಿ ಹೋರಾಟ

ಬಾಯಿ ಬಡಿದುಕೊಂಡು ಪ್ರತಿಭಟನೆ, ಮಾಜಿ ಸೈನಿಕರ ಸಂಘ ಬೆಂಬಲ, ಮೋದಿಗೆ ಎಚ್‌ಡಿಡಿ ಪತ್ರ

ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಮುಚ್ಚುವ ಆದೇಶದ ವಿರುದ್ಧ  ಗುತ್ತಿಗೆ ಕಾರ್ಮಿಕರ ಸಂಘ ಕಾರ್ಖಾನೆ ಮುಂಭಾಗ ಕೈಗೊಂಡಿರುವ ಅನಿರ್ಧಿಷ್ಟಾವಧಿ ಹೋರಾಟ ಮಂಗಳವಾರ ೬ನೇ ದಿನಕ್ಕೆ ಕಾಲಿಟ್ಟಿತು. ಗುತ್ತಿಗೆ ಕಾರ್ಮಿಕರು ಬಾಯಿ ಬಡಿದುಕೊಂಡು ಪ್ರತಿಭಟಿಸಿದರು.
    ಭದ್ರಾವತಿ, ಜ. ೨೪ : ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಮುಚ್ಚುವ ಆದೇಶದ ವಿರುದ್ಧ  ಗುತ್ತಿಗೆ ಕಾರ್ಮಿಕರ ಸಂಘ ಕಾರ್ಖಾನೆ ಮುಂಭಾಗ ಕೈಗೊಂಡಿರುವ ಅನಿರ್ಧಿಷ್ಟಾವಧಿ ಹೋರಾಟ ಮಂಗಳವಾರ ೬ನೇ ದಿನಕ್ಕೆ ಕಾಲಿಟ್ಟಿತು.
   ಮಧ್ಯಾಹ್ನ ನಡೆದ ಬಹಿರಂಗ ಸಭೆಯಲ್ಲಿ ಮಾತನಾಡಿದ ಸಂಘದ ಪದಾಧಿಕಾರಿಗಳು, ಗುತ್ತಿಗೆ ಕಾರ್ಮಿಕರು ಎಲ್ಲಾ ರೀತಿಯ ಹೋರಾಟಕ್ಕೂ ಸಿದ್ದರಿದ್ದಾರೆ. ಬೇಡಿಕೆ ಈಡೇರುವವರೆಗೂ ಹೋರಾಟ ನಡೆಯಲಿದೆ. ಕಾರ್ಖಾನೆಯನ್ನು ಯಾವುದೇ ಕಾರಣಕ್ಕೂ ಮುಚ್ಚಲು ಬಿಡುವುದಿಲ್ಲ. ಕಾರ್ಖಾನೆ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಎಲ್ಲರೂ ಕೈ ಜೋಡಿಸುವಂತೆ ಮನವಿ ಮಾಡಿದರು.
    ಬಾಯಿ ಬಡಿದುಕೊಂಡು ಪ್ರತಿಭಟನೆ :
    ಗುತ್ತಿಗೆ ಕಾರ್ಮಿಕರು ಕೇಂದ್ರ ಸರ್ಕಾರ ಹಾಗು ಉಕ್ಕು ಪ್ರಾಧಿಕಾರ ಮತ್ತು ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಧಿಕ್ಕಾರ ಕೂಗುವ ಜೊತೆಗೆ ಬಾಯಿ ಬಡಿದುಕೊಂಡು ಪ್ರತಿಭಟಿಸಿ ಆಕ್ರೋಶ ವ್ಯಕ್ತಪಡಿಸಿದರು.
       ಉಕ್ಕಿನ ನಗರ ಮಾಜಿ ಸೈನಿಕರ ಸಂಘ ಬೆಂಬಲ :
   ಕಾರ್ಖಾನೆ ಮುಂಭಾಗ ಗುತ್ತಿಗೆ ಕಾರ್ಮಿಕರು ನಡೆಸುತ್ತಿರುವ ಹೋರಾಟಕ್ಕೆ ಉಕ್ಕಿನ ನಗರ ಮಾಜಿ ಸೈನಿಕರ ಸಂಘ ಬೆಂಬಲ ಸೂಚಿಸಿದೆ. 
    ಹೋರಾಟದ ಸ್ಥಳಕ್ಕೆ ಆಗಮಿಸಿದ ಸಂಘದ ಪದಾಧಿಕಾರಿಗಳು ಮಾತನಾಡಿ,  ಕಾರ್ಖಾನೆ ಮುಚ್ಚುವ ನಿರ್ಧಾರವನ್ನು ತಕ್ಷಣ ಹಿಂಪಡೆಯಬೇಕು. ಕೇಂದ್ರ ಸರ್ಕಾರ ಕಾರ್ಖಾನೆಗೆ ಅಗತ್ಯವಿರುವ ಬಂಡವಾಳ ತೊಡಗಿಸಿ ಅಭಿವೃದ್ಧಿಪಡಿಸಬೇಕು. ಗುತ್ತಿಗೆ ಕಾರ್ಮಿಕರು ನಡೆಸುತ್ತಿರುವ ಹೋರಾಟಕ್ಕೆ ಸಂಘ ಸಂಪೂರ್ಣವಾಗಿ ಬೆಂಬಲ ನೀಡುತ್ತದೆ ಎಂದು ಸಂಘದ ಕಾರ್ಯದರ್ಶಿ ವಿನೋದ್ ಪೂಜಾರಿ ಭರವಸೆ ನೀಡಿದರು.
     ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಪ್ರಧಾನಿ ಮೋದಿಗೆ ಪತ್ರ :
   ಪ್ರಧಾನಮಂತ್ರಿ ನಗರೇಂದ್ರ ಮೋದಿಯವರಿಗೆ ಕಾರ್ಖಾನೆಯನ್ನು ಯಾವುದೇ ಕಾರಣಕ್ಕೂ ಮುಚ್ಚದಿರುವಂತೆ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಪತ್ರ ಬರೆದಿದ್ದಾರೆ. ಇತ್ತೀಚೆಗೆ ಕಾರ್ಖಾನೆಯ ವಿವಿಧ ಕಾರ್ಮಿಕ ಸಂಘಟನೆಗಳ ಪ್ರಮುಖರು, ಜೆಡಿಎಸ್ ಪಕ್ಷದ ಮುಖಂಡರಾದ ಶಾರದ ಅಪ್ಪಾಜಿ ನೇತೃತ್ವದಲ್ಲಿ ದೇವೇಗೌಡರಿಗೆ ಮನವಿ ಸಲ್ಲಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು ಒತ್ತಾಯಿಸುವಂತೆ ಕೋರಿದ್ದರು. ಇದಕ್ಕೆ ಪೂರಕವಾಗಿ ಸ್ಪಂದಿಸಿರುವ ದೇವೇಗೌಡರು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ.
   ಕಾರ್ಖಾನೆ ಮುಚ್ಚುವ ನಿರ್ಧಾರವನ್ನು ಕೇಂದ್ರ ಸರ್ಕಾರ ಕೈ ಬಿಡಬೇಕು. ದೇಶಕ್ಕೆ ಅತ್ಯುನ್ನತ ಕೊಡುಗೆಯಾಗಿರುವ ಕಾರ್ಖಾನೆಯ ಮುಚ್ಚುವ ತೀರ್ಮಾನ ಸಮಂಜಸವಲ್ಲ. ರಾಜ್ಯದ ಏಕೈಕ ಸಾರ್ವಜನಿಕ ಸ್ವಾಮ್ಯದ ಉದ್ದಿಮೆ ಇದಾಗಿದೆ. ಕಾರ್ಖಾನೆ ಮರು ಆರಂಭಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಕೋರಿದ್ದಾರೆ.
     ಆತ್ಮನಿರ್ಭರ ಭಾರತದ ಪರಿಕಲ್ಪನೆಗೆ ಪೂರಕವಾಗಿ ಈ ಕಾರ್ಖಾನೆ ಅನೇಕ ಕೊಡುಗೆಗಳನ್ನು ನೀಡುವ ಸಾಮರ್ಥ್ಯ ಹೊಂದಿದೆ. ರಕ್ಷಣಾ ವಲಯ, ನ್ಯೂಕ್ಲಿಯರ್, ರೈಲ್ವೆ ಮುಂತಾದ ವಿಭಾಗದಲ್ಲಿ ಈ ಕಾರ್ಖಾನೆಯಿಂದ ಮಹತ್ವದ ಸಹಕಾರ ದೊರೆಯಲಿದೆ. ಮುಖ್ಯವಾಗಿ ೨೦ ಸಾವಿರಕ್ಕೂ ಹೆಚ್ಚು ಕುಟುಂಬಗಳು ಇದೇ ಕಾರ್ಖಾನೆಯನ್ನು ಅವಲಂಬಿಸಿವೆ. ಈ ಹಿನ್ನಲೆಯಲ್ಲಿ ಕಾರ್ಖಾನೆ ಮುಚ್ಚುವ ನಿರ್ಧಾರ ಕೈಬಿಡುವಂತೆ ಮನವರಿಕೆ ಮಾಡಿದ್ದಾರೆ.

ಜ.೨೫ರಂದು ಶ್ರೀ ವೀರಭದ್ರೇಶ್ವರ ಸ್ವಾಮಿ ದೇವಾಲಯದ ಲೋಕಾರ್ಪಣೆ

    ಭದ್ರಾವತಿ, ಜ. ೨೫ : ತಾಲೂಕಿನ ಸೀತಾರಾಮಪುರ(ಮುಳ್ಕೆರೆ) ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ವೀರಭದ್ರೇಶ್ವರ ಸ್ವಾಮಿ ದೇವಾಲಯದ ಲೋಕಾರ್ಪಣೆ ಹಾಗು ಕಳಶಾರೋಹಣ ಕಾರ್ಯಕ್ರಮ ಜ.೨೫ರಂದು ನಡೆಯಲಿದೆ.
    ಬೆಳಿಗ್ಗೆ ೧೦.೩೦ಕ್ಕೆ ಜನ ಜಾಗೃತಿ ಧಾರ್ಮಿಕ ಸಮಾರಂಭದಲ್ಲಿ ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ಪೀಠದ ಶ್ರೀ ಪ್ರಸನ್ನ ರೇಣುಕ ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು ದಿವ್ಯ ಸಾನಿಧ್ಯ ವಹಿಸಲಿದ್ದು, ಯಡಿಯೂರು ಕ್ಷೇತ್ರದ ಶ್ರೀ ರೇಣುಕ ಶಿವಾಚಾರ್ಯ ಸ್ವಾಮೀಜಿ, ತರೀಕೆರೆ ಹಿರೇಮಠದ ಶ್ರೀ ಜಗದೀಶ್ವರ ಶಿವಾಚಾರ್ಯ ಸ್ವಾಮೀಜಿ, ಹುಣಸಘಟ್ಟ ಹಾಲಸ್ವಾಮಿ ಮಠದ ಶ್ರೀ ಗುರುಮೂರ್ತಿ ಶಿವಾಚಾರ್ಯ ಸ್ವಾಮೀಜಿ, ಮಳಲಿಮಠದ ಶ್ರೀ ಡಾ. ಗುರುನಾಗಭೂಷಣ ಶಿವಾಚಾರ್ಯ ಸ್ವಾಮೀಜಿ ಮತ್ತು ಚನ್ನಗಿರಿ ಕೇದಾರ ಶಾಖಾ ಹಿರೇಮಠದ ಶ್ರೀ ಕೇದಾರ ಶಿವಶಾಂತವೀರ ಶಿವಾಚಾರ್ಯ ಸ್ವಾಮೀಜಿ ಉಪಸ್ಥಿತರಿರುವರು.
    ಸಂಸದ ಬಿ.ವೈ ರಾಘವೇಂದ್ರ ಜನ ಜಾಗೃತಿ ಧಾರ್ಮಿಕ ಸಮಾರಂಭ ಉದ್ಘಾಟಿಸಲಿದ್ದು, ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆವಹಿಸಲಿದ್ದಾರೆ. ಪ್ರಮುಖರಾದ ಶಾರದ ಅಪ್ಪಾಜಿ, ಎಸ್, ಮಣಿಶೇಖರ್, ಎಚ್.ಎಲ್ ಷಡಾಕ್ಷರಿ, ಜೆ. ಗೀತಾ ಜಗದೀಶ್, ಬೇಬಿ ಶಾಲಿನಿ, ಡಿ. ಪ್ರಭಾಕರ್, ಗೋಣಿ ಮಂಜುನಾಥ್ ಮತ್ತು ಪುಷ್ಪ ಆರ‍್ಮುಗಂ ಸೇರಿದಂತೆ ಇನ್ನಿತರರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
    ಹಿರಿಯ ಸಾಹಿತಿ ಜೆ.ಎನ್ ಬಸವರಾಜಪ್ಪ ಉಪನ್ಯಾಸ ನಡೆಸಿಕೊಡಲಿದ್ದು, ಮಧ್ಯಾಹ್ನ ೧೨ ಗಂಟೆಗೆ ಅನ್ನಸಂತರ್ಪಣೆ ನಡೆಯಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕೋರಲಾಗಿದೆ.